ನೆಲದನಿ
ಕನ್ನಡ ಸಾಹಿತ್ಯದ ಬಂಡಾಯದ ಕಿಡಿ: ಅಲ್ಲಮಪ್ರಭು ಬೆಟ್ಟದೂರು ಬದುಕಿನ ಕಥನ
ಕನ್ನಡ ಸಾಹಿತ್ಯ ಪರಂಪರೆಯು ಸುದೀರ್ಘವಾದ ಐತಿಹಾಸಿ ಹಿನ್ನಲೆಯನ್ನು ಒಳಗೊಂಡಿದೆ. ಇಂತಹ ಕನ್ನಡ ಸಾಹಿತ್ಯ ಪರಂಪರೆಯು ಕಾಲದಿಂದ ಕಾಲಕ್ಕೆ ವರ್ತಮಾನದ ತುರ್ತಿಗೆ ಪೂರಕವಾದ ನೆಲೆಯಲ್ಲಿ ತನ್ನ ಆಶಯಗಳನ್ನು ಅಭಿವ್ಯಕ್ತಿಸುವ ನೆಲೆಯಲ್ಲಿ ಬೆಳೆದುಬಂದಿದೆ. ಕನ್ನಡ ಸಾಹಿತ್ಯವು ತನ್ನಲ್ಲಿ ಮಡಿವಂತಿಕೆಯನ್ನು ಕಾಪಾಡಕೊಳ್ಳದೆ ಸಮಾಜಮುಖಿಯಾಗಿ ಸ್ಪಂದಿಸುತ್ತ ಬಂದಿದೆ. ಇದರ ಫಲವಾಗಿ ಈ ಸಾಹಿತ್ಯ ಪ್ರಕಾರವು ಕ್ರಿಸ್ತಪೂರ್ವದಿಂದ ಸಮಕಾಲೀನ ಸಂದರ್ಭದವರೆಗೆ ಹಲವಾರು ಅವಸ್ಥಾಂತಗಳ ಮೂಲಕ ತನ್ನ ಅಸ್ತಿತ್ವವನ್ನು ಕಾಯ್ದುಕೊಂಡು ಮುನ್ನಡೆದಿದೆ. ಹೀಗಾಗಿಯೇ ಪೂರ್ವದ ಹಳಹನ್ನಡ, ಹಳಗನ್ನಡ, ನಡುಗನ್ನಡ ಹಾಗೂ ಹೊಸಗನ್ನಡ ಎಂಬ ವಿವಿಧ ಕಾಲಘಟ್ಟಗಳನ್ನು ದಾಟುವ ಮೂಲಕ ತನ್ನ ಗಟ್ಟಿತನವನ್ನು ವಿಸ್ತರಿಸುತ್ತ ಶ್ರೀಮಂತ ಭಾಷೆಯಾಗಿ ಕಂಗೊಳಿಸುತ್ತಿದೆ. ಹೀಗೆ ಬೆಳೆದುಬಂದ ವಿವಿಧ ಅವಸ್ಥಾಂತರಗಳಲ್ಲಿ ನಮ್ಮ ಮುಂದಿರುವ ಹೊಸಗನ್ನಡವು ವಿಸ್ತ್ರøತ ಸ್ವರೂಪವನ್ನು ಪಡೆದುಕೊಂಡು ಮುನ್ನಡೆದಿದೆ. ಹೊಸಗನ್ನಡದಲ್ಲಿ ನವೋದಯ, ಪ್ರಗತಿಶೀಲ, ನವ್ಯ, ಬಂಡಾಯ ಹಾಗೂ ದಲಿತ ಸಾಹಿತ್ಯ ಎಂಬ ವಿಶಿಷ್ಟ ಪ್ರಕಾರಗಳ ಮೂಲಕವಾಗಿ ಕನ್ನಡ ಸಾಹಿತ್ಯವು ತನ್ನ ಅನನ್ಯತೆಯನ್ನು ಕಾಯ್ದುಕೊಂಡು ಬಂದಿದೆ. ಹೊಸಗನ್ನಡದ ಬಂಡಾಯ ಮತ್ತು ದಲಿತ ಸಾಹಿತ್ಯವು ವಿಶಿಷ್ಟವಾಗಿ ದನಿಯಿಲ್ಲದವರ ದನಿಯಾಗಿ, ನೆಲದ ನೋವುಗಳಿಗೆ ಸ್ಪಂದಿಸುವ ನೆಲೆಯಲ್ಲಿ ತನ್ನ ಗುಣ ಮತ್ತು ಸ್ವರೂಪಗಳಲ್ಲಿ ಬದಲಾವಣೆಯನ್ನು ಕಂಡುಕೊಂಡಿದೆ. ‘ಖಡ್ಗವಾಗಲಿ ಕಾವ್ಯ’ ಎಂಬ ಘೋಷವಾಕ್ಯದ ಮೂಲಕವಾಗಿ ಬಂಡಾಯ ಸಾಹಿತ್ಯವು ಸಾಮಾಜಿಕ ಅಸಮಾನತೆಯನ್ನು ವಿರೋಧಿಸಿ ಸಮಸಮಾಜದ ಕನಸ್ಸೊತ್ತು ಮುನ್ನಡೆಯಿತು. ಇಂತಹ ಬಂಡಾಯ ಸಾಹಿತ್ಯ ಪರಂಪರೆಗೆ ಕನ್ನಡದ ಹಲವಾರು ವಿಚಾರವಾದಿಗಳು ಹೆಗಲುಕೊಟ್ಟು ದುಡಿದಿದ್ದಾರೆ. ಅಂತಹ ವಿಚಾರವಾದಿಗಳಲ್ಲಿ ಅಲ್ಲಮಪ್ರಭು ಬೆಟ್ಟದೂರು ಅವರು ಒಬ್ಬರು.
ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರು ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಬೆಟ್ಟದೂರು ಎಂಬ ಗ್ರಾಮದಲ್ಲಿ ಶ್ರೀ ಚನ್ನಬಸವಪ್ಪ ಶ್ರೀಮತಿ ಅಮರಮ್ಮ ಇವರ ಮಗನಾಗಿ ದಿನಾಂಕ: 30 ಜುಲೈ 1951 ರಂದು ಜನಿಸಿದರು. ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರ ಕೌಟುಂಬಿಕ ಹಿನ್ನೆಲೆಯನ್ನು ಗಮನಿಸಿದರೆ, ಇವರದು ಸಾಮಾಜಿಕ ಹೋರಾಟದಿಂದ ಬಂದ ಕುಟುಂಬವಾಗಿದೆ. ಶ್ರೀಯುತರ ತಂದೆಯವರಾದ ಶ್ರೀ ಚನ್ನಬಸವಪ್ಪನವರು ರೈತ ಹೋರಾಟಗಾರರು ಹಾಗೂ ಚಿಂತಕರಾಗಿದ್ದು, ವಚನ ಸಾಹಿತ್ಯ ಹಾಗೂ ಶರಣ ಚಳವಳಿಯ ಬಗೆಗೆ ವಿಶೇಷವಾದ ಆಸಕ್ತಿಯನ್ನು ಮೈಗೂಡಿಸಿಕೊಂಡಿದ್ದರು. ಶರಣರ ವಿಚಾರಗಳನ್ನು ಕುರಿತಂತೆ ‘ಸಕಲ ಜೀವ ಪ್ರೇಮ’, ‘ಸಲ್ಲಲಿತ ಸನ್ಮಾರ್ಗ’ ಎಂಬ ವೈಚಾರಿಕ ಕೃತಿಗಳನ್ನು ರಚಿಸಿದ್ದರು. ಈ ಸಲ್ಲಲಿತ ಸನ್ಮಾರ್ಗ ಎಂಬ ಕೃತಿಯೊಳಗೆ ಶರಣರ ಚಳವಳಿಯನ್ನು ‘ವಚನ ಧರ್ಮ’ ಎಂದು ಕರೆಯುವ ವಾಡಿಕೆಯನ್ನು ವಿರೋಧಿಸಿ, ವಚನ ಮಾರ್ಗ ಅಥವಾ ಶರಣ ಮಾರ್ಗ ಎಂದು ಪ್ರತಿಪಾದಿಸಿದ್ದಾರೆ. ಇವರು ರಚಿಸಿರುವ ಈ ಕೃತಿಗಳಿಗೆ ಹಲವಾರು ಪ್ರಶಸ್ತಿ ಹಾಗೂ ಗೌರವ ಪುರಸ್ಕಾರಗಳು ಕೂಡ ಲಭಿಸಿವೆ. ಹಾಗೆಯೇ ಶ್ರೀಯುತರ ಚಿಕ್ಕಪ್ಪನವರಾದ ಶ್ರೀ ಶಂಕರೆಗೌಡರು ನಂದಾಲಾಲ್ ಬಸು ಎಂಬ ಹೆಸರಾಂತ ಚಿತ್ರಕಲಾವಿದರ ಶಿಷ್ಯರಾಗಿ ಚಿತ್ರಕಲೆಯನ್ನು ಕರಗತಮಾಡಿಕೊಂಡಿದ್ದರು. ನಂತರದಲ್ಲಿ ಗಾಂಧೀಜಿಯವರು ತಮ್ಮ ಕೊನೆಯ ದಿನಗಳನ್ನು ಕಳೆಯುವ ಸಂದರ್ಭದಲ್ಲಿ ಅವರ ಜೊತೆಗಿದ್ದು, ಅವರ ಜೀವನ ಕುರಿತ ಭಿತ್ತಿಚಿತ್ರಗಳನ್ನು ರಚಿಸಿದ್ದವರು. ಹಾಗೆಯೇ ಇವರು ಲಾಲ್ ಬಹಾದ್ದೂರ್ ಶಾಸ್ತ್ರಿಗಳಿಗೆ ಅತ್ಯಂತ ಪ್ರಿಯವಾದವರು. ಇಷ್ಟೊಂದು ಹೆಸರು ಮಾಡಿದ್ದರು ಸಹ ಕಲಾಲೋಕದಿಂದ ವಿಮುಖರಾಗಿ ಕೃಷಿ ಕಾಯಕದಲ್ಲಿ ತಲ್ಲಿನರಾಗಿ ಬಸವ ಮಾರ್ಗದಲ್ಲಿ ‘ಕಾಯಕವೇ ಕೈಲಾಸ’ವೆಂದು ನಡೆದರು. ಇವರೆಲ್ಲರ ಪ್ರೇರಣೆ ಮತ್ತು ಪ್ರಭಾವಗಳು ಶ್ರೀಯುತ ಅಲ್ಲಮಪ್ರಭು ಅವರ ಮೇಲಾಗಿದ್ದವು. ಹೀಗಾಗಿ ಕಾಯಕ ಮಾರ್ಗ, ಹೋರಾಟ ಮಾರ್ಗಗಳು ಬಾಲ್ಯದ ದಿನಗಳಿಂದಲೂ ಇವರ ರಕ್ತದೊಳಗೆ ಕರಗತವಾಗಿದ್ದವು. ಬಾಲ್ಯದ ಸಂದರ್ಭದಲ್ಲಿ ತಮ್ಮ ಕುಟುಂಬದ ಹಿರಿಯರು ನಡುಗನ್ನಡದ ಪ್ರಭುಲಿಂಗಲೀಲೆ ಮತ್ತು ಕುಮಾರವ್ಯಾಸ ಭಾರತವನ್ನು ಹಾಡುತ್ತಿದ್ದರೆ, ಅವುಗಳನ್ನು ಓದುವ ಹವ್ಯಾಸವನ್ನು ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರು ಮೈಗೂಡಿಸಿಕೊಂಡಿದ್ದರು.
ಅಲ್ಲಮಪ್ರಭು ಬೆಟ್ಟದೂರು ಅವರು ವಿದ್ಯಾರ್ಥಿ ದೆಸೆಯಿಂದಲೂ ಹೋರಾಟದ ಪ್ರವೃತ್ತಿಯನ್ನು ಮೈಗೂಡಿಸಿಕೊಂಡಿದ್ದರು. ಹೀಗಾಗಿ ಬಂಡಾಯ ಸಾಹಿತ್ಯ ಪ್ರಕಾರದ ಅಡಿಯಲ್ಲಿ ತಮ್ಮ ದನಿಯನ್ನು ಎತ್ತಿಹಿಡಿದರು. ಧಾರವಾಡದಲ್ಲಿ ಪದವಿ ಶಿಕ್ಷಣವನ್ನು ಅಧ್ಯಯನ ಮಾಡುವ ಸಂದರ್ಭದಲ್ಲಿ ಶ್ರೀಯುತ ಚಂಪಾ ಅವರ ಪ್ರೇರಣೆಗೊಳಗಾಗಿ ಜೆ.ಪಿ ಚಳವಳಿಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಆಗ ಚಂಪಾ ಅವರು ಜೆ.ಪಿ ಚಳುವಳಿಯ ರಾಜ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸಿದರೆ, ಅಲ್ಲಮಪ್ರಭು ಅವರು ರಾಯಚೂರು ಭಾಗದಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಸಂಚಾಲಕರಾಗಿ ಚಳವಳಿಯನ್ನು ಮುನ್ನಡೆಸಿದರು. ಹಾಗೆಯೇ 1979 ರ ಅವಧಿಯಿಂದಲೂ ಬಂಡಾಯ ಸಾಹಿತ್ಯಕ್ಕೆ ಬೆನ್ನೆಲುಬಾಗಿ ನಿಂತ ಶ್ರೀಯುತರು ಹಲವಾರು ಜನಪರ ಮತ್ತು ಪ್ರಗತಿಪರ ಹೋರಾಟಗಳಲ್ಲಿ ತಮ್ಮ ಸಹಭಾಗಿತ್ವವನ್ನು ವ್ಯಕ್ತಪಡಿಸುತ್ತ ಬಂದಿದ್ದಾರೆ. ಇವರ ಪ್ರಮುಖ ಹೋರಾಟಗಳೆಂದರೆ, ‘ಕುದುರೆ ಮೋತಿ ಹೋರಾಟ’, ‘ಗೋಕಾಕ ಚಳವಳಿ’, ‘ಹೈದ್ರಾಬಾದ್ ಕರ್ನಾಟಕದ 371 ಜೆ’ ವಿಧಿಯ ಜಾರಿಗಾಗಿ ಹೋರಾಟ, ‘ಪ್ರತ್ಯೇಕ ಕೊಪ್ಪಳ ಜಿಲ್ಲಾ ಹೋರಾಟ’ ಹೀಗೆ ಹಲವಾರು ಜನಪರವಾದ ಚಳವಳಿಗಳ ಮೂಲಕವಾಗಿ ಸಮಸಮಾಜದ ಕನಸ್ಸೊತ್ತು ಮುನ್ನಡೆಯುತ್ತಿದ್ದಾರೆ. ಇವರ ಹೋರಾಟಗಳಲ್ಲಿ ‘ಕುದುರಿ ಮೋತಿ ಪ್ರಕರಣ’ವು ಅತ್ಯಂತ ಮಹತ್ವದ ಹೋರಾಟವಾಗಿದೆ. 11 ಜೂನ್ 1985 ರಲ್ಲಿ ಮಠಾಧೀಶನೊಬ್ಬ ತಳಸಮುದಾಯದ ಪಾರ್ವತಮ್ಮ ಮತ್ತು ಮುಸ್ಲಿಂ ಸಮುದಾಯದ ಹುಸೇನ್ಬಿ ಎಂಬುವವರನ್ನು ಅಪಮಾನಿಸಿ, ಬೆತ್ತಲಗೊಳಿಸಿ ಊರಿನ ತುಂಬ ಮೆರವಣಿಗೆ ಮಾಡಿಸಿದ್ದ. ಈ ಪ್ರಕರಣದ ಕುರಿತು ಸಮಗ್ರವಾದ ಮಾಹಿತಿಯನ್ನು ಕಲೆಹಾಕಿ, ಇದರ ವಿರುದ್ಧ ಹೋರಾಟವನ್ನು ಮಾಡಿದ ಕೀರ್ತಿಯು ಶ್ರೀಯುತರಿಗೆ ಸಲ್ಲುತ್ತದೆ. ಇವರು ಈ ಪ್ರಕರಣವನ್ನು ಗಂಭೀರವಾಗಿ ಕೈಗೆತ್ತಿಕೊಳ್ಳದಿದ್ದರೆ ಈ ಪ್ರಕರಣವನ್ನು ಮುಚ್ಚಿಹಾಕುವ ತಂತ್ರಗಳು ನಡೆದಿದ್ದವು. ಆದರೆ ಇಲ್ಲಿ ಅನ್ಯಾಯಕ್ಕೊಳಗಾದ ದಮನಿತ ಮತ್ತು ಅಸಹಾಯಕ ಸಮುದಾಯಗಳ ದನಿಯಾಗಿ ನಿಂತು ಹೋರಾಟ ಮಾಡಿದರು. ಇದರಿಂದ ಮೂಲಭೂತವಾದಿಗಳು ಹಾಗೂ ಉನ್ನತ ವರ್ಗದವರ ವಿರೋಧಕ್ಕೂ ಗುರಿಯಾಗಿ, ಮಠಾಧೀಶನ ಅನುಯಾಯಿಗಳಿಂದ ಹಲ್ಲೆಗಳು ಕೂಡ ಇವರ ಮೇಲೆ ನಡೆದವು. ಸಾಕಷ್ಟು ಪ್ರಾಣ ಬೆದರಿಕೆಗಳು ಕೇಳಿಬಂದವು. ಆದರೆ ಇದಾವುದನ್ನು ಲೆಕ್ಕಿಸದೆ ಜನಪರವಾದ ನೆಲೆಯಲ್ಲಿ ತಮ್ಮ ಹೋರಾಟವನ್ನು ಇಂದಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಇಂದಿಗೂ ತಮ್ಮ ಗುರುಗಳಾದ ಎಂ.ಎಂ ಕಲುಬುರ್ಗಿ, ಚಂಪಾ ಅವರು ಹಾಕಿಕೊಟ್ಟ ಮಾರ್ಗದಲ್ಲಿಯೇ ಮುನ್ನಡೆಯುತ್ತಿದ್ದಾರೆ.
ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರು ಕೇವಲ ಹೋರಾಟಗಾರರು ಮಾತ್ರವಲ್ಲದೆ ಹೆಸರಾಂತ ಬಂಡಾಯ ಸಾಹಿತಿಗಳು ಹೌದು. ಸಾಮಾಜಿಕ ಅಸಮಾನತೆ, ಅಸ್ಪøಶ್ಯತೆ, ಕೋಮುವಾದ, ಜಾತಿವಾದದ ವಿರುದ್ಧವಾಗಿ ತಮ್ಮ ದನಿಯನ್ನು ಎತ್ತುವ ಮೂಲಕ ಸಮಸಮಾಜ ಮತ್ತು ಶಾಂತಿಯುತ ಸಮಾಜದ ಕನಸು ಕಂಡವರು. ಸುಮಾರು 80 ರ ದಶಕದಲ್ಲಿ ಭಾರತದ ರಾಜಕೀಯದಲ್ಲಿ ಉಂಟಾದ ಅರಾಜಕತೆಯ ವಿರುದ್ಧ ಬಂಡಾಯದ ನೆಲೆಯಲ್ಲಿ ಜೆ.ಪಿ ಚಳವಳಿಗೆ ಹೆಗಲು ಕೊಟ್ಟು ನಿಂತವರು. ಇವರ ಸಾಹಿತ್ಯಿಕ ಬರಹಗಳಲ್ಲೂ ಇದೇ ಬಂಡಾಯದ ದನಿ ಪ್ರಮುಖವಾಗಿ ಎದ್ದು ಕಾಣುತ್ತದೆ. ಹಾಗೆಯೇ ಕೋಮುವಾದವನ್ನು ಸೃಷ್ಟಿಸುತ್ತಿರುವ ಬಿಜೆಪಿ ಹಾಗೂ ಆರ್.ಎಸ್.ಎಸ್ ಸಿದ್ಧಾಂತಗಳನ್ನು ವಿರೋಧಿಸುವ ನೆಲೆಯಲ್ಲಿ 1980ರ ಸುಮಾರಿನಲ್ಲಿಯೇ ಬಂಡಾಯದ ಕಳಹಳೆಯನ್ನು ಮೊಳಗಿಸಿದ ಕೀರ್ತಿಯು ಶ್ರೀಯುತರಿಗೆ ಸಲ್ಲುತ್ತದೆ. ಅಂದು ವಾಜಪೇಯಿಯವರ ಅಧ್ಯಕ್ಷತೆಯಲ್ಲಿ ಸಿದ್ಧಗೊಂಡ ಬಿಜೆಪಿಯ ಸಂಘಪರಿವಾರ ನೀತಿಯನ್ನು ಅನಾವರಣಗೊಳಿಸುವ ಇವರ ಕವಿತೆಯೊಂದು ಹೀಗಿದೆ;
ವಾಜಪೇಯ ಭಾಜಪೇಯ
ಹೊಚ್ಚ ಹೊಸ ಪೇಯ
ಕುಡಿಯಿರಯ್ಯ, ಕುಡಿಯದಿದ್ದರೆ
ಮೂಗ ಹಿಡಿದು ಕುಡಿಸಲಾಗುವುದು
ಕೇಳಿರಯ್ಯ, ಕೇಳ್ ಈರಯ್ಯ…
ಎಂದು ಗುಡುಗುವ ಅಲ್ಲಮಪ್ರಭು ಅವರು, ಅಂದಿನ ಬಿಜೆಪಿ ಮತ್ತು ಆರ್.ಎಸ್.ಎಸ್ ಮೂಲಭೂತವಾದಿ ಧೋರಣೆಗಳನ್ನು ವಿಡಂಬಿಸುವ ಇವರ ಮತ್ತೊಂದು ಕವಿತೆ ಹೀಗಿದೆ;
ಕುಂಕುಮದ ಕಲಿಗಳು ದೇಶವಾಳುವರು ಕೇಳಿರಣ್ಣ
ತುಪ್ಪದ ತಲೆಗಳು ರಾಜ್ಯವಾಳುವರು ಕೇಳಿರಣ್ಣ
ಹತ್ತು ವರ್ಷದಾಗ ಮೀನು ಬೀಳುತಾವ ತಿಳಿಯಿರಣ್ಣ
ಎಂಬ ಕವಿತೆಯನ್ನು ಹಿಂದೆ ಶರಣರ ವಚನಗಳ ಆಶಯಗಳನ್ನು ಸಾರುವ ಜಂಗಮರ ಧಾಟಿಯಲ್ಲಿ ವ್ಯಕ್ತಪಡಿಸಿದ್ದರು. ಅಂದರೆ ಸುಮಾರು 80 ರ ದಶಕದಲ್ಲಿ ಸಾರಿದ ಇವರ ಕವಿತೆಯ ಆಶಯವು ಇಂದಿಗೆ ಸತ್ಯವಾಗಿದೆ. ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬಂದರೆ ಏನೆಲ್ಲ ಅನಾಹುತಗಳಾಗಬಹುದು ಎಂಬುದನ್ನು ಅಂದೇ ಗ್ರಹಿಸಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ತರುವಾಯದಲ್ಲಿ ಕೋಮುವಾದ, ಭಯೋತ್ಪಾದನೆ, ವಿಚಾರವಾದಿಗಳ ಹತ್ಯೇ, ಅತ್ಯಾಚಾರದಂತಹ ಹೇಯ್ಯ ಕೃತ್ಯಗಳು ಸಹಜ ಕೃತ್ಯಗಳಂತೆ ನಡೆಯುತ್ತಿವೆ. ಸರ್ವಮಾನವರನ್ನು ಸಮಾನವಾಗಿ ಕಾಣುವ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂಬ ಘಂಟಾಘೋಷ ವಾಕ್ಯಗಳು ಎದೆಗಾರಿಕೆಯಿಂದ ಹೊರಬರುತ್ತಿವೆ. ಅಷ್ಟೇ ಅಲ್ಲದೆ ಸಂವಿಧಾನವನ್ನು ಸುಡುವುದರ ಮೂಲಕ ನಾವು ಸಂವಿಧಾನ ವಿರೋಧಿಗಳು ಎಂಬುದನ್ನು ಸಮರ್ಥಿಸಿಕೊಳ್ಳುವ ಪುಂಡಾಟಿಕೆಯನ್ನು ಬಿಜೆಪಿ ಮತ್ತದರ ಸಂಘಪರಿವಾರವು ಪ್ರದರ್ಶಿಸುತ್ತಿದೆ. ಆದ್ದರಿಂದ ಶ್ರೀಯುತ ಅಲ್ಲಮಪ್ರಭು ಅವರು ಅಂದು ನುಡಿದ ಕವಿವಾಣಿಯನ್ನು ಇದೊಂದು ಭವಿಷ್ಯವಾಣಿ ಎಂದರೆ ತಪ್ಪಾಗಲಾರದು. ಹೀಗೆ ಮೂಲಭೂತವಾದಿಗಳು ಮತ್ತು ಸನಾತನವಾದಿಗಳ ವಿರೋಧವನ್ನು ಕಟ್ಟಿಕೊಂಡೆ ಬಂಡಾಯ ಸಾಹಿತ್ಯ ಮತ್ತು ಜನಪರವಾದ ಚಳವಳಿಗಳನ್ನು ಮುಂದುವರೆಸಿಕೊಂಡು ಬಂದವರು. ಇವರ ಪ್ರಮುಖ ಕವನ ಸಂಕಲನಗಳೆಂದರೆ, ‘ಇದು ನನ್ನ ಭಾರತ’, ಕುದುರಿ ಮೋತಿ ಮತ್ತು ನೀಲಗಿರಿ’, ‘ಕೆಡಹಬಲ್ಲರು ಅವರು ಕಟ್ಟಬಲ್ಲೆವು ನಾವು’ ಇವು ಅವರ ಕವನ ಸಂಕಲನಗಳು. ‘ಗುಲಗಂಜಿ’ ಎಂಬ ಚುಟುಕು ಕವನ ಸಂಕಲನವನ್ನು ಪ್ರಕಟಿಸಿದ್ದಾರೆ. ಇದರ ಜೊತೆಯಲ್ಲಿ ‘ತಳಮಳ’ ಎಂಬ ಪತ್ರಿಕೆಯಲ್ಲಿ ‘ಪ್ರಚಲಿತ’ ಎಂಬ ಅಂಕಣವನ್ನು ಬರೆದು, ಈ ಅಂಕಣಗಳನ್ನು ‘ವರ್ತಮಾನ’ ಎಂಬ ಕೃತಿಯ ಮೂಲಕ ಸಂಕಲಿಸಿದ್ದಾರೆ. ಇಷ್ಟೇ ಅಲ್ಲದೆ ಹಲವಾರು ಸಂಪಾದನ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ ಕೀರ್ತಿಗೆ ಶ್ರೀಯುತರು ಪಾತ್ರರಾಗಿರುತ್ತಾರೆ. ಇವರ ಈ ಸಾಹಿತ್ಯ ಮತ್ತು ಹೋರಾಟದ ಹಾದಿಯನ್ನು ಗಮನಿಸಿ ಹಲವಾರು ಗೌರವ, ಪುರಸ್ಕಾರ ಮತ್ತು ಪ್ರಶಸ್ತಿಗಳು ಇವರ ಮುಡಿಗೇರಿವೆ. ಇವುಗಳಲ್ಲಿ ಕೆಲವು ಹೀಗಿವೆ; ಶಕ್ತಿನಗರದ ಕನ್ನಡ ಸಂಘದಿಂದ ‘ರಾಜ್ಯೋತ್ಸವ ಪ್ರಶಸ್ತಿ’, ಕರಾವಳಿಯ ಸಾಂಸ್ಕøತಿಕ ಸಂಘಟನೆಯಿಂದ ‘ಕರಾವಳಿ ಪ್ರಶಸ್ತಿ’, ಕೊಪ್ಪಳದ ಸ್ಥಳೀಯ ಸಂಘಟನೆಗಳಿಂದ ‘ಕನಕ ಪ್ರಶಸ್ತಿ’ಗಳು ಇವರ ಮುಡಿಗೇರಿವೆ. ಸಾಹಿತ್ಯದ ಮೇಲಿನ ವಿಶೇಷವಾದ ಕಾಳಜೀಯಿಂದಾಗಿ ಮತ್ತು ಸಾಹಿತಿಗಳಿಗೆ ಪ್ರೋತ್ಸಾಹಿಸುವ ಮೂಲಕ ಕನ್ನಡ ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸಬೇಕೆಂಬ ಕನಸ್ಸೊತ್ತು ಸಮಾನ ಮನಸ್ಕರೊಂದಿಗೆ ಸೇರಿ ‘ತಿರುಳ್ಗನ್ನಡ ಸಾಹಿತಿಗಳ ಸಹಕಾರ ಸಂಘ’ ಎಂಬ ಸಂಸ್ಥೆಯೊಂದನ್ನು ಕೊಪ್ಪಳ ಜಿಲ್ಲೆಯಲ್ಲಿ ಮೊದಲ ಭಾರಿಗೆ ಸ್ಥಾಪಿಸುವ ಮೂಲಕ ಸಾಹಿತ್ಯ ವಲಯಕ್ಕೆ ಮಾದರಿಯಾಗಿದ್ದಾರೆ. ಈ ಸಂಸ್ಥೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಈ ಸಹಕಾರಿ ಸಂಘದ ಮೂಲಕ ಕೃತಿ ಪ್ರಕಟಣೆ ಮಾಡುವ ಲೇಖಕರಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಕೈಗೊಳ್ಳಲಾಗಿದೆ.
ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರು ವೃತ್ತಿಯಲ್ಲಿ ಪ್ರಾಧ್ಯಾಪಕರಾಗಿ ಕೊಪ್ಪಳದಲ್ಲಿ ಸೇವೆಸಲ್ಲಿಸಿ, ಪ್ರಾಂಶುಪಾಲರಾಗಿ ನಿವೃತ್ತಿಯನ್ನು ಪಡೆದುಕೊಂಡಿದ್ದಾರೆ. ಇದರ ಜೊತೆಯಲ್ಲಿ ಚಂಪಾ ಅವರು ‘ಕನ್ನಡ ಅಭಿವೃದ್ಧಿ ಪ್ರಾಧಿಕಾರ’ದ ಅಧ್ಯಕ್ಷರಾದ ಸಂದರ್ಭದಲ್ಲಿ ಅಲ್ಲಮಪ್ರಭು ಅವರು ಸದಸ್ಯರಾಗಿ, ನಂತರ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಸೇವೆಸಲ್ಲಿಸಿರುತ್ತಾರೆ. ಇಂದು ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿಯೂ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರು ಮೂಲತಃ ಕೃಷಿಮೂಲ ಪರಂಪರೆಯಿಂದ ಬಂದವರಾಗಿದ್ದು, ‘ಕಾಯಕವೇ ಕೈಲಾಸ’ ಎಂಬ ಶರಣ ಮಾರ್ಗದಲ್ಲಿ ಮುನ್ನಡೆದವರು. ಹೀಗಾಗಿ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಆಸಕ್ತಿಯಿಂದಾಗಿ ಕೊಪ್ಪಳದ ಸಮೀಪದಲ್ಲಿ ಜಮೀನು ಖರೀದಿಸಿ ವ್ಯವಸಾಯಯಲ್ಲಿ ತಲ್ಲಿನರಾಗಿದ್ದಾರೆ. ಇವರ ಏಕೈಕ ಪುತ್ರರಾದ ಪುಟ್ಟರಾಜ್ ಪಾಟೀಲ್ ಅವರು ಕೂಡ ಸಾವಯವ ಕೃಷಿಯಲ್ಲಿ ತಲ್ಲಿನರಾಗಿದ್ದಾರೆ. ಪುಟ್ಟರಾಜ್ ಅವರು ಗೋಕಾಕ್ ಚಳವಳಿಯ ಸಂದರ್ಭದಲ್ಲಿ ಜನಿಸಿದ ಕಾರಣದಿಂದಾಗಿ, ಅದೇ ಚಳವಳಿಯಲ್ಲಿ ತಲ್ಲಿನರಾಗಿದ್ದ ಅಲ್ಲಮಪ್ರಭು ಅವರು ತಮ್ಮ ಮಗನಿಗೆ ಗೋಕಾಕ್ ಚಳವಳಿಯ ಪ್ರಮುಖ ರುವಾರಿಗಳಾದ ಪಾಟೀಲ್ ಪುಟ್ಟಪ್ಪ, ರಾಜ್ಕುಮಾರ್ ಹಾಗೂ ಚಂದ್ರಶೇಖರ್ ಪಾಟೀಲ್ ಅವರ ಹೆಸರುಗಳನ್ನು ಸಂಯೋಜಿಸಿ ‘ಪುಟ್ಟರಾಜ್ ಪಾಟೀಲ್’ ಎಂದು ನಾಮಕರಣ ಮಾಡಿದ್ದಾರೆ. ಇದು ಶ್ರೀಯುತರು ತಮ್ಮ ಗುರುಪರಂಪರೆ ಮತ್ತು ಹೋರಾಟ ಮಾರ್ಗದೊಂದಿಗೆ ಇವರಿಗಿರುವ ನಂಟನ್ನು ಎತ್ತಿಹಿಡಿಯುತ್ತದೆ. ಇಂದು ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರು ತಮ್ಮ ಶ್ರೀಮತಿ ಮಂಜುಳಾ, ಮಗ ಪುಟ್ಟರಾಜ್ ಪಾಟೀಲ್ ಹಾಗೂ ಮೊಮ್ಮಕ್ಕಳೊಂದಿಗೆ ಸರಳವಾದ ಜೀವನ ನಡೆಸುತ್ತಿದ್ದಾರೆ. ಇದರ ಜೊತೆಗೆ ಸಮಾಜಿಕ ಕಾಳಜಿಯೊತ್ತು ಹೋರಾಟ ಹಾಗೂ ವೈಚಾರಿಕ ಚಿಂತನೆಯ ಬೀಜಗಳನ್ನು ನಾಡಿಗೆ ಬಿತ್ತರಿಸುತ್ತಿದ್ದಾರೆ. ಇವರ ಈ ಬದುಕು ಮತ್ತು ಹೋರಾಟ ಯಶಸ್ವಿನೆಡೆಗೆ ಸಾಗಲಿ ಎಂಬುದು ನಮ್ಮೆಲ್ಲರ ಹಾರೈಕೆ.

ದಿನದ ಸುದ್ದಿ
ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.
ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ
ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.
ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.
‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.
‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.
ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ
ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.
ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ


