Connect with us

ನೆಲದನಿ

ಕಲಾ ಲೋಕದೊಳಗೊಬ್ಬ ಸಾಧಕ : ಡಾ.ಸಂತೋಷ್ ಅವರ ಬದುಕಿನ ಸಂಕಥನ

Published

on

ಕಲಾವಿದ ಡಾ.ಸಂತೋಷ್ ಅವರೊಂದಿಗೆ ಲೇಖಕ ಡಾ.ಓಬಳೇಶ್

ಲೆ ಮತ್ತು ಕಲಾವಿದ ಎಂದಾಕ್ಷಣ ನಮಗೆ ನೆನಪಾಗುವುದು ವಿಶಿಷ್ಟವಾದ ಚಿತ್ತಾರದ ಲೋಕ. ಆದರೆ ಈ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ ಕಲಾವಿದರಿಗೆ ಈ ಕ್ಷೇತ್ರದ ಸಿದ್ಧಿ ಅಷ್ಟೊಂದು ಸುಲಭದ ಕೆಲಸವಲ್ಲ. ಇಲ್ಲಿ ತಮ್ಮದೇ ಆದ ಸಾಧನೆ ಮಾಡಿರುವ ಪ್ರತಿಯೊಬ್ಬ ಕಲಾವಿದರೂ ಕೂಡ ಹಲವಾರು ತೆರನಾದ ಏಳುಬೀಳುಗಳನ್ನು ಅನುಭವಿಸಿಯೇ ಮುಂದೆ ಬಂದಿರುತ್ತಾರೆ. ಹೀಗೆ ಕಲಾ ಲೋಕದೊಳಗೆ ತನ್ನದೇ ಆದ ಸಾಧನೆ ಮಾಡಿರುವ ಸಂತೋಷ್ ದಾವಣಗೆರೆ ಇವರು ಕೂಡ ಈ ಹಾದಿಯಲ್ಲಿ ಹಲವಾರು ಸಂಕಷ್ಟಗಳನ್ನು ಮೆಟ್ಟಿನಿಂತು ಕಲಾ ಮತ್ತು ಸಾಹಿತ್ಯ ಲೋಕಕ್ಕೆ ತನ್ನದೆ ಆದ ಕಾಣಿಕೆಯನ್ನು ನೀಡಿದ್ದಾರೆ. ಇಂತಹ ಸಾಧಕ ಕಲಾವಿದನ ಬದುಕಿನ ಸಂಕಥನವನ್ನು ಅನಾವರಣಗೊಳಿಸುವುದೆ ಪ್ರಸ್ತುತ ಲೇಖನದ ಉದ್ಧೇಶವಾಗಿದೆ.

ಶ್ರೀಯುತ ಸಂತೋಷ್ ದಾವಣಗೆರೆ ಅವರು 19ನೇ ಮೇ 1974ರಂದು ದಾವಣಗೆರೆ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ಶ್ರೀ ರುದ್ರಪ್ಪ ಹಾಗೂ ಶ್ರೀಮತಿ ಕೊಟ್ರಮ್ಮ ದಂಪತಿಗಳ ಪುತ್ರನಾಗಿ ಜನಿಸಿದರು. ಬಾಲ್ಯದ ದಿನಗಳಿಂದಲೂ ಕೌಟುಂಬಿಕ ಪರಿಸ್ಥಿತಿಯು ಉತ್ತಮವಾಗಿದ್ದ ಕಾರಣ ಯಾವುದೇ ಸಂಕಷ್ಟಗಳನ್ನು ಅನುಭವಿಸದೆ ಬೆಳೆದ ಇವರು, ಬಿ.ಎ ಪದವಿ ಶಿಕ್ಷಣವನ್ನು ಪಡೆದು ಕೆಲವೊಂದು ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತ ತಮ್ಮ ಜೀವನವನ್ನು ನಿರ್ವಹಿಸುತ್ತಿದ್ದರು. ಆದರೆ ತಮ್ಮ ತಾಯಿಯವರ ಅಕಾಲಿಕ ಮರಣದಿಂದ ಮನನೊಂದು ಬೆಂಗಳೂರಿನತ್ತ ನಡೆದರು. ಬೆಂಗಳೂರಿನ ಪರಿಚಯವೇ ಇರದ ಇವರು ಇಲ್ಲಿಗೆ ಬಂದ ಆರಂಭದ ದಿನಗಳಲ್ಲಿ ತುಂಬ ಸಂಕಷ್ಟವನ್ನು ಅನುಭವಿಸಿದರು. ಕೆಲವು ತಿಂಗಳುಗಳು ಸಾರ್ವಜನಿಕ ಪಾರ್ಕುಗಳನ್ನೆ ಆಶ್ರಯಿಸಿ ಜೀವನ ನಡೆಸುವ ಹಂತವನ್ನು ತಲುಪಿ, ಕೊನೆ ಕೊನೆಗೆ ಒಂದೊತ್ತಿನ ಊಟಕ್ಕೂ ಭಿಕ್ಷೆ ಬೇಡುವ ಹಂತವನ್ನು ತಲುಪಿದರು. ಇಂತಹ ಸಂದರ್ಭದಲ್ಲಿ ಹೆಸರಾಂತ ರಂಗಕರ್ಮಿಗಳಾದ ಎ.ಎಸ್.ಮೂರ್ತಿಯವರು ನಡೆಸುತಿದ್ದ ಬೀದಿ ನಾಟಕಗಳನ್ನು ನೋಡಿ, ಇವರ ಜೊತೆ ತಿರುಗಾಡಿದರೆ ಆ ದಿನದ ಊಟವಾದರೂ ಸಿಗುತ್ತದೆ ಎಂದು ನಂಬಿ ಅವರ ತಂಡದೊಂದಿಗೆ ಪಾತ್ರ ಮಾಡುತ್ತ ಹಲವು ದಿನಗಳು ಕಳೆದರು.

ಶ್ರೀಯುತರು ಯಾವುದೇ ಗೊತ್ತು ಗುರಿ, ಉದ್ಧೇಶವಿಲ್ಲದೆ ಬೆಂಗಳೂರಿಗೆ ಪ್ರವೇಶ ಮಾಡಿದ್ದರು. ಈ ಸಂದರ್ಭದಲ್ಲಿ ಅನ್ನಕೆ ಆಸರೆಯಾಗಿದ್ದು ಈ ರಂಗಕಲೆ. ಹೀಗೆ ಆರಂಭವಾದ ಇವರ ಕಲಾ ಬದುಕು ವಿವಿಧ ಸ್ವರೂಪಗಳಲ್ಲಿ ಮಂದುವರೆಯಿತು. ಯಾವುದೇ ರಂಗ ತರಬೇತಿಯು ಇಲ್ಲದ ಇವರಿಗೆ ರಂಗಭೂಮಿಯ ಆಶಯಗಳೇನು, ಚಲನಚಿತ್ರಗಳಲ್ಲಿ ನಟಿಸಲು ಬೇಕಾದ ಮಾನದಂಡಗಳೇನು ಎಂಬುದರ ಯಾವುದೇ ಪರಿಚಯವಾಗಲಿ, ಅನುಭವವಾಗಲಿ ಇರಲಿಲ್ಲ. ಅನ್ನದ ಅನಿವಾರ್ಯತೆಗಾಗಿ ಮೊದಲು ಎ.ಎಸ್.ಮೂರ್ತಿಯವರ ಕಲಾ ತಂಡದೊಂದಿಗೆ ತನ್ನನ್ನು ತೊಡಗಿಸಿಕೊಂಡರು. ನಂತರದಲ್ಲಿ ಇವರ ಸ್ವಗ್ರಾಮದವರೇ ಆದ ನಿರ್ದೇಶಕ ಶರಣ್ ಕಬ್ಬೂರು ಅವರ ನಿರ್ಮಾಣದ ‘ಪೂಜಾರಿ’ ಸಿನಮಾದಲ್ಲಿ ಒಂದು ಕಿರುಪಾತ್ರವನ್ನು ಮಾಡಿ ಮೆಚ್ಚುಗೆಯನ್ನು ಪಡೆದುಕೊಂಡಿದ್ದರು. ಇದರಿಂದ ಪ್ರೇರಿತಗೊಂಡ ಇವರು ನಂತರದಲ್ಲಿ ಮುಕ್ತ ಧಾರವಾಯಿಯಲ್ಲಿ ನಟಿಸುವುದಕ್ಕೆ ಅವಕಾಶಗಳಿವೆ ಎಂದು ತಿಳಿದು ಅಲ್ಲಿಗೆ ಹೋದಾಗ, ಭಯದಿಂದ ಅಭಿನಯದಲ್ಲಿ ಏರುಪೇರು ಉಂಟಾಯಿತು. ಆಗ ಅಲ್ಲಿನ ಪ್ರೊಡಕ್ಷನ್ ಮ್ಯಾನೇಜರ್ ಅವರಿಂದ ಚೀಮಾರಿಯನ್ನು ಹಾಕಿಸಿಕೊಂಡು, ಅಳುತ್ತ ಹೊರಬಂದರು. ಆ ಸಂದರ್ಭದಲ್ಲಿ ಸತ್ಯ ಎಂಬ ಕಲಾವಿದರು ಈ ಹಿಂದೆ ನಟಿಸಿದ ಇವರೊಳಗಿನ ಕಲಾ ಚಾತುರ್ಯತೆಯನ್ನು ಅರಿತಿದ್ದರು. ಈ ಸಂದರ್ಭದಲ್ಲಿ ಸಂತೋಷ್ ಅವರನ್ನು ಮಾತನಾಡಿಸಿ, ಈ ಹಿಂದೆ ನೀವು ತುಂಬ ಚನ್ನಾಗಿ ನಟಿಸಿದ್ದನು ನಾನು ನೋಡಿದ್ದೇನೆ. ನಿಮ್ಮೊಳಗೊಬ್ಬ ಕಲಾವಿದನಿದ್ದಾನೆ. ಆ ಕಲಾವಿದನನ್ನು ಬೆಳೆಸುವುದಕ್ಕೆ ತರಬೇತಿಯ ಅಗತ್ಯವಿದೆ ಎಂದು ಧೈರ್ಯ ಹೇಳಿದರು. ಆಗ ಸಂತೋಷ್ ಅವರು ನನಗೆ ಇದೆಲ್ಲ ಗೊತ್ತೆ ಇಲ್ಲ. ಯಾರಾದರು ತೊರಿಸಿಕೊಟ್ಟರೆ ಮಾಡುತ್ತೇನೆ ಎಂದು ಹೇಳಿದಾಗ, ಎ.ಎಸ್.ಮೂರ್ತಿಯವರ ‘ಅಭಿನಯ ತರಂಗ’ದ ದಾರಿ ತೋರಿದರು. ಈ ಹಿಂದೆ ಎ.ಎಸ್.ಮೂರ್ತಿಯವರ ತಂಡದೊಂದಿಗೆ ಕೆಲಸ ಮಾಡಿದ ಅನುಭವ ಹೊಂದಿದ ಕಾರಣದಿಂದ ತನಗೆ ಅಲ್ಲಿಗೆ ಯಾವುದೇ ಅಡೆತಡೆ ಇಲ್ಲದೆ ತರಬೇತಿ ಸಿಗಬಹುದು ಎಂದು ಅಭಿನಯ ತರಂಗದತ್ತ ಮುಖ ಮಾಡಿದರು. ಇಲ್ಲಿಗೆ ಬಂದು ನಾನು ಸಿನಿಮಾ ಮಾಡಲಿಕ್ಕಾಗಿ ತರಬೇತಿ ಬೇಕಾಗಿದೆ ಎಂದಾಗ ಎ.ಎಸ್.ಮೂರ್ತಿಯವರ ಮಗಳಾದ ‘ಗೌರಿದತ್ತ್’ ಅವರಿಂದಲೂ ಚೀಮಾರಿ ಹಾಕಿಸಿಕೊಂಡರು. ರಂಗಭೂಮಿಯಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವವರು ಯಾವುದೇ ಕಾರಣಕ್ಕೂ ಸಿನಿಮಾ ಮಾಡುವ ಅವಕಾಶವಾದಿಗಳಾಗಿರಬಾರದು. ರಂಗಭೂಮಿಗೆ ತನ್ನದೇ ಆದ ಸಿದ್ಧಾಂತ, ಮೌಲ್ಯ, ಬದ್ಧತೆಗಳಿಗೆ ಎಂಬುದಾಗಿ ಅರಿವು ಮೂಡಿಸಿ, ಇಲ್ಲಿ ತರಬೇತಿ ಪಡೆಯುವುದಕ್ಕೆ ಹಣ ಕೊಡಬೇಕಾಗುತ್ತದೆ. ಇಂತಿಷ್ಟು ಹಣ ತೆಗೆದುಕೊಂಡು ಬರುವಂತೆ ತಿಳಿಸಿದರು. ಆಗ ಸಂತೋಷ್ ಅವರು ದಾವಣಗೆರೆಗೆ ಬಂದು ತಮ್ಮ ಆಪ್ತರಿಂದ ಒಂದಿಷ್ಟು ಹಣವನ್ನು ಸಂಗ್ರಹಿಸಿ ಅವರಿಗೆ ನೀಡಿ, ಉಳಿದ ಹಣವನ್ನು ಹೇಗಾದರು ಕೆಲಸ ಮಾಡಿ ಕೊಡುವುದಾಗಿ ತಿಳಿಸಿ ರಂಗ ತರಬೇತಿಗೆ ಸೇರಿಕೊಂಡರು.

ಶ್ರೀಯುತರು ‘ಅಭಿನಯ ತರಂಗ’ಕ್ಕೆ ಸೇರಿಕೊಂಡ ತರುವಾಯದಲ್ಲಿ ಇವರ ಬದುಕಿನ ದಿಕ್ಕೆ ಬದಲಾಯಿತು. ಈ ಸಂಸ್ಥೆಗೆ ಬರುತಿದ್ದ ಹಿರಿಯ ಕಲಾವಿದರು, ನಿರ್ದೇಶಕರುಗಳ ಎದುರಿಗೆ ಹಾಡುವುದಕ್ಕೆ ಅವಕಾಶಗಳು ಲಭಿಸಿದವು. ಸ್ವತಃ ನಾಟಕ ರಚನೆ, ನಿರ್ದೇಶನಕ್ಕೆ ಅವಕಾಶಗಳು ದೊರಕಿದವು. ಈ ಎಲ್ಲಾ ಸಂದರ್ಭಗಳಲ್ಲಿ ಗಿರೀಶ್ ಜತ್ತಿ ಎಂಬ ಗೆಳೆಯನ ಸಹಕಾರವು ದೊರೆಯಿತು. ಈ ಎಲ್ಲಾ ಅವಕಾಶಗಳಿಂದಾಗಿ 900ಕ್ಕೂ ಹೆಚ್ಚು ಬೀದಿ ನಾಟಕ, 300ಕ್ಕೂ ಹೆಚ್ಚು ನಾಟಕ, 45ಕ್ಕೂ ಹೆಚ್ಚು ಧಾರವಾಯಿ, 10 ಸಿನಿಮಾಗಳಲ್ಲಿ ಅಭಿನಯ, 6 ಕಿರುಚಿತ್ರಗಳಲ್ಲಿ ನಟನೆ ಮತ್ತು ನಿರ್ದೇಶನ, ಕಸ್ತೂರಿ ವಾಹಿನಿಯ ಕಾಮಿಡಿ ಷೋಗಳಾದ ‘ಕಾಮಿಡಿ ಕಿಲಾಡಿಗಳು’, ‘ಕಾಮಿಡಿ ದರ್ಬಾರ್’ ಹಾಗೂ ‘ಟ್ವಿಂಕಲ್ ಟ್ವಿಂಕಲ್ ಲಿಟಲ್ ಸ್ಟಾರ್’ ಕಾರ್ಯಕ್ರಮಗಳಲ್ಲಿ ತಮ್ಮ ಸಹಭಾಗಿತ್ವವನ್ನು ವ್ಯಕ್ತಪಡಿಸಿದ ಕೀರ್ತಿಯು ಶ್ರೀಯುತರಿಗೆ ಸಲ್ಲುತ್ತದೆ. ಇದೆಲ್ಲವೂ ನೆರವೇರಿದ್ದು ‘ಅಭಿನಯ ತರಂಗ’ವು ನೀಡಿದ ಅತ್ಯಮೂಲ್ಯವಾದ ಕೊಡುಗೆಯಾಗಿದ್ದು, ಇಲ್ಲಿ ಶ್ರೀಯುತ ಸಂತೋಷ್ ಅವರ ಪ್ರಾಮಾಣಿಕ ಪ್ರಯತ್ನ ಸಕ್ರಿಯವಾಗಿ ಕಾರ್ಯನಿರ್ವಹಿಸಿದೆ. ಈ ಅಭಿನಯ ತರಂಗದಲ್ಲಿ ಶ್ರೀಯುತರು ತಮ್ಮ ತಂದೆಯರಿಂದ ಕಲಿತಂತಹ ಹಲವಾರು ತತ್ವಪದಗಳು ಮತ್ತೇ ಮತ್ತೇ ಪ್ರದರ್ಶನವನ್ನು ಪಡೆದುಕೊಂಡವು. ಇವುಗಳು ಸಂತೋಷ್ ಅವರನ್ನು ಗುರುತಿಸುವುದಕ್ಕೆ ಅವಕಾಶವನ್ನು ಕಲ್ಪಿಸಿಕೊಟ್ಟವು.

ಶ್ರೀಯುತ ಸಂತೋಷ್ ಅವರು ಈ ವೇಳೆಗಾಗಲೆ ರಂಗಭೂಮಿ, ಕಿರುತೆರೆ, ಸಿನಿಮಾ ಲೋಕದಲ್ಲಿ ಸಾಕಷ್ಟು ಗುರುತಿಸಿಕೊಂಡಿದ್ದರು. ಆದರೆ ಈ ಹಂತದ ವೇಳೆಗೆ ತಮ್ಮ ತಂದೆಯವರನ್ನು ಕಳೆದುಕೊಂಡಿದ್ದರು. ನಂತರದಲ್ಲಿ ಮದುವೆಯಾಗಬೇಕೆಂದು ಹುಡುಕಾಡಿ, ತನಗೆ ಎಲ್ಲಿಯೂ ಹೆಣ್ಣು ಸಿಗಲಿಲ್ಲವೆಂದು ಬೇಸರಗೊಂಡು, ಮದುವೆಯ ವಿಷಯವನ್ನು ತಲೆಯಿಂದ ತೆಗೆದುಹಾಕಿ ತಂದೆಯವರು ಹಾಡುತಿದ್ದ ತತ್ವಪದಗಳ ಸಂಗ್ರಹದತ್ತ ಮುಖಮಾಡಿ ಹಲವು ದಿನಗಳ ಕಾಲ ಕ್ಷೇತ್ರಕಾರ್ಯ ಮಾಡಿ, ತನ್ನ ತಂದೆಯ ಶಿಷ್ಯಂದಿರ ಬಳಿ ಸುಮಾರು 55 ತತ್ವಪದ ಹಾಡುಗಳನ್ನು ಸಂಗ್ರಹಿಸಿ ‘ಅಪ್ಪನ ಸಂಗ್ರಹ’ ಎಂಬ ಕೃತಿಯನ್ನು ಬಿಡುಗಡೆ ಮಾಡುವ ಹಂತದಲ್ಲಿ ಕಂಕಣ ಭಾಗ್ಯವೂ ಕೂಡಿ ಬಂತು. ತಮ್ಮ ಮದುವೆಯ ದಿನದಂದೆ ‘ಅಪ್ಪನ ಸಂಗ್ರಹ’ ಕೃತಿಯು ಕೂಡ ಬಿಡುಗಡೆಯ ಭಾಗ್ಯವನ್ನು ಪಡೆದುಕೊಂಡಿತು. ನಂತರದಲ್ಲಿ ಇವರನ್ನು ಬಹು ಕಾಡಿದ ವಿಷಯವೆಂದರೆ ಕರ್ನಾಟಕದ ಮಠ ಮಾನ್ಯಗಳು. ತಮ್ಮ ಶ್ರೀಮತಿಯ ಮನವೊಲಿಸಿ, ಅವರು ಹೆರಿಗೆಗೆ ತಮ್ಮ ತವರಿಗೆ ತೆರಳಿದಾಗ ಪ್ರಯಾಣಕ್ಕೆ ಬೇಕಾದ ಸಕಲ ಸಿದ್ಧತೆ ಮಾಡಿಕೊಂಡು ಮಠಗಳ ಅಧ್ಯಯನಕ್ಕೆ ಸಿದ್ಧತೆಯನ್ನು ಕೈಗೊಂಡರು.

ಶ್ರೀಯುತರದು ಮಠ ಮಾನ್ಯಗಳ ಅಧ್ಯಯನವು ಅತ್ಯಂತ ಆಸಕ್ತಿದಾಯಕವಾದ ವಿಷಯವಾಗಿತ್ತು. ಅದಕ್ಕಿಂತ ಹೆಚ್ಚಾಗಿ ಈ ವಿಷಯವು ಅವರನ್ನು ಬಹುದಿನಗಳು ಕಾಡಿತ್ತು. ಇದಕ್ಕಾಗಿ ಕೆಲವು ದಿನಗಳ ಕಾಲ ಊಟ, ನಿದ್ರೆಯನ್ನು ಕಳೆದುಕೊಂಡಿದ್ದರು. ಕೊನೆಗೂ ಕೂಡಿಬಂದ ಅವಕಾಶದಿಂದಾಗಿ ದಾವಣಗೆರೆಯ ಹೆಬ್ಬಾಳು ಮಠದಿಂದ ಆರಂಭಗೊಂಡ ಇವರ ಮೊದಲ ಹಂತದ ಆಧ್ಯಯನವು ಸದರಿ ಜಿಲ್ಲೆಯನ್ನು ಸಂಪೂರ್ಣ ಅಧ್ಯಯನಕ್ಕೆ ಒಳಪಡಿಸಿತು. ಹೀಗೆ ಆರಂಭಗೊಂಡ ಕರ್ನಾಟಕದ 30 ಜಿಲ್ಲೆಗಳ ಪ್ರತಿಯೊಂದು ಮಠಗಳ ಅಧ್ಯಯನವು 39.000 ಕಿ.ಮಿ ಹಾದಿಯನ್ನು 19 ತಿಂಗಳುಗಳ ಕಾಲ 3000 ಸಾವಿರ ಹಳ್ಳಿಗಳನ್ನು ಸುತ್ತಿ, 2000 ಮಠಗಳಿಂದ ಮಾಹಿತಿಯನ್ನು ಸಂಗ್ರಹಿಸಿದ್ದರು. ನಂತರದಲ್ಲಿ ಸಮಗ್ರವಾದ ಮಾಹಿತಿಗಾಗಿ ಸಿದ್ಧತೆ ಮಾಡಿಕೊಂಡು ಎರಡನೇ ಹಂತದಲ್ಲಿ 56.000 ಕಿ.ಮಿ ಸಂಚರಿಸಿ ಸಮಗ್ರವಾದ ಮಾಹಿಯನ್ನು ಪಡೆದುಕೊಂಡು ಬಂದರು. ಈ ಸಂದರ್ಭದಲ್ಲಿ ಅವರು ಅನುಭವಿಸಿದ ಯಾತನೆಗಳನ್ನು ಕೇಳಿದರೆ ಎಂತಹ ಕಲ್ಲು ಮನಸು ಕೂಡ ಕರಗಿ ನೀರಾಗುವಂತಹ ಕರಾಳ ಅನುಭವಗಳು ಶ್ರೀಯುತರಿಗೆ ಲಭಿಸಿವೆ. ಈ ಎಲ್ಲಾ ನೋವುಗಳನ್ನು ತಡೆದುಕೊಂಡು ಸಮಗ್ರ ಮಾಹಿತಿಯನ್ನು ಶ್ರೀಯುತರು ಸಂಗ್ರಹಿಸಿರುವುದು ನಿಜಕ್ಕೂ ಅಭೂತಪೂರ್ವದ ಸಂಗತಿಯಾಗಿದೆ. ಹೀಗೆ ಸಂಗ್ರಹಿಸಿದ ಮಾಹಿತಿಯನ್ನು ಪ್ರಕಟಿಸುವುದಕ್ಕೆ ಬೇಕಾದ ಹಣಕಾಸಿನ ನೆರವು ಇಲ್ಲದೆ ಹಲವಾರು ದಿನಗಳ ಕಾಲ ನೋವು ಅನುಭವಿಸಿದ್ದಾರೆ. ಹಲವಾರು ದಾನಿಗಳ ಆಶ್ರಯವನ್ನು ಬೇಡಿದ್ದಾರೆ. ಆದರೆ ಇವರ ಬದುಕಲ್ಲಿ ಆತ್ಮೀಯರಾಗಿ ಬಂದ ಶ್ರೀಮತಿ ಶುಭ ಐನಳ್ಳಿ ವಿಶ್ವಪ್ರಕಾಶ್ ಹಾಗೂ ಶ್ರೀ ರವೀಂದ್ರ ಅರಳಗುಪ್ಪಿ ಅವರ ಸಹಕಾರದಿಂದ ಈ ಸಂಶೋಧನ ಕಾರ್ಯವು ಒಂದು ಮೂರ್ತ ಸ್ವರೂಪವನ್ನು ಪಡೆದುಕೊಂಡಿತು. ಹಾಗೆಯೇ ಪುಸ್ತಕ ಮುದ್ರಣಕ್ಕೆ ಆರ್ಥಿಕ ಸಹಕಾರ ನೀಡಿದ ಶ್ರೀ. ಗಂಗಾಧರ್ ಯಾವಗಲ್, ಮುದ್ರಣಕ್ಕೆ ಸಹಕರಿಸಿದ ಪ್ರೆಸ್ ಮಾಲಿಕರಾದ ಬಿ.ಸಿ.ಪಾಟೀಲ್ ಅವರ ಸಹಕಾರದಿಂದಾಗಿ ಜಿಲ್ಲಾವಾರು ಮಠಗಳ ದರ್ಶನದ ಕೃತಿಗಳು ಬಿಡುಗಡೆಯ ಭಾಗ್ಯವನ್ನು ಪಡೆದುಕೊಂಡಿವೆ.

ಶ್ರೀಯುತ ಸಂತೋಷ್ ಅವರು ಬವಣೆಯ ನಡುವೆಯೇ ಬದುಕು ರೂಪಿಸಿಕೊಂಡು ಬಂದ ಅಪರೂಪದ ಕಲಾವಿದ. ಕಲಾವಿದನಾಚೆ ಒಬ್ಬ ವಿದ್ವಾಂಸನಾಗಿ, ಸಂಶೋಧಕನಾಗಿ ತನ್ನ ಸೇವೆಯನ್ನು ಸಲ್ಲಿಸಿದವರು. ತನ್ನ ಸಾರ್ಥಕ್ಕಾಗಿ ದುಡಿಯದೆ, ಸಮಾಜಕ್ಕೊಂದು ಸಂದೇಶ, ಮಾರ್ಗದರ್ಶನ ನೀಡಬೇಕೆಂಬ ಇವರ ತುಡಿತ, ಹಂಬಲ ನಿಜಕ್ಕೂ ಶ್ಲಾಘನೀಯ. ಇಂತಹ ಅಪರೂಪದ ಕಲಾ ಪ್ರತಿಭೆಯನ್ನು ಗಮನಿಸಿ ಜರುಸಲೆಂ ವಿಶ್ವವಿದ್ಯಾಲಯವು ‘ಗೌರವ ಡಾಕ್ಟರೇಟ್’ ಪದವಿಯನ್ನು ನೀಡಿ ಗೌರವಿಸಿದೆ. ಹಾಗೆಯೇ ಶ್ರೀಯುತರಿಗೆ ಉತ್ತಮ ಹಾಸ್ಯ ನಟ ಪ್ರಶಸ್ತಿ, ಕಲಾಕಲ್ಪ ಪ್ರಶಸ್ತಿ, ಸಮಾಜ ಸೇವಾರತ್ನ ಪ್ರಶಸ್ತಿ, ಕರ್ನಾಟಕ ಕಲಾರತ್ನ ಪ್ರಶಸ್ತಿ, ಯುವ ಸ್ಪೂರ್ತಿ ಚೇತನ ಪ್ರಶಸ್ತಿ, ಶ್ರೀ ಶಿವ ದಾಸಿಮಯ್ಯ ಸಾಹಿತ್ಯ ರತ್ನ ಪ್ರಶಸ್ತಿ ಹೀಗೆ ಹಲವಾರು ಪ್ರಶಸ್ತಿಗಳು ಇವರ ಮುಡಿಗೇರಿವೆ. ಇವರ ಈ ಎಲ್ಲಾ ಸಾಧನೆಗಳಿಗೆ ಇವರ ಶ್ರೀಮತಿಯವರಾದ ಜಯಶ್ರೀಯವರ ಸಹಕಾರ ಪ್ರಚೋದನೆಯನ್ನು ನೀಡಿದೆ. ಇವರ ಕಲಾಸೇವೆ ಮತ್ತು ಸಮಾಜ ಸೇವೆ ಹೀಗೆ ಮುಂದುವರೆಯಲಿ. ಶ್ರೀಯುತರ ಕುಟುಂಬಕ್ಕೆ ದೇವರು ಆರೋಗ್ಯ ಮತ್ತು ನೆಮ್ಮದಿಯನ್ನು ಕರುಣಿಸಲಿ ಎಂಬುದು ನಮ್ಮೆಲ್ಲರ ಹಾರೈಕೆ.

ದಿನದ ಸುದ್ದಿ

ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು

Published

on

  • ರುದ್ರಪ್ಪ ಹನಗವಾಡಿ

ದೆಲ್ಲ ಹೊರಗಿನದಾದರೆ ನಮ್ಮ ವಿಭಾಗದಲ್ಲಿ ಸ್ವಲ್ಪ ಬದಲಾವಣೆಗಳಾಗಿದ್ದವು. ನಮ್ಮ ಜೊತೆಗಿದ್ದ ಡಾ. ಕೆ.ಎಂ. ನಾಯ್ಡು ಅವರು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದ ಹೊಸ ಸ್ನಾತಕೋತ್ತರ ಕೇಂದ್ರಕ್ಕೆ ಮುಖ್ಯಸ್ಥರಾಗಿ ಆಯ್ಕೆಯಾಗಿ ಹೋಗಿದ್ದರು.

ನಾನು ಎಂ.ಎ. ಓದುವಾಗ ನನಗೆ ಪ್ರಾಧ್ಯಾಪಕರಾಗಿದ್ದ ಡಾ. ಬಿ.ಎಸ್. ಶ್ರೀಕಂಠಾರಾಧ್ಯರು ಇಲಾಖೆಗೆ ಮುಖ್ಯಸ್ಥರಾಗಿ ಬಂದಿದ್ದರು. ನನ್ನ ಬಗ್ಗೆ ನಮ್ಮ ವಿಭಾಗದಲ್ಲಿ ಮತ್ತು ಮೈಸೂರಿನ ಗಂಗೋತ್ರಿ ವಿಭಾಗದಲ್ಲಿ ನಾನು ಮದುವೆಯಾಗಿರುವ ಬಗ್ಗೆ ಅಸಮಾಧಾನವಿತ್ತು. ಅದನ್ನೆಲ್ಲ ತಲೆಯಲ್ಲಿ ತುಂಬಿಕೊಂಡು ಬಂದಿದ್ದ ಬಿಎಸ್‌ಎಸ್ ಗುರುಗಳು ಕೂಡ ನನ್ನ ಬಗ್ಗೆ ಅಸಮಾಧಾನಗೊಂಡವರಂತೆ ತೋರುತ್ತಿದ್ದರು.

ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಶ್ರೀಕಂಠಾರಾಧ್ಯರು ಅಧ್ಯಾಪಕರೆಲ್ಲರಿಗೂ ತೆಗೆದುಕೊಳ್ಳುವ ತರಗತಿಗಳ ವೇಳಾಪಟ್ಟಿ ತಯಾರಿಸಿಕೊಟ್ಟಿದ್ದರು. ನನಗೆ ಆಶ್ಚರ್ಯವಾಗುವಂತೆ ನನಗೆ ಯಾವುದೇ ಸಾಮಾನ್ಯ ತರಗತಿಗೆ ಪಾಠ ಮಾಡುವ ಅವಕಾಶವಿರದಂತೆ ತರಗತಿಗಳನ್ನು ಹಂಚಿಕೆ ಮಾಡಿದ್ದರು. ಐಚ್ಛಿಕವಾಗಿದ್ದ ಎರಡು ವಿಷಯಗಳಾದ ಪ್ರಾದೇಶಿಕ ಅರ್ಥಶಾಸ್ತ್ರ ಮತ್ತು ಕೃಷಿ ಅರ್ಥಶಾಸ್ತ್ರಗಳನ್ನು ಹಂಚಿಕೆ ಮಾಡಿ ಮುಗಿಸಿದ್ದರು. ನನಗೆ ವಿದ್ಯಾ ಗುರುಗಳು ಹೆಚ್ಚು ಸಲಿಗೆ ಇಲ್ಲದೆ ಇದ್ದ ಅವರೊಡನೆ ಇದು ಸರಿ ಇಲ್ಲ. ಇದನ್ನು ಸರಿಯಾಗಿ ಹಂಚಿಕೆಯಾಗಬೇಕೆಂದು ನನ್ನ ಅಸಮಾಧಾನ ತೋರಿ ಅವರ ಟೇಬಲ್ ಮೇಲೆ ತಾತ್ಸಾರದಿಂದಲೇ ಆದೇಶದ ಪ್ರತಿಯನ್ನು ಬಿಟ್ಟು ಬಂದಿದ್ದೆ. ಅತ್ಯಂತ ಮಿತಭಾಷಿ, ಸರಳ ಮತ್ತು ಆಳ ಅಧ್ಯಯನದಿಂದ ಗಳಿಸಿದ ಗಂಭೀರತೆಯಲ್ಲಿದ್ದ ಅವರಿಗೆೆ ನನ್ನ ಬಗ್ಗೆ, ನಾನು ಮದುವೆಯಾದ ಬಗ್ಗೆ ಇಲ್ಲ ಸಲ್ಲದ ಕಥೆಗಳನ್ನು ಕಟ್ಟಿ ಅವರಿಗೆ ಹೇಳಿ ನನಗೆ ಈ ರೀತಿಯ ಅನಾದರಣೆ ತೋರಿಸುವಂತೆ ನಮ್ಮವರೇ ಆಗಿದ್ದ ಕೆಲವು ಅಧ್ಯಾಪಕರು ಹೊಸಬರಾಗಿ ಬಂದಿದ್ದ ಇವರಿಗೆ ಹೇಳಿದ್ದರು.

ಆರಾಧ್ಯರೂ ಕೂಡ ಮೈಸೂರಿನ ಗಂಗೋತ್ರಿಯಲ್ಲಿ ಪಾಠ ಮಾಡುತ್ತಿದ್ದವರು, ಅಲ್ಲಿಯೇ ಪ್ರಾಧ್ಯಾಪಕರಾಗಬೇಕಾಗಿದ್ದವರನ್ನು ಬಿಆರ್‌ಪಿಗೆ ಒಬ್ಬ ಹಿರಿಯ ಪ್ರಾಧ್ಯಾಪಕರು ಬೇಕೆಂಬ ನೆಪವೊಡ್ಡಿ ಅವರನ್ನು ವರ್ಗಾವಣೆ ಮಾಡಿ ಇಲ್ಲಿಗೆ ಕಳಿಸಿದ್ದರು. ಇಲ್ಲಿಗೆ ಬರುವ ಬಗ್ಗೆ ಮನಸ್ಸಿಲ್ಲದ ಕಾರಣ ಅಸಮಾಧಾನವೂ ಅವರಲ್ಲಿ ಮನೆಮಾಡಿತ್ತು. ಬಂದಾಕ್ಷಣ ಇಲ್ಲಿನವರ ಚಾಡಿ ಮಾತು ಕೇಳಿ ನನ್ನ ಬಗ್ಗೆ ಈ ರೀತಿ ನಡೆದುಕೊಂಡಿದ್ದರು. ಆ ನಂತರ ಎಲ್ಲರೂ ಚರ್ಚಿಸಿ ಸಮಾನ ವಿಷಯಗಳ ಮತ್ತು ತರಗತಿಗಳನ್ನು ಹಂಚಿಕೆ ಮಾಡಿಕೊಂಡು ಎಂದಿನಂತೆ ತರಗತಿಗಳು ನಡೆಯಲಾರಂಭಿಸಿದವು. ಪ್ರಾರಂಭದಲ್ಲಿ ಆಗಿದ್ದ ನನ್ನ ಮತ್ತು ನನ್ನ ಗುರುಗಳಾಗಿದ್ದ ಶ್ರೀಕಂಠಾರಾಧ್ಯರ ನಡುವೆ ನಡೆದ ಸಣ್ಣ ಅಸಮಾಧಾನ ಕರಗಿ ಎಂದಿನ ಲವಲವಿಕೆಯಿಂದ ವಿಭಾಗದಲ್ಲಿ ಚಟುವಟಿಕೆಗಳು ಪ್ರಾರಂಭವಾದವು. ( ಸುದ್ದಿದಿನ.ಕಾಂ|ವಾಟ್ಸಾಪ್|9980346243)

Continue Reading

ಅಂತರಂಗ

ಆತ್ಮಕತೆ | ಮದುವೆಯ ಬಂಧ-ಸ್ನೇಹಿತರ ಮನೆಯಲ್ಲಿ ಔತಣ

Published

on

  • ರುದ್ರಪ್ಪ ಹನಗವಾಡಿ

ನನ್ನ ಹೆಂಡತಿ ಗಾಯತ್ರಿ 1979ನೇ ಬ್ಯಾಚಿನ ನನ್ನ ವಿಭಾಗದಲ್ಲಿಯೇ ವಿದ್ಯಾರ್ಥಿಯಾಗಿದ್ದವಳು. ವಿದ್ಯಾರ್ಥಿನಿಯಾಗಿ ಅವಳ ಶೈಕ್ಷಣಿಕ ಓದಿನ ಜೊತೆ ನಾಟಕ, ಸಂಗೀತ ಮತ್ತು ಸಾಹಿತ್ಯದಲ್ಲಿ ಆಸಕ್ತಿಯುಳ್ಳವಳಾಗಿದ್ದಳು. ಅವಳಿಗಿದ್ದ ತಮ್ಮ ಹಿರಿಯ/ಕಿರಿಯ ವಿದ್ಯಾರ್ಥಿನಿಗಳ ಜೊತೆಗಿನ ಸ್ನೇಹ ಸಂಬಂಧದ ಜೊತೆ, ಕೇಂದ್ರದಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಳು.

ನಮ್ಮ ಕೇಂದ್ರದಿಂದ 1978ರಲ್ಲಿ ಎಂ.ಎ. ಮುಗಿಸಿದ್ದ ಯಶೋಧ ಮತ್ತು ಶಾರದ ಎಂಬ ಇಬ್ಬರು ವಿದ್ಯಾರ್ಥಿನಿಯರು ಎಂ.ಎ., ಮುಗಿಸಿದ ನಂತರ, ಬೆಂಗಳೂರಿನಲ್ಲಿ ಯಶೋಧ ವಿ.ಕೆ.ಆರ್.ವಿ. ರಾವ್ ಇನ್ಸಿಟಿಟ್ಯೂಟ್‌ನಲ್ಲಿ ಸಂಶೋಧಕಿಯಾಗಿ ಕೆಲಸ ಮಾಡುತ್ತಿದ್ದಳು. ಶಾರದ ತನ್ನ ಸೋದರ ಸಂಬಂಧಿ ಡಾಕ್ಟರ್‌ರೊಬ್ಬರನ್ನು ಮದುವೆಯಾಗಿ ಗೃಹಿಣಿ ಯಾಗಿದ್ದಳು. ಇವರಿಬ್ಬರೂ ಮೊದಲು ಶಿವಮೊಗ್ಗದಿಂದ ದಿನವೂ ಬೆಳಿಗ್ಗೆ ಬರುತ್ತಿದ್ದ ಗಜಾನನ ಬಸ್ಸಿಗೆ ಗಾಯತ್ರಿ ಮತ್ತು ಇತರರೊಡನೆ ಕ್ಲಾಸಿಗೆ ಬರುತ್ತಿದ್ದರು. ಹಾಗಾಗಿ ಅವರಿಬ್ಬರ ಎಂ.ಎ., ಮುಗಿದ ನಂತರವೂ ಕೇಂದ್ರಕ್ಕೆ ಬಂದಾಗ ಗಾಯತ್ರಿಯನ್ನು ಜೊತೆಗೆ ಇದ್ದ ಸ್ನೇಹಿತರನ್ನು ಭೇಟಿ ಮಾಡಿ ಹೋಗುತ್ತಿದ್ದರು. ಹೀಗೆ ಹೋಗುವಾಗ ನಮ್ಮ ಜ್ಞಾನೇಂದ್ರ ಪ್ರಭು ಜೊತೆ ನಾನು ಶಿವಮೊಗ್ಗಕ್ಕೂ ಜೊತೆಗೆ ಹೋಗಿ ಅಲ್ಲಿನ ಮನೋಹರ ಕೆಫೆಯಲ್ಲಿ ಕಾಫಿ ಕುಡಿದು, ಹರಟೆ ಹೊಡೆದು ಹಿಂತಿರುಗುತ್ತಿದ್ದೆವು. ಆ ದಿನಗಳಲ್ಲಿಯೇ ನನಗೆ ಗಾಯತ್ರಿಯ ಪರಿಚಯವಾಗಿ ಒಬ್ಬರಿಗೊಬ್ಬರು ಆಸಕ್ತರಾಗಿದ್ದೆವು. ಅದೆಲ್ಲ ಪ್ರಭು, ದೇವರಾಜು ಮತ್ತು ಕೇಶವಮೂರ್ತಿಗಳ ನಮ್ಮ ಸ್ನೇಹ ವಲಯಕ್ಕೂ ತಿಳಿದಿತ್ತು.

ಗ್ರಾಮೀಣ ಪ್ರದೇಶಗಳಿಂದ ಬಹಳ ಹುಡುಗರು ಏನೆಲ್ಲ ಓದಿದ್ದರೂ ಹುಡುಗಿಯರೊಡನೆ ಸರಳವಾಗಿ ಮಾತಾಡಿಕೊಂಡು ಇರುವುದು ವಿರಳವಾಗಿದ್ದ ದಿನಗಳು. ನಾನಾದರೂ ಎಂ.ಎ. ಮುಗಿಸಿ 4-5 ವರ್ಷಗಳ ಪಾಠ ಮಾಡಿದ ಅನುಭವವಿದ್ದರೂ ಗ್ರಾಮೀಣ ಹಿನ್ನೆಲೆಯ ಸಾಮಾನ್ಯ ಹಿಂಜರಿಕೆ ಮತ್ತು ಸಂಕೋಚದ ಕಾರಣ ಹುಡುಗಿಯರಿಂದ ದೂರವೇ ಉಳಿಯುತ್ತಿದ್ದೆ.
ಓದಿನ ಜೊತೆಗೆ ಎಸ್‌ವೈಎಸ್, ಡಿ.ಎಸ್.ಎಸ್.ಗಳ ಹೋರಾಟಗಳಲ್ಲಿ ಭಾಗವಹಿಸಿ, ಬೀದಿ ಬೀದಿಗಳಲ್ಲಿ ಭಾಷಣ, ಮೆರವಣಿಗೆ ಅನೇಕ ಸಂದರ್ಭಗಳಲ್ಲಿ ಪೋಲೀಸ್ ಸ್ಟೇಷನ್‌ನಲ್ಲಿ ಬಂಧಿಯಾಗಿ ಹೊರಬಂದಿದ್ದರೂ ಪ್ರೀತಿಯ ಪ್ರೇಮಗಳ ವಿಷಯದಲ್ಲಿ ಹಿಂಜರಿಕೆ ಮತ್ತು ಸಂಕೋಚಗಳು ನನ್ನಲ್ಲಿ ಮನೆ ಮಾಡಿದ್ದವು. ನಾನು ಈ ಹಿಂದೆ ಸೋಷಿಯಾಲಜಿ ವಿಭಾಗದಲ್ಲಿ ಕೆಲಸ ಮಾಡುತ್ತಿರುವಾಗ ಅಲ್ಲಿದ್ದ ಮೂರು ಜನ ಹುಡುಗಿಯರಲ್ಲಿ ಒಬ್ಬಳು ತೋರಿದ ವಿಶೇಷ ಆಸಕ್ತಿ ಮತ್ತು ಮಾತುಕತೆಗೆ ಮಾರುಹೋಗಿ, ಅವಳು ವಿಶೇಷವಾಗಿ ತಂದು ಕೊಡುತ್ತಿದ್ದ ತಿಂಡಿ ಮತ್ತು ಪ್ರಸೆಂಟೇಷನ್‌ಗಳನ್ನು ನನ್ನ ಮೇಲಿನ ವಿಶೇಷ ಪ್ರೀತಿಯಿಂದಲೇ ಕೊಟ್ಟಿರಬೇಕೆಂದು ಭಾವಿಸಿಕೊಂಡಿದ್ದೆ. ಅದನ್ನೆಲ್ಲ ಆಗ ನನ್ನ ಜೊತೆಗಿದ್ದ ಬಸವಣ್ಯಪ್ಪನಿಗೆ ಹೇಳಿದಾಗ ಅವನು, `ಅವಳು ನಿನ್ನನ್ನು ಪ್ರೀತಿಸುತ್ತಿದ್ದಾಳೆ, ನಿನಗೆ ಇಷ್ಟವಾದರೆ-ನೀನೆ ಅವಳಿಗೆ ಮದುವೆಯಾಗುವಂತೆ ಕೇಳು’ ಎಂದು ಹುರಿದುಂಬಿಸುತ್ತಿದ್ದ. ಏರು ಯೌವನದ ಸೆಳೆವಿನಲ್ಲಿದ್ದ ನಾನು ಒಂದು ದಿನ ಕುಕ್ಕರಹಳ್ಳಿ ಕೆರೆ ಏರಿ ಮೇಲೆ ಸಂಜೆಯ ವಿಹಾರದಲ್ಲಿದ್ದಾಗ ನನ್ನನ್ನು ಮದುವೆಯಾಗುತ್ತೀಯ ಎಂದು ಕೇಳಿಯೇ ಬಿಟ್ಟೆ. ನನಗಿಂತಲೂ ವಯಸ್ಸಿನಲ್ಲಿ ಮತ್ತು ಬುದ್ದಿಯಲ್ಲಿ ಮುಂದಿದ್ದ ಅವಳು ನನ್ನ ಪ್ರೇಮ ಭಿಕ್ಷೆಯನ್ನು ನಯವಾಗಿ ತಿರಸ್ಕರಿಸಿದ್ದಳು. ನಂತರ ನಾನು ನನ್ನ ವೃತ್ತಿಯನ್ನೇ ಬದಲಾಯಿಸಿದ ಕಾರಣ ಆ ಪ್ರೇಮ ಪ್ರಕರಣ ಅಲ್ಲಿಗೆ ಮುಕ್ತಾಯವಾಗಿ ಬಿಆರ್‌ಪಿಗೆ ವರ್ಗವಾಗಿ ಬಂದಿದ್ದೆ.

