ಸಿನಿ ಸುದ್ದಿ
HaPpY BiRtHdAy | ಸ್ವಾಮಿ ದೇವನೆ ಲೋಕ ಪಾಲನೆ ತೇನಮೋಸ್ತು ನಮೋಸ್ತುತೇ | ಬಿ.ಆರ್. ಪಂತುಲು
ಪದ್ಮಿನಿ ಪಿಕ್ಚರ್ಸ್ ಮೂಲಕ ಭಾರತೀಯ ಚಿತ್ರರಂಗದಲ್ಲಿ ಅಪಾರ ಜನಪ್ರಿಯತೆಗಳಿಸಿ ದಕ್ಷಿಣ ಭಾರತದಲ್ಲಿ ಕನ್ನಡ ಚಿತ್ರರಂಗವನ್ನು ಸದಭಿರುಚಿಯ ಸಿನಿಮಾಗಳ ಮೂಲಕ ಕೀರ್ತಿಯ ಉತ್ತುಂಗಕ್ಕೇರಿದ ಬಿ.ಆರ್. ಪಂತುಲು ಅವರಿಗೆ ಜನ್ಮದಿನದ ಶುಭಾಶಯಗಳು.
“ಸ್ವಾಮಿ ದೇವನೆ ಲೋಕಪಾಲನೆ ತೇನಮೋಸ್ತು ನಮೋಸ್ತುತೆ” ಎಂದು ಮಕ್ಕಳಿಗೆ ಪಾಠ ಹೇಳಿಕೊಟ್ಟು ನಮಗೆ ಇಷ್ಟವಾಗಿರುವ ಮೇಷ್ಟರ ಹಾಗೆ ಇವರೂ ಕೂಡಾ ಎಂದು ಭಾವ ಹುಟ್ಟಿಸಿದ ‘ಸ್ಕೂಲ್ ಮಾಸ್ಟರ್’ ಎಂದೇ ಪ್ರಿಯರಾದ ಬಿ.ಆರ್. ಪಂತುಲು ಅವರು ಕನ್ನಡಿಗರಿಗೆ ಮಾತ್ರವಲ್ಲ, ದಕ್ಷಿಣ ಭಾರತ ಚಿತ್ರರಂಗಕ್ಕೇ ಒಂದು ಅವಿಸ್ಮರಣೀಯ ನೆನಪು. ಅವರು ಶ್ರೀಕೃಷ್ಣದೇವರಾಯ ಚಿತ್ರದಲ್ಲಿ ಮಂತ್ರಿ ತಿಮ್ಮರಸುವಾಗಿ ಕಂಗೊಳಿಸಿದ ರೀತಿ ಅವಿಸ್ಮರಣೀಯವಾದುದು. “ಒಂದರಿಂದ ಇಪ್ಪತ್ತೊಂದರವರೆಗೆ ಜಂಜಾಟ, ಬಂಡಾಟ” ಎಂದು ಅವರ ಮೊದಲ ತೇದಿಯಲ್ಲಿ ಮೂಡಿದ ಹಾಡು, ಅಂದಿನ ಎಲ್ಲಾ ಮಧ್ಯಮ ಮತ್ತು ಕೆಳವರ್ಗದ ಜನಕ್ಕೆ ಇದು ನಮ್ಮ ಜೀವನವೇ ಎಂದು ಅನ್ವಯಿಸಿಕೊಳ್ಳುವಷ್ಟು ಪ್ರಖ್ಯಾತವಾಗಿತ್ತು. ತಮಿಳು ಗೊತ್ತಿದ್ದು ಅಂದಿನ ಕರ್ಣ ತಮಿಳು ಚಿತ್ರದ ‘ಉಳ್ಳತ್ತಿಲ್ ನಲ್ಲ ಉಳ್ಳಂ ಉರಂಗಾದು ಎನ್ಬದು … ವಲ್ಲವನ್ ವಗುತ್ತದಡ’ ಹಾಡು ಕೇಳಿದ್ದರೆ, ಕರ್ಣನಂತಹವನಿಗೇ ಹೀಗಾಯಿತಲ್ಲಾ ಎಂದು ಸ್ವಯಂ ಕೃಷ್ಣನೇ ಶೋಕಿಸುವ ಈ ಸೃಷ್ಟಿಯ ಪರಿ ಆತ್ಮೀಯವಾಗಿತ್ತು. ಕನ್ನಡ ಚಿತ್ರರಂಗದ ಸುವರ್ಣಯುಗದ ಹರಿಕಾರ, ಬೆಳ್ಳಿತೆರೆಯ ಗಾರುಡಿಗರೆಂದೇ ಅವರು ಪ್ರಸಿದ್ಧಿ.
ರಾಜ್ ಕುಮಾರ್ ಅವರು ಕೃಷ್ಣದೇವರಾಯನಾಗಿ ಪ್ರಸಿದ್ಧಿ ಪಡೆದುದು ಮಾತ್ರವಲ್ಲ ಅವರ ಹಲವಾರು ಮನೋಜ್ಞ ಚಿತ್ರಗಳನ್ನು ನಿರ್ಮಿಸಿದವರು ಪಂತುಲು ಅವರೇ. ನರಸಿಂಹರಾಜು ಅವರ ಸುಂದರ ಅಭಿನಯವನ್ನು ಕನ್ನಡ ಚಿತ್ರಗಳಲ್ಲಿ ಪ್ರಧಾನ ಅಂಶವಾಗಿ ರೂಪಿಸಿ ಮೆರೆಸಿದವರು ಕೂಡಾ ಪಂತುಲು ಅವರೇ. ಸ್ಕೂಲ್ ಮಾಸ್ಟರ್ ಚಿತ್ರದಲ್ಲಿ ಅವರ ವಿದ್ಯಾರ್ಥಿಯಾಗಿ ರೂಪಿತನಾದ ಶಿವಾಜಿ ಗಣೇಶನ್ ಅವರನ್ನು ವೀರಪಾಂಡ್ಯ ಕಟ್ಟಬೊಮ್ಮನ್, ಕರ್ಣ ಅಂತಹ ಪಾತ್ರಗಳಿಂದ ರೂಪಿಸಿದವರು ಪಂತುಲು ಅವರೇ. ಕಿತ್ತೂರು ರಾಣಿ ಚೆನ್ನಮ್ಮನನ್ನು ಸುಂದರ ಅಭಿನೇತ್ರಿಯಾದ ಬಿ. ಸರೋಜಾದೇವಿಯವರಲ್ಲಿ ಮರೆಯಲಾಗದಂತೆ ಮೂಡಿಸಿದವರು ಕೂಡಾ ಪಂತುಲು ಅವರೇ. ಅಷ್ಟೇಕೆ ನಮ್ಮ ಕನ್ನಡದ ಶ್ರೇಷ್ಠ ದಿಗ್ದರ್ಶಕ ಪುಟ್ಟಣ್ಣ ಕಣಗಾಲ್, ಸಾಹಿತಿ ಕಣಗಾಲ್ ಪ್ರಭಾಕರ ಶಾಸ್ತ್ರಿ, ಸಂಗೀತ ನಿರ್ದೇಶಕ ಟಿ.ಜಿ. ಲಿಂಗಪ್ಪ, ನಟಿಯಾದ ಪಂತುಲು ಅವರ ಪತ್ನಿ ಎಂ.ವಿ.ರಾಜಮ್ಮ ಇವರುಗಳೆಲ್ಲಾ ಶ್ರೇಷ್ಠರಾಗಿ ಹೊರಹೊಮ್ಮಿದ್ದು ಪಂತುಲು ಅವರ ಪದ್ಮಿನಿ ಪಿಕ್ಚರ್ಸ್ ಗರಡಿಯಲ್ಲೇ.
ಬಡಗೂರು ರಾಮಕೃಷ್ಣ ಪಂತುಲು ಅವರು ಜನಿಸಿದ್ದು 1911 ಜುಲೈ 28ರಂದು ಕರ್ನಾಟಕ-ಆಂಧ್ರಪ್ರದೇಶದ ಗಡಿಯಲ್ಲಿನ ಬಂಗಾರ ಪೇಟೆಯ ಬಳಿಯಿರುವ ಕುಪ್ಪಂನಿಂದ ಹನ್ನೊಂದು ಕಿಲೋಮೀಟರ್ ದೂರದ ಕುಗ್ರಾಮ ಬಡಗೂರಿನಲ್ಲಿ. ಗಡಿ ಪ್ರದೇಶದಲ್ಲಿರುವ ಈ ಊರಿನಲ್ಲಿ ಕನ್ನಡದಂತೆ ತೆಲುಗು, ತಮಿಳು ಕೂಡ ಮುಖ್ಯ ಭಾಷೆಗಳಾಗಿದ್ದವು. ಹೀಗಾಗಿ ಬಾಲ್ಯದಿಂದಲೇ ಪಂತುಲು ಅವರಿಗೆ ಮೂರು ಭಾಷೆಗಳ ಒಡನಾಟ ಬರಲು ಕಾರಣವಾಯಿತು. ಪಂತುಲು ಅವರ ತಂದೆ ವೆಂಕಟಾಚಲಯ್ಯನವರಿಗೆ ಕಿರಿಯವರಾದ ಪಂತುಲು ಸೇರಿದಂತೆ ಐವರು ಮಕ್ಕಳು, ಮೂರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳು. ಪಂತುಲು ಅವರ ತಂದೆ ಸಂಗೀತ, ಸಾಹಿತ್ಯ ಮತ್ತು ನೃತ್ಯಗಳಲ್ಲಿ ಉತ್ತಮ ಅಭಿರುಚಿ ಪಡೆದಿದ್ದರು. ಆಗಾಗ ಊರಿನಲ್ಲಿ ನಾಟಕಗಳನ್ನು ಆಡಿಸುತಿದ್ದರು. ತಂದೆಯ ಜೊತೆ ಮಗನೂ ಆಗಾಗ ರಂಗ ತರಬೇತಿ ನೋಡಲು ಹೋಗುತ್ತಿದ್ದನು. ಚಂದ್ರಹಾಸನ ಪಾತ್ರ ನೀಡುವ ಮೂಲಕ ತಂದೆಯೇ ಆತನ ರಂಗ ಪ್ರವೇಶಕ್ಕೆ ಕಾರಣಕರ್ತರಾದರು.
ರಾಮಕೃಷ್ಣರ ಪ್ರಾಥಮಿಕ ಶಿಕ್ಷಣ ಬಡಗೂರಿನಲ್ಲಿಯೇ ನಡೆದರೂ ಮುಂದಿನ ಶಿಕ್ಷಣಕ್ಕೆ ಅಲ್ಲಿ ಅವಕಾಶ ಇರದ ಕಾರಣ ತಮ್ಮ ತಾತನ ಮನೆಯಾದ ಕೊಲಾರದಲ್ಲಿದ್ದು ಎಸ್.ಎಸ್.ಎಲ್.ಸಿ.ವರೆಗಿನ ಶಿಕ್ಷಣ ಪಡೆದರು. ಶಾಲಾ ಜೀವನದಲ್ಲಿಯೂ ಅವರು ನಾಟಕದ ಅಭಿನಯದಲ್ಲಿ ಪ್ರಸಿದ್ದಿ ಪಡೆದಿದ್ದರು. ಪಂತುಲು ಮುಂದೆ ಪ್ರಾಥಮಿಕ ಶಿಕ್ಷಕರಾಗಿ ನೇಮಕಗೊಂಡರು. ಕಲಾವಿದರಾದ ಅವರು ಶಾಲೆಯಲ್ಲಿ ಪಾಠ ಮಾಡಿದ್ದಕ್ಕಿಂತ ಮಕ್ಕಳಿಗೆ ನಾಟಕ ಕಲಿಸಿದ್ದೇ ಹೆಚ್ಹು. ಒಂದುದಿನ ವಿದ್ಯಾ ಇಲಾಖೆಯ ಇನ್ಸ್ಪೆಕ್ಟರ್ ಶಾಲೆಗೆ ಬಂದಾಗ, ಪಾಠ ಮಾಡುವ ಬದಲು ಮಕ್ಕಳಿಗಾಗಿ ನಾಟಕ ಕಲಿಸುತ್ತಿದ್ದ ಪಂತುಲು ಅವರನ್ನು ಕಂಡು ಕೆಂಡಾಮಂಡಲವಾದರು. ಇನ್ನೊಮ್ಮೆ ಹೀಗಾದರೆ ವಜಾಮಾಡುವೆನೆಂದು ನೋಟೀಸ್ ಜಾರಿ ಮಾಡಿದರು. ಇದರಿಂದ ನೊಂದ ಪಂತುಲು ಶಿಕ್ಷಕ ವ್ರತ್ತಿಗೆ ರಾಜೀನಾಮೆ ನೀಡಿ ಕಲೆಯಲ್ಲಿಯೇ ಬದುಕನ್ನು ಅರಸುತ್ತ ಬೆಂಗಳೂರಿಗೆ ಬಂದು ಅವರ ಹಿರಿಯರಾದ ಪಾಪಯ್ಯನವರಿದ್ದ ಮಹಮ್ಮದ್ ಪೀರ್ ಅವರ ‘ಚಂದ್ರಕಲಾ ನಾಟಕ ಮಂಡಳಿ’ಗೆ ಸೇರಿದರು. ಮುಂದೆ ಇವರಿಗೆ ಹೆಚ್ ಎಲ್ ಎನ್ ಸಿಂಹ ಮತ್ತು ಮಹಮದ್ ಪೀರ್ ಅವರ ಗೆಳೆತನ ಬಣ್ಣದಲೋಕದ ನಂಟನ್ನು ತಂದಿತು. ಪಂತುಲು ಅವರ ಮಗ ರವಿಶಂಕರ್ ಕೆಲ ಕಾಲ ಚಿತ್ರ ನಿರ್ಮಾಣದಲ್ಲಿ ತೊಡಗಿದ್ದರು. ಮಗಳು ಬಿ.ಆರ್.ವಿಜಯಲಕ್ಷ್ಮಿ ಛಾಯಾಗ್ರಾಹಕಿಯಾಗಿ ಹೆಸರು ಮಾಡಿದ್ದರು.
ಪಂತುಲು ಅವರು 1936ರಲ್ಲಿ ‘ಸಂಸಾರ ನೌಕೆ’ ಚಲನಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದರು. ‘ರಾಧಾ ರಮಣ’ ಚಲನಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದರು. 1955ರಲ್ಲಿ ಪಂತುಲು ಅವರು ಪ. ನೀಲಕಂಠನ್ ಸಹಯೋಗದೊಂದಿಗೆ ಪದ್ಮಿನಿ ಪಿಕ್ಚರ್ಸ್ ಸಂಸ್ಥೆ ಸ್ಥಾಪಿಸಿ ‘ಮೊದಲ ತೇದಿ’ ಎಂಬ ಚಿತ್ರ ನಿರ್ಮಿಸಿದರು. ಎರಡನೆ ಚಿತ್ರ ‘ಶಿವಶರಣೆ ನಂಬೆಕ್ಕ’. 1957ರಲ್ಲಿ ಕುತೂಹಲಭರಿತ ‘ರತ್ನಗಿರಿ ರಹಸ್ಯ’ ಎಂಬ ಚಿತ್ರವನ್ನು ನಿರ್ಮಿಸಿದರು. ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಸಾಹಿತ್ಯ, ಟಿ ಜಿ ಲಿಂಗಪ್ಪ ಅವರ ಸಂಗೀತ ಈ ಚಿತ್ರಕ್ಕೆ ಅಪಾರ ಯಶಸ್ಸನ್ನು ತಂದುಕೊಡುವಲ್ಲಿ ನೆರವಾದವು. ಕನ್ನಡ ಚಿತ್ರರಂಗದಲ್ಲೇ ಮೊದಲ ಬಾರಿಗೆ ರಜತೋತ್ಸವ ಆಚರಿಸಿದ ಸಾಮಾಜಿಕ ಚಿತ್ರವೆಂದು ಖ್ಯಾತಿ ಪಡೆದ ‘ಸ್ಕೂಲ್ ಮಾಸ್ಟರ್’ ಚಿತ್ರವನ್ನು 1958ರಲ್ಲಿ ನಿರ್ಮಿಸಿದರು. ಅನಂತರ ಅವರ ಪದ್ಮಿನಿ ಪಿಕ್ಚರ್ಸ್ನಲ್ಲಿ ಕಿತ್ತೂರು ಚೆನ್ನಮ್ಮ, ಮಕ್ಕಳ ರಾಜ್ಯ, ಗಾಳಿ ಗೋಪುರ, ಚಿನ್ನದ ಗೊಂಬೆ, ಎಮ್ಮೆ ತಮ್ಮಣ್ಣ, ಬೀದಿ ಬಸವಣ್ಣ, ಅಮ್ಮ, ಶ್ರೀ ಕೃಷ್ಣದೇವರಾಯ, ಮಾಲತಿ ಮಾಧವ, ಒಂದು ಹೆಣ್ಣಿನ ಕಥೆ ಮುಂತಾದ ಅಮೋಘ ಚಿತ್ರಗಳು ನಿರ್ಮಾಣವಾದವು. ಇವುಗಳಲ್ಲಿ ‘ಸ್ಕೂಲ್ ಮಾಸ್ಟರ್’ ಮತ್ತು ‘ಕಿತ್ತೂರು ಚೆನ್ನಮ್ಮ’ ಚಿತ್ರಗಳು ರಾಷ್ಟ್ರಪ್ರಶಸ್ತಿ ಪಡೆದವು.”ಶ್ರೀ ಕೃಷ್ಣದೇವರಾಯ” ಚಿತ್ರಕ್ಕೆ ಫಿಲಂ ಫೇರ್ ಪ್ರಶಸ್ತಿ ದೊರಕಿತು. ಇದೇ ಚಿತ್ರದಲ್ಲಿ ಬಿ.ಆರ್.ಪಂತುಲು ಅವರು ನಿರ್ವಹಿಸಿದ ‘ತಿಮ್ಮರಸು’ ಪಾತ್ರಕ್ಕೆ ಶ್ರೇಷ್ಥ ನಟ ಪ್ರಶಸ್ತಿ ದೊರೆಯಿತು. ಶ್ರೀ ಕೃಷ್ಣದೇವರಾಯ ಚಿತ್ರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ಬಿ.ಆರ್. ಪಂತುಲು ನಿರಾಕರಿಸಿದ್ದರು. ಆ ಸಿನಿಮಾದ ಅತ್ಯುತ್ತಮ ಅಭಿನಯಕ್ಕಾಗಿ ರಾಜ್ಕುಮಾರ್ ಅವರಿಗೆ ಪ್ರಶಸ್ತಿ ನೀಡಬೇಕಿತ್ತು ಎನ್ನುವುದು ಅವರ ವಾದವಾಗಿತ್ತು.
ಬಿ.ಆರ್.ಪಂತುಲು ಸುಮಾರು ಇಪ್ಪತ್ತೈದು ವರ್ಷಗಳ ಕಾಲ, ನಾಲ್ಕು ಭಾಷೆಗಳಲ್ಲಿ ಐವತ್ತಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿ, ಚಿತ್ರೋದ್ಯಮಕ್ಕಾಗಿ ತಮ್ಮನ್ನೇ ತಾವು ತೇದುಕೊಂಡ ಮಹಾಪರುಷ. ಇವರು ಉದ್ಯಮಕ್ಕೆ ಕಾಲಿಟ್ಟಾಗ ಕನ್ನಡ ಚಿತ್ರರಂಗವಿನ್ನೂ ಕುಂಟುತ್ತಿತ್ತು. ಮದ್ರಾಸಿನಿಂದ ತಯಾರಾಗುತ್ತಿದ್ದ ಕನ್ನಡ ಚಿತ್ರಗಳಲ್ಲಿ ಕನ್ನಡತನವನ್ನು ಹುಡುಕಬೇಕಾಗಿತ್ತು. ಇದನ್ನ ಮನಗಂಡ ಪಂತುಲು ತಮಿಳರೊಂದಿಗೆ ಕಲೆತು ಮೊಟ್ಟಮೊದಲಿಗೆ `ಮೊದಲ ತೇದಿ’ ಚಿತ್ರ ನಿರ್ಮಿಸಿದರು. ಇದು ಸರ್ಕಾರಿ ನೌಕರನ ಬದುಕಿನ ಬವಣೆಯ ಸುತ್ತಲಿನದು. ಅಂದಿನ ಸಾಮಾಜಿಕ ಸ್ಥಿತಿಗತಿಯನ್ನು ಪ್ರತಿಬಿಂಬಿಸುವಂಥಾದ್ದು. ಚಿತ್ರ ಹಿಟ್ ಆಯ್ತು. ಧೈರ್ಯ ಬಂತು. ತಮಿಳಿನ ಒಡನಾಟದಲ್ಲಿದ್ದುಕೊಂಡೇ ಕನ್ನಡ ಚಿತ್ರ ನಿರ್ಮಾಣಕ್ಕೆ ಕೈ ಹಾಕಿದರು. ರಾಜ್ ಕುಮಾರ್, ನರಸಿಂಹರಾಜು, ಚಿ.ಉದಯಶಂಕರ್, ಪುಟ್ಟಣ್ಣ ಕಣಗಾಲರಂತಹ ಪ್ರತಿಭಾವಂತರನ್ನು ಕನ್ನಡ ಚಿತ್ರರಂಗಕ್ಕೆ ಕೊಡುಗೆಯಾಗಿ ಕೊಟ್ಟರು. ರಾಜ್ ಕುಮಾರ್ ಅವರಿಗಾಗಿಯೇ ಗಾಳಿಗೋಪುರ, ಸಾಕುಮಗಳು, ಎಮ್ಮೆ ತಮ್ಮಣ್ಣ, ಬೀದಿ ಬಸವಣ್ಣ, ಅಮ್ಮ, ಗಂಡೊಂದು ಹೆಣ್ಣಾರು ಚಿತ್ರಗಳನ್ನು ಮಾಡಿದ ಪಂತುಲು, ನರಸಿಂಹರಾಜು ಅವರಿಗಾಗಿಯೇ ಪ್ರತ್ಯೇಕ ಪಾತ್ರ ಸೃಷ್ಟಿಸಿ ಹಾಸ್ಯದ ಹೊಸ ಟ್ರ್ಯಾಕೊಂದನ್ನು ಅನಿವಾರ್ಯವಾಗಿ ಚಿತ್ರದಲ್ಲಿರುವಂತೆ ನೋಡಿಕೊಂಡರು. ಹಾಗೆಯೇ ಇವರ ಸರಿಸುಮಾರು ಎಲ್ಲಾ ಚಿತ್ರಗಳಿಗೂ ಟಿ.ಜಿ.ಲಿಂಗಪ್ಪ ಸಂಗೀತ ನಿರ್ದೇಶಕರಾಗಿದ್ದುದು ಒಂದು ವಿಶೇಷ.
ಪಂತುಲು ಅವರು ‘ಕಾಲೇಜು ರಂಗ’ ಚಿತ್ರದ ಸಿದ್ಧತೆಯಲ್ಲಿದ್ದಾಗ, ಅಕ್ಟೋಬರ್ 8, 1974ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದರು. ಅವರ ಪಟ್ಟ ಶಿಷ್ಯ ಪುಟ್ಟಣ್ಣ ಕಣಗಾಲರು ಈ ಚಿತ್ರವನ್ನು ಪೂರ್ತಿ ಮಾಡಿ, ಗುರುಕಾಣಿಕೆಯಾಗಿ ಅರ್ಪಿಸಿದರು. ಇದು ಪದ್ಮಿನಿ ಪಿಕ್ಚರ್ಸ್ ಅವರ ಕೊನೆಯ ಚಿತ್ರವಾಯಿತು. ಆ ಮೂಲಕ ಭಾರತೀಯ ಚಿತ್ರರಂಗದ ಸುವರ್ಣ ಅಧ್ಯಾಯವೊಂದು ಕೊನೆಗೊಂಡಿತು.
ಪುಟ್ಟಣ್ಣ ಕಣಗಾಲರ ಪ್ರಕಾರ ಜನಸಾಮಾನ್ಯರನ್ನು ಚಿತ್ರಮಂದಿರಗಳತ್ತ ತರುವಂತೆ ಕನ್ನಡ ಚಿತ್ರರಂಗಕ್ಕೆ ಭದ್ರ ಬುನಾದಿ ಹಾಕಿದ್ದು ಬಿ.ಆರ್. ಪಂತುಲು. ಅವರು ಅಭಿನಯ-ನಿರ್ದೇಶನ-ನಿರ್ಮಾಣ ಈ ಮೂರೂ ಕಲೆಗಳನ್ನು ಕರಗತ ಮಾಡಿಕೊಂಡು ಕನ್ನಡ ಚಿತ್ರರಂಗವನ್ನು ಅತ್ಯುತ್ತಮ ಗುಣಮಟ್ಟದ ಚಿತ್ರಗಳಿಂದ ಶ್ರೀಮಂತಗೊಳಿಸಿದವರು. 1957ರಿಂದ 1972ರವರೆಗೆ ಅವರು ಕನ್ನಡದಲ್ಲಿ ನಿರ್ಮಿಸಿದ ಚಿತ್ರಗಳು, ಕನ್ನಡ ಚಿತ್ರರಂಗದತ್ತ ಇಡೀ ಭಾರತೀಯ ಚಿತ್ರರಂಗವೇ ನೋಡುವಂಥ ಇತಿಹಾಸವನ್ನು ನಿರ್ಮಿಸಿತ್ತು. ಅವರ ಶೇಕಡಾ 90ರಷ್ಟು ಚಿತ್ರಗಳಲ್ಲಿ ಡಾ. ರಾಜ್ಕುಮಾರ್ ನಾಯಕನಟರಾಗಿ ಅಭಿನಯಿಸಿರುವುದೊಂದು ವಿಶೇಷ. ಜೊತೆಗೆ ಸ್ವತಃ ಬಿ.ಆರ್.ಪಂತುಲುರವರೂ ಒಂದು ಮುಖ್ಯ ಪೋಷಕ ಪಾತ್ರದಲ್ಲಿದ್ದು ತಂದೆಯಂತೆ ಆ ಇಡೀ ಚಿತ್ರದ ಏಳಿಗೆಗೆ ಕಾರಣವಾಗುತ್ತಿದ್ದುದು ಆ ಚಿತ್ರಗಳ ಮತ್ತೊಂದು ಸುವಿಶೇಷ.
1955ರಲ್ಲಿ ಪದ್ಮಿನಿ ಪಿಕ್ಚರ್ಸ್ ಲಾಂಛನದಡಿಯಲ್ಲಿ ಪಂತುಲುರವರು ತಮ್ಮ ಚಿತ್ರ ನಿರ್ಮಾಣವನ್ನು ಆರಂಭಿಸಿದರಾದರೂ, ಅವರ ಚಿತ್ರಗಳನ್ನು “ಪಂತುಲು ಚಿತ್ರಗಳು” ಎಂದು ಕರೆಯುವುದೇ ವಾಡಿಕೆ. ‘ಸ್ಕೂಲ್ ಮಾಸ್ಟರ್’ ಚಿತ್ರದ ಧ್ಯಾನದ ಆರಂಭವಾದ “ಸ್ವಾಮಿ ದೇವನೆ” ಎಂಬ ಒಂದು ಹಾಡು ಸಾಕು, ಪಂತುಲು ಅವರು ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಪ್ರಾತಃ ಸ್ಮರಣೀಯರಾಗಲು. ಸೋಸಲೆ ಅಯ್ಯಾ ಶಾಸ್ತ್ರಿಗಳ ಈ ಗೀತೆಯನ್ನು ಕಣಗಾಲ್ ಪ್ರಭಾಕರ ಶಾಸ್ತ್ರಿಗಳು ಒಂದಷ್ಟು ಬದಲಾವಣೆಯಿಂದ ಚಿತ್ರಗೀತೆಯಾಗಿ ಅಳವಡಿಸಿದ್ದರು. ಈ ಹಾಡು ನಮ್ಮ ನಿಮ್ಮೆಲ್ಲರ ಪ್ರೈಮರಿ ಶಾಲೆಯ ಮಗ್ಗಿ ಪುಸ್ತಕದ ಮೊದಲ ಪುಟದ ಪ್ರಾರ್ಥನಾ ಗೀತೆ ಯಾಗಿ ಸೇರಿಕೊಂಡು ಸಿನಿಮಾ ಹಾಡೆಂಬ ಪ್ರತ್ಯೇಕತೆಯ ರಿಯಾಯಿತಿಯಿಲ್ಲದಂತೆ ನಮ್ಮಲ್ಲಿ ಉತ್ಸಾಹ ತರುವ ಪ್ರಾರ್ಥನೆಯೇ ಆಗಿ ಹೋಗಿತ್ತು. ಇಂದೂ ಬಹಳಷ್ಟು ಶಾಲೆಗಳು ಇದನ್ನು ಪ್ರಾರ್ಥಣೆಯಾಗಿ ಬಳಸುತ್ತಿವೆ. ‘ಸ್ಕೂಲ್ಮಾಸ್ಟರ್’ ಚಿತ್ರದಲ್ಲಿ ಮೇಷ್ಟ್ರರಾಗಿ ಸ್ವತಃ ಪಂತುಲುರವರ ಮನೋಜ್ಞ ಅಭಿನಯ-ಹಾವಭಾವ ಅಪ್ರತಿಮವಾದದ್ದು. ಮೇಷ್ಟ್ರರ ಹೆಂಡತಿಯಾಗಿ ಅವರ ನಿಜ ಜೀವನದ ಪತ್ನಿಯೂ ಆಗಿದ್ದ ಎಂ.ವಿ. ರಾಜಮ್ಮನವರು ಪಂತುಲುವಿಗೆ ತಕ್ಕಂತೆ ಅಭಿನಯಿಸಿದ್ದರು.
ರತ್ನಗಿರಿ ರಹಸ್ಯ, ಸ್ಕೂಲ್ ಮಾಸ್ಟರ್, ಮಕ್ಕಳ ರಾಜ್ಯ, ಕಿತ್ತೂರು ಚೆನ್ನಮ್ಮ, ಗಾಳಿಗೋಪುರ, ಸಾಕು ಮಗಳು, ಚಿನ್ನದ ಗೊಂಬೆ, ದುಡ್ಡೇ ದೊಡ್ಡಪ್ಪ, ಎಮ್ಮೆ ತಮ್ಮಣ್ಣ, ಗಂಗೆ ಗೌರಿ, ಬೀದಿ ಬಸವಣ್ಣ, ಚಿನ್ನಾರಿ ಪುಟ್ಟಣ್ಣ, ಅಮ್ಮ, ಗಂಡೊಂದು ಹೆಣ್ಣಾರು, ಶ್ರೀ ಕೃಷ್ಣದೇವರಾಯ, ಅಳಿಯ ಗೆಳೆಯ, ಮಾಲತಿ ಮಾಧವ, ಒಂದು ಹೆಣ್ಣಿನ ಕಥೆ ಮುಂತಾದವು ಪಂತುಲು ಅವರ ಕನ್ನಡ ಚಿತ್ರಗಳಾದರೆ, ಕರ್ಣ, ಅಮರ್ ಶಹೀದ್, ವೀರ ಪಾಂಡ್ಯ ಕಟ್ಟಬೊಮ್ಮನ್, ದಶಾವತಾರ ಪಂತುಲು ಅವರು ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ನಿರ್ಮಿಸಿ ನಿರ್ದೇಶಿಸಿದ ಕೆಲವು ಚಿತ್ರಗಳು. ಈ ಮಹಾನ್ ಚೇತನಕ್ಕೆ ನಮ್ಮ ಹೃತ್ಪೂರ್ವಕ ನಮನಗಳು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ5 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ4 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ


