Connect with us

ಅಂತರಂಗ

ಪ್ರಜ್ಞಾವಂತಿಕೆಯ ಕವಿತೆಗಳ ಕಟ್ಟುತ್ತಿರುವ ಉದಯೋನ್ಮುಖ ಕವಿ ಅಣಬೇರು ತಾರೇಶ್

Published

on

ಕೆಲವರಿಗೆ ಮಾತ್ರ ಸೀಮಿತ ಎನಿಸಿದ್ದ ಸಾಹಿತ್ಯ ಕ್ಷೇತ್ರದ ಬಗ್ಗೆ ಇಂದು ಯುವ ಜನತೆ ಕೂಡ ಆಸಕ್ತಿ ತೋರುತ್ತಿರುವುದು ಒಂದು ಒಳ್ಳೆಯ ಬೆಳವಣಿಗೆ. ಆದರೆ ತೋಚಿದ್ದನ್ನೆಲ್ಲಾ ಗೀಚುವ ಕಾರ್ಯಕ್ಕಿಂತ ಪ್ರಜ್ಞಾವಂತಿಕೆಯಿಂದ ಕವಿತೆ ಕಟ್ಟುವ ಕಾರ್ಯದಲ್ಲಿ ತೊಡಗಿರುವ ಯುವಜನರ ಸಂಖ್ಯೆ ವಿರಳವೇ ಸರಿ. ಈ ದಿಸೆಯಲ್ಲಿ ಅವಲೋಕಿಸಿದಾಗ ಭಾವತನ್ಮಯತೆಯ ಕವಿತೆಗಳಿಂದಲೇ ಓದುಗರ ಮನ ಸೆಳೆಯುವತ್ತ ಸಾಗಿರುವ ಅಣಬೇರು ಕೆ.ಪಿ ತಾರೇಶ್ ಎಂಬ ಉದಯೋನ್ಮುಖ ಕವಿ ನೆನಪಾಗುತ್ತಾರೆ.

ಕವಿತೆ ಕಟ್ಟುವುದೆಂದರೆ ಸುಮ್ಮನೆ ಅಲ್ಲ. ಕಟ್ಟಿದ್ದೆಲ್ಲ ಕವಿತೆಯಾಗಲ್ಲ, ಗೀಚಿದ್ದೆಲ್ಲವೂ ಬರಹವಾಗಲ್ಲ. ಅದೊಂದು ಆಂತರೀಕ ಪ್ರಜ್ಞೆ, ಸೂಕ್ಷ ಸಂವೇದನೆ. ಅಂತಹ ಸಂವೇದನಾಶೀಲ ಬರಹದತ್ತ ಮುಖ ಮಾಡಿರುವ ಅಣಬೇರು ತಾರೇಶ್ ಅವರು ಮೂಲತಃ ದಾವಣಗೆರೆ ತಾಲ್ಲೂಕಿನ ಅಣಬೇರು ಗ್ರಾಮದವರು. ಬೆಳೆದದ್ದು ಕಕ್ಕರಗೊಳಗೊಳ್ಳದಲ್ಲಿ. ಆರೋಗ್ಯ ಇಲಾಖೆಯ ನೌಕರರಾಗಿ ನಿವೃತ್ತರಾಗಿದ್ದ ದಿವಂಗತ ಕೆ.ಎನ್ ಪರಮೇಶ್ವರಪ್ಪ ಹಾಗೂ ಶ್ರೀಮತಿ ಗಂಗಮ್ಮ ಅವರ ಸುಪುತ್ರರು. ಪ್ರಸ್ತುತ 9 ವರ್ಷಗಳಿಂದ ದಾವಣಗೆರೆ ಜೆ.ಜೆ.ಎಂ ವೈದ್ಯಕೀಯ ಮಹಾವಿದ್ಯಾಲಯದ ಪ್ರಯೋಗಶಾಲಾ ತಂತ್ರಜ್ಞರಾಗಿ ಸೇವೆ ಸಲ್ಲಿಸುತ್ತಿದ್ದಾರೆ ತಾರೇಶ್.

1999-2000ನೇ ಇಸ್ವಿಯಲ್ಲಿ ಪ್ರೌಢಶಾಲಾ ಹಂತದಲ್ಲಿರುವಾಗಲೇ ಕಾಡಲು ಶುರು ಮಾಡಿದ ಕಾವ್ಯಾಸಕ್ತಿಗೆ ಮನಸೋತ ತಾರೇಶ್ ಏನು ಬರೆಯುತ್ತಿದ್ದೇನೆಂದು ಗೊತ್ತಿಲ್ಲದಿದ್ದರೂ, ಆಗೊಮ್ಮೆ ಈಗೊಮ್ಮೆ ಕವನ ಬರೆಯಲು ಕೂಡ ಆರಂಭಿಸಿದರು. ನೋಟ್ ಬುಕ್‍ನ ಕೊನೆಯ ಪುಟಗಳಲ್ಲಿ ಕನ್ನಡದ ಕೆಲವು ಸುಭಾಷಿತ, ನುಡಿಗಟ್ಟು, ಕವಿಗಳ ಹೆಸರು, ಕೆಲವು ಖ್ಯಾತ ಕವಿಗಳ ಕವಿತೆಗಳನ್ನು ಬರೆಯಲು ಮತ್ತು ಸಂಗ್ರಹಿಸಲು ಮಾಡಿದ ಪ್ರಯತ್ನ ಕೊನೆಗೆ ಸ್ವರಚಿತ ಕವನಗಳತ್ತ ಮುನ್ನಡಿ ಇಡುವಂತೆ ಮಾಡಿತು.
ದಾವಣಗೆರೆಯ ಸಾಂಸ್ಕøತಿಕ ಸಂಸ್ಥೆಯೊಂದರ ವತಿಯಿಂದ ಈಗಲೂ ಪ್ರತಿವರ್ಷ ನವೆಂಬರ್ ತಿಂಗಳಲ್ಲಿ ಆಯೋಜಿಸಲಾಗುತ್ತಿರುವ ಮಕ್ಕಳ ಕವಿಗೋಷ್ಠಿ ಆಯ್ಕೆ ಪ್ರಕ್ರಿಯೆಯ ಸಂದೇಶ ಅಂದು ಅಂಚೆ ಮೂಲಕ ತಾರೇಶ್ ಅವರ ಪ್ರೌಢಶಾಲೆಗೂ ರವಾನೆಯಾಗಿತ್ತು. ಈ ವಿಷಯ ತಿಳಿಸಿ ಭಾಗವಹಿಸುವಂತೆ ಪ್ರೇರಣೆ ನೀಡಿ, ತಾವೇ ಖುದ್ದಾಗಿ ಆ ಆಯ್ಕೆ ಪ್ರಕ್ರಿಯೆಗೆ ತಾರೇಶ್ ಅವರನ್ನು ಕರೆದುಕೊಂಡು ಹೋಗಿದ್ದ ಆ ಶಾಲೆಯ ಸುಧಾಮಣಿ ಎಂಬ ಶಿಕ್ಷಕಿಯ ಕಳಕಳಿಯಿಂದಾಗಿ ಅವರಿಗೆ ವೇದಿಕೆಯಲ್ಲಿ ಕವನ ವಾಚಿಸುವ ಪ್ರಥಮ ಅವಕಾಶ ಲಭಿಸಿತ್ತು. ಅಲ್ಲಿಂದ ಆರಂಭಗೊಂಡ ತಾರೇಶ್ ಅವರ ಕಾವ್ಯಲೋಕದ ಪಯಣ ಇಂದು ಅವರನ್ನು ದಾವಣಗೆರೆಯ ಅನೇಕ ಪ್ರತಿಭಾವಂತ ಕವಿಗಳ ಸಾಲಿಗೆ ತಂದು ನಿಲ್ಲಿಸಿದೆ.

ದಾವಣಗೆರೆಯ ಹಿರಿಯ ಸಾಹಿತಿಗಳಾದ ಕೆ.ಎನ್ ಸ್ವಾಮಿ, ಶಿವಯೋಗಿ ಹಿರೇಮಠ್ ಸೇರಿದಂತೆ ಅನೇಕ ಪ್ರತಿಭಾವಂತ, ಸೃಜನಶೀಲ ಕವಿಗಳ ಒಡನಾಟದ ಪ್ರತಿಫಲವಾಗಿ ಜಿಲ್ಲೆ ಮತ್ತು ರಾಜ್ಯಮಟ್ಟದ ನೂರಾರು ವೇದಿಕೆಗಳಲ್ಲಿ ಭಾಗವಹಿಸಿ ಸಾಹಿತ್ಯಾಸಕ್ತರ ಗಮನ ಸೆಳೆದಿದ್ದಾರೆ. ಪ್ರಮುಖವಾಗಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ, ಕಾಗಿನೆಲೆ ಹಾಗೂ ಸವಣೂರುಗಳಲ್ಲಿ ನಡೆದ ರಾಜ್ಯಮಟ್ಟದ ಕವಿಗೋಷ್ಠಿ ಸೇರಿದಂತೆ ಇತರೆಡೆ ತಮ್ಮದೇ ಆದ ವಿಶೇಷ ಶೈಲಿಯಲ್ಲಿ ನೈಜ ಕವಿತೆಗಳ ವಾಚನದ ಮೂಲಕ ಗುರುತಿಸಿಕೊಂಡಿರುವ ತಾರೇಶ್ ಕನ್ನಡ ಸಾರಸ್ವತ ಲೋಕಕ್ಕೆ ಎರಡು ವಿಶಿಷ್ಠ ಕವನ ಸಂಕಲನಗಳ ಕೊಡುಗೆಯನ್ನೂ ನೀಡಿದ್ದಾರೆ.

2016 ರ ಅಕ್ಟೋಬರ್ ತಿಂಗಳಲ್ಲಿ ಪ್ರಕಟವಾದ ತಾರೇಶ್ ಅವರ “ಮನದ ಮಾತು ಕವಿತೆಯಾದಾಗ” ಎಂಬ ಕವನ ಸಂಕಲನ ಪ್ರಥಮ ಕೃತಿಯಾದರೂ ಸಾಹಿತ್ಯ ವಲಯದಲ್ಲಿ ಸಂಚಲನ ಮೂಡಿಸಿತು. ತಾರೇಶ್ ಒಬ್ಬ ಭರವಸೆಯ ಯುವಕವಿ ಎಂದು ಸಾಹಿತ್ಯ ಕ್ಷೇತ್ರ ಅವರನ್ನು ಗುರುತಿಸುವಂತಾಯಿತು. ಆ ಪ್ರೇರಣೆಯ ಫಲವಾಗಿ 2018ರ ಜನವರಿಯಲ್ಲಿ ಲೋಕಾರ್ಪಣೆಯಾಗಿರುವ ಮತ್ತೊಂದು ಕೃತಿ “ನೆನಪು ಮಾಸುವ ಮುನ್ನ” ಅವರ ಪ್ರಬುದ್ಧ ಬರಹಕ್ಕೆ ಸಾಕ್ಷಿಯಾಗಿ ನಿಂತಿದೆ.

ತಾರೇಶ್ ಅವರ ಬಗೆಗೆ ಒಂದಿನಿತಾದರೂ ಈ ಅಂಕಣದಲ್ಲಿ ಹೇಳಬೇಕು, ಅವರ ಕುರಿತು ಒಂದಷ್ಟಾದರೂ ಬರೆಯಲೇ ಬೇಕೆಂಬಂತೆ ನನ್ನಲ್ಲಿ ಸೆಳೆತ ಉಂಟಾಗಿದ್ದಕ್ಕೆ ಕಾರಣ ಅವರ ಕೃತಿಯೊಳಗಿನ ಸಂವೇದನಾ ಶೀಲ ಕವಿತೆಗಳು ಹಾಗೂ ಅವರ ಚಿಂತನಾ ಲಹರಿ. ಇಲ್ಲ ಸಲ್ಲದ ಭಾವನೆ ಮತ್ತು ಕಲ್ಪನೆಗಳನ್ನು ವೈಭವೀಕರಿಸುವ ಗೋಜಿಗೆ ಹೋಗದೆ ನೈಜ ಬದುಕಿನ ಅನುಭವಗಳನ್ನು ಕಾವ್ಯವಾಗಿಸಲು ತೊಡಗಿರುವ ಅವರ ಪ್ರಯತ್ನ, ಗ್ರಾಮೀಣ ಭಾಷೆಯ ಬಳಕೆ, ಪ್ರೇಮ ನಿವೇದನೆ, ಮಾನಸಿಕ ಮತ್ತು ಸಾಮಾಜಿಕ ಸಂಗತಿಗಳ ತುಡಿತ – ತಲ್ಲಣ – ತುಮುಲಗಳ ಪ್ರತಿಬಿಂಬಿಸುವಿಕೆಯಲ್ಲಿನ ಪ್ರಜ್ಞಾವಂತಿಕೆ ನಿಜಕ್ಕೂ ಅವರ ಮತ್ತು ಅವರ ಕವಿತೆಗಳ ಬಗ್ಗೆ ಓದುಗರಲ್ಲಿ ಗೌರವ ಭಾವವನ್ನು ಮೂಡಿಸುತ್ತವೆ.ವಯೋಸಹಜ ಭಾವನೆಗಳ ಹಂಬಲ, ಚಡಪಡಿಸುವಿಕೆಯ ಜೊತೆ ಅದೆಲ್ಲವನ್ನೂ ಮೀರಿದ ನೆಲ, ಜಲ, ಭಾಷೆ, ಬದುಕು – ಬವಣೆ, ದೇಶಪ್ರೇಮದ ನೈಜ ತುಡಿತವನ್ನು ಸಹ ಕಟ್ಟಿಕೊಡುವ ಅವರ ಅನೇಕ ಸಶಕ್ತ ಕವಿತೆಗಳು ಯುಪೀಳಿಗೆಗೆ ದಾರಿ ದೀಪವಾಗಬಲ್ಲವು. ಪ್ರಬುದ್ಧ ಚಿಂತನೆಯ ಮೂಸೆಯಲ್ಲಿ ಕವಿತೆ ಕಟ್ಟುವ ಕಾರ್ಯದ ಜೊತೆ ಒಡೆದ ಮನಸುಗಳನ್ನು ಸಹ ಕವಿತೆಗಳ ಮೂಲಕ ಒಂದುಗೂಡಿಸುವ ಕಾರ್ಯದಲ್ಲಿ ತೊಡಗಿರುವ ತಾರೇಶ್ ಅವರಿಂದ ಇನ್ನಷ್ಟು ಉತ್ಕೃಷ್ಠ ಸಾಹಿತ್ಯ ಕೃಷಿ ನಡೆಯಲಿ. ಹೀಗಾಗಲೇ, ದಾವಣಗೆರೆ “ಮಕ್ಕಳ ಲೋಕ” – ಸಾಂಸ್ಕೃ ತಿಕ ಸಂಸ್ಥೆ ವತಿಯಿಂದ “ಕಾವ್ಯರತ್ನ” ಎಂಬ ಬಿರುದಿಗೆ ಭಾಜನವಾಗಿರುವ ತಾರೇಶ್ ಅವರು ಕನ್ನಡ ಸಾಹಿತ್ಯಲೋಕದಲ್ಲಿ ಎಂದಿಗೂ ಹೊಳೆಯುವ ರತ್ನವೇ ಆಗಿರಲಿ, ಅವರ ಹೆಸರು ಚಿರಸ್ಥಾಯಿಯಾಗಲಿ ಎಂದು ನಾವೆಲ್ಲಾ ಹಾರೈಸೋಣ. 

ಪಾವಗಡ ತಾಲ್ಲೂಕಿನ ಕೆ.ಟಿ ಹಳ್ಳಿಯಲ್ಲಿ ಶುಶ್ರೂಷಕಿಯಾಗಿ ರೋಗಿಗಳ ಸೇವೆ ಮಾಡುತ್ತಿರುವ ಜೊತೆಯಲ್ಲಿ, ತಾರೇಶ್ ಅವರ ಸಾಹಿತ್ಯ ಸೇವೆಗೆ ಪ್ರೇರಕ ಶಕ್ತಿಯೂ ಆಗಿ ಉತ್ತಮ ಕೃತಿಗಳ ರಚನೆಗೆ ಅವರನ್ನು ಸದಾ ಪ್ರೋತ್ಸಾಹಿಸುತ್ತಿರುವ ಅವರ ಧರ್ಮಪತ್ನಿ ಶ್ರೀಮತಿ ಎಸ್.ಜಿ ಶೀಲಾ ಅವರಿಗೂ ಈ ಮೂಲಕ ಅಭಿನಂದಿಸೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂತರಂಗ

ಮರೆಯಾದ ಅಪೂರ್ವ ಚಿತ್ರಕಲಾ ಪ್ರತಿಭೆ ‘ಶೋಭಾ ಕರಣಿಕ್’

Published

on

ಶೋಭಾ ಕರಣಿಕ್
  • ಡಾ.ಎನ್.ಕೆ.ಪದ್ಮನಾಭ, ಸಹಾಯಕ ಪ್ರಾಧ್ಯಾಪಕರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ,ಉಜಿರೆ

ವರು ಬಿಡಿಸುತ್ತಿದ್ದ ರೇಖೆಗಳು ನಮ್ಮ ದೇಶೀ ಸಂಸ್ಕೃತಿಯ ವಕ್ತಾರಿಕೆಯ ಪಾತ್ರ ನಿರ್ವಹಿಸುತ್ತಿದ್ದವು. ಕನ್ನಡದ್ದೇ ಆದ ಕಲಾತ್ಮಕ ಪರಂಪರೆಯನ್ನು ಸೂಕ್ಷ್ಮವಾಗಿ ಗ್ರಹಿಸಿದ್ದ ಅವರ ಚಿತ್ರಗಳು ಜೀವಂತಿಕೆಯ ಗುಣಲಕ್ಷಣದೊಂದಿಗೆ ಕಂಗೊಳಿಸುತ್ತಿದ್ದವು.

ಸಾಂಪ್ರದಾಯಿಕ ಚಿತ್ರಶೈಲಿಯನ್ನು ಆಧುನಿಕ ಅಗತ್ಯಗಳಿಗೆ ತಕ್ಕಂತೆ ಮಣಿಸಿ ಪರಂಪರೆಯೊಳಗೇ ಅಡಗಿದ್ದ ಮೌಲಿಕ ಮಾದರಿಗಳನ್ನು ಮನಗಾಣಿಸುವ ಶ್ರದ್ಧೆಯೊಂದಿಗೇ ಅವರು ಚಿತ್ರವಿನ್ಯಾಸ ರೂಪಿಸುತ್ತಿದ್ದರು. ಇನ್ಸ್ಟಾಗ್ರಾಮ್, ಫೇಸ್‌ಬುಕ್ ಮತ್ತಿತರ ಮಾಧ್ಯಮಗಳ ಮೂಲಕ ತಮ್ಮ ಚಿತ್ರಗಳನ್ನು ಕಾಣಿಸುತ್ತಿದ್ದರು. ಪರಂಪರೆ ಮತ್ತು ವರ್ತಮಾನವನ್ನು ಬೆಸೆದು ಹೊಸ ಬಗೆಯ ಚಿತ್ರಪ್ರಯೋಗಗಳನ್ನು ನಡೆಸುವ ಹುಮ್ಮಸ್ಸಿನೊಂದಿಗೆ ಚಿತ್ರಕಲಾಯಾನ ಮುಂದುವರೆಸಿದ್ದರು. ಅವರ ಹೆಸರು ಶೋಭಾ ಕರಣಿಕ್.

ಇತ್ತೀಚೆಗಷ್ಟೇ ಅವರ ಚಿತ್ರಕಲಾಯಾನ ನಿಂತಿತು. ಅವರ ನಿಧನವು ವಿನೂತನವಾದ ಪ್ರಯೋಗಶೀಲ ಚಿತ್ರಕಲಾ ಸಾಧ್ಯತೆಗಳನ್ನು ತಡೆದು ನಿಲ್ಲಿಸಿತು. ಪುರಾಣದ ಕಥನ ಪ್ರಸಂಗಗಳಲ್ಲಿ ಉಲ್ಲೇಖಿತ ದೇವರು-ದೇವತೆಗಳ ಅಸ್ಮಿತೆ ಮತ್ತು ದೇಸೀ ಸಂಸ್ಕೃತಿಯನ್ನು ಬಿಂಬಿಸುವ ವಿನ್ಯಾಸಗಳನ್ನು ಸಮನ್ವಯಗೊಳಿಸಿ ಚಿತ್ರಕಲೆಗೆ ಹೊಸ ಆಯಾಮ ತಂದುಕೊಟ್ಟ ಪ್ರತಿಭೆಯಾಗಿ ಶೋಭಾ ಕರಣಿಕ್ ಅವರದ್ದು ವಿಶೇಷ ವ್ಯಕ್ತಿತ್ವವಾಗಿತ್ತು. ಮ್ಯೂರಲ್ ಪೇಂಟಿಂಗ್‌ನಲ್ಲಿ ಅವರಿಗಿದ್ದ ಪರಿಣತಿ, ಉತ್ತರ ಕನ್ನಡದ ಕಾವಿ ಕಲೆಯ ಕುರಿತಾದ ವಿಸ್ತೃತ ಜ್ಞಾನವು ಚಿತ್ರಕಲೆಯನ್ನು ಉನ್ನತೀಕರಿಸುವುದಕ್ಕೆ ಅವರಿಗೆ ನೆರವಾಗಿತ್ತು.

ಕಲೆಯ ಜೊತೆಗಿನ ಅನುಸಂಧಾನದ ಕ್ಷಣಗಳು ಅಪೂರ್ವ. ಒಂದು ನಿರ್ದಿಷ್ಟ ನಿರ್ಣಾಯಕ ಸಂದರ್ಭ, ಸಮಯದಲ್ಲಿ ಕಲೆಯೊಂದು ವ್ಯಕ್ತಿತ್ವವನ್ನು ಪ್ರಭಾವಿಸಿ ಸೃಜನಶೀಲತೆಯ ಹಸಿವನ್ನು ನೆಲೆಗೊಳಿಸುವುದಕ್ಕೆ ಪ್ರೇರಣೆಯಾಗುತ್ತದೆ. ಕಲೆಯ ಪ್ರಭಾವ ಎರಡು ಬಗೆಯದ್ದು. ಸಹೃದಯರನ್ನು ತನ್ನ ಕಲಾತ್ಮಕ ಮಾದರಿಗಳಿಂದ ಸೆಳೆದು ಅವರೊಳಗೆ ವಿಶೇಷ ಅನುಭೂತಿ ಧಾರೆ ಎರೆಯುವಂಥದ್ದು ಒಂದು ಬಗೆಯಾದರೆ ಹೀಗೆ ಸೆಳೆದುಕೊಂಡು ಮತ್ತೆ ಮತ್ತೆ ಪ್ರಭಾವಿಸುತ್ತಾ ಸಹೃದಯರನ್ನೇ ಕಲಾವಿದರನ್ನಾಗಿಸುವ ಸಾಧ್ಯತೆ ಮತ್ತೊಂದು ತೆರನಾದದ್ದು.

ಈ ಕಾರಣಕ್ಕಾಗಿಯೇ ಕಲಾತ್ಮಕ ಸಂಭವನೀಯತೆಯು ಅನನ್ಯವೆನ್ನಿಸಿಕೊಂಡಿದೆ. ಇಂಥ ಅನನ್ಯತೆಯೊಂದಿಗೇ ಶೋಭಾ ಕರಣಿಕ್ ಗುರುತಿಸಿಕೊಂಡಿದ್ದರು. ಅವರು ಓದಿದ್ದು ತಾಂತ್ರಿಕ ವಿಜ್ಞಾನ. ಆದರೆ, ಅವರ ನಿಜದ ಪ್ರತಿಭೆ ಅಭಿವ್ಯಕ್ತವಾದದ್ದು ಚಿತ್ರಕಲೆಯ ಮೂಲಕ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರಿಸರದಲ್ಲಿ ಬೆಳೆದ ಶೋಭಾ ಕರಣಿಕ್ ಮೊದಲಿನಿಂದಲೂ ದೇಶೀ ಕಲೆಯ ಕುರಿತು ವಿಶೇಷ ಆಸಕ್ತಿಯನ್ನು ಬೆಳೆಸಿಕೊಂಡು ಬಂದಿದ್ದರು. ಹೈಸ್ಕೂಲ್ ಓದುತ್ತಿರುವಾಗಲೇ ಕಾವಿಕಲೆಯ ವಿನ್ಯಾಸ ಅವರನ್ನು ಸೆಳೆದಿತ್ತು. ಇವುಗಳನ್ನು ಮತ್ತೆ ಮತ್ತೆ ನೋಡುತ್ತಾ ಹೋದಂತೆಲ್ಲಾ ಕಾವಿ ಕಲೆಯ ಕುರಿತ ಆಕರ್ಷಣೆ ಕಲಿಕೆಯ ಹಂಬಲವಾಗಿ ಮಾರ್ಪಟ್ಟಿತು. ಉತ್ತರ ಕನ್ನಡದ ಟೆಂಪಲ್ ರ‍್ಟ್ ಪ್ರಕಾರದ ಭಾಗವಾಗಿ ಕಾವಿ ಕಲೆಯನ್ನು ಪರಿಚಯಿಸುವ ದೃಷ್ಟಿಯಿಂದ ಅವರು ರಚಿಸಿದ್ದ ತರಹೇವಾರಿ ವಿನ್ಯಾಸಗಳು ವಿವಿಧ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮಗಳಲ್ಲಿ ಗಮನ ಸೆಳೆದಿದ್ದವು.

ಕಾವಿ ಕಲೆಯೂ ಸೇರಿದಂತೆ ನಮ್ಮ ಸಾಂಪ್ರದಾಯಿಕ ಕಲೆಗಳು ಈ ಹಿಂದಿನ ಕಾಲದ ತಲೆಮಾರನ್ನಷ್ಟೇ ಪ್ರಭಾವಿಸಿದ್ದಲ್ಲದೇ ನಂತರದ ಹೊಸ ಪೀಳಿಗೆಯನ್ನೂ ಆಕರ್ಷಿಸುವ ಗುಣ ಹೊಂದಿವೆ. ಮೂಲ ಅಂತಃಸತ್ವಕ್ಕೆ ಧಕ್ಕೆಯೊದಗದ ಹಾಗೆ ಹೊಸ ಕಾಲದ ಅಗತ್ಯಗಳಿಗೆ ಅನುಗುಣವಾಗಿ ಈ ಸಾಂಪ್ರದಾಯಿಕ ಚಿತ್ರಕಲಾ ವಿನ್ಯಾಸಗಳನ್ನು ಮರುರೂಪಿಸಬಹುದು. ಹೊಸ ಕಾಲದಲ್ಲಿ ಅವುಗಳ ಮಹತ್ವವನ್ನು ಮನಗಾಣಿಸಬಹುದು ಎಂಬುದು ಅವರ ಆಶಯವಾಗಿತ್ತು.

ಕಲೆಯೊಂದು ಒಂದು ಕಾಲದಿಂದ ಮತ್ತೊಂದು ಕಾಲಕ್ಕೆ ದಾಟಿಕೊಳ್ಳುವಾಗ ಪಲ್ಲಟಗಳು ಸಹಜ. ಈ ಪಲ್ಲಟಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಇಂತಹ ಕಲೆಗಳಿಗೆ ಹೊಸಕಾಲದಲ್ಲೂ ಜೀವಂತಿಕೆಯನ್ನು ತಂದುಕೊಡುವ ಪ್ರಯತ್ನದ ಅಗತ್ಯವನ್ನು ಮನಗಾಣಿಸುವುದಕ್ಕಾಗಿಯೇ ಶೋಭಾ ಕರಣಿಕ್ ಅವರು ಚಿತ್ರಕಲಾ ರಚನೆಯ ವೈವಿಧ್ಯಮಯ ಪ್ರಯೋಗಗಳಲ್ಲಿ ತೊಡಗಿಸಿಕೊಂಡಿದ್ದರು.

ಅವರ ನಿಧನದಿಂದ ಈ ಪ್ರಯೋಗಶೀಲ ಹೆಜ್ಜೆಗಳು ನಿಂತಂತಾಗಿವೆ. ಆದರೆ, ಅವರು ಪರಂಪರೆ ಮತ್ತು ವರ್ತಮಾನವನ್ನು ಸಮನ್ವಯಗೊಳಿಸಿ ಸಾಬೀತುಪಡಿಸಿದ ಅಪೂರ್ವ ಚಿತ್ರಕಲಾ ಪ್ರಯೋಗಶೀಲತೆಯ ಜೀವಂತಿಕೆ ಹೊಸ ಪೀಳಿಗೆಗೆ ಸದಾ ಸ್ಫೂರ್ತಿಯ ಸೆಲೆಯಾಗಿರುತ್ತದೆ. ಅವರ ಹೆಸರಿನ ಇನಸ್ಟಾಗ್ರಾಂನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳು ಇಂಥ ಸ್ಫೂರ್ತಿಯ ಪ್ರಭೆಯನ್ನು ದಾಟಿಸುತ್ತಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಹೊಸತನದ ಹೊಸ್ತಿಲಲ್ಲಿ..!