ಈ ಹಿನ್ನೆಲೆಯಲ್ಲಿದ್ದ ನನಗೆ ತಕ್ಷಣದಲ್ಲಿ ಪ್ರೀತಿಯ ಪ್ರಸ್ತಾಪವನ್ನು ಮಾಡುವಾಗ ಅನೇಕ ರೀತಿಯ ಹಿಂಜರಿಕೆಯಲ್ಲಿ ಮುಳುಗಿ ಬಿಡುತ್ತಿದ್ದೆ. ಆದರೆ ಪ್ರಭು ಮತ್ತು ಕೇಶವಮೂರ್ತಿಯವರೊಡನೆ ನಂತರ ನನ್ನ ಹಳೆ ವಿದ್ಯಾರ್ಥಿನಿಯರಾದ ಯಶೋಧ ಮತ್ತು ಶಾರದಾ ಅವರ ಮುಖಾಂತರ ಗಾಯತ್ರಿಯ ಬಗ್ಗೆ ನನಗಿರುವ ಆಸಕ್ತಿ ತಿಳಿಸಿದೆ. ಅವಳು ಎಂ.ಎ. ಪರೀಕ್ಷೆ ಮುಗಿದಿದ್ದರಿಂದ ಊರಿಗೆ ಹೋಗಿದ್ದಳು. ಅವಳು ಮದುವೆಗೆ ಒಪ್ಪಿಗೆ ಸೂಚಿಸಿದ್ದರೂ ಅವಳಿಗೆ ಒಂದು ಕೆಲಸ ಪಡೆದ ನಂತರ ದಿನಗಳಲ್ಲಿ ಮದುವೆ ಮಾಡಿಕೊಳ್ಳುವ ಯೋಚನೆಯಲ್ಲಿ ನಾನಿದ್ದೆ. ಗಾಯತ್ರಿಯೂ ರಜೆಯಿದ್ದ ಕಾರಣ ತನ್ನ ಊರಾದ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರಕ್ಕೆ ಹೋಗಿದ್ದಳು. ನನ್ನ ಜೊತೆ ಮನೆತನ, ಜಾತಕಗಳ ವಿವರಗಳ ಗೊಡವೆ ಇಲ್ಲದೆ, ನನ್ನನ್ನು ಮದುವೆಯಾಗಲು ಒಪ್ಪಿಸುವಲ್ಲಿ ಗಾಯತ್ರಿಯ ಗೆಳತಿಯರು, ನನ್ನ ಮಿತ್ರ ಪ್ರಭು ಎಲ್ಲ ಕಾರಣರಾಗಿದ್ದರು. ನಾನಾವ ಜಾತಿ ಮತ್ತು ಆರ್ಥಿಕ ಸಾಂಸ್ಕೃತಿಕ ಹಿನ್ನೆಲೆಗಳ ಬಗ್ಗೆ ಏನೂ ಕೆದಕದೆ ನನ್ನನ್ನು ಮಾತ್ರ ನೋಡಿ ಒಪ್ಪಿದ ಗಾಯತ್ರಿಯ ಬಗ್ಗೆ ಅಭಿಮಾನದ ಪ್ರೀತಿಯಲ್ಲಿ ಕಾಲ ಕಳೆಯುತ್ತಿದ್ದೆ. ಹೀಗಿರುವಾಗ ಮೇ ತಿಂಗಳ ಕೊನೆ ವಾರದಲ್ಲಿ ತನ್ನ ಗೆಳತಿಯ ಜೊತೆ ಬಿ.ಆರ್.ಪಿ.ಗೆ ಬಂದ ಗಾಯತ್ರಿ ಹೊಸ ಸುದ್ದಿಯನ್ನು ತಂದಿದ್ದಳು. ರಜೆಯಲ್ಲಿ ಅವರ ಮನೆಗೆ ಬಂದಿದ್ದ ಹುಡುಗನೊಬ್ಬ ಗಾಯತ್ರಿಯನ್ನು ನೋಡಿ ಮದುವೆಯಾಗಲು ಒಪ್ಪಿರುವುದಾಗಿಯೂ, ಇಷ್ಟರಲ್ಲೇ ಮದುವೆ ಮಾತು ಆಗಬಹುದೆಂಬ ಆತಂಕದ ಸುದ್ದಿಯನ್ನು ತಿಳಿಸಿದಳು.

ಗಾಯತ್ರಿಯ ಎಂ.ಎ. ಮುಗಿದು ನೌಕರಿ ಹಿಡಿದ ನಂತರ ಎಲ್ಲರ ಒಪ್ಪಿಗೆ ಪಡೆದು ಮದುವೆ ಮಾಡಿಕೊಳ್ಳುವ ಯೋಚನೆಯಲ್ಲಿದ್ದ ನಮಗೆ ನಂತರದ ಬೆಳವಣಿಗೆಗಳು ನಮ್ಮಿಬ್ಬರ ಕೈತಪ್ಪಿ ಹೋಗುವ ಆತಂಕವಾಯಿತು. ಈ ನನ್ನ ಎಲ್ಲ ಅಂತರಂಗದ ವಿಷಯಗಳನ್ನು ಚರ್ಚಿಸಲು ಪ್ರಭು ಜೊತೆ ಭದ್ರಾವತಿಗೆ ಕೃಷ್ಣಪ್ಪನವರನ್ನು ಕಂಡು ಚರ್ಚಿಸಿಕೊಂಡು ಬರಲು ಹೋದೆವು. ಕೃಷ್ಣಪ್ಪ ಮತ್ತು ಇಂದಿರಾ ಅವರ ಜೊತೆ ಎಲ್ಲ ವಿಷಯಗಳನ್ನು ಚರ್ಚಿಸಿ ದಿನಾಂಕ 4-6-1979ರಂದು ರಿಜಿಸ್ಟರ್ ಮದುವೆಯ ಕಾರ್ಯ ಮುಗಿಸಲು ತೀರ್ಮಾನಿಸಿದೆವು. ಅದಕ್ಕೂ ಮುಂಚೆ ಗಾಯತ್ರಿಯನ್ನು ಕರೆದುಕೊಂಡು ಬರಲು ತಿಳಿಸಿದರು. ಅದರಂತೆ ಹೋದಾಗ ಇಂದಿರಾ ಕೂಡ ಇದ್ದು ಗಾಯತ್ರಿಗೆ ಸಮಾಧಾನ, ಧೈರ್ಯ ಹೇಳಿ ಮದುವೆಯ ಆತಂಕವನ್ನು ಹಗುರ ಮಾಡಿದ್ದರು. ತುರ್ತಾಗಿ ಇದ್ದ ಪರಿಸ್ಥಿತಿಯಲ್ಲೇ ಮದುವೆಮಾಡಿಕೊಳ್ಳುವುದನ್ನು ಬಿಟ್ಟರೆ ಬೇರೆ ಮಾರ್ಗ ಕಾಣಲಿಲ್ಲ. ನಮ್ಮ ಊರ ಮನೆಯಲ್ಲಿ ಈ ವಿಷಯಗಳನ್ನು ತಿಳಿಸಿ ಚರ್ಚಿಸಿ ಒಪ್ಪಿಸುವುದು ಸಾಧ್ಯವಿರಲಿಲ್ಲ. ಏಕೆಂದರೆ ಅವ್ವ ನನ್ನ ಅಕ್ಕನ ಮಗಳನ್ನು ಮದುವೆ ಮಾಡಿಕೊಳ್ಳುವ ಬಗ್ಗೆ ತೀರ್ಮಾನಿಸಿದ್ದಳು. ಆ ರೀತಿ ಅಕ್ಕನ ಮಗಳನ್ನು ಮದುವೆಯಾಗುವುದು, ಅವರು ನನ್ನನ್ನು ಅವರ ಸಾಗರದ ಮನೆಯಲ್ಲಿಟ್ಟುಕೊಂಡು ಓದಿಸಿದ ಬಗ್ಗೆ ಋಣ ತೀರಿಸುವ ಜವಾಬ್ದಾರಿ ಎಂದು ಎಲ್ಲರ ನಂಬಿಕೆಯಾಗಿತ್ತು. ಇದನ್ನೆಲ್ಲ ತಿಳಿಗೊಳಿಸಿ ಪ್ರಸ್ತುತ ಮದುವೆ ವಿಷಯಕ್ಕೆ ಒಪ್ಪಿಸಿ ಕರೆತರುವುದು ಆ ಕ್ಷಣದಲ್ಲಿ ಸಾಧ್ಯವಿಲ್ಲದ ಮಾತಾಗಿತ್ತು.

ಇನ್ನು ಗಾಯತ್ರಿ ಮನೆಯವರು ಶೃಂಗೇರಿ ಮಠದ ಅನುಯಾಯಿಗಳು. ಪ್ರಥಮದಲ್ಲಿ ನಾನು ಅಬ್ರಾಹ್ಮಣನಾದ ಕಾರಣ ಈ ಮುದುವೆಯ ಪ್ರಸ್ತಾಪವೇ ಸಾಧ್ಯವಿಲ್ಲದ ಮಾತಾಗಿತ್ತು. ಅದರಲ್ಲೂ ನನ್ನ ಜಾತಿ ದಲಿತ ಗುಂಪಿಗೆ ಸೇರಿದ್ದೆಂಬುದು ತಿಳಿಸಿದರೆ ಇನ್ನು ಅನೇಕ ಸಮಸ್ಯೆಗಳನ್ನು ಹುಟ್ಟುಹಾಕುವುದರಲ್ಲಿತ್ತು. ಹಾಗಾಗಿ ಅವರಿಗೂ ಈ ಮದುವೆ ವಿಷಯ ತಿಳಿಸಿ ಒಪ್ಪಿಗೆ ಪಡೆದು ಮದುವೆಯಾಗುವುದು ಸಾಧ್ಯವಿರಲಿಲ್ಲ. ಈ ವಿಷಯಗಳೇನಾದರೂ ಮೊದಲೇ ಗೊತ್ತಾದರೆ, ಮದುವೆಯಾಗಲು ಖಂಡಿತ ಬಿಡುವುದಿಲ್ಲ ಎಂಬುದನ್ನು ಅರ್ಥ ಮಾಡಿಕೊಂಡಿದ್ದ ಕಾರಣದಿಂದಾಗಿ ಎಲ್ಲದನ್ನು ಗೌಪ್ಯವಾಗಿಟ್ಟು ಮದುವೆಯ ತಯಾರಿ ಮಾಡಿಕೊಳ್ಳಬೇಕಾಗಿತ್ತು. ಕೃಷ್ಣಪ್ಪ – ಇಂದಿರಾ ಅವರ ಮದುವೆ 1975ರಲ್ಲಿಯೇ ನಡೆದು ಆ ನಂತರ ಅನೇಕ ಅಂತರ್ಜಾತೀಯ, ಧರ್ಮೀಯ ಮತ್ತು ಸರಳ ಮದುವೆಗಳನ್ನು ಮಾಡಿಸಿ ಹೆಸರಾಗಿದ್ದರು. ಸಮಾಜವಾದಿ ಚಳುವಳಿ, ದಲಿತ ಚಳುವಳಿಯ ಅನೇಕ ಯುವಕ, ಯುವತಿಯರು ಇಂದಿರಾ ಕೃಷ್ಣಪ್ಪನವರ ನೇತೃತ್ವದಲ್ಲಿ ಅಂತರ್‌ಜಾತಿ ಮದುವೆಯಾಗಿದ್ದರು. ಕೃಷ್ಣಪ್ಪನವರ ಅಭಿಮಾನಿ ಬಳಗ – ಭದ್ರಾವತಿ, ಶಿವಮೊಗ್ಗದಲ್ಲಿ ಸದಾ ಇಂತಹ ಸಂದರ್ಭದಲ್ಲಿ ಬೇಕಾದ ನೆರವು ನೀಡಲು ಮುಂದಾಗಿರುತ್ತಿತ್ತು.
ಈ ತಯಾರಿಯ ಸಮಯದಲ್ಲಿಯೇ ನನ್ನ ಹಳೆಯ ವಿದ್ಯಾರ್ಥಿನಿಯರಾಗಿದ್ದ ಯಶೋಧ ಮತ್ತು ಶಾರದ ಅವರು ನೀವು ಹೇಗೂ ಲಿಂಗಾಯತರಂತೆ ಕಾಣುತ್ತೀರಿ, ಸದ್ಯದ ಸಮಯದಲ್ಲಿ ನೀವು ನಿಮ್ಮ ಜಾತಿಯನ್ನು ಲಿಂಗಾಯತರೆಂದು ಹೇಳಿ ಮದುವೆಗೆ ಗಾಯತ್ರಿ ಮನೆಯವರನ್ನು ಒಪ್ಪಿಸುವ ಸಲಹೆ ನೀಡಿದರು. ಆದರೆ ಅದೆಲ್ಲ ಆಗದ ಮಾತು ಎಂದು ನಾನು ಅವರಿಗೆ ಆಗಲೇ ತಿಳಿ ಹೇಳಿದೆ. ಮದುವೆಯ ದಿನಕ್ಕೆ ಬೇಕಾದ ಸೀರೆ, ಒಂದು ತಾಳಿ ಚೈನು ವ್ಯವಸ್ಥೆ ಮಾಡಿಕೊಳ್ಳುವುದು ಮತ್ತು ನನಗೆ ಒಂದು ಜೊತೆ ಷರ್ಟ್ ಪ್ಯಾಂಟ್ ಹೊಲಿಯಲು ಹಾಕಿದ್ದೆ. ಆದರೆ ನನಗೆ ಆ ಟೈಲರ್ ಮದುವೆ ದಿನಕ್ಕೆ ಕೊಡಲೇ ಇಲ್ಲ. ಗಾಯತ್ರಿಯನ್ನು ಭದ್ರಾವತಿಯ ಕೃಷ್ಣಪ್ಪನವರ ಮನೆಗೆ ಬರಲು ಹೇಳಿ ನಂತರ ಎಲ್ಲರೂ ಸೇರಿ ಸಬ್ ರಿಜಿಸ್ಟಾçರ್ ಆಫೀಸಿಗೆ ಹೋದೆವು. ಆಗ ಚಿತ್ರದುರ್ಗದಲ್ಲಿದ್ದ ಬಸವಣ್ಯಪ್ಪ ಕಟ್ಟಲು ತಾಳಿಯೊಂದನ್ನು ಕೊಂಡು ತಂದಿದ್ದ. ಸಬ್‌ರಿಜಿಸ್ಟರ್ ಆಫೀಸಿನಲ್ಲಿ ಫೀಸಾಗಿ 14ರೂ.ಗಳ ಖರ್ಚಿನಲ್ಲಿ ಭದ್ರಾವತಿಯಲ್ಲಿ ಸಮಾಜವಾದಿ ಮತ್ತು ದಲಿತ ಗೆಳೆಯರ ಸಮಕ್ಷಮದಲ್ಲಿ ಕೃಷ್ಣಪ್ಪ-ಇಂದಿರಾ ದಂಪತಿಗಳ ನೇತೃತ್ವದಲ್ಲಿ ಮದುವೆಯಾಗಿತ್ತು. ಉಟ್ಟ ಸೀರೆಯಲ್ಲಿ ನರಸಿಂಹರಾಜಪುರದಿಂದ ಬಂದಿದ್ದ ಗಾಯತ್ರಿ ಅವರ ಮನೆಯವರಿಗೆ ಪ್ರಭು ಮತ್ತು ಕೇಶವಮೂರ್ತಿಗಳು ಮಾರನೆದಿನ ಹೋಗಿ ನಮ್ಮ ವಿವಾಹ ಆಗಿರುವ ಬಗ್ಗೆ ತಿಳಿಸಿ ಬರಬೇಕೆಂಬ ಮಾತಿಗೆ ಇಬ್ಬರೂ ಮಾರನೇ ದಿನ ಗಾಯತ್ರಿಯ ಮನೆಗೆ ಹೋಗಿ ಮದುವೆಯಾದ ಸುದ್ದಿ ತಿಳಿಸಿದ್ದರು. `ಗಾಯತ್ರಿಯು ಅವಳಿಗೆ ಅಧ್ಯಾಪಕರಾಗಿದ್ದ ರುದ್ರಪ್ಪ ಎನ್ನುವವರನ್ನು ಮದುವೆಯಾಗಿದ್ದಾಳೆ, ಅವರಿಬ್ಬರೂ ಚೆನ್ನಾಗಿರುತ್ತಾರೆ, ನೀವೇನು ಚಿಂತಿಸುವ ಅಗತ್ಯವಿಲ್ಲ’ ಎಂಬುದನ್ನು ಬಾಯಿಪಾಠ ಮಾಡಿದಂತೆ ಒಪ್ಪಿಸಿ ತಕ್ಷಣ ಅಲ್ಲಿಂದ ಜಾಗ ಖಾಲಿ ಮಾಡಿ ಬಂದಿದ್ದರು. ಅದರಿಂದಾಗಿ ಅವರ ಮನೆಯವರಿಗೆ ಗಾಯತ್ರಿ ಎಲ್ಲಿ ಹೋಗಿದ್ದಾಳೆ ಮತ್ತು ಏನಾಗಿದೆ ಎಂಬುದರ ಬಗ್ಗೆ ತಕ್ಷಣ ತಿಳಿದಂತಾಗಿತ್ತು.

ನನ್ನ ಮದುವೆ ದಿನ ಕೃಷ್ಣಪ್ಪನವರ ಮನೆಯಲ್ಲಿದ್ದ ನಾವು ಅಲ್ಲಿದ್ದರೆ ಗಾಯತ್ರಿ ಮನೆ ಕಡೆಯವರು ಬಂದು ಗಲಾಟೆ ಮಾಡಬಹುದೆಂದು ಭಾವಿಸಿ ಇಂದಿರಾ ಕೃಷ್ಣಪ್ಪನವರ ಹಿತೈಷಿ ಆಧ್ಯಾಪಕ ಶಿವಮೊಗ್ಗ ಮುನೀರ್ ಮತ್ತು ಅವರ ತಾಯಿ (ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ) ಬಚ್ಚಿಮ್ಮಾ ಮನೆಗೆ ಹೋಗಿ ಉಳಿಯಬೇಕೆಂದು ತೀರ್ಮಾನಿಸಿದ್ದರು. ಅದರಂತೆ ಮೊದಲ ರಾತ್ರಿ ಬಚ್ಚಿಮ್ಮಾ ಸಿಹಿ ಅಡುಗೆ ಮಾಡಿ ಔತಣ ಏರ್ಪಡಿಸಿದ್ದರು. ಊಟದ ಶಾಸ್ತç ಮಾಡಿ ಮಲಗಿದರೆ ನಿದ್ದೆ ಬಾರದೇ ಇಡೀ ರಾತ್ರಿ ಆತಂಕ ಮತ್ತು ಚಿಂತೆಗಳಲ್ಲಿ ಕಳೆದೆವು. ಮದುವೆಯಾಗಿ ಒಂದು ವಾರದಲ್ಲಿ ಅಂದರೆ 10-6-1979ರಂದು ಶಿವಮೊಗ್ಗ ಡಿ.ಸಿ.ಸಿ. ಬ್ಯಾಂಕ್ ಸಭಾಂಗಣದಲ್ಲಿ ಒಂದು ಸಂತೋಷಕೂಟ ವ್ಯವಸ್ಥೆ ಮಾಡಿದ್ದೆವು. ಅದಕ್ಕೆಲ್ಲಾ ಶಿವಮೊಗ್ಗದವನೇ ಆಗಿದ್ದ ಪ್ರಭು ಮತ್ತು ಅವನ ಅಲ್ಲಿನ ಗೆಳೆಯರಾದ ರೈತಸಂಘದ ಚಟ್ನಳ್ಳಿ ಮಂಜಪ್ಪ, ಅರ್ಚನ ಟ್ರೇರ‍್ಸ್ ಕಾಂತರಾಜ್ ಓಡಾಡಿ ನಿಗದಿಗೊಳಿಸಿದ್ದರು. ಸುಮಾರು 300-400 ಜನರಿಗೆ ಲಘು ಉಪಹಾರದೊಡನೆ ಈ ಸಮಾರಂಭವನ್ನು ಹಮ್ಮಿಕೊಂಡಿದ್ದೆವು. ಅದಕ್ಕಾಗಿ ಒಂದು ಸಾಮಾನ್ಯ ಕರೆಯೋಲೆಯನ್ನು ಸಹ ಮುದ್ರಿಸಿ ಬೇಕಾದ ಸ್ನೇಹಿತರಿಗೆ ಮತ್ತು ನನ್ನ ಊರಿನ ಸಂಬಂಧಿಕರಿಗೆ ಹಂಚಲು ನಮ್ಮ ಊರಿನ ಮಾಂತೇಶಿಗೆ ಜವಾಬ್ದಾರಿ ನೀಡಿದ್ದೆನು. ಅವನ ಮುಖಾಂತರ ಊರಿಗೆ ಕಳಿಸಿಕೊಟ್ಟಿದ್ದೆ. ಅವ್ವ ಮತ್ತು ಎಲ್ಲ ಸಂಬಂಧಿತ ಬಳಗ ಮತ್ತು ಊರಿನವರು ಹೇಳಿ ಕೇಳಿ ಮದುವೆಯಾಗದೆ ದಿಢೀರ್ ಆಗಿ ಈ ರೀತಿ ಆದ ಬಗ್ಗೆ ಆಕ್ಷೇಪಗಳನ್ನು ಮಾಡಿ ಅರ‍್ಯಾರೂ ಬಾರದೆ 7-8 ಜನ ಸ್ನೇಹಿತರು ಮಾತ್ರ ಊರಿನಿಂದ ಬಂದಿದ್ದರು. ನಂತರ ನಡೆಯಬೇಕಾಗಿದ್ದ ಸಂತೋಷಕೂಟವೂ ಕೂಡ ಶಿವಮೊಗ್ಗದಲ್ಲಿ ನಡೆಸಲು ಗಾಯತ್ರಿಯವರ ಮನೆಕಡೆಯಿಂದ ಶಿವಮೊಗ್ಗದಲ್ಲಿ ಮಾತ್ರ ಈ ಸಮಾರಂಭ ಮಾಡುವುದು ಬೇಡ ಎಂಬ ಅಭಿಪ್ರಾಯಪಟ್ಟಿದ್ದರಿಂದ ಕೊನೆ ಹಂತದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮುಂದೆ ಒಂದು ತಿಳುವಳಿಕೆಯ ಸೂಚನೆಯನ್ನು ಬರೆದು ಹಾಕಿ ಇಲ್ಲಿ ನಡೆಯಬೇಕಾಗಿದ್ದ ಸಂತೋಷ ಕೂಟ ಸಮಾರಂಭವನ್ನು ಬಿಆರ್‌ಪಿಯಲ್ಲಿನ ಸ್ನಾತಕೋತ್ತರ ಕೇಂದ್ರಕ್ಕೆ ವರ್ಗಾಯಿಸಲಾಗಿದೆ ಎಂದು ತಿಳಿಸಲಾಗಿತ್ತು. ಆದರೆ ನನ್ನ ಅನೇಕ ಸ್ನೇಹಿತರು ಸಂಜೆ ಬಂದವರು ನಂತರದ ಸ್ಥಳ ಬದಲಾವಣೆಯನ್ನು ತಿಳಿದು ಕಡೆಗವರು ಬಿಆರ್‌ಪಿಯಲ್ಲಿ ನಡೆದ ಸಂತೋಷಕೂಟದಲ್ಲಿ ಪಾಲ್ಗೊಳ್ಳಲಾಗಲಿಲ್ಲ. ಮತ್ತೆ ಕೆಲವರು ಅಲ್ಲಿ ಇಲ್ಲಿ ವಿಚಾರಿಸಿ ಬಿಆರ್‌ಪಿಗೆ ಬರುವ ವೇಳೆಗೆ ಸಂತೋಷಕೂಟವೇ ಅವಸರದ ಗಲಾಟೆಯಲ್ಲಿ ಮುಕ್ತಾಯವಾಗಿತ್ತು.

ಮದುವೆಯಾದ ಮಾರನೇ ದಿನ ಭದ್ರಾವತಿಯಲ್ಲಿರುವುದಾಗಲೀ ಹತ್ತಿರದಲ್ಲಿ ಇಲ್ಲೆಲ್ಲಿ ಇರುವುದು ಸೂಕ್ತವಲ್ಲವೆಂದು ಅವಸರದಲ್ಲಿ ಇಂದಿರಾ ಜೋಡಿಸಿಕೊಟ್ಟಿದ್ದ ಅವರದೇ ಸೂಟ್‌ಕೇಸ್‌ನಲ್ಲಿ ಒಂದೆರಡು ಸೀರೆ ಬಟ್ಟೆಗಳನ್ನು ಜೋಡಿಸಿಕೊಂಡು ಭದ್ರಾವತಿಯ ಬಸ್ ಸ್ಟಾö್ಯಂಡ್‌ಗೆ ಬಂದೆವು. ನಾನು ದಾವಣಗೆರೆಗೆ ಹೋಗೋಣವೆಂದು ಯೋಚಿಸುತ್ತಿರುವಾಗಲೇ ಅಲ್ಲಿಗೆ ಬಂದ ಶಂಕರ್ ಮೋಟಾರ್ ಟ್ರಾನ್ಸ್ಪೋರ್ಟ್ ನೋಡಿ, ಇವಳು ಅದು ನಮ್ಮ ಊರಿಗೆ ಹೋಗುವ ಬಸ್, ಅದರಲ್ಲಿ ತಮ್ಮ ಊರಿನವರು ಯಾರಾದರು ಇರುತ್ತಾರೆ ಎಂದು ಗಡಿಬಿಡಿ ಮಾಡಿದಾಗ ಅಲ್ಲೇ ಮೈಸೂರು ಕಡೆ ಹೊರಟು ನಿಂತಿದ್ದ ಬಸ್ ಹತ್ತಿ ಅರಸೀಕೆರೆಗೆ ಎರಡು ಟಿಕೆಟ್ ತೆಗೆದುಕೊಂಡು ಬಸ್ ಹತ್ತಿ ಕೂತೆವು. ಸದ್ಯ ಭದ್ರಾವತಿ ಬಿಟ್ಟೆವಲ್ಲ ಎಂಬ ಸಮಾಧಾನದಲ್ಲಿ ಸ್ವಲ್ಪ ಯೋಚಿಸುತ್ತಾ ಮೈಸೂರಿಗೆ ಹೋಗುವುದೋ ಇಲ್ಲ, ಅರಸೀಕೆರೆಯಲ್ಲಿ ಉಳಿಯುವುದೋ ಎಂಬ ಯೋಚನೆಯಲ್ಲಿದ್ದಾಗಲೇ, ಅರಸೀಕೆರೆಯಲ್ಲಿ ನಾನು ಬಿ.ಎ., ಮತ್ತು ಎಂ.ಎ. ನಲ್ಲಿ ನನ್ನ ರೂಂಮೇಟ್ ಮತ್ತು ಬ್ಯಾಚ್‌ಮೇಟ್ ಆಗಿದ್ದ ಎಲ್. ರವೀಂದ್ರ ಆಗ ಅರಸೀಕೆರೆ ತಹಸೀಲ್ದಾರನಾಗಿದ್ದ. ನಾವು ಅರಸೀಕೆರೆಯಲ್ಲಿ ಇಳಿದು ಬಸ್ ಸ್ಟಾö್ಯಂಡ್ ಹತ್ತಿರದಲ್ಲಿದ್ದ ವಸತಿಗೃಹದಲ್ಲಿ ರೂಂ ಮಾಡಿದೆವು. ನಂತರ ಸೂಟ್‌ಕೇಸ್‌ನಲ್ಲಿದ್ದ ಬಟ್ಟೆಯನ್ನೆಲ್ಲಾ ನೋಡಿ ಅವಳಿಗೊಂದು ಹೊಸ ಸೀರೆ ತೆಗೆದುಕೊಳ್ಳಲು ನಿರ್ಧರಿಸಿ, ವಸತಿಗೃಹದ ಎದುರಲ್ಲಿದ್ದ ಈಗಲೂ ಇರುವ `ಕನ್ನಿಕಾ ಪರಮೇಶ್ವರಿ ಕ್ಲಾತ್ ಸೆಂಟರ್’ನಲ್ಲಿ ಗಾಯತ್ರಿಗೆ `ನಾಳೆಯೊಳಗೆ ಬ್ಲೌಸ್ ಹೊಲೆದುಕೊಡುವ ಒಪ್ಪಿಗೆಯ ಮೇಲೆ ಒಂದು ಸೀರೆ ಮತ್ತಿತರ ಸಣ್ಣಪುಟ್ಟ ಸಾಮಾನುಗಳನ್ನು ಕೊಂಡುಕೊಂಡೆವು. ನಂತರ ತಹಸೀಲ್ದಾರನಾಗಿದ್ದ ರವೀಂದ್ರನಿಗೆ ಪೋನ್ ಮಾಡಿದೆ. ಹೀಗೆ ನಾನು ಮದುವೆಯಾಗಿ ಹೆಂಡತಿಯೊಡನೆ ಅರಸೀಕೆರೆ ಲಾಡ್ಜ್ನಲ್ಲಿ ಉಳಿದಿರುವ ಬಗ್ಗೆ ತಿಳಿಸಿದೆ. ಅವನು ನೇರ ಸಂಜೆ ಮನೆಗೆ ಊಟಕ್ಕೆ ಬರುವಂತೆ ಆಹ್ವಾನಿಸಿದ. ಆತಂಕದ ಆವೇಗದಲ್ಲಿದ್ದ ನಮಗೆ ಅವನಿದ್ದುದು ಮತ್ತು ಮನೆಗೆ ತಕ್ಷಣ ಆಹ್ವಾನಿಸಿದ್ದುದು ಒಂದು ರೀತಿಯ ಸಮಾಧಾನ ನೀಡಿತ್ತು. ಸಂಜೆ ಅವರ ಮನೆಗೆ ಊಟಕ್ಕೆ ಹೊರಡುವ ಮುನ್ನ ಗಾಯತ್ರಿಯ ಎಲ್ಲಾ ಅಕ್ಕಂದಿರಿಗೆ ಪ್ರತ್ಯೇಕ ಪತ್ರಗಳನ್ನು ಬರೆದು, ತುರ್ತಾಗಿ ಮದುವೆಯಾದ ಬಗ್ಗೆ ವಿವರಿಸಿ ತಾವೆಲ್ಲರೂ ಆಶೀರ್ವದಿಸಬೇಕೆಂದೂ, ಯಾವುದೇ ಆತಂಕಕ್ಕೆ ಒಳಗಾಗಬಾರದೆಂದು ನಮ್ರವಾಗಿ ವಿನಂತಿಸಿಕೊಂಡಿದ್ದೆವು.
ಸಂಜೆ ರವೀಂದ್ರನ ಮನೆಗೆ ಮದುವೆಯ ಜೋಡಿಯಾಗಿ ಔತಣವೊಂದಕ್ಕೆ ಜೊತೆಯಾಗಿ ಹೋಗುತ್ತಿರುವುದು ಮೊಟ್ಟಮೊದಲನೆಯದಾಗಿತ್ತು.

ನಾನು ಮಾಂಸಾಹಾರಿ ಮತ್ತು ಬೀರ್ ಕುಡಿಯುತ್ತಿದ್ದುದು ಗಾಯತ್ರಿಗೆ ಗೊತ್ತಿದ್ದರೂ ನಾನು ಅವಳಿಗಾಗಿ ಆ ಕ್ಷಣದಲ್ಲಿ ಕುಡಿಯುವುದು ಬೇಡ ಎಂದು ನಿರ್ಧರಿಸಿದ್ದೆ. ರವೀಂದ್ರನ ಮನೆಯಲ್ಲಿ ಅವರ ತಂದೆ ಆರ್.ಎಫ್.ಒ. ಆಗಿ ನಿವೃತ್ತರಾದವರು. ಮನೆಯಲ್ಲಿ ಮೊದಲೇ ಊಟಕ್ಕೆ ಕೂತಿದ್ದರು. ಜೊತೆಗೆ ಮ್ಯಾಕ್‌ಡೆವಲ್ ವಿಸ್ಕಿ ಬಾಟಲ್ ಹಾಗೂ ಮಾಂಸದೂಟದ ಎಲುಬಿನ ತುಣುಕುಗಳೆಲ್ಲ ಸುತ್ತಲೂ ಇದ್ದವು. ಗಾಯತ್ರಿ ನೋಡಿದ ಮೊದಲ ಮಾಂಸಹಾರಿ ಊಟದ ನೋಟದಲ್ಲಿಯೇ ಹೌಹಾರಿ ನಿಂತಿದ್ದಳು. ನಾನು ಮದುವೆ ಮಾಡಿಕೊಂಡು ಬಂದಿರುವ ಕಾರಣ ರವೀಂದ್ರ ನಿಜವಾಗಿಯೂ ಅದ್ದೂರಿ ಊಟ ಮತ್ತು ವಿಸ್ಕಿಗೆ ವ್ಯವಸ್ಥೆ ಮಾಡಿದ್ದ. ನಾನು ನನ್ನ ಮದುವೆಯ ಯಾವ ವಿವಾದಗಳನ್ನೂ ಅವನಿಗೆ ತಿಳಿಸದ ಕಾರಣ ಅವನು ತೋಚಿದಂತೆ ಮಾಡಿದ್ದ. ನಾನು ಅವನಿಗೂ ಮತ್ತು ಅವನ ಶ್ರೀಮತಿಯವರಿಗೆ, ಇವಳು ಮಾಂಸ ತಿನ್ನುವುದಿಲ್ಲ ಬೇರೇನಾದರೂ ಇದ್ದರೆ ಆದೀತೆಂದು ಹೇಳಿದೆ. ಅದಕ್ಕೇನೆಂದು 10 ನಿಮಿಷದಲ್ಲಿ ತಿಳಿಸಾರೊಂದು ತಯಾರಿಸಿದರು. ನಾನು ಗಾಯತ್ರಿ ಮತ್ತು ರವೀಂದ್ರ ಊಟ ಮಾಡಿದೆವು. ಮೊದಲ ಮದುವೆಯ ಔತಣಕೂಟ ತಿಳಿಸಾರು ಉಪ್ಪಿನಕಾಯಿ ಮೊಸರಲ್ಲಿ ಅವಳ ಊಟ ಮುಗಿದಿತ್ತು. ನನಗೆ ಒಳ್ಳೆಯ ಮಾಂಸಾಹಾರದ ಊಟವಾಗಿತ್ತು. ಅಲ್ಲಿಂದ ಮಾರನೇ ದಿನ ಮೈಸೂರಿಗೆ ಬಂದು ಜಗನ್ಮೋಹನ ಪ್ಯಾಲೇಸ್ ಹತ್ತಿರದಲ್ಲಿದ್ದ ಮಹಾರಾಜಾ ಲಾಡ್ಜ್ನಲ್ಲಿ ಉಳಿದುಕೊಂಡೆವು. ಅಲ್ಲಿಂದ ಮೈಸೂರಿನ ಗೆಳೆಯರಿಗೆ ನನ್ನ ಹಿರಿಕಿರಿ ಸ್ನೇಹಿತರಿಗೆ ಫೋನಿನಲ್ಲೆ ನಾವು ಮದುವೆಯಾಗಿ ಬಂದಿರುವ ವಿಷಯ ತಿಳಿಸಿದೆ.

ಹಿರಿಯರಾದ ಪಿ. ಮಲ್ಲೇಶ್ ಅವರು ಮನೆಗೆ ಕರೆದು ಅದ್ದೂರಿಯಾದ ಔತಣ ಮಾಡಿಸಿ ನನಗೆ ಗೊತ್ತಿರುವ ಮತ್ತು ಇನ್ನಿತರ ಸ್ನೇಹಿತರನ್ನು ಕರೆದು ನಾವಿಬ್ಬರೂ ಹೊಸದಾಗಿ ಮದುವೆಯಾಗಿ ಬಂದಿರುವ ಬಗ್ಗೆ ಅಭಿಮಾನದಿಂದ ಪರಿಚಯ ಮಾಡಿಸಿ ಹರಸಿ ಜೊತೆಗೆ ನನ್ನ ಹೆಂಡತಿಗೆ ಒಳ್ಳೆಯ ಸೀರೆಯನ್ನು ತಂದು ಉಡುಗೊರೆ ನೀಡಿದ್ದನ್ನ ಈಗಲೂ ಗಾಯತ್ರಿ ನೆನಪಿಸಿಕೊಳ್ಳುತ್ತಾಳೆ. ಮಲ್ಲೇಶ್ ಮತ್ತು ಅವರ ಶ್ರೀಮತಿ ಅವರು ಗಾಯತ್ರಿಯನ್ನು ಚೆನ್ನಾಗಿ ಮಾತಾಡಿಸಿ, ಒಳ್ಳೆಯ ಹುಡುಗನನ್ನು ಮದುವೆಯಾಗಿದ್ದೀಯ ಏನೂ ಯೋಚನೆ ಮಾಡಬೇಡ ಎಂದೆಲ್ಲ ಅವಳಿಗೆ ಸಮಾಧಾನದ ಮಾತು ಹೇಳಿ ಕಳುಹಿಸಿದ್ದರು.
ಹಾಗೆಯೇ ಮಾದೇವ ಮತ್ತು ಸುಮಿತ್ರಾಬಾಯಿಯವರು ಮನೆಗೆ, ಪಿ.ಕೆ. ಮಿಶ್ರಾಜಿ ಮತ್ತು ಮಹೇಶನ ಮನೆಗೂ ಹೋಗಿದ್ದೆವು. ಸುಮಿತ್ರಾಬಾಯಿ ಅವರು ನನ್ನ ಹೆಂಡತಿಯ ಹಿನ್ನೆಲೆ ಮೊದಲೇ ತಿಳಿದುಕೊಂಡಿದ್ದ ಕಾರಣ ಸೊಗಸಾದ ಸಸ್ಯಾಹಾರಿ ಔತಣ ಮಾಡಿದ್ದರು. ನನಗೆ ಬ್ರಾಹ್ಮಣ ಜಾತಿಯ ಅನೇಕ ಸ್ನೇಹಿತರಿರುವುದಾಗಿಯೂ ಆದುದರಿಂದ ಸಸ್ಯಾಹಾರಿ ಊಟ ಉಪಚಾರಗಳು ನನಗೆ ಚೆನ್ನಾಗಿ ಗೊತ್ತಿದೆ ಎಂದು ಹೇಳಿ ಸುಮಿತ್ರಾಬಾಯಿ ಅವರು ಆದರಿಸಿದ್ದರು.

ಎಲ್ಲ ಸ್ನೇಹಿತರನ್ನು ಮಾತಾಡಿಸಿದ ನಂತರ ಸಂಜೆ ಎಂ.ಸಿ. ಸುಂದರೇಶ ನಮ್ಮ ಕಿರಿಯ ಗೆಳೆಯ ಮತ್ತು ತನ್ನ ಎಂಬಿಎ ಶಿಕ್ಷಣದ ನಂತರ ಸ್ವಂತ ಗ್ಯಾಸ್ ಏಜೆನ್ಸಿ ನಡೆಸುತ್ತಾ ಬೆಳೆಯುವ ಉದ್ಯಮಿಯಾಗಿದ್ದ. ಅವನು ದೊಡ್ಡ ಹೋಟೆಲೊಂದರಲ್ಲಿ ಪಾರ್ಟಿ ಏರ್ಪಡಿಸಿದ್ದ. ಮಹೇಶ ಮತ್ತಿತರ ಗೆಳೆಯರ ಜೊತೆ ಪಾರ್ಟಿಗೆ ಹೋಗಿದ್ದೆವು. ಆಗ ಅಲ್ಲಿಗೆ `ಆಂದೋಲನ’ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಶಿವಣ್ಣ ತನ್ನ ಪ್ರೇಮ ಪ್ರಕರಣದ ವೈಫಲ್ಯ ಕುರಿತು ಹೇಳುತ್ತಾ… ಅಳುತ್ತಾ ಮತ್ತಾರೂ ಮಾತಾಡಲಾಗದಂತೆ ಅವನದೇ ದೊಡ್ಡ ಗೋಳಾಯಿತು. ಮಹೇಶ ಎಲ್ಲರನ್ನು ಸಮಾಧಾನ ಮಾಡುತ್ತಾ ಪಾರ್ಟಿ ಮುಗಿಸಿದ್ದೆವು. ಸುಂದರೇಶ್, ಇವರೆಲ್ಲ ಅದಕ್ಕೆ ನಾನು ಬೇಡ ಅಂದಿದ್ದು, ಎಂದು ಬೇಸರ ಮಾಡಿಕೊಂಡಿದ್ದ. ನಾನೇ ಆತನಿಗೆ ಸಮಾಧಾನದ ಮಾತುಗಳನ್ನು ಹೇಳಿ ಅಲ್ಲಿಂದ ಬೀಳ್ಕೊಂಡಿದ್ದೆವು.

ಮಾರನೇ ದಿನ ಮಹೇಶನ ಊರಿಗೆ ಹೋಗಿ ಎರಡು ದಿನ ಅವನ ಊರಾದ ಕುಪ್ಪೇಗಾಲದಲ್ಲಿ ಇದ್ದೆವು. ಮಹೇಶನ ತಂದೆ ದೊಡ್ಡ ಜಮೀನುದಾರರು. ಮನೆಯಲ್ಲಿ ಹತ್ತಾರು ಆಳು ಕಾಳುಗಳು ಇದ್ದು ರೈತಾಪಿ ಕೆಲಸಗಳು ನಡೆಯುತ್ತಿದ್ದವು. ರೇಷ್ಮೆ, ತೆಂಗು, ಬತ್ತದ ಬೆಳೆಗಳಿದ್ದ ಹೊಲ ಗದ್ದೆಗಳ ಕಡೆ ತಿರುಗಾಡುತ್ತಾ ಅವರೂರಿಗೆ ಹೊಂದಿಕೊಂಡ ನದಿಕಡೆ ತಿರುಗಾಡಿ ಮನೆಗೆ ಬರುತ್ತಿದ್ದೆವು. ಮಹೇಶನ ಮನೆಯವರು ವಿಶೇಷವಾಗಿ ಉಪಚರಿಸಿದರು. ಗಾಯತ್ರಿ, ಅವರ ಅಡುಗೆಯ ಮನೆಯಲ್ಲಿದ್ದ ಒಂದು ಬುಟ್ಟಿ ತುಂಬಾ ಕಟ್ಟಿಟ್ಟಿದ್ದ ರಾಗಿ ಮುದ್ದೆಗಳನ್ನು ನೋಡಿ `ಇಷ್ಟೊಂದಾ’ ಎಂದು ಉದ್ಗಾರ ತೆಗೆದಿದ್ದಳು. ಅದಕ್ಕೆ ಅವರಮ್ಮ ಕೆಲಸಗಾರರಿಗೆ ಊಟ ಕೊಡದಿದ್ದರೆ ಕೆಲಸಕ್ಕೆ ಬರುವುದಿಲ್ಲ ಎಂದೆಲ್ಲ ವಿವರಣೆ ನೀಡುತ್ತಿದ್ದರು. ಎರಡು ದಿನ ಆರಾಮ ಇದ್ದು ಕುಪ್ಪೇಗಾಲದಿಂದ ಮೈಸೂರಿಗೆ ಹೊರಟು ನಿಂತಿದ್ದ ಬಸ್ಸು ಏರಿದ್ದೆವು. ನಮ್ಮನ್ನು ಕಳಿಸಲು ಬಂದಿದ್ದ ಮಹೇಶ ಏನೋ ನೆನಪು ಮಾಡಿಕೊಂಡವನಂತೆ ಬಸ್ಸಿನ ಪಕ್ಕಕ್ಕೆ ಬಂದು 200ರೂಗಳನ್ನು ನನ್ನ ಕೈಗಿಟ್ಟು ನಾನೇ ಮದುವೆ ಕಾಲಕ್ಕೆ ಸ್ವಲ್ಪ ಮುಂಚೆ ಬರಬೇಕಾಗಿತ್ತು, ಆಗಲಿಲ್ಲ ಎಂದು ಹೇಳುತ್ತಿರುವಾಗಲೇ ಬಸ್ ಮುಂದೆ ಮುಂದೆ ಚಲಿಸುತ್ತಿತ್ತು. ಧಾವಂತದಲ್ಲಿ ಮದುವೆ ನೋಂದಾಯಿಸಿಕೊಂಡು ಮೈಸೂರು ಕಡೆಗೆ ಹೋಗಿದ್ದ ನಾನು ಬಿಆರ್‌ಪಿಗೆ ವಾಪಸ್ ಬಂದಿದ್ದೆ. ನಂತರ 10ನೇ ತಾರೀಖಿನಂದು ಆಯೋಜಿಸಿದ್ದ ಔತಣಕೂಟಕ್ಕೆ ರೆಡಿಯಾಗುತ್ತಿದ್ದೆವು. ಯಾರೆಲ್ಲಾ ಬರಬಹುದು, ಏನೇನು ಬೆಳವಣಿಗೆಯಾಗಬಹುದೆಂಬ ದುಗುಡದಲ್ಲಿದ್ದೆವು. ನಮ್ಮ ಮದುವೆಗೆಲ್ಲಾ ಒತ್ತಾಸೆಯಾಗಿದ್ದ ಪ್ರಭುವಿನ ಮೇಲೆ ಎಲ್ಲರ ವಕ್ರದೃಷ್ಟಿ ಬಿದ್ದಿತ್ತು. ಗಾಯತ್ರಿ ಮನೆಯವರು ಮತ್ತು ಅವರಲ್ಲಿನ ಹಿರಿಯರನೇಕರು ಶಿವಮೊಗ್ಗದ ಅವರ ಮನೆಗೆ ಬಂದು ಗಾಯತ್ರಿಯನ್ನು ಅವರುಗಳು ಮಾತಾಡಿಸಬೇಕೆಂದು ಅದಕ್ಕಾಗಿ ನೀವು ಅವರಿಬ್ಬರನ್ನು ಶಿವಮೊಗ್ಗಕ್ಕೆ ಕರೆಸಲು ಪ್ರಭುಗೆ ಒತ್ತಾಯಿಸಿದ್ದರು.

ಅವರ ಇಚ್ಛೆಯಂತೆ ನಾನು ಗಾಯತ್ರಿ ಪ್ರಭು ಮನೆಗೆ ಸುಮಾರು ಮಧ್ಯಾಹ್ನ 11-12ರ ಸಮಯಕ್ಕೆ ಹೋದೆವು. ಗಾಯತ್ರಿಯ ಹಿರಿಯ ಅಣ್ಣ ಹೆಚ್.ಸಿ. ನಂಜುಂಡಭಟ್ಟ ಮತ್ತು ಹೆಚ್.ಸಿ. ಜಗದೀಶ್ ಹಾಗೂ ಬಂಧುವಾಗಿದ್ದ ಶಾರದಮ್ಮ ಅವರುಗಳ ಜೊತೆ ಇನ್ನೂ ಹಲವರು ಗಾಯತ್ರಿಯೊಡನೆ ಮಾತನಾಡಿದರು. ಅವರನ್ನೆಲ್ಲ ನೋಡಿದ ಗಾಯತ್ರಿ ಭಾವುಕಳಾಗಿ ಕೂತಿದ್ದಳು. ಬಂದ ಗಾಯತ್ರಿ ಬಂಧುಗಳು ಯಾರೂ ನನ್ನನ್ನು ಮಾತಾಡಿಸಲಿಲ್ಲ. ಅವರೆಲ್ಲ ಗಾಯತ್ರಿಯೊಡನೆ ಮಾತಾಡಿ ಬೇರೆಲ್ಲ ಮಾತು ಮುಗಿದು ಕೊನೆಯಲ್ಲಿ ಈಗ ಎಂ.ಎ. ಮುಗಿದಿರುವ ಕಾರಣ ಮುಂದಿನ ಓದಿಗಾಗಿ ಹೊರದೇಶಕ್ಕೆ ಹೋಗುವ ವ್ಯವಸ್ಥೆ ಮಾಡುವುದಾಗಿಯೂ, ಜೀವನದಲ್ಲಿ ಭೋಗಕ್ಕಿಂದ ತ್ಯಾಗ ದೊಡ್ಡದು ಎಂಬೆಲ್ಲ ಮಾತಾಡಿ ಈಗ ಆಗಿರುವ ಮದುವೆ ಮದುವೆಯಲ್ಲ, ಬಿಟ್ಟು ಬಿಡು ಎಂದೆಲ್ಲ ಮಾತುಗಳು ಬಂದವು. ಆಗ ಅದುವರೆಗೂ ಸುಮ್ಮನಿದ್ದ ಪ್ರಭು ಮಧ್ಯೆ ಪ್ರವೇಶಿಸಿ, ಈಗ ನನ್ನ ಸ್ನೇಹಿತ ನಿಮ್ಮ ತಂಗಿಯನ್ನು ಮದುವೆಯಾಗಿದ್ದು ಮುಂದಿನ ಜೀವನದ ವಿಷಯ ಮಾತನಾಡುವುದನ್ನು ಬಿಟ್ಟು ನೀವು ಬೇರ್ಪಡಿಸುವ ಮಾತಾಡುತ್ತಿದ್ದೀರಿ ಎಂದು ಆಕ್ಷೇಪಿಸಿ, ಇನ್ನು ಸಾಕು ಹೊರಡಿ ಎಂದು ಏರು ಧ್ವನಿಯಲ್ಲಿ ಹೇಳಿದ. ಗಾಯತ್ರಿ ಚಿಕ್ಕ ಅಣ್ಣ ಜಗದೀಶ, ಇದು ಏನು ಮನೆಯೋ ಜೈಲೋ ಹೀಗೆಲ್ಲಾ ಮಾತಾಡುತ್ತೀರೆಂದು ಹೇಳುವಾಗಲೇ, ಪ್ರಭು ಹೌದು ಇದು ಜೈಲು ನಾನಿಲ್ಲಿನ ಜೈಲ್ ಸೂಪರಿಂಟೆಂಡೆಂಟ್ ಎಂದು ಏರು ಧ್ವನಿಯಲ್ಲಿ ಹೇಳಿದ ಕಾರಣ ಮುಂದಿನ ಮಾತುಗಳು ನಿಂತು ನಮ್ಮೆಲ್ಲರ ಭೇಟಿ ಕೊನೆಗೊಂಡಿತ್ತು.

ದಿನಾಂಕ 10-6-1979ರ ಮಧ್ಯಾಹ್ನ 3-4 ಗಂಟೆಗೆ ನಾವಿಬ್ಬರೂ ನಮ್ಮ ಸ್ನಾತಕೋತ್ತರ ಕೇಂದ್ರದಲ್ಲಿನ ಒಂದು ಶಾಲಾ ಕೊಠಡಿಯಲ್ಲಿ ಸಂತೋಷ ಕೂಟ ಆಯೋಜಿಸಲಾಗಿತ್ತು. ಕೃಷ್ಣಪ್ಪನವರ ಸಮಾಜವಾದಿ, ದಲಿತ ಮಿತ್ರರನೇಕರು ಹಾಜರಿದ್ದರು. ಪ್ರಾಸ್ತಾವಿಕವಾಗಿ ಕೃಷ್ಣಪ್ಪನವರು ಮಾತಾಡಿ, ಸರಳ, ಜಾತ್ಯತೀತ ಮದುವೆಗಳು ಭಾರತೀಯರಿಗೆ ಇಂದಿನ ಅವಶ್ಯಕವಾದ ಅಂಶಗಳೆಂದು ಮಾತನಾಡಿ ಇಂತಹ ಮದುವೆಯಾಗುತ್ತಿರುವ ನಮ್ಮಿಬ್ಬರಿಗೂ ಶುಭ ಕೋರಿದ್ದರು. ನಂತರದಲ್ಲಿ ಡಾ. ತೀ.ನಂ. ಶಂಕರನಾರಾಯಣ, ಡಾ. ಶ್ರೀಕಂಠ ಕೂಡಿಗೆ, ಡಾ. ಜಿ.ಎನ್ ಕೇಶವಮೂರ್ತಿ ಮತ್ತು ಪ್ರಭು ಕೂಡ ಮಾತಾಡಿದ ನಂತರ ನಾನು ಎಲ್ಲರಿಗೂ ಕೃತಜ್ಞತೆ ಹೇಳಿದ್ದೆ. ಇನ್ನೇನು ಇದೆಲ್ಲ ಆಗುವ ಸಮಯಕ್ಕೆ ಸರಿಯಾಗಿ ಗಾಯತ್ರಿಯ ತಂದೆ, ಅಣ್ಣಂದಿರು ಹಾಗೂ ಇತರ ಕೆಲವರು ಅಲ್ಲಿಗೆ ಬಂದರು. ಕೃಷ್ಣಪ್ಪನವರು ಇದೆಲ್ಲವನ್ನು ಗಮನಿಸುತ್ತಾ ಇದ್ದ ಕಾರಣ ಗಲಾಟೆ ಆಗುವ ಸಂಭವವನ್ನು ನಿರೀಕ್ಷಿಸಿ ನಮ್ಮಿಬ್ಬರನ್ನು ಒಂದು ಅಂಬಾಸಿಡರ್ ಕಾರಿನಲ್ಲಿ ಭದ್ರಾವತಿಗೆ ತರಾತುರಿಯಲ್ಲಿ ಕಳಿಸಿಕೊಟ್ಟರು. (ಸುದ್ದಿದಿನ.ಕಾಂ|ವಾಟ್ಸಾಪ್|9980346243

ಮುಂದುವರಿಯುವುದು

Continue Reading

ದಿನದ ಸುದ್ದಿ

ಮೊಹರಂ : ಜನತೆಯ ಧರ್ಮ

Published

on

ಚರ್ಚೆಯಲ್ಲಿ ರಹಮತ್ ತರೀಕೆರೆ
  • ಡಾ.ರಹಮತ್ ತರೀಕೆರೆ

ಳನೇ ಶತಮಾನದಲ್ಲಿ, ಮಹಮದ್ ಪೈಗಂಬರರ ಮೊಮ್ಮಕ್ಕಳಾದ ಹುಸೇನ್‍ ಹಾಗೂ ಅವರ ಸಂಗಡಿಗರು ಯಜೀದನೆಂಬುವವನ ವಿರುದ್ಧ, ಕರ್ಬಲಾ ಮೈದಾನದಲ್ಲಿ ಲಡಾಯಿ ಮಾಡುತ್ತ ಜೀವಬಿಟ್ಟರು. ಇದರ ಶೋಕಾಚರಣೆಯ ಭಾಗವಾಗಿ ಮೊಹರಂ ಆಚರಣೆ ಶುರುವಾಯಿತು.

ಕರ್ಬಲಾ ವೀರರ ಸಾವು ದಾರುಣ ಸಂಗತಿಯಾಗಲು ಕಾರಣ, ಅವರ ತಲೆಕಡಿದು ಮೆರವಣಿಗೆ ಮಾಡಲಾಯಿತು. ಜತೆಯಿದ್ದ ಎಳೆಗೂಸುಗಳು ಕುಡಿಯಲು ನೀರಿಲ್ಲದೆ ಪರಿತಪಿಸುತ್ತ ಸತ್ತರು. ಮಹಿಳೆಯರು ದುಃಖದಿಂದ ಪರಿತಪಿಸಿದರು. ಇದನ್ನು ಜನಪದರು ‘ಧರಮಕ ಸತ್ತವರಾ ಕೋಟಿಗೊಬ್ಬ ಜನರಾ, ಆರಾಣ್ಯಾದಾಗ ಅವರಾ ಕಾಣದ ಮೂರು ದಿವಸ ನೀರಾ, ಕುಡದಾರೋ ಕಣ್ಣೀರಾ ಮಕ್ಕಳು ಹುಡುಗರು ಹೆಂಗಸರಾ’ ಎಂದು ಹಾಡಿರುವುದುಂಟು. ಇಂತಹ ದುಗುಡದ ನೆನಪಿನಲ್ಲಿ ಹುಟ್ಟಿದ ಧಾರ್ಮಿಕ ಆಚರಣೆಯೊಂದು ಕರ್ನಾಟಕದಲ್ಲಿ ಸಾಂಸ್ಕೃತಿಕ ಆಚರಣೆಯಾಗಿ ರೂಪಾಂತರ ಪಡೆಯಿತು. ಉತ್ತರ ಕರ್ನಾಟದಲ್ಲಿ ಎಲ್ಲ ಧರ್ಮದ ಜಾತಿಯ ಜನರು ಒಟ್ಟಾಗಿ ಆಚರಿಸುವ ಊರಹಬ್ಬವಾಯಿತು. ಹೀಗಾಗಿ ಮುಸ್ಲಿಮರೇ ಇಲ್ಲದ ನೂರಾರು ಊರುಗಳಲ್ಲೂ ಮೊಹರಂ ನಡೆಯುತ್ತದೆ.

ಮೊಹರಂನಲ್ಲಿ ಶೋಕಗೀತೆಯ ರಚನೆ, ಹಾಡಿಕೆ, ಕುಣಿತ, ವೇಷಗಾರಿಕೆ,ಮೆರವಣಿಗೆ, ವಿಶೇಷ ಆಹಾರಗಳ ಆಯಾಮಗಳಿವೆ. ಇದರ ಫಲವಾಗಿ ಕರ್ನಾಟಕದಲ್ಲಿ ಹಾಡು ಕಟ್ಟುವ ಸಾವಿರಾರು ಶಾಹಿರರೂ ಗಾಯಕರೂ ಇದ್ದಾರೆ. ಹೆಜ್ಜೆಕುಣಿತ, ಕೋಡಂಗಿ ಕುಣಿತ, ಡಬಗಳ್ಳಿ ಕುಣಿತ ಮಾಡುವ, ಹುಲಿವೇಷ, ಅಚೊಳ್ಳಿಸೋಗು, ಭಡಂಗ್‍ವೇಷ ಹಾಕುವ ಹರಕೆ ಕಲಾವಿದರಿದ್ದಾರೆ. ನಾನು ಕಂಡಂತೆ,
ಬೀಳಗಿ, ಕೆರೂರ ಕುದುರೆಮೋತಿ ಅಗಸನೂರ , ಆಯನೂರು ಯರಗುಪ್ಪಿ ಗೋಕಾಕಫಾಲ್ಸ ಮುದಗಲ್ ಮೊಹರಂ ವಿಶಿಷ್ಟವಾದವು. ಪ್ರತಿಯೊಂದೂ ಊರು ತನ್ನದೇ ಆಚರಣೆಯನ್ನು ರೂಢಿಸಿಕೊಂಡಿದೆ.

ಅಗಸನೂರಿನಲ್ಲಿ ಹತ್ತು ದಿನಗಳ ಕಾಲ ಚಪ್ಪಲಿ ತೊಡುವುದಿಲ್ಲ. ಮಂಚದಲ್ಲಿ ಮಲಗುವುದಿಲ್ಲ. ಬೀಳಗಿಯಲ್ಲಿ ತೇರಿನಂಥ ರಚನೆಗೆ ಹಿಲಾಲುಗಳನ್ನು ಸಿಕ್ಕಿಸಿ ಉರಿವವೃಕ್ಷವನ್ನೇ ಸೃಷ್ಟಿಸುತ್ತಾರೆ. ಆಯನೂರಲ್ಲಿ ಯಜೀದನ ಸಂಕೇತವಾಗಿ ರಾವಣನ ಪ್ರತಿಕೃತಿ ಸುಡುತ್ತಾರೆ; ಅಗಸನೂರಿ ನಲ್ಲಿ ಅಲಾವಿಯ ಸುತ್ತ ಮಾಡುವ ಹೆಜ್ಜೆ ನೃತ್ಯವು ಅಪೂರ್ವವಾಗಿದೆ. ಕುದುರೆಮೋತಿ, ಹೊಸಪೇಟೆ, ಗಜೇಂದ್ರಗಡಗಳು ಹುಲಿವೇಷಕ್ಕೆ ಹೆಸರಾಗಿವೆ; ಮುದಗಲ್ಲಿನಲ್ಲಿ ಅಗಲಿದ ಹಸನ- ಹುಸೇನರ ಮಿಲನವಾ ಗುವ ಆಚರಣೆ ಕಣ್ತುಂಬಿಕೊಳ್ಳಲು ಕೋಟೆಯ ಹೊರಗೆ ಸಾವಿರಾರು ಜನ ಸೇರುತ್ತಾರೆ. ಇಂಡಿ ಕಡೆ ಭಡಂಗ್ ಎನ್ನುವ ಹರಕೆವೇಷ ಹಾಕುತ್ತಾರೆ; ಬಾಗಲಕೋಟೆ-ವಿಜಯಪುರ ಸೀಮೆಯಲ್ಲಿ ಆಫ್ರಿಕನ್ ಸಿದ್ದಿಗಳನ್ನು ನೆನಪಿಸುವ ಅಚೊಳ್ಳಿ- ಬಿಚೊಳ್ಳಿ ಸೋಗುಗಳಿವೆ.

ಈ ಸೋಗಿಗೆ ಮುಖಕ್ಕೆ ಕಪ್ಪುಮಸಿ ಬಳಿದು, ಸೊಂಟಕ್ಕೆ ಗಂಟೆ ಕಟ್ಟಿ, ತಲೆಗೆ ಲಾಲಿಕೆಯಾಕಾರದ ಅಲಂಕೃತ ಟೋಪಿ ಧರಿಸುತ್ತಾರೆ. ಮೊಹರಂ ಆಚರಣೆಯ ದಿನಗಳಲ್ಲಿ ಮುಸ್ಲಿಮೇತರರು ಲಾಡಿ ಧರಿಸಿ ಫಕೀರರಾಗುವ ಪದ್ಧತಿಯೂ ಇದೆ. ಮುಸ್ಲಿಮೇತರ ಕುಟುಂಬಗಳು ಐದು ಜನ ಫಕೀರರಿಗೆ ಕರೆದು ಬಿನ್ನಹ ಮಾಡಿಸಿದಲ್ಲದೆ ತಾವು ಉಣ್ಣುವುದಿಲ್ಲ. ಚೋಂಗೆ, ಮಾಲ್ದಿ ಎಂಬ ಸಿಹಿ ಅಡುಗೆ, ಶರಬತ್ತು ಹಾಗೂ ಮೊಸರನ್ನ ಮೊಹರಂ ಮುಖ್ಯ ಅಡುಗೆಗಳು. ಕರ್ಬಲಾ ವೀರರು ಊಟ ನೀರಿಲ್ಲದೆ ಮಡಿದವರಾದ್ದರಿಂದ, ಹಸಿದವರಿಗೆ ಉಣಿಸುವ ಮತ್ತು ಬಾಯಾರಿದವರಿಗೆ ಶರಬತ್ತು ಕುಡಿಸುವ ಪದ್ಧತಿ ರೂಢಿಯಲ್ಲಿದೆ. ಇಂಡಿ ಮತ್ತು ಸೇಡಂ ಭಾಗದಲ್ಲಿ ಕುರಿಬ್ಯಾಟೆ ಕೊಡುವ ಪದ್ಧತಿಯಿದೆ. ಹೀಗೆ ಉತ್ತರ ಕರ್ನಾಟಕದ ಮೊಹರಂ ಬಹುರೂಪಿಯಾಗಿದೆ.

ದೂರದ ಇರಾಕಿನಲ್ಲಿ ಸಾವಿರಾರು ವರ್ಷದ ಹಿಂದೆ ನಡೆದ ಒಂದು ಮಾನವ ದುರಂತವನ್ನು, ತಮ್ಮ ಬೀದಿಯಲ್ಲಿ ನಿನ್ನೆ ಮೊನ್ನೆ ಸಂಭವಿಸಿದ್ದು ಎಂದು ಇನ್ನೊಂದು ದೇಶಕ್ಕೆ, ಕಾಲಕ್ಕೆ ಸಂಸ್ಕೃತಿ ಮತ್ತು ಧರ್ಮಕ್ಕೆ ಸೇರಿದ ಜನಸಮುದಾಯ ಭಾವಿಸಿ ಮಿಡಿಯುವುದೇ ಸೋಜಿಗ. ಇದು ಜನಪದ ಮನಸ್ಸಿನ ಮಾನವೀಯ ಗುಣ. ಇಲ್ಲಿ ಚರಿತ್ರೆಯನ್ನು ಸಮಕಾಲೀನಗೊಳಿಸುವ ಗುಣವೂ ಇದೆ. ವಿಶೇಷವೆಂದರೆ, ಕರ್ಬಲಾ ಹಾಡುಗಳಿಗೆ ದುರಂತದ ವಸ್ತುವಿಗೆ ಸ್ಥಳೀಯ ದುರಂತ ಘಟನೆಗಳೂ ಸೇರಿಕೊಳ್ಳುವುದು. ಬಸ್ಸು ಕಾಲುವೆಗೆ ಉರುಳಿ ಜನ ಸತ್ತದ್ದು, ಎತ್ತುಗಳನ್ನು ರಕ್ಷಣೆ ಮಾಡುತ್ತ ರೈತ ಕಳ್ಳರ ಕೈಲಿ ಕೊಲೆಯಾಗಿದ್ದು, ದುಷ್ಟನಿಂದ ತನ್ನನ್ನು ಕಾಪಾಡಿಕೊಳ್ಳುವ ಅವಸರದಲ್ಲಿ ತಾಯೊಬ್ಬಳು ಕೂಸನ್ನು ಕಳೆದುಕೊಂಡಿದ್ದು, ಗೆಳೆಯನ ಮಡದಿಯನ್ನು ಪ್ರೇಮಿಸಿ ಸ್ವಹತ್ಯೆ ಮಾಡಿಕೊಂಡಿದ್ದು – ಇವೂ ಮೊಹರಂ ಹಾಡುಗಳ ವಸ್ತುಗಳಾಗಿವೆ. ಬೀಳಗಿ ತಾಲ್ಲೂಕಿನ ರೊಳ್ಳಿಯಲ್ಲಿ ಆಲಮಟ್ಟಿ ಡ್ಯಾಂನ ನೀರಿನಲ್ಲಿ ಊರು ಮನೆ ಜಮೀನು ಮುಳುಗಡೆಯಾದ ದುಃಖವನ್ನು ಕೇಳುವವರ ಎದೆಕಲಕುವಂತೆ ಹಾಡಾಗಿ ಹಾಡಿದ್ದರು.

ಮೊಹರಂ ಹಾಡುಪರಂಪರೆ, ಭಾರತೀಯ ಗುರುಪರಂಪರೆಯ ಭಾಗವಾಗಿದೆ. ಶಾಸ್ತ್ರೀಯ ಸಂಗೀತದಲ್ಲಿ ಇರುವಂತೆ, ಇಲ್ಲೂ ಹಾಡಿಕೆ ಕಲಿಯುವ ಶಿಷ್ಯರು ಗುರುವಿನಿಂದ ದೀಕ್ಷೆ ಪಡೆದು ಜತೆಯಲ್ಲಿ ಹಾಡುತ್ತ, ಒಂದು ದಿನ ಗುರುವಿನ ಅನುಮತಿಯಿಂದ ಸ್ವತಂತ್ರವಾಗಿ ಹಾಡುತ್ತಾರೆ; ಹಾಡಿನಲ್ಲಿ ಗುರುವಿನ ಹೆಸರನ್ನು ಸ್ಮರಿಸುತ್ತಾರೆ; ಬೇರೆ ಬೇರೆ ತಂಡಗಳು ಪರಸ್ಪರ ಎದುರಾಗಿ, ಜಿದ್ದಾಜಿದ್ದಿ ಸವಾಲ್- ಜವಾಬ್ ನಡೆಸುತ್ತಾರೆ.

ನರಗುಂದ ತಾಲ್ಲೂಕಿನ ಕೊಣ್ಣೂರಿನಲ್ಲಿ ಸವಾಲ್ ಜವಾಬ್ ಹಾಡಿಕೆಯ ಸ್ಪರ್ಧೆ ನಡೆಯುತ್ತದೆ. ಅದೊಂದು ಬೌದ್ಧಿಕ ಕದನ. ಇದರಲ್ಲಿ ಸೋತವರು ಸಾಯುವ ತನಕ ಹಾಡಿಕೆಗೆ ವಿದಾಯ ಹೇಳಿದ್ದುಂಟು; ಗೆದ್ದವರು ಪದಕ ಧರಿಸಿ, ಜನರಿಂದ ಆಹೇರಿ ಪಡೆದು, ಹೊಲವನ್ನು ಭಕ್ಷೀಸಾಗಿ ಪಡೆದದ್ದುಂಟು. ವೆಂಕಟಬೇನೂರಿನ (ಕಲಬುರ್ಗಿ) ಕಾಕಿಪೀರಾ, ಕದರಮಂಡಲಗಿಯ (ಬ್ಯಾಡಗಿ) ಅಲ್ಲಾಭಕ್ಷ್, ಹುಲಕುಂದದ (ರಾಮದುರ್ಗ) ಭೀಮಕವಿ, ನಿಡಗುಂದದ (ಚಿಂಚೋಳಿ) ಕೆರೂರ ನದಾಫಸಾಬ್ (ಬದಾಮಿ)ಬಸವಂತರಾವ್, ಗೋಕಾಕದ ಭರಮಣ್ಣ ಬೂಶಿ, ಸತ್ತೂರಿನ ಇಮಾಂಸಾಬ್ ಪ್ರಸಿದ್ಧ ಶಾಹಿರರು. ಇಂಡಿ, ಸೇಡಂ, ಬೀಳಗಿ ಭಾಗದಲ್ಲಿ ಮಹಿಳೆಯರು ಗುಂಪಾಗಿ ಕುಳಿತು ಶೋಕಗೀತೆಗಳನ್ನು ಹಾಡುತ್ತಾರೆ. ಈ ಗೀತೆಗಳ ವಸ್ತು, ಅಸಘರನೆಂಬ ಕೂಸಿನ ಸಾವು, ಅಭಿಮನ್ಯುವಿನ ಹಾಗೆ ಚಿಕ್ಕ ಹುಡುಗನಾದ ಕಾಸೀಮ್‌ನನ್ನು ರಣರಂಗಕ್ಕೆ ಕಳಿಸಿಕೊಡುವುದು, ಕಾಸೀಮನ ಮರಣ, ಅವನ ಎಳೆಹೆಂಡತಿ ಸಕೀನಾಳನ್ನು ವಿಧವೆಯಾಗಿಸುವುದು, ಅವಳ ಪ್ರಲಾಪ ಇತ್ಯಾದಿ.

ಮೊಹರಂ ಹಾಡುಗಾರರು ಇಸ್ಲಾಮಿನ ಚರಿತ್ರೆ ಪುರಾಣಗಳಂತೆ, ಮಹಾಭಾರತ, ರಾಮಾಯಣ, ಶಿವಪುರಾಣಗಳಲ್ಲಿಯೂ ಪರಿಣತಿ ಪಡೆದಿದ್ದಾರೆ. ಅವರ ಹಾಡುಗಳಲ್ಲಿ ಯಜೀದ್- ಹುಸೇನರ ಕದನದ ಚರಿತ್ರೆಯು ದೇಸಿ ಪುರಾಣಗಳ ಜತೆ ಬೆರೆತುಬಿಡುತ್ತದೆ. ಬಾಗೇವಾಡಿ ತಾಲ್ಲೂಕಿನಲ್ಲಿ ಪೈಗಂಬರನ್ನು ರಾಮನನ್ನಾಗಿ, ಬೀಬೀ ಫಾತಿಮಾರನ್ನು ಸೀತೆಯನ್ನಾಗಿ, ಹಸನ-ಹುಸೇನರನ್ನು ಲವ-ಕುಶರನ್ನಾಗಿ ಸಮೀಕರಿಸಿ ಹಾಡುತ್ತಾರೆ. ಈ ಹಾಡುಗಳಲ್ಲಿ ಪೈಗಂಬರರನ್ನು ಶರಣ ಎಂದೇ ಕರೆಯಲಾಗಿದೆ. ಬಸವಣ್ಣ, ಮಹದೇವ ಹಾಗೂ ಪೈಗಂಬರ್ ಒಟ್ಟಿಗೇ ಇರುವ ಮಂತ್ರವನ್ನು ಅನೇಕ ಮೊಹರಂ ಮಸೀದಿಯ ತಲೆಬಾಗಿಲಲ್ಲಿ ಕೆತ್ತಲಾಗಿದೆ. ಇಲ್ಲಿರುವ ತತ್ವವೆಂದರೆ, ಲೋಕಹಿತ ಬಯಸುವ ಲೋಕದ ಸಮಸ್ತ ದಾರ್ಶನಿಕರೂ ದೈವಗಳೂ ಮೂಲತಃ ಒಂದೇ ಎಂಬುದು.

ಕರ್ನಾಟಕ ಸಂಸ್ಕೃತಿಯ ವೈಶಿಷ್ಟ್ಯವೆಂದರೆ ಬಹುತ್ವ ಪ್ರಜ್ಞೆ. ಈ ಪ್ರಜ್ಞೆಯು ಪುರಾಣ ಮತ್ತು ಇತಿಹಾಸವನ್ನು ಬೆರೆಸುತ್ತದೆ; ಬೇರೆ ಬೇರೆ ಮತಧರ್ಮದ ಕಥನಗಳಲ್ಲಿರುವ ಸಮಾನ ಅಂಶಗಳನ್ನು ಒಂದೆಡೆ ಜೋಡಿಸುತ್ತದೆ. ಇದು ಭಾರತದ ನಿಜವಾದ ಸಾಂಸ್ಕೃತಿಕ ಪ್ರತಿಭೆ. ಮಧ್ಯಕಾಲೀನ ದೊರೆಗಳು ರಾಜ್ಯವಿಸ್ತರಣೆಗಾಗಿ ಮಾಡಿದ ರಾಜಕೀಯ ಯುದ್ಧಗಳನ್ನೇ ಇರಿಸಿಕೊಂಡು ಚರಿತ್ರೆ ಮತ್ತು ವರ್ತ ಮಾನವನ್ನು ನೋಡುವವರಿಗೆ, ಜನ ಕಟ್ಟುವ ಈ ಸೃಜನಶೀಲ ಪರಂಪರೆ ತಿಳಿಯುವುದಿಲ್ಲ. ಮೊಹರಂ ತಾಳಿರುವ ಬಹುರೂಪವು ಸಂಪ್ರದಾಯವಾದಿಗಳನ್ನು ಕಂಗೆಡಿಸುತ್ತದೆ. ‘ಇದೆಂತಹ ಧರ್ಮ; ಎಲ್ಲ ಕಲಬೆರಕೆಯಾಗಿದೆ’ ಎಂದವರು ಗೊಣಗುವರು. ಆದರೆ ಸಾಮಾನ್ಯ ಜನ ಧರ್ಮ, ಜಾತಿಗಳನ್ನು ಮೀರಿ ಸೃಷ್ಟಿಸಿಕೊಂಡಿರುವ ಅಸ್ಮಿತೆಯಾಗಿ ಮೊಹರಂ ರೂಪುಗೊಂಡಿದೆ. ‘ಪ್ರಧಾನ’ ಧರ್ಮಗಳು ಸಂಘರ್ಷಕ್ಕೆ ಕಾಲು ಕೆರೆಯುತ್ತಿವೆ; ಪರಸ್ಪರ ಸಂವಾದ ಮಾಡುವ ಬಾಗಿಲು ಕಿಟಕಿಗಳನ್ನು ಮುಚ್ಚಿಕೊಳ್ಳುತ್ತಿವೆ. ಇಂತಹ ಸನ್ನಿವೇಶದಲ್ಲಿ, ಧರ್ಮಗಳ ನಡುವೆ, ಸಂಸ್ಕೃತಿಗಳ ನಡುವೆ ಸಂವಾದ ಸಾಧ್ಯವಿದೆ ಎಂದು ಮೊಹರಂ ತೋರಿಸಿಕೊಡುತ್ತದೆ.

ಪಟ: ಕವಿ ಕೆರೂರ ನದಾಫ ಸಾಹೇಬರೊಡನೆ; ಅಚೊಳ್ಳಿ ಬಿಚೊಳ್ಳಿ ಸೋಗುಗಾರ; ಹುಲಿವೇಷದ ಹರಕೆ ಹುಬ್ಬಳ್ಳಿ; ಕರ್ಬಲಾ‌ ಕದನದಲ್ಲಿ ಕಾಸಿಮಲಿ ಸಾವು ಚಿತ್ರ; ಅಬ್ಬಾಸ ಅಲಿ ಸಮಾಧಿಯೆದುರು (ಕರ್ಬಲಾ, ಇರಾಕ್); ಹುಲಿವೇಷಕ್ಕೆ ಬಣ್ಣಗಾರಿಕೆ; ಹೆಜ್ಜಕುಣಿತ ಕುಷ್ಟಗಿ; ಕರ್ಬಲಾ ನಗರದಲ್ಲಿ ಶೋಕಾಚರಣೆ ( ಬರಹಕೃಪೆ:ನಿವೃತ್ತ ಪ್ರೊಫೆಸರ್ ರಹಮತ್ ತರೀಕೆರೆ, ಫೇಸ್ಬುಕ್ ನಿಂದ)ಸುದ್ದಿದಿನ.ಕಾಂ|ವಾಟ್ಸಾಪ್|9980346243)

Continue Reading
Advertisement

Title

ಕ್ರೀಡೆ16 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ17 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ17 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ17 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ17 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ19 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ19 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending