ಅಂತರಂಗ
ಧರ್ಮ ಮರ್ಮ-01: ಭಾರತದಲ್ಲಿ ಧರ್ಮದ ಸ್ವರೂಪ
- ಯೋಗೇಶ್ ಮಾಸ್ಟರ್
ಭಾರತದಲ್ಲಿ ಸದಾ ಗೊಂದಲಕ್ಕೊಳಗಾಗುವ ಅನೇಕ ವಿಷಯಗಳಲ್ಲಿ ಧರ್ಮವೂ ಒಂದು. ಸಹಜವಾಗಿ ಗೊಂದಲ ಎಂದರೇನೇ ಸ್ಪಷ್ಟತೆ ಇಲ್ಲ ಎಂದು ಅರ್ಥ. ಬೇರೆ ದೇಶಗಳಲ್ಲಿಯೂ ಕೂಡಾ ಧರ್ಮದ ಆಚರಣೆಗಳ ಬಗ್ಗೆ ಗೊಂದಲಗಳಿವೆ, ಸಂಘರ್ಷಗಳಿವೆ. ಆದರೆ ನಮ್ಮ ದೇಶದಲ್ಲಿ ಧರ್ಮ ಎನ್ನುವುದು ಬೇರೆ ದೇಶದವರಿಗಿಂತ ಹೆಚ್ಚು ವ್ಯಾಪಕವಾಗಿ ಮತ್ತು ವಿಸ್ತಾರವಾಗಿ ಅರ್ಥೈಸಲು ಸಾಧ್ಯವಿರುವುದರಿಂದ ಗೊಂದಲಗಳು ಹೆಚ್ಚಾಗಿವೆ.
ಹೌದು, ನಮ್ಮ ದೇಶದಲ್ಲಿ ಧರ್ಮದ ವಿಷಯವಾಗಿಯೂ ಒಂದು ಸಾಮಾನ್ಯ ಸ್ಪಷ್ಟತೆ ಇಲ್ಲ. ಭಾರತದ ಮಟ್ಟಿಗೆ ಧರ್ಮವನ್ನು ಅರ್ಥ ಮಾಡಿಕೊಳ್ಳುವುದು ಅಷ್ಟೇನೂ ದೊಡ್ಡ ವಿಷಯವೂ ಅಲ್ಲ ಮತ್ತು ಸಂಕೀರ್ಣವೂ ಅಲ್ಲ. ಒಂದು ಪದವನ್ನು ವಿವಿಧ ಬಳಕೆಗಳಲ್ಲಿ ಬೇರೆ ಬೇರೆ ಅರ್ಥವನ್ನು ಪಡೆದುಕೊಳ್ಳುತ್ತವೆ ಎಂಬುದರ ಗಮನ ನಮಗಿರಬೇಕು.
‘ಕಾಯು’ ಎಂಬ ಸರಳ ಪದವನ್ನು “ನಾನು ನನ್ನ ಸರದಿಗಾಗಿ ಕಾಯುತ್ತಿದ್ದೇನೆ” ಮತ್ತು “ಒಲೆಯ ಮೇಲೆ ನೀರು ಕಾಯುತ್ತಿದೆ” ಎಂಬ ಎರಡು ಬೇರೆ ಬೇರೆ ಅರ್ಥಗಳಲ್ಲಿ ಬಳಕೆ ಮಾಡುವಂತೆ ಧರ್ಮ ಎಂಬ ಪದದ ಬಳಕೆಯೂ ಕೂಡಾ ಭಿನ್ನ ಅರ್ಥಗಳಲ್ಲಿ ಬಳಕೆ ಮಾಡುತ್ತೇವೆ.
ಪದ ಬಳಕೆಯ ಕಾಳಜಿ
40ರಿಂದ 70ರ ದಶಕದವರೆಗೂ ಕೆಲವರನ್ನು ಹೊರತುಪಡಿಸಿ ಬಹಳಷ್ಟು ಬರಹಗಾರರು ಎಚ್ಚರಿಕೆಯಿಂದ ಧರ್ಮದ ಪದವನ್ನು ದೇಶೀಯವಾಗಿ ಅಂದರೆ ಭಾರತೀಯ ಅರ್ಥದಲ್ಲಿಯೇ ಬಳಸುತ್ತಿದ್ದರು. ಅವರು ‘ಧರ್ಮ’ ಮತ್ತು ‘ಮತ’ ಎಂದು ಉಪಯೋಗಿಸುತ್ತಿದ್ದ ಎರಡು ಪದಗಳಲ್ಲಿ ಸ್ಪಷ್ಟತೆ ಇತ್ತು. ಇಂಗ್ಲೀಷಿನಲ್ಲಿ ರಿಲೀಜಿಯನ್ ಎಂಬ ಪದಕ್ಕೆ ಧರ್ಮ ಎಂಬುದನ್ನು ಬಳಸುತ್ತಿರಲಿಲ್ಲ. ಬದಲಾಗಿ ಮತ ಎಂದು ಬಳಸುತ್ತಿದ್ದರು. ಇನ್ನೂ ಸರಳವಾಗಿ ಪದ್ಧತಿ ಎಂದೂ ಹೇಳುತ್ತಿದ್ದರು.
ಆದರೆ ರಿಲೀಜಿಯನ್ ಎಂದು ಇಂಗ್ಲೀಷಿನಲ್ಲಿ ಹೇಳುವ ಪದಕ್ಕೂ, ಭಾರತೀಯರು ಧರ್ಮ ಎನ್ನುವ ಪದಕ್ಕೂ ವ್ಯತ್ಯಾಸವಿದೆ ಎಂಬುದು ಸ್ಪಷ್ಟವಾಗಿತ್ತು. ಎರಡೂ ಒಂದೇ ಆಗಿರಲಿಲ್ಲ. ನಂತರ ಕೆಲವು ಬರಹಗಾರರು ಮತ ಎಂಬ ಪದವು ಬಹಳ ಲಘುವಾಗಿದೆ ಅನ್ನಿಸುವುದರಿಂದ ಮತದ ಬದಲು ಧರ್ಮ ಎಂದು ಬಳಸತೊಡಗಿದರು. ಇದರಿಂದಾಗಿ ಇಸ್ಲಾಮ್ ಮತ, ಕ್ರೈಸ್ತ ಮತ, ಬೌದ್ಧ ಮತಗಳ ಬದಲಿಗೆ ಧರ್ಮ ಎಂದು ಬಳಸತೊಡಗಿದರು.
ಅಲ್ಲಿಂದೀಚೆಗೆ ಅದು ಹೆಚ್ಚು ವ್ಯಾಪಕವೂ ಆಗ ತೊಡಗಿ ಭಾರತೀಯ ಅಥವಾ ದೇಸೀ ಅರ್ಥದ ಧರ್ಮವು ಮತವೆಂಬ ಪದದ ಬದಲಿಗೆ ಉಪಯೋಗಿಸತೊಡಗಿದರು. ಇದರಿಂದಾಗಿ ಪ್ರಾಚೀನ ಭಾರತೀಯ ಬರಹಗಳಲ್ಲಿದ್ದ ಧರ್ಮ ಎಂಬ ಪದವನ್ನು ಮತವೆಂಬ ಅರ್ಥದಲ್ಲಿ ಅರ್ಥೈಸತೊಡಗಿದ್ದರಿಂದ ಅನರ್ಥಗಳಾಗ ತೊಡಗಿದವು. ಏಕೆಂದರೆ ಯಾವ ಧರ್ಮ ಎಂಬ ಪದದ ಅರ್ಥವು ಅಜ್ಞಾತವೂ ಮತ್ತು ಸೂಕ್ಷ್ಮವೂ ಆಗಿದ್ದ ಸ್ವಭಾವ ಎಂಬ ಅರ್ಥದಲ್ಲಿ ಬಳಸುತ್ತಿದ್ದರೋ ಅದನ್ನು ಸ್ಥಾಪಿತ ಮತಕ್ಕೆ ಹೆಸರಿಸಲು ಪ್ರಾರಂಭಿಸಿ ಅದರ ಅರ್ಥ ಮರೆತುಹೋಯಿತು.
ಆದರೂ ಕಂಗಾಲಾಗುವ ಅಗತ್ಯವೇನೂ ಇಲ್ಲ. ಭಾಷೆಗಳಲ್ಲಿ ಪದಗಳು ಕಾಲದಿಂದ ಕಾಲಕ್ಕೆ ಅರ್ಥವನ್ನು ಬದಲಾಯಿಸಿಕೊಳ್ಳುವ, ಮತ್ತೊಂದಕ್ಕೆ ಬಳಕೆಯಾಗುವ ಸ್ವಭಾವವೂ ಉಂಟು. ಹಾಗಾಗಿ ಧರ್ಮ ಎಂಬ ಒಂದೇ ಪದವನ್ನು ಎರಡು ಅರ್ಥಗಳಿಗೆ ಬಳಸಲಾಗುತ್ತಿದೆ ಎಂಬ ಎಚ್ಚರಿಕೆಯನ್ನು ಹೊಂದಿದ್ದು ಪ್ರಾಚೀನ ಗ್ರಂಥಗಳನ್ನು, ಇತರ ಪಠ್ಯಗಳನ್ನು ಓದುವಾಗ ಯಾವ ಅರ್ಥದಲ್ಲಿ ಅವನ್ನು ಬಳಸಿದ್ದಾರೆ ಎಂಬ ಅರಿವು ಇರಬೇಕಷ್ಟೇ.
ಪ್ರಭುತ್ವಮು ಎಂದು ತೆಲುಗಿನವರು ಉಪಯೋಗಿಸುವ ಪದ ಕನ್ನಡದಲ್ಲಿ ಸರ್ಕಾರ ಎಂದಾಗುತ್ತದೆ. ಆದರೆ ಪ್ರಭುತ್ವದ ಪದ ಕನ್ನಡದಲ್ಲಿಯೂ ಇದೆ. ಆದರೆ ನಾವು ಅದನ್ನು ಸರ್ಕಾರ ಎಂಬ ಅರ್ಥದಲ್ಲಿ ಬಳಸುವುದಿಲ್ಲ. ರಾಜರ ಅಧಿಕಾರದ ಅರ್ಥದಲ್ಲಿ ಬಳಸುತ್ತೇವೆ. ಹಾಗೆಯೇ ಉತ್ತರ ಭಾರತದ ಕೆಲವು ರಾಜ್ಯಗಳರಲ್ಲಿ ಸರಕಾರ್ ಎಂದು ಬಳಸುವ ಪದವು ಯಜಮಾನ, ಒಡೆಯ ಎಂಬ ಅರ್ಥದಲ್ಲಿ ಬಳಸುತ್ತಾರೆ. ಆದರೆ ನಮಗೆ ಅದು ರಾಜಕೀಯ ವ್ಯವಸ್ಥೆಯ ಸರ್ಕಾರವಾಗಿ ಮಾತ್ರವೇ ಬಳಕೆಯಾಗುತ್ತದೆ.
ಯಜಮಾನ ಅಥವಾ ದಣಿ ಎಂಬ ಪದಗಳಿಗೆ ಬದಲಾಗಿ ನಾವು ಸರಕಾರ ಎಂಬ ಪದವನ್ನು ಬಳಸುವುದಿಲ್ಲ. ಸಂಸ್ಕೃತ ಪದಗಳು ಭಾರತದ ಬಹುತೇಕ ಭಾಷೆಗಳಲ್ಲಿ ಬೆರೆತುಹೋದರೂ ಅವುಗಳನ್ನು ಬಳಸುವಾಗ ಅವರ ಪ್ರಾದೇಶಿಕ ಪ್ರಭಾವಗಳು ಇರುತ್ತಿದ್ದವು. ಆ ಪ್ರಯೋಗಗಳ ಹಿಂದೆ ಕಾರಣಗಳೇನೇ ಇದ್ದರೂ ಅರ್ಥ ವ್ಯತ್ಯಾಸ ಇದ್ದುದಂತೂ ನಿಜ. ಹೀಗೆಯೇ ಧರ್ಮವನ್ನೂ ಕನಿಷ್ಟಪಕ್ಷ ನಮ್ಮ ಕನ್ನಡದ ಹಿರಿಯರು ಬರೆಯುತ್ತಿದ್ದ ಪುಸ್ತಕಗಳಲ್ಲಿ ಎಚ್ಚರಿಕೆಯಿಂದ ಬಳಸುತ್ತಿದ್ದರು. ಸಂಸ್ಕೃತದಲ್ಲಾಗಲಿ ಅಥವಾ ಕನ್ನಡದಲ್ಲಾಗಲಿ ಧರ್ಮದ ಅರ್ಥಕ್ಕೆ ಬಹಳ ಸ್ಪಷ್ಟತೆ ಇತ್ತು.
ರೂಢಿ ದೋಷ
ನಮ್ಮ ರೂಢಿಗೊಳಿಸಿಕೊಂಡಿರುವ ಒಂದು ದೊಡ್ಡ ದೋಷವೆಂದರೆ ಸರಳ ಮತ್ತು ನೇರವಾಗಿರುವ ವಿಷಯಗಳನ್ನು ಸಂಕೀರ್ಣಗೊಳಿಸಿಕೊಳ್ಳುವುದು. ಯಾವುದು ಸಾಮಾನ್ಯ ತಿಳುವಳಿಕೆಗೆ ಎಟುಕುವುದಿಲ್ಲವೋ ಅದು ಮಹತ್ವವಾದುದು, ಬಹಳ ಮೌಲ್ಯವುಳ್ಳದ್ದು, ಬಹಳ ಉನ್ನತವಾದದ್ದು ಎಂಬ ಭ್ರಮೆಯನ್ನು ಹುಟ್ಟಿಸಿರುವುದು. ಅದು ಬರಿಯ ಭ್ರಮೆಯು ಮಾತ್ರವಲ್ಲ ಮಾನವನ ಸಂವಹನ ಕ್ರಮಕ್ಕೆ ಮಾಡುವ ದ್ರೋಹವೂ ಹೌದು. ನಾನು ಹೇಳುವುದು ನಿಮಗೆ ಅರ್ಥವಾಗಬೇಕು. ನಿಮ್ಮ ತಿಳುವಳಿಕೆಗೆ ನಿಲುಕಬೇಕು. ಆಗ ನಾನು ಹೇಳುವ ಕೆಲಸದಲ್ಲಿ ಯಶಸ್ವಿಯಾಗಿದ್ದೇನೆ ಎಂದು ಅರ್ಥ.
ಅದು ಬಿಟ್ಟು, ನಾನು ನಿಮ್ಮ ಶಬ್ಧಭಂಡಾರದಲ್ಲಿ ಇಲ್ಲದಿರುವಂತಹ, ಹುಡುಕಿದರೂ ಅರ್ಥ ಸಿಗದಂತಹ ಮಹಾ ಪಾಂಡಿತ್ಯದ ಶಬ್ಧಗಳನ್ನು ಉಪಯೋಗಿಸಿ, ನಿಮಗೆ ನಾನು ನಿಮ್ಮ ತಿಳುವಳಿಕೆಗೆ ನಿಲುಕದಂತವನಾದರೆ ಅದು ನನ್ನ ವೈಫಲ್ಯ. ಏನೋ ಸ್ವಲ್ಪ ಪ್ರಾದೇಶಿಕ ಭಾಷಾ ಪ್ರಯೋಗಗಳಿಂದ ಒಂದಷ್ಟು ಪದಗಳು ಆಚೀಚೆ ಆಗಬಹುದು. ಆದರೆ ನನ್ನ ತಿಳುವಳಿಕೆಗೆ ನಿಲುಕದ್ದು ಎಂದು ಅವನ್ನು ಉನ್ನತೀಕರಿಸಿ, ಅರಿಯದವರು ಪಾಮರರು ಎಂಬ ಭ್ರಮೆ ಹುಟ್ಟಿಸಿದ ಕಾರಣದಿಂದಲೇ ಅಪವ್ಯಾಖ್ಯಾನಗಳು ಅಂದರೆ ಇರುವ ಅರ್ಥವನ್ನು ಬಿಟ್ಟು ಬೇರೇನೇನೋ ವಿವರಣೆಗಳು ಹುಟ್ಟಿರುವವು.
ಧರ್ಮದ ಪಾವಿತ್ರ್ಯದ ವ್ಯಾಪ್ತಿ
ಧರ್ಮದ ವಿವರಣೆಯಲ್ಲಿಯೂ ಕೂಡಾ ಹಾಗೇ ಆಗಿವೆ. ಅದೇನೋ ಅತ್ಯಂತ ಶ್ರದ್ಧೆಗೆ, ಬದ್ಧತೆಗೆ, ಪಾವಿತ್ರ್ಯತೆಗೆ ಸಂಬಂಧಿಸಿದ್ದು, ದೇವರನ್ನು ಸಮೀಪಿಸುವುದಕ್ಕೆ ಇರುವುದು ಎಂಬ ಭ್ರಮೆ ಇದೆ ಅಥವಾ ಧರ್ಮ ಎಂದ ಕೂಡಲೇ ಹಾಗಾಡುತ್ತಾರೆ. ಅದರಲ್ಲೂ ಭಾರತೀಯರ ವಿಷಯದಲ್ಲಂತೂ ಧರ್ಮ ಎಂಬುದು ಪವಿತ್ರತೆಗೂ, ದೇವರಿಗೂ, ಶ್ರದ್ಧೆಗೂ ಸಂಬಂಧಿಸಿದ್ದಲ್ಲ. ಬಹಳ ಸರಳವಾಗಿ ಧರ್ಮವನ್ನು ಅರ್ಥ ಮಾಡಿಕೊಳ್ಳುತ್ತಾ ಹೋಗೋಣ.
ಬಂಡೆ ಗಟ್ಟಿಯಾಗಿರುವುದು ಅದರ ಗುಣ, ನೀರಿಗೆ ಹರಿಯುವ ಗುಣ, ಗಾಳಿಗೆ ಬೀಸುವಂತಹ ಸಹಜ ಗುಣವಿದೆ ಹಾಗೆಯೇ ಬೆಂಕಿಗೆ ಸುಡುವ ಸ್ವಭಾವ ಇದೆ ಎಂದರೆ ಅರ್ಥವಾಗುತ್ತದೆ. ಹಾಗೆಯೇ ಕಾಠಿಣ್ಯವು ಬಂಡೆಯ ಧರ್ಮ, ಹರಿಯುವುದು ನೀರಿನ ಧರ್ಮ, ಬೀಸುವುದು ಗಾಳಿಯ ಧರ್ಮ, ಸುಡುವುದು ಬೆಂಕಿಯ ಧರ್ಮ ಎಂದರೂ ಅರ್ಥವಾಯಿತಲ್ಲವೇ? ಅಂದರೆ ಯಾವುದೇ ಒಂದರ ಮೂಲ ಅಥವಾ ಪ್ರಮುಖವಾದ ಸ್ವಭಾವವೇ ಧರ್ಮ.
ಧರ್ಮ ಶಬ್ದವು ಸಂಸ್ಕೃತದ ‘ಧೃ’ ಎಂಬ ಮೂಲದಿಂದ ಬಂದಿದೆ. ‘ಧೃ’ ಎಂದರೆ ಧಾರಣ ಮಾಡು ಅಥವಾ ಧರಿಸು, ಎತ್ತಿ ಹಿಡಿ ಅಥವಾ ಬೆಂಬಲಿಸು ಎಂದರ್ಥ. ಇದು ಪ್ರಾರಂಭದ ಪಾಠ. “ಧಾರಣಾತ್ ಧರ್ಮ ಇತ್ಯಾಹುಃ ಧರ್ಮೋ ಧಾರಯತಿ ಪ್ರಜಾಃ” ಎಂದು ಮಹಾಭಾರತದ ಕರ್ಣಪರ್ವದಲ್ಲಿ ಯಾವುದು ಇನ್ನೊಂದನ್ನು ಎತ್ತಿ ಹಿಡಿಯುವುದೋ, ಅಥವಾ ಇನ್ನೊಂದಕ್ಕೆ ಆಧಾರವಾಗಿ ಅದನ್ನು ರಕ್ಷಿಸುವುದೋ ಅದು ಧರ್ಮ ಎನಿಸಿಕೊಳ್ಳುತ್ತದೆ.
ಹೀಗೆಂದು ಕೃಷ್ಣ ಅರ್ಜುನನಿಗೆ ಧರ್ಮ ಎಂದು ವಿವರಿಸಲು ಯತ್ನಿಸುತ್ತಾನೆ. ಅದೇ ರೀತಿಯಲ್ಲಿ ಭಗವತ್ಗೀತೆಯಲ್ಲಿ “ಶ್ರೇಯಾನ್ ಸ್ವಧರ್ಮೋ ವಿಗುಣಃ ಪರಧರ್ಮಾತ್ ಸ್ವನುಷ್ಠಿತಾತ್” ಎನ್ನುತ್ತಾ ಬೇರೆ ಧರ್ಮವನ್ನು ಚೆನ್ನಾಗಿ ಮಾಡುವುದಕ್ಕಿಂತ ತನ್ನ ಧರ್ಮವು ವಿಗುಣವಾಗಿದ್ದರೂ (ಪರರ ದೃಷ್ಟಿಯಲ್ಲಿ) ಅದೇ ಶ್ರೇಯಸ್ಕರ ಎನ್ನುತ್ತಾ “ಸ್ವಧರ್ಮೇ ನಿಧನಂ ಶ್ರೇಯಃ ಪರಧರ್ಮೋ ಭಯಾವಹಃ” ನಿನ್ನದೇ ಧರ್ಮದಲ್ಲಿ ಸತ್ತರೂ ಅದು ಮೇಲು, ಪರಧರ್ಮ ಅದಕ್ಕಿಂತ ಭಯಂಕರವಾದುದು ಎಂದೂ ಹೇಳುತ್ತಾನೆ.
ಭಗವತ್ಗೀತೆಯಲ್ಲಿ ಧರ್ಮವೆಂದರೆ ವ್ಯಕ್ತಿ ಅಥವಾ ವಸ್ತುವಿನ ಸ್ವಭಾವದಂತೆ ತೋರಿದರೆ, ಕರ್ಣಪರ್ವದಲ್ಲಿ ಕರ್ತವ್ಯದಂತೆ ತೋರುತ್ತದೆ. ಭಗವತ್ಗೀತೆಯ ಧರ್ಮವನ್ನೂ ಕರ್ತವ್ಯವೆಂದೂ ಕೂಡಾ ಅರ್ಥೈಸಬಹುದು. ಆದರೆ ಒಂದು ವಿಷಯ ನೆನಪಿಡಬೇಕು. ಮಹಾಭಾರತದ ಯಾವುದೋ ಒಂದು ಉಲ್ಲೇಖಿತ ಸಾಲನ್ನು ಹಿಡಿದುಕೊಂಡು ಸುಭಾಷಿತದ ರೀತಿಯಲ್ಲಿ ಅಥವಾ ಧಾರ್ಮಿಕ ಸೂತ್ರದ ರೀತಿಯಲ್ಲಿ ಶಾಸನವನ್ನಾಗಿ ಮಾಡಿಕೊಳ್ಳಬಾರದು.
ಏಕೆಂದರೆ ಮಹಾಭಾರತದಲ್ಲಿ ನೂರಾರು ಪಾತ್ರಗಳು ಬರುತ್ತವೆ. ಎಲ್ಲಾ ಪಾತ್ರಗಳೂ ತಮ್ಮ ತಮ್ಮ ಧೋರಣೆಯನ್ನು, ಮನೋಭಾವವನ್ನು, ಮನಸ್ಥಿತಿಗಳನ್ನು ವ್ಯಕ್ತಪಡಿಸುವಂತೆ ಧರ್ಮವನ್ನೂ ಕೂಡಾ ನಾನಾ ರೀತಿಯಲ್ಲಿ ಸಮಯ ಸನ್ನಿವೇಶಕ್ಕೆ ತಕ್ಕಂತೆ ವಿವರಿಸುತ್ತಾ ಹೋಗುತ್ತಾರೆ. ವ್ಯಾಸ, ಜನಮೇಜಯ, ಭೀಷ್ಮ, ವಿದುರ, ಕೃಷ್ಣ, ಧುರ್ಯೋದನ, ದೃತರಾಷ್ಟ್ರ, ಗಾಂಧಾರಿ, ಕುಂತಿ, ಮಾದ್ರಿ, ಧರ್ಮರಾಯ; ಹೀಗೆ ಹಲವಾರು ಪಾತ್ರಗಳು ಅನೇಕ ವಿಷಯಗಳನ್ನು ತಮ್ಮದೇ ಆದ ರೀತಿಯಲ್ಲಿ, ತಾವು ಗ್ರಹಿಸಿದಂತೆ, ತಾವು ನಂಬಿದಂತೆ, ತಮ್ಮ ಸಿದ್ಧಾಂತದಂತೆ, ತಮ್ಮ ಅನುಭವಕ್ಕೆ ತಕ್ಕಂತೆ ವಿವರಿಸುತ್ತಾ ಹೋಗುತ್ತಾರೆ.
ಮಹಾಭಾರತ ಯಾವುದೇ ಒಂದು ಸಿದ್ಧಾಂತವನ್ನು ಸ್ಪಷ್ಟ ಪಡಿಸಲು, ನೀತಿ ಹೇಳಲು ನಿಲ್ಲುವುದಿಲ್ಲ. ಆದರೆ ಧರ್ಮವನ್ನೇ ಕೇಂದ್ರವಾಗಿಟ್ಟುಕೊಳ್ಳುತ್ತದೆ. ಧರ್ಮವನ್ನು ಎತ್ತಿ ಹಿಡಿಯುತ್ತದೆ. ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಧರ್ಮದ ಕೇಂದ್ರ ಮತ್ತು ಕರ್ಮದ ಚಕ್ರವನ್ನೇ ಎಲ್ಲಾ ಪಾತ್ರಗಳ ಜೊತೆಜೊತೆಯಾಗಿ ಹೋಗುತ್ತಿರುತ್ತದೆ.
ಇಷ್ಟೆಲ್ಲಾ ಆದರೂ ಮಹಾಭಾರತ ಧಾರ್ಮಿಕತೆಯ ಕತೆಯಲ್ಲ. ಇದರಲ್ಲಿ ಬದ್ಧತೆ, ಶ್ರದ್ಧೆ ಎಲ್ಲವನ್ನೂ ಕೋರಲಾಗುತ್ತದೆ.
ಆದರೆ ಯಾವುದೋ ಸ್ಥಾಪಿತ ಧರ್ಮದ ಸಾಂಪ್ರದಾಯಿಕ ಆಚರಣೆಯ ರೀತಿಯಲ್ಲಿ ಅಂದರೆ ರಿಲೀಜಿಯಸ್ ಪ್ರಾಕ್ಟೀಸ್ ರೀತಿಯದಲ್ಲ. ವ್ಯಕ್ತಿಧರ್ಮ, ಪ್ರಕೃತಿಧರ್ಮ, ಪರಿವಾರಿಕ ಅಥವಾ ಕುಟುಂಬ ಧರ್ಮ, ಸಮಾಜಧರ್ಮ, ವೃತ್ತಿಧರ್ಮ, ಮನೋಧರ್ಮ, ರಾಜಧರ್ಮ, ಕಾಲಧರ್ಮ ಅಥವಾ ಯುಗಧರ್ಮ, ವರ್ಣಧರ್ಮ, ಆಪತ್ಧರ್ಮ, ಆಶ್ರಮಧರ್ಮ; ಹೀಗೆ ಅನೇಕಾನೇಕ ಧರ್ಮಗಳ ಚಹರೆಗಳನ್ನು, ಚಟುವಟಿಕೆಗಳನ್ನು, ಚರ್ಚೆಗಳನ್ನು ಗುರುತಿಸಬಹುದು.
ಇನ್ನೂ ಮುಂದುವರಿದು ಆಪತ್ಕಾಲೇ ನಾಸ್ತಿ ಧರ್ಮ ಎಂತಲೂ ಎನ್ನುವುದು. ಅಂದರೆ ಪ್ರಾಣ ಹೋಗುವಂತಹ ಕೆಟ್ಟ ಸಂದರ್ಭ ಒದಗಿದರೆ ಯಾವ ಧರ್ಮವನ್ನು ಬಿಟ್ಟು ನಿನ್ನ ಪ್ರಾಣವನ್ನು ಉಳಿಸಿಕೋ ಎಂಬಂತಹ ಕಿವಿ ಮಾತು. ಇದನ್ನೇ ಆಪತ್ಧರ್ಮ ಎಂದುಕೊಳ್ಳೋಣ. ಒಟ್ಟಿನಲ್ಲಿ ಧರ್ಮ ಎಂಬ ಪದದ ಹಿಂದೆ ಜೋಡುಪದವಾಗಿ ಬಂದಿರುವ ಪದಗಳನ್ನೆಲ್ಲಾ ನೋಡಿದರೆ, ಧರ್ಮ ಎಂಬುದು ಸ್ಥಿರವೂ ಹೌದು, ಚರವೂ ಹೌದು ಎಂದಾಗುತ್ತದೆ. ಸ್ಥಿರವಾಗಿರುವುದು ಯಾವ ಧರ್ಮ ಮತ್ತು ಚರವಾಗಿರುವುದು ಯಾವ ಧರ್ಮ ಎಂಬುದನ್ನು ಗಮನಿಸಬೇಕು.
ಒಟ್ಟಾರೆ ಸಧ್ಯಕ್ಕೆ ಧರ್ಮವನ್ನು ಮೂರು ರೀತಿಯಲ್ಲಿ ಅರ್ಥ ಮಾಡಿಕೊಳ್ಳೋಣ. ಆಗ ಇನ್ನು ಮುಂದೆ ನಾವು ಪ್ರಯಾಣ ಮಾಡಲಿರುವ ದೇಶ ವಿದೇಶಗಳ ಧರ್ಮಗಳನ್ನೆಲ್ಲಾ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತದೆ.
ಧರ್ಮ ಎಂದರೆ ಒಂದು ವಸ್ತು ಅಥವಾ ಜೀವದ ಸ್ವಾಭಾವಿಕ ಗುಣವೆಂಬುದು ಸ್ಥಿರ ಧರ್ಮ ಎನ್ನಬಹುದು. ಅದೇನಾದರೂ ಬದಲಾಗದು. ನೈಸರ್ಗಿಕವಾಗಿ ಪ್ರಾಕೃತಿಕವಾಗಿ ಇರುವಂತಹ ಗುಣ ಸ್ವಭಾವ. ನಮ್ಮ ಹಿರಿಯರು ಹೇಳುತ್ತಿದ್ದರು, “ಅವನು ಎಷ್ಟು ತಿಂದರೂ ದಪ್ಪಗಾಗುವುದಿಲ್ಲ. ಅದು ಅವನ ಶರೀರ ಧರ್ಮ!” ಅವನು ಇರುವುದೇ ಹಾಗೇ ಎನ್ನುವುದಕ್ಕೆ ಹಾಗೆನ್ನುತ್ತಿದ್ದರು.
ಶರೀರ ಪ್ರಕೃತಿ ಅಥವಾ ಶರೀರಧರ್ಮ ಎಂಬುದನ್ನು ಸಮಾರ್ಥಕ ಪದಗಳಾಗಿ ಬಳಸುತ್ತಿದ್ದರು. ಅದು ಸ್ಥಿರವಾಗಿರುವ ಧರ್ಮ. ಇದು “ಅವರವರ ಮನೋಧರ್ಮಕ್ಕೆ ತಕ್ಕಂತೆ ನಡೆದುಕೊಳ್ಳುತ್ತಾರೆ” ಎನ್ನುವ ಮಾತಿನಲ್ಲಿಯೂ ಧರ್ಮ ಎನ್ನುವುದನ್ನು ಗಮನಿಸಿ. ಅವರವರ ಸಹಜ ಸ್ವಭಾವ ಎನ್ನುವುದಕ್ಕೆ ಸೂಚಿಸುತ್ತಾರೆ.
ಅದೇ ರೀತಿ ವೃತ್ತಿಧರ್ಮ, ಕುಟುಂಬಧರ್ಮ, ಆಶ್ರಮಧರ್ಮ, ಇತ್ಯಾದಿಗಳನ್ನು ಗಮನಿಸಿದರೆ ಧರ್ಮ ಎಂದರೆ ಕರ್ತವ್ಯ ಎಂಬ ಅರ್ಥ ಬರುತ್ತದೆ. ನಾನು ಮಡಿವಾಳನಾಗಿ ವೃತ್ತಿಯನ್ನು ಮಾಡುವಾಗ ನನ್ನ ಕೆಲಸದಲ್ಲಿ ಯಾವ ಯಾವ ಕರ್ತವ್ಯಗಳಿಗೆ ಬದ್ಧನಾಗಿರಬೇಕು ಎಂಬುದನ್ನು ನೋಡಬೇಕು. ಅದು ನನ್ನ ವೃತ್ತಿಧರ್ಮ. ಕುಟುಂಬದ ಒಂದು ಪಾತ್ರವನ್ನು ನಿರ್ವಹಣೆ ಮಾಡುವಾಗ ಆ ಪಾತ್ರದ ಕರ್ತವ್ಯಕ್ಕೆ ಬದ್ಧನಾಗಿ ಅದನ್ನು ನೆರವೇರುವಂತೆ ನೋಡಿಕೊಳ್ಳುವುದು ನನ್ನ ಧರ್ಮವನ್ನು ಪಾಲನೆ ಮಾಡಿದಂತೆ.
ಹಾಗೆಯೇ ಪ್ರಕೃತಿಧರ್ಮ, ಯುಗಧರ್ಮ, ಸಮಾಜಧರ್ಮ; ಇತ್ಯಾದಿಗಳಲ್ಲಿ ಧರ್ಮವನ್ನು ‘ಕ್ರಮ’ ಎಂದು ಅರ್ಥ ಮಾಡಿಕೊಳ್ಳಬೇಕು. ಪ್ರಕೃತಿಯಲ್ಲಿ ಋತುಧರ್ಮವಿದೆ. ಅದಕ್ಕೆ ಅನುಸಾರವಾಗಿ ಋತುಗಳು ಕಾಲಕಾಲಕ್ಕೆ ಬರುತ್ತವೆ ಹೋಗುತ್ತವೆ. ಒಂದು ಕ್ರಮವನ್ನು ಅನುಸರಿಸುತ್ತವೆ. ಇದು ಸಹಜವಾಗಿ ಆಗುವುದು. ಯುಗಧರ್ಮ ಅಥವಾ ಕಾಲಧರ್ಮದಲ್ಲಿ ಬದಲಾದ ಕಾಲಕ್ಕೆ ಅನುಗುಣವಾಗಿ, ಆ ಕಾಲದ ಪರಿಸ್ಥಿತಿ, ರೀತಿ ನೀತಿಗಳನ್ನು ನೋಡಿಕೊಂಡು ನಮ್ಮ ನಡೆಯ ಕ್ರಮವನ್ನು ಬದಲಿಸಿಕೊಳ್ಳಬೇಕು. ಇದು ನಾವು ಗ್ರಹಿಸಿ ಕಾಲದ ಪರಿಸ್ಥಿತಿಗೆ ಹೊಂದಿಕೊಳ್ಳುವ ಮೂಲಕ ಕ್ರಮವನ್ನು ರೂಪಿಸಿಕೊಳ್ಳುವುದು.
ಸಮಾಜ ಎಲ್ಲರೂ ಒಟ್ಟಾಗಿ ಬಾಳುವಂತಹ ಒಂದು ಸಾಂಘಿಕ ವ್ಯವಸ್ಥೆ. ವ್ಯಕ್ತಿಗಳ ಮನೋಭಾವ, ಮನೋಭಿಲಾಷೆ, ನಿರಾಶೆ, ಒಲವು, ನಿಲುವುಗಳಲ್ಲಿ ಬಹಳಷ್ಟು ವ್ಯತ್ಯಾಸಗಳಿರುತ್ತವೆ. ಹಾಗಿದ್ದರೂ ನಾವು ಸಂಘಜೀವಿಗಳಾದ್ದರಿಂದ ವ್ಯವಸ್ಥೆಯಲ್ಲಿ ಒಂದು ಕ್ರಮವನ್ನು ರೂಪಿಸಲಾಗಿರುತ್ತದೆ.
ಏನೇ ಸಂಘರ್ಷ, ಸಂಕಟ, ಸಂತೋಷ ಎದುರಾಗುವಂತಹ ಸನ್ನಿವೇಶಗಳಿದ್ದರೂ ಇಡೀ ಸಮಾಜ ಅಥವಾ ಸಮುದಾಯದ ವ್ಯವಸ್ಥೆಯು ಕುಸಿಯದಿರುವಂತೆ, ಅದು ನಾಶಗೊಳ್ಳದಿರುವಂತೆ ನೋಡಿಕೊಳ್ಳಲು ಒಂದು ಕ್ರಮವನ್ನು ರೂಪಿಸಿದೆ. ಅದನ್ನು ಅನುಸರಿಸುವ ಕರ್ತವ್ಯವೂ ವ್ಯಕ್ತಿಗಳದ್ದಾಗಿರುತ್ತದೆ. ಅದು ಒಬ್ಬನ ಧರ್ಮ. ಸಮಾಜಕ್ಕೊಂದು ಧರ್ಮ ಅಂದರೆ ಕ್ರಮ. ಸಮಾಜದಲ್ಲಿ ಬಾಳಿ ಬದುಕಲು ಆ ಕ್ರಮವನ್ನು ಪಾಲಿಸಲು ವ್ಯಕ್ತಿಗೆ ಧರ್ಮ, ಅಂದರೆ ಕರ್ತವ್ಯ.
ಒಟ್ಟಾರೆ, ಧರ್ಮ ಎಂದರೆ ಮೂರು ಅರ್ಥಗಳಲ್ಲಿ ಸ್ಥೂಲವಾಗಿ ತಿಳಿದುಕೊಳ್ಳೋಣ. ಒಂದು ಸ್ವಾಭಾವಿಕ ಗುಣ, ಎರಡನೆಯದು ಕರ್ತವ್ಯ ಮತ್ತು ಮೂರನೆಯದು ಕ್ರಮ. ಇಷ್ಟನ್ನು ತಿಳಿದುಕೊಂಡರೆ ನಮಗೆ ವಿಶ್ವದಲ್ಲಿ ಧರ್ಮಗಳ ವಿಷಯದಲ್ಲಿ ಉಂಟಾಗಿರುವ ಗೊಂದಲಗಳು, ಗಲಾಟೆಗಳು, ಸಂಘರ್ಷಗಳು, ಸಂಕಟಗಳು ಎಲ್ಲಾ ಅರ್ಥವಾಗುತ್ತವೆ. ಬಹಳ ಮುಖ್ಯವಾಗಿ ಧರ್ಮವನ್ನು ಏನೆಂದು ಅರ್ಥ ಮಾಡಿಕೊಳ್ಳಬೇಕಿತ್ತು, ಹೇಗೆಂದು ಅರ್ಥ ಮಾಡಿಕೊಂಡಿದ್ದಾರೆ ಎಂದು ತಿಳಿಯುತ್ತದೆ. ಅಥವಾ ಏನೆಂದೂ ಅರ್ಥವೇ ಆಗಿಲ್ಲ ಎಂದಾದರೂ ಅರ್ಥವಾಗುತ್ತದೆ.
ಧರ್ಮವನ್ನು ಸಾಮಾಜಿಕವಾಗಿ, ತಾತ್ವಿಕವಾಗಿ, ಆಧ್ಯಾತ್ಮಿಕವಾಗಿ, ಸಾಂಸ್ಕೃತಿಕವಾಗಿ, ಮಾನಸಿಕವಾಗಿ, ನೈತಿಕವಾಗಿ ಮತ್ತು ರಾಜಕೀಯವಾಗಿ ಅರ್ಥ ಮಾಡಿಕೊಳ್ಳಲು ಹೋದಾಗ ಸಮಾಜದಲ್ಲಿ ನಡೆಯುತ್ತಿರುವ ಧಾರ್ಮಿಕ ದೊಂಬಿಗಳು, ಅವುಗಳನ್ನು ನಡೆಸುತ್ತಿರುವ ಝ್ಹೋಂಬಿಗಳು ಕೂಡಾ ಅರ್ಥವಾಗುತ್ತಾರೆ.
(ಮುಂದುವರಿಯುತ್ತದೆ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

-
ದಿನದ ಸುದ್ದಿ4 days agoಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
-
ದಿನದ ಸುದ್ದಿ7 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
-
ದಿನದ ಸುದ್ದಿ4 days agoಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
-
ಅಂಕಣ4 days agoಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
-
ದಿನದ ಸುದ್ದಿ3 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
-
ದಿನದ ಸುದ್ದಿ5 days agoಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ
-
ದಿನದ ಸುದ್ದಿ4 hours agoದಾವಣಗೆರೆ | ಇಂದು ಕರೆಂಟ್ ಇರಲ್ಲ



