ರಾಜಕೀಯ
ರಾಜಕೀಯ ವಿವಾದೋದ್ಯಮ: ಪ್ರತಿರೋಧದ ಹಾದಿ
ಏರ್ಪಡುವ ಘಟನಾವಳಿಗಳು ಮತ್ತು ಅಭಿವ್ಯಕ್ತ ವಿಚಾರಗಳು ವಿವಾದದ ಸ್ವರೂಪ ಪಡೆದು ಪ್ರಚಲಿತ ವಿದ್ಯಮಾನಗಳ ಆವರಣ ಕಲುಷಿತಗೊಂಡಿರುವ ಸಂದರ್ಭ ಈಗಿನದು. ಒಬ್ಬೊಬ್ಬರು ತಮ್ಮ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳುವುದಕ್ಕೆ ವಿವಾದಗಳನ್ನು ಬಳಸಿಕೊಳ್ಳುವುದರ ಕಡೆಗೇ ಗಮನ ಹರಿಸುತ್ತಿದ್ದಾರೆ. ಈ ಬಗೆಯ ಹಿತಾಸಕ್ತಿ ರಕ್ಷಣೆಯ ಸ್ವಾರ್ಥಪರ ನಡೆಗಳನ್ನು ರಾಷ್ಟ್ರ ರಾಜಕಾರಣ ಅತ್ಯಂತ ಚಾಣಾಕ್ಷಯುತವಾಗಿ ಪೋಷಿಸುತ್ತಿದೆ. ಪ್ರಾದೇಶಿಕ ವೈವಿಧ್ಯತೆ ಮತ್ತು ಸಾಂಸ್ಕøತಿಕ ಪರಂಪರೆಯ ಉದಾತ್ತತೆಯನ್ನು ಒಡೆದು ಆಕ್ರಾಮಕವೆನ್ನಿಸುವ ಸಮೂಹ ವರ್ತನಾ ಧಾಟಿಯನ್ನು ನಿರ್ದೇಶಿಸುತ್ತಿದೆ. ತನ್ನೊಳಗಿನ ಸಂಕುಚಿತತೆಯನ್ನು ಸಾಮಾಜಿಕವಾಗಿಸಿ ಜನಸಮೂಹದೊಳಗೆ ಬೆರೆಸಿಬಿಡುವ ಅದರ ಕಾರ್ಯಸೂಚಿ ಈಗಾಗಲೇ ಅಭೂತಪೂರ್ವ ಯಶಸ್ಸು ಪಡೆದಿದೆ. ಮತ್ತೆ ಮತ್ತೆ ಯಶಸ್ಸು ಪಡೆಯುವುದರ ಗಮ್ಯದ ಕಡೆಗೇ ಚಲಿಸುತ್ತಲೇ ಇದೆ. ಇದನ್ನು ದೃಢೀಕರಿಸುವಂತೆ ಜನವರ್ಗವು ಅಧಿಕಾರದಲ್ಲಿರುವವರನ್ನು ಆರಾಧಿಸುತ್ತಾ ತಮ್ಮ ಪ್ರಜ್ಞೆಯನ್ನು ಆಳ್ವಿಕೆಯ ಪಾದಕ್ಕರ್ಪಿಸಿಬಿಟ್ಟಿದೆ.
ದೇಶವೊಂದರ ರಾಜಕಾರಣವು ಜನಸಮೂಹವನ್ನು ಸರಿದಾರಿಯಲ್ಲಿರುವಂತೆ ನೋಡಿಕೊಳ್ಳುವ ನಾಯಕತ್ವವನ್ನು ಪೋಷಿಸಬೇಕು. ಹಾಗೆ ಪೋಷಿಸುತ್ತಲೇ ರಾಜಕೀಯಕ್ಕೆ ಉದಾತ್ತ ತಾತ್ವಿಕತೆಯ ಗುಣಲಕ್ಷಣದ ಸಂಸ್ಕಾರವನ್ನು ಒದಗಿಸಬೇಕು. ಆಡಳಿತಾರೂಢ ಸರ್ಕಾರವನ್ನು ಪ್ರತಿನಿಧಿಸುವ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ಸಂವಾದಾತ್ಮಕ ನಂಟು ಜನರ ಪ್ರಜ್ಞೆಯನ್ನು ಎತ್ತರಿಸುವ ರೀತಿಯಲ್ಲಿ ರೂಪುಗೊಳ್ಳುತ್ತಿರಬೇಕು. ಈ ನಂಟು ಅಪವಿತ್ರವಾಗಿರದೇ ದೇಶದ ಬೆಳವಣಿಗೆಯ ಹೆಜ್ಜೆಗಳನ್ನು ಸ್ಪಷ್ಟಪಡಿಸಿಕೊಳ್ಳುವುದಕ್ಕೆ ನೆರವಾಗುವಂತಿರಬೇಕು. ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ತಾರ್ಕಿಕ ಪರಿಹಾರ ಕಂಡುಕೊಳ್ಳುವ ಉತ್ಸಾಹದೊಂದಿಗೆ ಮುಂದಡಿಯಿಡಬೇಕು. ಸಮಸ್ಯೆಗಳನ್ನು ಜೀವಂತವಾಗಿಟ್ಟು ಅವುಗಳ ಆಧಾರದಲ್ಲಿ ಅಧಿಕಾರದ ಬೆಳೆ ತೆಗೆಯುವ ಅಪೇಕ್ಷೆಗಳು ವಿವಾದಗಳನ್ನು ಸೃಷ್ಟಿಸುವುದಕ್ಕಷ್ಟೇ ಬಳಕೆಯಾಗುತ್ತವೆ. ದೇಶಕ್ಕೆ ಪ್ರಯೋಜನವಾಗುವುದಿಲ್ಲ. ಜನರ ಒಳಿತಿನ ದೃಷ್ಟಿಯಿಂದಲೂ ಅವು ಅಪಾಯಕಾರಿ. ಈ ಹಂತದಲ್ಲಿಯೇ ಅವು ವಾಣಿಜ್ಯಿಕ ಹಿತಾಸಕ್ತಿಗಳನ್ನು ಪೋಷಿಸುವಂಥ ಉದ್ಯಮಗಳ ನಿರೀಕ್ಷೆಗಳನ್ನು ಈಡೇರಿಸುವ ಮೂಲಗಳಾಗುತ್ತವೆ. ರಾಜಕಾರಣವನ್ನು ವಿವಾದೋದ್ಯಮವಾಗಿಸುತ್ತವೆ. ಸದ್ಯದ ವಿದ್ಯಮಾನಗಳು ಈ ವಿಲಕ್ಷಣತೆಯನ್ನು ದೃಢೀಕರಿಸುತ್ತಿವೆ.
ಇದನ್ನು ಇನ್ನಷ್ಟು ಸ್ಪಷ್ಟಪಡಿಸಿಕೊಳ್ಳುವುದಕ್ಕೆ ಆಡಳಿತಾರೂಢ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡೆಗಳನ್ನು ನಿದರ್ಶನಗಳನ್ನಾಗಿ ಚರ್ಚಿಸಬಹುದು. ಭಾರತದಲ್ಲಿ ಕಾಂಗ್ರೆಸ್, ಭಾರತೀಯ ಜನತಾ ಪಕ್ಷ ಎಂಬ ಎರಡು ರಾಷ್ಟ್ರೀಯ ಪಕ್ಷಗಳಿವೆ. ವಿವಿಧ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಅಸ್ತಿತ್ವದಲ್ಲಿವೆ. ಇತ್ತೀಚಿಗಿನ ಚುನಾವಣೆಗಳಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ ವ್ಯಾಪಕವಾಗಿ ಸಮ್ಮಿಶ್ರ ಸರ್ಕಾರದ ಪ್ರಯೋಗಗಳು ಮುಂಚೂಣಿಗೆ ಬಂದಿವೆ. ಮೈತ್ರಿ ಸರ್ಕಾರದ ಹೆಜ್ಜೆಗಳ ನಡಿಗೆಯ ದ್ವಂದ್ವಗಳೂ ಅರಿವಿಗೆ ಬಂದಿವೆ. ರಾಷ್ಟ್ರೀಯ ಪಕ್ಷಗಳೆರಡೂ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರುವ ತಮ್ಮೊಳಗಿನ ಹಂಬಲಗಳನ್ನು ಹತ್ತಿಕ್ಕಿಕೊಂಡು ಅವುಗಳ ನೆರವಿನ ಹಸ್ತವನ್ನು ಜೊತೆಗಿಟ್ಟುಕೊಂಡೇ ಮುನ್ನಡೆಯಬೇಕಾದ ಅನಿವಾರ್ಯತೆಯನ್ನು ಮನಗಂಡಿವೆ. ಇದರ ಮಧ್ಯೆಯೇ ಭಾರತೀಯ ಜನತಾಪಕ್ಷವು ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಪಡೆದು ಕೇಂದ್ರದಲ್ಲಿ ಅಧಿಕಾರ ಹಿಡಿದ ನಂತರವೂ ಮಿತ್ರಪಕ್ಷಗಳನ್ನು ಜೊತೆಗಿರಿಸಿಕೊಂಡು ಎನ್ಡಿಎ (ನ್ಯಾಷನಲ್ ಡೆಮಾಕ್ರೆಟಿಕ್ ಅಲಯನ್ಸ್) ಬಂಧವನ್ನು ಚಾಲ್ತಿಯಲ್ಲಿರಿಸಿಕೊಂಡಿದೆ. ಕಾಂಗ್ರೆಸ್ ಕೂಡಾ ಯುಪಿಎ (ಯುನೈಟೆಡ್ ಪ್ರೊಗ್ರೆಸ್ಸಿವ್ ಅಲಯನ್ಸ್) ಎಂಬ ಮೈತ್ರಿಕೂಟವನ್ನು ನೆಚ್ಚಿಕೊಂಡು ಚುನಾವಣಾ ಅಖಾಡಕ್ಕಿಳಿಯುತ್ತಿದೆ. ಇದೀಗ ಎಲ್ಲ ಪಕ್ಷಗಳೂ ಒಗ್ಗೂಡಿ ತೃತೀಯ ಶಕ್ತಿಯನ್ನು ರೂಪಿಸಿ ಎನ್.ಡಿ.ಎಯನ್ನು ಮಣಿಸುವ ಪ್ರಯತ್ನಗಳಲ್ಲಿ ನಿರತವಾಗಿವೆ.
ರಾಷ್ಟ್ರೀಯ ಪಕ್ಷಗಳನ್ನು ಅಲ್ಲಗಳೆದು ಅಸ್ತಿತ್ವಕ್ಕೆ ಬಂದ ಪ್ರಾದೇಶಿಕ ಪಕ್ಷಗಳು ಭಿನ್ನ ಹಾದಿಯನ್ನೇನೂ ತುಳಿಯಲಿಲ್ಲ. ಹಿಂದಿನ ರಾಜಕಾರಣದ ಸಾಂಪ್ರದಾಯಿಕ ಸಂಕುಚಿತತೆಯನ್ನೇ ಮತ್ತಷ್ಟು ವಿಸ್ತರಿಸಿದವು. ಅವುಗಳ ಹೆಸರುಗಳು ಉದಾತ್ತತೆಯ ಅರ್ಥವನ್ನು ಧ್ವನಿಸಿದರೂ ಮಾಡಿದ್ದೆಲ್ಲವೂ ಸಂಕುಚಿತ ರಾಜಕಾರಣ. ರಾಜ್ಯಗಳ ನಡುವಿನ ಸೌಹಾರ್ದದ ಬಂಧವನ್ನು ಒಡೆಯುವ ಹಾಗೆ ಭಾಷಿಕ ಮೂಲಭೂತವಾದಿತ್ವವನ್ನೇ ಬಂಡವಾಳವಾಗಿಸಿಕೊಂಡು ಮತಬೆಳೆ ದಕ್ಕಿಸಿಕೊಳ್ಳುವ ಪ್ರಯತ್ನಗಳಲ್ಲಿಯೇ ತಲ್ಲೀನವಾದವು. ಜಲವಿವಾದಗಳು ಈ ನೆಲೆಯಲ್ಲಿಯೇ ಹುಟ್ಟಿಕೊಂಡವು. ಬೇರೊಂದು ದೇಶದ ವಿರುದ್ಧದ ಯುದ್ಧಸನ್ನದ್ಧ ಮನಸ್ಥಿತಿ ರಾಷ್ಟ್ರರಾಜಕಾರಣದ ವಿಲಕ್ಷಣ ಗುಣವಾಗುವುದಕ್ಕೆ ಧಾರ್ಮಿಕ ಕೇಂದ್ರಿತ ಸಂಕುಚಿತತೆಯೇ ಕಾರಣ.
ತಮಿಳುನಾಡಿನಲ್ಲಿ ಜನಪ್ರಿಯತೆ ಗಳಿಸಿದ ನಟ-ನಟಿಯರು ತಮ್ಮ ಪ್ರಭಾವವನ್ನು ಅಧಿಕಾರಕೇಂದ್ರಿತ ದೃಷ್ಟಿಕೋನಕ್ಕಾಗಿ ಬಳಸಿಕೊಂಡರು. ಜನಪ್ರಿಯತೆಯ ಸರಕು ಕುಸಿಯುವ ಭೀತಿಯಲ್ಲಿ ವಿವಾದದ ವಿಷ ಹರಡುವ ಕೃಷಿಯಲ್ಲಿ ಖುಷಿ ಕಂಡರು. ಮಹಾರಾಷ್ಟ್ರದ ಪ್ರಾದೇಶಿಕ ರಾಜಕಾರಣವಂತೂ ಅಧಾರ್ಮಿಕ ಮದೋನ್ಮತ್ತ ಭಾವನೆಗಳು ಮತ್ತು ಭಾಷಿಕ ಅಂಧಾಭಿಮಾನದ ವರ್ತುಲದಲ್ಲಿ ಸಿಲುಕಿಕೊಂಡು ಅದೇ ಪರಮ ಮಾದರಿ ಎನ್ನುವಂತೆ ವೈಭವೀಕರಿಸಲ್ಪಟ್ಟಿತು. ಬಿಹಾರದಲ್ಲಂತೂ ಪರ್ಯಾಯ ಪ್ರಾದೇಶಿಕ ಪಕ್ಷದ ಅಸ್ತಿತ್ವ ಜನರ ಉದ್ಧಾರಕ್ಕೆ ಬಳಕೆಯಾಗುವ ಬದಲು ಪ್ರಭಾವೀ ನಾಯಕರೆನ್ನಿಸಿಕೊಂಡವರ ಸಮೃದ್ಧಿಗೆ ಪೂರಕ ವೇದಿಕೆಯನ್ನು ರೂಪಿಸಿಕೊಟ್ಟಿತು. ಆಂಧ್ರದ ಅಸ್ಮಿತೆಯ ಹೆಮ್ಮೆಯ ಭಾವಾವೇಶ ಅಲ್ಲಿಯ ಪ್ರಾದೇಶಿಕ ಪಕ್ಷಗಳು ಚಿಗುರೊಡೆದು ಅಧಿಕಾರ ಹಿಡಿಯುವುದಕ್ಕೆ ನೆರವಾಯಿತು. ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತಿತರ ರಾಜ್ಯಗಳಲ್ಲೂ ಪ್ರಬಲ ತಾತ್ವಿಕತೆಯೊಂದಿಗಿನ ಪರ್ಯಾಯ ಪ್ರಾದೇಶಿಕ ರಾಜಕಾರಣ ರೂಪುಗೊಳ್ಳಲೇ ಇಲ್ಲ. ಮೇಲ್ನೋಟದಲ್ಲಿ ರೂಪುಗೊಂಡಿವೆ ಎಂಬ ಭಾವವನ್ನು ಮೂಡಿಸಿದ ಪಕ್ಷಗಳು ಮತ್ತೆ ರಾಷ್ಟ್ರೀಯ ಪಕ್ಷಗಳ ಆಲದ ಮರಗಳ ನೆರಳನ್ನೇ ನೆಚ್ಚಿಕೊಂಡುಬಿಟ್ಟವು.
ವಿವಿಧ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಅತ್ಯಂತ ಎಚ್ಚರದ ರಕ್ಷಣಾತ್ಮಕ ತಂತ್ರಗಾರಿಕೆಯನ್ನೇ ( Defense Mechanism) ನೆಚ್ಚಿಕೊಂಡು ತಮ್ಮೊಳಗಿನ ಅಧಿಕಾರದಾಹವನ್ನು ಕಾಯ್ದುಕೊಳ್ಳುವಂಥ ರಾಜಿಸ್ವಭಾವಕ್ಕೇ ಪಕ್ಕಾದವು. ಒಂದು ನಿರ್ದಿಷ್ಟ ಉದಾತ್ತ ಸೈದ್ಧಾಂತಿಕ ಆದರ್ಶವಾದಿ ಮಾದರಿಯನ್ನು ಸ್ಥಾಪಿಸಿಕೊಳ್ಳುವ ನಿಟ್ಟಿನಲ್ಲಿ ಅವುಗಳು ಆಲೋಚಿಸಲೇ ಇಲ್ಲ. ಇಬ್ಬರು ಬ್ಯಾಟ್ಸ್ಮನ್ ಅತ್ತ ಔಟ್ ಆಗದೆಯೇ, ಇತ್ತ ರನ್ಗಳನ್ನೂ ಗಳಿಸದೇ ಉಳಿದು ಇಡೀ ತಂಡಸ್ಫೂರ್ತಿಯನ್ನು ಅಂತ್ಯಗೊಳಿಸುವ ಹಾಗೆ ಪ್ರಾದೇಶಿಕ ಪಕ್ಷಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಅತ್ತ ನಿಜದ ಮೌಲಿಕ ರಾಜಕಾರಣವನ್ನೂ ಮಾಡದೇ, ಇತ್ತ ಪರ್ಯಾಯ ರಾಜಕಾರಣದ ವಿನೂತನ ಮಾದರಿಗಳನ್ನೂ ಹುಟ್ಟುಹಾಕದೇ ಮುಂದಡಿಯಿಟ್ಟವು. ಅವು ಭೌತಿಕವಾಗಿ ಜೀವಂತ. ಅಂತಃಸತ್ವದ ದೃಷ್ಟಿಯಿಂದ ಅವು ದುರ್ಬಲ. ಕಾರ್ಯಾನುಷ್ಠಾನದ ನೆಲೆಯಲ್ಲಿ ಅವುಗಳದ್ದು ಶೂನ್ಯಸಂಪಾದನೆ. ರಾಷ್ಟ್ರೀಯ ಪಕ್ಷಗಳಿಗೂ ಮತ್ತು ಪ್ರಾದೇಶಿಕ ಪಕ್ಷಗಳ ನಡುವೆ ಈ ಆಯಾಮದಲ್ಲಿಯೇ ಸಾಮ್ಯತೆಗಳನ್ನು ಗುರುತಿಸಬಹುದು.
ಭಾರತದಂಥ ವೈವಿಧ್ಯತೆಯ ರಾಷ್ಟ್ರದಲ್ಲಿ ರಾಜಕೀಯ ಪಕ್ಷಗಳು ಜನರ ನಾಡಿಮಿಡಿತವನ್ನು ಗ್ರಹಿಸಿಕೊಳ್ಳುವುದು ಅತ್ಯಂತ ಸವಾಲಿನ ಕ್ರಿಯೆ. ನಂಬಿಕೆಯ ಜಗತ್ತು ಒಂದು ಕಡೆ. ಅದೇ ನಂಬಿಕೆಯ ಬಲದಲ್ಲಿ ಮೌಢ್ಯ ಬಿತ್ತುವ ಹುನ್ನಾರಿಗಳೊಂದಿಗಿನ ಪ್ರಬಲ ಸಾಮಾಜಿಕ ವ್ಯವಸ್ಥೆ ಮತ್ತೊಂದು ಕಡೆ. ಇವೆರಡರ ನಡುವೆ ಪಕ್ಷಗಳು ಮತ್ತು ನಾಯಕರು ತಮ್ಮನ್ನು ಪ್ರತಿಷ್ಠಾಪಿಸಿಕೊಳ್ಳುವ ಅನಿವಾರ್ಯತೆಯ ಬಿಕ್ಕಟ್ಟು. ಈ ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ವಿಫಲವಾಗಿದ್ದೇ ಸದ್ಯದ ಎಲ್ಲ ವಿಕೃತಿಗಳಿಗೆ ಕಾರಣ. ಶೈಕ್ಷಣಿಕ ಅರ್ಹತೆಗಳ ನೆರವಿನೊಂದಿಗೆ ಪ್ರತಿಯೊಬ್ಬ ಪ್ರಜೆಗಳ ವ್ಯಕ್ತಿಗತ ಸಾಮಥ್ರ್ಯವನ್ನು ವಿವೇಚನಾತ್ಮಕ ಬೌದ್ಧಿಕತೆಗೆ ತಿರುಗಿಸುವ ದಾರ್ಶನಿಕ ಹೊಣೆಗಾರಿಕೆ ನಿಭಾಯಿಸಬೇಕಿದ್ದ ನಾಯಕತ್ವವು ಸಮಾಜದ ಸಾಂಪ್ರದಾಯಿಕ ಜಾಡ್ಯಗಳ ಕೈಗೊಂಬೆಯಾಗಿದ್ದರಿಂದ ಪಕ್ಷಗಳ ಬಹುಮುಖೀ ಶಕ್ತಿ ಸಾಬೀತಾಗಲೇ ಇಲ್ಲ. ಸದ್ಯದ ಸ್ಥಿತಿ ಹೇಗಿದೆ ಎಂದರೆ ಅಧಿಕಾರದಲ್ಲಿರುವವರನ್ನು ಕೆಳಗಿಳಿಸಲು ಸಾಮಾಜಿಕ ಸಂಘರ್ಷಗಳನ್ನೇ ಪ್ರಬಲ ಅಸ್ತ್ರಗಳನ್ನಾಗಿಸಿಕೊಳ್ಳುವ ಪಕ್ಷಗಳ ರಹಸ್ಯ ಕಾರ್ಯಸೂಚಿ ನಡೆಗಳೇ ನಿರ್ಣಾಯಕವಾಗಿವೆ. ಇವುಗಳನ್ನೇ ಪರಿಹಾರೋಪಾಯ ಎಂದುಕೊಳ್ಳಬೇಕೇ, ಅಥವಾ ತಿರಸ್ಕರಿಸಬೇಕೇ ಎಂಬ ದ್ವಂದ್ವಗಳಲ್ಲಿ ಜನರು ಸಿಲುಕಿದ್ದಾರೆ.ಪ್ರತಿರೋಧವನ್ನೊಡ್ಡಿದವರ ತೇಜೋವಧೆಗೈದು ಕಾನೂನು ಬಲಪ್ರಯೋಗದೊಂದಿಗೆ ಧ್ವನಿ ಹತ್ತಿಕ್ಕುವ ಆಡಳಿತಾತ್ಮಕ ವರ್ತನೆಗಳು ಪ್ರಜಾಪ್ರಭುತ್ವದ ಸಾಧ್ಯತೆಗಳನ್ನೇ ಮೊಟಕುಗೊಳಿಸುತ್ತಿವೆ. ಈ ಹಂತದಲ್ಲಿ ಜನರೊಳಗಿಂದಲೇ ಸಕಾರಾತ್ಮಕ ಧ್ವನಿ ಹೊಮ್ಮಬೇಕಾಗುತ್ತದೆ. ಇದಕ್ಕೂ ಮುನ್ನ ಜನರಿಗೆ ಕೆಲವು ಸತ್ಯಗಳು ಗೊತ್ತಾಗಬೇಕು. ಗೊತ್ತಾಗುವಂತೆ ಪ್ರಾಜ್ಞವಲಯ ಹಿಂದೆಂದಿಗಿಂತಲೂ ಹೆಚ್ಚಿನ ಶ್ರದ್ಧೆಯೊಂದಿಗೆ ಶ್ರಮಿಸಬೇಕು. ವಿವಿಧ ಪಕ್ಷಗಳ ನಾಯಕರು ಅಧಿಕಾರದಲ್ಲಿರಲಿ, ಇಲ್ಲದಿರಲಿ, ತಮ್ಮದೇ ಆದ ಪ್ರಭಾವಳಿಯೊಂದಿಗೆ ಅಸ್ತಿತ್ವವನ್ನು ಕಾಯ್ದುಕೊಂಡಿರುತ್ತಾರೆ. ಭ್ರಷ್ಟಾಚಾರ ಮತ್ತಿತರ ಅಕ್ರಮದ ಹಾದಿಯಲ್ಲಿ ಸಮಾನಮಸ್ಕರಾಗಿರುತ್ತಾರೆ. ಸಂಘರ್ಷಗಳಿಗೆ ಜನರನ್ನೇ ದಾಳಗಳನ್ನಾಗಿಸುತ್ತಾರೆ. ಪರಸ್ಪರ ಕೆಸೆರೆರಚಾಟದೊಂದಿಗೆ ಧರ್ಮಾಂಧ ನಡೆಗಳೊಂದಿಗೆ ಗುರುತಿಸಿಕೊಳ್ಳುವ ಜಾಯಮಾನವನ್ನೇ ಶಾಶ್ವತ ಗುಣಲಕ್ಷಣವಾಗಿಸಿಕೊಳ್ಳುವ ಹಾದಿಹಿಡಿದಿರುತ್ತಾರೆ. ಒಂದು ಪಕ್ಷದವರು ಅಧಿಕಾರದಲ್ಲಿದ್ದಾಗ ಮತ್ತೊಬ್ಬರು ತಾರ್ಕಿಕ ಆಂದೋಲನವನ್ನು ಕಟ್ಟುವ ಬದಲು ಸಂಕುಚಿತತೆಯೊಂದಿಗಿನ ವಿತಂಡವಾದಿ ಹೇಳಿಕೆಗಳು ಮತ್ತು ಸಮಾಜವನ್ನು ಯಥಾಸ್ಥಿತಿಯಲ್ಲಿಡುವಂಥ ಹುನ್ನಾರದ ಹೆಜ್ಜೆಗಳೊಂದಿಗೆ ಗುರುತಿಸಿಕೊಂಡು ಯಾಂತ್ರಿಕ ವಿರೋಧದ ನಾಟಕವಾಡುತ್ತಾರೆ.
ಹಾಗೆ ನಾಟಕವಾಡುತ್ತ ಜನರಿಗೆ ಹತ್ತಿರ ಎಂದು ಬಿಂಬಿಸಿಕೊಳ್ಳುತ್ತಾ ಮುಂದೊಂದು ದಿನ ಅಧಿಕಾರಕ್ಕೆ ಬಂದು ಅವರೂ ಹಿಂದಿನವರಂತೆಯೇ ನಿರ್ಲಕ್ಷ್ಯ ಧೋರಣೆಗಳೊಂದಿಗೇ ಮುಂದಡಿಯಿಟ್ಟು ಇಡೀ ಸಮಾಜವನ್ನು ಸ್ಥಗಿತತೆಯ ಅಪಾಯಕ್ಕೆ ಸಿಲುಕಿಸಿಬಿಡುತ್ತಾರೆ. ಜನರು ಅವರ ಈ ನಡೆಗಳನ್ನು ಪ್ರಶ್ನಿಸುವಂತಾಗಬೇಕು. “ನೀವು ವಿತಂಡವಾದಿ ಸಂಕುಚಿತತೆಯೊಂದಿಗೆ ಇರಬೇಡಿ. ಸಂಘರ್ಷದ ಮಾತುಗಳನ್ನಾಡಬೇಡಿ. ಒಂದಾಗಿರುವ ನಮ್ಮ ನಡುವೆ ಗೋಡೆಗಳನ್ನು ಕಟ್ಟಬೇಡಿ. ಆ ಗೋಡೆಗಳ ಮೇಲೆ ರಾಜಕಾರಣದ ಅಟ್ಟಹಾಸ ಮೆರೆಯಬೇಡಿ.
ಧರ್ಮ, ಜಾತಿ ನೆಲೆಗಳಲ್ಲಿ ಅಮಾನವೀಯಗೊಳ್ಳುವ ವ್ಯಕ್ತಿಗತ ಮನಸ್ಥಿತಿಯನ್ನು ತಪ್ಪಿಸಿ ಮನುಷ್ಯತ್ವದ ಗಮ್ಯದ ಕಡೆಗೆ ಸಾಮಾಜಿಕ ಚಲನೆ ಇರುವಂತೆ ನೋಡಿಕೊಳ್ಳಿ. ಈ ದೇಶದಲ್ಲಿ ಮನುಷ್ಯಪರ ಮತ್ತು ಜೀವಪರ ಬೆಳವಣಿಗೆಯ ಹೆಜ್ಜೆಗಳನ್ನು ಪೋಷಿಸುವುದರ ಕಡೆಗೆ ಗಮನಹರಿಸಿ. ಸುಳ್ಳುಗಳನ್ನು ಹೇಳಿ ನಮ್ಮನ್ನು ಯಾಮಾರಿಸುವುದನ್ನು ನಿಲ್ಲಿಸಿ. ಮಾಧ್ಯಮಗಳನ್ನು ಸಾಕಿಕೊಂಡು ಅವುಗಳ ಮೂಲಕ ನಮ್ಮನ್ನು ದಾರಿತಪ್ಪಿಸಬೇಡಿ. ನಿಮ್ಮನ್ನು ಪ್ರಶ್ನಿಸುವವರ ಒಡಲಾಳದ ನೋವುಗಳನ್ನು ಅರ್ಥೈಸಿಕೊಳ್ಳುವ ಅಂತಃಕರಣ ಪ್ರದರ್ಶಿಸಿ. ಎಲ್ಲಕ್ಕಿಂತ ಹೆಚ್ಚಾಗಿ ನೀವೂ ಮನುಷ್ಯರಾಗಿ. ನಮ್ಮನ್ನೂ ಮನುಷ್ಯರಾಗಿಯೇ ಉಳಿಯುವುದಕ್ಕೆ ಅವಕಾಶ ಮಾಡಿಕೊಡಿ. ಇಡೀ ದೇಶದೊಳಗೆ ನಿಜವಾದ ದೇಶಪ್ರೇಮದ ಬೆಳೆ ತೆಗೆಯಿರಿ. ಅದರೊಂದಿಗೆ ಪ್ರತಿಯೊಬ್ಬರ ಬದುಕಿನ ಸಮೃದ್ಧಿಯ ಸಾಧ್ಯತೆಗಳನ್ನು ವಿಸ್ತರಿಸಿರಿ” ಎಂದು ನಾವೆಲ್ಲರೂ ಒಕ್ಕೊರಲ ಧ್ವನಿಯೊಂದಿಗೆ ಸ್ಪಷ್ಟ ಸಂದೇಶ ಸಾರಬೇಕಿದೆ. ಹುನ್ನಾರಗಳೊಂದಿಗಿನ ರಾಜಕಾರಣದ ವಿವಾದೋದ್ಯಮವನ್ನು ಹತ್ತಿಕ್ಕಬೇಕಿದೆ. ನಾಯಕರ ಅಧಿಕಾರದಾಹದೊಂದಿಗಿನ ವ್ಯಾವಹಾರಿಕ ಮನೋಧರ್ಮಗಳನ್ನು ಕೊನಗಾಣಿಸಬೇಕಿದೆ.
(-ಡಾ.ಎನ್.ಕೆ.ಪದ್ಮನಾಭ
ಸಹಾಯಕ ಪ್ರಾಧ್ಯಾಪಕರು
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ
ಉಜಿರೆ
ಇ-ಮೇಲ್ :nkpadmanabh@gmail.com)

ದಿನದ ಸುದ್ದಿ
ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಆದ್ಯತೆ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಚಿವರಾಗಿ ಆಯ್ಕೆಯಾದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮ ಮನೆಮಾಡಿತು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಬಸವಂತಪ್ಪ ಅವರ ನಿವಾಸದ ಎದುರು ಬೆಳಗ್ಗಿನಿಂದಲೇ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿ ಅಭಿನಂದನೆ ಸಲ್ಲಿಸಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರೆ, ಯುವಕರು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.
ಕೆ.ಎಸ್. ಬಸವಂತಪ್ಪ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ರೈತರ ಸಮಸ್ಯೆಗಳು, ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಕಾರಣದಿಂದಲೇ ಅವರಿಗೆ ಸಚಿವ ಸ್ಥಾನ ದೊರೆತಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಮಾಯಕೊಂಡ ಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಇಲ್ಲಿ ನೀರಾವರಿ, ರಸ್ತೆ, ಶಿಕ್ಷಣ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಂತಹ ಹಲವು ಸವಾಲುಗಳಿವೆ. ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ. ವಿಶೇಷವಾಗಿ ರೈತರು, ಯುವಕರು ಹಾಗೂ ಮಹಿಳಾ ಸಂಘಟನೆಗಳು ಹೊಸ ಸಚಿವರಿಂದ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ನಿರೀಕ್ಷಿಸುತ್ತಿವೆ.
ಸಚಿವ ಸ್ಥಾನ ಘೋಷಣೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಬಸವಂತಪ್ಪ ಅವರು, “ಈ ಜವಾಬ್ದಾರಿ ನನಗೆ ದೊರೆತಿರುವುದು ವೈಯಕ್ತಿಕ ಗೌರವ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಸಂದ ಗೌರವವಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ಹೇಳಿದರು.
ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳು ಮತ್ತು ಆಸ್ಪತ್ರೆಗಳ ಸೌಲಭ್ಯಗಳ ಸುಧಾರಣೆ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.
ಪಕ್ಷದ ಜಿಲ್ಲಾ ಮುಖಂಡರು ಮಾತನಾಡಿ, ಬಸವಂತಪ್ಪ ಅವರ ಸಚಿವ ಸ್ಥಾನದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳು ಹರಿದು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತಾತ್ಮಕ ಮಟ್ಟದಲ್ಲಿ ಜಿಲ್ಲೆಯ ವಿವಿಧ ಯೋಜನೆಗಳಿಗೆ ವೇಗ ಸಿಗಲಿದ್ದು, ಬಾಕಿ ಉಳಿದಿರುವ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.
ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಹ ಸಚಿವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಬಹುಕಾಲದ ಬೇಡಿಕೆಗಳಾದ ನೀರಾವರಿ ಯೋಜನೆಗಳ ವಿಸ್ತರಣೆ, ಕೈಗಾರಿಕಾ ಹೂಡಿಕೆ, ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ಸುಧಾರಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.
ಸಾಮಾಜಿಕ ಜಾಲತಾಣಗಳಲ್ಲಿಯೂ ಬಸವಂತಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿ, ಸಚಿವರ ಹೊಸ ಜವಾಬ್ದಾರಿ ಯಶಸ್ವಿಯಾಗಲಿ ಎಂದು ಹಾರೈಸಿದರು.
ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ರಾಜ್ಯ ಸಚಿವ ಸಂಪುಟದಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ದೊರೆತಿರುವ ಈ ಪ್ರತಿನಿಧಿತ್ವವು ದಾವಣಗೆರೆ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಚಿವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಾಯಕೊಂಡ ಕ್ಷೇತ್ರದ ಜನರು ಸಚಿವ ಸ್ಥಾನವನ್ನು ಕೇವಲ ರಾಜಕೀಯ ಸಾಧನೆಯಾಗಿ ನೋಡದೇ, ಅಭಿವೃದ್ಧಿಯ ಹೊಸ ಅಧ್ಯಾಯದ ಆರಂಭವಾಗಿ ಪರಿಗಣಿಸುತ್ತಿದ್ದಾರೆ. ಕುಡಿಯುವ ನೀರು, ರಸ್ತೆ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.
ಕೆ.ಎಸ್. ಬಸವಂತಪ್ಪ ಅವರ ಸಚಿವ ಸ್ಥಾನವು ಮಾಯಕೊಂಡ ಕ್ಷೇತ್ರ ಹಾಗೂ ದಾವಣಗೆರೆ ಜಿಲ್ಲೆಗೆ ಹೊಸ ಅವಕಾಶಗಳನ್ನು ತೆರೆದಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರ ಮತ್ತು ಜನರ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಎಲ್ಲ ವಲಯಗಳಲ್ಲೂ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಜಿಲ್ಲೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸಲಿವೆ ಎಂಬ ಅಭಿಪ್ರಾಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.
ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
-
ದಿನದ ಸುದ್ದಿ3 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ದಿನದ ಸುದ್ದಿ20 hours agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


