Connect with us

ನೆಲದನಿ

ಬಡತನವ ಮೆಟ್ಟಿನಿಂತ ಯಕ್ಷಗಾನ ಭಾಗವತ: ಪರಮೇಶ್ವರ ನಾಯ್ಕ್ ಎಂಬ ಕಲಾದನಿ

Published

on

ಯಕ್ಷಗಾನ ಕಲಾವಿದ ಪರಮೇಶ್ವರ ನಾಯ್ಕ್

ಭಾರತದ ಬಹುತೇಕ ಜನಪದ ಕಲೆಗಳು ತಳ ಸಮುದಾಯಗಳಿಂದಲೆ ಜೀವಂತಿಕೆಯನ್ನು ಪಡೆದುಕೊಂಡಿವೆ. ಈಗಲೂ ಈ ಕಲೆಗಳು ತನ್ನ ಜೀವಂತಿಕೆಯನ್ನು ಪಡೆದುಕೊಂಡಿರುವುದು ಬಡತನದ ಬದುಕಿನಲ್ಲಿಯೇ. ಹೀಗಾಗಿ ಬಡತನ ಹಾಗೂ ಜನಪದ ಕಲೆಗಳಿಗೆ ನಿಕಟವಾದ ಸಂಬಂಧವೊಂದು ಬಿಡದ ನಂಟಾಗಿ ಬೆಳೆದುಕೊಂಡು ಬಂದಿದೆ. ಇಂತಹ ಜಾನಪದ ಕಲೆಗಳಲ್ಲಿ ಯಕ್ಷಗಾನವು ಒಂದು ಪ್ರಮುಖ ಕಲೆಯಾಗಿ ಬೆಳೆದುಕೊಂಡು ಬಂದಿದೆ. ಇಂತಹ ಯಕ್ಷಗಾನ ಕಲೆಯನ್ನು ತಮ್ಮ ಬದುಕಿನ ಭಾಗವಾಗಿ ಮುಂದುವರೆಸಿಕೊಂಡು ಬಂದಿರುವ ಕಲಾವಿದರಲ್ಲಿ ಪರಮೇಶ್ವರ ನಾಯ್ಕರು ಒಬ್ಬರಾಗಿದ್ದಾರೆ.

ಶ್ರೀಯುತ ಪರಮೆಶ್ವರ ನಾಯ್ಕರು ಅಕ್ಟೋಬರ್ 20, 1969 ರಲ್ಲಿ ಉತ್ತರ ಕನ್ನಡದ ಮಂಕೋಡ ಎಂಬಲ್ಲಿ ಜನ್ಮತಾಳಿದರು. ಶ್ರೀ ಕೆರಿಯ ನಾಯ್ಕ ಹಾಗೂ ಶ್ರೀಮತಿ ಗೌರಿಯವರ ಸುಪುತ್ರರಾಗಿದ್ದಾರೆ. ಇವರ ತಂದೆಗೆ ಒಂಭತ್ತು ಜನ ಮಕ್ಕಳು. ಇವರಲ್ಲಿ ನಾಲ್ಕು ಜನ ಗಂಡು ಹಾಗೂ ಐದು ಜನ ಹೆಣ್ಣು ಮಕ್ಕಳು. ಪರಮೇಶ್ವರ ನಾಯ್ಕ ಅವರ ತಂದೆವರು ತಮಗಿರುವ ಅಲ್ಪ ಪ್ರಮಾಣದ ಜಮೀನಿನಲ್ಲಿ ದುಡಿದು ಜೀವನ ಸಾಗಿಸುತ್ತಿದ್ದರು. ಇವರಿಗೆ ಆಶ್ರಯವಾಗಿ ತಾಯಿ ಗೌರಿ ಅವರು ಕೂಡ ಕೂಲಿ ಜೀವನ ನಡೆಸಿ ಮಕ್ಕಳನ್ನು ಸಾಕುತ್ತಿದ್ದರು. ಆದರೆ ಇದರಿಂದ ತಮ್ಮ ಮಕ್ಕಳನ್ನು ಸಾಕುವುದು ಕಷ್ಟವಾದಾಗ ತಮ್ಮ ಹಿರಿಯ ಮಗವಾದ ಪರಮೇಶ್ವರ ನಾಯ್ಕ ಅವರನ್ನು ಮೂರನೇ ತರಗತಿಗೆ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ, ಶ್ರೀಮಂತರ ಮನೆಯೊಂದರಲ್ಲಿ ಜೀತಕ್ಕೆ ನೇಮಿಸಲಾಗುತ್ತದೆ. ಮನೆಯಲ್ಲಿ ಸಾಕಷ್ಟು ಬಡತನದ ಕಾರಣ ತಮ್ಮ ವಿದ್ಯಾರ್ಥಿ ಜೀವನದಿಂದ ದೂರ ಸರಿದು ಧಣಿಗಳ ಮನೆಯಲ್ಲಿ ದನ ಕಾಯುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಈ ವೇಳೆಯಲ್ಲಿ ಪರಮೇಶ್ವರ ನಾಯ್ಕ ಅವರ ಅಂತರಾಳದಲ್ಲಿ ಯಕ್ಷಗಾನ ಕಲಾವಿದನೊಬ್ಬ ಮೊಳಕೆಯೊಡೆಯಲು ಪ್ರಾರಂಭಿಸುತ್ತಾನೆ. ದನ ಕರುಗಳನ್ನು ಮೇಯಿಸುವ ಕಾಯಕದ ಜೊತೆಯಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಆಸಕ್ತಿಯನ್ನು ಮೂಡಿಸಿಕೊಂಡ ಇವರು ರಾತ್ರಿಯ ವೇಳೆಯಲ್ಲಿ ತಮ್ಮ ಗ್ರಾಮದ ಸುತ್ತಮುತ್ತಲ ಊರುಗಳಲ್ಲಿ ಜರುಗುವಂತಹ ಯಕ್ಷಗಾನವನ್ನು ನೋಡುವುದಕ್ಕೆ ಹೋಗುತ್ತಿರುತ್ತಾರೆ. ಹೀಗೆ ಬೆಳೆದ ಹವ್ಯಾಸದಿಂದ ಸುಶ್ರಾವ್ಯವಾಗಿ ಭಾಗವಂತಿಕೆಯ ಹಾಡುಗಳನ್ನು ಪ್ರಯೋಗ ಮಾಡುತ್ತಾರೆ. ಇವರಲ್ಲಿ ಅಂತರ್ಗತವಾಗಿ ನೆಲೆಯೂರಿದ್ದ ಕಂಠಸಿರಿಯ ಮೂಲಕವಾಗಿ ಭಾಗವತಿಕೆ ಹಾಡುಗಳನ್ನು ಸುಂದರವಾಗಿ ಹಾಡುವುದಕ್ಕೆ ಪ್ರಯೋಗ ಮಾಡುತ್ತಾರೆ. ಪರಮೇಶ್ವರ ನಾಯ್ಕ ಅವರು ಯಾವೊಬ್ಬ ಗುರುವಿನ ಮಾರ್ಗದರ್ಶನವಿಲ್ಲದೆ ಸ್ವತಃ ಪರಿಶ್ರಮ ಹಾಗೂ ಆಸಕ್ತಯಿಂದಾಗಿ ಹಲವಾರು ಪದ್ಯಗಳನ್ನು ಕಂಠಪಾಠದ ಮೂಲಕವಾಗಿ ಕರಗತ ಮಾಡಿಕೊಳ್ಳುತ್ತಾರೆ. ಹೀಗೆ ಕಾಡುಹಕ್ಕಿಯಂತೆ ಸ್ವತಂತ್ರವಾಗಿ ಹಾಡು ಕಲಿತ ಪರಮೇಶ್ವರ ನಾಯ್ಕ ಅವರು ಸುಮಾರು ಹನ್ನೆರಡನೇ ವಯಸ್ಸಿಗೆ ಯಕ್ಷಗಾನ ಕ್ಷೇತ್ರದಲ್ಲಿ ತನ್ನದೆ ಆದ ವಿದ್ವತ್ತನ್ನು ಗಳಿಸಿಕೊಳ್ಳುತ್ತಾರೆ.

