ನೆಲದನಿ
ರಂಗ ದಾಸೋಹಿ ಪ್ರಭು ಗುರಪ್ಪನವರ : ಬದುಕು ಮತ್ತು ಹೋರಾಟದ ನಡುವೆ
ಮಾನವನ ಉಗಮದೊಂದಿಗೆ ರಂಗಭೂಮಿಯ ನಂಟು ನಿರಂತರವಾಗಿ ನಡೆದುಕೊಂಡು ಬಂದಿದೆ. ಮಾನವನ ವಿಕಾಸವಾದಂತೆ ರಂಗಭೂಮಿಯೂ ಆಯಾ ಕಾಲಕ್ಕೆ ತಕ್ಕಂತೆ ತನ್ನ ಗುಣ ಮತ್ತು ಸ್ವರೂಪಗಳಲ್ಲಿ ಬದಲಾವಣೆಯನ್ನು ಪಡೆದುಕೊಂಡು ಸಾಗಿದೆ. ನಮಗೆ ರಂಗಭೂಮಿ ಎಂದ ತಕ್ಷಣ ನಾಟಕ, ಅಭಿನಯ ಮುಂತಾದ ಸನ್ನಿವೇಶಗಳು ಎದುರಾಗುತ್ತವೆ. ಆದರೆ ತೆರೆಮರೆಯಲ್ಲಿ ನಿಂತು ರಂಗಭೂಮಿಯನ್ನು ಕಟ್ಟಿ ಬೆಳೆಸಿದ ಬಹುತೇಕ ಸಾಧಕರು ಎಲೆ ಮರೆಯಂತಾಗುತ್ತಾರೆ. ಇಂತಹ ರಂಗಭೂಮಿ ತಪಸ್ವಿ ಹಾಗೂ ಹೋರಾಟಗಾರರಲ್ಲಿ ಶೇಷಗಿರಿಯ ಪ್ರಭು ಗುರಪ್ಪನವರು ಒಬ್ಬರಾಗಿದ್ದಾರೆ.
ಹಾವೇರಿ ಜಿಲ್ಲೆ. ಹಾನಗಲ್ ತಾಲ್ಲೂಕಿನ ಶೇಷಗಿರಿ ಎಂಬ ಪುಟ್ಟ ಗ್ರಾಮದಲ್ಲಿ ಶ್ರೀ ಸಿದ್ಧಪ್ಪ ಗುರಪ್ಪನವರ ಹಾಗೂ ಶ್ರೀಮತಿ ಅನಸಮ್ಮ ಗುರಪ್ಪನವರ ಪುತ್ರನಾಗಿ ಜನಿಸಿದ ಪ್ರಭು ಗುರಪ್ಪನವರ ಅವರು ಪಿ.ಯು.ಸಿ ವರೆಗೆ ಶಿಕ್ಷಣವನ್ನು ಪಡೆದು, ನಂತರದ ದಿನಗಳಲ್ಲಿ ಸ್ವಗ್ರಾಮದಲಿ ಪೋಸ್ಟ್ ಮಾಸ್ತರ್ ವೃತ್ತಿಯನ್ನು ಕೈಗೊಂಡರು. ಈ ವೃತ್ತಿಯ ಜೊತೆ ಜೊತೆಯಲ್ಲಿಯೇ ಸಾಮಾಜಿಕ ಜಾಗೃತಿ, ಹೋರಾಟ ಹಾಗೂ ರಂಗಭೂಮಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಬಂದರು. ಇವರಿಗೆ ರಂಗಭೂಮಿಯ ನಂಟು ಬಾಲ್ಯದ ದಿನಗಳಿಂದಲೂ ಪ್ರಭಾವ ಬೀರಿತ್ತು. ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಲ್ಲಿಯೇ ಕೆಲವು ನಾಟಕಗಳಲ್ಲಿ ಅಭಿನಯಿಸುವ ಮೂಲಕವಾಗಿ ಅಭಿನಯ ಕಲೆಯನ್ನು ಕರಗತ ಮಾಡಿಕೊಂಡಿದ್ದರು. ಹೀಗಾಗಿ ಇದು ಮುಂದಿನ ದಿನಗಳಲ್ಲಿ ಇವರನ್ನು ರಂಗಭೂಮಿಯತ್ತ ಮುನ್ನಡೆಸಲು ಪ್ರಚೋದಕ ಶಕ್ತಿಯಾಗಿ ಕಾರ್ಯನಿರ್ವಹಿಸಿತು. ಸಾಮಾಜಿಕ ಅರಿವು ಮೂಡಿಸುವಂತಹ ಬೀದಿ ನಾಟಕಗಳು ಹಾಗೂ ಸಾಮಾಜಿಕ ನಾಟಕಗಳು ಇವರ ಮೇಲೆ ಸಾಕಷ್ಟು ಪ್ರಭಾವ ಬೀರಿದ್ದವು. ಇದರ ಪರಿಣಾಮವಾಗಿ ವೀರಭದ್ರಪ್ಪ ಬಡಿಗೇರ್ ಎಂಬ ನಾಟಕ ಮಾಸ್ತರರ ಒತ್ತಾಸೆಯಿಂದ ಪ್ರಥಮ ಬಾರಿಗೆ ‘ದೀಪಾವಳಿ’ ಎಂಬ ನಾಟಕದಲ್ಲಿ ಪ್ರದರ್ಶನ ನೀಡಿ ಜನ ಮೆಚ್ಚುಗೆಯನ್ನು ಗಳಿಸಿದರು. ಹೀಗೆ ಪ್ರಾರಂಭವಾದ ಇವರ ನಾಟಕ ಯಾತ್ರೆಯು ಹಲವಾರು ನಾಟಕ ಪ್ರಕಾರಗಳಲ್ಲಿ ಇವರನ್ನು ತಲ್ಲಿನಗೊಳಿಸಿತು.
ಶ್ರೀಯುತ ಪ್ರಭು ಗುರಪ್ಪನವರು ನಾಟಕ ಪ್ರಕಾರವನ್ನು ಕೇವಲ ಹವ್ಯಾಸ ಹಾಗೂ ಮನರಂಜನೆಯ ಮಾಧ್ಯಮವಾಗಿ ಸ್ವೀಕರಿಸಲಿಲ್ಲ. ಆ ಮೂಲಕ ಸಾಮಾಜಿಕ ಜಾಗೃತಿ ಹಾಗೂ ಸಾಮಾನ್ಯ ಜನತೆಗೆ ಅರಿವು ಮೂಡಿಸುವ ಮಾಧ್ಯಮವಾಗಿ ಗುರುತಿಸಿಕೊಂಡರು. ತಮ್ಮ ವಿದ್ಯಾಭ್ಯಾಸ ಮುಗಿಸಿ ಸ್ವಗ್ರಾಮಕ್ಕೆ ಮರಳಿದ ತರುವಾಯ 1983 ರಲ್ಲಿ ಪೋಸ್ಟ್ ಮಾಸ್ತರ್ ಹುದ್ಧೆಗೆ ಸೇರಿಕೊಂಡರು. ಇಲ್ಲಿಂದ ಆರಂಭವಾದ ಇವರ ಸೇವೆಯು, ಸಾಮಾಜಿಕ ಸೇವೆಯ ಜೊತೆ ಜೊತೆಯಲ್ಲಿಯೇ ನಾಟಕದ ಯಾತ್ರೆಯು ಆರಂಭವಾಯಿತು. ತಮ್ಮ ಗ್ರಾಮದ ಕೆಲವರ ಹಿತಾಸಕ್ತಿಗೆ ಬಲಿಯಾಗಿ ಸಾಮಾನ್ಯ ಜನತೆಯು ಹಲವಾರು ಶೋಷಣೆಗೆ ಒಳಗಾಗಿದ್ದರು. ಹಾಗೆಯೇ ಇಲ್ಲಿನ ಬಸವೇಶ್ವರ ದೇವಾಲಯದ ಜಾತ್ರೆಯು ಸ್ಥಗಿತಗೊಂಡಿತ್ತು. ಪ್ರಥಮ ಭಾರಿಗೆ ಈ ಗ್ರಾಮದ ಯುವಜನತೆಯನ್ನು ಒಟ್ಟುಗೂಡಿಸಿ ಜಾತ್ರೆಗೆ ಚಾಲನೆ ನೀಡಿದರು. ಆ ಮೂಲಕವಾಗಿ ಗ್ರಾಮದ ಜನತೆಯಲ್ಲಿ ಐಕ್ಯತೆ ಹಾಗೂ ಹೋರಾಟದ ಕೆಚ್ಚು ಮೂಡಿಸಿದರು. ತಮ್ಮ ಗ್ರಾಮದಲ್ಲಿ ಮೊದಲ ಭಾರಿಗೆ ಗಣೇಶ ಚೌತಿಯನ್ನು ಕೂರಿಸುವ ಮೂಲಕ ಯುವಜನತೆಯ ಸಹಕಾರದಿಂದ ಗ್ರಾಮದ ರಸ್ತೆ ನಿರ್ಮಾಣ, ಗಿಡ ನೆಡುವುದು ಇತ್ಯಾದಿ ಜನಪರ ಯೋಜನೆಗಳನ್ನು ಕೈಗೊಂಡರು. ನಂತರ 1986 ರಲ್ಲಿ ‘ಗಜಾನನ ಯುವಕ ಮಂಡಳ’ವನ್ನು ಸ್ಥಾಪಿಸುವ ಮೂಲಕವಾಗಿ ಮತ್ತಷ್ಟು ಜನಪರ ಯೋಜನೆಗಳನ್ನು ಕೈಗೊಂಡು ಜನತೆಯ ಮೂಲಭೂತ ಸೌಕರ್ಯಗಳಿಗೆ ಅಗತ್ಯವಾದ ಶಾಲೆ, ದವಾಖಾನೆ, ಬ್ಯಾಂಕ್ಗಳನ್ನು ತೆರೆಯುವತ್ತ ತಮ್ಮ ಹೋರಾಟವನ್ನು ಮುಂದುವರೆಸಿ ಯಶಸ್ವಿಯಾದರು. ಇದರ ಜೊತೆಯಲ್ಲಿ ಬಡ ಜನತೆಗೆ ಅಗತ್ಯವಾದ ಸಾಲ ಸೌಲಭ್ಯ, ನಿರಾವರಿ ಯೋಜನೆಗಳನ್ನು ಅನುಷ್ಟಾನಗೊಳಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಹೀಗೆ ಸಾಮಾಜಿಕ ಹೋರಾಟಗಳ ಜೊತೆಯಲ್ಲಿ ತಮ್ಮ ಕನಸಿನ ಕೂಸಾದ ರಂಗಭೂಮಿಗೆ ಶಾಶ್ವತವಾದ ವೇದಿಕೆಯನ್ನು ನಿರ್ಮಿಸುವಲ್ಲಿ ಮಹತ್ತರ ಪಾತ್ರವನ್ನು ನಿರ್ವಹಿಸಿದ ಕೀರ್ತಿ ಶ್ರೀಯುತರಿಗೆ ಸಲ್ಲುತ್ತದೆ.
ಗಜಾನನ ಯುವಕ ಮಂಡಳದ ಅಡಿಯಲ್ಲಿ ಹಲವಾರು ಯುವಜನ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸ್ಪರ್ಧಿಸಿ ಹಲವಾರು ಭಾರಿ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ಈ ಮಂಡಳದ ಸಹಕಾರದಲ್ಲಿ ಶಾಲಾ ಮಕ್ಕಳಿಗೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕವಾಗಿ ಮಕ್ಕಳಲ್ಲಿ ಅಂತರ್ಗತವಾಗಿರುವ ಕಲೆಯನ್ನು ಗುರುತಿಸುವಂತಹ ಹಲವಾರು ಕಾರ್ಯಕ್ರಮಗಳನ್ನು ನೆರವೇರಿಸಿಕೊಂಡು ಬಂದಿದ್ದಾರೆ. 1990 ರಿಂದ ಹೆಸರಾಂತ ಸಾಹಿತಿಗಳು, ಚಿಂತಕರು ಆದ ಸತೀಶ್ ಕುಲಕರ್ಣಿಯವರ ಸಹಕಾರ ಪಡೆದು ಹಲವಾರು ವಿಶಿಷ್ಟ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿರುತ್ತಾರೆ. ಶ್ರೀಯುತ ಪ್ರಭು ಗುರಪ್ಪನವರು ತಮ್ಮ ರಂಗಭೂಮಿಯ ವ್ಯಾಮೋಹದ ಫಲವಾಗಿ 1992 ರಲ್ಲಿ ‘ನಿನಾಸಂ’ ರಂಗ ಶಿಬಿರದಲ್ಲಿ ಪಾಲ್ಗೊಂಡು, ಅಲ್ಲಿ ಪ್ರದರ್ಶನಗೊಂಡ ‘ತಲೆದಂಡ’ ಮತ್ತು ‘ಸಂಗ್ಯಾಬಾಳ್ಯಾ’ ನಾಟಕಗಳಿಂದ ಪ್ರಭಾವಿತರಾಗಿ ನಾವು ಕೂಡ ಇದೆ ತರಹದ ನಾಟಕಗಳನ್ನು ಪ್ರದರ್ಶಿಸಬೇಕು ಎಂಬ ಹಠವೊತ್ತು ಬಂದರು. ಹಾಗೆಯೇ ಇದಕ್ಕೆ ಪೂರಕವಾದ ಕಲಾಕ್ಷೇತ್ರವನ್ನು ನಿರ್ಮಿಸಬೇಕೆಂಬ ಮಹಾದಾಸೆಯನ್ನು ಹೊತ್ತು ಬಂದರು. ಇವರಲ್ಲಿ ಒಡಮೂಡಿದ ಈ ಕನಸಿಗೆ ಹಲವಾರು ಗ್ರಾಮಸ್ಥರು ಹಾಗೂ ಕೆಲವು ರಾಜಕಾರಣಿಗಳು ಯಾವುದೇ ಫಲಾಪೇಕ್ಷೆ ಇಲ್ಲದೆ ಸಹಕಾರ ನೀಡಿದರು. ಈ ಎಲ್ಲರನ್ನು ಒಟ್ಟುಗೂಡಿಸುವ ಮೂಲಕವಾಗಿ, ಡಾ. ಶ್ರೀಪಾದಭಟ್ಟ್ ಅವರ ಸಹಕಾರ ಮತ್ತು ನಿರ್ದೇಶನದಲ್ಲಿ ಹಲವಾರು ಸಾಮಾಜಿಕ ಹಾಗೂ ಪೌರಾಣಿಕ ನಾಟಕಗಳನ್ನು ಪ್ರದರ್ಶನ ನೀಡುತ್ತ ಬಂದಿದ್ದಾರೆ. ಹಾಗೆಯೇ ಸುಸಜ್ಜಿತ ರಂಗಭೂಮಿಗೆ ಅಗತ್ಯವಾದ ಜಮೀನು ಖರೀದಿಸಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ 2010 ರಲ್ಲಿ ‘ಸಿ.ಎಂ ಉದಾಸಿ ಕಲಾಕ್ಷೇತ’್ರವನ್ನು ನಿರ್ಮಿಸುವ ಮೂಲಕವಾಗಿ ದೇಶ ಮಾತ್ರವಲ್ಲದೆ, ವಿದೇಶಿ ರಂಗಾಸಕ್ತರನ್ನು ಕೂಡ ತಮ್ಮ ಗ್ರಾಮದತ್ತ ಸೆಳೆದ ಕೀರ್ತಿಯು ಪ್ರಭು ಗುರಪ್ಪನವರದಾಗಿದೆ. ಈ ಕಲಾಕ್ಷೇತ್ರದಲ್ಲಿ ದೂರದಿಂದ ಬರುವ ಕಲಾವಿದರಿಗೆ ತಂಗಲು ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಶ್ರೀಯುತ ಪಾತ್ರ ಮಹತ್ತರವಾದುದಾಗಿದೆ. ಇಲ್ಲಿಗೆ ಬರುವ ಕಲಾವಿದರು ಹಾಗೂ ರಂಗಾಸಕ್ತರಿಗೆ ಉಚಿತ ಊಟ ಮತ್ತು ವಸತಿ ನೀಡುವ ಮೂಲಕವಾಗಿ ತಮ್ಮ ಸೇವೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಶ್ರೀಯುತ ಗಜಾನನ ಯುವಜನ ಮಂಡಳದ ಅಡಿಯಲ್ಲಿ ಪ್ರದರ್ಶನಗೊಂಡ ನಾಟಕಗಳು ಹಲವಾರು ಪ್ರತಿಷ್ಠಿತ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿವೆ. ಸಮುದಾಯದ ಅಡಿಯಲ್ಲಿ ಪ್ರದರ್ಶನಗೊಂಡ ‘ನ್ಯಾಯದ ಬಾಗಿಲು’ ನಾಟಕಕ್ಕೆ ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. 
ಶ್ರೀಯುತ ಪ್ರಭು ಗುರಪ್ಪನವರದು ಬಹುಮುಖಿ ವ್ಯಕ್ತಿತ್ವದ ಪ್ರತಿಭೆ. ಇವರು ವೃತ್ತಿಯಲ್ಲಿ ಪೋಸ್ಟ್ ಮಾಸ್ತರರಾದರೂ ಸಾಮಾಜಿಕ ಹೋರಾಟಗಳಲ್ಲಿ ನಿಸ್ವಾರ್ಥ ನೆಲೆಯಲ್ಲಿ ತಮ್ಮನ್ನು ಅರ್ಪಿಸಿಕೊಂಡವರು. ಹಾಗೆಯೇ ನಾಟಕ ಕಲಾವಿದರು, ನಾಟಕ ರಚನಕಾರರು, ನಿರ್ದೇಶಕರಾಗಿ ಮಾತ್ರವಲ್ಲದೆ ರಂಗಾಸಕ್ತರಾಗಿಯು ಈ ಕ್ಷೇತ್ರದಲ್ಲಿ ಕೃಷಿಗೈದಿದ್ದಾರೆ. ಇವರು ಹಲವಾರು ನಾಟಕಗಳಲ್ಲಿ ನಟರಾಗಿ, ನಿರ್ದೇಶಕರಾಗಿ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ. ಇವರ ಈ ಸೇವೆಗೆ ಕರ್ನಾಟಕ ನಾಟಕ ಅಕಾಡೆಮಿಯಿಂದ 2005-06ನೇ ಸಾಲಿನ ‘ನಾಟಕ ಅಕಾಡೆಮಿ ಪ್ರಶಸ್ತಿ’ ಲಭಿಸಿದೆ. ಅತ್ಯಂತ ಕಡಿಮೆ ವಯಸ್ಸಿಗೆ ನಾಟಕ ಅಕಾಡೆಮಿ ಪ್ರಶಸ್ತಿ ಪಡೆದ ಕೀರ್ತಿಯು ಶ್ರೀಯುತರದಾಗಿರುತ್ತದೆ. ಶ್ರೀಯುತರು ಸ್ಥಾಪನೆ ಮಾಡಿದ ಗಜಾನನ ಮಂಡಳದಲ್ಲಿ ಪ್ರಸ್ತುತದಲ್ಲಿ ನಾಲ್ಕು ತಲೆಮಾರುಗಳು ನಿರ್ಮಾಣವಾಗಿವೆ. ಈ ಎಲ್ಲರನ್ನು ಆಯಾ ಕಾಲಕ್ಕೆ ತಕ್ಕಂತೆ ಸಿದ್ಧಗೊಳಿಸಿ ಮುನ್ನಡೆಸಿದ ಕೀರ್ತಿ ಶ್ರೀಯುತರಿಗೆ ಸಲ್ಲುತ್ತದೆ.
ಶ್ರೀಯುತ ಈ ರಂಗ ಯಾತ್ರೆಗೆ ಹಲವಾರು ಮಹನೀಯರು ಬೆನ್ನೆಲುಬಾಗಿ ನಿಂತಿದ್ದಾರೆ. ಈ ಊರಿನ ಗ್ರಾಮಸ್ಥರು, ಯುವಜನತೆ, ಶ್ರೀಪಾದಭಟ್ಟರು, ಪ್ರಾಚಾರ್ಯರಾಗಿಯೂ ತಮ್ಮ ಬಿಡುವಿನ ವೇಳೆಯನ್ನು ರಂಗಕ್ಷೇತ್ರಕ್ಕೆ ಮುಡುಪಾಗಿಟ್ಟಿರುವ ನಾಗರಾಜ್ ಧಾರೇಶ್ವರ್ ಹಾಗೂ ಸಿದ್ಧಪ್ಪ ರೊಟ್ಟಿಯಂತವರ ಸಹಕಾರವು ಇವರನ್ನು ಈ ಕ್ಷೇತ್ರದಲ್ಲಿ ಮತ್ತಷ್ಟು ಕ್ರಿಯಾಶೀಲಗೊಳಿಸಲು ಪ್ರಚೋದನೆಯನ್ನು ನೀಡುತ್ತಿದೆ. ಶ್ರೀಯುತ ಪ್ರಭು ಗುರಪ್ಪನವರು ಇನ್ನು ಹಲವಾರು ಕನಸುಗಳನ್ನೊತ್ತು ಈ ಗ್ರಾಮ ಹಾಗೂ ರಂಗಕ್ಷೇತ್ರಕ್ಕೆ ದುಡಿಯುತ್ತಿದ್ದಾರೆ. ತಮ್ಮ ನೌಕರಿಯಲ್ಲಿ ಮುಂಬಡ್ತಿಯು ಲಭಿಸಿದರು ಅದನ್ನು ನಯವಾಗಿಯೇ ತಿರಸ್ಕರಿಸಿ, ಪೋಸ್ಟ್ ಮಾಸ್ತರರಾಗಿಯೇ ಸರಳ ಜೀವನ ನಡೆಸುತ್ತಿದ್ದಾರೆ. ನಿನಾಸಂ ಮಾದರಿಯಲ್ಲಿಯೇ ರಂಗಭೂಮಿ ಹಾಗೂ ರಂಗಶಿಕ್ಷಣವನ್ನು ನೀಡುವ ಕನಸ್ಸೊತ್ತು ಮುನ್ನಡೆಯುತ್ತಿದ್ದಾರೆ. ಈ ನೆಲದ ಮಣ್ಣಿನ ದನಿಯಾಗಿ ರಂಗಭೂಮಿ ಕ್ಷೇತ್ರಕ್ಕೆ ದುಡಿಯುತ್ತಿರುವ ಇವರ ಕನಸ್ಸೆಲ್ಲ ನನಸಾಗಲಿ. ಇವರಿಗೆ ದೇವರು ರಂಗಸೇವೆಯನ್ನು ಸಲ್ಲಿಸುವುದಕ್ಕೆ ಮತ್ತಷ್ಟು ಆರೋಗ್ಯವನ್ನು ನೀಡಲಿ ಎಂಬುದು ನಮ್ಮೆಲ್ಲರ ಹಾರೈಕೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

-
ದಿನದ ಸುದ್ದಿ7 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ7 days agoಡಾಲಿಯ ಕನಸು ಒಂದೇ ಹೀರೋ ಆಗೋದು
-
ದಿನದ ಸುದ್ದಿ6 days agoಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ
-
ದಿನದ ಸುದ್ದಿ6 days agoಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
-
ದಿನದ ಸುದ್ದಿ3 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ3 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ3 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!

