Connect with us

ಸಿನಿ ಸುದ್ದಿ

HapPy BiRtHdAy | ‘ಹಾಸ್ಯ ಬ್ರಹ್ಮ ನರಸಿಂಹ ರಾಜು’ ಅವರ ಬಗ್ಗೆ ನಿಮಗಿಷ್ಟು ತಿಳಿದಿರಲಿ

Published

on

ಡಾ.ರಾಜ್ ಕುಮಾರ್ ಅವರ ಕಾಲ್ ಶೀಟ್ ಗಿಂತಲೂ ಮೊದಲು ನರಸಿಂಹರಾಜು ಅವರ ಕಾಲ್ ಶೀಟ್ ಬುಕ್ ಮಾಡಲು ಪ್ರಯತ್ನಿಸುತ್ತಿದ್ದ ಕಾಲವೊಂದಿತ್ತು. ಅವರೇ ನಮ್ಮ ತಿಳಿ ಹಾಸ್ಯದ ಬ್ರಹ್ಮ, ಕರ್ನಾಟಕದ ಚಾಪ್ಲಿನ್ ನರಸಿಂಹರಾಜು ಅವರಿಗೆ ಜನ್ಮದಿನದ ಶುಭಾಶಯಗಳು.

ನಮ್ಮ ನಾಡು ಕಂಡ ಶ್ರೇಷ್ಠರಲ್ಲಿ ಶ್ರೇಷ್ಠ ಕಲಾವಿದರಲ್ಲೊಬ್ಬರಾದ ಹಾಸ್ಯಚಕ್ರವರ್ತಿ ನರಸಿಂಹರಾಜು ಅವರ ಜನ್ಮದಿನ ಜುಲೈ 24ರಂದು. ಅವರು ಜನಿಸಿದ ವರ್ಷ 1926. ನಾವು ಮೆಚ್ಚಿರುವ ಯಾವುದೇ ಶ್ರೇಷ್ಠ ನಟ ನಟಿಯರಿರಲಿ, ಅವರು ನಟಿಸಿರುವ ನೂರಿನ್ನೂರು ಚಿತ್ರಗಳು ಇರುತ್ತವೆಂದರೆ ಅವರ ಬೆರಳೆಣಿಕೆಯಷ್ಟು ಪಾತ್ರಗಳು ನಮ್ಮನ್ನು ಸೆಳೆದಿರುತ್ತವೆ. ಇಲ್ಲವೇ ನಾವು ಅವರ ಅಪಾರ ಅಭಿಮಾನಿಗಳಾಗಿರುತ್ತೇವೆ ಎಂದುಕೊಂಡರೂ ಆ ಸಂಖ್ಯೆ ಇನ್ನೊಂದಷ್ಟು ಎಂಬಂತಿರಬಹುದು ಅಷ್ಟೇ. ಆದರೆ ನರಸಿಂಹರಾಜು ಅವರ ಬಗ್ಗೆ ಆ ಮಾತು ಅನ್ವಯಿಸುವುದಿಲ್ಲ. ಅವರ ಪ್ರತೀ ಪಾತ್ರವೂ ಜನತೆಗೆ ಪ್ರಿಯವೇ.

ನರಸಿಂಹರಾಜು ಅವರ ಬಗ್ಗೆ ಅವರ ಪುತ್ರಿ ಸುಧಾನರಸಿಂಹರಾಜು ಅವರು ದೂರದರ್ಶನದಲ್ಲಿ ಕಾರ್ಯಕ್ರಮ ಮಾಡಿದಾಗ ಸಂದರ್ಶನದಲ್ಲಿ ಭಾಗವಹಿಸಿದ್ದ ವರನಟ ರಾಜ್ ಕುಮಾರ್ ಅವರು ಹೇಳಿದ್ದ ಮಾತು ನೆನಪಾಗುತ್ತಿದೆ, “ಅಂದಿನ ದಿನದಲ್ಲಿ ನಿರ್ಮಾಪಕ ನಿರ್ದೇಶಕರು, ಚಲನಚಿತ್ರಗಳಿಗೆ ಮೊದಲು ನರಸಿಂಹರಾಜು ಅವರ ದಿನಗಳನ್ನು ಗುರುತುಪಡಿಸಿಕೊಂಡು ಉಳಿದ ನಮ್ಮಂತಹ ಕಲಾವಿದರನ್ನು ಸಂಪರ್ಕಿಸುತ್ತಿದ್ದರು“. ರಾಜ್ ಅವರು ಹೇಳಿದ ಮಾತು ನರಸಿಂಹರಾಜು ಅವರು ಗಳಿಸಿದ ಶ್ರೇಷ್ಠತೆಗೆ ಮತ್ತು ಅಂತಹ ಮಾತನ್ನು ಹೇಳುವ ರಾಜ್ ಅವರ ಸಜ್ಜನತೆಯ ಶ್ರೇಷ್ಠತೆಗೆ ಕನ್ನಡಿ ಹಿಡಿದಂತಿದೆ. ರಾಜ್ ಕುಮಾರ್ ಮತ್ತು ನರಸಿಂಹರಾಜು ಅವರ ಜೋಡಿ ಕನ್ನಡ ಚಿತ್ರರಂಗದಲ್ಲಿ ಸಂಭವಿಸಿದ ಅದ್ಭುತಗಳಲ್ಲೊಂದು. ಈ ಜೋಡಿಗೆ ಬಾಲಣ್ಣ ಅವರನ್ನು ಕೂಡಾ ಸೇರಿಸಬಹುದು.

ಅಂದಿನ ದಿನದಲ್ಲಿ ಬಾಲಕೃಷ್ಣ ಮತ್ತು ನರಸಿಂಹರಾಜು ಒಬ್ಬರಿಗೊಬ್ಬರು ಹೊಂದಾಣಿಕೆಯಿಂದ ಪೂರಕವಾಗಿ ಅಭಿನಯಿಸುತ್ತಿದ್ದುದು ನೆನಪಾಗುತ್ತದೆ. ಬಾಲಣ್ಣ ಅವರದು ರೇಗುವ ಅಸಹನತೆಯ ಪಾತ್ರವೋ, ಕೆಲವೊಂದು ಭಾರೀ ಕೃತ್ರಿಮ ಪಾತ್ರವೋ ಆಗಿರಬಹುದಾದರೂ ನರಸಿಂಹರಾಜು ಅವರ ಪಾತ್ರ ಮಾತ್ರ ಸರಳ ಸಜ್ಜನಿಕೆಯ ನೆರಳಲ್ಲೇ ಮೂಡುವ ಪೆದ್ದನದೋ, ಪೆಚ್ಚನದೋ, ತುಂಟನದೋ, ಮೂರ್ಖನದೋ ಆದ, ಹಾಗೆ ನಾವಾಗಲು ಇಷ್ಟಪಡದಿದ್ದರೂ ಇಂಥಹ ಪಾತ್ರ ಯಾವಾಗಲೂ ನಮ್ಮ ಮುಂದೆ ಇರಬೇಕು ಎನಿಸುವಂತೆ ಆಪ್ತವಾಗಿರುತ್ತಿದ್ದ ಸುಂದರತೆಯ ಹೃದ್ಭಾವದ ಸೃಜನಸೃಷ್ಠಿಗಳು. ನರಸಿಂಹರಾಜು ಅವರ ಹಿಂದೆ ಹಾಗೂ ಅವರ ನಂತರ ಅನೇಕ ಕಲಾವಿದರು ಚಿತ್ರರಂಗದಲ್ಲಿ ಮೂಡಿದ್ದಾರೆ. ಹೀಗೆ ಮೂಡಿದ ಹಲವಾರು ಕಲಾವಿದರು ನಮಗೆ ಇಷ್ಟವೂ ಆಗಿದ್ದಾರೆ ನಿಜ. ಆದರೆ ನರಸಿಂಹರಾಜು ಅಂತಹ ಆಳವಾದ ಆಪ್ತತೆ ಮೂಡಿಸಿದ ನಟ ಮಾತ್ರ ಚಾರ್ಲಿ ಚಾಪ್ಲಿನ್ ಹೊರತಾಗಿ ಅವರೊಬ್ಬರೇ.

ಕನ್ನಡದಲ್ಲಿ ಹೊಸಬಗೆಯ ಪ್ರಯೋಗ, ವೈವಿಧ್ಯಪೂರ್ಣ ಕಥೆಗಳು, ಯಶಸ್ವೀ ಚಿತ್ರಗಳು ಹೊರಬಂದದ್ದು ಕಳೆದ ಶತಮಾನದ ಐದು, ಆರು ಮತ್ತು ಏಳನೆಯ ದಶಕಗಳಲ್ಲಿ. ಈ ಅವಧಿ ಕನ್ನಡ ಚಿತ್ರರಂಗದ ಸುವರ್ಣ ಯುಗ. ಈ ಯುಗದಲ್ಲಿ ರಾರಾಜಿಸಿದ ನರಸಿಂಹರಾಜು, 1954ರಲ್ಲಿ ಬಿಡುಗಡೆಯಾದ ‘ಬೇಡರ ಕಣ್ಣಪ್ಪ`ದಿಂದ ಆರಂಭವಾಗಿ 1979ರವರೆಗಿನ 25 ವರ್ಷಗಳಲ್ಲಿ 250ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಹಾಸ್ಯನಟರಾಗಿ ಬೆಳಗಿದವರು.

ತಮ್ಮ ನಾಲ್ಕನೆಯ ವಯಸ್ಸಿನಲ್ಲಿ ಸಿ.ಬಿ.ಮಲ್ಲಪ್ಪನವರ ಶ್ರೀಚಂದ್ರಮೌಳೀಶ್ವರ ನಾಟಕ ಸಭಾದಲ್ಲಿ ಬಾಲಕಲಾವಿದನಾಗಿ ಸೇರಿಕೊಂಡ ನರಸಿಂಹರಾಜು ಅವರಿಗೆ ಅಲ್ಲಿಯೇ ಬದುಕಿನ ಶಿಕ್ಷಣವೂ ಆರಂಭವಾಯಿತು. ಹಾಸ್ಯಪಾತ್ರಕ್ಕೆ ಹೇಳಿ ಮಾಡಿಸಿದಂತಹ ಮುಖ, ಶರೀರವನ್ನು ಸಹಜವಾಗಿ ಪಡೆದಿದ್ದ ನರಸಿಂಹರಾಜು ಅವರಿಗೆ ಹಾಸ್ಯಪಾತ್ರಗಳ ನಿರ್ವಹಣೆ ಸಹಜವಾಗಿತ್ತು. ರಂಗಮಂಚದ ಮೇಲೆ ಬಂದು ನಿಂತರೆ ಸಾಕು, ಪ್ರೇಕ್ಷಕರ ನಗೆಹೊನಲು ಹರಿಯುತ್ತಿತ್ತು.

ನರಸಿಂಹರಾಜು ಅವರು ಪೌರಾಣಿಕ ಪಾತ್ರಗಳನ್ನು – ವಿಶ್ವಾಮಿತ್ರ, ರಾಮ, ಕೆಲವೊಮ್ಮೆ ರಾವಣ. ಭರತ, ಇನ್ನು ಕೆಲವು ಸಲ ಲಕ್ಷ್ಮಿಯ ಪಾತ್ರವನ್ನೂ ನಿರ್ವಹಿಸುತ್ತಿದ್ದರು. ಆಗಲೇ ಜನಪ್ರಿಯತೆ ಪಡೆದಿದ್ದ ‘ಬೇಡರ ಕಣ್ಣಪ್ಪ` ನಾಟಕದಲ್ಲಿ ಅರ್ಚಕನ ಪುತ್ರ ಕಾಶಿಯ ಪಾತ್ರದಲ್ಲಿ ನರಸಿಂಹರಾಜು ತುಂಬಾ ಜನಪ್ರಿಯತೆ ಪಡೆದರು.

`ಶ್ರೀ ಚಂದ್ರಮೌಳೀಶ್ವರ ನಾಟಕ ಸಭಾ`, `ಎಡತೊರೆಯ ಕಂಪೆನಿ`, `ಹಿರಣ್ಣಯ್ಯನವರ ಮಿತ್ರಮಂಡಲಿ`, `ಭಾರತ ಲಲಿತ ಕಲಾ ಸಂಘ`, ಬೇಲೂರಿನ `ಗುಂಡಾ ಜೋಯಿಸರ ಕಂಪೆನಿ`, ಗುಬ್ಬಿಯ `ಚೆನ್ನಬಸವೇಶ್ವರ ನಾಟಕ ಕಂಪೆನಿ`ಯ ನಾಟಕಗಳಲ್ಲಿ ತಮ್ಮ ಬಣ್ಣದ ಬದುಕಿನ ಆರಂಭದ 27 ವರ್ಷಗಳನ್ನು ನರಸಿಂಹರಾಜು ಕಳೆದಿದ್ದರು.

ರಾಜ್‌ಕುಮಾರ್ ಅವರೊಂದಿಗೆ `ಬೇಡರ ಕಣ್ಣಪ್ಪ` ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಪಡೆದ ನಂತರವೂ ಅವರು ರಂಗಭೂಮಿಯನ್ನು ಕಡೆಗಣಿಸಲಿಲ್ಲ. ಬಾಲನಟನಾಗಿ ರಂಗ ಪ್ರವೇಶಿಸಿದ ನರಸಿಂಹರಾಜು ಬೆಳೆಯುತ್ತಿದ್ದಂತೆ ದೊಡ್ಡವರ ಪಾತ್ರಗಳಿಗೆ ಭಡ್ತಿ ಪಡೆದರು. ತಮ್ಮ ವಿಶಿಷ್ಟ ಅಭಿನಯದಿಂದ ಹಾಸ್ಯನಟರಾಗಿ ರೂಪುಗೊಂಡರು. ರಂಗಭೂಮಿಯಲ್ಲಿ ಪಡೆದ ಎಲ್ಲ ಬಗೆಯ ಅನುಭವ, ಅವರಿಗೆ ಸಿನಿಮಾ ಜಗತ್ತಿನಲ್ಲಿ ಉಪಯೋಗಕ್ಕೆ ಬಂದಿತು. ಚಿತ್ರರಂಗದ ಪ್ರವೇಶಕ್ಕೆ ನಿಮಿತ್ತವಾದ ‘ಬೇಡರ ಕಣ್ಣಪ್ಪ`ದಲ್ಲಿನ ಕಾಶಿಯ ಪಾತ್ರ ಅವರಿಗೆ ಲೀಲಾಜಾಲವಾಗಿತ್ತು. ‘ಬೇಡರ ಕಣ್ಣಪ್ಪ` ನಾಟಕದಲ್ಲಿ ಸಾವಿರಕ್ಕೂ ಹೆಚ್ಚಿನ ಪ್ರದರ್ಶನಗಳಲ್ಲಿ ಅವರು ಕಾಶಿಯ ಪಾತ್ರ ವಹಿಸಿದ್ದರು. ಪ್ರತಿ ಪ್ರದರ್ಶನದಲ್ಲಿಯೂ ಅವರು ತೋರಿಸುತ್ತಿದ್ದ ತನ್ಮಯತೆ, ಬೆರಗು ಮೂಡಿಸುವಂತಿತ್ತು ಎಂದು ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಾಸ್ಟರ್ ಹಿರಣ್ಣಯ್ಯ ಇಂದಿಗೂ ನೆನಪು ಮಾಡಿಕೊಳ್ಳುತ್ತಾರೆ.

ಶ್ರೇಷ್ಠ ಹಾಸ್ಯ ನಟ ಚಾರ್ಲಿ ಚಾಪ್ಲಿನ್ ಅವರಿಂದ ಸಾಕಷ್ಟು ಪ್ರಭಾವಿತರಾಗಿದ್ದ ನರಸಿಂಹರಾಜು ಅವರ ಪೀಚು ಶರೀರ, ವಿಶಿಷ್ಟ ಬಗೆಯ ಹಾವಭಾವಗಳ ಮ್ಯಾನರಿಸಂಗಳು ಹಾಸ್ಯ ಪಾತ್ರಗಳಿಗೆ ಹೇಳಿ ಮಾಡಿಸಿದಂತಿತ್ತು. ಅವರ ಚಿತ್ರಗಳನ್ನು ಟೆಂಟ್‌ಗಳಲ್ಲಿ ನೋಡುತ್ತಿದ್ದ ಗ್ರಾಮೀಣರು, ಉಬ್ಬು ಹಲ್ಲಿನ ತಮ್ಮ ಮಿತ್ರರನ್ನು ‘ನರಸಿಂಹರಾಜು` ಎಂದೇ ಕರೆಯುವಷ್ಟು ದಟ್ಟ ಪ್ರಭಾವವನ್ನು ನರಸಿಂಹರಾಜು ಮೂಡಿಸಿದ್ದರು. ಇದು ಜನಪದ ನಾಯಕನೊಬ್ಬ ಬೀರಿದ ಪ್ರಭಾವದಂತೆ ತೋರುತ್ತದೆ.

ನರಸಿಂಹ ರಾಜು ಅವರ ಪ್ರತೀ ಪಾತ್ರವೂ ನಮಗೆ ಪ್ರಿಯವೇ. ಅದರಲ್ಲಿ ಯಾವ ಯಾವ ಪಾತ್ರ ಇಷ್ಟ ಎಂಬುದು ಹೇಳಲಾಗದ ಮಾತು. ನಾವು ಅವರ ಎಷ್ಟು ಪಾತ್ರಗಳನ್ನು ನೋಡಿದ್ದೇವೆ ಎಂಬುದಷ್ಟೇ ನಮಗೆ ಹೇಳಲು ಸಾಧ್ಯವಿರುವಂತದ್ದು. ಏಕೆಂದರೆ, ಅವರ ಪ್ರತೀ ಪಾತ್ರ ನಿರ್ವಹಣೆಯೂ ನಮಗೆ ಇಷ್ಟವಾಗಿರುವಂತದ್ದೆ. ‘ಬೇಡರ ಕಣ್ಣಪ್ಪ’ದಿಂದ ಪ್ರಾರಂಭಗೊಂಡು ಅವರು ನಟಿಸಿರುವ ಪಾತ್ರಗಳ ವೈವಿಧ್ಯ ಅದರಲ್ಲಿ ಅವರು ಹರಿಸಿರುವ ಹಾಸ್ಯವೆಂಬ ಚೈತನ್ಯದ ವೈವಿಧ್ಯ ನಿತ್ಯ ಸ್ಮರಣೀಯವಾದುದು. ಬಹುಷಃ ನರಸಿಂಹರಾಜು ಅವರೊಬ್ಬರಿಲ್ಲದಿದ್ದರೆ ನಾವು ನೋಡಿದ ಚಿತ್ರಗಳು ಹೇಗಿದ್ದಿರಬಹುದಿತ್ತು ಎಂದು ಊಹಿಸುವುದು ಕೂಡಾ ಕಷ್ಟ ಸಾಧ್ಯ.

‘ಸ್ಕೂಲ್ ಮಾಸ್ಟರ್’ ಚಿತ್ರದ ಭಾಮೆಯ ನೋಡಲು ತಾ ಬಂದ ಹಾಡಿನಲ್ಲಿ ‘ಕಣ್ ಸನ್ನೆಯಲೇ ಕನ್ಯೆಯ ಮನ ಸೆಳೆದ’ ಎಂದು ತಾನು ನೋಡಲು ಬಂದ ಹುಡುಗಿ ಹಾಡಿದರೆ ‘ಆ ಚಿನ್ಮಯ ಮೂರುತಿ ಶ್ರೀಗೋವಿಂದ’ನ ಸ್ಥಾನದಲ್ಲಿ ಕುಳಿತ ಈ ಪೆಚ್ಚು ನರಸಿಂಹರಾಜು ಪಿಳಿ ಪಿಳಿ ಕಣ್ಸನ್ನೆ ಮಾಡಿದ್ದು ಕೂಡಾ ಅಷ್ಟೇ ಮನಮೋಹಕವಾದದ್ದು. ಶ್ರೀಕೃಷ್ಣದೇವರಾಯ ಚಿತ್ರದಲ್ಲಿ ನರಸಿಂಹರಾಜು ಅವರಂತೆ ತೆನಾಲಿ ರಾಮಕೃಷ್ಣನಾಗಿ ಮತ್ತ್ಯಾರೂ ಅಭಿನಯಿಸಿರಲಾರರು. ‘ಸತ್ಯ ಹರಿಶ್ಚಂದ್ರ’ ಚಿತ್ರದಲ್ಲಿ ಉದಯ್ ಕುಮಾರ್ ಅವರ ಶ್ರೇಷ್ಠ ಸಿಡುಕು ಮತ್ತು ರಾಜ್ ಕುಮಾರ್ ಅವರ ಸರ್ವೋತ್ಕೃಷ್ಟ ಸೌಮ್ಯತೆಯ ನಡುವೆ ಕಪಿ ಚೇಷ್ಟೆಯ, ಆದರೆ ಕಡೆಯಲ್ಲಿ ಅಷ್ಟೇ ಗೌರವಯುತವಾಗಿ ಪರಿವರ್ತಿತವಾಗುವ ನಕ್ಷತ್ರಿಕನಾದ ನರಸಿಂಹರಾಜು ಅಭಿನಯ ಮತ್ತೊಂದು ಶ್ರೇಷ್ಠ ಮಜಲಿನದು. ಜೊತೆಗೆ ಆ ಪಾತ್ರ ಚಿತ್ರದಲ್ಲಿನ ಸಶಕ್ತ ಕೊಂಡಿಯಾಗಿ ಇಡೀ ಚಿತ್ರವನ್ನೇ ತನ್ನ ಹಿಡಿತದಲ್ಲಿ ನಡೆಸುವಷ್ಟು ಸಮರ್ಥವಾದದ್ದು ಕೂಡಾ. ‘ಅಂಡ ಪಿಂಡ ಬ್ರಹ್ಮಾಂಡ’ ಎಂದು ಮೂರ್ಖನಾಗಿ ಮಾತನಾಡಿ ‘ನಿನ್ನ ಪಿಂಡ’ ಎಂದು ವಿಶ್ವಾಮಿತ್ರರಿಂದ ಬೈಸಿಕೊಳ್ಳುವುದಾಗಲಿ, ‘ಏನಿದೀ ಗ್ರಹಚಾರವೋ’ ಎಂದು ಹರಿಶ್ಚಂದ್ರನ ಪ್ರಾಣ ತಿನ್ನುವುದಾಗಲೀ, ‘ಅಪ್ಪಾ ನನ್ನನ್ನು ಕ್ಷಮಿಸಿ ಬಿಡಪ್ಪ’ ಎಂದು ಹರಿಶ್ಚಂದ್ರನ ಕ್ಷಮಾಪಣೆ ಯಾಚಿಸುವ ಧೈನ್ಯತೆಯಾಗಲೀ, ಕಡೆಗೆ ಗುರು ವಿಶ್ವಾಮಿತ್ರರಿಗೇ “ಗುರುಗಳೇ ಒಂದು ಮಾತು ಮಾತ್ರ ನನ್ನ ಅನುಭಾವಕ್ಕೆ ಬಂತು, ಈ ಅಂಡ ಪಿಂಡ ಬ್ರಹ್ಮಾಂಡದಲ್ಲಿ ಅವರರವರ ಕರ್ಮ ಅವರದು” ಎಂದು ಹೇಳುವ ವೇದಾಂತ’ವಾಗಲಿ ಚಿತ್ರರಂಗದ ನಾನು ಕಂಡ ಪಾತ್ರಗಳಲ್ಲಿ ನನ್ನನ್ನು ಅತೀವವಾಗಿ ಹಿಡಿದಿಟ್ಟ ಒಂದು ಅದಮ್ಯತೆ. ಸಂಧ್ಯಾರಾಗ, ವೀರ ಕೇಸರಿ, ರತ್ನ ಮಂಜರಿ, ಕಣ್ತೆರೆದು ನೋಡು, ರಾಯರ ಸೊಸೆ ಹೀಗೆ ನೀವು ಅವರ ಇನ್ನೂರೈವತ್ತು ಚಿತ್ರಗಳಲ್ಲಿ ನೋಡಿರುವಷ್ಟನ್ನೂ ಒಂದಕ್ಕೊಂದು ಪೋಣಿಸಿಕೊಂಡು ಹೋಗಬಹುದು.

ಬಹುಷಃ ಅಂದಿನ ದಿನದಲ್ಲಿ ನರಸಿಂಹರಾಜು ಅವರನ್ನೇ ಕೇಂದ್ರವಾಗಿಸಿ ಚಾರ್ಲಿ ಚಾಪ್ಲಿನ್ ಸಿನಿಮಾದಂತೆ ಒಂದು ಸಿನಿಮಾ ಯಾಕೆ ಸೃಷ್ಟಿಯಾಗಲಿಲ್ಲ ಎಂದು ನನಗೆ ಆಗಾಗ ಅನ್ನಿಸಿದೆ. ಆದರೆ ಕನ್ನಡದ ಕೆಲವೊಂದು ಹಾಸ್ಯ ಕಲಾವಿದರು ಹೀರೋ ಆಗಲು ಹೋಗಿ ಚಿತ್ರ ನಿರ್ಮಾಣದ ಸೋಲಿನಲ್ಲಿ ತಮ್ಮನ್ನೂ ಧನಹೀನರನ್ನಾಗಿಸಿಕೊಂಡು ತಮ್ಮಲ್ಲಿನ ಸಾಮರ್ಥ್ಯವನ್ನೂ ವ್ಯರ್ಥಗೊಳಿಸಿಕೊಂಡು ಪ್ರೇಕ್ಷಕರಿಗೆ ತಲೆ ನೋವು ತಂದಿರುವುದನ್ನು ನೆನೆಸಿಕೊಂಡರೆ ನಮಗೆ ನರಸಿಂಹರಾಜು ಅವರು ಇಷ್ಟವಾಗಿದ್ದು ಅವರು ಹಾಸ್ಯಪಾತ್ರವಾಗಿಯೇ ಉಳಿದದ್ದರಿಂದ ಎಂದು ಕೂಡಾ ಅನಿಸುತ್ತದೆ. ನರಸಿಂಹ ರಾಜು ಅವರು ತಾವೇ ನಿರ್ಮಿಸಿದ ‘ಪ್ರೊಫೆಸರ್ ಹುಚ್ಚೂರಾಯ’ ಚಿತ್ರದಲ್ಲಿ ಕೂಡಾ ತಮ್ಮನ್ನೇ ತಾವು ವಿಜ್ರಂಭಿಸಿಕೊಳ್ಳದೆ ಹಲವಾರು ಸಾಮಾಜಿಕ ನಿಲುವುಗಳ ಒಂದು ಸುಂದರ ಕಥೆ ಹೆಣೆದು ಅದರಲ್ಲಿ ತಾವೊಂದು ಉತ್ತಮ ಹೃದಯವಂತ ವ್ಯಕ್ತಿಯಾಗಿ, ಮತ್ತು ತಮ್ಮ ಸಾಮರ್ಥ್ಯದ ಕುರುಹಾದ ಹಾಸ್ಯ ಲೇಪನದ ಪಾತ್ರವಾಗಿ ಮಾತ್ರ ಮೂಡಿದ್ದು, ನರಸಿಂಹರಾಜು ತಮ್ಮನ್ನು ಎಂದೂ ಅಗತ್ಯಕ್ಕಿಂತ ತೋರಿಕೊಳ್ಳದೆ ತಮ್ಮ ಕಲಾವಿದನನ್ನು ಮಾತ್ರ ಹೊರತಂದ ಶ್ರೇಷ್ಠತೆಯನ್ನು ಸಾರಿ ಹೇಳುತ್ತದೆ.

“ನಗಬೇಕು ನಗಿಸಬೇಕು, ಇದೇ ನನ್ನ ಧರ್ಮ ನಗಲಾರೆ ಅಳುವೇ ಎಂದರೆ ಅದೇ ನಿನ್ನ ಕರ್ಮ” ಎಂಬುದು ನರಸಿಂಹ ರಾಜು ಅವರ ಮೇಲೆ ಚಿತ್ರಿತವಾದ ‘ನಕ್ಕರೆ ಅದೇ ಸ್ವರ್ಗ’ ಚಿತ್ರದ ಗೀತೆ. ಇದನ್ನು ಚಾಚೂ ತಪ್ಪದೆ ತಮ್ಮ ಬಾಳಿನ ತಿರುಳನ್ನಾಗಿ ಮಾಡಿಕೊಂಡವರು ನರಸಿಂಹರಾಜು. ಅವರು ಯಾರ ಬಗ್ಗೆ ಕೆಟ್ಟ ಮಾತನ್ನು ಆಡಿದ್ದಾಗಲೀ, ಅವರ ಬಗ್ಗೆ ಯಾರೂ ಹಗುರವಾಗಿ ಮಾತನಾಡಿದ್ದಾಗಲೀ ನಾವೆಂದು ಮಾಧ್ಯಮದಲ್ಲಿ ಓದಲಿಲ್ಲ.

ಕೆಲವು ವರ್ಷ ಮದ್ರಾಸಿನಲ್ಲಿ ನೆಲೆಸಿದ್ದ ನರಸಿಂಹರಾಜು ಕನ್ನಡ ಚಿತ್ರಗಳ ನಿರ್ಮಾಣ ಚಟುವಟಿಕೆಗಳು ಬೆಂಗಳೂರಿನಲ್ಲಿ ಆರಂಭವಾದಾಗ ಅವರು ವಾಸ್ತವ್ಯವನ್ನು ಬೆಂಗಳೂರಿಗೆ ಬದಲಿಸಿದರು. ಮಕ್ಕಳು ಮೊಮ್ಮಕ್ಕಳೊಂದಿಗೆ ನೆಲೆಸಿದ್ದ ಕುಟುಂಬವತ್ಸಲ ನರಸಿಂಹರಾಜು, ತಮ್ಮ 56ನೇ ವಯಸ್ಸಿನಲ್ಲಿ 1979ರ ಜುಲೈ 20 ರಂದು ಎಂದಿನಂತೆ ರಾತ್ರಿ ಉಪಹಾರ ಸೇವಿಸಿ ಮಲಗಿದ್ದರು. ಮುಂಜಾನೆ 4.30ರ ವೇಳೆಗೆ ತೀವ್ರ ಹೃದಯಾಘಾತದಿಂದ ನಿಧನರಾದರು.

ನರಸಿಂಹರಾಜು ಅವರು ಕನ್ನಡ ಚಿತ್ರರಂಗದ ಸುವರ್ಣ ಕಾಲ ಎನ್ನಬಹುದಾದ ಅರವತ್ತು ಎಪ್ಪತ್ತರ ದಶಕದಲ್ಲಿ ಹಾಸ್ಯಚಕ್ರವರ್ತಿಯಾಗಿ ಕನ್ನಡಿಗರನ್ನು ರಂಜಿಸಿದ್ದರು. ಇಂತಹ ನಟನಾ ಚಕ್ರವರ್ತಿಗೆ ಒಮ್ಮೆಯೂ ರಾಜ್ಯ ಸರ್ಕಾರದ ಪ್ರಶಸ್ತಿ ಕೂಡಾ ಬರಲಿಲ್ಲ. ಅವರ ಹೆಸರಿನಲ್ಲಿ ಯಾವೊಂದು ಸ್ಮಾರಕ, ರಸ್ತೆ, ಕಟ್ಟಡಗಳು ಮೂಡಲಿಲ್ಲ. ಆದರೆ ಅವರು ಚಿತ್ರರಸಿಕರ ಹೃದಯದಲ್ಲಿ ಮೂಡಿರುವಷ್ಟು ಉಳಿದವರು ನಿಲ್ಲಬಲ್ಲರು ಎಂದು ಯಾರೂ ಊಹಿಸಲೂ ಸಾಧ್ಯವಿಲ್ಲ. ಇದನ್ನೇ ಇರಬೇಕು ವಚನಕಾರರು ಹೇಳಿರುವುದು “ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ” ಎಂದು. ನರಸಿಂಹ ರಾಜು ಅಂತಹ ತಾನೂ ನಕ್ಕು, ಇತರರನ್ನೂ ನಗೆಗಡಲಿನಲ್ಲಿ ತೇಲಿಸಿದ ಆತ್ಮಉಂಟೆ? ಈ ಮಹಾನ್ ಚೇತನಕ್ಕೆ ನಮ್ಮ ಗೌರವದ ಪ್ರೀತಿಯ ಆತ್ಮೀಯ ನಮನ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ..!

Published

on

ಸುದ್ದಿದಿನ,ಬೆಂಗಳೂರು: ನಟಿ ಹಾಗೂ ಖ್ಯಾತ ನಿರೂಪಕಿ ಅಪರ್ಣ (57) ನಿಧನರಾಗಿದ್ದಾರೆ.ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅಪರ್ಣ ಅವರು ಇಂದು ಸಂಜೆ ಅಪರ್ಣ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳಿದ್ದಾರೆ.

ಹಲವು ಸಿನೆಮಾಗಳಲ್ಲಿ ನಟಿಸಿದ್ದ ಅವರು ಮಜಾಟಾಕೀಸ್ ಮೂಲಕ ಮನೆಮಾತಾಗಿದ್ದರು. ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭ್ರಷ್ಟಾಚಾರದ ವಿರುದ್ಧ ಶಂಕರ್ ಇನ್ನೊಂದು ಹೋರಾಟ!

Published

on

  • ಚೇತನ್ ನಾಡಿಗೇರ್

ಣಿರತ್ನಂ ಏನೇ ಮಾಡಲಿ, ಯಾವುದೇ ಚಿತ್ರ ತೆಗೆಯಲಿ, ಅದರ ಮೂಲ ಸೆಲೆ ಪ್ರೀತಿಯಾಗಿರುತ್ತದೆ. ಪ್ರೀತಿಯ ಬೇರೆಬೇರೆ ವ್ಯಾಖ್ಯಾನಗಳನ್ನು, ಬೇರೆಬೇರೆ ಹಿನ್ನೆಲೆಯಲ್ಲಿ ಮಣಿರತ್ನಂ ಪ್ರತಿಚಿತ್ರದಲ್ಲೂ ಹೇಳುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅದೇ ರೀತಿ, ರಾಮ್‍ಗೋಪಾಲ್‍ ವರ್ಮ ಏನೇ ಚಿತ್ರ ಮಾಡಿದರೂ, ಕ್ರೈಮ್‍ ಹಿನ್ನೆಲೆಯಲ್ಲೇ ಮಾಡುತ್ತಾರೆ. ಹೀಗೆ ಬೇರೆಬೇರೆ ನಿರ್ದೇಶಕರು ಒಂದೇ ವಿಷಯವನ್ನಿಟ್ಟುಕೊಂಡು ಬೇರೆಬೇರೆ ರೀತಿ ವ್ಯಾಖ್ಯಾನಿಸುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

ಈಗ್ಯಾಕಪ್ಪಾ ಈ ಮಾತು ಎಂದರೆ, ಶಂಕರ್ ನಿರ್ದೇಶನದ ‘ಇಂಡಿಯನ್‍ 2’ ನಾಳೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ತಮ್ಮದೇ ಯಶಸ್ವಿ ಚಿತ್ರ ‘ಇಂಡಿಯನ್‍’ನ ಮುಂದುವರೆದ ಭಾಗ ಇದು. ಆ ಚಿತ್ರ ಬಿಡುಗಡೆಯಾಗಿ 26 ವರ್ಷಗಳ ನಂತರ ‘ಇಂಡಿಯನ್‍ 2’ ಬಿಡುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭ್ರಷ್ಟಾಚಾರದ ವಿಷಯವನ್ನಿಟ್ಟುಕೊಂಡು ಶಂಕರ್‍ ನಿರ್ದೇಶಿಸುತ್ತಿರುವ ಏಳನೇ ಚಿತ್ರ ಇದು.

ಶಂಕರ್‍ ಚಿತ್ರಗಳೆಂದರೆ ಅದ್ಧೂರಿತನ, ಹಿಟ್‍ ಹಾಡುಗಳು, ದೊಡ್ಡ ಕ್ಯಾನ್ವಾಸ್‍, ಮಾಸ್ ಅಂಶಗಳು ಇವೆಲ್ಲವೂ ಕಾಣುತ್ತದೆ. ಅದೇ ರೀತಿ ಗಮನಸೆಳೆಯುವ ಒಂದು ವಿಷಯವೆಂದರೆ, ಅದು ಭ್ರಷ್ಟಾಚಾರದ ವಿರುದ್ಧ ಶಂಕರ್‍ ನಿರಂತರ ಹೋರಾಟ. ತಮ್ಮ ನಿರ್ದೇಶನದ ಮೊದಲ ಚಿತ್ರದಿಂದಲೂ ಶಂಕರ್‍ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಶಂಕರ್‍ ಈ 31 ವರ್ಷಗಳಲ್ಲಿ ನಿರ್ದೇಶಿಸಿರುವುದು ಕೇವಲ 14 ಚಿತ್ರಗಳನ್ನು. ಆ ಪೈಕಿ ಏಳು ಚಿತ್ರಗಳು ಭ್ರಷ್ಟಾಚಾರ ಎಂಬ ವಿಷಯವನ್ನಿಟ್ಟುಕೊಂಡು ಮೂಲವಾಗಿಟ್ಟುಕೊಂಡು ಮಾಡಲಾಗಿದೆ.

ಈ ಪ್ರಯಾಣ ಶುರುವಾಗಿದ್ದು 1993ರಲ್ಲಿ ಬಿಡುಗಡೆಯಾದ ‘ಜಂಟಲ್‍ಮ್ಯಾನ್’ ಚಿತ್ರದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಕುರಿತು ಕಥೆ ಮಾಡಿದ್ದರು. ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಮತ್ತು ಲಂಚಾವತಾರದಿಂದ ಹೇಗೆ ಪ್ರತಿಭಾವಂತ ಯುವಕರು ಅವಕಾಶವಂಚಿತರಾಗುತ್ತಿದ್ದಾರೆ ಎಂದು ಹೇಳಿದರು. ಒಬ್ಬ ಸಾಮಾನ್ಯ ಮನುಷ್ಯ ಹೇಗೆ ಈ ವ್ಯವಸ್ಥೆಯ ವಿರುದ್ಧ ಹೋರಾಡುತ್ತಾನೆ ಎಂದು ತೋರಿಸಿದ್ದರು. ಆ ನಂತರ ‘ಇಂಡಿಯನ್‍’, ‘ಮುದಲ್ವನ್‍’, ‘ಅನ್ನಿಯನ್‍’, ‘ಶಿವಾಜಿ: ದಿ ಬಾಸ್‍’ ಮತ್ತು ‘ಇಂಡಿಯನ್‍ 2’ ಚಿತ್ರಗಳ ಮೂಲಕ ಅವರು ಇದೇ ವಿಷಯವನ್ನು ಹೇಳುವ ಪ್ರಯತ್ನವನ್ನು ಮಾಡಿದ್ದಾರೆ.

ವಿಷಯ ಅದೇ ಭ್ರಷ್ಟಾಚಾರ ಅಥವಾ ಲಂಚಾವತಾರವಿರಬಹುದು. ಅದೇ ವಿಷಯವನ್ನಿಟ್ಟುಕೊಂಡು ಶಂಕರ್‍ ಬೇರೆಬೇರೆ ರೀತಿಯಲ್ಲಿ ಕಮರ್ಷಿಯಲ್‍ ಆಗಿ ಚಿತ್ರಗಳನ್ನು ರೂಪಿಸಿರುವುದಿದೆಯಲ್ಲಾ ಅದು ವಿಶೇಷ ಎನಿಸುತ್ತದೆ. ‘ಇಂಡಿಯನ್‍’ನಲ್ಲಿ ಸ್ವಾತಂತ್ರ್ಯ ಹೋರಾಟಗಾರನೊಬ್ಬ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾನೆ. ತನ್ನ ಮಗನೇ ದೊಡ್ಡ ಭ್ರಷ್ಟ ಎಂದು ಗೊತ್ತಾದಾಗ ಅವನನ್ನೇ ಸಾಯಿಸುತ್ತಾನೆ. ‘ಮುದಲ್ವನ್’ ಎಂಬ ಚಿತ್ರದಲ್ಲಿ ಒಬ್ಬ ಸಾಮಾನ್ಯ ಮನುಷ್ಯ ಒಂದು ದಿನದ ಮುಖ್ಯಮಂತ್ರಿಯಾಗಿ ಭ್ರಷ್ಟಾಚಾರ ತಡೆಯುವ ಪ್ರಯತ್ನವನ್ನು ತನ್ನದೇ ಶೈಲಿಯಲ್ಲಿ ಮಾಡುತ್ತಾನೆ. ‘ಅನ್ನಿಯನ್‍’ನಲ್ಲಿ ಭ್ರಷ್ಟಾಚಾರ, Multiple Personality Disorder ಮತ್ತು ಗರುಡ ಪುರಾಣವನ್ನು ಶಂಕರ್‍ ಸೇರಿಸಿ ಕಥೆ ಮಾಡಿರುವ ರೀತಿಯೇ ವಿಶಿಷ್ಟ. ‘ಶಿವಾಜಿ’ಯಲ್ಲಿ ನೂರಾರು ಕೋಟಿ ಆಸ್ತಿ ಇರುವ ಶ್ರೀಮಂತನೊಬ್ಬ ಈ ವ್ಯವಸ್ಥೆಯಿಂದ ಬೇಸತ್ತು ಹೋರಾಟಕ್ಕೆ ಇಳಿಯುತ್ತಾನೆ. ಈಗ ‘ಇಂಡಿಯನ್‍ 2’ ಚಿತ್ರದಲ್ಲಂತೂ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಎಂದು Second War of Independence ಬಣ್ಣಿಸಿದ್ದಾರೆ. ಅಲ್ಲಿಗೆ ಭ್ರಷ್ಟಾಚಾರದ ವಿರುದ್ಧ ಶಂಕರ್‍ ಮತ್ತೊಂದು ಹೋರಾಟ ಶುರು ಮಾಡಿದ್ದಾರೆ.

ಇಷ್ಟಕ್ಕೂ ಶಂಕರ್‍ ಯಾಕೆ ಈ ವಿಷಯದ ಮೇಲೆ ಮೇಲಿಂದ ಮೇಲೆ ಸಿನಿಮಾ ಮಾಡುತ್ತಾರೆ? ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ಯಾವುದೇ ವಿಷಯ ನನ್ನನ್ನು ಕಾಡಿದರೂ, ಆ ಕುರಿತು ಕಥೆ ಮಾಡುವುದಕ್ಕೆ ಪ್ರಯತ್ನ ಮಾಡುತ್ತೇನೆ. ಈ ಭ್ರಷ್ಟಾಚಾರ ನನ್ನನ್ನು ಪದೇಪದೇ ಕಾಡಿದೆ. ಅದನ್ನು ಕಮರ್ಷಿಯಲ್‍ ರೂಪದಲ್ಲಿ, ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡುತ್ತಾ ಬಂದಿದ್ದೇನೆ. ಒಂದು ವಿಷಯ ಸ್ಪಷ್ಟವಾದ ಮೇಲೆ, ಅದನ್ನು ಹೇಗೆ ತರಬೇಕು ಎಂದು ಯೋಚಿಸುತ್ತೇನೆ. ಪ್ರೇಕ್ಷಕರ ದೃಷ್ಟಿಕೋನದಿಂದ ಯೋಚಿಸುವುದಕ್ಕೆ ಪ್ರಯತ್ನಿಸುತ್ತೇನೆ. ಅವರಿಗೆ ಬೋರ್‍ ಆಗಬಾರದು ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಚಿತ್ರಕಥೆ ಮಾಡುತ್ತಾ ಹೋಗುತ್ತೇನೆ’ ಎಂದು ಹೇಳಿಕೊಂಡಿದ್ದಾರೆ ಶಂಕರ್.

ಬಹುಶಃ ಅದೇ ಅವರ ಯಶಸ್ಸು ಎನ್ನಬಹುದೇನೋ? ಶಂಕರ್‍ ಒಂದು ಚಿತ್ರದ ಕಥೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಾರೋ, ಮನರಂಜನಾತ್ಮಕ ಅಂಶಗಳಿಗೂ ಅಷ್ಟೇ ಪ್ರಾಮುಖ್ಯತೆ ಕೊಡುತ್ತಾರೆ. ಕೆಲವೊಮ್ಮೆ ಶಂಕರ್‍ ಪಾತ್ರಗಳು Larger than life ಎಂದನಿಸಬಹುದು. ಕೆಲವೊಮ್ಮೆ ತುಂಬಾ exaggeration ಅಂತನಿಸಬಹುದು. ಒಂದು ದಿನಕ್ಕೆ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯವಾ? ಪಾರ್ಥಸಾರಥಿ ರಾಮಾನುಜ ಅಯ್ಯಂಗಾರ್‍ಗೆ ಅನ್ನಿಯನ್‍ ಆಗುವುದಕ್ಕೆ ಸಾಧ್ಯವಾ? 78ರ ವೃದ್ಧನೊಬ್ಬ ಸೇನಾಪತಿಯಾಗಿ ಹಾಗೆ ಹೊಡೆದಾಡುವುದಕ್ಕೆ ಸಾಧ್ಯವೇ? ಈ ಪ್ರಶ್ನೆಗಳು ಬರಬಹುದು. ತಾರ್ಕಿಕವಾಗಿ ನೋಡಿದರೆ ಇದು ಕಷ್ಟ. ಆದರೆ, ಶಂಕರ್ ಲಾಜಿಕ್‍ಗಿಂತ ಮ್ಯಾಜಿಕ್‍ನಲ್ಲಿ ನಂಬಿಕೆ ಇಟ್ಟವರು. ಏನೇನೋ ಮ್ಯಾಜಿಕ್‍ ಮಾಡಿ ಪ್ರೇಕ್ಷಕರನ್ನು ನಂಬಿಸುತ್ತಾರೆ. ತಮ್ಮ ಪ್ರಪಂಚದಲ್ಲಿ ಎಳೆದುಕೊಳ್ಳುತ್ತಾರೆ.

ಈಗೆಲ್ಲಾ Cinematic Universeಗಳ ಕಾಲ. ಯಶ್‍ರಾಜ್‍ ಸ್ಪೈ ಯೂನಿವರ್ಸ್‍, ಲೋಕೇಶ್‍ ಕನಕರಾಜ್‍ ಯೂನಿವರ್ಸ್, ರೋಹಿತ್‍ ಶೆಟ್ಟಿ ಪೊಲೀಸ್‍ ಯೂನಿವರ್ಸ್‍ಗಳು ಹೆಚ್ಚು ಸದ್ದು ಮಾಡುತ್ತಿವೆ. ಆದರೆ, ಕೆಲವು ವರ್ಷಗಳ ಹಿಂದೆಯೇ ‘ಇಂಡಿಯನ್‍’ನ ಸೇತುಪತಿ, ‘ಶಿವಾಜಿ: ದಿ ಬಾಸ್‍’ನ ಶಿವಾಜಿ ಮತ್ತು ‘ಮುದಲ್ವನ್‍’ನ ಪುಗಳೇಂದಿಯನ್ನಿಟ್ಟುಕೊಂಡು ಏಕೆ ಒಂದು ಚಿತ್ರ ಮಾಡಬಾರದು ಎಂದು ಅವರು ಕೆಲವು ವರ್ಷಗಳ ಹಿಂದೆಯೇ ಯೋಚಿಸಿದ್ದರಂತೆ. ಆದರೆ, ಸೂಕ್ತ ಪ್ರೋತ್ಸಾಹ ಸಿಗದ ಕಾರಣ ಸುಮ್ಮನಾದರಂತೆ.

ಈ ಕುರಿತು ಮಾತನಾಡಿರುವ ಅವರು, ‘2008ರಲ್ಲಿ ‘ಎಂದಿರನ್‍’ ಚಿತ್ರ ಮಾಡುವಾಗ, ಯಾಕೆ ನಾನೇ ಸೃಷ್ಟಿಸಿದ ಮೂರು ಪಾತ್ರಗಳನ್ನು ಒಂದೇ ಚಿತ್ರದಲ್ಲಿ ಯಾಕೆ ತರಬಾರದು ಎಂದನಿಸಿತು. ಒಂದು ಕ್ಷಣ ರೋಮಾಂಚನವಾಯ್ತು. ಖುಷಿಯಿಂದ ನನ್ನ ಸಹಾಯಕ ನಿರ್ದೇಕರನ್ನು ಕರೆದು ಐಡಿಯಾ ಹೇಳಿದೆ. ಅವರೆಲ್ಲರೂ ಇದು ಸಾಧ್ಯವಾ? ಎಂದು ಅನುಮಾನದಿಂದ ನೋಡಿದರು. ನಂತರ ಕೆಲವು ಹಿರಿಯ ತಂತ್ರಜ್ಞರಿಗೆ ಮತ್ತು ನನ್ನ ಸ್ನೇಹಿತರಿಗೆ ಹೇಳಿದೆ. ನನ್ನ ಮನಸ್ಸಿಗೆ ನೋವಾಗಬಹುದು ಎಂದು ಚೆನ್ನಾಗಿದೆ ಎಂದಷ್ಟೇ ಹೇಳಿ ಹೊರಟು ಹೋದರು. ಬಹುಶಃ ನನಗೆ ಆಗ ಪ್ರೋತ್ಸಾಹ ಸಿಕ್ಕಿದ್ದರೆ ಚಿತ್ರ ಮಾಡಿಬಿಟ್ಟಿರುತ್ತಿದ್ದೆನೇನೋ? ಕೆಲವು ವರ್ಷಗಳ ನಂತರ ‘ಅವೆಂಜರ್ಸ್’ ಚಿತ್ರ ನೋಡಿದಾಗ, ಅದು ಸಹ Marvel Cinematic Universeನ ಒಂದು ಭಾಗ ಆಗಿತ್ತು. ಒಂದು ಒಳ್ಳೆಯ ಐಡಿಯಾ ಇದ್ದರೆ, ತಕ್ಷಣವೇ ಅದನ್ನು ಕಾರ್ಯರೂಪಕ್ಕೆ ಇಳಿಸಬೇಕು ಎಂದು ನನಗೆ ಆಗ ಅರ್ಥವಾಯ್ತು. ಏಕೆಂದರೆ, ನಮ್ಮ ತರಹವೇ ಜಗತ್ತಿನಾದ್ಯಂತ ಹಲವರು ಹೊಸ ವಿಷಯಗಳ ಬಗ್ಗೆ ಯೋಚಿಸುತ್ತಿರುತ್ತಾರೆ. ಅವರು ಅದನ್ನು ಕಾರ್ಯರೂಪಕ್ಕೆ ತರುವ ಮುನ್ನ, ಮೊದಲು ನಾವು ಆ ಕೆಲಸ ಮಾಡಬೇಕು’ ಎಂದು ಹೇಳಿಕೊಂಡಿದ್ದಾರೆ ಶಂಕರ್‍.

Shankar Cinematic Universe ಯಾವತ್ತು ಕಾರ್ಯರೂಪಕ್ಕೆ ಬರುತ್ತದೋ ಗೊತ್ತಿಲ್ಲ. ಸೇತುಪತಿ, ಶಿವಾಜಿ ಮತ್ತು ಪುಗಳೇಂದಿಯನ್ನು ಒಟ್ಟಿಗೆ ಮುಂದಿಟ್ಟುಕೊಂಡು ಯಾವಾಗ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾರೋ ಗೊತ್ತಿಲ್ಲ. ಆದರೆ, ಸದ್ಯಕ್ಕಂತೂ ಭ್ರಷ್ಟಾಚಾರದ ವಿರುದ್ಧ ಶಂಕರ್ ತಮ್ಮ ಹೋರಾಟ ಮುಂದುವರೆಸಿದ್ದಾರೆ. ‘ಇಂಡಿಯನ್‍ 2’ ಬಿಡುಗಡೆಯಾಗಿ ಆರು ತಿಂಗಳಲ್ಲೇ ಅದೇ ಸೇತುಪತಿ, ‘ಇಂಡಿಯನ್‍ 3’ ಆಗಿ ಮತ್ತೆ ಬರಲಿದ್ದಾರೆ. ಅದಾಗಿ ಸ್ವಲ್ಪ ದಿನಗಳಿಗೆ ‘ಗೇಮ್‍ ಚೇಂಜರ್‍’ ಎಂಬ ರಾಮ್‍ಚರಣ್‍ ತೇಜ ಅಭಿನಯದ ಇನ್ನೊಂದು ಚಿತ್ರದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸಲಿದ್ದಾರೆ. ಪಾತ್ರಗಳು ಬದಲಾಗಬಹುದು, ಶಂಕರ್‍ ಹೋರಾಟ ಮಾತ್ರ ನಿರಂತರವಾಗಿ ಮುಂದುವರೆಯುತ್ತಿರುವುದು ವಿಶೇಷ. (ಬರಹ : ಚೇತನ್ ನಾಡಿಗೇರ್, ಫೇಸ್‌ಬುಕ್‌ ಬರಹ)ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಮಹಾತ್ಮ ಗಾಂಧಿ ಬಿಟ್ಟರೆ ನಾನೇ ಫಾದರ್‍ ಆಫ್‍ ದಿ ನೇಷನ್‍ ಅಂತಾರೆ..!

Published

on

  • ಚೇತನ್ ನಾಡಿಗೇರ್

‘ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಜಾಸ್ತಿ ಆಗ್ತಿಲ್ಲ, ಆ ಬಗ್ಗೆ ಮಾತಾಡೋಣ. ಆಟೋ ಚಾಲಕರಿಗೆ ಬೈಕ್‍ ಸವಾರರಿಂದ ತೊಂದರೆ ಆಗುತ್ತಿದೆ ಆ ಬಗ್ಗೆ ಮಾತಾಡೋಣ. ಸರ್ಕಾರಿ ಶಾಲೆಗಳಲ್ಲಿ ಬಿಸಿಊಟ ಅಡುಗೆ ಮಾಡುವವರಿಗೆ ತಿಂಗಳಿಗೆ ಮೂರು ಸಾವಿರ ರೂಪಾಯಿ ಸಂಬಳ. ಅದರ ಬಗ್ಗೆ ಮಾತಾಡೋಣ. ಮಿಕ್ಕವರೆಲ್ಲಾ ಬಹಳ ಬ್ಯುಸಿಯಾಗಿರುವುದರಿಂದ ನಾವು ಇದರ ಬಗ್ಗೆ ಮಾತಾಡೋಣ್ವಾ?’

ಮಾರ್ಮಿಕವಾಗಿ ಕೇಳಿದರು ಪ್ರಕಾಶ್‍ ರೈ. ಅವರಿಗೆ ಆ ವಿಷಯದ ಬಗ್ಗೆ ಮಾತಾಡುವುದಕ್ಕೆ ಇಷ್ಟವಿರಲಿಲ್ಲ. ಆದರೂ ಕನ್ನಡ ಚಿತ್ರರಂಗದಲ್ಲಿ ಕಳೆದ ಒಂದು ತಿಂಗಳಲ್ಲಿ ಆಗುತ್ತಿರುವ ಬೆಳವಣಿಗೆ ಬಗ್ಗೆ ನಿಮ್ಮ ಅಭಿಪ್ರಾಯವೇನು? ಎಂಬ ಪ್ರಶ್ನೆ ಬಂತು. ಅದನ್ನು ಬಹಳ ಜಾಣ್ಮೆಯಿಂದ ತಳ್ಳಿಹಾಕಿದರು ರೈ. ಅದೊಂದು ಬಿಟ್ಟು ಹಲವು ವಿಷಯಗಳ ಬಗ್ಗೆ ಮಾತನಾಡಿದರು. ತಮ್ಮ ಇಷ್ಟದ ಚಿತ್ರದ ಬಗ್ಗೆ, ಕನ್ನಡ ಚಿತ್ರರಂಗದ ಸದ್ಯದ ಪರಿಸ್ಥಿತಿಯ ಬಗ್ಗೆ, ಸೋಷಿಯಲ್ ಮೀಡಿಯಾವನ್ನು ಕೆಲವರು ಕೆಟ್ಟದಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ, ತಂದೆ-ಮಗನ ಸಂಬಂಧದ ಬಗ್ಗೆ, STARDOM ಸಂಭಾಳಿಸುವ ಬಗ್ಗೆ, ಕಲಿಕೆಯ ಬಗ್ಗೆ … ಹೀಗೆ ಹಲವು ವಿಷಯಗಳನ್ನು ಅವರು ಮಾತನಾಡಿದರು. ಅದಕ್ಕೆ ವೇದಿಕೆಯಾಗಿದ್ದು, ಆರ್. ಚಂದ್ರು ನಿರ್ಮಾಣದ, ‘ಡಾರ್ಲಿಂಗ್‍’ ಕೃಷ್ಣ ಅಭಿನಯದ ‘ಫಾದರ್‍’ ಚಿತ್ರದ ಪತ್ರಿಕಾಗೋಷ್ಠಿ. ಈ ಚಿತ್ರದಲ್ಲಿನ ತಮ್ಮ ಪಾತ್ರ ಮತ್ತ ತಂದೆಯ ವ್ಯಾಖ್ಯಾನವನ್ನು ರೈ ಎಷ್ಟು ಚೆನ್ನಾಗಿ ಮಾಡಿದರು ಗೊತ್ತಾ? ನೀವೇ ಓದಿ …

ನಾನು ನನ್ನ ಮೂರು ದಶಕಗಳ ವೃತ್ತಿಜೀವನದಲ್ಲಿ ಯಶಸ್ಸಿನಿಂದ ಹಾಳಾದ ಬಹಳಷ್ಟು ಜನರನ್ನು ನೋಡಿದ್ದೇನೆ. ಸೋಲಿನಿಂದ ಹಾಳಾದವರನ್ನು ನೋಡಿದ್ದು ಕಡಿಮೆ. ಯಶಸ್ಸು ಎನ್ನುವುದು ಒಂದು ನಶೆ. ಯಶಸ್ವಿಯಾಗುವುದು ದೊಡ್ಡ ವಿಷಯವಲ್ಲ. ಅದನ್ನು ದಕ್ಕಿಸಿಕೊಳ್ಳೋದು, ಉಳಿಸಿಕೊಳ್ಳೋದು ಬಹಳ ಮುಖ್ಯ. ಹಾಗಾಗಿ, ಡಾ. ರಾಜಕುಮಾರ್, ರಜನಿಕಾಂತ್‍, ಕಮಲ್ ಹಾಸನ್‍ ಮುಂತಾದವರು ಆರು ದಶಕ, ಐದು ದಶಕಗಳ ಕಾಲ ಕೆಲಸ ಮಾಡಿದವರನ್ನು ನಾವು ನೋಡಬಹುದು. ಈಗ ಅಂಥವರು ಸಿಗುವುದೇ ಇಲ್ಲ ನಮಗೆ. ಬಹಳಷ್ಟು ಯುವಕರು stardomಗೆ ತಯಾರಾಗಿರುವುದಿಲ್ಲ. ಎಷ್ಟು ನಾವು ಅದನ್ನು ಇಳಿಸಿಕೊಂಡು ಹೊರಗೆ ಬರುತ್ತೀವೋ, ಅಷ್ಟು ಒಳ್ಳೆಯದು. ಇಲ್ಲದಿದ್ದರೆ ಅದು ನಮ್ಮನ್ನು ಸುಟ್ಟುಹಾಕುತ್ತದೆ. ಕೆಲವರು ಕಲಿಯುತ್ತಿದ್ದಾರೆ, ಕೆಲವರು ಕಲಿಯುವುದಿಲ್ಲ.

ಪ್ರತಿಯೊಬ್ಬರಿಗೂ ಇಗೋ ಇರಬೇಕು. ಅದು ಸ್ವಾಭಿಮಾನವಾಗಿರುವವರೆಗೂ ಇರಬೇಕು. ಅದು ಅಹಂಕಾರವಾದರೆ ಇಬ್ಬರಿಗೂ ಒಳ್ಳೆಯದಲ್ಲ. ಒಂದು ಇಗೋ ನನ್ನನ್ನು ಬೆಳೆಸುವುದಕ್ಕೆ ಸಾಧ್ಯವಾದರೆ, ಇನ್ನೊಂದನ್ನು ರೂಪಿಸುವುದಕ್ಕೆ ಸಾಧ್ಯವಾದರೆ, ಒಂದು ಧಾರ್ಮಿಕ ಕೋಪವಾದರೆ ಒಳ್ಳೆಯದಲ್ವಾ? ಅದು ಆಯಾ ಪರಿಸ್ಥಿತಿಗೆ ಬದಲಾಗುತ್ತಿರುತ್ತದೆ. ಒಂದು ಪದದ ಅರ್ಥ ಪದಕೋಶದಲ್ಲಿ ಸಿಗುವುದಿಲ್ಲ, ಆ ಸಂದರ್ಭದಲ್ಲಿ ಸಿಗುತ್ತದೆ. ಯಾವ ಸಂದರ್ಭದಲ್ಲಿ ಆ ಪದವನ್ನು ಉಪಯೋಗಿಸುತ್ತೀವೋ, ಆ ಪದಕ್ಕೆ ಅರ್ಥ ಇರುತ್ತದೆಯೇ ಹೊರತು, ಇಗೋ ಎಂದರೆ ಒಂದು definite ಅರ್ಥವಿರುವುದಿಲ್ಲ.

ಕೆಲವು ನಟರು ಸಹ ತಾವು ಜಿಮ್‍ಗೆ ಹೋಗಿಯೇ ನಟ ಆಗುತ್ತೀನಿ ಎಂದರೆ ಆಗುವುದಿಲ್ಲ. ಭಾಷೆ, ಸಂಸ್ಕೃತಿ, ಸಾಹಿತ್ಯದ ಬಗ್ಗೆ ತಿಳಿದುಕೊಳ್ಳೋದು, ಕಲೆಯ ಪ್ರಕಾರಗಳನ್ನು ಅರಿತುಕೊಳ್ಳೋದು, ಅದರಿಂದ ನನಗೆ ಹೆಸರಾಗಬೇಕೆಂದು ಬಯಸೋದು ಸಹ ಮುಖ್ಯ. ಎಲ್ಲಕ್ಕಿಂತ ಹೆಚ್ಚಾಗಿ, ಪ್ರತಿಯೊಬ್ಬರು ಗೆಲ್ಲಬೇಕೆಂಬ ಒತ್ತಡ ಯಾಕೆ? ಸೋಲು ಸಂತೋಷ ಯಾಕೆ ನಾವು ಕೊಟ್ಟಿಲ್ಲ? ಕ್ಷಮಿಸುವ ಸಂತೋಷವನ್ನು ನಾವು ಯಾಕೆ ಕೊಟ್ಟಿಲ್ಲ? ನಮಗೂ ಅವನೇನು ಹೇಳುತ್ತೇನೆ ಎನ್ನುವ ತಾಳ್ಮೆಯೇ ಇಲ್ಲ. ನಾನು ಅಂದುಕೊಂಡಿರುವ ಸಿನಿಮಾ ತೆಗೆದಿದ್ದೀಯಾ? ಅಂತಲೇ ಎಲ್ಲರೂ ಕೇಳೋದು. ಏನು ಹೇಳುತ್ತಾನೆ ಎನ್ನುವ ತಾಳ್ಮೆಯೇ ಯಾರಿಗೂ ಇಲ್ಲ.

ನಾನೇ ಈಗ ಮತ್ತೆ ಕಲಿಯಬೇಕಾದ ಪರಿಸ್ಥಿತಿಯಲ್ಲಿದ್ದೀನಿ. ಇಷ್ಟು ಸಿನಿಮಾಗಳನ್ನು ಮಾಡಿದ್ದೇನೆ, ಹೊಸಹೊಸ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದೇನೆ. ಇವತ್ತು ಹೊಸಬರ ಜೊತೆಗೆ ಮಾಡುವಾಗ, ಅವರು ಬೇರೇನೋ ಕೇಳುತ್ತಿದ್ದಾರೆ ಅಂತನಿಸುತ್ತಿದೆ. ಹಾಗಾಗಿ, ಇದುವರೆಗೂ ಕಲಿತಿದ್ದನ್ನು ಮರೆತು, ಹೊಸದಾಗಿ ಕಲಿಯಬೇಕು. ಇದೊಂದು ಸವಾಲು. ಖುಷಿಯಾಗುತ್ತಿದೆ. ಇತ್ತೀಚೆಗೆ ‘ರಾಯನ್‍’ ಸಿನಿಮಾದ ಸಮಾರಂಭದಲ್ಲಿದ್ದೆ. ಆ ಚಿತ್ರಕ್ಕೆ ರೆಹಮಾನ್‍ ಸಂಗೀತ ಸಂಯೋಜಿಸುತ್ತಿದ್ದು, ರೆಹಮಾನ್‍ ಚಿತ್ರರಂಗಕ್ಕೆ ಬಂದು 30 ವರ್ಷಗಳಾಗಿವೆ. ನನ್ನ ಮೊದಲ ತಮಿಳು ಚಿತ್ರಕ್ಕೆ ಅವರೇ ಸಂಗೀತ ನಿರ್ದೇಶಕರು.

30 ವರ್ಷಗಳ ನಂತರವೂ ನಾವಿನ್ನೂ ಇದ್ದೀವಲ್ಲ ಎನ್ನುವುದೇ ಬಹಳ ಸಂತೋಷದ ವಿಷಯ. ಒಬ್ಬ ಕಲಾವಿದ ಬೆಳೆಯೋದು ಬರೀ ಅವನ ಪ್ರತಿಭೆಯಿಂದ ಮಾತ್ರವಲ್ಲ. ಜನರ ಪ್ರೀತಿಯಿಂದ ಮತ್ತು ಅದಕ್ಕಿಂತ ಜನರು ಅವನ ಮೇಲಿಟ್ಟಿರುವ ನಂಬಿಕೆಯಿಂದ. ಆ ನಂಬಿಕೆಯನ್ನು 30 ವರ್ಷಗಳ ಕಾಲ ಉಳಿಸಿಕೊಂಡಿದ್ದೇವೆ ಎನ್ನುವುದೇ ನಮ್ಮ ಹೆಮ್ಮೆ ಆಗುತ್ತದೆ. ಏಕೆಂದರೆ, ಅವರು ನಮ್ಮನ್ನು ನಂಬಿ ಒಂದು ವೇದಿಕೆ ಕೊಟ್ಟಿದ್ದಾರೆ. ಅವರಿಗೆ ಇಷ್ಟ ಆದರಂತೂ, ನಿಮ್ಮನ್ನು ಪ್ರೀತಿಸೋಕೆ ಕಾರಣಗಳನ್ನು ಹುಡುಕುತ್ತಾನೆ. ಒಬ್ಬ ವ್ಯಕ್ತಿಯ ಬೆಳವಣಿಗೆ ಬರೀ ಅವನು ಬೆಳೆದ ಎತ್ತರ ನೋಡಿ ಲೆಕ್ಕ ಹಾಕುವುದಲ್ಲ, ಅವನು ಎತ್ತರವಾಗಿ ಬೆಳೆದ ಮೇಲೆ ಎಷ್ಟು ಜನರನ್ನ ಬೆಳೆಸಿದ ಎನ್ನುವುದು ಬಹಳ ಮುಖ್ಯ.

‘ನಾನು ನನ್ನ ಕನಸು’ ಇರಬಹುದು, ‘ಒಗ್ಗರಣೆ’ ಅಥವಾ ‘ಇದೆಂಥಾ ರಾಮಾಯಣ’ ಚಿತ್ರಗಳು ನನ್ನ ಅಭಿರುಚಿ. ತಂದೆ-ಮಗನ ಸಂಬಂಧದ ಕುರಿತು ಸಾಕಷ್ಟು ಚಿತ್ರೆಗಳು ಬಂದಿವೆ. ಮಹಾತ್ಮ ಗಾಂಧಿ ಬಿಟ್ಟರೆ ನಾನೇ ಫಾದರ್‍ ಆಫ್‍ ದಿ ನೇಷನ್‍ ಅಂತಾರೆ. ಏಕೆಂದರೆ, ಅಷ್ಟೊಂದು ತಂದೆಯ ಪಾತ್ರಗಳನ್ನು ನಾನು ಇದುವರೆಗೂ ಮಾಡಿಬಿಟ್ಟಿದ್ದೀನಿ. ಇದು ತೀವ್ರವಾಗಿ ಕಾಡುವ ಸಿನಿಮಾ. ತಂದೆ-ಮಗನ ಬಾಂಧವ್ಯಕ್ಕಿಂತ, ಇಲ್ಲಿ ಮಗನನ್ನು ಅರ್ಥ ಮಾಡಿಕೊಳ್ಳುವುದರ ಜೊತೆಗೆ ಹಿರಿಯರನ್ನೂ ಅರ್ಥ ಮಾಡಿಕೊಳ್ಳಬೇಕು ಎಂದು ಸೂಕ್ಷ್ಮವಾಗಿ ಹೇಳಲಾಗಿದೆ. ಪರಿಸ್ಥಿತಿಯ ವಿಕೋಪಗಳಿಗೆ ಅಥವಾ ಕೆಲವು ಒತ್ತಡಗಳಿಗೆ ಆ ಸಂಬಂಧ ಪ್ರಶ್ನಿಸಲ್ಪಡುತ್ತದೆ. ಜೀವನದಲ್ಲಿ ಕೆಲವು ಸಂಘರ್ಷಗಳು ಬಂದಾಗ ನಮಗೊಂದು ಲಿಬರೇಶನ್ ‍ಸಿಗುತ್ತದೆ. ಒಂದು ಪರಿಸ್ಥಿತಿ ಎದುರಾದಾಗ ನಮ್ಮಳೊಗಿರುವ ಇನ್ನೊಂದು ಶಕ್ತಿ ನಮಗೆ ಅರ್ಥವಾಗೋದು ಅಥವಾ ನಾವು ಇನ್ನಷ್ಟು ಬೆಳೆಯೋದಕ್ಕೆ ಸಾಧ್ಯ. ಅದನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗುತ್ತಿದೆ. ಇದೊಂದು ಜನ ಸಾಮಾನ್ಯರ ಸಿನಿಮಾ. ನಿಜವಾಗಲೂ ಕಾಡುವ ಸಿನಿಮಾ.

