Connect with us

ನೆಲದನಿ

ರಂಗ ದಾಸೋಹಿ ಪ್ರಭು ಗುರಪ್ಪನವರ : ಬದುಕು ಮತ್ತು ಹೋರಾಟದ ನಡುವೆ

Published

on

ಮಾನವನ ಉಗಮದೊಂದಿಗೆ ರಂಗಭೂಮಿಯ ನಂಟು ನಿರಂತರವಾಗಿ ನಡೆದುಕೊಂಡು ಬಂದಿದೆ. ಮಾನವನ ವಿಕಾಸವಾದಂತೆ ರಂಗಭೂಮಿಯೂ ಆಯಾ ಕಾಲಕ್ಕೆ ತಕ್ಕಂತೆ ತನ್ನ ಗುಣ ಮತ್ತು ಸ್ವರೂಪಗಳಲ್ಲಿ ಬದಲಾವಣೆಯನ್ನು ಪಡೆದುಕೊಂಡು ಸಾಗಿದೆ. ನಮಗೆ ರಂಗಭೂಮಿ ಎಂದ ತಕ್ಷಣ ನಾಟಕ, ಅಭಿನಯ ಮುಂತಾದ ಸನ್ನಿವೇಶಗಳು ಎದುರಾಗುತ್ತವೆ. ಆದರೆ ತೆರೆಮರೆಯಲ್ಲಿ ನಿಂತು ರಂಗಭೂಮಿಯನ್ನು ಕಟ್ಟಿ ಬೆಳೆಸಿದ ಬಹುತೇಕ ಸಾಧಕರು ಎಲೆ ಮರೆಯಂತಾಗುತ್ತಾರೆ. ಇಂತಹ ರಂಗಭೂಮಿ ತಪಸ್ವಿ ಹಾಗೂ ಹೋರಾಟಗಾರರಲ್ಲಿ ಶೇಷಗಿರಿಯ ಪ್ರಭು ಗುರಪ್ಪನವರು ಒಬ್ಬರಾಗಿದ್ದಾರೆ.

ಹಾವೇರಿ ಜಿಲ್ಲೆ. ಹಾನಗಲ್ ತಾಲ್ಲೂಕಿನ ಶೇಷಗಿರಿ ಎಂಬ ಪುಟ್ಟ ಗ್ರಾಮದಲ್ಲಿ ಶ್ರೀ ಸಿದ್ಧಪ್ಪ ಗುರಪ್ಪನವರ ಹಾಗೂ ಶ್ರೀಮತಿ ಅನಸಮ್ಮ ಗುರಪ್ಪನವರ ಪುತ್ರನಾಗಿ ಜನಿಸಿದ ಪ್ರಭು ಗುರಪ್ಪನವರ ಅವರು ಪಿ.ಯು.ಸಿ ವರೆಗೆ ಶಿಕ್ಷಣವನ್ನು ಪಡೆದು, ನಂತರದ ದಿನಗಳಲ್ಲಿ ಸ್ವಗ್ರಾಮದಲಿ ಪೋಸ್ಟ್ ಮಾಸ್ತರ್ ವೃತ್ತಿಯನ್ನು ಕೈಗೊಂಡರು. ಈ ವೃತ್ತಿಯ ಜೊತೆ ಜೊತೆಯಲ್ಲಿಯೇ ಸಾಮಾಜಿಕ ಜಾಗೃತಿ, ಹೋರಾಟ ಹಾಗೂ ರಂಗಭೂಮಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಬಂದರು. ಇವರಿಗೆ ರಂಗಭೂಮಿಯ ನಂಟು ಬಾಲ್ಯದ ದಿನಗಳಿಂದಲೂ ಪ್ರಭಾವ ಬೀರಿತ್ತು. ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಲ್ಲಿಯೇ ಕೆಲವು ನಾಟಕಗಳಲ್ಲಿ ಅಭಿನಯಿಸುವ ಮೂಲಕವಾಗಿ ಅಭಿನಯ ಕಲೆಯನ್ನು ಕರಗತ ಮಾಡಿಕೊಂಡಿದ್ದರು. ಹೀಗಾಗಿ ಇದು ಮುಂದಿನ ದಿನಗಳಲ್ಲಿ ಇವರನ್ನು ರಂಗಭೂಮಿಯತ್ತ ಮುನ್ನಡೆಸಲು ಪ್ರಚೋದಕ ಶಕ್ತಿಯಾಗಿ ಕಾರ್ಯನಿರ್ವಹಿಸಿತು. ಸಾಮಾಜಿಕ ಅರಿವು ಮೂಡಿಸುವಂತಹ ಬೀದಿ ನಾಟಕಗಳು ಹಾಗೂ ಸಾಮಾಜಿಕ ನಾಟಕಗಳು ಇವರ ಮೇಲೆ ಸಾಕಷ್ಟು ಪ್ರಭಾವ ಬೀರಿದ್ದವು. ಇದರ ಪರಿಣಾಮವಾಗಿ ವೀರಭದ್ರಪ್ಪ ಬಡಿಗೇರ್ ಎಂಬ ನಾಟಕ ಮಾಸ್ತರರ ಒತ್ತಾಸೆಯಿಂದ ಪ್ರಥಮ ಬಾರಿಗೆ ‘ದೀಪಾವಳಿ’ ಎಂಬ ನಾಟಕದಲ್ಲಿ ಪ್ರದರ್ಶನ ನೀಡಿ ಜನ ಮೆಚ್ಚುಗೆಯನ್ನು ಗಳಿಸಿದರು. ಹೀಗೆ ಪ್ರಾರಂಭವಾದ ಇವರ ನಾಟಕ ಯಾತ್ರೆಯು ಹಲವಾರು ನಾಟಕ ಪ್ರಕಾರಗಳಲ್ಲಿ ಇವರನ್ನು ತಲ್ಲಿನಗೊಳಿಸಿತು.

ಶ್ರೀಯುತ ಪ್ರಭು ಗುರಪ್ಪನವರು ನಾಟಕ ಪ್ರಕಾರವನ್ನು ಕೇವಲ ಹವ್ಯಾಸ ಹಾಗೂ ಮನರಂಜನೆಯ ಮಾಧ್ಯಮವಾಗಿ ಸ್ವೀಕರಿಸಲಿಲ್ಲ. ಆ ಮೂಲಕ ಸಾಮಾಜಿಕ ಜಾಗೃತಿ ಹಾಗೂ ಸಾಮಾನ್ಯ ಜನತೆಗೆ ಅರಿವು ಮೂಡಿಸುವ ಮಾಧ್ಯಮವಾಗಿ ಗುರುತಿಸಿಕೊಂಡರು. ತಮ್ಮ ವಿದ್ಯಾಭ್ಯಾಸ ಮುಗಿಸಿ ಸ್ವಗ್ರಾಮಕ್ಕೆ ಮರಳಿದ ತರುವಾಯ 1983 ರಲ್ಲಿ ಪೋಸ್ಟ್ ಮಾಸ್ತರ್ ಹುದ್ಧೆಗೆ ಸೇರಿಕೊಂಡರು. ಇಲ್ಲಿಂದ ಆರಂಭವಾದ ಇವರ ಸೇವೆಯು, ಸಾಮಾಜಿಕ ಸೇವೆಯ ಜೊತೆ ಜೊತೆಯಲ್ಲಿಯೇ ನಾಟಕದ ಯಾತ್ರೆಯು ಆರಂಭವಾಯಿತು. ತಮ್ಮ ಗ್ರಾಮದ ಕೆಲವರ ಹಿತಾಸಕ್ತಿಗೆ ಬಲಿಯಾಗಿ ಸಾಮಾನ್ಯ ಜನತೆಯು ಹಲವಾರು ಶೋಷಣೆಗೆ ಒಳಗಾಗಿದ್ದರು. ಹಾಗೆಯೇ ಇಲ್ಲಿನ ಬಸವೇಶ್ವರ ದೇವಾಲಯದ ಜಾತ್ರೆಯು ಸ್ಥಗಿತಗೊಂಡಿತ್ತು. ಪ್ರಥಮ ಭಾರಿಗೆ ಈ ಗ್ರಾಮದ ಯುವಜನತೆಯನ್ನು ಒಟ್ಟುಗೂಡಿಸಿ ಜಾತ್ರೆಗೆ ಚಾಲನೆ ನೀಡಿದರು. ಆ ಮೂಲಕವಾಗಿ ಗ್ರಾಮದ ಜನತೆಯಲ್ಲಿ ಐಕ್ಯತೆ ಹಾಗೂ ಹೋರಾಟದ ಕೆಚ್ಚು ಮೂಡಿಸಿದರು. ತಮ್ಮ ಗ್ರಾಮದಲ್ಲಿ ಮೊದಲ ಭಾರಿಗೆ ಗಣೇಶ ಚೌತಿಯನ್ನು ಕೂರಿಸುವ ಮೂಲಕ ಯುವಜನತೆಯ ಸಹಕಾರದಿಂದ ಗ್ರಾಮದ ರಸ್ತೆ ನಿರ್ಮಾಣ, ಗಿಡ ನೆಡುವುದು ಇತ್ಯಾದಿ ಜನಪರ ಯೋಜನೆಗಳನ್ನು ಕೈಗೊಂಡರು. ನಂತರ 1986 ರಲ್ಲಿ ‘ಗಜಾನನ ಯುವಕ ಮಂಡಳ’ವನ್ನು ಸ್ಥಾಪಿಸುವ ಮೂಲಕವಾಗಿ ಮತ್ತಷ್ಟು ಜನಪರ ಯೋಜನೆಗಳನ್ನು ಕೈಗೊಂಡು ಜನತೆಯ ಮೂಲಭೂತ ಸೌಕರ್ಯಗಳಿಗೆ ಅಗತ್ಯವಾದ ಶಾಲೆ, ದವಾಖಾನೆ, ಬ್ಯಾಂಕ್‍ಗಳನ್ನು ತೆರೆಯುವತ್ತ ತಮ್ಮ ಹೋರಾಟವನ್ನು ಮುಂದುವರೆಸಿ ಯಶಸ್ವಿಯಾದರು. ಇದರ ಜೊತೆಯಲ್ಲಿ ಬಡ ಜನತೆಗೆ ಅಗತ್ಯವಾದ ಸಾಲ ಸೌಲಭ್ಯ, ನಿರಾವರಿ ಯೋಜನೆಗಳನ್ನು ಅನುಷ್ಟಾನಗೊಳಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಹೀಗೆ ಸಾಮಾಜಿಕ ಹೋರಾಟಗಳ ಜೊತೆಯಲ್ಲಿ ತಮ್ಮ ಕನಸಿನ ಕೂಸಾದ ರಂಗಭೂಮಿಗೆ ಶಾಶ್ವತವಾದ ವೇದಿಕೆಯನ್ನು ನಿರ್ಮಿಸುವಲ್ಲಿ ಮಹತ್ತರ ಪಾತ್ರವನ್ನು ನಿರ್ವಹಿಸಿದ ಕೀರ್ತಿ ಶ್ರೀಯುತರಿಗೆ ಸಲ್ಲುತ್ತದೆ.

ಗಜಾನನ ಯುವಕ ಮಂಡಳದ ಅಡಿಯಲ್ಲಿ ಹಲವಾರು ಯುವಜನ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸ್ಪರ್ಧಿಸಿ ಹಲವಾರು ಭಾರಿ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ಈ ಮಂಡಳದ ಸಹಕಾರದಲ್ಲಿ ಶಾಲಾ ಮಕ್ಕಳಿಗೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕವಾಗಿ ಮಕ್ಕಳಲ್ಲಿ ಅಂತರ್ಗತವಾಗಿರುವ ಕಲೆಯನ್ನು ಗುರುತಿಸುವಂತಹ ಹಲವಾರು ಕಾರ್ಯಕ್ರಮಗಳನ್ನು ನೆರವೇರಿಸಿಕೊಂಡು ಬಂದಿದ್ದಾರೆ. 1990 ರಿಂದ ಹೆಸರಾಂತ ಸಾಹಿತಿಗಳು, ಚಿಂತಕರು ಆದ ಸತೀಶ್ ಕುಲಕರ್ಣಿಯವರ ಸಹಕಾರ ಪಡೆದು ಹಲವಾರು ವಿಶಿಷ್ಟ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿರುತ್ತಾರೆ. ಶ್ರೀಯುತ ಪ್ರಭು ಗುರಪ್ಪನವರು ತಮ್ಮ ರಂಗಭೂಮಿಯ ವ್ಯಾಮೋಹದ ಫಲವಾಗಿ 1992 ರಲ್ಲಿ ‘ನಿನಾಸಂ’ ರಂಗ ಶಿಬಿರದಲ್ಲಿ ಪಾಲ್ಗೊಂಡು, ಅಲ್ಲಿ ಪ್ರದರ್ಶನಗೊಂಡ ‘ತಲೆದಂಡ’ ಮತ್ತು ‘ಸಂಗ್ಯಾಬಾಳ್ಯಾ’ ನಾಟಕಗಳಿಂದ ಪ್ರಭಾವಿತರಾಗಿ ನಾವು ಕೂಡ ಇದೆ ತರಹದ ನಾಟಕಗಳನ್ನು ಪ್ರದರ್ಶಿಸಬೇಕು ಎಂಬ ಹಠವೊತ್ತು ಬಂದರು. ಹಾಗೆಯೇ ಇದಕ್ಕೆ ಪೂರಕವಾದ ಕಲಾಕ್ಷೇತ್ರವನ್ನು ನಿರ್ಮಿಸಬೇಕೆಂಬ ಮಹಾದಾಸೆಯನ್ನು ಹೊತ್ತು ಬಂದರು. ಇವರಲ್ಲಿ ಒಡಮೂಡಿದ ಈ ಕನಸಿಗೆ ಹಲವಾರು ಗ್ರಾಮಸ್ಥರು ಹಾಗೂ ಕೆಲವು ರಾಜಕಾರಣಿಗಳು ಯಾವುದೇ ಫಲಾಪೇಕ್ಷೆ ಇಲ್ಲದೆ ಸಹಕಾರ ನೀಡಿದರು. ಈ ಎಲ್ಲರನ್ನು ಒಟ್ಟುಗೂಡಿಸುವ ಮೂಲಕವಾಗಿ, ಡಾ. ಶ್ರೀಪಾದಭಟ್ಟ್ ಅವರ ಸಹಕಾರ ಮತ್ತು ನಿರ್ದೇಶನದಲ್ಲಿ ಹಲವಾರು ಸಾಮಾಜಿಕ ಹಾಗೂ ಪೌರಾಣಿಕ ನಾಟಕಗಳನ್ನು ಪ್ರದರ್ಶನ ನೀಡುತ್ತ ಬಂದಿದ್ದಾರೆ. ಹಾಗೆಯೇ ಸುಸಜ್ಜಿತ ರಂಗಭೂಮಿಗೆ ಅಗತ್ಯವಾದ ಜಮೀನು ಖರೀದಿಸಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ 2010 ರಲ್ಲಿ ‘ಸಿ.ಎಂ ಉದಾಸಿ ಕಲಾಕ್ಷೇತ’್ರವನ್ನು ನಿರ್ಮಿಸುವ ಮೂಲಕವಾಗಿ ದೇಶ ಮಾತ್ರವಲ್ಲದೆ, ವಿದೇಶಿ ರಂಗಾಸಕ್ತರನ್ನು ಕೂಡ ತಮ್ಮ ಗ್ರಾಮದತ್ತ ಸೆಳೆದ ಕೀರ್ತಿಯು ಪ್ರಭು ಗುರಪ್ಪನವರದಾಗಿದೆ. ಈ ಕಲಾಕ್ಷೇತ್ರದಲ್ಲಿ ದೂರದಿಂದ ಬರುವ ಕಲಾವಿದರಿಗೆ ತಂಗಲು ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಶ್ರೀಯುತ ಪಾತ್ರ ಮಹತ್ತರವಾದುದಾಗಿದೆ. ಇಲ್ಲಿಗೆ ಬರುವ ಕಲಾವಿದರು ಹಾಗೂ ರಂಗಾಸಕ್ತರಿಗೆ ಉಚಿತ ಊಟ ಮತ್ತು ವಸತಿ ನೀಡುವ ಮೂಲಕವಾಗಿ ತಮ್ಮ ಸೇವೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಶ್ರೀಯುತ ಗಜಾನನ ಯುವಜನ ಮಂಡಳದ ಅಡಿಯಲ್ಲಿ ಪ್ರದರ್ಶನಗೊಂಡ ನಾಟಕಗಳು ಹಲವಾರು ಪ್ರತಿಷ್ಠಿತ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿವೆ. ಸಮುದಾಯದ ಅಡಿಯಲ್ಲಿ ಪ್ರದರ್ಶನಗೊಂಡ ‘ನ್ಯಾಯದ ಬಾಗಿಲು’ ನಾಟಕಕ್ಕೆ ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. 

ಶ್ರೀಯುತ ಪ್ರಭು ಗುರಪ್ಪನವರದು ಬಹುಮುಖಿ ವ್ಯಕ್ತಿತ್ವದ ಪ್ರತಿಭೆ. ಇವರು ವೃತ್ತಿಯಲ್ಲಿ ಪೋಸ್ಟ್ ಮಾಸ್ತರರಾದರೂ ಸಾಮಾಜಿಕ ಹೋರಾಟಗಳಲ್ಲಿ ನಿಸ್ವಾರ್ಥ ನೆಲೆಯಲ್ಲಿ ತಮ್ಮನ್ನು ಅರ್ಪಿಸಿಕೊಂಡವರು. ಹಾಗೆಯೇ ನಾಟಕ ಕಲಾವಿದರು, ನಾಟಕ ರಚನಕಾರರು, ನಿರ್ದೇಶಕರಾಗಿ ಮಾತ್ರವಲ್ಲದೆ ರಂಗಾಸಕ್ತರಾಗಿಯು ಈ ಕ್ಷೇತ್ರದಲ್ಲಿ ಕೃಷಿಗೈದಿದ್ದಾರೆ. ಇವರು ಹಲವಾರು ನಾಟಕಗಳಲ್ಲಿ ನಟರಾಗಿ, ನಿರ್ದೇಶಕರಾಗಿ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ. ಇವರ ಈ ಸೇವೆಗೆ ಕರ್ನಾಟಕ ನಾಟಕ ಅಕಾಡೆಮಿಯಿಂದ 2005-06ನೇ ಸಾಲಿನ ‘ನಾಟಕ ಅಕಾಡೆಮಿ ಪ್ರಶಸ್ತಿ’ ಲಭಿಸಿದೆ. ಅತ್ಯಂತ ಕಡಿಮೆ ವಯಸ್ಸಿಗೆ ನಾಟಕ ಅಕಾಡೆಮಿ ಪ್ರಶಸ್ತಿ ಪಡೆದ ಕೀರ್ತಿಯು ಶ್ರೀಯುತರದಾಗಿರುತ್ತದೆ. ಶ್ರೀಯುತರು ಸ್ಥಾಪನೆ ಮಾಡಿದ ಗಜಾನನ ಮಂಡಳದಲ್ಲಿ ಪ್ರಸ್ತುತದಲ್ಲಿ ನಾಲ್ಕು ತಲೆಮಾರುಗಳು ನಿರ್ಮಾಣವಾಗಿವೆ. ಈ ಎಲ್ಲರನ್ನು ಆಯಾ ಕಾಲಕ್ಕೆ ತಕ್ಕಂತೆ ಸಿದ್ಧಗೊಳಿಸಿ ಮುನ್ನಡೆಸಿದ ಕೀರ್ತಿ ಶ್ರೀಯುತರಿಗೆ ಸಲ್ಲುತ್ತದೆ.

ಶ್ರೀಯುತ ಈ ರಂಗ ಯಾತ್ರೆಗೆ ಹಲವಾರು ಮಹನೀಯರು ಬೆನ್ನೆಲುಬಾಗಿ ನಿಂತಿದ್ದಾರೆ. ಈ ಊರಿನ ಗ್ರಾಮಸ್ಥರು, ಯುವಜನತೆ, ಶ್ರೀಪಾದಭಟ್ಟರು, ಪ್ರಾಚಾರ್ಯರಾಗಿಯೂ ತಮ್ಮ ಬಿಡುವಿನ ವೇಳೆಯನ್ನು ರಂಗಕ್ಷೇತ್ರಕ್ಕೆ ಮುಡುಪಾಗಿಟ್ಟಿರುವ ನಾಗರಾಜ್ ಧಾರೇಶ್ವರ್ ಹಾಗೂ ಸಿದ್ಧಪ್ಪ ರೊಟ್ಟಿಯಂತವರ ಸಹಕಾರವು ಇವರನ್ನು ಈ ಕ್ಷೇತ್ರದಲ್ಲಿ ಮತ್ತಷ್ಟು ಕ್ರಿಯಾಶೀಲಗೊಳಿಸಲು ಪ್ರಚೋದನೆಯನ್ನು ನೀಡುತ್ತಿದೆ. ಶ್ರೀಯುತ ಪ್ರಭು ಗುರಪ್ಪನವರು ಇನ್ನು ಹಲವಾರು ಕನಸುಗಳನ್ನೊತ್ತು ಈ ಗ್ರಾಮ ಹಾಗೂ ರಂಗಕ್ಷೇತ್ರಕ್ಕೆ ದುಡಿಯುತ್ತಿದ್ದಾರೆ. ತಮ್ಮ ನೌಕರಿಯಲ್ಲಿ ಮುಂಬಡ್ತಿಯು ಲಭಿಸಿದರು ಅದನ್ನು ನಯವಾಗಿಯೇ ತಿರಸ್ಕರಿಸಿ, ಪೋಸ್ಟ್ ಮಾಸ್ತರರಾಗಿಯೇ ಸರಳ ಜೀವನ ನಡೆಸುತ್ತಿದ್ದಾರೆ. ನಿನಾಸಂ ಮಾದರಿಯಲ್ಲಿಯೇ ರಂಗಭೂಮಿ ಹಾಗೂ ರಂಗಶಿಕ್ಷಣವನ್ನು ನೀಡುವ ಕನಸ್ಸೊತ್ತು ಮುನ್ನಡೆಯುತ್ತಿದ್ದಾರೆ. ಈ ನೆಲದ ಮಣ್ಣಿನ ದನಿಯಾಗಿ ರಂಗಭೂಮಿ ಕ್ಷೇತ್ರಕ್ಕೆ ದುಡಿಯುತ್ತಿರುವ ಇವರ ಕನಸ್ಸೆಲ್ಲ ನನಸಾಗಲಿ. ಇವರಿಗೆ ದೇವರು ರಂಗಸೇವೆಯನ್ನು ಸಲ್ಲಿಸುವುದಕ್ಕೆ ಮತ್ತಷ್ಟು ಆರೋಗ್ಯವನ್ನು ನೀಡಲಿ ಎಂಬುದು ನಮ್ಮೆಲ್ಲರ ಹಾರೈಕೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಡಾ.ಕೆ.ಎ ಓಬಳೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನಗಳೊಂದಿಗೆ ಪಡೆದುಕೊಂಡು, ಚಿನ್ನದ ಹುಡುಗ ಎಂಬ ಕೀರ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿರುತ್ತಾರೆ. ಮೂರು ವರ್ಷಗಳ ಕಾಲ ದಾವಣಗೆರೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರು, ಇದೇ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಸಂಶೋಧನೆ ಹಾಗೂ ಬರವಣಿಗೆಯಲ್ಲಿ ಆಸಕ್ತಿಯುಳ್ಳ ಇವರು ಸುಮಾರು ಮೂರು ವರ್ಷಗಳಿಂದ ವಿವಿಧ ಪತ್ರಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸುತ್ತ ಬಂದಿರುತ್ತಾರೆ. ಭೀಮವಾದ ಮಾಸ ಪತ್ರಿಕೆಯಲ್ಲಿ ದಲಿತ ಹೋರಾಟ ಕಥನ ಎಂಬ ಅಂಕಣವನ್ನು ಸತತವಾಗಿ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿರುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಇವರು 'ಅಸ್ಮಿತೆ ಮತ್ತು ಆತ್ಮವಿಮರ್ಶೆ' ಎಂಬ ಕೃತಿಯನ್ನು ಹಾಗೂ 'ವಿವೇಕಯಾನ' ಎಂಬ ನಾಟಕವನ್ನು ರಚಿಸಿರುತ್ತಾರೆ. ವಿವೇಕಯಾನ ನಾಟಕ ಕೃತಿಯು ನಾಟಕ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುತ್ತದೆ. ಕಾವ್ಯ ರಚನೆಯಲ್ಲಿಯು ಆಸಕ್ತಿಯನ್ನು ಹೊಂದಿರುವ ಇವರಿಗೆ ೨೦೧೪ರಲ್ಲಿ 'ಸಾಹಿತ್ಯ ಸಿರಿ' ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. ಇಮೇಲ್: eakantagiri@gmail.com. ಮೊ: 9538345639/ 9591420216 )

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ23 hours ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ3 days ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ4 days ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ5 days ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ1 week ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

ದಿನದ ಸುದ್ದಿ1 week ago

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ ಮನೆಗೆ ಬಿಎಲ್‍ಒಗಳ ಭೇಟಿ ಪ್ರಾರಂಭ

ಸುದ್ದಿದಿನ,ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಾದ್ಯಂತ ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ...

ದಿನದ ಸುದ್ದಿ1 week ago

ಕುಂದುವಾಡದಲ್ಲಿ ದೂಡಾ ಹೊಸ ಬಡಾವಣೆ ನಿರ್ಮಾಣ ಯೋಜನೆ ಕೈ ಬಿಡಲು ರೈತರ ಆಗ್ರಹ | ವಸತಿ ಯೋಜನೆ ಕೈ ಬಿಡಿ ಎಂದು ದೂಡಾಗೆ ಸೂಚಿಸಿದ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ದೂಡಾದಿಂದ ನಿರ್ಮಾಣ ಮಾಡಲು ಹೊರಟಿರುವ ವಸತಿ(ಹೊಸ ಲೇ ಔಟ್) ಯೋಜನೆಯನ್ನ ಈ ಕೂಡಲೇ ಕೈ ಬಿಡಬೇಕು ಎಂದು ರೈತರು ನಗರಾಭಿವೃದ್ದಿ...

ದಿನದ ಸುದ್ದಿ2 weeks ago

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ ....

ದಿನದ ಸುದ್ದಿ2 weeks ago

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ...

ದಿನದ ಸುದ್ದಿ2 weeks ago

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈ...

Trending