ಪರಮೇಶ್ವರ ನಾಯ್ಕ್ ಅವರು ಬಾಲ್ಯದಲ್ಲಿ ತಮ್ಮ ಮನೆಯಲ್ಲಿನ ಕೌಟುಂಬಿಕ ಬಡತನದ ಕಾರಣದಿಂದಾಗಿ ಸಿದ್ಧಾಪುರದ ಮಂಜುನಾಥ ಹೆಗಡೆಯವರ ಮನೆಯಲ್ಲಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. ಮಂಜುನಾಥ ಹೆಗಡೆಯವರು ಹವ್ಯಾಸಿ ಭಾಗವತರಾಗಿದ್ದು, ಸಾಕಷ್ಟು ಯಕ್ಷಗಾನಗಳಲ್ಲಿ ಪ್ರದರ್ಶನ ನೀಡಿದ್ದರು. ಇವರ ಒಡನಾಟದಿಂದ ಪರಮೇಶ್ವರ ನಾಯ್ಕ್ ಅವರು ಕೂಡ ಈ ಕಲೆಯ ಗೀಳನ್ನು ಮೈಗೂಡಿಸಿಕೊಂಡು, ಮಂಜುನಾಥ ಹೆಗಡೆಯವರೊಂದಿಗೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಹೀಗೆ ಯಕ್ಷಗಾನದ ಹುಚ್ಚು ಹತ್ತಿಸಿಕೊಂಡ ಪರಮೇಶ್ವರ ನಾಯ್ಕ್ ಅವರು ಪದ್ಯಗಳನ್ನು ಕಂಠಪಾಠ ಮಾಡಿಕೊಂಡು ಹಾಡುವುದಕ್ಕೆ ಪ್ರಾರಂಭಿಸಿದರು. ಮಂಜುನಾಥ ಹೆಗಡೆಯವರ ತಂದೆಯವರಾದ ತಿಮ್ಮಪ್ಪ ಹೆಗಡೆಯವರು ಕೂಡ ಹೆಸರಾಂತ ಭಾಗವತರಾಗಿದ್ದು ಹಲವಾರು ಯಕ್ಷಗಾನ ಪ್ರಸಂಗಗಳನ್ನು ಬರೆದಿದ್ದರು. ಇಂತಹ ವಾತಾವರಣದಲ್ಲಿ ಬೆಳೆದ ಪರಮೇಶ್ವರ ನಾಯ್ಕ್ ಅವರಿಗೆ ಭಾಗವತಿಕೆಯ ಪ್ರೇರಣೆ ಪ್ರಭಾವವು ಈ ದಿನಗಳಲ್ಲಿ ಉಂಟಾಯಿತು. ಈ ಸಂದರ್ಭದಲ್ಲಿ ಪರಮೇಶ್ವರ ನಾಯ್ಕ್ ಅವರಿಗೆ ಕೇವಲ ಹನ್ನೆರಡು ವರ್ಷ ವಯಸ್ಸಾಗಿತ್ತು. ಕೌಟುಂಬಿಕ ಬಡತನವು ಇವರನ್ನು ಶಾಲಾ ಶಿಕ್ಷಣದಿಂದ ವಂಚಿತಗೊಳಿಸಿದರು ಸಹ, ಕಲಾ ಶಿಕ್ಷಣವು ಇವರ ಬದುಕಿಗೆ ವರವಾಗಿ ಪರಿಣಮಿಸಿತು. ಈ ಕಲೆಯೇ ಮುಂದೆ ಇವರ ಬಡತನದ ನಿವಾರಣೆಯ ಪ್ರಮುಖ ಅಸ್ತ್ರವಾಗಿ ಸಹಯಾಸ್ತವನ್ನು ನೀಡಿತು ಎಂದರೆ ತಪ್ಪಾಗಲಾರದು.

ಪರಮೇಶ್ವರ ನಾಯ್ಕ್‍ರವರು ಅಲ್ಲಿ ಇಲ್ಲಿ ನಡೆಯುವ ಯಕ್ಷಗಾನದ ಪ್ರದರ್ಶನಗಳನ್ನು ನೋಡಿ, ಕೇಳಿಯೇ ಹಲವಾರು ಪ್ರಸಂಗಗಳನ್ನು ಕಂಠಪಾಠ ಮಾಡಿಕೊಂಡಿದ್ದರು. ಚಿಕ್ಕವರಿದ್ದಾಗಲೇ ಇವರಲ್ಲಿ ಒಡಮೂಡಿರುವ ಕಂಠಸಿರಿಯನ್ನು ಗಮನಿಸಿದ ಆರ್ತಿಕಟ್ಟದ ಗಜಾನನ ಸಮಿತಿಯವರು ಇವರ ಕಂಠವನ್ನು ಗಮನಿಸಿ, ಇವರಿಂದ ಯಕ್ಷಗಾನ ಪ್ರಸಂಗಗಳನ್ನು ಹಾಡಿಸಿ, ಧ್ವನಿ ಮುದ್ರಿಕೆಯಲ್ಲಿ ದಾಖಲಿಸಿದರು. ಈ ಧ್ವನಿ ಮುದ್ರಿಕೆಯನ್ನು ಅನಂತರಾಯರು ಮತ್ತು ಶ್ರೀಕಾಂತರಾಯರು ಸೇರಿಕೊಂಡು ಉಪ್ಪರಿಗೆ ಮೇಲೆ ಹೋಗಿ ಹೆಸರಾಂತ ಯಕ್ಷಗಾನ ದಿಗ್ಗಜರಾದ ಕಾಳಿಂಗ ನಾವಡರಿಗೆ ಇವರ ಕಂಠವನ್ನು ಪರಿಚಯಿಸಿದರು. ಪರಮೇಶ್ವರ ನಾಯ್ಕ್ ಅವರ ಕಂಠಸಿರಿಯನ್ನು ಗಮನಿಸಿದ ಕಾಳಿಂಗ ನಾವಡರು ಇವರನ್ನು ಮೆಚ್ಚಿಕೊಂಡರು. ಆಗ ಪರಮೇಶ್ವರ ನಾಯ್ಕ್ ಅವರು ಓದಿರುವುದು ಕೇಲವ ಮೂರನೇ ತರಗತಿ ಮಾತ್ರ, ಆದರೆ ಯಕ್ಷಗಾನದ ಮೊದಲ ವೇಷ ಎಂದರೆ ಅದು ಭಾಗವತಿಕೆ. ಇದನ್ನು ನಿಭಾಯಿಸಲಿಕ್ಕೆ ಹತ್ತನೇ ತರಗತಿಯಾದರೂ ಓದಿದ್ದರೆ ಒಳ್ಳೆಯದು ಎಂಬುದಾಗಿ ಮಾತನಾಡಿಕೊಂಡರು. ಆದರೆ ಬಾಲ ಗೋಪಾಲದಿಂದ ಒಡ್ಡೋಲಗದವರೆಗೆ ನಿರ್ವಹಿಸಲಿಕ್ಕೆ ತೊಂದರೆ ಇಲ್ಲ ಎಂಬುದಾಗಿ ತೀರ್ಮಾನಿಸಿದರು. ನಂತರದಲ್ಲಿ ಇವರ ಕಂಠ ಮತ್ತು ಇವರಿಗಿರುವ ಆಸಕ್ತಿ, ಉತ್ಸಾಹವನ್ನು ಗಮನಿಸಿ ತಮ್ಮೊಂದಿಗೆ ಮಂಡಳಿಗೆ ಬರುವುದಾಗಿ ಕೇಳಿಕೊಂಡರು. ಆಗಿನ ಸಂದರ್ಭದಲ್ಲಿ ಜೀವನ ನಡೆಸುವುದು ಕಷ್ಟಕರವಾಗಿ ಕೆಲಸಕ್ಕೆ ಸೇರಿಕೊಂಡ ಪರಮೇಶ್ವರ ನಾಯ್ಕ್ ಅವರಿಗೆ ಕೆಲಸದ ಮನೆಯನ್ನು ತೊರೆದು ಬರುವಷ್ಟು ಶಕ್ತಿ ಮತ್ತು ಸಾಮಥ್ರ್ಯವಿರಲಿಲ್ಲ. ಆದ ಕಾರಣದಿಂದಾಗಿ ತಮ್ಮ ಕಷ್ಟವನ್ನು ಹೇಳಿಕೊಂಡು ವಿನಯನಾಗಿಯೇ ಇದನ್ನು ನಿರಾಕರಿಸಿದರು. ಆದರೂ ಕಲೆಯ ಬಗೆಗಿನ ಆಸಕ್ತಿ ಹಾಗೂ ಉತ್ಸಾಹ ಮಾತ್ರ ದಿನದಿಂದ ದಿನಕ್ಕೆ ವೃದ್ಧಿಸುತ್ತಲೆ ಇತ್ತು. ಇವರ ಕಂಠ ದಿನದಿಂದ ದಿನಕ್ಕೆ ಪಕ್ವಗೊಳ್ಳುತ್ತ ಸಾಗಿತು.

ಪರಮೇಶ್ವರ ನಾಯ್ಕ್ ಅವರು ತಮ್ಮ ಬಡತನದ ಬದುಕಿನ ನಡುವೆಯೇ ಹಲವಾರು ಯಕ್ಷಗಾನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕವಾಗಿ ಇದರ ಬಗೆಗಿನ ಕಾಳಜಿಯನ್ನು, ತನ್ನೊಳಗಿನ ಕಲೆಯ ಹವ್ಯಾಸವನ್ನು ಹಾಗೆ ಮುಂದುವರೆಸಿಕೊಂಡು ಬಂದರು. ದನ ಕರುಗಳನ್ನು ಮೇಯಿಸುತ್ತಲೇ ಯಕ್ಷಗಾನ ಪದ್ಯಗಳನ್ನು ಹಾಡುತ್ತ ತಮ್ಮ ಜೀವನವನ್ನು ನಿರ್ವಹಿಸುತ್ತ ಬಂದರು. ಹೀಗೆ ದನಗಳನ್ನು ಕಾಯುತ್ತಿರುವ ಸಂದರ್ಭದಲ್ಲಿ ಕೃಷ್ಣಗೌಡ್ರು ಮಾದ್ಲುಮನೆ ಎಂಬ ಹವ್ಯಾಸಿ ಕಲಾವಿದರ ಜೊತೆಗೂಡಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕವಾಗಿ ಹಾಡುಗಾರಿಕೆಯನ್ನು ಗಟ್ಟಿಗೊಳಿಸಿಕೊಂಡರು. ನಂತರದಲ್ಲಿ ತಮ್ಮಲ್ಲಿ ಒಡಮೂಡುತ್ತಿರುವ ಕಲಾಸಕ್ತಿಯಿಂದಾಗಿ ಕೃಷ್ಣಜಿ ಬೇಡ್ಕಣೆ ಎಂಬುವವರು ಯಕ್ಷಗಾನ ತರಗತಿಗಳನ್ನು ನಡೆಸುತ್ತಿದ್ದರು. ಬಿಡುವಿನ ಸಮಯದಲ್ಲಿ ಇವರ ಬಳಿ ತೆರಳಿ ತರಬೇತಿಯನ್ನು ಪಡೆಯುವ ಮೂಲಕವಾಗಿ, ಇವರ ಬಳಿಯಲ್ಲಿಯೇ ಯಕ್ಷದೀಕ್ಷೆಯನ್ನು ಪಡೆದು, ಯಕ್ಷಗಾನ ಬದುಕಿನತ್ತ ಮುಖ ಮಾಡಿದರು. ಹೀಗೆ ಸುಮಾರು ದಿನಗಳ ಕಾಲ ಇವರ ತರಬೇತಿ ಶಾಲೆಯಲ್ಲಿ ಹವ್ಯಾಸ ನಡೆಸಿ, ಹಲವಾರು ತೆರನಾಗಿ ಕೌಶಲ್ಯವನ್ನು ಕರಗತ ಮಾಡಿಕೊಂಡರು. ಹೀಗೆ ಯಕ್ಷದೀಕ್ಷೆಯನ್ನು ಪಡೆದು, ಸರಾಗವಾಗಿ ಹಾಡುವುದನ್ನು ಕರಗತ ಮಾಡಿಕೊಂಡಿದ್ದ ಪರಮೇಶ್ವರ ನಾಯ್ಕ್ ಅವರು ಒಂದು ಕಡೆ ಅವಕಾಶಕ್ಕಾಗಿ ಕಾಯುತ್ತಿರುವ ಸಂದರ್ಭದಲ್ಲಿ ತಮ್ಮ ಸ್ನೇಹಿತರಾದ ಮಾದ್ಲುಮನೆ ಭಾಸ್ಕರ್‍ಗೌಡ ಎಂಬುವರೊಂದಿಗೆ ಒಮ್ಮೆ ಶಿರಸಿಯ ಮಾರಿಕಾಂಬ ಜಾತ್ರೆಗೆ ಆಗಮಿಸಿದರು. ಜಾತ್ರೆಯಲ್ಲಿ ಬಿಡಾರ ಹೂಡಿದ್ದ ಯಕ್ಷಗಾನ ಮಂಡಳಿಯತ್ತ ಇವರ ಗಮನವು ಕೇಂದ್ರಿಕೃತವಾಯಿತು. ಹೇಗಾದರೂ ಮಾಡಿ ಇವರ ಸ್ನೇಹ ಹಾಗೂ ವಿಶ್ವಾಸ ಗಳಿಸುವ ಮೂಲಕವಾಗಿ ಇವರ ಕಲಾ ಮಂಡಳಿಯಲ್ಲಿ ಅವಕಾಶ ಗಳಿಸಿಕೊಳ್ಳಬೇಕೆಂಬ ಹಂಬಲವೊಂದು ಇವರಲ್ಲಿ ಮೊಳಕೆಯೊಡೆಯಿತು. ಇದರಿಂದಾಗಿ ಈ ಮಂಡಳಿಯತ್ತ ನಡೆದರು. ಇಲ್ಲಿಯೂ ಕೂಡ ಪರಮೇಶ್ವರ ನಾಯ್ಕರು ತಮ್ಮ ಕಂಠಸಿರಿಯ ಮೂಲಕ ಕಂಪನಿ ಮಾಲಿಕರ ಜೀವನಶೆಟ್ಟಿಯವರ ಮನಗೆದ್ದು ತಮ್ಮ ಕಲಾ ಸೇವೆಯನ್ನು ಮುಂದುವರೆಸಿಕೊಂಡು ಬಂದರು.
ಶ್ರೀಯುತ ಪರಮೇಶ್ವರ ನಾಯ್ಕ್ ಅವರು ತಮ್ಮ ಬಾಲ್ಯದ ಹನ್ನೆರಡನೇ ವಯಸ್ಸಿನಿಂದಲೆ ಯಕ್ಷಗಾನ ಕಲೆಯ ಗೀಳನ್ನು ಮೈಗೂಡಿಸಿಕೊಂಡು ಬಂದವರು. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ತಮ್ಮ ಸೇವೆಯನ್ನು ಯಕ್ಷಗಾನ ಕ್ಷೇತ್ರಕ್ಕೆ ಸಲ್ಲಿಸುತ್ತಿದ್ದಾರೆ. ಇವರ ಈ ಸೇವೆಯನ್ನು ಗಮನಿಸಿ ನಾಡಿನ ವಿವಿಧ ಭಾಗಗಳಲ್ಲಿ ಹಲವಾರು ಸನ್ಮಾನ ಹಾಗೂ ಗೌರವಗಳು ಇವರಿಗೆ ಲಭಿಸಿವೆ. ಇವರ ಸೇವೆಯನ್ನು ಗಮನಿಸಿ ಕಾನಗೋಡು, ಹಳ್ಳಿಬೈಲು, ಕಕ್ಕುಂಜೆ ಹಾಗೂ ವಿವಿಧೆಡೆಗಳಲ್ಲಿ ಹಲವಾರು ಸಂಘ ಸಂಸ್ಥೆಗಳು ಗೌರವಗಳು ಲಭಿಸಿವೆ. ಹಾಗೆಯೇ ಕರಾವಳಿ ಭಾಗದ ಹೆಸರಾಂತ ‘ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್’ ವತಿಯಿಂದಲೂ ಇವರಿಗೆ ಗೌರವ ಸನ್ಮಾನಗಳು ಲಭಿಸಿವೆ. ಹಾಗೆಯೇ ಸಿದ್ಧಾಪುರ ತಾಲ್ಲೂಕಿನ ತರಳಿಮಠದ ವತಿಯಿಂದ ‘ತರಳಿಮಠ’ ಪ್ರಶಸ್ತಿಯು ಶ್ರೀಯುತ ಪರಮೇಶ್ವರ ನಾಯ್ಕ್ ಅವರಿಗೆ ಲಭಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ

ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ’; ವಿದ್ಯಾರ್ಥಿಗಳ ಕಲರವ

Published

on

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ (ಮಾರ್ಚ್-22) ‘ಜಾನಪದ ಉತ್ಸವ – 2025″ ಅದ್ದೂರಿಯಾಗಿ ನಡೆಯಿತು.

ಜಾನಪದ ತಜ್ಞ, ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ, ಅವರು ಉತ್ಸವಕ್ಕೆ ಚಾಲನೆ ನೀಡಿದರು.

ಎತ್ತಿನ ಬಂಡಿಯಲ್ಲಿ ಅಧ್ಯಾಪಕರು, ಅತಿಥಿಗಳ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನೀರು ತುಂಬಿದ ಪೂರ್ಣ ಕುಂಭಗಳನ್ನು ಹೊತ್ತು ಅತಿಥಿಗಳನ್ನು ಸ್ವಾಗತಿಸಿದರು.

ಅಂದು ಕಾಲೇಜಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ವರ್ಷದಲ್ಲಿ ಬರುವ ಯುಗಾದಿ, ಸಂಕ್ರಾಂತಿ, ಶಿವರಾತ್ರಿ, ಕ್ರಿಸ್ ಮಸ್, ರಂಜಾನ್, ದಸರಾ, ಭೂಮಿ ಹುಣ್ಣಿಮೆ, ರಾಶಿ ಪೂಜೆ ಸೇರಿದಂತೆ, ಬಳೆಗಾರ, ಕಣಿಹೇಳುವ, ಚೌಕಾಬಾರಾ, ಗುರುಕುಲ, ಆಯುರ್ವೇದ, ಗೋ ಪೂಜೆ ಎಲ್ಲವೂ ಜಾನಪದ ಸಂಸ್ಕೃತಿಯನ್ನು ಪುನರ್ ನಿರ್ಮಾಣಮಾಡಿದ್ದವು.

ಉತ್ಸವದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು, ಪಂಚೆ, ಅಂಗಿ, ಕುರ್ತಾ, ಲಂಗಾದಾವಣಿ, ಸೀರೆ ಉಟ್ಟು ,ಬುರ್ಕಾ, ತೊಟ್ಟು ಸಡಗರ ಸಂಭ್ರಮದಿಂದ ಕುಣಿದಾಡಿದರು.

ರಾಮನವಮಿಯ ಬೆಲ್ಲದ ಪಾನಕ – ಕೋಸಂಬರಿ, ಕ್ರಿಸ್ಮಸ್ ನ ಕೇಕ್, ರಂಜಾನ್ ಹಬ್ಬದ ಇಪ್ತಾರ್ ಕೂಟದ ಫಲಾಹಾರ, ಗಣಪತಿ ಹಬ್ಬದ ಕಡುಬು, ಯುಗಾದಿಯ ಹೋಳಿಗೆ, ಭೂಮಿ‌ಪೂಜೆಯ ಪಾಯಸ ಹೀಗೆ ವಿವಿಧ ಬಗೆಯ ತಿಂಡಿತಿನಿಸುಗಳು 30 ಜಿಲ್ಲೆಗಳ ವಿಶೇಷ ಖಾಧ್ಯಗಳು ಹಬ್ಬದ ಸಡಗರವನ್ನು ಇಮ್ಮಡಿಗೊಳಿಸಿದವು.

ವಸ್ತು ಪ್ರದರ್ಶನ

ಸುಮಾರು ವರ್ಷಗಳ ಹಿಂದೆ ಬಳಕೆಯಲ್ಲಿದ್ದ ಬೀಸು ಕಲ್ಲು, ಒನಕೆ, ಸೌದೆ ಒಲೆ, ಕೊಡಲಿ, ಮಚ್ಚು, ಬರ್ಜಿ, ಚನ್ನೆಮಣೆ, ಕೀಲುಗೊಂಬೆ, ಪಾರಂಪರಿಕ ಔಷಧಿ, ಕುಡುಗೋಲು, ಬಂಡಿ,ನಾಣ್ಯಗಳು,ಸೇರು, ಒಳಕಲ್ಲು, ಶಹನಾಯಿ,ಮಜ್ಜಿಗೆಯ ಕಡೆಗೋಲು, ತಾಳ, ಹಾರ್ಮೊನಿಯಂ, ಗಂಡುಕೊಡಲಿ,ಶಾವಿಗೆ ಒತ್ತು,ಹುತ್ತದ ಮಾದರಿ,ವಿಭಿನ್ನ ಬಗೆಯ ರಂಗವಲ್ಲಿ, ವಿವಿಧ ಧಾನ್ಯದ ರಾಶಿ,ಕಳಸ, ದಸರಾ ಗೊಂಬೆಗಳು, ನವರಾತ್ರಿಯ ಮಾತೃದೇವತೆ, ಕುರಾನ್ ಪ್ರತಿ, ಜಾನಮಾಜ್,ಕ್ರಿಸ್ತನ ಜನನದ ಗೋದರಿ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಮಾದರಿ ಚಿತ್ರಗಳು ವಸ್ತುಪ್ರದರ್ಶನದಲ್ಲಿದ್ದವು.

ದೇಸೀ ಆಟಗಳು

ದೇಸೀ ಆಟಗಳಾದ ಹಗ್ಗ ಜಗ್ಗಾಟ, ಲಗೋರಿ, ಬುಗುರಿ, ಕುಂಟೋಬಿಲ್ಲೆ ಹಾಗೂ ಜನಪದ ನೃತ್ಯ-ಹಾಡು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಂತಸದಿಂದ ಭಾಗವಹಿಸಿದರು.

ಉತ್ಸವದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಬಿ.ಜಿ.ಅಮೃತೇಶ್ವರ ಅವರು ವಹಿಸಿಕೊಂಡಿದ್ದರು. ಹಾಗೂ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಪಕ ಹಾಗೂ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಷ್ಮುಖಪ್ಪ ಕೆ.ಹೆಚ್, ಐಕ್ಯುಎಸಿ ಸಂಚಾಲಕ ಪ್ರೊ.ವಿಜಯ್ ಕುಮಾರ್, ಉತ್ಸವದ ಕ್ರೀಡೆಗಳ ಆಯೋಜಕ ಹಾಗೂ ದೈಹಿಕ ನಿರ್ದೇಶಕರಾದ ಕಲ್ಲೇಶಪ್ಪ ಎಸ್.ಜಿ ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕರು ಹಾಗೂ ಬೋಧಕೇತರ ಸಿಬಂದಿಗಳು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

ಜಾನಪದ ಕಲೆ, ಸಂಸ್ಕೃತಿಯು ಹಿಂದಿನಿಂದಲೂ ಮನುಷ್ಯ ಜೀವನದೊಂದಿಗೆ ಸಂಬಂಧ ಹೊಂದಿದ್ದು ಇಂದಿನ ಪೀಳಿಗೆಯ ಮಕ್ಕಳು ಜಾನಪದ ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ. ಜನಪದ ಪರಂಪರೆಯ ಪ್ರತೀಕವಾಗಿ ‘ಜನಪದ ಉತ್ಸವ – 2025’ ನಮ್ಮ‌ಸಂಸ್ಕೃತಿ ನಮ್ಮ ಹೆಮ್ಮೆ ಹೆಚ್ಚು ಅರ್ಥ ಪೂರ್ಣವಾಗಿ ಮೂಡಿ ಬಂದಿದೆ.
| ಜಾನಪದ ತಜ್ಞ, ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ

ನಮ್ಮ ದೇಶಿ ಸಂಸ್ಕೃತಿಯನ್ನು ಸಂರಕ್ಷಿಸಿ, ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧವನ್ನು ತಲೆಮಾರುಗಳಿಂದ ಹೊಂದಿರುವ, ಆಯಾ ಪ್ರಾದೇಶಿಕ ಗ್ರಾಮೀಣ ವ್ಯಾಪ್ತಿಯಲ್ಲಿ ಆಚರಣೆಯಲ್ಲಿರುವ ಈ ಮೌಖಿಕ ಪರಂಪರೆಯ ಜಾನಪದ ಸಂಸ್ಕೃತಿಯ ಸೊಗಡುಗಳು ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸುವ ಒಂದು ಅತ್ಯುತ್ತಮ ಪ್ರಯತ್ನ ‘ಜಾನಪದ ‌ಉತ್ಸವ’-2025.
| ಡಾ.ಬಿ‌.ಜಿ.ಅಮೃತೇಶ್ವರ, ಪ್ರಾಂಶುಪಾಲರು

ಜನಪದರ ಬದುಕು, ಆಧುನಿಕ ಜಾಗತೀಕರಣದ ಕಾಲದಲ್ಲಿ ಹೆಚ್ಚು ಪ್ರಸ್ತುತವಾಗುತ್ತಿದೆ ಅದರ ಸದಾಶಯವನ್ನು ಕಾಲೇಜು ಶಿಕ್ಷಣ ಇಲಾಖೆಯ ಸುತ್ತೋಲೆಯಂತೆ ನಮ್ಮ ಕಾಲೇಜಿನ ವಿಧ್ಯಾರ್ಥಿಗಳು ಎಲ್ಲಾ ಅಧ್ಯಾಪಕರ ಸಹಾಯದಿಂದ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ ಅವರಿಗೆ ಅಭಿನಂದನೆಗಳು.
| ಷಣ್ಮುಖಪ್ಪ ಕೆ ಎಚ್ ,ಕಾರ್ಯಕ್ರಮದ ನಿರ್ದೇಶಕರು, ಸಂಚಾಲಕರು,ಸಾಂಸ್ಕೃತಿಕ ವೇದಿಕೆ

Continue Reading

ಅಂತರಂಗ

ಮಹಿಳಾ ದಿನಾಚರಣೆ | ಸಾಧನೆಯ ಸುಗಂಧ, ಪ್ರೇರಣೆಯ ಬೆಳಕು

Published

on

  • ಡಾ. ವೆಂಕಟೇಶ ಬಾಬು ಎಸ್, ಸಹ ಪ್ರಾಧ್ಯಾಪಕರು, ದಾವಣಗೆರೆ

ಇಂದು ಮಹಿಳಾ ದಿನಾಚರಣೆ ಪ್ರಯುಕ್ತ ಎಲ್ಲಾ ಮಹಿಳೆಯರಿಗೆ ಶುಭಾಷಯಗಳು

ಪ್ರತಿಯೊಂದು ಮಹಿಳೆ ತನ್ನ ಜೀವನದಲ್ಲಿ ವಿವಿಧ ಹಂತಗಳನ್ನು ದಾಟುತ್ತಾ, ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿ ಹೊಂದುವ ಪ್ರತಿರೂಪವಾಗಿರುತ್ತಾರೆ. ವಿಶ್ವ ಮಹಿಳಾ ದಿನವನ್ನು ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ, ಇದು ಮಹಿಳೆಯರ ಹಕ್ಕುಗಳು, ಸಾಧನೆಗಳು ಮತ್ತು ಅವರ ಜಗತ್ತಿನ ಮೇಲೆ ಬೀರಿದ ಪ್ರಭಾವವನ್ನು ಗೌರವಿಸುವ ಒಂದು ಅದ್ಭುತ ಅವಕಾಶ.

ಮಹಿಳೆಯರ ಬದುಕು ಕೇವಲ ಕುಟುಂಬದ ಕೇಂದ್ರದಲ್ಲಿಯೇ ಸೀಮಿತವಾಗಿಲ್ಲ; ಅವರು ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲೂ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಅಮ್ಮನಾಗಿ, ಪತ್ನಿಯಾಗಿ, ಮಗುವಾಗಿ, ಸಂಸ್ಥಾಪಕಿಯಾಗಿ, ನಾಯಕಿಯಾಗಿ, ವೈಜ್ಞಾನಿಕರಾಗಿ, ಕ್ರೀಡಾಪಟುವಾಗಿ – ಎಲ್ಲಾ ಪಾತ್ರಗಳಲ್ಲೂ ಮಹಿಳೆಯರು ತಮ್ಮ ಅದ್ಭುತ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ.

ಈಗ ಮಹಿಳೆಯರು ತಮ್ಮ ಇಚ್ಛಾಶಕ್ತಿಯೊಂದಿಗೆ ಮತ್ತು ಶಿಕ್ಷಣದ ಹಾದಿಯ ಮೂಲಕ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಇಂದು ಕಲ್ಪನಾ ಚಾವ್ಲಾ, ಮೇರೀ ಕೋಮ್, ಸುಧಾ ಮುರ್ತಿ, ಕಿರಣ್ ಮಜುಂದಾರ್ ಶಾ, ಫಾಲ್ಗುಣಿ ನಾಯರ್ ಮುಂತಾದ ಅನೇಕ ಮಹಿಳೆಯರು ತಮ್ಮ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡುತ್ತಿದ್ದಾರೆ.

ಮಹಿಳಾ ದಿನಾಚರಣೆ – ಇತಿಹಾಸ ಮತ್ತು ಹಿನ್ನೆಲೆ

ಮಹಿಳಾ ದಿನಾಚರಣೆ (International Women’s Day – IWD) ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ. ಇದು ಮಹಿಳೆಯರ ಹಕ್ಕುಗಳು, ಸಶಕ್ತೀಕರಣ, ಸಾಧನೆಗಳು ಮತ್ತು ಲಿಂಗ ಸಮಾನತೆಯ ಪ್ರಗತಿ ಕುರಿತು ಜಾಗೃತಿಯನ್ನು ಮೂಡಿಸುವ ಮಹತ್ವದ ದಿನ.

ಮಹಿಳಾ ದಿನಾಚರಣೆಯ ಇತಿಹಾಸ

ಮಹಿಳಾ ದಿನಾಚರಣೆಯ ಮೂಲವು 1900ರ ದಶಕದ ಪ್ರಾರಂಭದಲ್ಲಿ ಕೈಗೆತ್ತಿಕೊಳ್ಳಲಾದ ಮಹಿಳಾ ಹಕ್ಕುಗಳ ಹೋರಾಟಕ್ಕೆ ಸರಿಹೊಂದಿದೆ. ಈ ದಿನವನ್ನು ಆಚರಿಸಲು ಪ್ರೇರಣೆ ನೀಡಿದ ಪ್ರಮುಖ ಘಟನೆಗಳು ಹೀಗಿವೆ:

1. 1908 – ಮಹಿಳಾ ಹಕ್ಕುಗಳ ಹೋರಾಟ:

ಅಮೇರಿಕಾದ ನ್ಯೂಯಾರ್ಕ್ ನಗರದಲ್ಲಿ ಸಾವಿರಾರು ಮಹಿಳಾ ಕಾರ್ಮಿಕರು ಕಡಿಮೆ ಕೆಲಸದ ಘಂಟೆಗಳು, ಉತ್ತಮ ಸಂಬಳ ಮತ್ತು ಮತದಾನದ ಹಕ್ಕುಕ್ಕಾಗಿ ಪ್ರತಿಭಟನೆ ನಡೆಸಿದರು.

2. 1909 – ಮೊದಲ ಮಹಿಳಾ ದಿನಾಚರಣೆ:

ಫೆಬ್ರವರಿ 28, 1909 ರಂದು ಅಮೆರಿಕಾದ ಸೋಶಲಿಸ್ಟ್ ಪಾರ್ಟಿ ದೇಶದಾದ್ಯಂತ ಮಹಿಳಾ ದಿನವನ್ನು ಆಚರಿಸಿತು.

3. 1910 – ಅಂತಾರಾಷ್ಟ್ರೀಯ ಹೋರಾಟ:

ಡೆನ್ಮಾರ್ಕ್‌ನ ಕೊಪನ್‌ಹೇಗನ್ ನಲ್ಲಿ ನಡೆದ ಸೋಶಲಿಸ್ಟ್ ವುಮೆನ್ಸ್ ಕಾನ್ಫರೆನ್ಸ್ ನಲ್ಲಿ ಜರ್ಮನಿಯ ಕ್ಲಾರಾ ಜೆಟ್ಕಿನ್ ಅವರು ಪ್ರಪಂಚದಾದ್ಯಂತ ಮಹಿಳಾ ದಿನ ಆಚರಿಸುವ ಸಲಹೆ ನೀಡಿದರು.

4. 1911 – ಪ್ರಥಮ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ:

ಮೊದಲ ಬಾರಿ ಆಸ್ಟ್ರಿಯಾ, ಡೆನ್ಮಾರ್ಕ್, ಜರ್ಮನಿ ಮತ್ತು ಸ್ವಿಟ್ಜರ್ಲೆಂಡ್ ದೇಶಗಳಲ್ಲಿ ಮಹಿಳಾ ದಿನವನ್ನು ಮಾರ್ಚ್ 19ರಂದು ಆಚರಿಸಲಾಯಿತು.

5. 1913 – ಮಾರ್ಚ್ 8ಕ್ಕೆ ದಿನಾಂಕ ಬದಲಾವಣೆ:

1913ರಿಂದ ಮಾರ್ಚ್ 8ನೇ ತಾರೀಖನ್ನು ಅಧಿಕೃತವಾಗಿ ಮಹಿಳಾ ದಿನಾಚರಣೆಗೆ ಮೀಸಲಾಗಿಸಲಾಯಿತು.

6. 1975 – ವಿಶ್ವ ಮಹಿಳಾ ವರ್ಷ:

UNO1975ನೇ ವರ್ಷವನ್ನು “ಅಂತರಾಷ್ಟ್ರೀಯ ಮಹಿಳಾ ವರ್ಷ” ಎಂದು ಘೋಷಿಸಿ, ಮಹಿಳಾ ದಿನವನ್ನು ಅಧಿಕೃತವಾಗಿ ಅಂಗೀಕರಿಸಿತು

7. 2011 – 100ನೇ ವಾರ್ಷಿಕೋತ್ಸವ:

2011ರಲ್ಲಿ ಮಹಿಳಾ ದಿನಾಚರಣೆ ಶತಮಾನೋತ್ಸವವನ್ನು ಪೂರೈಸಿತು.

ಮಹಿಳಾ ದಿನಾಚರಣೆಯ ಉದ್ದೇಶ

ಮಹಿಳಾ ದಿನವನ್ನು ಆಚರಿಸುವ ಪ್ರಮುಖ ಉದ್ದೇಶಗಳು:
✔ ಮಹಿಳಾ ಸಮಾನತೆ ಮತ್ತು ಹಕ್ಕುಗಳನ್ನು ಬಲಪಡಿಸುವುದು.
✔ ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವ ನೀಡುವುದು.
✔ ಅವರ ಸಮಸ್ಯೆಗಳನ್ನು ಅರಿತು, ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದು.
✔ ಮಹಿಳಾ ಶಕ್ತಿ ಮತ್ತು ಸ್ವಾವಲಂಬನೆಯ ಕುರಿತು ಜಾಗೃತಿಯನ್ನು ಹರಡುವುದು.

ಮಹಿಳಾ ದಿನಾಚರಣೆ – ಇಂದಿನ ಪ್ರಸ್ತುತತೆ

ಇಂದಿನ ಹೊತ್ತಿನಲ್ಲಿ, ಮಹಿಳೆಯರು ಶಿಕ್ಷಣ, ಉದ್ಯಮ, ರಾಜಕೀಯ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನ, ಸೇವಾ ಕ್ಷೇತ್ರ ಮತ್ತು ಉದ್ಯಮಶೀಲತೆ ಎಲ್ಲೆಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಮಹಿಳಾ ದಿನವು “Gender Equality – ಲಿಂಗ ಸಮಾನತೆ”, “Break the Bias – ಲಿಂಗತಾತ್ವಿಕ ಭೇದಭಾವವನ್ನು ಕಳಚುವುದು”, “DigitALL: Innovation and technology for gender equality” ಮುಂತಾದ ವಿಶೇಷ ಥೀಮ್‌ಗಳೊಂದಿಗೆ ಪ್ರತಿವರ್ಷ ಜಾಗೃತಿಯನ್ನು ಮೂಡಿಸುತ್ತದೆ.

ಮಹಿಳೆಯರು ಬದುಕಿನ ಉತ್ಸಾಹ

ಮಹಿಳೆಯರು ತಮ್ಮ ಕುಟುಂಬ, ಸಮಾಜ ಮತ್ತು ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರಲ್ಲಿರುವ ಹೃದಯಸ್ಪರ್ಶಿ ಭಾವನೆ, ತ್ಯಾಗ, ಶ್ರಮ ಹಾಗೂ ಪ್ರೀತಿ ಅವರ ಬದುಕಿನ ಹಾದಿಯನ್ನು ಮಾದರಿಯಾಗಿ ಮಾಡುತ್ತದೆ. ಶಿಕ್ಷಣ, ಉದ್ಯೋಗ, ರಾಜಕೀಯ, ಕಲೆ, ಕ್ರೀಡೆ, ವಿಜ್ಞಾನ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ.

ಅನೇಕ ಮಹಿಳೆಯರು ಸಂಕಷ್ಟಗಳನ್ನು ಎದುರಿಸುತ್ತಾ, ಸಾಧನೆಗೆ ಹೊಸ ಪರಿಮಾಣ ನೀಡಿದ ಉದಾಹರಣೆಗಳಿವೆ. ಐದು ದಶಕಗಳ ಹಿಂದೆಯೂ ಮಹಿಳೆಯರು ಮನೆಯಲ್ಲಿ ಸೀಮಿತವಾಗಿದ್ದರೆ, ಇಂದು ಅವರು ಅಂತರಿಕ್ಷ ಯಾತ್ರೆ, ವ್ಯವಹಾರ ನಿರ್ವಹಣೆ, ಕಾನೂನು, ತಂತ್ರಜ್ಞಾನ, ಆಡಳಿತ ಮತ್ತು ರಾಜಕೀಯದಲ್ಲಿ ಮುಂಚೂಣಿಯಲ್ಲಿದ್ದಾರೆ.

ಸಾಧನೆಗಳ ಬೆಳಕು

1. ಶಿಕ್ಷಣ ಮತ್ತು ಸಶಕ್ತೀಕರಣ:

ಜಗತ್ತಿನ ಅನೇಕ ದೇಶಗಳಲ್ಲಿ ಈಗ ಮಹಿಳಿಯರಿಗೆ ಶಿಕ್ಷಣ ಹಕ್ಕುಗಳನ್ನು ಒದಗಿಸಲಾಗುತ್ತಿದೆ, ಇದರಿಂದ ಮಹಿಳೆಯರು ಸಮಾಜದ ಮುಖ್ಯಧಾರೆಯಲ್ಲಿರಲು ಸಾಧ್ಯವಾಗಿದೆ. ಭಾರತದಲ್ಲಿ ಸವಿತ್ರಿಬಾಯಿ ಫುಲೆ, ಇಂದಿರಾ ಗಾಂಧಿ, ಕಲ್ಪನಾ ಚಾವ್ಲಾ, ಮೇರೀ ಕೋಮ್ ಮುಂತಾದವರು ಮಹಿಳಾ ಶಿಕ್ಷಣ ಮತ್ತು ಸಶಕ್ತೀಕರಣದಲ್ಲಿ ಶ್ರೇಷ್ಠ ಸಾಧನೆ ಮಾಡಿದ್ದಾರೆ.

2. ಉದ್ಯೋಗ ಹಾಗೂ ಉದ್ಯಮಶೀಲತೆ:

ಈಗ ಮಹಿಳೆಯರು ಉದ್ಯೋಗ ಮಾತ್ರವಲ್ಲದೆ, ಸ್ವಂತ ಉದ್ಯಮಗಳನ್ನು ನಿರ್ಮಿಸಿ ಉದ್ಯಮಶೀಲತೆ ತೋರಿಸುತ್ತಿದ್ದಾರೆ. ಫಾಲ್ಗುಣಿ ನಾಯರ್ (ನೈಕಾ), ಕಿರಣ್ ಮಜುಂದಾರ್ ಶಾ (ಬಯೋಕಾನ್), ವಂದನಾ ಲೂತರ (ಪೇಪರ್ ಶೈರಿ) ಮುಂತಾದವರು ಉದ್ಯಮ ವಲಯದಲ್ಲಿ ತಮ್ಮ ಅಚ್ಚಳಿಯದ ಗುರುತು ಮೂಡಿಸಿದ್ದಾರೆ.

3. ಕ್ರೀಡೆ ಮತ್ತು ಸಾಹಸ:

ಕ್ರೀಡಾ ಕ್ಷೇತ್ರದಲ್ಲಿ ಮಹಿಳೆಯರು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ. ಸೈನಾ ನೆಹ್ವಾಲ್, ಮೇರೀ ಕೋಮ್, ಪಿ.ವಿ. ಸಿಂಧು, ಮಿಥಾಲಿ ರಾಜ್ ಮುಂತಾದವರು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ್ದಾರೆ.

4. ಸಮಾಜಸೇವೆ ಮತ್ತು ಪ್ರಭಾವ:

ಮಹಿಳೆಯರು ಕೇವಲ ತಮ್ಮ ವ್ಯಕ್ತಿಗತ ಜೀವನದಲ್ಲಷ್ಟೇ ಅಲ್ಲದೆ, ಸಮಾಜಸೇವೆಯಲ್ಲಿ ಕೂಡ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಮದರ್ ತೆರೆಸಾ, ಸುಧಾ ಮುರ್ತಿ ಮುಂತಾದವರು ತಮ್ಮ ಸಮಾಜಮುಖಿ ಕಾರ್ಯಗಳಿಂದ ಲಕ್ಷಾಂತರ ಜನರಿಗೆ ಪ್ರೇರಣೆ ನೀಡಿದ್ದಾರೆ.

ಸಮಾಜದ ಹೊಣೆಗಾರಿಕೆ – ಮಹಿಳಾ ಸಮಾನತೆ ಮತ್ತು ಗೌರವ

ಮಹಿಳೆಯರನ್ನು ಗೌರವಿಸುವ, ಅವರ ಆತ್ಮವಿಶ್ವಾಸ ಹೆಚ್ಚಿಸುವ, ಅವರಿಗೆ ಸಮಾನ ಅವಕಾಶ ಒದಗಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮಹಿಳಾ ಸುರಕ್ಷತೆ, ಸಂವೇದನಾಶೀಲತೆ ಮತ್ತು ಗೌರವ ಹೊಂದಿದ ಸಮಾಜವನ್ನು ನಿರ್ಮಿಸುವುದು ಅನಿವಾರ್ಯ.

ನಮ್ಮ ಕರ್ತವ್ಯ – ಮಹಿಳಾ ಶಕ್ತಿಗೆ ಸಾಥ್

ಈ ಮಹಿಳಾ ದಿನಾಚರಣೆ ದಿನದಂದು ನಾವು ನಮ್ಮ ಜೀವನದಲ್ಲಿ ಶಕ್ತಿ, ಪ್ರೇರಣೆ, ಪ್ರೀತಿಯ ಬೆಳಕು ತುಂಬುವ ಮಹಿಳೆಯರಿಗೆ ಕೃತಜ್ಞತೆ ಸಲ್ಲಿಸೋಣ. ಅವರ ಸಾಧನೆಗಳನ್ನು ಗೌರವಿಸೋಣ ಮತ್ತು ಹೊಸ ತಲೆಮಾರಿನ ಮಹಿಳೆಯರಿಗೆ ಇನ್ನಷ್ಟು ಉತ್ಸಾಹ, ಶಿಕ್ಷಣ ಮತ್ತು ಅವಕಾಶಗಳನ್ನು ಒದಗಿಸುವ ಮೂಲಕ ಅವರನ್ನು ಸಶಕ್ತಗೊಳಿಸೋಣ.

“ಮಹಿಳೆಯರ ಪ್ರಗತಿ – ರಾಷ್ಟ್ರದ ಪ್ರಗತಿ!”(ಲೇಖನ-ಡಾ. ವೆಂಕಟೇಶ ಬಾಬು ಎಸ್,ಸಹ ಪ್ರಾಧ್ಯಾಪಕರು, ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಮ್ಮ‌ ಪೂರ್ವಿಕ ಶಿವನೂ ; ಅವರ ಡುಬಾಕು ಸನಾತನವೂ..

Published

on

  • ಹರ್ಷಕುಮಾರ್ ಕುಗ್ವೆ

ಲಿಂಗವು ದೇವರಲ್ಲ ಶಿವನು ದೇವರಲ್ಲ
ಶಕ್ತಿಯೂ ದೇವರಲ್ಲ. ಮನುಷ್ಯನ ಕಲ್ಪನೆಯ ಆಳವನ್ನು ಮೀರಿದ ಯಾವ ದೇವರೂ ಇಲ್ಲ. ಅಸಲಿಗೆ ಇಡೀ ಜಗತ್ತನ್ನು ನಡೆಸುವ ದೇವರೆಂಬುದೇ ಇಲ್ಲ.

ಶಿವನು ನಮ್ಮ ಪೂರ್ವಿಕ, ಗೌರಿ ಅತವಾ ಶಕ್ತಿ ನಮ್ಮ ಪೂರ್ವಿಕಳು. ಗಂಗೆ ನಮ್ಮ ಬದುಕು. ಶಿವನ ಕೊರಳಿನ ನಾಗ ನಮ್ಮ ಕುಲ. ಲಿಂಗ ಫಲವಂತಿಕೆಯ ಸಂಕೇತವೂ ಹೌದು, ಶಿವ ಶಕ್ತಿಯರ ಸಮಾಗಮದ ಸಂಕೇತವೂ ಹೌದು. ನಮ್ಮ ಜನರಿಗೆ ಸಂಕೇತಗಳು ಶಕ್ತಿಯಾಗಿದ್ದವು, ಪ್ರೇರಣೆಯಾಗಿದ್ದವು. ಡೊಳ್ಳು ಹೊಡೆದು ಕೇಕೆ ಹಾಕಿದಾಗ ಮಳೆ ಬಂದರೆ, ನಮ್ಮ ಡೊಳ್ಳಿನ ಸದ್ದಿನ ಶಕ್ತಿಯಿಂದಲೇ, ನಮ್ಮ ಕೇಕೆಯಿಂದಲೇ ಮಳೆ ಬಂತು ಎಂದು ನಂಬಿದರು. ಇದನ್ನು primitive magic ಪರಿಕಲ್ಪನೆ ಎನ್ನಲಾಗಿದೆ.‌ ನಮ್ಮ ಬಳ್ಳಾರಿಯ ಸಂಗನಕಲ್ಲಿನಲ್ಲಿ 3000 ವರ್ಷಗಳ ಹಿಂದೆ ಕಲ್ಲು ಬಂಡೆಗಳ ಮೇಲೆ ಕೆತ್ತಿದ ಹೋರಿ ಮತ್ತು ಉದ್ದ ಕೊಂಬಿನ ಕೆತ್ತನೆಗಳು ಸಹ ಇಂತಹ ಒಂದು ಆದಿಮ ಮಾಂತ್ರಿಕ ಶಕ್ತಿಯ ಆಚರಣೆಯಾಗಿದೆ.

ನಂಬಿಕೆಗಳನ್ನು ಸಂಸ್ಕೃತಿಯಾಗಿ, ಪರಂಪರೆಯಾಗಿ ಗ್ರಹಿಸಬೇಕೇ ಹೊರತು ದೇವರಾಗಿ ಅಲ್ಲ. ದೇವ ಎಂಬ ಕಲ್ಪನೆಯೇ ದ್ರಾವಿಡರಲ್ಲಿ ಇರಲಿಲ್ಲ. 50 ಸಾವಿರ ವರ್ಷಗಳಿಂದ ಬಂದ ಲಿಂಗ- ಯೋನಿ ಪೂಜೆ, ಗೌರಿ ಪೂಜೆ, 9,000 ವರ್ಷಗಳಿಂದ ಬಂದ ಬೂಮ್ತಾಯಿ ಪೂಜೆ, ಅರಳಿ ಮರದ ಪೂಜೆ, ಐದು ಸಾವಿರ ವರ್ಷಗಳಿಂದ ಬಂದ ಶಿವನ ಪೂಜೆ, ಗಣಪತಿ ಪೂಜೆ, ನಾಗನ ಪೂಜೆ, 4000 ವರ್ಷಗಳಿಂದ ಬಂದ ಗತಿಸಿದ ಹಿರೀಕರ ಪೂಜೆ, ಇದರ ಮುಂದುವರಿಕೆಯಾಗಿಯೇ 2600 ವರ್ಷಗಳ ಹಿಂದೆ ಬುದ್ದ ಗುರುವು ತೀರಿದ ಬಳಿಕ ಅವನ ಅಸ್ತಿಯನ್ನು ಇಟ್ಟ ಸ್ತೂಪಗಳನ್ನು ಪೂಜಿಸಿದೆವು, ದೂಪ ಹಾಕಿದೆವು..‌. ಇದುವೇ ಈ ನೆಲದ ಪೂಜನ ಸಂಸ್ಕತಿಯಾಗಿತ್ತು.

‘ದೇವ’ ಮತ್ತು ಅಸುರ ಇಬ್ಬರೂ ಬಂದಿದ್ದು ಮಧ್ಯ ಏಷ್ಯಾದಿಂದ ಹೊರಟಿದ್ದ ಆರ್ಯರಿಂದಲೇ. ಅವರಿಗೆ ಪೂಜೆ ಗೊತ್ತಿರಲಿಲ್ಲ. ಯಜ್ಞ ಗೊತ್ತಿತ್ತು, ಹೋಮ ಗೊತ್ತಿತ್ತು. ‘ದೇವ’ ಅತವಾ “ದ-ಏವ” ಕೂಡಾ ಮೂಲದಲ್ಲಿ ಆರ್ಯರ ಪೂರ್ವಿಕ ಕುಲ ನಾಯಕರೇ ಆಗಿದ್ದಾರು.‌.. ಹೀಗಾಗಿಯೇ ಆರ್ಯ ವೈದಿಕರ ದೇವ ಎಂದರೆ ಅವರ ದಾಯಾದಿಗಳಾಗಿದ್ದ ಪಾರ್ಸಿಯನ್ (ಜೊರಾಸ್ಟ್ರಿಯನ್) ಆರ್ಯ ಅವೆಸ್ತನ್ನರಿಗೆ ಕೆಡುಕಿನ ಸಂಕೇತ‌ವಾಗಿತ್ತು. ಹಾಗೇ ಆರ್ಯ ವೈದಿಕರು ಕೆಡುಕು ಎಂದ ಅಸುರ (ಅಹುರ) ಆರ್ಯ ಅವೆಸ್ತನ್ನರ ಪಾಲಿಗೆ “ನಾಯಕ”ನಾಗಿದ್ದ. ಅವರನ್ನು ಅಹುರ ಮಜ್ದಾ ಎಂದು ಕರೆದು ಆರಾದಿಸಿದರು.

ಭಾರತಕ್ಕೆ ಪ್ರವೇಶಿಸಿದ ಬಳಿಕ ಆರ್ಯ ವೈದಿಕರಿಗೆ ಈ ನೆಲದ ಮೊದಲ ನಿವಾಸಿಗಳ ಮೇಲೆ ಯಜಮಾನಿಕೆ ಸ್ತಾಪಿಸಬೇಕಿತ್ತು. ಅದಕ್ಕಾಗಿ ನಮ್ಮಿಂದ ಪೂಜೆಗೊಳ್ಳುತ್ತಿದ್ದ ಪೂರ್ವಿಕರನ್ನು ತಮ್ಮ “ದೇವರು” ಮಾಡಿದರು. ಆ ದೇವರ ಪೂಜೆಗೆ ಅವರೇ ನಿಂತರು. ತಮ್ಮ ಜುಟ್ಟು ಬಿಟ್ಟುಕೊಂಡು ನಮ್ಮ ಜುಟ್ಟು ಹಿಡಿದರು. ನಾವು ಪೂರ್ವಿಕರನ್ನು ಬಿಟ್ಟು ಕೊಟ್ಟು, ಅವರ ಕೈಯಲ್ಲಿ ದೇವರುಗಳ ಪೂಜೆ ನಡೆಯುವಾಗ ನಮ್ಮ ಪೂರ್ವಿಕರಿಗೆ ಗೊತ್ತೇ ಇರದಿದ್ದ ವೇದ ಮಂತ್ರಗಳನ್ನ ಕೇಳಿ ಪುನೀತರಾದೆವು. ಈ ಮಂತ್ರ ಭಾಷೆಯೇ ದೇವರಿಗೆ ಅರ್ಥವಾಗುವುದು ಎಂದು ಪುಂಗಿದ್ದಕ್ಕೆ ತಲೆಯಾಡಿಸಿ ಕೈಮುಗಿದು ಗರ್ಭಗುಡಿಯ ಹೊರಗೆ ಸಾಲಿನಲ್ಲಿ ನಿಂತೆವು.‌ ಮುಂದಿನ 2000 ವರ್ಷಗಳ ಕಾಲ ಗುಲಾಮರಾದೆವು.‌ ಪುರಾಣಗಳನ್ನು ಕೇಳಿದೆವು, ನಂಬಿದೆವು ಮತಿಗೆಟ್ಟೆವು, ಗತಿಗೆಟ್ಟೆವು.

ಇನ್ನೂ ಉಳಿದಿರುವುದೇನು?
ನಾವು ಶಿವನ ವಕ್ಕಲು, ಗೌರಿ- ಗಂಗೆಯರ ಒಕ್ಕಲು. ಅವರು ಇಂದ್ರ ಅಗ್ನಿಯರ ವಕ್ಕಲಾಗಿದ್ದವರು ತಮ್ಮ ದೇವರಿಗೆ ಕಿಮ್ಮತ್ತಿಲ್ಲ ಎಂದರಿತು ಅವರನ್ನೇ ಬಿಟ್ಟರು. ಈಗ ಹೇಳುತ್ತಾರೆ ನಾವೇ ಸನಾತನರು ಎಂದು! ಅವರ ಡುಬಾಕು ಸನಾತನದಲ್ಲಿ ನಮ್ಮತನ ಕಳೆದುಕೊಂಡ “ಶೂದ್ರ ಮುಂಡೇಮಕ್ಕಳಾಗಿ”, ಅವರಿಗಾಗಿ ಬಾಳು ಬದುಕು ಹಾಳುಮಾಡಿಕೊಂಡು, ಅವರ ಹೋಮ ಹವನ ಮಾಡಿಸಿ, ನಮ್ಮ ಉಳಿಕೆ ಕಾಸು ಕಳೆದುಕೊಂಡು, ಗೌರವ ಗನತೆ ಕಳೆದುಕೊಳ್ಳುವುದೇ ಇವತ್ತಿನ ಸನಾತನ!

– ಹರ್ಷಕುಮಾರ್ ಕುಗ್ವೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 hours ago

ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆಯಾಗಿ 50 ವರ್ಷ; ನೆಹರು ತಾರಾಲಯದಲ್ಲಿ ವಿಶೇಷ ಕಾರ್ಯಕ್ರಮ

ಸುದ್ದಿದಿನಡೆಸ್ಕ್:ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆ ಮಾಡಿ ಇಂದಿಗೆ 50 ವರ್ಷಗಳು ಸಂದಿವೆ. 1975ರಲ್ಲಿ ಈ ದಿನದಂದು ಉಡಾವಣೆ ಮಾಡಲಾದ ಈ ಉಪಗ್ರಹಕ್ಕೆ ಪ್ರಾಚೀನ ಭಾರತೀಯ ಗಣಿತಜ್ಞ...

ದಿನದ ಸುದ್ದಿ2 hours ago

ಜೆಇಇ ಮೇನ್ಸ್ ಫಲಿತಾಂಶ ಪ್ರಕಟ : 24 ವಿದ್ಯಾರ್ಥಿಗಳಿಗೆ ನೂರಕ್ಕೆ ನೂರು ಅಂಕ

ಸುದ್ದಿದಿನಡೆಸ್ಕ್:ರಾಷ್ಟ್ರೀಯ ಪರೀಕ್ಷಾ ಸಂಸ್ಥೆ – ಎನ್‌ಟಿಎ ಇಂದು ಪ್ರಸಕ್ತ ವರ್ಷದ ಜಂಟಿ ಪ್ರವೇಶ ಪರೀಕ್ಷೆ – ಜೆಇಇ ಮುಖ್ಯ ಫಲಿತಾಂಶ -2 ಅನ್ನು ಪ್ರಕಟಿಸಿದೆ. ಈ ಭಾರಿ...

ದಿನದ ಸುದ್ದಿ8 hours ago

ಇ-ಸ್ವತ್ತು ಸಮಸ್ಯೆ ಪರಿಹಾರಕ್ಕಾಗಿ‌‌ ಕಾರ್ಯನಿರ್ವಹಣಾ ಸಮಿತಿ ರಚನೆ

ಸುದ್ದಿದಿನಡೆಸ್ಕ್:ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ, 12 ಜನ ಅಧಿಕಾರಿಗಳನ್ನು ಒಳಗೊಂಡ, ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚಿಸಲಾಗಿದೆ ಎಂದು, ಪಂಚಾಯತ್‌ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ. ಇದನ್ನೂ...

ದಿನದ ಸುದ್ದಿ23 hours ago

‘ವಿದ್ಯಾಸಿರಿ’ ಯೋಜನೆಯಡಿ ವಿದ್ಯಾರ್ಥಿ ವೇತನ ಪರಿಷ್ಕರಣೆಗೆ ಒತ್ತು : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಬೆಂಗಳೂರಿನ ಕೆಂಗೇರಿಯಲ್ಲಿ ನೂತನವಾಗಿ ನಿರ್ಮಿಸಿರುವ ಕಲಿದೇವ ಸಮುದಾಯ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾರ್ಪಣೆಗೊಳಿಸಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ಸಮುದಾಯಗಳ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು...

ದಿನದ ಸುದ್ದಿ1 day ago

ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಿ : ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ

ಸುದ್ದಿದಿನ,ಚನ್ನಗಿರಿ:ಇತ್ತೀಚಿಗೆ ತಾವರೆಕೆರೆಯಲ್ಲಿ ನಡೆದ ಘಟನೆ ಕಾನೂನು ಬಾಹಿರವಾಗಿದ್ದು, ಮುಖಂಡರುಗಳು ತಮ್ಮ ಗ್ರಾಮ ಹಾಗೂ ಪಟ್ಟಣಗಳ ವ್ಯಾಪ್ತಿಯಲ್ಲಿ ಯಾವುದೇ ಘಟನೆ ನಡೆದಿದ್ದರೆ ಕಾನೂನಿನ ಮೂಲಕ ಪರಿಹಾರವನ್ನು ಕಂಡುಕೊಳ್ಳಬೇಕೇ ವಿನಃ...

ದಿನದ ಸುದ್ದಿ1 day ago

ದಾವಣಗೆರೆ | ಮೌಲಾನಾ ಅಜಾದ್ ಮಾದರಿ ಶಾಲೆಗೆ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಶಾಲೆಗಳಲ್ಲಿ ಅಲ್ಪಸಂಖ್ಯಾತ ವರ್ಗದ...

ರಾಜಕೀಯ1 day ago

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಪ್ರತಿಭಾನ್ವಿತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6 ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ದಾವಣಗೆರೆ ಜಿಲ್ಲೆ ವ್ಯಾಪ್ತಿಯಲ್ಲಿ ಆನ್‍ಲೈನ್...

ದಿನದ ಸುದ್ದಿ1 day ago

ದಾವಣಗೆರೆ | ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಪೊಲೀಸ್ ವೆಲ್‍ಫೇರ್ ಅಂಡ್ ಎಜುಕೇಷನ್ ಟ್ರಸ್ಟ್ ದಾವಣಗೆರೆ ರೇಂಜ್ ಅಡಿಯಲ್ಲಿನ ಹರಿಹರ ತಾಲ್ಲೂಕು ಕೊಂಡಜ್ಜಿಯ ಪಬ್ಲಿಕ್ ಶಾಲೆಯಲ್ಲಿನ ಪ್ರಾಂಶುಪಾಲರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ1 day ago

ದಾವಣಗೆರೆ | ಮೊಬೈಲ್ ಕ್ಯಾಟೀನ್ ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ...

ದಿನದ ಸುದ್ದಿ2 days ago

ಅಂಬೇಡ್ಕರ್ ಸ್ಮರಣೆಯಿಂದ ದೇಶ ಪ್ರಗತಿಪರವಾಗಲು ಸಾಧ್ಯ : ಸಹಾಯಕ ಪ್ರಾಧ್ಯಾಪಕ ಷಣ್ಮುಖಪ್ಪ ಕೆ.ಎಚ್

ಸುದ್ದಿದಿನ,ಚನ್ನಗಿರಿ:ಶತಶತಮಾನದಿಂದಲೂ ಭಾರತ ದೇಶದಲ್ಲಿರುವ ಜಾತಿ ವ್ಯವಸ್ಥೆಯನ್ನ ಮೀರಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಹೊಂದಲು ಡಾ.ಬಿ.ಆರ್.ಅಂಬೇಡ್ಕರ್ ಅವರ ಶ್ರಮ ಹಾಗೂ ಹೋರಾಟವನ್ನು ನಾವುಗಳು ಸ್ಮರಿಸಿಕೊಳ್ಳಬೇಕಾಗಿದೆ ಎಂದು ಸಹಾಯಕ...

Trending