Connect with us

ಸಿನಿ ಸುದ್ದಿ

HaPpY BiRtHdAy | ಸ್ವಾಮಿ ದೇವನೆ ಲೋಕ ಪಾಲನೆ ತೇನಮೋಸ್ತು ನಮೋಸ್ತುತೇ | ಬಿ.ಆರ್. ಪಂತುಲು

Published

on

ದ್ಮಿನಿ ಪಿಕ್ಚರ್ಸ್ ಮೂಲಕ ಭಾರತೀಯ ಚಿತ್ರರಂಗದಲ್ಲಿ ಅಪಾರ ಜನಪ್ರಿಯತೆಗಳಿಸಿ ದಕ್ಷಿಣ ಭಾರತದಲ್ಲಿ ಕನ್ನಡ ಚಿತ್ರರಂಗವನ್ನು ಸದಭಿರುಚಿಯ ಸಿನಿಮಾಗಳ ಮೂಲಕ ಕೀರ್ತಿಯ ಉತ್ತುಂಗಕ್ಕೇರಿದ ಬಿ.ಆರ್. ಪಂತುಲು ಅವರಿಗೆ ಜನ್ಮದಿನದ ಶುಭಾಶಯಗಳು.

“ಸ್ವಾಮಿ ದೇವನೆ ಲೋಕಪಾಲನೆ ತೇನಮೋಸ್ತು ನಮೋಸ್ತುತೆ” ಎಂದು ಮಕ್ಕಳಿಗೆ ಪಾಠ ಹೇಳಿಕೊಟ್ಟು ನಮಗೆ ಇಷ್ಟವಾಗಿರುವ ಮೇಷ್ಟರ ಹಾಗೆ ಇವರೂ ಕೂಡಾ ಎಂದು ಭಾವ ಹುಟ್ಟಿಸಿದ ‘ಸ್ಕೂಲ್ ಮಾಸ್ಟರ್’ ಎಂದೇ ಪ್ರಿಯರಾದ ಬಿ.ಆರ್. ಪಂತುಲು ಅವರು ಕನ್ನಡಿಗರಿಗೆ ಮಾತ್ರವಲ್ಲ, ದಕ್ಷಿಣ ಭಾರತ ಚಿತ್ರರಂಗಕ್ಕೇ ಒಂದು ಅವಿಸ್ಮರಣೀಯ ನೆನಪು. ಅವರು ಶ್ರೀಕೃಷ್ಣದೇವರಾಯ ಚಿತ್ರದಲ್ಲಿ ಮಂತ್ರಿ ತಿಮ್ಮರಸುವಾಗಿ ಕಂಗೊಳಿಸಿದ ರೀತಿ ಅವಿಸ್ಮರಣೀಯವಾದುದು. “ಒಂದರಿಂದ ಇಪ್ಪತ್ತೊಂದರವರೆಗೆ ಜಂಜಾಟ, ಬಂಡಾಟ” ಎಂದು ಅವರ ಮೊದಲ ತೇದಿಯಲ್ಲಿ ಮೂಡಿದ ಹಾಡು, ಅಂದಿನ ಎಲ್ಲಾ ಮಧ್ಯಮ ಮತ್ತು ಕೆಳವರ್ಗದ ಜನಕ್ಕೆ ಇದು ನಮ್ಮ ಜೀವನವೇ ಎಂದು ಅನ್ವಯಿಸಿಕೊಳ್ಳುವಷ್ಟು ಪ್ರಖ್ಯಾತವಾಗಿತ್ತು. ತಮಿಳು ಗೊತ್ತಿದ್ದು ಅಂದಿನ ಕರ್ಣ ತಮಿಳು ಚಿತ್ರದ ‘ಉಳ್ಳತ್ತಿಲ್ ನಲ್ಲ ಉಳ್ಳಂ ಉರಂಗಾದು ಎನ್ಬದು … ವಲ್ಲವನ್ ವಗುತ್ತದಡ’ ಹಾಡು ಕೇಳಿದ್ದರೆ, ಕರ್ಣನಂತಹವನಿಗೇ ಹೀಗಾಯಿತಲ್ಲಾ ಎಂದು ಸ್ವಯಂ ಕೃಷ್ಣನೇ ಶೋಕಿಸುವ ಈ ಸೃಷ್ಟಿಯ ಪರಿ ಆತ್ಮೀಯವಾಗಿತ್ತು. ಕನ್ನಡ ಚಿತ್ರರಂಗದ ಸುವರ್ಣಯುಗದ ಹರಿಕಾರ, ಬೆಳ್ಳಿತೆರೆಯ ಗಾರುಡಿಗರೆಂದೇ ಅವರು ಪ್ರಸಿದ್ಧಿ.

ರಾಜ್ ಕುಮಾರ್ ಅವರು ಕೃಷ್ಣದೇವರಾಯನಾಗಿ ಪ್ರಸಿದ್ಧಿ ಪಡೆದುದು ಮಾತ್ರವಲ್ಲ ಅವರ ಹಲವಾರು ಮನೋಜ್ಞ ಚಿತ್ರಗಳನ್ನು ನಿರ್ಮಿಸಿದವರು ಪಂತುಲು ಅವರೇ. ನರಸಿಂಹರಾಜು ಅವರ ಸುಂದರ ಅಭಿನಯವನ್ನು ಕನ್ನಡ ಚಿತ್ರಗಳಲ್ಲಿ ಪ್ರಧಾನ ಅಂಶವಾಗಿ ರೂಪಿಸಿ ಮೆರೆಸಿದವರು ಕೂಡಾ ಪಂತುಲು ಅವರೇ. ಸ್ಕೂಲ್ ಮಾಸ್ಟರ್ ಚಿತ್ರದಲ್ಲಿ ಅವರ ವಿದ್ಯಾರ್ಥಿಯಾಗಿ ರೂಪಿತನಾದ ಶಿವಾಜಿ ಗಣೇಶನ್ ಅವರನ್ನು ವೀರಪಾಂಡ್ಯ ಕಟ್ಟಬೊಮ್ಮನ್, ಕರ್ಣ ಅಂತಹ ಪಾತ್ರಗಳಿಂದ ರೂಪಿಸಿದವರು ಪಂತುಲು ಅವರೇ. ಕಿತ್ತೂರು ರಾಣಿ ಚೆನ್ನಮ್ಮನನ್ನು ಸುಂದರ ಅಭಿನೇತ್ರಿಯಾದ ಬಿ. ಸರೋಜಾದೇವಿಯವರಲ್ಲಿ ಮರೆಯಲಾಗದಂತೆ ಮೂಡಿಸಿದವರು ಕೂಡಾ ಪಂತುಲು ಅವರೇ. ಅಷ್ಟೇಕೆ ನಮ್ಮ ಕನ್ನಡದ ಶ್ರೇಷ್ಠ ದಿಗ್ದರ್ಶಕ ಪುಟ್ಟಣ್ಣ ಕಣಗಾಲ್, ಸಾಹಿತಿ ಕಣಗಾಲ್ ಪ್ರಭಾಕರ ಶಾಸ್ತ್ರಿ, ಸಂಗೀತ ನಿರ್ದೇಶಕ ಟಿ.ಜಿ. ಲಿಂಗಪ್ಪ, ನಟಿಯಾದ ಪಂತುಲು ಅವರ ಪತ್ನಿ ಎಂ.ವಿ.ರಾಜಮ್ಮ ಇವರುಗಳೆಲ್ಲಾ ಶ್ರೇಷ್ಠರಾಗಿ ಹೊರಹೊಮ್ಮಿದ್ದು ಪಂತುಲು ಅವರ ಪದ್ಮಿನಿ ಪಿಕ್ಚರ್ಸ್ ಗರಡಿಯಲ್ಲೇ.

ಬಡಗೂರು ರಾಮಕೃಷ್ಣ ಪಂತುಲು ಅವರು ಜನಿಸಿದ್ದು 1911 ಜುಲೈ 28ರಂದು ಕರ್ನಾಟಕ-ಆಂಧ್ರಪ್ರದೇಶದ ಗಡಿಯಲ್ಲಿನ ಬಂಗಾರ ಪೇಟೆಯ ಬಳಿಯಿರುವ ಕುಪ್ಪಂನಿಂದ ಹನ್ನೊಂದು ಕಿಲೋಮೀಟರ್ ದೂರದ ಕುಗ್ರಾಮ ಬಡಗೂರಿನಲ್ಲಿ. ಗಡಿ ಪ್ರದೇಶದಲ್ಲಿರುವ ಈ ಊರಿನಲ್ಲಿ ಕನ್ನಡದಂತೆ ತೆಲುಗು, ತಮಿಳು ಕೂಡ ಮುಖ್ಯ ಭಾಷೆಗಳಾಗಿದ್ದವು. ಹೀಗಾಗಿ ಬಾಲ್ಯದಿಂದಲೇ ಪಂತುಲು ಅವರಿಗೆ ಮೂರು ಭಾಷೆಗಳ ಒಡನಾಟ ಬರಲು ಕಾರಣವಾಯಿತು. ಪಂತುಲು ಅವರ ತಂದೆ ವೆಂಕಟಾಚಲಯ್ಯನವರಿಗೆ ಕಿರಿಯವರಾದ ಪಂತುಲು ಸೇರಿದಂತೆ ಐವರು ಮಕ್ಕಳು, ಮೂರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳು. ಪಂತುಲು ಅವರ ತಂದೆ ಸಂಗೀತ, ಸಾಹಿತ್ಯ ಮತ್ತು ನೃತ್ಯಗಳಲ್ಲಿ ಉತ್ತಮ ಅಭಿರುಚಿ ಪಡೆದಿದ್ದರು. ಆಗಾಗ ಊರಿನಲ್ಲಿ ನಾಟಕಗಳನ್ನು ಆಡಿಸುತಿದ್ದರು. ತಂದೆಯ ಜೊತೆ ಮಗನೂ ಆಗಾಗ ರಂಗ ತರಬೇತಿ ನೋಡಲು ಹೋಗುತ್ತಿದ್ದನು. ಚಂದ್ರಹಾಸನ ಪಾತ್ರ ನೀಡುವ ಮೂಲಕ ತಂದೆಯೇ ಆತನ ರಂಗ ಪ್ರವೇಶಕ್ಕೆ ಕಾರಣಕರ್ತರಾದರು.

ರಾಮಕೃಷ್ಣರ ಪ್ರಾಥಮಿಕ ಶಿಕ್ಷಣ ಬಡಗೂರಿನಲ್ಲಿಯೇ ನಡೆದರೂ ಮುಂದಿನ ಶಿಕ್ಷಣಕ್ಕೆ ಅಲ್ಲಿ ಅವಕಾಶ ಇರದ ಕಾರಣ ತಮ್ಮ ತಾತನ ಮನೆಯಾದ ಕೊಲಾರದಲ್ಲಿದ್ದು ಎಸ್.ಎಸ್.ಎಲ್.ಸಿ.ವರೆಗಿನ ಶಿಕ್ಷಣ ಪಡೆದರು. ಶಾಲಾ ಜೀವನದಲ್ಲಿಯೂ ಅವರು ನಾಟಕದ ಅಭಿನಯದಲ್ಲಿ ಪ್ರಸಿದ್ದಿ ಪಡೆದಿದ್ದರು. ಪಂತುಲು ಮುಂದೆ ಪ್ರಾಥಮಿಕ ಶಿಕ್ಷಕರಾಗಿ ನೇಮಕಗೊಂಡರು. ಕಲಾವಿದರಾದ ಅವರು ಶಾಲೆಯಲ್ಲಿ ಪಾಠ ಮಾಡಿದ್ದಕ್ಕಿಂತ ಮಕ್ಕಳಿಗೆ ನಾಟಕ ಕಲಿಸಿದ್ದೇ ಹೆಚ್ಹು. ಒಂದುದಿನ ವಿದ್ಯಾ ಇಲಾಖೆಯ ಇನ್ಸ್ಪೆಕ್ಟರ್ ಶಾಲೆಗೆ ಬಂದಾಗ, ಪಾಠ ಮಾಡುವ ಬದಲು ಮಕ್ಕಳಿಗಾಗಿ ನಾಟಕ ಕಲಿಸುತ್ತಿದ್ದ ಪಂತುಲು ಅವರನ್ನು ಕಂಡು ಕೆಂಡಾಮಂಡಲವಾದರು. ಇನ್ನೊಮ್ಮೆ ಹೀಗಾದರೆ ವಜಾಮಾಡುವೆನೆಂದು ನೋಟೀಸ್ ಜಾರಿ ಮಾಡಿದರು. ಇದರಿಂದ ನೊಂದ ಪಂತುಲು ಶಿಕ್ಷಕ ವ್ರತ್ತಿಗೆ ರಾಜೀನಾಮೆ ನೀಡಿ ಕಲೆಯಲ್ಲಿಯೇ ಬದುಕನ್ನು ಅರಸುತ್ತ ಬೆಂಗಳೂರಿಗೆ ಬಂದು ಅವರ ಹಿರಿಯರಾದ ಪಾಪಯ್ಯನವರಿದ್ದ ಮಹಮ್ಮದ್ ಪೀರ್ ಅವರ ‘ಚಂದ್ರಕಲಾ ನಾಟಕ ಮಂಡಳಿ’ಗೆ ಸೇರಿದರು. ಮುಂದೆ ಇವರಿಗೆ ಹೆಚ್ ಎಲ್ ಎನ್ ಸಿಂಹ ಮತ್ತು ಮಹಮದ್ ಪೀರ್ ಅವರ ಗೆಳೆತನ ಬಣ್ಣದಲೋಕದ ನಂಟನ್ನು ತಂದಿತು. ಪಂತುಲು ಅವರ ಮಗ ರವಿಶಂಕರ್ ಕೆಲ ಕಾಲ ಚಿತ್ರ ನಿರ್ಮಾಣದಲ್ಲಿ ತೊಡಗಿದ್ದರು. ಮಗಳು ಬಿ.ಆರ್.ವಿಜಯಲಕ್ಷ್ಮಿ ಛಾಯಾಗ್ರಾಹಕಿಯಾಗಿ ಹೆಸರು ಮಾಡಿದ್ದರು.

ಪಂತುಲು ಅವರು 1936ರಲ್ಲಿ ‘ಸಂಸಾರ ನೌಕೆ’ ಚಲನಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದರು. ‘ರಾಧಾ ರಮಣ’ ಚಲನಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದರು. 1955ರಲ್ಲಿ ಪಂತುಲು ಅವರು ಪ. ನೀಲಕಂಠನ್ ಸಹಯೋಗದೊಂದಿಗೆ ಪದ್ಮಿನಿ ಪಿಕ್ಚರ್ಸ್ ಸಂಸ್ಥೆ ಸ್ಥಾಪಿಸಿ ‘ಮೊದಲ ತೇದಿ’ ಎಂಬ ಚಿತ್ರ ನಿರ್ಮಿಸಿದರು. ಎರಡನೆ ಚಿತ್ರ ‘ಶಿವಶರಣೆ ನಂಬೆಕ್ಕ’. 1957ರಲ್ಲಿ ಕುತೂಹಲಭರಿತ ‘ರತ್ನಗಿರಿ ರಹಸ್ಯ’ ಎಂಬ ಚಿತ್ರವನ್ನು ನಿರ್ಮಿಸಿದರು. ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಸಾಹಿತ್ಯ, ಟಿ ಜಿ ಲಿಂಗಪ್ಪ ಅವರ ಸಂಗೀತ ಈ ಚಿತ್ರಕ್ಕೆ ಅಪಾರ ಯಶಸ್ಸನ್ನು ತಂದುಕೊಡುವಲ್ಲಿ ನೆರವಾದವು. ಕನ್ನಡ ಚಿತ್ರರಂಗದಲ್ಲೇ ಮೊದಲ ಬಾರಿಗೆ ರಜತೋತ್ಸವ ಆಚರಿಸಿದ ಸಾಮಾಜಿಕ ಚಿತ್ರವೆಂದು ಖ್ಯಾತಿ ಪಡೆದ ‘ಸ್ಕೂಲ್ ಮಾಸ್ಟರ್’ ಚಿತ್ರವನ್ನು 1958ರಲ್ಲಿ ನಿರ್ಮಿಸಿದರು. ಅನಂತರ ಅವರ ಪದ್ಮಿನಿ ಪಿಕ್ಚರ್ಸ್‌‍ನಲ್ಲಿ ಕಿತ್ತೂರು ಚೆನ್ನಮ್ಮ, ಮಕ್ಕಳ ರಾಜ್ಯ, ಗಾಳಿ ಗೋಪುರ, ಚಿನ್ನದ ಗೊಂಬೆ, ಎಮ್ಮೆ ತಮ್ಮಣ್ಣ, ಬೀದಿ ಬಸವಣ್ಣ, ಅಮ್ಮ, ಶ್ರೀ ಕೃಷ್ಣದೇವರಾಯ, ಮಾಲತಿ ಮಾಧವ, ಒಂದು ಹೆಣ್ಣಿನ ಕಥೆ ಮುಂತಾದ ಅಮೋಘ ಚಿತ್ರಗಳು ನಿರ್ಮಾಣವಾದವು. ಇವುಗಳಲ್ಲಿ ‘ಸ್ಕೂಲ್ ಮಾಸ್ಟರ್’ ಮತ್ತು ‘ಕಿತ್ತೂರು ಚೆನ್ನಮ್ಮ’ ಚಿತ್ರಗಳು ರಾಷ್ಟ್ರಪ್ರಶಸ್ತಿ ಪಡೆದವು.”ಶ್ರೀ ಕೃಷ್ಣದೇವರಾಯ” ಚಿತ್ರಕ್ಕೆ ಫಿಲಂ ಫೇರ್ ಪ್ರಶಸ್ತಿ ದೊರಕಿತು. ಇದೇ ಚಿತ್ರದಲ್ಲಿ ಬಿ.ಆರ್.ಪಂತುಲು ಅವರು ನಿರ್ವಹಿಸಿದ ‘ತಿಮ್ಮರಸು’ ಪಾತ್ರಕ್ಕೆ ಶ್ರೇಷ್ಥ ನಟ ಪ್ರಶಸ್ತಿ ದೊರೆಯಿತು. ಶ್ರೀ ಕೃಷ್ಣದೇವರಾಯ ಚಿತ್ರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ಬಿ.ಆರ್. ಪಂತುಲು ನಿರಾಕರಿಸಿದ್ದರು. ಆ ಸಿನಿಮಾದ ಅತ್ಯುತ್ತಮ ಅಭಿನಯಕ್ಕಾಗಿ ರಾಜ್‌ಕುಮಾರ್ ಅವರಿಗೆ ಪ್ರಶಸ್ತಿ ನೀಡಬೇಕಿತ್ತು ಎನ್ನುವುದು ಅವರ ವಾದವಾಗಿತ್ತು.

ಬಿ.ಆರ್.ಪಂತುಲು ಸುಮಾರು ಇಪ್ಪತ್ತೈದು ವರ್ಷಗಳ ಕಾಲ, ನಾಲ್ಕು ಭಾಷೆಗಳಲ್ಲಿ ಐವತ್ತಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿ, ಚಿತ್ರೋದ್ಯಮಕ್ಕಾಗಿ ತಮ್ಮನ್ನೇ ತಾವು ತೇದುಕೊಂಡ ಮಹಾಪರುಷ. ಇವರು ಉದ್ಯಮಕ್ಕೆ ಕಾಲಿಟ್ಟಾಗ ಕನ್ನಡ ಚಿತ್ರರಂಗವಿನ್ನೂ ಕುಂಟುತ್ತಿತ್ತು. ಮದ್ರಾಸಿನಿಂದ ತಯಾರಾಗುತ್ತಿದ್ದ ಕನ್ನಡ ಚಿತ್ರಗಳಲ್ಲಿ ಕನ್ನಡತನವನ್ನು ಹುಡುಕಬೇಕಾಗಿತ್ತು. ಇದನ್ನ ಮನಗಂಡ ಪಂತುಲು ತಮಿಳರೊಂದಿಗೆ ಕಲೆತು ಮೊಟ್ಟಮೊದಲಿಗೆ `ಮೊದಲ ತೇದಿ’ ಚಿತ್ರ ನಿರ್ಮಿಸಿದರು. ಇದು ಸರ್ಕಾರಿ ನೌಕರನ ಬದುಕಿನ ಬವಣೆಯ ಸುತ್ತಲಿನದು. ಅಂದಿನ ಸಾಮಾಜಿಕ ಸ್ಥಿತಿಗತಿಯನ್ನು ಪ್ರತಿಬಿಂಬಿಸುವಂಥಾದ್ದು. ಚಿತ್ರ ಹಿಟ್ ಆಯ್ತು. ಧೈರ್ಯ ಬಂತು. ತಮಿಳಿನ ಒಡನಾಟದಲ್ಲಿದ್ದುಕೊಂಡೇ ಕನ್ನಡ ಚಿತ್ರ ನಿರ್ಮಾಣಕ್ಕೆ ಕೈ ಹಾಕಿದರು. ರಾಜ್ ಕುಮಾರ್, ನರಸಿಂಹರಾಜು, ಚಿ.ಉದಯಶಂಕರ್, ಪುಟ್ಟಣ್ಣ ಕಣಗಾಲರಂತಹ ಪ್ರತಿಭಾವಂತರನ್ನು ಕನ್ನಡ ಚಿತ್ರರಂಗಕ್ಕೆ ಕೊಡುಗೆಯಾಗಿ ಕೊಟ್ಟರು. ರಾಜ್ ಕುಮಾರ್ ಅವರಿಗಾಗಿಯೇ ಗಾಳಿಗೋಪುರ, ಸಾಕುಮಗಳು, ಎಮ್ಮೆ ತಮ್ಮಣ್ಣ, ಬೀದಿ ಬಸವಣ್ಣ, ಅಮ್ಮ, ಗಂಡೊಂದು ಹೆಣ್ಣಾರು ಚಿತ್ರಗಳನ್ನು ಮಾಡಿದ ಪಂತುಲು, ನರಸಿಂಹರಾಜು ಅವರಿಗಾಗಿಯೇ ಪ್ರತ್ಯೇಕ ಪಾತ್ರ ಸೃಷ್ಟಿಸಿ ಹಾಸ್ಯದ ಹೊಸ ಟ್ರ್ಯಾಕೊಂದನ್ನು ಅನಿವಾರ್ಯವಾಗಿ ಚಿತ್ರದಲ್ಲಿರುವಂತೆ ನೋಡಿಕೊಂಡರು. ಹಾಗೆಯೇ ಇವರ ಸರಿಸುಮಾರು ಎಲ್ಲಾ ಚಿತ್ರಗಳಿಗೂ ಟಿ.ಜಿ.ಲಿಂಗಪ್ಪ ಸಂಗೀತ ನಿರ್ದೇಶಕರಾಗಿದ್ದುದು ಒಂದು ವಿಶೇಷ.

ಪಂತುಲು ಅವರು ‘ಕಾಲೇಜು ರಂಗ’ ಚಿತ್ರದ ಸಿದ್ಧತೆಯಲ್ಲಿದ್ದಾಗ, ಅಕ್ಟೋಬರ್ 8, 1974ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದರು. ಅವರ ಪಟ್ಟ ಶಿಷ್ಯ ಪುಟ್ಟಣ್ಣ ಕಣಗಾಲರು ಈ ಚಿತ್ರವನ್ನು ಪೂರ್ತಿ ಮಾಡಿ, ಗುರುಕಾಣಿಕೆಯಾಗಿ ಅರ್ಪಿಸಿದರು. ಇದು ಪದ್ಮಿನಿ ಪಿಕ್ಚರ್ಸ್‌ ಅವರ ಕೊನೆಯ ಚಿತ್ರವಾಯಿತು. ಆ ಮೂಲಕ ಭಾರತೀಯ ಚಿತ್ರರಂಗದ ಸುವರ್ಣ ಅಧ್ಯಾಯವೊಂದು ಕೊನೆಗೊಂಡಿತು.

ಪುಟ್ಟಣ್ಣ ಕಣಗಾಲರ ಪ್ರಕಾರ ಜನಸಾಮಾನ್ಯರನ್ನು ಚಿತ್ರಮಂದಿರಗಳತ್ತ ತರುವಂತೆ ಕನ್ನಡ ಚಿತ್ರರಂಗಕ್ಕೆ ಭದ್ರ ಬುನಾದಿ ಹಾಕಿದ್ದು ಬಿ.ಆರ್. ಪಂತುಲು. ಅವರು ಅಭಿನಯ-ನಿರ್ದೇಶನ-ನಿರ್ಮಾಣ ಈ ಮೂರೂ ಕಲೆಗಳನ್ನು ಕರಗತ ಮಾಡಿಕೊಂಡು ಕನ್ನಡ ಚಿತ್ರರಂಗವನ್ನು ಅತ್ಯುತ್ತಮ ಗುಣಮಟ್ಟದ ಚಿತ್ರಗಳಿಂದ ಶ್ರೀಮಂತಗೊಳಿಸಿದವರು. 1957ರಿಂದ 1972ರವರೆಗೆ ಅವರು ಕನ್ನಡದಲ್ಲಿ ನಿರ್ಮಿಸಿದ ಚಿತ್ರಗಳು, ಕನ್ನಡ ಚಿತ್ರರಂಗದತ್ತ ಇಡೀ ಭಾರತೀಯ ಚಿತ್ರರಂಗವೇ ನೋಡುವಂಥ ಇತಿಹಾಸವನ್ನು ನಿರ್ಮಿಸಿತ್ತು. ಅವರ ಶೇಕಡಾ 90ರಷ್ಟು ಚಿತ್ರಗಳಲ್ಲಿ ಡಾ. ರಾಜ್‌ಕುಮಾರ್ ನಾಯಕನಟರಾಗಿ ಅಭಿನಯಿಸಿರುವುದೊಂದು ವಿಶೇಷ. ಜೊತೆಗೆ ಸ್ವತಃ ಬಿ.ಆರ್.ಪಂತುಲುರವರೂ ಒಂದು ಮುಖ್ಯ ಪೋಷಕ ಪಾತ್ರದಲ್ಲಿದ್ದು ತಂದೆಯಂತೆ ಆ ಇಡೀ ಚಿತ್ರದ ಏಳಿಗೆಗೆ ಕಾರಣವಾಗುತ್ತಿದ್ದುದು ಆ ಚಿತ್ರಗಳ ಮತ್ತೊಂದು ಸುವಿಶೇಷ.

1955ರಲ್ಲಿ ಪದ್ಮಿನಿ ಪಿಕ್ಚರ್ಸ್‌ ಲಾಂಛನದಡಿಯಲ್ಲಿ ಪಂತುಲುರವರು ತಮ್ಮ ಚಿತ್ರ ನಿರ್ಮಾಣವನ್ನು ಆರಂಭಿಸಿದರಾದರೂ, ಅವರ ಚಿತ್ರಗಳನ್ನು “ಪಂತುಲು ಚಿತ್ರಗಳು” ಎಂದು ಕರೆಯುವುದೇ ವಾಡಿಕೆ. ‘ಸ್ಕೂಲ್ ಮಾಸ್ಟರ್’ ಚಿತ್ರದ ಧ್ಯಾನದ ಆರಂಭವಾದ “ಸ್ವಾಮಿ ದೇವನೆ” ಎಂಬ ಒಂದು ಹಾಡು ಸಾಕು, ಪಂತುಲು ಅವರು ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಪ್ರಾತಃ ಸ್ಮರಣೀಯರಾಗಲು. ಸೋಸಲೆ ಅಯ್ಯಾ ಶಾಸ್ತ್ರಿಗಳ ಈ ಗೀತೆಯನ್ನು ಕಣಗಾಲ್ ಪ್ರಭಾಕರ ಶಾಸ್ತ್ರಿಗಳು ಒಂದಷ್ಟು ಬದಲಾವಣೆಯಿಂದ ಚಿತ್ರಗೀತೆಯಾಗಿ ಅಳವಡಿಸಿದ್ದರು. ಈ ಹಾಡು ನಮ್ಮ ನಿಮ್ಮೆಲ್ಲರ ಪ್ರೈಮರಿ ಶಾಲೆಯ ಮಗ್ಗಿ ಪುಸ್ತಕದ ಮೊದಲ ಪುಟದ ಪ್ರಾರ್ಥನಾ ಗೀತೆ ಯಾಗಿ ಸೇರಿಕೊಂಡು ಸಿನಿಮಾ ಹಾಡೆಂಬ ಪ್ರತ್ಯೇಕತೆಯ ರಿಯಾಯಿತಿಯಿಲ್ಲದಂತೆ ನಮ್ಮಲ್ಲಿ ಉತ್ಸಾಹ ತರುವ ಪ್ರಾರ್ಥನೆಯೇ ಆಗಿ ಹೋಗಿತ್ತು. ಇಂದೂ ಬಹಳಷ್ಟು ಶಾಲೆಗಳು ಇದನ್ನು ಪ್ರಾರ್ಥಣೆಯಾಗಿ ಬಳಸುತ್ತಿವೆ. ‘ಸ್ಕೂಲ್‌ಮಾಸ್ಟರ್’ ಚಿತ್ರದಲ್ಲಿ ಮೇಷ್ಟ್ರರಾಗಿ ಸ್ವತಃ ಪಂತುಲುರವರ ಮನೋಜ್ಞ ಅಭಿನಯ-ಹಾವಭಾವ ಅಪ್ರತಿಮವಾದದ್ದು. ಮೇಷ್ಟ್ರರ ಹೆಂಡತಿಯಾಗಿ ಅವರ ನಿಜ ಜೀವನದ ಪತ್ನಿಯೂ ಆಗಿದ್ದ ಎಂ.ವಿ. ರಾಜಮ್ಮನವರು ಪಂತುಲುವಿಗೆ ತಕ್ಕಂತೆ ಅಭಿನಯಿಸಿದ್ದರು.

ರತ್ನಗಿರಿ ರಹಸ್ಯ, ಸ್ಕೂಲ್ ಮಾಸ್ಟರ್, ಮಕ್ಕಳ ರಾಜ್ಯ, ಕಿತ್ತೂರು ಚೆನ್ನಮ್ಮ, ಗಾಳಿಗೋಪುರ, ಸಾಕು ಮಗಳು, ಚಿನ್ನದ ಗೊಂಬೆ, ದುಡ್ಡೇ ದೊಡ್ಡಪ್ಪ, ಎಮ್ಮೆ ತಮ್ಮಣ್ಣ, ಗಂಗೆ ಗೌರಿ, ಬೀದಿ ಬಸವಣ್ಣ, ಚಿನ್ನಾರಿ ಪುಟ್ಟಣ್ಣ, ಅಮ್ಮ, ಗಂಡೊಂದು ಹೆಣ್ಣಾರು, ಶ್ರೀ ಕೃಷ್ಣದೇವರಾಯ, ಅಳಿಯ ಗೆಳೆಯ, ಮಾಲತಿ ಮಾಧವ, ಒಂದು ಹೆಣ್ಣಿನ ಕಥೆ ಮುಂತಾದವು ಪಂತುಲು ಅವರ ಕನ್ನಡ ಚಿತ್ರಗಳಾದರೆ, ಕರ್ಣ, ಅಮರ್ ಶಹೀದ್, ವೀರ ಪಾಂಡ್ಯ ಕಟ್ಟಬೊಮ್ಮನ್, ದಶಾವತಾರ ಪಂತುಲು ಅವರು ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ನಿರ್ಮಿಸಿ ನಿರ್ದೇಶಿಸಿದ ಕೆಲವು ಚಿತ್ರಗಳು. ಈ ಮಹಾನ್ ಚೇತನಕ್ಕೆ ನಮ್ಮ ಹೃತ್ಪೂರ್ವಕ ನಮನಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

Published

on

ವಿದ್ಯಾನಾಯ್ಕ್ ಅರೇಹಳ್ಳಿ

ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ.

ಮುಖ್ಯ ಪಾತ್ರದಲ್ಲಿ ಅರ್ಜುನ್ ಚೌಹಾಣ್, ಬಸವರಾಜ್ ಕುಮಾರ್, ಪ್ರಿಯದರ್ಶಿನಿ, ಶಂಕರ್ ಅಶ್ವತ್ಥ್ ಮತ್ತು ಇತರರು ಕಾಣಿಸಿಕೊಂಡಿದ್ದು, ಮೈಸೂರು ರಾಜು ಅವರು ಕಥೆ, ಚಿತ್ರಕಥೆ, ನೃತ್ಯ, ನಿರ್ದೇಶನದಲ್ಲಿ ಚಿತ್ರ ಅಚ್ಚುಕಟ್ಟಾಗಿ ಮೂಡಿಬಂದಿದೆ.
ನಾಗರತ್ನಮ್ಮ ಚಿತ್ರದ ನಿರ್ಮಾಪಕರು ಆಗಿದ್ದು, ಲಕ್ಷ್ಮಿ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇನ್ನು ಎ. ಟಿ. ರವೀಶ್ ಸಂಗೀತ ಪ್ರೇಕ್ಷಕರನ್ನ ಹಿಡಿದಿಟ್ಟುಕೊಳ್ಳಲಿದೆ, ಅರವಿಂದ್ ರಾಜ್ ಅವರ ಸಂಕಲನ, ರಾಮನಾಥ್ ರಾಜ್ ಛಾಯಾಗ್ರಹಣಾವಿದೆ ಎನ್ನುತ್ತಾರೆ ಚಿತ್ರದ ನಾಯಕ ಅರ್ಜುನ್ ಚೌಹಾಣ್.

ಅರ್ಜುನ್ ಚೌಹಾಣ್ ಕೇವಲ ಸಿನಿಮಾಗಳಲ್ಲದೆ, ಬಂಜಾರ ಸಮುದಾಯದ ಸಂಸ್ಕೃತಿಯನ್ನು ಬಿಂಬಿಸುವ ಮತ್ತು ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಬಂಜಾರ ಹವೇಲಿ ಎಂಬ ರಿಯಾಲಿಟಿ ಶೋ ಅನ್ನು ಕೂಡ ಯಶಸ್ವಿಯಾಗಿ ನಡೆಸಿ, ನಿರ್ದೇಶಿಸಿದ್ದಾರೆ. ಅದಲ್ಲದೆ ಈ ಹಿಂದೆ ರುದ್ರಾಕ್ಷಿಪುರ, ಸ್ವಚ್ಛ ಕರ್ನಾಟಕ, ಉತ್ತರ, ನಾಕುತಂತಿ, ಇತ್ಯಾದಿ ಚಿತ್ರಗಳಲ್ಲಿ ನಟಿಸಿದ್ದು, ಉತ್ತರ ಮತ್ತು ನಾಕುತಂತಿ ರಿಲೀಸ್ ಆಗಬೇಕಿದೆ.

ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಗುರುತಿಸಿಕೊಳ್ಳುತ್ತಿರುವ ಅರ್ಜುನ್ ಚೌಹಾಣ್ ಚಿಕ್ಕ ವಯಸ್ಸಿನಿಂದಲೇ ಬೆಳ್ಳಿಪರದೆಯ ಮೇಲೆ ಹೀರೊ ಆಗಬೇಕೆಂಬ ದೊಡ್ಡ ಕನಸನ್ನು ಹೊತ್ತು ಸಿನಿರಂಗಕ್ಕೆ ಬಂದ ಬಂಜಾರ ಸಮುದಾಯದ ಪ್ರತಿಭೆ. ತಾವೊಬ್ಬ ನಟನಾಗಬೇಕು ಎಂಬ ಹಂಬಲದಿಂದ ಚಿತ್ರರಂಗ ಪ್ರವೇಶಿಸಿದ ಇವರು ತಮ್ಮದೇ ಆದ ಶೈಲಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ.

ನಾಯಕ ನಟನಾಗಿ ​ರುದ್ರಾಕ್ಷಿಪುರ ಚಿತ್ರದ ಮೂಲಕ ಬೆಳ್ಳಿಪರದೆಗೆ ಕಾಲಿಟ್ಟ ಇವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದಿದ್ದರು.

ಇನ್ನು 2022ರಲ್ಲಿ ​ಸ್ವಚ್ಛ ಕರ್ನಾಟಕ ಎಂಬ ಸಾಮಾಜಿಕ ಸಂದೇಶವುಳ್ಳ ಸಿನಿಮಾದಲ್ಲಿ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರಂತಹ ಗಣ್ಯರೊಂದಿಗೆ ಕೆಲಸ ಮಾಡುವ ಅವಕಾಶ ಪಡೆದದ್ದು ಇವರ ಪ್ರತಿಭೆಗೆ ರಹದಾರಿ ಸೃಷ್ಟಿಸಿದಂತಾಗಿತ್ತು. ಇದೀಗ ​ಕುಚುಕು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪರಿಶ್ರಮ ಮತ್ತು ಫಿಟ್ನೆಸ್

ಪರಿಶ್ರಮ ಮತ್ತು ಫಿಟ್ನೆಸ್ ಗೆ ಮಹತ್ವ ಕೊಡುವ ಅರ್ಜುನ್ ಸಿನಿಮಾಗಳಲ್ಲಿ ಹೀರೊ ಆಗಲು ಬೇಕಾದ ದೈಹಿಕ ಕಸರತ್ತು, ಸಿಕ್ಸ್ ಪ್ಯಾಕ್ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮತ್ತು ನಟನಾ ಕೌಶಲಗಳಿಗಾಗಿ ಇವರು ಸಾಕಷ್ಟು ಶ್ರಮವಹಿಸಿದ್ದಾರೆ.

ಆಲ್ಬಮ್ ಸಾಂಗ್ಸ್ ಮತ್ತು ಶಾರ್ಟ್ ಫಿಲ್ಮ್ಸ್

ಕುಚುಕು ನಾಯಕ ನಟ ಚೌಹಾಣ್

ಕೇವಲ ಬೆಳ್ಳಿಪರದೆ ಮಾತ್ರವಲ್ಲದೆ, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಮೂಲಕ ‘ಸೇ ನೋ ಟು ಗಾಂಜಾ’ದಂತಹ ಜಾಗೃತಿ ಮೂಡಿಸುವ ಆಲ್ಬಮ್ ಹಾಡುಗಳು ಮತ್ತು ಕಿರುಚಿತ್ರಗಳಲ್ಲೂ ಭಾಗಿಯಾಗಿದ್ದಾರೆ.
​ಕನ್ನಡ ಚಿತ್ರರಂಗದಲ್ಲಿ ಹೊಸಬರಾಗಿ ಬಂದು, ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.

ಸಿದ್ದಗಂಗಾ ಶಾಲೆಯಲ್ಲಿ ಅರಳಿದ ಪ್ರತಿಭೆ

ಸಿದ್ದಗಂಗಾ ಶಾಲೆಯಲ್ಲಿ ತಮ್ಮ ನಟನೆಯ ಅಡಿಪಾಯವನ್ನು ಗಟ್ಟಿಗೊಳಿಸಿಕೊಂಡ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾರೆ ಅರ್ಜುನ್ ಚೌಹಾಣ್. ಶಾಲೆಯಲ್ಲಿ ಓದುತ್ತಿರುವ ಶನಿವಾರ ಮತ್ತು ಭಾನುವಾರ ರಜಾ ದಿನಗಳಲ್ಲಿ ಕಥೆ, ಕವನ ನಾಟಕ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಇದು ನಮಗೆ ವರದಾನವಾಗಿ ನಮ್ಮ ಸ್ನೇಹಿತರೆಲ್ಲ ಸೇರಿ ನಾವೇ ನಾಟಕ, ಕಥೆ ಕವನ ರಚಿಸಿ ಪ್ರದರ್ಶನ ಮಾಡುತ್ತಿದ್ದೆವು ಎಂದು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.

ಬಂಜಾರ ಹವೇಲಿಯ ಹರಿಕಾರ

ಬಂಜಾರ ಹವೇಲಿ ಅನ್ನೋದು ಬಂಜಾರ (ಲಂಬಾಣಿ) ಸಮುದಾಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಮೊದಲ ರಿಯಾಲಿಟಿ ಶೋ. ಇದು ಬಿಗ್ ಬಾಸ್ ಮಾದರಿಯ ರಿಯಾಲಿಟಿ ಶೋ ಆಗಿದ್ದು, ವಿವಿಧ ಕ್ಷೇತ್ರಗಳ (ಸಿನಿಮಾ, ಟಿವಿ ಮತ್ತು ಸಾಮಾನ್ಯ ಜೀವನ) ಸ್ಪರ್ಧಿಗಳು ಒಂದೇ ಸೂರಿನಡಿ ವಾಸಿಸುತ್ತಾ ವಿವಿಧ ಆಟಗಳು ಮತ್ತು ಸವಾಲುಗಳಲ್ಲಿ ಸ್ಪರ್ಧಿಸುತ್ತಾರೆ.

​ಬಂಜಾರ ಸಂಸ್ಕೃತಿ, ಆಚಾರ-ವಿಚಾರಗಳು ಮತ್ತು ಪ್ರತಿಭೆಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಶೋನ ಮುಖ್ಯ ಉದ್ದೇಶವಾಗಿದೆ.

ಒಟ್ಟಾರೆಯಾಗಿ ಹಲವು ಅಡೆತಡೆಗಳನ್ನು ತಮ್ಮ ಜೀವನದಲ್ಲಿ ಎದುರಿಸಿ ತಾನು ಕಂಡ ಕನಸನ್ನು ನನಸು ಮಾಡಿಕೊಂಡು ತನ್ನೊಟ್ಟಿಗೆ ಇತರರನ್ನು ಬೆಳೆಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿರುವ ಬಂಜಾರ ಸಮುದಾಯದ ಅರ್ಜುನ್ ಚೌಹಾಣ್ ಅವರಿಗೆ ಪ್ರೇಕ್ಷಕರ ಬೆಂಬಲ ಮತ್ತು ಆಶೀರ್ವಾದ ಸಿಗಲಿ ಎನ್ನುವುದು ಸುದ್ದಿದಿನ ಪತ್ರಿಕೆಯ ಹಾರೈಕೆ ಆಗಿದೆ. ಕುಟುಂಬ ಪರಿಹಾರ ಸಮೇತ ಚಿತ್ರಮಂದಿರಕ್ಕೆ ಬಂದು ಹಾರೈಸಿ ಎಂದು ವಿನಂತಿದ್ದಾರೆ ಕುಚುಕು ಚಿತ್ರದ ನಾಯಕ ನಟ ಅರ್ಜುನ್ ಚೌಹಾಣ್.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

Published

on

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.

ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.

ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.

ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

Continue Reading

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ2 days ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ2 days ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ2 days ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

ದಿನದ ಸುದ್ದಿ2 days ago

ಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ...

ಅಂಕಣ4 days ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ4 days ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ4 days ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

ದಿನದ ಸುದ್ದಿ6 days ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

ದಿನದ ಸುದ್ದಿ7 days ago

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ...

Trending