Connect with us

ಅಂತರಂಗ

ಅರಿಮೆಯ ಅರಿವಿರಲಿ-52 : ಮಗುತನದಿಂದ ತನ್ನತನ

Published

on

  • ಯೋಗೇಶ್ ಮಾಸ್ಟರ್

ಹಂಕಾರವನ್ನೇ ಆತ್ಮಗೌರವ ಅಥವಾ ಸ್ವಾಭಿಮಾನವನ್ನಾಗಿ ಭಾವಿಸುವುದು ತನ್ನತನದ ಮೌಲ್ಯವನ್ನು ಗಟ್ಟಿಗೊಳಿಸುವುದೇನಲ್ಲ. ಬದಲಾಗಿ ಮಾನಸಿಕ ಸಮಸ್ಯೆಗಳನ್ನು ಹೆಚ್ಚಿಸುತ್ತಾ ಹೋಗುವುದು. ಆದರೆ ತನ್ನತನದ ಪರಿಕಲ್ಪನೆ ಮತ್ತು ಸ್ವಾಭಿಮಾನದ ಘನತೆಯನ್ನು ನಾವು ಅರಿತುಕೊಳ್ಳುವುದರ ಜೊತೆಗೆ ಮಕ್ಕಳಿಗೆ ಪ್ರಾರಂಭದಿಂದಲೇ ರೂಢಿಗೊಳಿಸಿದರೆ, ಅಥವಾ ಅದರ ಬಗ್ಗೆ ಅರಿವು ಮೂಡಿಸಿದರೆ ಆತ್ಮಗೌರವದ ಬದುಕನ್ನು ಕಟ್ಟಿಕೊಳ್ಳಬಲ್ಲರು.

ಧೈರ್ಯ, ಹಟಮಾರಿತನ, ವಿನಯ, ಸಂಕೋಚ, ನಿಸ್ಸಂಕೋಚ, ಭಯ, ಮೌನ, ಮಾತು, ಕೆಲಸ, ನಿರ್ಗೆಲಸ; ಹೀಗೆ ಎಲ್ಲರೂ ಅಗತ್ಯವಿರುವಷ್ಟು ಹೊಂದಬಹುದು ಮತ್ತು ಉಪಯೋಗಿಸಬಹುದು.
ಇದನ್ನು ಬಹಳ ಗಂಭೀರವಾಗಿ ಗಮನಿಸೋಣ. ಯಾರೊಬ್ಬ ಎಲ್ಲದಕ್ಕೂ ಸಂಕೋಚ ಪಡುತ್ತಾನೋ ಅಥವಾ ಎಲ್ಲದಕ್ಕೂ ನಿರ್ಲಜ್ಜೆಯಿಂದ ಮುಂದಾಗುತ್ತಾನೋ, ಅವನಲ್ಲಿ ಮಾನಸಿಕ ಸಮಸ್ಯೆ ಇದೆ ಎಂದೇ ಅರ್ಥ.

ಅದೇ ಒಬ್ಬ ವ್ಯಕ್ತಿ ಕೆಲವೊಂದು ವಿಷಯಕ್ಕೆ ಸಹಜವಾಗಿ ನಾಚಿಕೆಪಟ್ಟುಕೊಳ್ಳುತ್ತಾನೆ. ಅಗತ್ಯವಿರುವ ಕೆಲವು ವಿಷಯಗಳಿಗೆ ಸಂಕೋಚವಿಲ್ಲದೇ ಮುಂದಾಗುತ್ತಾನೆ ಎಂದರೆ ಅವನು ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುತ್ತಿರುವ ಲಕ್ಷಣವನ್ನು ತೋರುತ್ತಿದ್ದಾನೆಂದು ಅರ್ಥ.

ಆತ್ಮಗೌರವ ಅಥವಾ ಸೆಲ್ಫ್ ಎಸ್ಟೀಮ್ ಎಂಬುದು ವ್ಯಕ್ತಿತ್ವ ವಿಕಾಸ, ಸಾಮಾಜಿಕ ಮನಶಾಸ್ತ್ರ, ಚಿಕಿತ್ಸಕ (ಕ್ಲಿನಿಕಲ್) ಮನಶಾಸ್ತ್ರ, ಪುರೋಗಾಮಿತ್ವ (ಡೆವಲಪ್ ಮೆಂಟಲ್) ಮನಶಾಸ್ತ್ರ; ಹೀಗೆ ಹಲವು ಶಾಖೆಗಳಲ್ಲಿ ಪ್ರಧಾನ ಪಾತ್ರವನ್ನು ವಹಿಸುತ್ತದೆ.
ಇದು ತನ್ನತನದ ಪರಿಕಲ್ಪನೆಯ ಮೇಲೆಯೇ ಅವಲಂಬಿತವಾಗಿದ್ದು ರೋಸೆನ್‍ಬರ್ಗ್ (1965) ಎಂಬ ಮನಶಾಸ್ತ್ರಜ್ಞ ಹೇಳುವಂತೆ, ಸ್ವಾಭಿಮಾನ ಎಂದರೆ ಒಬ್ಬ ವ್ಯಕ್ತಿಯ ಸಮಗ್ರವಾದ ತನ್ನತನದ ಸಕಾರಾತ್ಮಕ ಮೌಲ್ಯಮಾಪನ. ಜೊತೆಗೆ ತನ್ನನ್ನು ತಾನು ಗೌರವಿಸಿಕೊಳ್ಳುವುದು ಮತ್ತು ತನ್ನನ್ನು ಸತ್ವಪೂರ್ಣ ವ್ಯಕ್ತಿ ಎಂದು ಪರಿಗಣಿಸಿಕೊಳ್ಳುವುದು.

ಮಗುತನದ ಹಂತಗಳು

ಮಗುವಿನ ಬಾಲ್ಯದಲ್ಲಿಯೇ ಗೌರವಪೂರ್ಣವಾದ ತನ್ನತನದ ಭಾವವನ್ನು ರೂಪುಗೊಳಿಸುವ ಜವಾಬ್ದಾರಿಯನ್ನು ಮಗುವನ್ನು ನೋಡಿಕೊಳ್ಳುವ ಹಿರಿಯರು ಹೊರಬೇಕು.

ಸೊನ್ನೆ ವರ್ಷದಿಂದ ಎರಡು ವರ್ಷಗಳ ವರೆಗೆ

1. ಮಗುವು ಸತತವಾದ ಗಮನವನ್ನು ಪಡೆಯುತ್ತಿದ್ದರೆ, ಅದಕ್ಕೆ ಪ್ರೀತಿಯಿಂದ ಕೂಡಿರುವ ಸಂಬಂಧದ ಅನುಭವವಾಗುತ್ತಿದ್ದರೆ, ಆ ಮಗುವು ಸಕಾರಾತ್ಮಕವಾದ ತನ್ನತನದ ಭಾವವನ್ನು ಹೊಂದುತ್ತದೆ.

2. ಮಗುವು ತನಗಾಗುತ್ತಿರುವ ಅನುಭವದ ಆಧಾರದಲ್ಲಿ ಆದ್ಯತೆಗಳನ್ನು ಕಂಡುಕೊಳ್ಳುತ್ತದೆ. ಯಾವುದು ಮೊದಲು ಮುಖ್ಯ, ಬೇಕಾದದ್ದು, ಹಿತ ನೀಡುವಂತದ್ದು; ಇಂತಹ ಅನುಭವಗಳನ್ನು ಆಧರಿಸಿರುವ ಆ ಆದ್ಯತೆಗಳಿಂದ ತನ್ನತನದ ಸಹಜವಾದ ಪ್ರಜ್ಞೆಯನ್ನು ರೂಪಿಸಿಕೊಳ್ಳುತ್ತದೆ.

3. ಅಂಬೆಗಾಲಿಡುವ ಶಿಶುವಿನ ಇತಿಮಿತಿಯನ್ನು ನಿಯಂತ್ರಿಸುವ ಕಟ್ಟಳೆ ಸುರಕ್ಷಿತ ಭಾವವನ್ನು ಒದಗಿಸುತ್ತದೆ. ಆದರೆ ಆ ಕಟ್ಟಳೆ ಮೃದುವಾಗಿಯೂ ಮತ್ತು ದೃಢವಾಗಿಯೂ ಇರಬೇಕು. ಉದಾಹರಣೆಗೆ, “ನೀನು ಗೇಟಿನ ಆಚೆ ಹೋಗಬಾರದು. ಹಾಗೆ ಹೋಗಲು ನಾನು ಬಿಡುವುದಿಲ್ಲ. ಅಲ್ಲಿ ಗಾಡಿಗಳು ಬರುತ್ತವೆ. ಅಪಾಯವಿದೆ” ಎಂಬ ನಿಯಂತ್ರಣವು ಇರಬೇಕು.

ಆದರೆ ಅದು, “ಹೋಗಬಾರದು ಎಂದರೆ ಹೋಗಬಾರದು. ಹೋದರೆ ಏಟು ಕೊಡ್ತೀನಿ. ಹೇಳಿದಷ್ಟು ಕೇಳು” ಎನ್ನುವ ಮಾತಿನ ಬಗೆಯು ಸಕಾರಾತ್ಮಕವಾದ ತನ್ನತನವನ್ನು ರೂಪಿಸುವ ಬದಲು ಅರಿಮೆಯನ್ನು ಹುಟ್ಟಿಸುವ ಅಥವಾ ದೌರ್ಬಲ್ಯಕ್ಕೆ ಎಡೆಮಾಡುವಂತಹ ನಕಾರಾತ್ಮಕ ಗುಣಗಳನ್ನು ರೂಢಿಸುತ್ತದೆ.

4. ಮಗುವು ಎರಡು ವರ್ಷದ ಹೊತ್ತಿಗೆ ಭಾವವನ್ನು ಮತ್ತು ಭಾಷೆಯನ್ನು ಗ್ರಹಿಸಲು ಆರಂಭಿಸಿದ್ದು ನಾನು ಎಂಬ ಭಾವವು ರೂಪುಗೊಳ್ಳುತ್ತಿರುತ್ತದೆ. ಅಲ್ಲಿಗೆ ತನ್ನತನದ ಸಂರಚನೆ ಪ್ರಾರಂಭವಾಯಿತೆಂದೇ ಅರ್ಥ. ಮಗುವಿನ ಗಿಲಕಿಯನ್ನೋ ಅಥವಾ ಅದು ನಿತ್ಯ ಬಳಸುವ ವಸ್ತುವನ್ನೋ ತೋರಿ, “ಇದು ಯಾರಿಗೆ ಬೇಕು?” “ಇದು ಯಾರದು?” ಎಂದರೆ, ನನಗೆ, ನನ್ನದು ಎಂಬ ಭಾವವನ್ನು ವ್ಯಕ್ತಪಡಿಸಲು ಅದಕ್ಕೆ ಸಾಧ್ಯವಾಗುತ್ತದೆ. ಅವುಗಳೆಲ್ಲಾ ತನ್ನತನದ ಆರಂಭಿಕ ಪ್ರಕಟಣೆಗಳೇ.

ಮೂರರಿಂದ ನಾಲ್ಕರವರೆಗೆ

1. ಮೂರು ಮತ್ತು ನಾಲ್ಕುವರ್ಷದ ಮಗುವು ತನ್ನನ್ನು ತಾನು ಪ್ರತ್ಯೇಕ ಮತ್ತು ಭಿನ್ನ ವ್ಯಕ್ತಿಗಳೆಂದು ನೋಡಿಕೊಳ್ಳಲು ಪ್ರಾರಂಭಿಸುತ್ತದೆ. ಅದಕ್ಕಾಗಿ ಪ್ರತ್ಯೇಕವಾಗಿರುವ ವಸ್ತುಗಳು, ಉಡುಪುಗಳು, ಬಂದವರು ಮಾತಾಡಿಸುವ ರೀತಿ; ಇವೆಲ್ಲವೂ ಬೇರೆ ಹಿರಿಯರದ್ದಕ್ಕಿಂತ ಭಿನ್ನ ಎಂಬುದನ್ನು ಗುರುತಿಸುತ್ತವೆ.

ತಮ್ಮದು ಯಾವುದು, ಇತರರದು ಯಾವುದು ಎಂದು ವಸ್ತುಗಳನ್ನು ಮಾತ್ರ ಗುರುತಿಸುವುದಲ್ಲ. ವ್ಯಕ್ತಿತ್ವವನ್ನೂ ಕೂಡಾ ಕಂಡುಕೊಳ್ಳುತ್ತಿರುತ್ತವೆ. ಆದರೆ ಅದಿನ್ನೂ ಬಿರಿಯುವ ಹಂತದಲ್ಲಿದ್ದರೂ ಪ್ರಕ್ರಿಯೆ ಅದಾಗಲೇ ಪ್ರಾರಂಭವಾಗಿದೆ ಎಂದೇ ಅರ್ಥ.

2. ತನ್ನತನದ ಬಗ್ಗೆ ಇರುವ ಅರಿವು ಬಹುಪಾಲು ಶಾಬ್ಧಿಕ ವರ್ಣನೆಯಾಗಿರುತ್ತದೆ. ತಾನು ಹೇಗೆ ಇದ್ದೇನೆ? ತಾನು ಏನು ಮಾಡುತ್ತೇನೆ? ತನಗೆ ಏನು ಬೇಕು? ಈ ರೀತಿ. ಆದರೆ ಅದು ನಾನು ಹೀಗೆ ಇರುವುದು, ನನಗೆ ಹೀಗಿರಬೇಕು; ಈ ರೀತಿಯ ಹಕ್ಕು ಅಥವಾ ಅಧಿಕಾರದ ತಳಹದಿಯದ್ದಾಗಿದ್ದು ತೀರ್ಮಾನ ತೆಗೆದುಕೊಳ್ಳುವಂತದ್ದಾಗಿರುವುದಿಲ್ಲ.

3. ಶಾಲೆಗೆ ಅಥವಾ ಬಾಲವಾಡಿಗೆ ಹೋಗ ವಯಸ್ಸಿಗೆ ಬರುವ ಮಕ್ಕಳಾಗಲೇ ಸ್ವತಂತ್ರವಾಗಿ ತಾವೇನು ಮಾಡಬಲ್ಲೆವು ಎಂಬುದರ ಬಗ್ಗೆ ಕುತೂಹಲವನ್ನು ಹೊಂದಿರುತ್ತಾರೆ ಮತ್ತು ಅವುಗಳ ಪ್ರಯೋಗಿಸಲು ಹಾತೊರೆಯುತ್ತಿರುತ್ತಾರೆ. ಅಂತಹ ಸಮಯದಲ್ಲಿ ತನ್ನತನದ ಸಾಮರ್ಥ್ಯ ಮತ್ತು ಚಿತ್ರಣವನ್ನು ಗುರುತಿಸಿಕೊಳ್ಳುವ ಆರಂಭವಾಗಿರುತ್ತದೆ.

ಬಹಳಷ್ಟು ಪೋಷಕರು ಅದನ್ನು ನಿಯಂತ್ರಿಸಲು ಹಾತೊರೆಯುತ್ತಾರೆ. ಗಮನಿಸಬೇಕು, ನಿಯಂತ್ರಣದಲ್ಲೂ ಇಡಬೇಕು. ಆದರೆ ಆ ನಿಯಂತ್ರಣವು ಸಕಾರಣವಾಗಿರಬೇಕು. ನನಗೆ ಇಷ್ಟವಿಲ್ಲ ಮಾಡಬೇಡ. ಸುಮ್ಮನೆ ಅದೆಲ್ಲಾ ಯಾಕೆ? ಈಗ ಸುಮ್ಮನೆ ಕೂತ್ಕೊಂಡಿದ್ರೆ ಸರಿ ಹೋಯ್ತು. ನನಗೆ ಮುಂಚೆನೇ ತಲೆ ಸರಿ ಇಲ್ಲ, ಇನ್ನು ನೀನು ಬೇರೆ ರೇಗಿಸಬೇಡ; ಈ ಬಗೆಯ ಹಲವು ಕಾರಣಗಳಿಂದ ಮಕ್ಕಳನ್ನು ನಿಯಂತ್ರಿಸಲು ಹೋಗಬಾರದು.

4. ಬಹಳಷ್ಟು ಪೋಷಕರು ತಮ್ಮ ದೌರ್ಬಲ್ಯದ ಕಾರಣದಿಂದ ಮಕ್ಕಳ ಸಾಮರ್ಥ್ಯವನ್ನು ಕಡೆಗಣಿಸುತ್ತಾರೆ. ತಮಗಿರುವ ದುರ್ಬಲ ತನ್ನತನದ ಚಿತ್ರಣದಿಂದಾಗಿ ಮಕ್ಕಳು ರೂಪಿಸಿಕೊಳ್ಳಬಹುದಾದ ಬಲವಾದ ಮತ್ತು ಸುಂದರವಾದ ಮಗುತನದ ಚಿತ್ರಣವನ್ನು ಹಾಳುಗೆಡವುತ್ತಾರೆ.

ಐದರಿಂದ ಆರರವರೆಗೆ

1. ಗುತನವು ವಿಸ್ತಾರಗೊಳ್ಳುವ, ಬದಲಾಗುವ ಹಂತವಿದು. ಸ್ಥಿತ್ಯಂತರದ ಮಜಲಿದು ‘ನಾನು’ ಇಂದ ‘ನಾವು’, ‘ನನ್ನ’ ಇಂದ ‘ನಮ್ಮ’. ನಮ್ಮ ಅಗತ್ಯಗಳೇನು, ನಾವು ಎಂಬ ಗುಂಪಿಗೆ ಏನು ಬೇಕು, ಅದು ಹೇಗಿರಬೇಕು ಎಂಬ ಆಸಕ್ತಿಗಳು ಮೊಳೆಯುವುದು ಈ ವಯಸ್ಸುಗಳಲ್ಲಿ.

2. ಬಾಲವಾಡಿಯಲ್ಲಿ ಮಕ್ಕಳಿಗೆ ತಮಗೆ ಏನು ಬೇಕು, ಯಾವುದನ್ನು ಆಸೆ ಪಡುತ್ತೇವೆ, ಭಾವಿಸುವುದು ಎಂದರೇನು ಎಂದೆಲ್ಲಾ ಸಂವಹನದ ಮೂಲಕ ಮನದಟ್ಟು ಮಾಡುತ್ತಾರೆ.

3. ಐದಾರು ವರ್ಷದ ಮಕ್ಕಳು ಭಾಷೆಯಲ್ಲಿ ತಮ್ಮನ್ನೂ ಮತ್ತು ತಮ್ಮವರ ಸಂಬಂಧ ಮತ್ತು ಗುರುತುಗಳನ್ನೂ ವಿವರಿಸುವಷ್ಟರ ಮಟ್ಟಿಗೆ ಮುಂದುವರೆದಿರುತ್ತಾರೆ.

ಬಾಲ್ಯಾವಸ್ಥೆಯ ಮಧ್ಯಕಾಲ

ಬಾಲ್ಯದ ಮಧ್ಯಕಾಲ ಎನ್ನಬಹುದಾದ ಏಳರಿಂದ ಹನ್ನೊಂದು ವರ್ಷದ ಅವಧಿಯಲ್ಲಿ ಸಾಮಾಜಿಕವಾಗಿ ತಮ್ಮನ್ನು ಮಕ್ಕಳು ಗುರುತಿಸಿಕೊಳ್ಳಲಾರಂಭಿಸುತ್ತಾರೆ. ಇತರರೊಂದಿಗೆ ಹೇಗಿರಬೇಕು, ಅವರೊಂದಿಗೆ ಹೇಗೆ ಹೊಂದಿಕೊಳ್ಳಬೇಕು ಎಂಬ ಸಾಮರ್ಥ್ಯವೂ ಈ ಹಂತಕ್ಕಾಗಲೇ ರೂಢಿಯಾಗತೊಡಗುತ್ತಿರುತ್ತದೆ. ತಮ್ಮನ್ನು ಇತರರು ಹೇಗೆ ಕಾಣುತ್ತಾರೆ ಎಂದೂ ಅವರು ಗಮನಿಸುತ್ತಿರುತ್ತಾರೆ.

ಹಾಗೆಯೇ ಇತರರ ಬಗ್ಗೆಯೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುತ್ತಾರೆ. ಮನೆಯವರಲ್ಲದ ಇತರರ ಬಗ್ಗೆ ಆಸಕ್ತಿ ತೋರುತ್ತಾರೆ. ಕೆಲವರನ್ನು ಇಷ್ಟಪಡುವುದಿಲ್ಲ. ಕೆಲವರನ್ನು ನಿವಾರಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಈ ಹಂತದಲ್ಲಿ ಸಾಮಾನ್ಯವಾಗಿ ತಮ್ಮನ್ನು ಇತರರೊಂದಿಗೆ ಮತ್ತು ತಮ್ಮ ಸ್ಥಿತಿಗತಿಗಳನ್ನು ಇತರರ ಸ್ಥಿತಿಗತಿಗಳೊಂದಿಗೆ ಹೋಲಿಸಿಕೊಂಡು ನೋಡುವ ಸಾಮರ್ಥ್ಯವೂ ಈ ಮಧ್ಯಕಾಲದ ಬಾಲ್ಯದಲ್ಲಿ ಬೆಳವಣಿಗೆಯಾಗುತ್ತದೆ.

ಮುಂದೆ ವಯಸ್ಕರಾಗುವ ಮಕ್ಕಳ ಗ್ರಹಿಕೆ ಮತ್ತು ಅನುಭವಗಳ ಈ ಹಂತವು ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಈ ಹಂತದ ಮಗುತನವು ಎಚ್ಚರಿಕೆಯಿಂದ ರೂಪುಗೊಂಡರೆ ಮುಂದೆ ವ್ಯಕ್ತಿಯ ತನ್ನತನವೂ ಅದಕ್ಕೆ ಪೂರಕವಾಗಿ ರೂಪುಗೊಳ್ಳುತ್ತದೆ. ಮಗುತನವೇ ವ್ಯಕ್ತಿಯ ತನ್ನತನವಾಗಿ ರೂಪಾಂತರಗೊಳ್ಳುವುದೆಂಬ ಸ್ಪಷ್ಟ ಅರಿವು ಮಗುವನ್ನು ಪಾಲಿಸುವ ಹಿರಿಯರಿಗೆ ಇರಬೇಕು.

ಮಗುತನದ ರೂಪಾಂತರ

ಮಗುತನವು ತನ್ನತನವಾಗಿ ಸಹಜವಾಗಿ ರೂಪಾಂತರಗೊಳ್ಳುತ್ತಿದ್ದರೆ ಕೆಲವು ಲಕ್ಷಣಗಳನ್ನು ಗುರುತಿಸಬಹುದು.

1. ಹೆಚ್ಚು ಸಮತೋಲದ ಮನಸ್ಥಿತಿಯನ್ನು ಹೊಂದಿರುತ್ತಾರೆ. ತಮ್ಮ ಬಗ್ಗೆ ವಿವರಿಸಿಕೊಳ್ಳುವುದು ಕಡಿಮೆಯಾಗಿರುತ್ತದೆ. ಕೆಲವೊಮ್ಮೆ ವಿವರಿಸಿಕೊಳ್ಳಲೇ ಹೋಗುವುದಿಲ್ಲ. ಕೆಲವರು ಎಷ್ಟೋ ದೊಡ್ಡವರಾಗಿರುತ್ತಾರೆ. ದೊಡ್ಡದೊಡ್ಡ ಲೇಖಕರು, ಸಂಗೀತಗಾರರು, ಕಲಾವಿದರಾಗಿರುತ್ತಾರೆ. ಕೆಲವೊಮ್ಮೆ ಸಾಮಾನ್ಯ ಮನೆವಾರ್ತೆಯ ಮಹಿಳೆಯೋ, ಉದ್ಯೋಗಸ್ಥ ಪುರುಷನೋ ಆಗಿರುತ್ತಾರೆ.

ಆದರೆ ಅವರು ಬಾಯಿ ಬಿಟ್ಟರೇನೇ ತಮ್ಮ ಬಗ್ಗೆ ವಿವರಣೆ. ಇದು ಎಷ್ಟೋ ಬಾರಿ ಸಂದರ್ಭಾನುಸಾರವಾಗಿರುವುದೇ ಇಲ್ಲ. ವರ್ತಮಾನದ ಸಂಗತಿಗಳನ್ನು ತಮ್ಮ ಭೂತಕಾಲದ ಅನುಭವಗಳಿಗೆ ಮತ್ತು ತಮ್ಮ ಮನೆಯವರ ಕುರಿತಾದ ವಿಷಯಗಳಿಗೆ ಕೊಂಡಿ ಬೆಸೆಯುತ್ತಾರೆ.

ಹೇಳ್ತಾರೆ, ಹೇಳ್ತಾರೆ, ಹೇಳ್ತಾನೇ ಇರ್ತಾರೆ; ತಮ್ಮ ತಂದೆ ತಾಯಿ, ಅದ್ಯಾವುದೋ ಅಂಗಡಿ, ಅಲ್ಲಿ ಸಾಮಾನುಗಳನ್ನು ತರುತ್ತಿದ್ದದ್ದು, ತಮ್ಮ ಗುರುಗಳು, ತಾವು ಮದುವೆಯಾದಾಗ ಏನಾಯ್ತು; ಯಾವ ವಿಷಯವಾದರೂ ಪ್ರಸ್ತುತ ವಿಷಯಕ್ಕೆ ತಗುಲಿಕೊಳ್ಳಬಹುದು. ಕೇಳುವವರಿಗೆ ಅವುಗಳನ್ನು ಕೇಳುವ ಯಾವ ಅಗತ್ಯವೂ ಇರುವುದಿಲ್ಲ. ಆದರೂ ಕೇಳಲೇಬೇಕಾಗುತ್ತದೆ.

“ಓ, ಹಾಗಾ? ಸರಿ, ಆಮೇಲೆ?” ಇತ್ಯಾದಿ ತಾವು ಕೇಳುತ್ತಿದ್ದೇವೆಂಬ ಸೂಚನೆ ನೀಡಲು ಹುಸಿ ಆಸಕ್ತಿ ತೋರುತ್ತಿರುತ್ತಾರೆ. ಕೇಳುಗರಿಗೆ ಅವರ ಮಾತನ್ನು ಎಲ್ಲಿ ತುಂಡರಿಸಬೇಕೆಂದೂ ತಿಳಿಯುವುದಿಲ್ಲ. ಕೆಲವೊಮ್ಮೆ ತೀರಾ ಅನಾಮತ್ತಾಗಿ ಮಾತಿನ ಸರಣಿಯನ್ನು ತುಂಡರಿಸಿ ಮುಂದೆ ಹೋಗಬೇಕಾಗುತ್ತದೆ.

ಒಂದು ವೇಳೆ ಹಾಗೆ ಮಾತಾಡುತ್ತಿರುವವರೊಡನೆ ಸ್ನೇಹ ಮತ್ತು ಸಲುಗೆ ಇದ್ದಲ್ಲಿ “ಮಾತು ನಿಲ್ಲಿಸು” ಎಂದು ನೇರವಾಗಿ ಹೇಳಬಹುದಾಗಿರುತ್ತದೆ. ಇಲ್ಲವಾದರೆ, ಯಾರಿಗಾದರೂ ‘ನನಗೆ ಫೋನ್ ಮಾಡು’ ಎಂದು ಮೆಸೇಜ್ ಮಾಡಿ, ಫೋನ್ ಬಂದಾದ ಮೇಲೆ, ‘ಓ, ಅರ್ಜೆಂಟ್ ಕಾಲ್. ನನಗೆ ಏನೋ ಕೆಲಸವಿದೆ. ಮತ್ತೆ ಸಿಗೋಣ. ನೀವು ಹೇಳುತ್ತಿದ್ದದ್ದು ತುಂಬಾ ಇಂಟರೆಸ್ಟಿಂಗ್’ ಅಂತ ರೀಲ್ ಬಿಟ್ಟು ಓಡುತ್ತಾರೆ.

ಅವರಿಗೆ ಅವರ ಬದುಕು, ಸಂಬಂಧಗಳು, ನೋವು ನಲಿವುಗಳು, ನೆನಪುಗಳು, ಹೆಮ್ಮೆ ಅಪಮಾನಗಳೆಲ್ಲಾ ನಿಜಕ್ಕೂ ಆಪ್ತವೂ, ಮಹತ್ತರವೂ ಆಗಿರುತ್ತದೆ. ಆದರೆ, ಸಮಯಾಸಮಯದ ಪ್ರಜ್ಞೆ ಇಲ್ಲದೇ ಹೇಳುವುದರಿಂದ ಅವು ತಮ್ಮ ಮಹತ್ವವನ್ನು ಕಳೆದುಕೊಳ್ಳುತ್ತವೆ. ಇನ್ನೂ ಕೆಲವೊಮ್ಮೆ ನಿಷ್ಟುರವಾಗಿಯೇ ಗಮನಿಸಬೇಕು. ನಮಗೆ ನಮ್ಮ ಅನುಭವಗಳಾಗಲಿ, ನೆನಪುಗಳಾಗಲಿ ಮುಖ್ಯವೂ ಮಹತ್ವದ್ದೂ ಆಗಿರುತ್ತದೆ.

ಆದರೆ ನನ್ನೆದುರಿನ ವ್ಯಕ್ತಿಗೇನಾಗಬೇಕು ಅವುಗಳನ್ನು ಕಟ್ಟಿಕೊಂಡು? ಸಂದರ್ಭಾನುಸಾರವೋ ಅಥವಾ ಕೋರಿಕೆಯ ಮೇರೆಗೋ ಅಥವಾ ಉದಾಹರಣೆಯ ಸಲುವಾಗಿಯೋ ಹಂಚಿಕೊಳ್ಳಬೇಕು. ಅದೂ ಚಿಕ್ಕದಾಗಿ. ಇಲ್ಲದಿದ್ದರೆ ಆ ವ್ಯಕ್ತಿಗಳು ಫೋನ್ ಮಾಡಿದರೆ ಇತರರು ಕರೆ ಸ್ವೀಕರಿಸಲು ಹೆದರುತ್ತಾರೆ, ಏಕೆಂದರೆ, ‘ಒಂದೆರಡು ನಿಮಿಷ ಮಾತಾಡಬಹುದಾ?’ ಎಂದೂ ಕೇಳುವುದಿಲ್ಲ. ಸುಮ್ಮನೆ ಮಾತಾಡಲು ಪ್ರಾರಂಭಿಸಿ ಅದು ಗಂಟೆಗಟ್ಟಲೆ ಹೋಗುತ್ತದೆ. ಕರೆ ಸ್ವೀಕರಿಸಿದವರ ಸಮಯ ಭಯಂಕರವಾಗಿ ಹಾಳಾಗಿರುತ್ತದೆ. ಸಮಯ ವ್ಯರ್ಥವಾಯಿತೆಂದರೆ ಅಷ್ಟು ಜೀವನವೇ ವ್ಯರ್ಥವಾಯಿತೆಂದು.

ಹುಟ್ಟು ಮತ್ತು ಸಾವಿನ ನಡುವಿನ ಅವಧಿ ಬದುಕು. ಹಾಗಾಗಿ ಬದುಕು ಮತ್ತು ಸಮಯ ಎರಡೂ ಸಮಾನಾರ್ಥಕ ಪದಗಳು. ಸಮಯವನ್ನು ಕೊಟ್ಟರೆಂದರೆ ಅವರ ಜೀವನದ ಒಂದು ಭಾಗವನ್ನೇ ಕೊಟ್ಟಿದ್ದಾರೆಂದು ಅರ್ಥ. ಹಾಗಾಗಿ ನಾವು ನಮ್ಮ ಸಮಯವನ್ನೂ ಮತ್ತು ಇತರರ ಸಮಯವನ್ನೂ ಗೌರವಿಸುವುದರ ಮೂಲಕ ಜೀವನಪ್ರೀತಿಯನ್ನು ಅಭಿವ್ಯಕ್ತಿಸಬೇಕು.

ಮಗುತನವು ಸ್ವಾಸ್ಥ್ಯಪೂರ್ಣವಾದ ತನ್ನತನಕ್ಕೆ ಬದಲಾಗಿರುವುದರ ಸ್ಪಷ್ಟ ಲಕ್ಷಣವೇ ತನ್ನ ಸಮಯ ಮತ್ತು ಇತರರ ಸಮಯವನ್ನು ಜೀವನದ ಮೌಲಿಕ ಕ್ಷಣಗಳನ್ನಾಗಿ ರೂಪಿಸಿಕೊಳ್ಳುವುದು.
ಮಗುವು ತನ್ನ ಬಾಲ್ಯದಲ್ಲಿಯೇನಾದರೂ ತನ್ನ ತಾನು ವಿವರಿಸಿಕೊಂಡು ಸುಧೀರ್ಘವಾಗಿ ಮಾತಾಡುತ್ತಲೇ ಇರುವ ಲಕ್ಷಣಗಳನ್ನು ತೋರಿದರೆ ಎಚ್ಚರವಹಿಸಬೇಕು. ಅವರ ಮಗುತನವು ತನ್ನತನಕ್ಕೆ ರೂಪಾಂತರಗೊಳ್ಳುವ ಅವಧಿಯಲ್ಲಿಯೇ ಅವರಿಗೆ ಅದರ ರೂಢಿ ತಪ್ಪಿಸಬೇಕು.

2. ಭ್ರಾಮಕವಾದ ಆದರ್ಶದ ತನ್ನತನದ ಪ್ರತಿಮೆಗೂ ಮತ್ತು ತನ್ನ ನಿಜವಾಗಿರುವ ತನ್ನತನಕ್ಕೂ ಇರುವ ಸಾಮ್ಯತೆ ಮತ್ತು ವ್ಯತ್ಯಾಸಗಳನ್ನು ತಿಳಿಯುತ್ತಾರೆ.
ತಾನು, ತನ್ನ ಸಾಮರ್ಥ್ಯ, ದೌರ್ಬಲ್ಯ, ಸಂಪನ್ಮೂಲಗಳು, ಸಾಧ್ಯತೆಗಳು; ಇತ್ಯಾದಿಗಳನ್ನು ಅರಿತುಕೊಂಡು ಅವುಗಳ ಆಧಾರದಲ್ಲಿ ತನ್ನ ಸಾಮರ್ಥ್ಯ ಮತ್ತು ಸಾಧ್ಯತೆಗಳನ್ನು ವಿಸ್ತರಿಸಿಕೊಂಡು ಹೋಗುವುದು ತನ್ನತನದ ಸಾಕ್ಷಾತ್ಕಾರವಾಗಿರುವವರಿಗೆ ಸಾಧ್ಯ. ಇಲ್ಲವಾದರೆ ಭ್ರಾಮಕವಾದ ಆದರ್ಶದ ಅಥವಾ ಹಗಲುಗನಸಿನ ಗೋಪುರಗಳಲ್ಲಿ ತಮ್ಮನ್ನು ಕಂಡುಕೊಂಡು ವಾಸ್ತವದ ಬದುಕಿನಲ್ಲಿ ಅವರು ತಮ್ಮತನವನ್ನು ಕಾಣುವುದೇ ಇಲ್ಲ.

3. ತನ್ನ ಸಾಮರ್ಥ್ಯವನ್ನು ಮುಂದಿಡುವುದು, ತಾನು ಹೇಗಿದ್ದೇನೆಂದು ಮುಂದಿಡುವುದಲ್ಲ.
ಕೆಲವು ವ್ಯಕ್ತಿಗಳನ್ನು ಗಮನಿಸಿ. ತಾನೆಷ್ಟು ಭಾವುಕವಾದ ವ್ಯಕ್ತಿ, ತಾನೆಷ್ಟು ಮರುಗುತ್ತೇನೆ, ತನಗೆ ಖುಷಿಯಾದರೆ ಹೇಗೆ ವರ್ತಿಸುತ್ತೇನೆ, ತನಗೆ ಅಪಮಾನವಾದರೆ ಹೇಗೆ ತಡೆದುಕೊಳ್ಳಲಾರದೇ ತಳಮಳಿಸುತ್ತೇನೆ, ತಾನು ಹೇಗೆ ವ್ಯಕ್ತಿಗಳನ್ನು ಹಚ್ಚಿಕೊಳ್ಳುತ್ತೇನೆ; ಇಂತಹ ತಮ್ಮ ವರ್ತನೆಗಳ ಬಗ್ಗೆಯೇ ಮಾತಾಡುತ್ತಾರೆ.

ಅದನ್ನೇ ಹೇಳುತ್ತಿರುತ್ತಾರೆ. ಆದರೆ, ಅವರ ತನ್ನತನವು ಸರಿಯಾಗಿ ರೂಪಾಂತರವಾಗಿದ್ದ ಪಕ್ಷದಲ್ಲಿ, ‘ತಾನು ಯಾವ ಕೆಲಸ ಮಾಡಬಲ್ಲೆ? ತನ್ನ ಸಾಮರ್ಥ್ಯವೇನು? ತಮ್ಮ ಸಾಮರ್ಥ್ಯ ಮತ್ತು ಕೌಶಲ್ಯ ಕೇಳುಗರ ಯಾವ ಕೆಲಸಕ್ಕೆ ಉಪಯೋಗಕ್ಕೆ ಬರಬಲ್ಲದು? ಇತ್ಯಾದಿಗಳನ್ನು ತಮ್ಮ ಕೇಳುಗರಿಗೆ ಮನವರಿಕೆ ಮಾಡಿಕೊಡುತ್ತಾರೆ.

ನಾನು ಹೇಗೆ ವರ್ತಿಸುತ್ತಿದ್ದೇನೆ, ನನ್ನ ಅಂಟಿಕೆ, ವ್ಯಾಮೋಹಗಳೇನು ಎಂದು ನನಗೆ ನನ್ನತನವನ್ನು ರೂಪಿಸಿಕೊಳ್ಳುವ ಅಥವಾ ಬದಲಿಸಿಕೊಳ್ಳುವ ದಿಕ್ಕಿನಲ್ಲಿ ಬೇಕಾಗಿರುವುದು. ಇತರರಿಗೆ ಅದನ್ನು ವಿವರಿಸುವ ಅಗತ್ಯವಿಲ್ಲ. ಅವರಿಗೆ ತಿಳಿಯಬೇಕಾಗಿರುವುದು ತನ್ನ ಸಾಮರ್ಥ್ಯ. ಉಳಿದದ್ದು ಅವರೇ ನೋಡುತ್ತಾರಲ್ಲಾ, ಅನುಭವಿಸುತ್ತಾರಲ್ಲಾ!

4. ತನ್ನತನದಲ್ಲಿ ಮೂಡುವ ವ್ಯಕ್ತಿಗತವಾದ ಭಾವ

ನಾನು ಎಂಬ ಭಾವವು ತನ್ನತನ ಎಂಬ ಅರಿವಿನ ಜೊತೆಗೆ ಒಂದಾಗಿ ಕೆಲಸ ಮಾಡುವುದು. ಇದರಿಂದ ವ್ಯಕ್ತಿಗತವಾಗಿ ಮತ್ತು ಸಾಮಾಜಿಕವಾಗಿ ಸಂಬಂಧಗಳನ್ನು ಕುರಿತು ಗೊಂದಲಗಳನ್ನು ಸೃಷ್ಟಿಸಿಕೊಳ್ಳದೇ ಹದವಾದ ಮತ್ತು ಮಧುರವಾದ ವಾತಾವರಣವನ್ನು ತಮಗೂ ಸೃಷ್ಟಿಸಿಕೊಳ್ಳಲು ಸಾಧ್ಯ, ಇತರರಿಗೂ ಆ ಅನುಭವ ನೀಡಲು ಸಾಧ್ಯ.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending