ಭಾವ ಭೈರಾಗಿ
ಸ್ಮರಣೆ | ‘ವೈಣಿಕ ಶಿಖಾಮಣಿ’ ವೀಣೆ ಶೇಷಣ್ಣ
ವಿದ್ಯೆ ಸಾಧಕನ ಸೊತ್ತೆ, ಹೊರತು ಸೋಮಾರಿಗಳ ಸ್ವತ್ತಲ್ಲ. ಎಂಬ ದಿವ್ಯ ವಾಣಿಯ ಮೂಲಕ ಸಾಮಾನ್ಯರೂ ಕೂಡಾ ನಿರಂತರವಾದ ಅಭ್ಯಾಸದಿಂದ ಏನಾದರೂ ಸಾಧಿಸಬಹುದು ಎಂಬುದನ್ನು ಸಾರಿದವರು ನಮ್ಮ ವೀಣೆ ಶೇಷಣ್ಣನವರು.
‘ವೀಣೆ’, ಇದರ ಇನ್ನೊಂದು ಅನ್ವರ್ಥನಾಮವೇ ಶೇಷಣ್ಣನವರು. ಮೈಸೂರು ಬಾನಿಯ ಪ್ರಮುಖ ಪ್ರವರ್ತಕರಾದ ಶೇಷಣ್ಣನವರು ಆದಪ್ಪಯ್ಯನವರ ವಂಶದ ಇಪ್ಪತ್ತನಾಲ್ಕನೇ ತಲೆ. ಇವರ ತಂದೆ ಭಕ್ಷಿ ಚಿಕ್ಕರಾಮಪ್ಪನವರು ಮುಮ್ಮಡಿ ಕೃಷ್ಣರಾಜ ಒಡೆಯರ ಆಸ್ಥಾನ ವಿದ್ವಾಂಸರು. 1852ರಲ್ಲಿ ಜನಿಸಿದ ಶೇಷಣ್ಣನವರು ಏಳು ವರ್ಷದ ಹುಡುಗನಾಗಿದ್ದಾಗಲೇ ಆಸ್ಥಾನದಲ್ಲಿ ಹಾಡಿ ಮಹಾರಾಜರಿಂದ ಕಂಠೀಹಾರವನ್ನು ಪಡೆದ ಬಾಲಪ್ರತಿಭೆ. ಎಳೆಯವಯಸ್ಸಿನಿಂದಲೇ ತಂದೆಯವರಿಂದ ಶಿಕ್ಷಣ ಪಡೆದರೂ ಬಾಲ್ಯದಲ್ಲೇ ತೀರ್ಥರೂಪುರವನ್ನು ಕಳೆದುಕೊಂಡಿದ್ದರಿಂದ ದೊಡ್ಡ ಶೇಷಣ್ಣನವರಲ್ಲಿ ವೀಣಾಭ್ಯಾಸ ಮುಂದುವರಿಸಿದರು. ಪ್ರತಿದಿನ ನಾಲ್ಕಾರು ಪಲ್ಲವಿಗಳು, ವಿವಿಧ ಬಗೆಯ ತಾನಗಳನ್ನು ಎಂಟು ಗಂಟೆಗಳ ಕಾಲ ಸಾಧನೆ ಮಾಡುತ್ತಿದ್ದ ಶೇಷಣ್ಣನವರ ಶ್ರದ್ಧೆ, ಏಕಾಗ್ರತೆ ಹಾಗೂ ತಲ್ಲೀನತೆಗಳು ಅಪೂರ್ವವಾದುವು. ಅವರ ಸಾಧನೆಗೆ ಅಕ್ಕ ವೆಂಕಮ್ಮನವರೇ ಪ್ರೇರಕ ಶಕ್ತಿ. ಸಾಧನೆ-ಕೇಳ್ಮೆ ಹಾಗೂ ಪ್ರತಿಭೆಗಳಿಂದ ಶೇಷಣ್ಣನವರು ವೀಣೆಯ ಮೇಲೆ ಅಸಾಧ್ಯ ಪ್ರಭುತ್ವ, ಮಧುರ ನಾದ ಹಾಗೂ ಎಣೆ ಇಲ್ಲದ ಮನೋಧರ್ಮ ಗಳಿಸಿಕೊಂಡರು. ಜೊತೆಗೆ ಮೈಸೂರು ಸದಾಶಿವರಾಯರಲ್ಲಿ ಗಾಯನದ ಅಭ್ಯಾಸವನ್ನೂ ಮುಂದುವರೆಸಿದರು. ರಾಯರು ತ್ಯಾಗರಾಜರ ಪ್ರಶಿಷ್ಯರು. ಹೀಗಾಗಿ, ಶೇಷಣ್ಣನವರು ತ್ಯಾಗರಾಜರ ನೇರ ಶಿಷ್ಯಪರಂಪರೆಗೆ ಸೇರುತ್ತಾರೆ. ಗಾಯನ ಹಾಗೂ ವೀಣಾಭ್ಯಾಸ ಎರಡರಲ್ಲೂ ವೀಣೆ ಸುಬ್ಬಣ್ಣನವರು ಶೇಷಣ್ಣನವರ ಸಹಪಾಠಿಗಳು.