ಒಬ್ಬ ಗಂಡಸು ಮಕ್ಕಳು ಹುಟ್ಟುವ ತನಕ ಬರೀ ಒಬ್ಬ ಗಂಡ ಆಗಿರುತ್ತಾನೆ. ಮಕ್ಕಳು ಹುಟ್ಟಿದ ನಂತರ ಅಪ್ಪ ಎನ್ನುವ ಸ್ಥಿತಿ. ಅಪ್ಪನಿಗೂ, ಮಕ್ಕಳಿಗೂ ಒಂದೇ ವಯಸ್ಸು. ಅದರಲ್ಲೂ ಒಂದು ಹೆಣ್ಣು ಮಗಳ ಜೊತೆಗಿನ ಸಂಬಂಧ ಎಂದರೆ, ಅವನ ಜೀವನದಲ್ಲಿ ಬರುವ ಎಲ್ಲಾ ಸಂಬಂಧಗಳು, ಅಂದರೆ ತಾಯಿ ಇರಬಹುದು, ಹೆಂಡತಿ ಇರಬಹುದು, ತಂಗಿ ಇರಬಹುದು, ಸ್ನೇಹಿತೆ ಇರಬಹುದು. ಆದರೆ, ಮಗಳ ಜೊತೆಗೆ ಬೇರೆ ಸಂಬಂಧ ಇರುತ್ತದೆ. ಚೆನ್ನಾಗಿ ಬೆಳಸಿ ಯಾವುದನ್ನೂ ಎದುರು ನೋಡದೆ ಬಿಟ್ಟು ಕೊಡುವುದು. ತಂದೆ-ಮಗನ ಸಂಬಂಧ ಹಾಗಿರುವುದಿಲ್ಲ. ನನ್ನ ನಂತರ ನೀನು, ನನ್ನ ಇನ್ನೊಂದು ಛಾಯೆ ನೀನು ಎನ್ನುವ ಸಂಬಂಧ ಅದು. ಅದೊಂಥರಾ Love-Hate relationship. ತಂದೆ ತನ್ನ ಮಗನಿಗೆ ಕಲಿಸೋದಕ್ಕಿಂತ, ಅವನ behaviourನಿಂದ ಮಕ್ಕಳು ಕಲಿಯೋದು ತುಂಬಾ ಇರುತ್ತದೆ.

ನನಗೆ ನನ್ನ ಮಗಳ ಜೊತೆಗೆ ಇರುವ relationship ಬೇರೆ, ಮಗನ ಜೊತೆಗೆ ಇರುವ ಸಂಬಂಧ ಬೇರೆ. ಇವತ್ತಿನ ಪ್ರಪಂಚದಲ್ಲಿ ಹೊರಗೆ ಹೋಗಬೇಕು. ಸಾಕಷ್ಟು ಸಮಸ್ಯೆಗಳು ಇರುತ್ತವೆ. ಅದನ್ನು ಹೇಳಿಕೊಳ್ಳುವುದಕ್ಕೆ ಆಗಲ್ಲ. ಅದನ್ನು ಅವರೇ ನಿಭಾಯಿಸಬೇಕು. ಮಗ ಎಷ್ಟೇ ದೊಡ್ಡವನಾದರೂ, ತಂದೆಗೆ ಇನ್ನೂ ಚಿಕ್ಕವನು ಎಂದನಿಸುತ್ತದೆ. ಅದರ ಜೊತೆಗ ಮಗನಿಗೆ ತನ್ನದೇ ಆದ ನಿರ್ಧಾರಗಳೂ ಇರುತ್ತವೆ. ಅದನ್ನೂ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ನಿನಗೆ ಇಷ್ಟು ಮಾಡಿದೆ, ನೀನೇನು ವಾಪಸ್ಸು ಕೊಡುತ್ತೀಯ ಎನ್ನುವುದಕ್ಕಿಂತ ಅವನನ್ನೂ ಅರ್ಥ ಮಾಡಿಕೊಳ್ಳಬೇಕಾಗುತ್ತದೆ.

ಒಬ್ಬ ನಟನಾಗಿ ನನಗೆ ‘ನಾನು ನನ್ನ ಕನಸು’ ಬಹಳ ಇಷ್ಟವಾದ ಮತ್ತು ಕಾಡುವ ಸಿನಿಮಾ. ಏಕೆಂದರೆ, ನನ್ನ ಹೆಂಡತಿ ನನ್ನ ಹೆಂಡತಿಯಾಗಿಯೇ ಇರುತ್ತಾಳೆ. ಮಗಳು ಮದುವೆಯಾದಾಗ, ಮಾವ ಆಗ ನನಗೆ ಅರ್ಥಾವಾಗುತ್ತಾನೆ. ಅಲ್ಲಿಯವರೆಗೂ ಹೆಂಡತಿ ಅಪ್ಪ ಅಂತ ಜಗಳ ಆಡುತ್ತಿರುತ್ತೀವಿ. ನನ್ನ ಮಗಳಿಗೆ ಮಾವ ಸಿಗುತ್ತಾನೆ ಎಂದಾಗ, ನನಗೆ ಹೆಂಡತಿ ಅರ್ಥವಾಗುತ್ತಾ ಹೋಗುತ್ತಾಳೆ. ಅವಳು ಇನ್ನೊಬ್ಬಳ ಮಗಳಾಗಿದ್ದಳು, ನಾನು ಅವಳನ್ನು ಇನ್ನೊಬ್ಬರ ಮಗಳು ಅಂತ ನೋಡಿರಲೇ ಇಲ್ಲ. ನನ್ನ ಮಗಳನ್ನು ನಾನು ನೋಡುತ್ತಿದ್ದ ಹಾಗೆ, ಅವಳ ಅಪ್ಪ ಸಹ ಅವಳನ್ನು ಹಾಗೆಯೇ ನೋಡುತ್ತಿದ್ದ. ಮಗಳು ಮತ್ತು ತಂದೆಯ ಸಂಬಂಧದಲ್ಲಿ ಆ ಚಿತ್ರ ನನಗೆ ಬಹಳಷ್ಟು ವಿಷಯಗಳನ್ನು ಕಲಿಸಿತು. ಆ ಚಿತ್ರವನ್ನು ಬರೆಯುತ್ತಾ, ನಿರ್ದೇಶನ ಮಾಡುತ್ತಾ ತುಂಬಾ ಕಲಿತೆ. ಹಾಗಾಗಿ, ನನಗೆ ಅದು ಬಹಳ ಇಷ್ಟವಾದ ಚಿತ್ರ.

ಮಾಣಿಕ್ಯ ಒಳ್ಳೆಯದೇ? ಅದು ಕೋತಿ ಕೈಗೆ ಸಿಕ್ಕಿದರೆ? ಅದರ ಬಗ್ಗೆ ನಾವು ಯೋಚಿಸಬೇಕು. ಪ್ಲಸ್‍, ಮೈನಸ್‍ ಇದ್ದೇ ಇರುತ್ತದೆ. ಒಳಗಿನ ಅಸಹ್ಯವೂ ಹೊರಗೆ ಬರುತ್ತದೆ, ವಿಕಾರಗಳೂ ಹೊರಗ ಬರುತ್ತಿವೆ. ಅವೆರಡೂ ಬರಬೇಕು. ಸೋಷಿಯಲ್‍ ಮೀಡಿಯಾಗಳು ಬಹಳ ಮುಖ್ಯವಾದ ವಿಷಯಗಳನ್ನು ತಲುಪಿಸೋಕೆ ಮಹತ್ವದ ಪಾತ್ರ ವಹಿಸುತ್ತಿದೆ. ಇದರಲ್ಲಿ ಒಳ್ಳೆಯದೂ ಇದೆ, ಕೆಟ್ಟದ್ದೂ ಇದೆ. ಅವೆರಡರಲ್ಲಿ ನಾವು ಯಾವುದನ್ನು ತೆಗೆದುಕೊಳ್ಳುತ್ತೇವೆ ಎನ್ನುವುದು ಬಹಳ ಮುಖ್ಯ. ‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಚಿತ್ರದಲ್ಲಿ ಅನಂತ್‍ ನಾಗ್‍ ಒಂದು ಸಂಭಾಷಣೆ ಹೇಳ್ತಾರೆ. ‘ನಮ್ಮೆಲ್ಲರಲ್ಲೂ ಕಪ್ಪು ನಾಯಿ, ಬಿಳಿ ನಾಯಿ ಇರತ್ತೆ. ಕಪ್ಪು ನಾಯಿ ಕೆಟ್ಟದ್ದು, ಬಿಳಿ ನಾಯಿ ಒಳ್ಳೇದು.

ಅವೆರಡರಲ್ಲಿ ನಾವು ಯಾವುದಕ್ಕೆ ಊಟ ಜಾಸ್ತಿ ಹಾಕುತ್ತೇವೆ ಅನ್ನೋದು ಮುಖ್ಯ’ ಅಂತಾರೆ. ನಾವು ಎರಡನ್ನೂ ನೋಡಬೇಕು. ಅಣು ಬಾಂಬ್‍ ಕಂಡುಹಿಡಿದಿದ್ದು ಎನರ್ಜಿಗೆ, ಇನ್ನೊಬ್ಬರನ್ನು ಕೊಲ್ಲುವುದಕ್ಕೆ ಅಲ್ಲ. ಇಲ್ಲಿ ನಮ್ಮ ಮನಸ್ಸಾಕ್ಷಿ, ಆತ್ಮಾವಲೋಕನ ಬಹಳ ಮುಖ್ಯ. ಇದನ್ನು ಯಾರೋ ಒಬ್ಬರು ನೋಡುವುದಿಲ್ಲ. ಹೆಣ್ಮಕ್ಕಳು ನೋಡುತ್ತಿರುತ್ತಾರೆ. ಸಮಾಜದ ಒಂದು ಸ್ವಾಸ್ತ್ಯ ನೋಡುತ್ತಿರುತ್ತದೆ. ಅವರಿಗೆ ನಾವೇನು ತಲುಪಿಸಬೇಕು, ಯಾವುದು ಮುಖ್ಯ ಆಗಬೇಕು ಎಂಬುದು ನಮ್ಮ ಕೈಯಲ್ಲಿರೋದು. ಇವತ್ತಿನ ಯುವ ಜನಾಂಗದ ತಪ್ಪೇನು ಇಲ್ಲ. ಒಬ್ಬಿಬ್ಬರು ತಪ್ಪು ಮಾಡಿದರೆ, ಎಲ್ಲರೂ ತಪ್ಪು ಮಾಡುತ್ತಾರೆ ಎನ್ನುವುದು ತಪ್ಪು. Let’s be responsible ಅಷ್ಟೇ. (ಬರಹ : ಚೇತನ್ ನಾಡಿಗೇರ್, ಫೇಸ್ ಬುಕ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ19 mins ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ50 mins ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ1 hour ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ1 hour ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ1 hour ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ3 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ3 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ16 hours ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ16 hours ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ16 hours ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending