ಲೈಫ್ ಸ್ಟೈಲ್
ಲಾಲ್ ಬಾಗ್ ಬಗ್ಗೆ ನಿಮಗೆ ಗೊತ್ತಿರದ ಅಚ್ಚರಿ ಸಂಗತಿಗಳು..!
ಲಾಲ್ಬಾಗ್ ಎಂದರೆ ಎಲ್ಲರಿಗೂ ನೆನಪಾಗುವುದು ಅಲ್ಲಿನ ಗಾಜಿನಮನೆ, ದೊಡ್ಡ ಗಡಿಯಾರ, ವಿಧವಿಧ ಹೂವಿನ ಗಿಡಗಳ ತೋಟ, ಹಳೆದಾದ ಮರಗಳು ಹಾಗೂ ಸುಂದರವಾದ ಕೆರೆ ಮತ್ತು ಸುತ್ತಮುತ್ತಲಿನ ಪರಿಸರ. ಇನ್ನೂ ಹೆಚ್ಚಾಗಿ ನೆನಪಾಗುವುದು, ಪ್ರತಿ ವರ್ಷ ಸ್ವಾತಂತ್ರೋತ್ಸವ ಹಾಗೂ ಗಣರಾಜ್ಯ ದಿನೋತ್ಸವದ ಸಂದರ್ಭಗಳಲ್ಲಿ ಏರ್ಪಡಿಸಲಾಗುವ ಫಲಪುಷ್ಪ ಪ್ರದರ್ಶನಗಳು.
ಈ ಬಾರಿಯ ಫಲಪುಷ್ಪ ಪ್ರದರ್ಶನದ ಬಗ್ಗೆ ತಿಳಿಯುವ ಮುನ್ನ ಲಾಲ್ಬಾಗ್ ಬಗ್ಗೆ ಸ್ವಲ್ಪ ತಿಳಿಯೋಣ.
ಲಾಲ್ಬಾಗ್, ಬೆಂಗಳೂರಿನ ಹೃದಯ ಭಾಗದಲ್ಲಿ ಇದೆ. 240 ಎಕರೆ ಪ್ರದೇಶದ ಲಾಲ್ಬಾಗ್ನಲ್ಲಿ ಸುಮಾರು 1,854 ಬಗೆಯ ಗಿಡಗಳು ಇವೆ. ಹೈದರಾಲಿಯು ಇದನ್ನು 1760 ರಲ್ಲಿ ನಿರ್ಮಿಸಲು ಸೂಚಿಸುತ್ತಾನೆ. ಆದರೆ, ಇದನ್ನು ಈತನ ಮಗ ಟಿಪ್ಪು ಸುಲ್ತಾನ್ ಕಾಲದಲ್ಲಿ ಪೂರ್ಣಗೊಳಿಸಲಾಯಿತು. ಈ ಉದ್ಯಾನವನ್ನು ಅಭಿವೃದ್ಧಿಪಡಿಸಲು, ಹಲವಾರು ದೇಶಗಳಿಂದ ಸಸ್ಯಗಳು ಮತ್ತು ಮರಗಳನ್ನು ಆಮದು ಮಾಡಿಕೊಳ್ಳಲಾಗಿದೆ. ಇದನ್ನು ಮೊಘಲ್ ಉದ್ಯಾನಗಳ ಮಾದರಿಯಲ್ಲಿ ಈ ಉದ್ಯಾನವನ್ನು ನಿರ್ಮಿಸಲು ನಿರ್ಧರಿಸಿದ್ದರು. ತುಮಕೂರು ಜಿಲ್ಲೆಯ, ಶಿರಾ ತಾಲ್ಲೂಕಿನಲ್ಲಿರುವ ಮೊಘಲ್ ಉದ್ಯಾನವು ಲಾಲ್ಬಾಗ್ನ ವಿನ್ಯಾಸಕ್ಕೆ ಮೂಲವಾಗಿದೆ.
ಲಾಲ್ಬಾಗ್ಗೆ, ಲಾಲ್ಬಾಗ್ ಎಂದು ಹೆಸರು ಬರಲು ಮೂರು ಕಾರಣಗಳಿವೆ ಎಂದು ಹೇಳಲಾಗುತ್ತದೆ. ಮೊದಲನೆಯದಾಗಿ, ಇತಿಹಾಸಕಾರ ಮನ್ಸೂರ್ ಅಲಿ ಹೇಳುವ ಪ್ರಕಾರ, ಶ್ರೀರಂಗಪಟ್ಟಣದಲ್ಲಿ ಇರುವ ಲಾಲ್ಮಹಲ್ ಅರಮನೆಯ ಹತ್ತಿರ ಇರುವ ತೋಟ, ಇದೇ ಮಾದರಿಯಲ್ಲಿ ಇರುವುದು. ಎರಡನೆಯದು ಹೈದರಾಲಿಯ ತಾಯಿ ಲಾಲ್ಬಾಯಿ ಅವರ ಹೆಸರು ಎಂದೂ ಕೆಲವರು ಹೇಳುತ್ತಾರೆ. ಮೂರನೆಯದಾಗಿ, ಲಾಲ್ಬಾಗ್ನಲ್ಲಿ ಬೆಳೆದಂತಹ ಕೆಂಪು ಗುಲಾಬಿಗಳಿಂದ ಆ ಹೆಸರು ಬಂದಿತು ಎನ್ನುತ್ತಾರೆ.
ಲಾಲ್ ಬಾಗ್ನಲ್ಲಿ ಪ್ರಮುಖವಾಗಿ ನೋಡಬೇಕಾಗಿರುವುದು
• ಗಾಜಿನ ಮನೆ-ಇದನ್ನು ಲಂಡನ್ನಿನ ಕ್ರಿಸ್ಟಲ್ ಪಾಲೇಸ್ ಮಾದರಿಯಲ್ಲಿದೆ. ಇದಕ್ಕೆ ರಾಜಕುಮಾರ ಅಲ್ಬರ್ಟ್ ವಿಕ್ಟರ್ ಅವರು ನವಂಬರ್ 30, 1898 ರಂದು ಅಡಿಗಲ್ಲು ಹಾಕಿದರು. ನಂತರದ ಮೇಲ್ವಿಚಾರಕ ಜೇಮ್ಸ್ ಕ್ಯಾಮರಾನ್ ಇದನ್ನು ನಿರ್ಮಿಸಿದರು.
• ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರ ಪ್ರತಿಮೆ.
• ಭಾರತದ ಮೊದಲ ಹುಲ್ಲಿನ ಗಡಿಯಾರ.
• ನೂರಾರು ವರ್ಷ ಅಪರೂಪದ ಹಳೆಯ ಮರಗಳ ದೊಡ್ಡದಾದ ಸಂಗ್ರಹ.
• 20 ಮಿಲಿಯನ್ ವರ್ಷ ಹಳೆಯ ಕೋನಿಫೆರಸ್ ಮರದ ಪಳವಳಿಕೆ.
• ಪರ್ಷಿಯಾ, ಅಫ್ಘಾನಿಸ್ತಾನ ಮತ್ತು ಪ್ರಾನ್ಸ್ನ ಹಲವಾರು ಅಪರೂಪದ ಸಸ್ಯಗಳು.
• 3000 ವರ್ಷಕ್ಕೂ ಹಳೆಯದಾದ ಬೃಹದಾಕಾರದ ಬಂಡೆ.
• ಸುಂದರವಾದ ಕೆರೆ.
ಫಲಪುಷ್ಪ ಪ್ರದರ್ಶನ
ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನವನ್ನು 1912 ರಲ್ಲಿ ಜಿ.ಹೆಚ್. ಕೃಂಬಿಗಲ್ ರವರು ಪ್ರಥಮವಾಗಿ ಪ್ರಾರಂಭಿಸಿದರು. ಈ ಸಾಲಿನಲ್ಲಿ ಹಮ್ಮಿಕೊಂಡಿರುವ ಫಲಪುಷ್ಪ ಪ್ರದರ್ಶನವು 208ನೇ ಪ್ರದರ್ಶನವಾಗಿದೆ.
ಈ ಬಾರಿ ಮುಖ್ಯವಾಗಿ ರಾಷ್ಟ್ರದ ಯೋಧರಿಗೆ ನಮನ ಸಲ್ಲಿಸಲು, ಭಾರತದ ಸಮಗ್ರ ರಕ್ಷಣಾ ವ್ಯವಸ್ಥೆಯನ್ನು 36 ಸದಸ್ಯರ ತಂಡ 9 ದಿನಗಳಲ್ಲಿ ಅನಾವರಣಗೊಳಿಸಿದೆ ಅಲ್ಲದೇ, ಕನ್ನಡ ಚಿತ್ರರಂಗಕ್ಕೆ 85 ವರ್ಷ ತುಂಬಿದ ಸವಿನೆನಪಿಗಾಗಿ ಗೌರವವನ್ನೂ ಸಹ ಸಲ್ಲಿಸಲಾಗಿದೆ.
ಗಾಜಿನ ಮನೆ ಪ್ರವೇಶಿಸುತ್ತಿದ್ದಂತೆಯೇ, ದೆಹಲಿಯ ಇಂಡಿಯಾ ಗೇಟ್ ಬಳಿಯಿರುವ ಯುದ್ಧ ಸ್ಮಾರಕ ‘ಅಮರ್ ಜವಾನ್ ಜ್ಯೋತಿ’ ಯ ಪ್ರತಿಕೃತಿಯನ್ನು ಇರಿಸಲಾಗಿದೆ. ಅದರ ಹಿಂಭಾಗದಲ್ಲಿ ಸಮುದ್ರ ಮಟ್ಟದಿಂದ 5753 ಮೀಟರ್ ಎತ್ತರದಲ್ಲಿರುವ ಸಿಯಾಚಿನ್ ಹಿಮಪರ್ವತವನ್ನು ಹೋಲುವ ಪ್ರತಿಕೃತಿಯನ್ನು ನಿರ್ಮಿಸಲಾಗಿದೆ.
ಆ ಪರ್ವತದ ಮುಂಭಾಗದಲ್ಲಿ, ಭೂ ಸೇನೆಯ ಯುದ್ಧ ಟ್ಯಾಂಕರ್, ವಾಯುಸೇನೆಯ ಯುದ್ಧ ವಿಮಾನ, ಹೆಲಿಕಾಪ್ಟರ್, ಫೈಟರ್ ಜೆಟ್ಗಳು, ನೌಕಾದಳದ ಸಮರ ನೌಕೆ, ದೇಶದ ಗಡಿ ರಕ್ಷಣಾ ಪಡೆಗೆ ಸಂಬಂಧಿಸಿದ ಮಾದರಿಗಳನ್ನು ಭತ್ತದ ಹುಲ್ಲು, ಥರ್ಮೋಕೋಲ್ ಮತ್ತು ಸಾವಿರಾರು ಹೂವುಗಳಿಂದ ಸಿಂಗರಿಸಲಾಗಿದೆ. ಹಾಗೆಯೇ ಸಿಯಾಚಿನ್ನಲ್ಲಿ ಸೇನೆಯ ಕಾರ್ಯಾಚರಣೆ ಬಗ್ಗೆ, ಕೊರೆಯುವ ಚಳಿಯಲ್ಲಿ ಸೈನಿಕರು ಕರ್ತವ್ಯ ನಿರತರಾಗಿರುವ ಬಗ್ಗೆ, ಹಿಮದಿಂದ ಕೂಡಿರುವ ಬೆಟ್ಟವನ್ನು ಸೈನಿಕರು ಹತ್ತುತ್ತಿರುವ ಮಾದರಿಗಳು ಎಲ್ಲರನ್ನೂ ಆಕರ್ಷಿಸುತ್ತಿದೆ.
ದೇಶ ಕಾಯುವ ಸಂದರ್ಭದಲ್ಲಿ, ಹಿಮದಡಿಯಲ್ಲಿ ಸಿಲುಕಿ ಮರಣ ಹೊಂದಿದ ವೀರ ಕನ್ನಡಿಗ, ಹನುಂತಪ್ಪ ಕೊಪ್ಪದ್ ರವರ ಧಾನ್ಯಗಳಿಂದ ರಚಿಸಲ್ಪಟ್ಟ ಭಾವಚಿತ್ರ ಹಾಗೂ ಅಕ್ಕಿಯಿಂದ ರಚಿಸಿರುವ ಭಾರತದ ತ್ರಿವರ್ಣ ಧ್ವಜವು ಎಲ್ಲರ ಕಣ್ಸೆಳೆಯುತ್ತದೆ. ಮುಂದುವರೆದು, ಶೌರ್ಯ ಚಕ್ರಗಳ ಬಗ್ಗೆ, ಸೈನಿಕರ ಸುಭಾಷಿತಗಳು ಹಾಗೂ ಇನ್ನಿತರೆ ಮಾಹಿತಿಗಳ ಫಲಕಗಳನ್ನೂ ಸಹ ಪ್ರದರ್ಶಿಸಲಾಗಿದೆ.
ಬೆಟ್ಟದ ಹಿಂಭಾಗದಲ್ಲಿ, ಕನ್ನಡ ಚಿತ್ರರಂಗಕ್ಕೆ 85 ವರ್ಷ ತುಂಬಿರುವುದರಿಂದ ಅದಕ್ಕೆ ಗೌರವ ಸಮರ್ಪಿಸಲು ಕೆಂಪು, ಬಿಳಿ, ಕೇಸರಿ ಗುಲಾಬಿಗಳನ್ನು ಹೆಚ್ಚಾಗಿ ಬಳಸಿ ಬೃಹತ್ ಗಾತ್ರದ ಕ್ಯಾಮರಾ, ಫಿಲ್ಮ್ರೋಲ್, ಕ್ಲಾಪ್ ಬೋರ್ಡ್ ಇನ್ನೂ ಮುಂತಾದುವುಗಳನ್ನು ನೋಡುಗರಿಗೆ ಆಕರ್ಷಿಸುವಂತೆ ನಿರ್ಮಿಸಲಾಗಿದೆ. ಚಿತ್ರೋದ್ಯಮದಲ್ಲಿ ತೆರೆಯ ಹಿಂದೆ ಕಾರ್ಯನಿರ್ವಹಿಸುವ ಎಲ್ಲಾ ತಂತ್ರಜ್ಞರಿಗೆ ನಮನ ಸಲ್ಲಿಸಲಾಗಿದೆ.
ಬೆಟ್ಟದ ಎಡಭಾಗದಲ್ಲಿ 12 ಅಡಿ ಎತ್ತರದ, 25 ಸಾವಿರ ಸೇವಂತಿಗೆ ಮತ್ತು ಕಾರ್ನೆಷಿಯ ಹೂವುಗಳನ್ನು ಬಳಸಿ ಬೃಹತ್ ಗಾತ್ರದ ಸಿಂಹದ ಪ್ರತಿಕೃತಿಯನ್ನು ನಿರ್ಮಿಸಲಾಗಿದೆ. ಈ ಸಿಂಹವು ಎಲ್ಲರಿಗೂ ಸೆಲ್ಫಿ ತೆಗೆದುಕೊಳ್ಳುವ ನೆಚ್ಚಿನ ತಾಣವಾಗಿದೆ. ಈ ಸಿಂಹದ ಹಿಂಭಾಗದಲ್ಲಿ ಊಟಿಯ ಫರ್ನ್ ಹಿಲ್ನ ಆರ್ಕಿಡ್ ಹೂವಿನ ಪರಿಮಳ ಹಾಗೂ ಸೌಂದರ್ಯ ಎಲ್ಲರ ಮನಸನ್ನು ಸೂರೆಗೊಳ್ಳುತ್ತದೆ.
ಗಾಜಿನ ಮನೆ ಒಳಗೆ ಸುತ್ತಲೂ ಬಾಲ್ಲ್ಮ್, ಸ್ಪೈದರ್ ಪ್ಲಾಂಟ್, ಆಂಟೋರಿಯನಂ, ಲಂಟಾನ್, ಅಸ್ಟರ್, ಕೆಲೆಂಡುಲಾ, ಸಾಲ್ವಿಯಾ, ಲಾಕ್ರ್ಸ್ಪರ್, ಡಯಾಂತನಿ, ಹೈಡ್ರಾಂಜಿಯಾ, ಜೆನಿಯಾ, ಚೆಂಡು ಹೂವು, ಹೀಗೆ ಹಲವು ಬಗೆಯ ಗಿಡಗಳು ಎಲ್ಲರ ಗಮನ ಸೆಳೆಯುತ್ತವೆ. ಹಿಮ್ಮೇಳದಲ್ಲಿ ಕೇಳುತ್ತಿದ್ದ, ಲಘು ಸಂಗೀತವು ಎಲ್ಲರ ಮನಸ್ಸಿಗೆ ಮೊದ ನೀಡುತ್ತದೆ.
ಗಾಜಿನ ಮನೆಯ ಸುತ್ತಲೂ 4 ವಿಭಾಗಗಳಲ್ಲಿ ಯುದ್ಧ ಟ್ಯಾಂಕರ್, ಕ್ಷಿಪಣಿ, ಸಮರ ನೌಕೆ, ಜೆಟ್ ಯುದ್ಧ ವಿಮಾನಗಳ ಮಾದರಿಯನ್ನು ಭತ್ತದ ಹುಲ್ಲಿನಿಂದ ಬೃಹದಾಕಾರವಾಗಿ ನಿರ್ಮಿಸಲಾಗಿದೆ.
ಗಾಜಿನ ಮನೆಯ ಹೊರಾಂಗಣದಲ್ಲಿ ಹೂವಿನಿಂದ ಮಾಡಿದ ಜಲಪಾತ, ನವಿಲು, ಹೃದಯಾಕಾರದ ಕಮಾನು, ಹೂವುಗಳ ತೂಗು ಗುಚ್ಛ ಕಣ್ಣಿಗೆ ಆನಂದವನ್ನು ನೀಡುತ್ತವೆ.
ಈ ಬಾರಿ ಇನ್ನೊಂದು ವಿಶೇಷವೆಂದರೆ ಲಾಲ್ಬಾಗ್ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗಿದೆ.
ಒಟ್ಟಾರೆ 2 ಕೋಟಿ ರೂ.ವೆಚ್ಚದಲ್ಲಿ, 1 ಲಕ್ಷ 20 ಸಾವಿರಕ್ಕೂ ಅಧಿಕ ಹೂಗಳನ್ನು ಬಳಸಿ ಗಾಜಿನ ಮನೆಯಲ್ಲಿ ಪುಷ್ಪ
ಪ್ರದರ್ಶನವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ.
ಈ ಪ್ರದರ್ಶನವು ಆಗಸ್ಟ್ 4 ರಂದು ಪ್ರಾರಂಭಗೊಂಡಿದ್ದು, ಆಗಸ್ಟ್ 15 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿದ್ದು, ಆಸಕ್ತರು ಒಮ್ಮೆ ಭೇಟಿ ನೀಡಿ ಆನಂದ ಹೊಂದಬಹುದಾಗಿದೆ.
-ಸೌಮ್ಯ ಅಶೋಕ್
ಬೆಂಗಳೂರು
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

ದಿನದ ಸುದ್ದಿ
ಗೃಹಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.
ಗೃಹ ಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243