ಶೇಷಣ್ಣನವರು ಪ್ರವರ್ಧಮಾನಕ್ಕೆ ಬರುವ ಕಾಲದಲ್ಲಿ ಮೈಸೂರನ್ನು ಚಾಮರಾಜ ಒಡೆಯರು ಆಳುತ್ತಿದ್ದರು. ಅವರು ಶೇಷಣ್ಣನವರನ್ನು ಆಸ್ಥಾನ ವಿದ್ವಾಂಸರಾಗಿ ನೇಮಿಸಿದರು. ಪ್ರಭು ಚಾಮರಾಜ ಒಡೆಯರ ಪಿಟೀಲು, ಸುಬ್ಬಣ್ಣನವರ ಗಾಯನ ಹಾಗೂ ಶೇಷಣ್ಣನವರ ವೀಣೆ ಒಂದು ಅಪರೂಪ ಮೇಳ. ಪ್ರಭು ಆಸ್ಥಾನಿಕರ ಸಂಬಂಧವನ್ನು ಮೀರಿದ ಸ್ನೇಹ, ಆತ್ಮೀಯತೆಗಳು ಮಹಾರಾಜರು ಮತ್ತು ಶೇಷಣ್ಣನವರಲ್ಲಿ ಬೆಳೆಯಿತು.
ಕನ್ಯಾಕುಮಾರಿಯಿಂದ ದೆಹಲಿಯವರೆಗೆ ವಿವಿಧ ಪ್ರಾಂತ್ಯ, ಅರಮನೆ, ಉತ್ಸವಗಳಲ್ಲಿ ಶೇಷಣ್ಣನವರ ವಿನಿಕೆ ನಡೆಯುತ್ತಿದ್ದವು. ಅವರ ಕಚೇರಿಯನ್ನು ಏರ್ಪಡಿಸುವುದು ಪ್ರತಿಷ್ಠೆ-ಗೌರವದ ಸಂಕೇತವಾಗಿತ್ತು. ರಾಮನಾಥಪುರಂ, ಅಂದಿನ ಪರಿಚಿತ ಸಂಸ್ಥಾನವಲ್ಲದೆ, ಒಂದು ಪ್ರಮುಖ ಸಂಗೀತ ಕೇಂದ್ರವೂ ಆಗಿತ್ತು. ಸ್ವತಃ ಮಹಾರಾಜರೇ ಸಂಗೀತಗಾರರಾಗಿದ್ದುದರಿಂದ ಸಂಗೀತ ಕಲೆಗೆ ವ್ಯಾಪಕ ಪ್ರೋತ್ಸಾಹ ಕೊಡುತ್ತಿದ್ದರು. ಅಂದಿನ ಮಹಾರಾಜ ಭಾಸ್ಕರ ಸೇತುಪತಿ ಅವರು ನವರಾತ್ರಿಯ ವಿಶೇಷ ದರ್ಬಾರಿನಲ್ಲಿ ಒಮ್ಮೆ ಶೇಷಣ್ಣನವರ ಕಚೇರಿಯನ್ನುಏರ್ಪಡಿಸಿದರು. ಶೇಷಣ್ಣನವರ ವಿನಿಕೆಗೆ ರಾಜರ ಹೃದಯ ಮಿಡಿಯಿತು. ಮರುದಿನವೂ ಅವರದೇ ವೀಣಾ ಕಚೇರಿ ಏರ್ಪಾಡಾಯಿತು. ಅಂದೂ ವೀಣೆಯ ದಿವ್ಯಾನುಭವದ, ಅಮೃತದ ಸವಿ. ಹೀಗೇ ನವರಾತ್ರಿಯ ಒಂಬತ್ತು ದಿನಗಳೂ ಶೇಷಣ್ಣನವರದೇ ವೀಣಾ ಕಚೇರಿ. ಅರಮನೆಯಲ್ಲೆಲ್ಲಾ ವೀಣಾ ಝೇಂಕಾರ. ಶೇಷಣ್ಣನವರಿಗೆ ಮಹಾರಾಜರು ಕನಕಾಭಿಷೇಕ ಮಾಡಿ ಆನೆಯ ಮೇಲೆ ಕೂಡಿಸಿ ಅಂಬಾರಿಯಲ್ಲಿ ಮೆರವಣಿಗೆ ಮಾಡಿಸಿದರು. ಅಲ್ಲಿಂದ ಮುಂದೆ ಶೇಷಣ್ಣನವರ ಕಚೇರಿ ರಾಮನಾಥಪುರಂ ಆಸ್ಥಾನದಲ್ಲಿ ಪ್ರತಿವರ್ಷವೂ ನಡೆಯತೊಡಗಿತು.
ಉತ್ತರ ಭಾರತದ ಬರೋಡಾ ಸಂಸ್ಥಾನವು ಸಂಗೀತ ಪ್ರೋತ್ಸಾಹಕ್ಕೂ ಸಂಗೀತಗಾರರ ಪೋಷಣೆಗೂ ಪ್ರಸಿದ್ಧವಾದುದು. ಮೈಸೂರು ಮತ್ತು ಬರೋಡಾ ಅರಮನೆಗಳ ಆಸ್ಥಾನಿಕರಲ್ಲಿ ಪರಸ್ಪರ ಮೈತ್ರಿ, ವಿನಿಮಯ, ಸನ್ಮಾನಗಳು ನಡೆಯುತ್ತಿದ್ದವು. ಶೇಷಣ್ಣನವರ ಖ್ಯಾತಿಯನ್ನು ಕೇಳಿದ ಬರೋಡ ಮಹಾರಾಜ ಸಯ್ಯಾಜೀರಾವ್ ಗಾಯಕವಾಡರು ‘ವೈಣಿಕ ಶಿಖಾಮಣಿ’ಯನ್ನು ತಮ್ಮ ಆಸ್ಥಾನಕ್ಕೆ ಆಹ್ವಾನಿಸಿದರು. ಏರ್ಪಾಡಾಗಿದ್ದ ಒಂದು ದಿನದ ಬದಲು ಮೂರು ದಿನ ಕಚೇರಿ ನಡೆಯಿತು. ಸರಸ್ವತಿಯೇ ಪುರುಷರೂಪದಲ್ಲಿ ಬಂದು ನುಡಿಸುತ್ತಿದ್ದಂತೆ ಭಾಸವಾಯಿತು. ಈ ಅಪೂರ್ವ ಅನುಭವದಿಂದ ಮಹಾರಾಜರು ಪ್ರೇರಿತರಾಗಿ ಮಹಾರಾಣಿಯವರು ಸ್ವತಃ ಉಪಯೋಗುಸುತ್ತಿದ್ದ, ಸುಂದರವಾದ ಮೇನಾವನ್ನು ಶೇಷಣ್ಣನವರಿಗೆ ನೀಡಿದರು. ಈ ಸುದ್ದಿ ಕ್ಷಿಪ್ರದಲ್ಲೇ ಮೈಸೂರು ಮುಟ್ಟಿತು. ತಮ್ಮ ಆಸ್ಥಾನಿಕರಿಗೆ ಬೇರೊಂದು ಸಂಸ್ಥಾನದಲ್ಲಿ ದೊರೆತ ಈ ಸನ್ಮಾನದಿಂದ ಮಹಾರಾಜರಿಗೆ ಸಂತೋಷ ಹೆಮ್ಮೆ ಆದುದು ಸಹಜವೇ. ದೊರೆಗಳ ಅಪ್ಪಣೆಯಂತೆ ಶೇಷಣ್ಣನವರನ್ನು ಆ ಮೇನೆಯಲ್ಲಿ ಕುಳ್ಳಿರಿಸಿ ಅರಮನೆಯ ಧ್ವಜಪತಾಕೆ, ರಾಜಲಾಂಛನ, ಜೋಡಿಸುತ್ತು ದಿಂಡುಹಾರಗಳ ಮರ್ಯಾದೆ ಸಹಿತ ಮೆರವಣಿಗೆ ಮಾಡಲು ಸಿದ್ಧತೆಗಳಾದವು. ಆದರೆ, ‘ಈ ಗೌರವವೆಲ್ಲಾ ಸರಸ್ವತಿಗೆ ಸಲ್ಲಬೇಕು, ತಮಗೆ ಅಲ್ಲ’ ಎಂದು ಭಾವಿಸಿದ ಶೇಷಣ್ಣನವರು ವೀಣೆಯನ್ನು ಪಲ್ಲಕ್ಕಿಯಲ್ಲಿಟ್ಟು ವಾಗ್ದೇವಿಗೆ ನಮಿಸಿದರು. ಮೇನಾದ ಮುಂದೆ ಬರಿಗಾಲಿನಲ್ಲಿ ಕೈಜೋಡಿಸಿ ನಡೆದರು. ಹೀಗೆ ಶೇಷಣ್ಣನವರು ‘ವೈಣಿಕ ಶಿಖಾಮಣಿ’ ಮಾತ್ರವಲ್ಲ “ಗುಣಶಿಖಾಮಣಿ”ಯೂ ಆಗಿ ಬೆಳಗಿದವರು.
ಶೇಷಣ್ಣನವರ ವೀಣಾವಾದನ ಕಚೇರಿಗಳು ಸಾಮಾನ್ಯವಾಗಿ ನಾಲ್ಕು ಗಂಟೆಗಳ ಅವಧಿಯವು. ಕೃತಿಗಳು ಕಡಿಮೆ. ಪ್ರಧಾನವಾಗಿ ರಾಗ, ಮಧ್ಯಮಕಾಲ ಮತ್ತು ಪಲ್ಲವಿಗಳನ್ನೇ ಆರಿಸಿಕೊಳ್ಳುತ್ತಿದ್ದರು. ಒಂದೇ ರಾಗವನ್ನು ಹತ್ತು ಸಲ ನುಡಿಸಿದರೂ ಪ್ರತಿಭಾರಿ ಆ ರಾಗಕ್ಕೆ ಹೊಸಬಣ್ಣ, ಹೊಸಾಕಾರ, ಹೊಸರುಚಿ. ಹೀಗಾಗಿ ರಾಗದ ಶಕ್ತಿಗಳನ್ನು ಅರಿತು ಹಂತಹಂತವಾಗಿ ರಾಗಪುಷ್ಪವನ್ನು ಅರಳಿಸಿ, ಸಂಗೀತದ ಕಂಪನ್ನು ಬೀರುತ್ತಿದ್ದರು. ಕಚೇರಿಯ ಕೊನೆಯಲ್ಲಿ ಜಾವಳಿ, ತಿಲ್ಲಾನಗಳ ಮೇಲೋಗರ. ಕರ್ಕಶತೆಗಳಿಲ್ಲದ ಮೃದುವಾದ ಮೀಟು. ನಾದ ಭಾವಕ್ಕೆ ಗಮನ ಕೊಡುತ್ತಿದ್ದರೇ ಹೊರತು ವಾದ್ಯ ತಂತ್ರಕ್ಕೆ ಅಲ್ಲ. ವೀಣೆಯು ಶೇಷಣ್ಣನವರಿಗೆ ಕೇವಲ ಒಂದು ವಾದ್ಯವಾಗಿರದೆ ಒಂದು ಉಪಾಸನೆಯಾಗಿತ್ತು. ‘ನಮ್ಮ ಶಕ್ತಿಗೆ ಒಳಪಟ್ಟು ನುಡಿಸುತ್ತೇವೆಯೇ ಹೊರತು ವೀಣೆಯ ಸಾಮರ್ಥ್ಯಕ್ಕೆ ತಕ್ಕಂತೆ ನುಡಿಸಲು ಸಾಧ್ಯವೇ?’ ಎಂಬ ಶೇಷಣ್ಣನವರ ಮಾತು ಕೇವಲ ಸೌಜನ್ಯದ್ದಲ್ಲ ಗಾಢ ಚಿಂತನೆಗೂ ಅರ್ಹವಾದ ಅಭಿಪ್ರಾಯ. ಯಾರು ಹೋಗಿ ಕೇಳಿದರೂ ವೀಣೆ ನುಡಿಸುತ್ತಿದ್ದ ಅವರ ಸ್ವಭಾವ ಆದರ್ಶಪ್ರಾಯವಾದುದು. ತಮ್ಮ ಕೊನೆಯ ದಿನಗಳಲ್ಲಿ ವೀಣೆ ನುಡಿಸಲು ಅಶಕ್ತರಾದಾಗ ‘ಸಾಯಲು ನನಗೆ ಅಂಜಿಕೆ ಇಲ್ಲ; ಆದರೆ, ವೀಣೆಯನ್ನು ಬಿಟ್ಟುಹೋಗಲು ನೋವಾಗುತ್ತದೆ’ ಎನ್ನುತ್ತಿದ್ದರು.
ಶೇಷಣ್ಣನವರು ಇಪ್ಪತ್ತನೆಯ ಶತಮಾನದ ಪ್ರಮುಖ ವಾಗ್ಗೇಯಕಾರರಲ್ಲಿ ಒಬ್ಬರು. ತಿರುಪತಿ ಶ್ರೀನಿವಾಸ, ಸರಸ್ವತೀ, ಲಕ್ಷ್ಮೀ, ಚಾಮುಂಡೇಶ್ವರಿ ಮುಂತಾದ ದೇವರುಗಳ ಮೇಲೆ ಶೇಷಣ್ಣನವರು ಕನ್ನಡ ಪದಗಳನ್ನು ರಚಿಸಿದ್ದಾರೆ. ಶೇಷ, ಶೇಷದಾಸ ಎಂಬ ಅಂಕಿತದಲ್ಲಿ ಬಹುತೇಕ ರಚನೆಗಳಿದ್ದರೂ ತಿಲ್ಲಾನಗಳನ್ನು ತಮ್ಮ ಪ್ರಭುಗಳ ಮೇಲೆ (ಚಾಮರಾಜ ಒಡೆಯರು ಮತ್ತು ಕೃಷ್ಣರಾಜ ಒಡೆಯರ) ನಾಮಾಂಕಿತ ಮಾಡಿದ್ದಾರೆ. ಹಿಂದುಸ್ತಾನಿ ಶೈಲಿಯಲ್ಲಿ ಒಂದು ಜಾವಡಿಯೂ ಉಂಟು. ಶೇಷಣ್ಣನವರ ಮನೋಧರ್ಮದ ಒಂದು ಝಳಕನ್ನು ಅವರ ಕೃತಿಗಳಲ್ಲಿ ಕಾಣಬಹುದು. ವಿಶೇಷವಾಗಿ ದಾಟುಸ್ವರ ಪ್ರಯೋಗಗಳು ಆಕರ್ಷಕವಾಗಿವೆ.
ಶೇಷಣ್ಣನವರು ಒಂದು ದೊಡ್ಡ ಶಿಷ್ಯವರ್ಗವನ್ನೇ ತರಬೇತುಗೊಳಿಸಿ ಮೈಸೂರು ವೀಣಾ ಪರಂಪರೆ ಅವ್ಯಾಹತವಾಗಿ ಮುಂದುವರಿಯುವಂತೆ ಮಾಡಿದ್ದಾರೆ. ಅವರಲ್ಲಿ ಪ್ರಮುಖರು ವೆಂಕಟಗಿರಿಯಪ್ಪ, ಶರ್ಮಾದೇವಿ ಸುಬ್ರಹ್ಮಣ್ಯ ಶಾಸ್ತ್ರೀ, ಭೈರವಿ ಲಕ್ಷ್ಮೀನಾರಾಯಣಪ್ಪ, ಚಿತ್ರಶಿಲ್ಪಿ ವೆಂಕಟಪ್ಪ, ವಿ. ನಾರಾಯಣ ಅಯ್ಯರ್, ತಿರುಮಲೆ ರಾಜಮ್ಮ, ಎಂ.ಎಸ್. ಭೀಮರಾವ್ ಹಾಗೂ ಶೇಷಣ್ಣನವರ ಅಣ್ಣನ ಮೊಮ್ಮಗ ಎ.ಎಸ್. ಚಂದ್ರಶೇಖರಯ್ಯ ಮತ್ತು ಮೊಮ್ಮಗ ವಿ.ಎನ್. ರಾವ್(ಸ್ವರಮೂರ್ತಿ). ಸುಬ್ಬಣ್ಣನವರೂ ಅವರಲ್ಲಿ ಕೆಲಕಾಲ ಕಲಿತದ್ದಲ್ಲದೆ, ಬಿಡಾರಂ ಕೃಷ್ಣಪ್ಪನವರೂ ಶಿಷ್ಯರಾಗಿಯೇ ವರ್ತಿಸಿದರು. ಮೈಸೂರು ಪ್ರಾಂತ್ಯದ ಬಹುಮಂದಿ ಕಲಾವಿದರು ಈ ತ್ರಿಮೂರ್ತಿಗಳಾದ ಶೇಷಣ್ಣ, ಸುಬ್ಬಣ್ಣ, ಕೃಷ್ಣಪ್ಪನವರ ಪರಂಪರೆಗೆ ಸೇರಿದವರೇ. ಹೀಗಾಗಿ ರಾಜ್ಯದ ಮುಂದಿನ ಬಹುತೇಕ ಹಿರಿಯ ವೈಣಿಕರುಗಳು ಶೇಷಣ್ಣನವರ ಶಿಷ್ಯ ಪರಂಪರೆಗೆ ಸೇರುತ್ತಾರೆ.
ಬರೋಡಾ ಆಸ್ಥಾನದಿಂದ ಮೌಲಾಭಕ್ಷ್ಎಂಬ ವಿದ್ವಾಂಸರು ಚಾಮರಾಜ ಒಡೆಯರ ಆಸ್ಥಾನಕ್ಕೆ ಆಗಮಿಸಿದರು. ಅವರ ಜಲತರಂಗ್ವಾದನ (ಹಿಂದುಸ್ತಾನಿ) ಅರಮನೆಯಲ್ಲಿ ನಡೆಯಿತು. ಆ ವಾದ್ಯದ ಕಿಣ ಕಿಣ ನಾದಕ್ಕೆ ಮಹಾರಾಜರು ಆಕರ್ಷಿತರಾದರು. ಇದರಿಂದ ಪ್ರೇರಿತರಾಗಿ ಶೇಷಣ್ಣನವರು ಆ ವಾದ್ಯವನ್ನು ಅತಿ ಕ್ಷಿಪ್ರದಲ್ಲೇ ಕರಗತ ಮಾಡಿಕೊಂಡರು. ಅಲ್ಲಿಂದ ಮುಂದೆ ವೀಣೆಯ ಜೊತೆ ಶೇಷಣ್ಣನವರ ಜಲತರಂಗ್ ಕಚೇರಿಗಳು ಸಹಾ ಎಲ್ಲ ಕಡೆ ನಡೆಯತೊಡಗಿದವು. ಕರ್ನಾಟಕ ಶಾಸ್ತ್ರೀಯ ಸಂಗೀತ ವೇದಿಕೆಯ ಮೇಲೆ ಜಲತರಂಗ ವಾದ್ಯಕ್ಕೆ ಒಂದು ಗೌರವಾನ್ವಿತ ಸ್ಥಾನ ತಂದುಕೊಟ್ಟವರು ಶೇಷಣ್ಣನವರೇ. ಇದಲ್ಲದೆ ಶೇಷಣ್ಣನವರು, ಪಿಟೀಲು, ಸ್ವರಬತ್, ಪಿಯಾನೋ ಮುಂತಾದ ವಾದ್ಯಗಳಲ್ಲೂ ಪ್ರಾವೀಣ್ಯತೆ ಪಡೆದಿದ್ದರು.
ಸುಪ್ರಸಿದ್ಧ ಥಿಯೊಸೊಫಿಸ್ಟರಾದ ಡಾ. ಕಸಿನ್ಸ್, ಎ.ಎಚ್. ಫಾಕ್ಸ್ ಸ್ಟ್ರಾಂಗ್ವೇಸ್, ಸರ್ ಈವಾನ್ ಮೆಕಾಂಜೆ ಮುಂತಾದವರು ಶೇಷಣ್ಣನವರ ವಿನಿಕೆ ತಮ್ಮ ಮೇಲೆ ಮಾಡಿದ ಪ್ರಭಾವವನ್ನು ದಾಖಲೆಗೊಳಿಸಿದ್ದಾರೆ. ‘ದಿ ಮ್ಯೂಸಿಕ್ ಆಫ್ ಒರಿಯೆಂಟ್ ಅಂಡ್ ಆಕ್ಸಿಡೆಂಟ್’ ಗ್ರಂಥದಲ್ಲಿ ಮಾರ್ಗರೇಟ್ ಕಸಿನ್ಸ್ರವರು ಶೇಷಣ್ಣನವರನ್ನು ‘ದಿ ಕಿಂಗ್ ಆಫ್ ವೀಣಾ ಪ್ಲೇಯರ್ಸ್’ ಎಂದು ಕರೆದಿದ್ದಾರೆ. ‘ಮ್ಯೂಸಿಕ್ ಆಫ್ ಹಿಂದೂಸ್ತಾನ್’ ಗ್ರಂಥದಲ್ಲಿ ಶೇಷಣ್ಣನವರ ಅಸಾಧ್ಯ ಪ್ರತಿಭೆ, ಎಣೆ ಇಲ್ಲದ ಮನೋಧರ್ಮಗಳನ್ನು ಕೊಂಡಾಡಿದ್ದಾರೆ. ದೇವುಡು, ಡಾ. ಡಿ.ವಿ. ಗುಂಡಪ್ಪ, ಡಾ. ರಾಳ್ಲಪಲ್ಲಿ ಅನಂತ ಕೃಷ್ಣಶರ್ಮ, ಡಾ. ವಿ.ಸೀತಾರಾಮಯ್ಯ, ತಿರುಮಲೆ ರಾಜಮ್ಮ, ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ್, ಪ್ರೊ.ಎ.ಎನ್. ಮೂರ್ತಿರಾವ್, ಸ್ವರಮೂರ್ತಿ ವಿ. ಎನ್. ರಾವ್ ಮುಂತಾದವರುಗಳು ಶೇಷಣ್ಣನವರ ಜೀವನ ಸಾಧನೆಗಳನ್ನು ಕುರಿತು ತಮ್ಮ ಅನುಭವಗಳನ್ನು ದಾಖಲಿಸಿದ್ದಾರೆ.
ಶೇಷಣ್ಣನವರ ಎಲ್ಲ ರಚನೆಗಳನ್ನು ಮೈಸೂರಿನ ಸಂಗೀತ ಕಲಾವರ್ಧಿನೀ ಸಭಾದವರು ಪ್ರಕಟಿಸಿದ್ದಾರೆ, ಅಲ್ಲದೆ, ಭವನುತ, ಶ್ರೀ ರಘುವರ, ರಘುನಾಯಕ ಮುಂತಾದ ಕೆಲ ಕೀರ್ತನೆಗಳಿಗೆ ಚಿಟ್ಟೇ ಸ್ವರವನ್ನೂ ಹೆಣೆದಿದ್ದಾರೆ. ಬ್ರಿಟಿಷ್ ಚಕ್ರವರ್ತಿ ಐದನೇ ಜಾರ್ಜ್ರವರು ದೆಹಲಿಯಲ್ಲಿ ಒಂದು ರಾಜಸಭೆ ನಡೆಸಿದರು. ಅಲ್ಲಿ ಸಂಗೀತ ಕಚೇರಿ ಮಾಡಿದ ದಕ್ಷಿಣ ಭಾರತದ ಏಕೈಕ ಕಲಾವಿದರು ಶೇಷಣ್ಣನವರು! ಅವರ ವಿನಿಕೆ ಪಾಶ್ಚಾತ್ಯ ದೊರೆಯ ಮೇಲೆ ಗಾಢ ಪ್ರಭಾವವನ್ನು ಬೀರಿತು. ಆ ನಾದ ಸವಿಯನ್ನು ಸದಾ ಹಸಿರಾಗಿ ಇಟ್ಟುಕೊಳ್ಳಲು ಶೇಷಣ್ಣನವರ ಒಂದು ಭಾವಚಿತ್ರವನ್ನು ಜಾರ್ಜ್ ದೊರೆ ತಮ್ಮೊಂದಿಗೆ ತೆಗೆದುಕೊಂಡು ಹೋಗಿ ಬಕಿಂಗ್ ಹ್ಯಾಮ್ ಅರಮನೆಯಲ್ಲಿ ಅಲಂಕರಿಸಿದರು.