Published

on

ಬರಹ : ಮೀನಾಕ್ಷಿ. ಬಿ
  • ಮೀನಾಕ್ಷಿ .ಬಿ, ಎಂ. ಎ ವಿದ್ಯಾರ್ಥಿನಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ದಾವಣಗೆರೆ ವಿಶ್ವವಿದ್ಯಾಲಯ

ಹೊಸವರ್ಷ ವೆಂಬುದು ಪ್ರತಿಯೊಬ್ಬರ ಬಾಳಲ್ಲಿ ವರ್ಷಕ್ಕೊಮ್ಮೆ ಬರುವ ಹೊಸದಿನಗಳ ಆಗಮನ ಯಾಕೆಂದರೆ ಹೊಸತನವನ್ನು ತರುತ್ತಾ ಇರುವ ಹೊಸವರ್ಷ ಕೂಡ ಒಂದು ಜೀವನದ ಭರವಸೆ, ನಿರೀಕ್ಷೆ ಕನಸುಗಳ ಬಂಡಿಯ ಮೇಲೆ ಸಾಗುವ ಪ್ರಯಾಣ ನಮ್ಮ ಜೀವನ.

ವ್ಯಕ್ತಿಯ ನಂಬಿಕೆಯ ಆಧಾರದ ಮೇಲೆಯೇ ಜೀವನ ಸಾಗುಸುತ್ತಿರುವುದು.ಯಾಕೆಂದರೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿಯೂ ಕೂಡ ಕಷ್ಟ -ಸುಖ ದುಃಖದ ಸಂಗತಿಗಳು ಇದ್ದೆ ಇರುತ್ತದೆ. ಕೆಲವೊಂದು ಬಾರಿ ಹತಾಶೆಯನ್ನು ಹೊಂದಿ ಜೀವನದಲ್ಲಿ ಜಿಗುಪ್ಸೆ ಒಂದು ಕೆಟ್ಟ ನಿರ್ಧಾರಕ್ಕೆ ಮನಸ್ಸು ದಾರಿ ಮಾಡಿಕೊಡುತ್ತದೆ. ಹಾಗೆಯೇ ಕಷ್ಟ ಇದ್ದಲ್ಲಿ ಸುಖವಿರುವುದುಂಟು ಅನ್ನುವ ಹಾಗೇ ಇವತ್ತಲ್ಲ ನಾಳೆ ಒಳ್ಳೆಯ ದಿನಗಳು ನಮ್ಮ ಜೀವನದಲ್ಲಿ ಬರಬಹುದೆಂಬ ಭರವಸೆ,ಆತ್ಮವಿಶ್ವಾಸವನ್ನು ಇಟ್ಟುಕೊಂಡು ಜೀವನ ನಡೆಸುತ್ತಲೇ ಇದ್ದೇವೆ.

ಈ ವರ್ಷ ಒಳ್ಳೆಯದಾಗಿಲ್ಲ ಅಂದರೆ ಏನು ಮುಂದಿನ ವರ್ಷ ಆದರೂ ನನ್ನ ಬದುಕು ಬದಲಾಗಬಹುದು ಎಂಬ ಹೊಸತನವನ್ನು ನಮ್ಮಲ್ಲಿ ಭರವಸೆ,ನಂಬಿಕೆಯ ಬೇರಿನೊಂದಿಗೆ ಬೆರೆಸಿಕೊಂಡು ಬದುಕಬೇಕು.ನಾಳೆಯ ದಿನಗಳ ಮೇಲಿನ ಅನಿರೀಕ್ಷಿತ ತೀರಿವಿನಿಂದಾಗುವ ಬದುಕಿನಲ್ಲಾಗುವ ಬದಲಾವಣೆ ಹೊಸತನದ ಚಾಪನ್ನು ಮೂಡಿಸುತ್ತದೆ.
ಎಂಥ ಹತಾಶ ಮನಸ್ಥಿತಿಯವರಲ್ಲೂ ಹೊಸವರ್ಷ ಭರವಸೆಯ ಅಭಯ ಹಸ್ತವನ್ನು ಚಾಚುತ್ತದೆ. ಅದೆಲ್ಲಿಂದಲೇ ಆತ್ಮ ವಿಶ್ವಾಸದ ಬೆಳಕಿನ ಕಿಡಿಯೊಂದು ಕಾಣಿಸಿಕೊಳ್ಳುತ್ತದೆ.

ಹೊಸವರ್ಷವೆಂಬುದು ಕೇವಲ ಸಂಭ್ರಮದ ಕಾಲ ಮಾತ್ರವಲ್ಲ. ಕಳೆದ ದಿನಗಳತ್ತ ಹಿಂತಿರುಗಿ ನೋಡುವ ಸಮಯ ಕೂಡ ಹಿಂದಿನ ದಿನಗಳ ಪುಟಗಳನ್ನು ತೆಗೆದು ನೋಡಿದರೆ. ಉತ್ಸಾಹದ ಗಳಿಗೆಗಳು ಮುಂದಿನ ಕೆಲಸಗಳಿಗೆ ಚೈತನ್ಯ, ಉತ್ಸಾಹ ನೀಡಬಲ್ಲದು.ನಮ್ಮ ದಿಕ್ಕಿಲ್ಲದ ದಾರಿಗೆ ಖಚಿತ ದಿಕ್ಕು ದಾರಿಯನ್ನು ತೋರಬಲ್ಲದು.

ಜೀವನದ ಪ್ರಯಾಣಕ್ಕೆ ಒಂದು ನಿಲ್ದಾಣವಾಗಿದೆ. ನಾವು ಕಾಣುವ ಕನಸಗಳು ಕನಸಾಗಿಯೇ ಉಳಿದಿದೆ ಯಾಕೆಂದರೆ ನಮ್ಮಲ್ಲಿನ ಬೇಜವಾಬ್ದಾರಿ, ನಿರ್ಲಕ್ಷತನ ಆಮೇಲೆ ಮಾಡಿದರೆ ಆಯ್ತು ಅನ್ನೋ ಮನೋಭಾವನೆ ಯಾವುದರ ಬಗ್ಗೆಯೂ ಆಸಕ್ತಿ ಕೊಡದೆ ಇರೋದು ಎಲ್ಲವು ನಮ್ಮ ಕನಸಿನ ಜೀವನ ರೂಪಿಸಿಕೊಳ್ಳುವಲ್ಲಿ ಸಫಲರಾಗದೆ ಉಳಿಯಲು ಕಾರಣ.

ಮೊದಲು ಆತ್ಮವಿಶ್ವಾಸ ಬೇಕು ನಾನು ಈ ಕೆಲಸವನ್ನು ಮಾಡುವೆ ಎಂಬ ಒಂದು ನಿರ್ಧಿಷ್ಟ ಗುರಿ ಇರಬೇಕು ಅಂಗಿದ್ರೆ ಅಷ್ಟೇ ಜೀವನದ ಪಯಣದ ಹಾದಿಯಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಇಲ್ಲವಾದಲ್ಲಿ ಸೋಲನ್ನು ಅನುಭವಿಸುವ ಪರಿಸ್ಥಿತಿ ಎದುರಾಗುತ್ತದೆ. ಮುಂದಿನ ದಿನಗಳ ಆಗಮನದೊಂದಿಗೆ ನಾವು ಕಂಡ ಕನಸನ್ನು ಈಡೇರಿಸಿಕೊಳ್ಳುವ ಸತತ ಪ್ರಯತ್ನದೊಂದಿಗೆ ಬರುವ ದಿನವನ್ನು ಸ್ವಾಗತಿಸಿಕೊಳ್ಳೋಣ.
ಎಲ್ಲರ ಬಾಳಲಿ ಹರುಷ ,ಸಂತೋಷ ಮನೆಮಾಡಲಿ ಎಂದು ಆಶಿಸುತ್ತಾ ಎಲ್ಲರಿಗೂ ಹೊಸವರ್ಷದ ಶುಭಾಶಯಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕಾಮರೂಪದ ಪ್ರಭಾಕರ

Published

on

  • ಪ್ರೊ.ರಹಮತ್ ತರೀಕೆರೆ

ನಾನು ಕೋಲಾರಕ್ಕೆ ಹೋದಾಗೆಲ್ಲ ಎರಡು ಜಾಗಗಳಿಗೆ ತಪ್ಪದೆ ಭೇಟಿ ಕೊಡುತ್ತೇನೆ. ಒಂದು-ಕೆ.ರಾಮಯ್ಯ ಮತ್ತವರ ಸಂಗಾತಿಗಳು ಸೇರಿ ತೇರುಹಳ್ಳಿ ಬೆಟ್ಟದ ಮೇಲೆ ಕಟ್ಟಿರುವ `ಆದಿಮ’ಕ್ಕೆ; ಇನ್ನೊಂದು-`ಕಾಮರೂಪಿ’ ಎಂಬ ಹೆಸರಲ್ಲಿ ಬರೆಯುತ್ತಿದ್ದ ಕನ್ನಡ ಲೇಖಕ ಡಾ. ಎಂ.ಎಸ್. ಪ್ರಭಾಕರ ಅವರಿರುವ ಕಠಾರಿಪಾಳ್ಯದ ಮನೆಗೆ. 50ರ ದಶಕದ ಕೊನೆಯಲ್ಲಿ ಕರ್ನಾಟಕ ಬಿಟ್ಟುಹೋದ ಪ್ರಭಾಕರ, ‘ಹಿಂದೂ’ ಪತ್ರಿಕೆಯ ವರದಿಗಾರರಾಗಿ ಆಫ್ರಿಕಾ ಅಮೇರಿಕ ಬಾಂಗ್ಲಾದೇಶ ಈಶಾನ್ಯ ಭಾರತವನ್ನೆಲ್ಲ ಅಲೆದಾಡಿ, ಕಡೆಗೆ ಕಾಮರೂಪದಲ್ಲಿ (ಅಸ್ಸಾಮಿನ ಪುರಾತನ ಹೆಸರಿದು) ನೆಲೆಸಿಬಿಟ್ಟರು.

`ಕಾಮರೂಪ’ ಶಬ್ದಕ್ಕೆ ಬಯಸಿದ ರೂಪಧಾರಣೆ ಮಾಡುವ ಮಾಯಾವಿ ವಿದ್ಯೆ ಎಂಬರ್ಥವೂ ಇದೆ. ಎಂಬತ್ತರ ಪ್ರಾಯದಲ್ಲಿ ಕರ್ನಾಟಕಕ್ಕೆ ಮರಳಿ ಬಂದಿರುವ ಪ್ರಭಾಕರ ಅವರು, ತಾವು ಹುಟ್ಟಿಬೆಳೆದ ಮನೆಯಲ್ಲಿ ಬಿಡಾರ ಹೂಡಿದ್ದಾರೆ. ಹಿರೀಕರು ಕಟ್ಟಿದ ದೊಡ್ಡಮನೆ. ಮನೆಯೊಳಗೊಂದೇ ಜೀವ; ಮನೆ ತುಂಬ ಪುಸ್ತಕದ ರಾಶಿ (ಹೆಚ್ಚಿನವು ಇಂಗ್ಲೀಶ್ ಬಂಗಾಳಿ ಅಸ್ಸಾಮಿ). ನಟ್ಟನಡುವಿರುವ ಹಾಲಿನ ಮೂಲೆಯಲ್ಲಿ ಬೀದಿಗೆ ಬೆನ್ನುಕೊಟ್ಟಂತೆ ಕೂತು, ಲ್ಯಾಪ್‌ಟಾಪಿನಲ್ಲಿ ಬರೆಯುತ್ತ, ವೆಬ್‌ಸೈಟುಗಳನ್ನು ಜಾಲಾಡುತ್ತ, ಬ್ಲಾಗುಗಳನ್ನೋದುತ್ತ ಪ್ರಭಾಕರ ಕುಳಿತಿರುತ್ತಾರೆ.

ಅವರ ಮನಗೆ ಹೋದಾಗಲೆಲ್ಲ ನನಗೆ ರಾಗಿಮುದ್ದೆ ಸೊಪ್ಪಿನ ಸಾರಿನ ಊಟ ಸಿಗುತ್ತದೆ. ಅವರು ಉಣ್ಣುವುದೊಂದು ಅಪೂರ್ವ ದೃಶ್ಯ. ತಣಿಗೆಯ ನಡುವೆ ಹದವಾಗಿ ಬೆಂದು ಕಂಪು ಬೀರುವ ಗೋಂದಿನಂತಹ ಕೆಂಗಪ್ಪು ಬಣ್ಣದ ಬಿಸಿಮುದ್ದೆಯನ್ನಿಟ್ಟು, ಅದರ ತಲೆಯ ಮೇಲೆ ಶಿಖರವನ್ನು ಹಿಮವು ಅಲಂಕರಿಸುವಂತೆ ಬೆಣ್ಣೆಯ ಚೂರನ್ನಿಡುತ್ತಾರೆ; ಬೆಣ್ಣೆಯು ಮುದ್ದೆ ಕಾವಿಗೆ ಕರಗಿ ಇಡೀ ಚೆಂಡನ್ನು ಆವರಿಸಿ ಅಭಿಷೇಕ ಮಾಡಿಸಿಕೊಂಡ ಮೂರುತಿಯಂತೆ ಥಳಥಳ ಹೊಳೆಯುತ್ತದೆ. ಆಗ ಘಮಿಸುವ ಮುದ್ದೆಯನ್ನು ಚೆನ್ನಾಗಿ ಮಿದ್ದು, ಒಂದು ಬದಿಯಿಂದ ಇಷ್ಟಿಷ್ಟೇ ಮುರಿದು ತುತ್ತು ಮಾಡಿ, ಸೊಪ್ಪಿನ ಗಟ್ಟಿಸಾರಲ್ಲಿ ಹೊರಳಾಡಿಸಿ ಗುಕ್ಕನೆ ನುಂಗಿ ಕಣ್ಮುಚ್ಚಿ ಕೊಳ್ಳುತ್ತಾರೆ. ತರುವಾಯ ಶ್ರೀಯುತರು ಜ್ಞಾನೋದಯವಾದ ಸಿದ್ಧನಂತೆ ಅವರ ಮುಖದಲ್ಲಿ ಪರಮಾನಂದದ ಒಂದು ಕಳೆ ಆವಿರ್ಭವಿಸುತ್ತದೆ. ಇದನ್ನೆಲ್ಲ ಕಾಣುವಾಗ, ಲೋಕವನ್ನೆಲ್ಲ ಸುತ್ತಾಡಿರುವ ಇವರು ಕೋಲಾರಕ್ಕೆ ಮುದ್ದೆಸುಖಕ್ಕಾಗಿಯೆ ಬಂದರೇನೊ ಎಂದು ಶಂಕೆ ಬರುತ್ತದೆ. ಪ್ರಭಾಕರ ಅವರಿಗೆ ಆಧುನಿಕ ಕನ್ನಡ ಸಾಹಿತ್ಯದ ಮೇಲೆ ಅನೇಕ ದೂರುಗಳಿವೆ. ಅವುಗಳಲ್ಲಿ ಆಹಾರ ತಯಾರಿಕೆ ಮತ್ತು ಸೇವನೆ ಕುರಿತು ಅದರಲ್ಲಿ ವಿವರಗಳೇ ಇಲ್ಲ ಎಂಬುದೂ ಒಂದು.

ಕನ್ನಡದ ಅತಿಹಿರಿಯ ಮತ್ತು ಹೆಚ್ಚು ಬರೆಯದ ಲೇಖಕರಲ್ಲಿ ಪ್ರಭಾಕರ ಅವರೂ ಒಬ್ಬರು. ನಾನು ಅವರ ‘ಕುದುರೆಮೊಟ್ಟೆ’ ಕಾದಂಬರಿಯನ್ನೂ ‘ಒಂದು ತೊಲ ಪುನುಗು ಮತ್ತು ಇತರ ಕತೆಗಳು’ ಸಂಕಲನವನ್ನೂ ಓದಿದ್ದೆ. ಇವುಗಳಲ್ಲಿ ‘ಕುದುರೆ ಮೊಟ್ಟೆ’ ಈಗಲೂ ಪ್ರಿಯವಾದ ಪುಸ್ತಕ. ಅದರಲ್ಲಿರುವ ಕೆಲವು ಪಾತ್ರಗಳು ಕೊಂಚ ವಿಕ್ಷಿಪ್ತವಾಗಿವೆ; ಅಲ್ಲಿನ ಬಾಳಿನ ಸನ್ನಿವೇಶಗಳೂ ಅನಿರೀಕ್ಷಿತವಾಗಿವೆ. ಆದರೆ ಎಲ್ಲಿಯೂ ಹುಸಿ ಅನಿಸದಂತೆ, ಒಂದೇ ಶಬ್ದ ಅಪವ್ಯಯವಾಗದಂತೆ ಅದನ್ನು ಬರೆಯಲಾಗಿದೆ. ಪಾತ್ರಗಳನ್ನು ತಮ್ಮ ಸಿದ್ಧಾಂತಕ್ಕೆ ತಕ್ಕಂತೆ ಮಣಿಸಿ ಕೈಗೊಂಬೆಯಂತೆ ಆಡಿಸುತ್ತ, ಕೆಲವನ್ನು ಮುದ್ದಾಮಾಗಿ ದುರುಳಗೊಳಿಸಿ ಕಲೆಯ ಜಾಣಮುಸುಕಿನಲ್ಲಿ ಅಡಗಿಸುತ್ತ, ಕೆಲವು ಕಾದಂಬರಿಗಳು ಕನ್ನಡದಲ್ಲಿ ಪ್ರಕಟವಾಗುತ್ತಿವೆ. ಇಂತಹ ಹೊತ್ತಲ್ಲಿ ಅರ್ಧ ಶತಮಾನದ ಹಿಂದೆ ಪ್ರಕಟವಾದ ಈ ಕಾದಂಬರಿ, ಬಾಳನ್ನು ಕುರಿತು ತೋರುವ ಕಕ್ಕುಲಾತಿ ಕಂಡು ಖುಶಿಯಾಗುತ್ತದೆ. ಕತೆಗಾರರಿಗೆ ತಾವು ಸೃಷ್ಟಿಸುವ ಕೆಲವು ಪಾತ್ರಗಳ ಮೇಲೆ ಕೊಂಚ ಭಾವ ಪಕ್ಷಪಾತವಿರುತ್ತದೆ. ಆದರೆ ತಾವು ಸೃಜಿಸುವ ಎಲ್ಲ ಪಾತ್ರಗಳನ್ನು ತಾಯಿಯಂತೆ ನೋಡುವುದು ಬರೆಹದ ನೈತಿಕತೆ. ಈ ಸಂಗತಿ ಕುವೆಂಪು ಮತ್ತು ಟಾಲ್ ಸ್ಟಾಯ್ ಕಾದಂಬರಿ ಓದಿದವರಿಗೆ ಗೊತ್ತಿದೆ.

ಕಾಮವನ್ನು ಇಟ್ಟುಕೊಂಡು ಜೀವನದ ಸತ್ಯಗಳನ್ನು ಶೋಧಿಸುವ ವಿಷಯದಲ್ಲಿ ಕಾಮರೂಪಿಯವರು, ಒಬ್ಬ ಟಿಪಿಕಲ್ ನವ್ಯಲೇಖಕರೇ. ಆದರೆ ನವ್ಯದ ಕೆಲವು ಲೇಖಕರಲ್ಲಿ ಕಾಣುವಂತೆ, ಅದಕ್ಕವರು ಅನಗತ್ಯ ಪ್ರಾಮುಖ್ಯ ಕೊಡುವುದಿಲ್ಲ. ಅದನ್ನು ಚಪ್ಪರಿಸುವುದಿಲ್ಲ. ವೈಭವೀಕರಿಸುವುದಿಲ್ಲ. ಬದಲಿಗೆ, ಮನುಷ್ಯರಾದವರು ಜೀವನದ ಇಕ್ಕಟ್ಟುಗಳಲ್ಲಿ ಸಿಲುಕಿ ಅನಿವಾರ್ಯವಾಗಿ ವರ್ತಿಸುವ ಪರಿಯನ್ನು ತಣ್ಣಗೆ ವ್ಯಂಗ್ಯವಾಗಿ ಚಿತ್ರಿಸುತ್ತಾ ಹೋಗುತ್ತಾರೆ. ಸತ್ಯಕ್ಕಿರುವ ಹಲವು ಮುಖಗಳನ್ನು ಹಿಡಿಯುವಂತಹ ಕುರುಸೋವಾನ ‘ರಶೋಮನ್’ ಸಿನಿಮಾ ನೆನಪಿಸುವ ಈ ಕಾದಂಬರಿ, ಮತ್ತೆಮತ್ತೆ ಓದಬೇಕು ಎನಿಸುವಷ್ಟು ತಾಜಾ ಆಗಿದೆ. ‘ಉಪಪತ್ತಿಯೋಗ’ ಎಂಬುದನ್ನು ಬಿಟ್ಟರೆ, ಉಳಿದಂತೆ ವ್ಯಕ್ತಿವಾದವನ್ನು ಅತಿಯಾಗಿ ಬಿಂಬಿಸುವ ತಂತ್ರದ ಬಿಗಿತದಲ್ಲಿರುವ ಅವರ ಕತೆಗಳು ಅಷ್ಟು ಆಪ್ತವೆನಿಸಿಲ್ಲ.

ನನಗೆ ಪ್ರಭಾಕರ್ ಕುರಿತು ಆಸಕ್ತಿ ಮೂಡಿಸಿದವರು ಮಾರ್ಕ್ಸ್‌ವಾದಿ ಚಿಂತಕ ಕೆ.ರಾಘವೇಂದ್ರರಾವ್ ಅವರು. ಅಮೆರಿಕೆಯ ವಿಶ್ವವಿದ್ಯಾಲಯಗಳಲ್ಲಿ ಕೆಲಸ ಮಾಡುತ್ತಿದ್ದ ಎ.ಕೆ.ರಾಮಾನುಜನರ ಹೊಂದಾಣಿಕೆಯ ಗುಣವನ್ನು ಕಟುವಾಗಿ ವಿಮರ್ಶಿಸುತ್ತ, ಅಲ್ಲಿನ ಶೈಕ್ಷಣಿಕ ಕ್ಷೇತ್ರದಲ್ಲಿರುವ ಬಿಳಿಯರ ಯಜಮಾನಿಕೆಗೆ ಬಾಗದೆ ಹೊರಬಂದ ಪ್ರಭಾಕರ ಅವರ ದಿಟ್ಟ ಸ್ವಭಾವವನ್ನು ಅವರು ತಮ್ಮ ಸಂದರ್ಶನದಲ್ಲಿ ಪ್ರಸ್ತಾಪಿಸಿದ್ದರು. ಪ್ರಭಾಕರ ಅವರನ್ನು ಭೇಟಿಯಾಗಬೇಕು ಎಂದು ಅನಿಸುತ್ತಿತ್ತು. ಅದರಲ್ಲೂ ಭಾರತದ ಶಾಕ್ತಪೀಠಗಳಲ್ಲಿ ಮುಖ್ಯವಾಗಿರುವ ಅಸ್ಸಾಮಿನ ಕಾಮಾಖ್ಯಕ್ಕೆ ಹೋಗಲು ಯತ್ನಿಸುತ್ತಿದ್ದ ನಾನು, ಅಲ್ಲೇ ಸಮೀಪದ ಗೌಹಾತಿಯಲ್ಲಿರುವ ಅವರನ್ನು ಕಾಣಲು ಹವಣಿಕೆ ಮಾಡಿಕೊಂಡಿದ್ದೆ. ಆದರೆ ಸಾರ್ವಜನಿಕ ವ್ಯಕ್ತಿಯಾಗಲು ನಿರಾಕರಿಸಿ ಅಜ್ಞಾತವಾಗಿಯೇ ಬಾಳುವ ಅವರು ಸುಲಭವಾಗಿ ಸಿಗುತ್ತಿರಲಿಲ್ಲ.

ನನ್ನ ತವಕವನ್ನರಿತಿದ್ದ ಕೆ.ರಾಮಯ್ಯ, ‘ಪ್ರಭಾಕರ್ ಕರ್ನಾಟಕಕ್ಕೆ ಬಂದಿದ್ದಾರೆ. ಬನ್ನಿ’ ಎಂದು ಅವರ ಮನೆಗೆ ಕರೆದುಕೊಂಡು ಹೋದರು. ಮಧ್ಯಾಹ್ನದ ಸುಡುಹೊತ್ತು. ಪ್ರಭಾಕರ ಪ್ರೀತಿಯಿಂದ ಬರಮಾಡಿಕೊಂಡು ನೊರೆ ತುಂಬಿದ ಒಗರು ಬೀರಿನ ಮಗ್ಗನ್ನು ಕೈಗೆ ಕೊಟ್ಟು, ಕಾಮಾಖ್ಯದ ಬಗ್ಗೆಯೂ ತಂತ್ರ ಪಂಥದ ಬಗ್ಗೆಯೂ ಇರುವ ಕೃತಿಗಳನ್ನು ತೋರಿಸುತ್ತ, ಗಂಟೆಗಟ್ಟಳೆ ಮಾತಾಡಿದರು. ಅರಿವಿನ ಕಿಡಿಗಳು ಹಾರುವ ಅದೊಂದು ವಿದ್ವತ್‌ಪೂರ್ಣ ಹರಟೆ.

ನಾನು ಅವರಲ್ಲಿ ಶಿಷ್ಯವೃತ್ತಿ ಸ್ವೀಕರಿಸಿ ಹಲವಾರು ಸಲ ಕೋಲಾರಕ್ಕೆ ಹೋಗಿ ಬಂದಿದ್ದೇನೆ. ಅವರ ಮಾತುಕತೆಗಳಲ್ಲಿ ನನಗೆ ಮುಖ್ಯವಾಗಿ ಕಂಡಿದ್ದು, ಜಾತ್ಯತೀತವಾದ ಮನಸ್ಸು; ಸಣ್ಣಪುಟ್ಟ ಸಂಗತಿಗಳ ಮೇಲೂ ಕಾಳಜಿಯಿಂದ ಸೂಕ್ಷ್ಮವಾಗಿ ಚಿಂತಿಸುವ ಮಾನವೀಯತೆ; ಗತಕಾಲದ ಬಗ್ಗೆ ಹಳಹಳಿಕೆಯಿಲ್ಲದೆ ವರ್ತಮಾನದ ಸಮಸ್ಯೆಗಳನ್ನು ಕುರಿತು ಚಿಂತಿಸುವ ಪ್ರಖರವೂ ನಿಷ್ಠುರವೂ ಆದ ರಾಜಕೀಯ ಪ್ರಜ್ಞೆ. ಸಾರ್ವಜನಿಕ ಬದುಕಿನಲ್ಲಿ ಜಾತಿಪದ್ಧತಿ ಎಲ್ಲೆಮೀರಿ ನಿರತವಾಗಿರುವ ಕುರಿತ ಹೇವರಿಕೆ. ಹಿರಿಯ ಲೇಖಕರಲ್ಲಿ ಸಾಮಾನ್ಯವಾಗಿ ಎರಡು ಸ್ವಭಾವಗಳಿರುತ್ತವೆ. ಒಂದು- ಕಳೆದುಹೋದ ಕಾಲದ ಬಗ್ಗೆ ಭಾವುಕ ಮರುಕಳಿಕೆ. ಎರಡು-ವರ್ತಮಾನದ ಸಾಮಾಜಿಕ ರಾಜಕೀಯ ವೈರುಧ್ಯಗಳನ್ನು ಉದಾರವಾಗಿ ನೋಡುತ್ತ, ಚಿಂತನೆಯ ಮೊನಚನ್ನು ಕಳೆದುಕೊಳ್ಳುವುದು. ಆದರೆ ಆತ್ಮಕ್ಕೆ ಸದಾ ಬೆಂಕಿ ಹತ್ತಿಸಿಕೊಂಡಂತೆ ಉರಿಯುವ ಕೆಲವರಿದ್ದಾರೆ. ಕೋಚೆ, ಕುಸುಮಾಕರ ದೇವರಗೆಣ್ಣೂರ, ಎಂ.ಡಿ. ನಂಜುಂಡಸ್ವಾಮಿ, ನೀಲಗಂಗಯ್ಯ ಪೂಜಾರ, ಕೆ.ರಾಘವೇಂದ್ರರಾವ್, ಅಬ್ಬಿಗೇರಿ ವಿರೂಪಾಕ್ಷಪ್ಪ, ಸಾರಾ ಅಬೂಬಕರ್, ಕಾಮರೂಪಿ ಪ್ರಭಾಕರ-ಇವರೆಲ್ಲ ಇಂತಹವರು. ಈ ಹಿರಿಯರ ಜತೆ ಮಾತಾಡುವಾಗ ಇವರ ಹಠಮಾರಿತನ, ಜಗಳಗಂಟಿತನ, ಆದರ್ಶವಾದ, ನೈತಿಕ ಪ್ರಜ್ಞೆ ಹಾಗೂ ಭಿನ್ನಮತ ಇಷ್ಟವಾಗುತ್ತದೆ.

ಕರ್ನಾಟಕದಿಂದ ಬಹುಕಾಲ ದೂರವಿದ್ದ ಕಾರಣದಿಂದ ಏರ್ಪಟ್ಟಿರುವ ಅಪರಿಚಿತತೆಯಿಂದಲೊ ಅಥವಾ ಕರ್ನಾಟಕದ ಒಳಗೇ ಇದ್ದೂಇದ್ದೂ ನಮಗೆ ಕಾಣದಂತಾಗಿರುವ ವೈರುಧ್ಯಗಳು ‘ಹೊರಗಿನಿಂದ’ ಬಂದಿರುವ ಅವರಿಗೆ ಒಡೆದು ಕಾಣುತ್ತಿರುವುದರಿಂದಲೊ, ಪ್ರಭಾಕರ ಕರ್ನಾಟಕದ ಸಮಕಾಲೀನ ಸಾಂಸ್ಕೃತಿಕ ರಾಜಕಾರಣದ ವೈರುಧ್ಯಗಳ ಬಗ್ಗೆ ತೀಕ್ಷ್ಣವಾದ ಟಿಪ್ಪಣಿ ಮಾಡುತ್ತಿರುತ್ತಾರೆ; ಕನ್ನಡಿಗರ ಸ್ವಭಾವದಲ್ಲೇ ವ್ಯಕ್ತಿನಿಷ್ಠೆಗಾಗಿ ವಿಮರ್ಶೆಯ ನಿಷ್ಠುರತೆ ಬಿಟ್ಟುಕೊಡುವ, ಸಜ್ಜನಿಕೆಯ ಭಾಷೆಯಲ್ಲಿ ವಾಸ್ತವವನ್ನು ಅಡಗಿಸುವ ಪ್ರವೃತ್ತಿಯಿದೆ ಎಂದು ಹೇಳುತ್ತಿರುತ್ತಾರೆ. ಸಂಘಟಕರೊಬ್ಬರು ಕಾರ್ಯಕ್ರಮವೊಂದಕ್ಕೆ ಕರೆಸಿಕೊಂಡು ಪರಿಚಯ ಭಾಷಣದಲ್ಲಿ ತಮ್ಮನ್ನು ಅತಿಯಾಗಿ ಹೊಗಳಿದ್ದನ್ನು ನೆನೆಯುತ್ತ ಅವರೊಮ್ಮೆ ಹೇಳಿದರು: “ಏನ್ ಸ್ವಾಮಿ ಕನ್ನಡಿಗರು? ಎಷ್ಟು ಉದಾರತೆ! ನನ್ನ ಬಗ್ಗೆ ಅವರಿಗೆ ಏನೂ ಗೊತ್ತಿಲ್ಲ. ನಾನು ಎಲ್ಲ ಸೇರಿದರೆ ನೂರೈವತ್ತು ಪುಟಗಳನ್ನೂ ಬರೆದಿಲ್ಲ. ಕನ್ನಡಕ್ಕೆ ದೊಡ್ಡ ಕೊಡುಗೆಯನ್ನು ಕೊಟ್ಟಿಲ್ಲ. ಆದರೂ ವಾಚಾಮಗೋಚರ ಹೊಗಳಿಬಿಟ್ಟರು. ಕರ್ನಾಟಕದಲ್ಲಿ ಮಾತಿಗೆ ಬೆಲೆಯೇ ಇದ್ದಂತಿಲ್ಲ.’’

ಇದನ್ನು ಕೇಳುವಾಗ ಈಚೆಗೆ ಕಲ್ಕತ್ತಾದಲ್ಲಿ ನಾನು ಕಂಡ, ಹಿರಿಯ ಲೇಖಕ ರುದ್ರಪ್ರತಾಪ ಸೇನರ ಸನ್ಮಾನ ಕಾರ್ಯಕ್ರಮ ನೆನಪಾಯಿತು. ಸೇನರಿಗೆ 75ವರ್ಷ ತುಂಬಿದ ನೆಪದಲ್ಲಿ ಇರಿಸಿಕೊಂಡಿದ್ದ ಆ ಕಾರ್ಯಕ್ರಮ ಎಷ್ಟು ವಿಮರ್ಶಾತ್ಮಕವಾಗಿತ್ತು ಎಂದರೆ, ಅವರ ಶಿಷ್ಯರು ತಮ್ಮ ಗುರುವಿನ ಜತೆ ಕೋರ್ಟ್ಮಾರ್ಶಲ್ ನಡೆಸುವವರ ಹಾಗೆ ಪ್ರಶ್ನೆ ಕೇಳುತ್ತಿದ್ದರು. ಸೇನರು ಆ ಕಟುತರ ಪ್ರಶ್ನೆಗಳಿಗೆಲ್ಲ ಪ್ರಾಮಾಣಿಕವಾಗಿ ದ್ವಂದ್ವವಿಲ್ಲದೆ ಉತ್ತರಿಸುತ್ತಿದ್ದರು. ಹಿರಿಯರ ತಲೆಗೆ ಅಭಿನಂದನ ಗ್ರಂಥಗಳ ಸರಮಾಲೆಯನ್ನು ತಂದು ಕಟ್ಟಿ, ಎಗ್ಗಿಲದೆ ಹೊಗಳಿ ವೈಭವೀಕರಿಸುವ ಪದ್ಧತಿಯಿರುವ ಕರ್ನಾಟಕದಲ್ಲಿ, ಈ ಪರಿಯ ನಿಷ್ಠುರತೆ ಕಲ್ಪಿಸಿಕೊಳ್ಳುವುದೇ ಕಷ್ಟ.

ತೋರುಗಾಣಿಕೆಯನ್ನು ಸದಾ ನಿರಾಕರಿಸುವ ಪ್ರಭಾಕರ ಅವರಲ್ಲಿ, ಅವರ ಖಂಡಿತವಾದಿ ನಿಲುವಿಗೆ ಅಷ್ಟೊಂದು ತಾಳೆಯಾಗದ ಇನ್ನೊಂದು ಮುಖವಿದೆ. ಅದೆಂದರೆ, ಜೀವನಪ್ರೀತಿಯ ಸಂಕೇತದಂತಿರುವ ತಮಾಶೆ ಮತ್ತು ಪೋಲಿತನ. ಈ ತಮಾಶೆಯ ಗುಣ ಅದ್ಭುತ ನಾಟಕೀಯ ಶೈಲಿಯಾಗಿ ಅವರ ಕಥೆ ಕಾದಂಬರಿಗಳಲ್ಲೆಲ್ಲ ಆವರಿಸಿಕೊಂಡಿದೆ. ತಮಗೆ ಪಾಠ ಹೇಳಿದ ಗುರುಗಳ ವೈಯಕ್ತಿಕ ಬದುಕಿನಲ್ಲಿದ್ದ ಸನಾತನವಾದ ಮತ್ತು ತರಗತಿಗಳಲ್ಲಿ ಕನ್ನಡ ಬಳಸದ ಅವರ ಇಂಗ್ಲಿಷಿನ ವ್ಯಾಮೋಹ ಕುರಿತಂತೆ, ಅವರಲ್ಲಿ ಸ್ವಾರಸ್ಯಕರ ಮಾಹಿತಿಗಳಿವೆ. ಪ್ರಭಾಕರ ಅವರು ಆಪ್ತರ ಎದುರು ತಾವು ಬರೆದಿರುವ ಅಪ್ರಕಟಿತ ಪೋಲಿ ಪದ್ಯಗಳನ್ನು ವಾಚಿಸುವುದುಂಟು. ಬಹುಶಃ ಇದು ಅವರ ಗೆಳೆಯರಾಗಿದ್ದ ಎಚ್.ಎಸ್. ಬಿಳಿಗಿರಿಯವರ ಸಹವಾಸ ಫಲವಿರಬೇಕು.

ಒಂದೇ ವ್ಯಕ್ತಿತ್ವದಲ್ಲಿ ಒಟ್ಟಿಗೇ ಇರಲು ಕಷ್ಟವೆನಿಸಬಹುದಾದ ಇನ್ನೂ ಅನೇಕ ಸಂಗತಿಗಳು ಅವರಲ್ಲಿ ಸಹಜವಾಗಿ ನಿರಾಳವಾಗಿ ಇವೆ. ಉದಾ.ಗೆ, ಬಹುಭಾಷಿಕರಾದ ಅವರ ಮನೆಮಾತು ತಮಿಳುಗನ್ನಡ; ಬರವಣಿಗೆ ಕನ್ನಡ ಮತ್ತು ಇಂಗ್ಲೀಶಿನಲ್ಲಿ; ಸಂಸ್ಕೃತ ಅಸ್ಸಾಮಿ ಬಂಗಾಳಿ ಭಾಷೆಗಳಲ್ಲಿ ದೊಡ್ಡ ವಿದ್ವತ್ತು. (ಅವರ ಅಸ್ಸಾಮಿ ಬಂಗಾಳಿ ತಿಳಿವಳಿಕೆಯಿಂದ ಕನ್ನಡಕ್ಕೆ ಪ್ರಯೋಜನವಿನ್ನೂ ಆಗಿಲ್ಲ). ಪಂಪ ಅವರ ಇಷ್ಟದ ಕವಿ. ಮೂಲತಃ ಇಂಗ್ಲೀಶ್ ಸಾಹಿತ್ಯದ ವಿದ್ಯಾರ್ಥಿಯಾದರೂ ಸಾಹಿತ್ಯಕ್ಕಿಂತ ಹೆಚ್ಚಾಗಿ ಅಂತರಾಷ್ಟ್ರೀಯ ರಾಷ್ಟ್ರೀಯ ರಾಜಕಾರಣದ ಮೇಲೆ ಹೆಚ್ಚು ಬರೆವಣಿಗೆ. ಅದರಲ್ಲೂ ಈಶಾನ್ಯ ಭಾರತದ ರಾಜಕಾರಣ ಭಾಷೆ ಧರ್ಮ ಸಂಸ್ಕೃತಿ ಕುರಿತ ಅವರ ತಿಳಿವಳಿಕೆ ಅಪರೂಪದ್ದು. ಇವನ್ನೆಲ್ಲ ಒಟ್ಟಿಗೆ ಹೇಗೆ ಕಲ್ಪಿಸಿಕೊಳ್ಳುವುದು? ಪ್ರಭಾಕರ ತಮ್ಮ ಕಾದಂಬರಿಯ ಒಂದು ಪಾತ್ರದ ಹಾಗೇ ಬದುಕಿದ್ದಾರೆ.

ಅವರು ಈಚೆಗೆ ಮಾತಾಡುತ್ತ ಕೊಂಚ ದಣಿದ ದನಿಯಲ್ಲಿ “ಸ್ವಾಮಿ, ಕರ್ನಾಟಕ ನನಗೆ ಸಾಕಾಗಿದೆ. ಗೌಹಾಟಿಗೆ ಹೋಗಬೇಕು ಅನಿಸುತ್ತಿದೆ’ ಎಂದು ಗೊಣಗಿದರು. “ಹೋಗಿ. ಆದರೆ ಮತ್ತೆಬನ್ನಿ’’ ಎಂದೆ. ಅವರಲ್ಲಿ ಕೋಲಾರ-ಗೌಹಾತಿಗಳ ನಡುವೆ ವಿಚಿತ್ರವಾದ ಆಕರ್ಷಣೆ ವಿಕರ್ಷಣೆಯಿದೆ. ಇದು ಬಹುಕಾಲ ಬೇರೆಡೆ ಬೆಳೆದ ಮರ ತನ್ನ ಮೂಲನೆಲಕ್ಕೆ ಬಂದು ನಾಟಿಗೊಂಡರೆ ಬೇರೂರುವ ಕಷ್ಟ. ಮರಳಿ ಹುಟ್ಟಿದೂರಿಗೆ ಬರುವಿಕೆ ಬಾಲ್ಯದ ನೆನಪುಗಳನ್ನು ಎಚ್ಚರಿಸಿ ಸುಖ ಕೊಡುತ್ತದೆ; ಆದರೆ ಹೊಚ್ಚ ಹೊಸತೆೆನಿಸುವಷ್ಟು ಬದಲಾಗಿರುವ ಪರಿಸರವು, ಕಾಡುವ ಏಕಾಂಗಿತನವನ್ನೂ ತಂದಿಡುತ್ತದೆ. ಯಾರ ಮರುಕವನ್ನೂ ಬಯಸದೆ ಏಕಾಂತದಲ್ಲಿ ಘನತೆಯಿಂದ ಕೊನೆಯ ದಿನಗಳನ್ನು ಕಳೆಯ ಬಯಸುವ ಇಂತಹ ಹಠಮಾರಿ ಜೀವಗಳು, ಒಳಗೇ ಮೃದ್ವಂಗಿಗಳಾಗಿ ಆಪ್ತಸಂಗಾತಕ್ಕೆ ಹಾತೊರೆಯುತ್ತಿರುತ್ತವೆ.

ಆ ಸಂಗಾತದ ಸ್ವರೂಪ ಎಂತಹುದು ಎಂದು ಸ್ಪಷ್ಟವಾಗುವುದಿಲ್ಲ. ನಾನು ‘ಕಾಮರೂಪಕ್ಕೆ ಯಾವಾಗ ಹೋಗುತ್ತೀರಿ’ ಎಂದು ಕೇಳಿದೆ: ‘ಆದಿಮದ 50ನೇ ಬೆಳುದಿಂಗಳ ಕಾರ್ಯಕ್ರಮ ಮುಗಿಸಿಕೊಂಡು’ ಎಂದರು.
ಪ್ರತಿಯೊಬ್ಬರಿಗೂ ಬಾಳಿನಲ್ಲಿ ಬಹುರೂಪಧಾರಣೆ ಮಾಡಬೇಕಾದ ಒತ್ತಡಗಳು ಎದುರಾಗಬಹುದು. ಆದರೆ ಈ ರೂಪಧಾರಣೆಗೆ ಕಾರಣ, ನಮ್ಮ ಇಚ್ಛಾನಿಚ್ಛೆಗಳು ಮಾತ್ರವಲ್ಲ, ಬಾಳಿನ ಅನೂಹ್ಯ ಒತ್ತಡಗಳು ಸಹ. ಈ ಒತ್ತಡಗಳು ಬರೆಹ ಇಲ್ಲವೇ ಮಾತಿನ ವ್ಯಾಖ್ಯಾನಕ್ಕೆ ಕೆಲವೊಮ್ಮೆ ನಿಲುಕುವಂತೆ ಇರುವುದಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ11 hours ago

ಒಡಿಶಾ ರೈಲು ದುರಂತ; 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮನ

ಸುದ್ದಿದಿನ, ಬೆಂಗಳೂರು: ಒಡಿಶಾದ ರೈಲು ದುರಂತದಲ್ಲಿ ಪಾರಾದ 80ಕ್ಕೂ ಹೆಚ್ಚು ಕನ್ನಡಿಗರು ವಿಮಾನದ ಮೂಲಕ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾರ್ಮಿಕ ಸಚಿವ...

ದಿನದ ಸುದ್ದಿ12 hours ago

ರೈತರಿಂದ ಖರೀದಿಸುವ ಹಾಲಿನ ದರ ಕಡಿಮೆ ಮಾಡುವಂತಿಲ್ಲ : ಸಿಎಂ ಸಿದ್ದರಾಮಯ್ಯ ಸೂಚನೆ

ಸುದ್ದಿದಿನ, ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಮೂಲ್...

ಲೈಫ್ ಸ್ಟೈಲ್20 hours ago

ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!

ಸಂಜಯ್ ಹೊಯ್ಸಳ ಕೆನ್ನಾಯಿಗಳು ಕಾಡಿನ ಬೇಟೆಗಾರ ಪ್ರಾಣಿಗಳಲ್ಲಿ ಅತ್ಯಂತ ನಿಷ್ಣಾತ, ಅತ್ಯಂತ ಯಶಸ್ವಿ ಬೇಟೆಗಾರ ಪ್ರಾಣಿಗಳು. ಅತ್ಯಂತ ಬಲಶಾಲಿ ಪ್ರಾಣಿಯಾದ ಹುಲಿಗಳ ಬೇಟೆಯ ಯಶಸ್ಸಿನ ಸರಾಸರಿಯೆ ಕೇವಲ...

ದಿನದ ಸುದ್ದಿ20 hours ago

ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ

ಸುದ್ದಿದಿನ ಡೆಸ್ಕ್ : ಕೋಲ್ಕತಾದ ಹೌರಾದಲ್ಲಿ ಸಿಲುಕಿರುವ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರ್ನಾಟಕಕ್ಕೆ ಕರೆ ತರಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಇಂದು ಬೆಳಗ್ಗೆ ವಿಶೇಷ...

ದಿನದ ಸುದ್ದಿ23 hours ago

ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ಕ್ರೀಡಾಪಟುಗಳ ಆಯ್ಕೆ

ಸುದ್ದಿದಿನ,ದಾವಣಗೆರೆ: ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಆಯ್ಕೆಯಾಗಿರುವರು. ಜೂನ್.6 ರಿಂದ 12ರ ವರೆಗೆ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎಸ್.ಜಿ.ಎಫ್.ಐ. 19 ವರ್ಷದೊಳಗಿನ...

ದಿನದ ಸುದ್ದಿ23 hours ago

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ

ಸುದ್ದಿದಿನ,ದಾವಣಗೆರೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜೂನ್ 5 ಮತ್ತು 6 ರಂದು...

ದಿನದ ಸುದ್ದಿ23 hours ago

ಜೂನ್ 8 ರಿಂದ ಕೋಳಿ ಸಾಕಾಣಿಕೆ ತರಬೇತಿ ಶಿಬಿರ

ಸುದ್ದಿದಿನ,ದಾವಣಗೆರೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜೂನ್ 8 ಮತ್ತು 9 ರಂದು 25...

ದಿನದ ಸುದ್ದಿ24 hours ago

ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಜೂನ್ 5 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 5 ರಂದು ಮಧ್ಯಾಹ್ನ 12.15 ಕ್ಕೆ ಹೆಲಿಕ್ಯಾಪ್ಟರ್ ಮೂಲಕ...

ದಿನದ ಸುದ್ದಿ2 days ago

ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2023-24ನೇ ಸಾಲಿನ 2 ವರ್ಷದ ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು www.schooleducation.kar.nic.in ನಲ್ಲಿ ಡೌನ್‍ಲೋಡ್ ಮಾಡಿಕೊಂಡು ನಿಗದಿತ...

ದಿನದ ಸುದ್ದಿ2 days ago

ದಾವಣಗೆರೆ | ಶತಮಾನದ ಕೆ.ಆರ್.ಪೇಟೆ ಸರ್ಕಾರಿ ಶಾಲೆಗೆ ಡಿಸಿ ಶಿವಾನಂದ ಕಾಪಶಿ ಭೇಟಿ ; ಕಟ್ಟಡದ ಗುಣಮಟ್ಟದ ವರದಿ ನೀಡಲು ಇಂಜಿನಿಯರ್‍ಗೆ ಸೂಚನೆ

ಸುದ್ದಿದಿನ,ದಾವಣಗೆರೆ : ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಿಸಲಾದ ದಾವಣಗೆರೆ ಕೆ.ಆರ್.ಪೇಟೆ ಸರ್ಕಾರಿ ಮಾಧ್ಯಮಿಕ ಶಾಲೆಗೆ ಶುಕ್ರವಾರ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ ಪರಿಶೀಲಿಸಿದರು. ಈ ಶಾಲೆಯನ್ನು ನಿರ್ಮಿಸಿ...

Trending