Connect with us

ಲೈಫ್ ಸ್ಟೈಲ್

ಲಾಲ್ ಬಾಗ್ ಬಗ್ಗೆ ನಿಮಗೆ ಗೊತ್ತಿರದ ಅಚ್ಚರಿ ಸಂಗತಿಗಳು..!

Published

on

ಲಾಲ್‍ಬಾಗ್ ಎಂದರೆ ಎಲ್ಲರಿಗೂ ನೆನಪಾಗುವುದು ಅಲ್ಲಿನ ಗಾಜಿನಮನೆ, ದೊಡ್ಡ ಗಡಿಯಾರ, ವಿಧವಿಧ ಹೂವಿನ ಗಿಡಗಳ ತೋಟ, ಹಳೆದಾದ ಮರಗಳು ಹಾಗೂ ಸುಂದರವಾದ ಕೆರೆ ಮತ್ತು ಸುತ್ತಮುತ್ತಲಿನ ಪರಿಸರ. ಇನ್ನೂ ಹೆಚ್ಚಾಗಿ ನೆನಪಾಗುವುದು, ಪ್ರತಿ ವರ್ಷ ಸ್ವಾತಂತ್ರೋತ್ಸವ ಹಾಗೂ ಗಣರಾಜ್ಯ ದಿನೋತ್ಸವದ ಸಂದರ್ಭಗಳಲ್ಲಿ ಏರ್ಪಡಿಸಲಾಗುವ ಫಲಪುಷ್ಪ ಪ್ರದರ್ಶನಗಳು.

ಈ ಬಾರಿಯ ಫಲಪುಷ್ಪ ಪ್ರದರ್ಶನದ ಬಗ್ಗೆ ತಿಳಿಯುವ ಮುನ್ನ ಲಾಲ್‍ಬಾಗ್ ಬಗ್ಗೆ ಸ್ವಲ್ಪ ತಿಳಿಯೋಣ.

ಲಾಲ್‍ಬಾಗ್, ಬೆಂಗಳೂರಿನ ಹೃದಯ ಭಾಗದಲ್ಲಿ ಇದೆ. 240 ಎಕರೆ ಪ್ರದೇಶದ ಲಾಲ್‍ಬಾಗ್‍ನಲ್ಲಿ ಸುಮಾರು 1,854 ಬಗೆಯ ಗಿಡಗಳು ಇವೆ. ಹೈದರಾಲಿಯು ಇದನ್ನು 1760 ರಲ್ಲಿ ನಿರ್ಮಿಸಲು ಸೂಚಿಸುತ್ತಾನೆ. ಆದರೆ, ಇದನ್ನು ಈತನ ಮಗ ಟಿಪ್ಪು ಸುಲ್ತಾನ್ ಕಾಲದಲ್ಲಿ ಪೂರ್ಣಗೊಳಿಸಲಾಯಿತು. ಈ ಉದ್ಯಾನವನ್ನು ಅಭಿವೃದ್ಧಿಪಡಿಸಲು, ಹಲವಾರು ದೇಶಗಳಿಂದ ಸಸ್ಯಗಳು ಮತ್ತು ಮರಗಳನ್ನು ಆಮದು ಮಾಡಿಕೊಳ್ಳಲಾಗಿದೆ. ಇದನ್ನು ಮೊಘಲ್ ಉದ್ಯಾನಗಳ ಮಾದರಿಯಲ್ಲಿ ಈ ಉದ್ಯಾನವನ್ನು ನಿರ್ಮಿಸಲು ನಿರ್ಧರಿಸಿದ್ದರು. ತುಮಕೂರು ಜಿಲ್ಲೆಯ, ಶಿರಾ ತಾಲ್ಲೂಕಿನಲ್ಲಿರುವ ಮೊಘಲ್ ಉದ್ಯಾನವು ಲಾಲ್‍ಬಾಗ್‍ನ ವಿನ್ಯಾಸಕ್ಕೆ ಮೂಲವಾಗಿದೆ.

ಲಾಲ್‍ಬಾಗ್‍ಗೆ, ಲಾಲ್‍ಬಾಗ್ ಎಂದು ಹೆಸರು ಬರಲು ಮೂರು ಕಾರಣಗಳಿವೆ ಎಂದು ಹೇಳಲಾಗುತ್ತದೆ. ಮೊದಲನೆಯದಾಗಿ, ಇತಿಹಾಸಕಾರ ಮನ್ಸೂರ್ ಅಲಿ ಹೇಳುವ ಪ್ರಕಾರ, ಶ್ರೀರಂಗಪಟ್ಟಣದಲ್ಲಿ ಇರುವ ಲಾಲ್‍ಮಹಲ್ ಅರಮನೆಯ ಹತ್ತಿರ ಇರುವ ತೋಟ, ಇದೇ ಮಾದರಿಯಲ್ಲಿ ಇರುವುದು. ಎರಡನೆಯದು ಹೈದರಾಲಿಯ ತಾಯಿ ಲಾಲ್‍ಬಾಯಿ ಅವರ ಹೆಸರು ಎಂದೂ ಕೆಲವರು ಹೇಳುತ್ತಾರೆ. ಮೂರನೆಯದಾಗಿ, ಲಾಲ್‍ಬಾಗ್‍ನಲ್ಲಿ ಬೆಳೆದಂತಹ ಕೆಂಪು ಗುಲಾಬಿಗಳಿಂದ ಆ ಹೆಸರು ಬಂದಿತು ಎನ್ನುತ್ತಾರೆ.

ಲಾಲ್ ಬಾಗ್‍ನಲ್ಲಿ ಪ್ರಮುಖವಾಗಿ ನೋಡಬೇಕಾಗಿರುವುದು

• ಗಾಜಿನ ಮನೆ-ಇದನ್ನು ಲಂಡನ್ನಿನ ಕ್ರಿಸ್ಟಲ್ ಪಾಲೇಸ್ ಮಾದರಿಯಲ್ಲಿದೆ. ಇದಕ್ಕೆ ರಾಜಕುಮಾರ ಅಲ್ಬರ್ಟ್ ವಿಕ್ಟರ್ ಅವರು ನವಂಬರ್ 30, 1898 ರಂದು ಅಡಿಗಲ್ಲು ಹಾಕಿದರು. ನಂತರದ ಮೇಲ್ವಿಚಾರಕ ಜೇಮ್ಸ್ ಕ್ಯಾಮರಾನ್ ಇದನ್ನು ನಿರ್ಮಿಸಿದರು.

• ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರ ಪ್ರತಿಮೆ.

• ಭಾರತದ ಮೊದಲ ಹುಲ್ಲಿನ ಗಡಿಯಾರ.

• ನೂರಾರು ವರ್ಷ ಅಪರೂಪದ ಹಳೆಯ ಮರಗಳ ದೊಡ್ಡದಾದ ಸಂಗ್ರಹ.

• 20 ಮಿಲಿಯನ್ ವರ್ಷ ಹಳೆಯ ಕೋನಿಫೆರಸ್ ಮರದ ಪಳವಳಿಕೆ.

• ಪರ್ಷಿಯಾ, ಅಫ್ಘಾನಿಸ್ತಾನ ಮತ್ತು ಪ್ರಾನ್ಸ್‍ನ ಹಲವಾರು ಅಪರೂಪದ ಸಸ್ಯಗಳು.

• 3000 ವರ್ಷಕ್ಕೂ ಹಳೆಯದಾದ ಬೃಹದಾಕಾರದ ಬಂಡೆ.

• ಸುಂದರವಾದ ಕೆರೆ.

ಫಲಪುಷ್ಪ ಪ್ರದರ್ಶನ

ಲಾಲ್‍ಬಾಗ್‍ನಲ್ಲಿ ಫಲಪುಷ್ಪ ಪ್ರದರ್ಶನವನ್ನು 1912 ರಲ್ಲಿ ಜಿ.ಹೆಚ್. ಕೃಂಬಿಗಲ್ ರವರು ಪ್ರಥಮವಾಗಿ ಪ್ರಾರಂಭಿಸಿದರು. ಈ ಸಾಲಿನಲ್ಲಿ ಹಮ್ಮಿಕೊಂಡಿರುವ ಫಲಪುಷ್ಪ ಪ್ರದರ್ಶನವು 208ನೇ ಪ್ರದರ್ಶನವಾಗಿದೆ.

ಈ ಬಾರಿ ಮುಖ್ಯವಾಗಿ ರಾಷ್ಟ್ರದ ಯೋಧರಿಗೆ ನಮನ ಸಲ್ಲಿಸಲು, ಭಾರತದ ಸಮಗ್ರ ರಕ್ಷಣಾ ವ್ಯವಸ್ಥೆಯನ್ನು 36 ಸದಸ್ಯರ ತಂಡ 9 ದಿನಗಳಲ್ಲಿ ಅನಾವರಣಗೊಳಿಸಿದೆ ಅಲ್ಲದೇ, ಕನ್ನಡ ಚಿತ್ರರಂಗಕ್ಕೆ 85 ವರ್ಷ ತುಂಬಿದ ಸವಿನೆನಪಿಗಾಗಿ ಗೌರವವನ್ನೂ ಸಹ ಸಲ್ಲಿಸಲಾಗಿದೆ.

ಗಾಜಿನ ಮನೆ ಪ್ರವೇಶಿಸುತ್ತಿದ್ದಂತೆಯೇ, ದೆಹಲಿಯ ಇಂಡಿಯಾ ಗೇಟ್ ಬಳಿಯಿರುವ ಯುದ್ಧ ಸ್ಮಾರಕ ‘ಅಮರ್ ಜವಾನ್ ಜ್ಯೋತಿ’ ಯ ಪ್ರತಿಕೃತಿಯನ್ನು ಇರಿಸಲಾಗಿದೆ. ಅದರ ಹಿಂಭಾಗದಲ್ಲಿ ಸಮುದ್ರ ಮಟ್ಟದಿಂದ 5753 ಮೀಟರ್ ಎತ್ತರದಲ್ಲಿರುವ ಸಿಯಾಚಿನ್ ಹಿಮಪರ್ವತವನ್ನು ಹೋಲುವ ಪ್ರತಿಕೃತಿಯನ್ನು ನಿರ್ಮಿಸಲಾಗಿದೆ.

ಆ ಪರ್ವತದ ಮುಂಭಾಗದಲ್ಲಿ, ಭೂ ಸೇನೆಯ ಯುದ್ಧ ಟ್ಯಾಂಕರ್, ವಾಯುಸೇನೆಯ ಯುದ್ಧ ವಿಮಾನ, ಹೆಲಿಕಾಪ್ಟರ್, ಫೈಟರ್ ಜೆಟ್‍ಗಳು, ನೌಕಾದಳದ ಸಮರ ನೌಕೆ, ದೇಶದ ಗಡಿ ರಕ್ಷಣಾ ಪಡೆಗೆ ಸಂಬಂಧಿಸಿದ ಮಾದರಿಗಳನ್ನು ಭತ್ತದ ಹುಲ್ಲು, ಥರ್ಮೋಕೋಲ್ ಮತ್ತು ಸಾವಿರಾರು ಹೂವುಗಳಿಂದ ಸಿಂಗರಿಸಲಾಗಿದೆ. ಹಾಗೆಯೇ ಸಿಯಾಚಿನ್‍ನಲ್ಲಿ ಸೇನೆಯ ಕಾರ್ಯಾಚರಣೆ ಬಗ್ಗೆ, ಕೊರೆಯುವ ಚಳಿಯಲ್ಲಿ ಸೈನಿಕರು ಕರ್ತವ್ಯ ನಿರತರಾಗಿರುವ ಬಗ್ಗೆ, ಹಿಮದಿಂದ ಕೂಡಿರುವ ಬೆಟ್ಟವನ್ನು ಸೈನಿಕರು ಹತ್ತುತ್ತಿರುವ ಮಾದರಿಗಳು ಎಲ್ಲರನ್ನೂ ಆಕರ್ಷಿಸುತ್ತಿದೆ.

ದೇಶ ಕಾಯುವ ಸಂದರ್ಭದಲ್ಲಿ, ಹಿಮದಡಿಯಲ್ಲಿ ಸಿಲುಕಿ ಮರಣ ಹೊಂದಿದ ವೀರ ಕನ್ನಡಿಗ, ಹನುಂತಪ್ಪ ಕೊಪ್ಪದ್ ರವರ ಧಾನ್ಯಗಳಿಂದ ರಚಿಸಲ್ಪಟ್ಟ ಭಾವಚಿತ್ರ ಹಾಗೂ ಅಕ್ಕಿಯಿಂದ ರಚಿಸಿರುವ ಭಾರತದ ತ್ರಿವರ್ಣ ಧ್ವಜವು ಎಲ್ಲರ ಕಣ್ಸೆಳೆಯುತ್ತದೆ. ಮುಂದುವರೆದು, ಶೌರ್ಯ ಚಕ್ರಗಳ ಬಗ್ಗೆ, ಸೈನಿಕರ ಸುಭಾಷಿತಗಳು ಹಾಗೂ ಇನ್ನಿತರೆ ಮಾಹಿತಿಗಳ ಫಲಕಗಳನ್ನೂ ಸಹ ಪ್ರದರ್ಶಿಸಲಾಗಿದೆ.

ಬೆಟ್ಟದ ಹಿಂಭಾಗದಲ್ಲಿ, ಕನ್ನಡ ಚಿತ್ರರಂಗಕ್ಕೆ 85 ವರ್ಷ ತುಂಬಿರುವುದರಿಂದ ಅದಕ್ಕೆ ಗೌರವ ಸಮರ್ಪಿಸಲು ಕೆಂಪು, ಬಿಳಿ, ಕೇಸರಿ ಗುಲಾಬಿಗಳನ್ನು ಹೆಚ್ಚಾಗಿ ಬಳಸಿ ಬೃಹತ್ ಗಾತ್ರದ ಕ್ಯಾಮರಾ, ಫಿಲ್ಮ್‍ರೋಲ್, ಕ್ಲಾಪ್ ಬೋರ್ಡ್ ಇನ್ನೂ ಮುಂತಾದುವುಗಳನ್ನು ನೋಡುಗರಿಗೆ ಆಕರ್ಷಿಸುವಂತೆ ನಿರ್ಮಿಸಲಾಗಿದೆ. ಚಿತ್ರೋದ್ಯಮದಲ್ಲಿ ತೆರೆಯ ಹಿಂದೆ ಕಾರ್ಯನಿರ್ವಹಿಸುವ ಎಲ್ಲಾ ತಂತ್ರಜ್ಞರಿಗೆ ನಮನ ಸಲ್ಲಿಸಲಾಗಿದೆ.

ಬೆಟ್ಟದ ಎಡಭಾಗದಲ್ಲಿ 12 ಅಡಿ ಎತ್ತರದ, 25 ಸಾವಿರ ಸೇವಂತಿಗೆ ಮತ್ತು ಕಾರ್ನೆಷಿಯ ಹೂವುಗಳನ್ನು ಬಳಸಿ ಬೃಹತ್ ಗಾತ್ರದ ಸಿಂಹದ ಪ್ರತಿಕೃತಿಯನ್ನು ನಿರ್ಮಿಸಲಾಗಿದೆ. ಈ ಸಿಂಹವು ಎಲ್ಲರಿಗೂ ಸೆಲ್ಫಿ ತೆಗೆದುಕೊಳ್ಳುವ ನೆಚ್ಚಿನ ತಾಣವಾಗಿದೆ. ಈ ಸಿಂಹದ ಹಿಂಭಾಗದಲ್ಲಿ ಊಟಿಯ ಫರ್ನ್ ಹಿಲ್‍ನ ಆರ್ಕಿಡ್ ಹೂವಿನ ಪರಿಮಳ ಹಾಗೂ ಸೌಂದರ್ಯ ಎಲ್ಲರ ಮನಸನ್ನು ಸೂರೆಗೊಳ್ಳುತ್ತದೆ.

ಗಾಜಿನ ಮನೆ ಒಳಗೆ ಸುತ್ತಲೂ ಬಾಲ್ಲ್‍ಮ್, ಸ್ಪೈದರ್ ಪ್ಲಾಂಟ್, ಆಂಟೋರಿಯನಂ, ಲಂಟಾನ್, ಅಸ್ಟರ್, ಕೆಲೆಂಡುಲಾ, ಸಾಲ್ವಿಯಾ, ಲಾಕ್ರ್ಸ್‍ಪರ್, ಡಯಾಂತನಿ, ಹೈಡ್ರಾಂಜಿಯಾ, ಜೆನಿಯಾ, ಚೆಂಡು ಹೂವು, ಹೀಗೆ ಹಲವು ಬಗೆಯ ಗಿಡಗಳು ಎಲ್ಲರ ಗಮನ ಸೆಳೆಯುತ್ತವೆ. ಹಿಮ್ಮೇಳದಲ್ಲಿ ಕೇಳುತ್ತಿದ್ದ, ಲಘು ಸಂಗೀತವು ಎಲ್ಲರ ಮನಸ್ಸಿಗೆ ಮೊದ ನೀಡುತ್ತದೆ.

ಗಾಜಿನ ಮನೆಯ ಸುತ್ತಲೂ 4 ವಿಭಾಗಗಳಲ್ಲಿ ಯುದ್ಧ ಟ್ಯಾಂಕರ್, ಕ್ಷಿಪಣಿ, ಸಮರ ನೌಕೆ, ಜೆಟ್ ಯುದ್ಧ ವಿಮಾನಗಳ ಮಾದರಿಯನ್ನು ಭತ್ತದ ಹುಲ್ಲಿನಿಂದ ಬೃಹದಾಕಾರವಾಗಿ ನಿರ್ಮಿಸಲಾಗಿದೆ.

ಗಾಜಿನ ಮನೆಯ ಹೊರಾಂಗಣದಲ್ಲಿ ಹೂವಿನಿಂದ ಮಾಡಿದ ಜಲಪಾತ, ನವಿಲು, ಹೃದಯಾಕಾರದ ಕಮಾನು, ಹೂವುಗಳ ತೂಗು ಗುಚ್ಛ ಕಣ್ಣಿಗೆ ಆನಂದವನ್ನು ನೀಡುತ್ತವೆ.

ಈ ಬಾರಿ ಇನ್ನೊಂದು ವಿಶೇಷವೆಂದರೆ ಲಾಲ್‍ಬಾಗ್ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗಿದೆ.

ಒಟ್ಟಾರೆ 2 ಕೋಟಿ ರೂ.ವೆಚ್ಚದಲ್ಲಿ, 1 ಲಕ್ಷ 20 ಸಾವಿರಕ್ಕೂ ಅಧಿಕ ಹೂಗಳನ್ನು ಬಳಸಿ ಗಾಜಿನ ಮನೆಯಲ್ಲಿ ಪುಷ್ಪ
ಪ್ರದರ್ಶನವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ.

ಈ ಪ್ರದರ್ಶನವು ಆಗಸ್ಟ್ 4 ರಂದು ಪ್ರಾರಂಭಗೊಂಡಿದ್ದು, ಆಗಸ್ಟ್ 15 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿದ್ದು, ಆಸಕ್ತರು ಒಮ್ಮೆ ಭೇಟಿ ನೀಡಿ ಆನಂದ ಹೊಂದಬಹುದಾಗಿದೆ.

-ಸೌಮ್ಯ ಅಶೋಕ್
ಬೆಂಗಳೂರು

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ8 hours ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ2 days ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ4 days ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ4 days ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ7 days ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

ದಿನದ ಸುದ್ದಿ1 week ago

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ ಮನೆಗೆ ಬಿಎಲ್‍ಒಗಳ ಭೇಟಿ ಪ್ರಾರಂಭ

ಸುದ್ದಿದಿನ,ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಾದ್ಯಂತ ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ...

ದಿನದ ಸುದ್ದಿ1 week ago

ಕುಂದುವಾಡದಲ್ಲಿ ದೂಡಾ ಹೊಸ ಬಡಾವಣೆ ನಿರ್ಮಾಣ ಯೋಜನೆ ಕೈ ಬಿಡಲು ರೈತರ ಆಗ್ರಹ | ವಸತಿ ಯೋಜನೆ ಕೈ ಬಿಡಿ ಎಂದು ದೂಡಾಗೆ ಸೂಚಿಸಿದ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ದೂಡಾದಿಂದ ನಿರ್ಮಾಣ ಮಾಡಲು ಹೊರಟಿರುವ ವಸತಿ(ಹೊಸ ಲೇ ಔಟ್) ಯೋಜನೆಯನ್ನ ಈ ಕೂಡಲೇ ಕೈ ಬಿಡಬೇಕು ಎಂದು ರೈತರು ನಗರಾಭಿವೃದ್ದಿ...

ದಿನದ ಸುದ್ದಿ1 week ago

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ ....

ದಿನದ ಸುದ್ದಿ2 weeks ago

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ...

ದಿನದ ಸುದ್ದಿ2 weeks ago

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈ...

Trending