1924ರಲ್ಲಿ ಬೆಳಗಾಂನಲ್ಲಿ ಕಾಂಗ್ರೆಸ್ ಅಧಿವೇಶನ ನಡೆಯಿತು. ಮಹಾತ್ಮಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಕಾಂಗ್ರೆಸ್ ಅಧಿವೇಶನವಿದು. ಆ ಸಂದರ್ಭದಲ್ಲಿ ವೀಣೆ ಶೇಷಣ್ಣನವರ ಸಂಗೀತವನ್ನು ತಲ್ಲೀನರಾಗಿ ಸವಿದ ಮಾಹಾತ್ಮರು ‘ಇದು ದೇವಗಾನ! ಇದನ್ನು ಕೇಳಿದ ನಾವೇ ಧನ್ಯರು!’ ಎಂದು ಉದ್ಗರಿಸಿದರು.
ತಂಜಾವೂರಿನ ಕೃಷ್ಣಸ್ವಾಮಿನಾಯಕರ ಮನೆಯಲ್ಲಿ ಒಂದು ಸಂಗೀತ ಗೋಷ್ಠಿ. ಕರ್ನಾಟಕ ಸಂಗೀತದ ಪ್ರಸಿದ್ಧ ವಿದ್ವಾಂಸರುಗಳಾದ ಮಹಾ ವೈದ್ಯನಾಥ ಅಯ್ಯರ್, ಶರಭ ಶಾಸ್ತ್ರಿ, ತಿರುಕ್ಕೋಡಿ ಕಾವಲ್ಕೃಷ್ಣಯ್ಯರ್, ವೀಣೆ ಶೇಷಣ್ಣ, ನಾರಾಯಣಸ್ವಾಮಪ್ಪ ಮುಂತಾದ ದಿಗ್ಗಜಗಳು ಸೇರಿದ್ದ ಅಪರೂಪ ಸಭೆ. ಈ ಹಿರಿಯರನ್ನು ಉದ್ದೇಶಿಸಿ ಕೃಷ್ಣಸ್ವಾಮಿ ನಾಯಕರು. “ತಾವೆಲ್ಲ ವಿದ್ವಾಂಸರುಗಳಿದ್ದೀರಿ! ತಮ್ಮಲ್ಲೇ ಶ್ರೇಷ್ಠರು ಯಾರು? ಎಂದು ತಾವುಗಳೇ ನಿರ್ಧರಿಸಬೇಕು. ತಾವುಗಳೇ ನಿರ್ಧರಿಸಿದ ಅಗ್ರರಲ್ಲಿ ಅಗ್ರಗಣ್ಯರಾದ ಕಲಾವಿದರಿಗೆ ಈ ಸೀಮೆ ಕಮಲದ ಉಂಗುರವನ್ನು ಪ್ರಧಾನ ಮಾಡಬೇಕು” ಎಂದು ಅರಿಕೆ ಮಾಡಿಕೊಂಡರು. ಕಚೇರಿ ಪ್ರಾರಂಭವಾಯಿತು. ಪೈಪೋಟಿಯಂತಿದ್ದ ವಿದ್ವತ್ಪೂರ್ಣ ಕಚೇರಿಗಳು! ಒಬ್ಬರನ್ನು ಮೀರಿಸಿದ ಪ್ರತಿಭೆ ಇನ್ನೊಬ್ಬರದು. ಪಾಂಡಿತ್ಯ, ಪ್ರತಿಭೆ, ಸೃಜನಶೀಲತೆಗಳು ಮುಪ್ಪರಿಗೊಂಡ ವಿದ್ವಾಂಸರುಗಳು!. ಅವರಲ್ಲಿ ಪ್ರಶಸ್ತಿಗೆ ಚುನಾಯಿಸುವುದು ತೀರಾ ಕಷ್ಟದ ಕೆಲಸವಾಗಿ ಕಂಡಿತು. ಆಗ, ಮಹಾವೈದ್ಯನಾಥ ಅಯ್ಯರ್ಅವರು ಎದ್ದುನಿಂತು. “ನಾವೆಲ್ಲಾ ಹಿರಿಯ ಕಲಾವಿದರೇ, ಪಾಂಡಿತ್ಯಪೂರ್ಣವಾಗಿ ಹಾಡಿ-ನುಡಿಸಿದ್ದೇವೆ. ಆದರೆ, ಒಬ್ಬ ವಿದ್ವಾಂಸರನ್ನು ಮಾತ್ರ ಯಾರೂ ಮೀರಿಸಲಾಗಲಿಲ್ಲ. ಆ ಅದ್ವಿತೀಯ ಕಲಾವಿದರೇ ವೀಣೆ ಶೇಷಣ್ಣನವರು! ಅವರ ನಾದ ಮಾಧುರ್ಯ, ಎಣೆ ಇಲ್ಲದ ಮನೋಧರ್ಮ, ಸುಖವಾದ ವಿನಿಕೆ. ಅದ್ಭುತವಾದುದು. ಆದ್ದರಿಂದ ಈ ಪ್ರಶಸ್ತಿ ಅವರಿಗೇ ಸಲ್ಲಬೇಕು” ಎಂದರು. ಈ ಅಭಿಪ್ರಾಯವನ್ನು ತಿರುಕ್ಕೋಡಿವಲ್ ಕೃಷ್ಣಯ್ಯರ್ ಅವರು ಅನುಮೋದಿಸಿ, ಶೇಷಣ್ಣನವರನ್ನು “ಪುರುಷ ಸರಸ್ವತಿ” ಎಂದು ಕರೆದರು. ಸಭೆ ಈ ಅಭಿಪ್ರಾಯವನ್ನು ಒಪ್ಪಿ ಅನುಮೋದಿಸಿತು. ಹೀಗೆ ಶೇಷಣ್ಣನವರು ತಮ್ಮ ಸಮಕಾಲೀನ ಕಲಾ ಪ್ರಪಂಚದಲ್ಲೇ ಗೌರವಾನ್ವಿತರಾಗಿ “ವಿದ್ವಾಂಸರ ವಿದ್ವಾಂಸರಾಗಿ” ಬೆಳಗಿದರು.
ಶೇಷಣ್ಣನವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರು 1902ರಲ್ಲಿ ನೀಡಿದ ‘ವೈಣಿಕ ಶಿಖಾಮಣಿ’ ಬಿರುದು ಅನ್ವರ್ಥವಾಯಿತು. ಮಹಾರಾಜರ ಸಮ್ಮುಖದಲ್ಲಿ ಕಚೇರಿ ಮಾಡಬಯಸುವವರು ಮೊದಲು ಶೇಷಣ್ಣನವರ ಮುಂದೆ ಹಾಡಬೇಕಿತ್ತು. ಅರ್ಹರಾದ ಕಲಾವಿದರನ್ನು ಶೇಷಣ್ಣನವರು ಅರಮನೆಗೆ ಶಿಫಾರ್ಸು ಮಾಡುತ್ತಿದ್ದರು. ಕಲಾವಿದರ ಎಲ್ಲ ಒಳ್ಳೆಯ ಸಂಗತಿಗಳಿಗೆ ತಲೆದೂಗಿ ಶಹಭಾಸ್ಗಿರಿ ಹೇಳಿ ಪ್ರೋತ್ಸಾಹಿಸುತ್ತಿದ್ದರು. “ಸುನಾದ ನನ್ನ ಕೈನಲ್ಲಿ ಬಂದರೇನು? ಇನ್ನೊಬ್ಬರ ಕೈಯಲ್ಲಿ ಬಂದರೇನು” ಎಂಬ ಅವರ ಮಾತು ಒಬ್ಬ ನಾದೋಪಾಸಕನಿಗೆ ತಕ್ಕುದಾದುದು. 1926ರ ಜುಲೈ 25ರಂದು ಶೇಷಣ್ಣನವರು ಸರಸ್ವತಿಯ ಪಾದಾರವಿಂದವನ್ನು ಸೇರಿದರು. ಆಗ ಎ.ಆರ್.ಕೃಷ್ಣಶಾಸ್ತ್ರಿಗಳು ಪ್ರಬುದ್ಧ ಕರ್ನಾಟಕದ ಸಂಪಾದಕೀಯದಲ್ಲಿ “ಸರಸ್ವತಿಯ ಮನೆಯಲ್ಲಿ ಕಳುವಾಯಿತು” ಎಂದು ಬರೆದುದು ಎಷ್ಟು ಅರ್ಥಪೂರ್ಣ! ಸಂಗೀತ ಕ್ಷೇತ್ರದ ಧ್ರುವತಾರೆಗಳಲ್ಲಿ ಒಬ್ಬರಾದ ಶೇಷಣ್ಣನವರು ಎಂದೂ ಪ್ರಾತಃ ಸ್ಮರಣೀಯರು. ಈ ಮಹಾನ್ ಚೇತನಕ್ಕೆ ನಮ್ಮ ನಮನ.
(ಕೃಪೆ: ಮೈಸೂರು ವಿ. ಸುಬ್ರಹ್ಮಣ್ಯ ಅವರ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಪ್ರಕಟಣೆಯಾದ ‘ಕಲಾ ಚೇತನ’ದಲ್ಲಿನ ಲೇಖನದ ಸಂಕ್ಷಿಪ್ತ ರೂಪ)

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ2 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ3 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ2 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ3 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ3 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ3 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

