ದಿನದ ಸುದ್ದಿ
ಯಾರು ಪ್ರಗತಿಪರರು? : ದಿನೇಶ್ ಅಮಿನ್ ಮಟ್ಟು
ನಾನು ಮುಸುಕಿನ ಗುದ್ದಾಟ ನಡೆಸಲು ಹೋಗುವುದಿಲ್ಲ, ಯಾರದೋ ಹೆಗಲ ಮೇಲೆ ಬಂದೂಕು ಇಡುವುದೂ ಇಲ್ಲ, ನನ್ನ ಅಭಿಪ್ರಾಯ ಮಂಡಿಸಲು ಥಿಯರಿಗಳ ಮೂಟೆಗಳನ್ನು ಉರುಳಿಸಿ ಯಾರನ್ನೂ ಗೊಂದಲಕ್ಕೀಡುಮಾಡುವುದೂ ಇಲ್ಲ. ನೇರವಾಗಿ ವಿಷಯಕ್ಕೆ ಬರ್ತೇನೆ.
ಪ್ರಗತಿಪರರು ಯಾರು ಎನ್ನುವ ಪ್ರಶ್ನೆಗೆ ಉತ್ತರ ಬೇಕಲ್ಲಾ? ಮುಸುಕು ತೆಗೆದಿದ್ದೇನೆ, ಹೆಸರು ಬರ್ಕೊಳ್ಳಿ: ದೊರೆಸ್ವಾಮಿ, ದೇವನೂರ,ಚಂಪಾ, ಸುಬ್ಬಯ್ಯ ಬರಗೂರು, ಮರುಳಸಿದ್ದಪ್ಪ, ಸಿದ್ದರಾಮಯ್ಯ,ಗೋವಿಂದರಾವ್, , ಬಿಳಿಮಲೆ, ಅಸ್ಸಾದಿ, ಚೆನ್ನಿ, ಸಿದ್ದಯ್ಯ, ಕಾಳೇಗೌಡ, ಇಂಧೂಧರ, ಬಂಜಗೆರೆ, ರಹಮತ್, ಹುಳಿಯಾರ್, ರವಿವರ್ಮಕುಮಾರ್, ಗಣೇಶ್ ದೇವಿ, ವಿಜಯಮ್ಮ, ಮಾಲಗತ್ತಿ…ಪಟ್ಟಿ ಉದ್ದ ಇದೆ.
ಇವರ ಜತೆ ಜನನುಡಿ, ಮೇ ಸಾಹಿತ್ಯಮೇಳ, ನಾವು ನಮ್ಮಲ್ಲಿ, ಉಡುಪಿ-ಗುಬ್ಬಿ-ಗುಡಿಬಂಡೆ ಚಲೋ, ದಿಡ್ಡಳ್ಳಿ ಚಲೋ ಮೊದಲಾದ ಸಂಘಟನೆಗಳಲ್ಲಿ ಸಕ್ರಿಯರಾಗಿರುವ ಕನಸುಕಂಗಳ ಸಾವಿರಾರು ಯುವಕ-ಯುವತಿಯರಿದ್ದಾರೆ. ಈ ಪಟ್ಟಿಯಲ್ಲಿ ಎಡಪಕ್ಷಗಳ ಸದಸ್ಯರಾಗಿರುವವರನ್ನು ನಾನು ಸೇರಿಸಿಲ್ಲ. ಸದ್ಯ ಇಷ್ಟಕ್ಕೆ ನಿಲ್ಲಿಸ್ತೇನೆ.
ಮೊದಲನೆಯದಾಗಿ, ಇವರು ಜಾತ್ಯತೀತತೆಯ ರಕ್ಷಣೆಯ ಸೈದ್ಧಾಂತಿಕ ಗುತ್ತಿಗೆಯನ್ನು ಪಡೆದಿರುವುದು ಬಸವಣ್ಣ, ಗಾಂಧೀಜಿ, ಅಂಬೇಡ್ಕರ್, ಲೋಹಿಯಾ, ಪೆರಿಯಾರ್ ಅವರಿಂದ ಹೊರತು ಕಾಂಗ್ರೆಸ್ ಪಕ್ಷದಿಂದ ಅಲ್ಲ.
ಇವರಲ್ಲಿ ಬಹುತೇಕ ಮಂದಿ 75-77ರ ಕಾಲದಲ್ಲಿ ಇಂದಿರಾಗಾಂಧಿಯವರ ತುರ್ತುಪರಿಸ್ಥಿತಿಯನ್ನು ವಿರೋಧಿಸಿದವರು, 1989ರಲ್ಲಿ ರಾಜೀವ್ ಗಾಂಧಿಯವರ ವಿರುದ್ಧ ಸಿಡಿದೆದ್ದಿದ್ದ ಮತ್ತು ಮಂಡಲ್ ವರದಿ ಜಾರಿಗೆ ತಂದಿದ್ದ ವಿ.ಪಿ.ಸಿಂಗ್ ಪರವಾಗಿ ನಿಂತವರು. ಈ ಎರಡೂ ಸಂದರ್ಭಗಳಲ್ಲಿ ಜನಸಂಘ-ಬಿಜೆಪಿ ಕಾರ್ಯಕರ್ತರು ಇವರ ಜತೆಗಿದ್ದರು. ಆಗ ಯಾರೂ ಇವರಿಗೆ ಕೇಸರಿ ಬಣ್ಣ ಬಳಿಯಲಿಲ್ಲ, ಚಡ್ಡಿ ಹಾಕಲಿಲ್ಲ, ಗಂಜಿ ಗಿರಾಕಿ ಅನ್ನಲಿಲ್ಲ.
ಎರಡನೆಯದಾಗಿ, ಹಿಂದಿನ ಇತಿಹಾಸ ಬೇಡ, ಕಳೆದ ಐದು ವರ್ಷಗಳ ಅವಧಿಯಲ್ಲಿ ಇವರೆಲ್ಲರೂ ರಾಜ್ಯದಲ್ಲಿ ಕೋಮುವಾದದ ವಿರುದ್ಧದ ಮತ್ತು, ಜಾತ್ಯತೀತತೆಯನ್ನು ಉಳಿಸಿಕೊಳ್ಳುವ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಬಿಜೆಪಿ ವಿರುದ್ಧ ಮಾತ್ರವಲ್ಲ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಮಾತನಾಡಿದ್ದಾರೆ. ಹೌದು, ಸಿದ್ದರಾಮಯ್ಯನವರ ವಿಷಯದಲ್ಲಿ ಸಕಾರಣವಾಗಿ ಮೆದುವಾಗಿದ್ದರು.
ಈ ಮೆದು ಧೋರಣೆಯಿಂದ ಇವರು ಪಡೆದ ಲಾಭಗಳೇನು? ಐದು ವರ್ಷಗಳ ಅವಧಿಯಲ್ಲಿ ಇವರಲ್ಲಿ ಎಷ್ಟು ಮಂದಿಯ ಆದಾಯ ದುಪ್ಪಟ್ಟಾಯಿತು? ಎಷ್ಟುಮಂದಿ ಸರ್ಕಾರಿ ಮನೆ-ಸೈಟು ತೆಗೆದುಕೊಂಡರು? ಎಷ್ಟುಮಂದಿ ವಿಧಾನಪರಿಷತ್ ಗೆ ನಾಮಕರಣಗೊಂಡರು? ಎಷ್ಟುಮಂದಿ ತಮ್ಮ ಕುಟುಂಬದ ಸದಸ್ಯರಿಗೆ ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಸ್ಪರ್ಧೆಗೆ ಟಿಕೆಟ್ ಕೊಡಿಸಿದರು? ಇವರನ್ನು ಕಾಂಗ್ರೆಸ್ ಪಕ್ಷದ ಜತೆ ಜೋಡಿಸಿ ಗೇಲಿ ಮಾಡುತ್ತಿರುವವರು ದಯವಿಟ್ಟು ಇವರು ಸರ್ಕಾರದಿಂದ ಪಡೆದಿರುವ ಲಾಭಗಳೇನು ಎನ್ನುವುದನ್ನು ತಿಳಿಸಿ.
ತಮ್ಮ ವಯಸ್ಸು-ಆರೋಗ್ಯವನ್ನು ಮರೆತು ಕೋಮುವಾದದ ವಿರುದ್ಧ ಏಕಾಂಗಿಗಳಾಗಿ ಹೋರಾಟಕ್ಕಿಳಿದಿರುವ ಒಬ್ಬ ಶ್ರೀನಿವಾಸ ಕಾರ್ಕಳ, ಒಬ್ಬ ಸುರೇಶ್ ಭಟ್ ಬಾಕ್ರಬೈಲ್, ಒಬ್ಬ ಸನತ್ ಕುಮಾರ ಬೆಳಗಲಿ ಸರ್ಕಾರದಿಂದ ಪಡೆದ ಲಾಭಗಳೇನು? ತನ್ನ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿರುವ ಪುರುಷೋತ್ತಮ ಬಿಳಿಮಲೆಯವರು ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ದುಡ್ಡು ಬೇಡ ಎಂದವರು ಗೊತ್ತಾ?
ಹೌದು, ಇವರಲ್ಲಿ ಹೆಚ್ಚಿನವರು ಅಕಾಡೆಮಿ-ಪ್ರಾಧಿಕಾರದ ಪದಾಧಿಕಾರಿಗಳಾಗಿ ನೇಮಕಗೊಂಡಿದ್ದಾರೆ. ಯಾವುದೇ ರಾಜಕೀಯ ಪಕ್ಷ ಅಧಿಕಾರಕ್ಕೆ ಬಂದಾಗ ವಿಶಾಲ ಅರ್ಥದಲ್ಲಿ ಸೈದ್ಧಾಂತಿಕ ಸಹಮತ ಹೊಂದಿರುವವರನ್ನು ಸಾಹಿತ್ಯ-ಸಾಂಸ್ಕೃತಿಕ ಸಂಘಟನೆಗಳಿಗೆ ನೇಮಕಮಾಡುತ್ತದೆ ಮತ್ತು ಆ ರೀತಿಯೇ ನೇಮಕ ಮಾಡಬೇಕು. ಇವರನ್ನು ಬಿಟ್ಟು ಭೈರಪ್ಪ, ಚಿದಾನಂದ ಮೂರ್ತಿ, ದೊಡ್ಡರಂಗೇಗೌಡರನ್ನು ನೇಮಕಮಾಡೋಕ್ಕಾಗುತ್ತಾ?
ಈ ರೀತಿ ನೇಮಕಗೊಂಡವರಲ್ಲಿ ಯಾರಾದರೂ ತಮ್ಮ ಸೈದ್ಧಾಂತಿಕ ಬದ್ದತೆಯಲ್ಲಿ ರಾಜಿ ಮಾಡಿಕೊಂಡ ಉದಾಹರಣೆಗಳಿದ್ದರೆ ತಿಳಿಸಿ. ಇವರಲ್ಲಿ ಯಾರಾದರೂ ತಮ್ಮ ಅರ್ಹತೆಯನ್ನು ಮೀರಿ ಸ್ಥಾನಮಾನ ಗಳಿಸಿದ್ದರೆ ಅದನ್ನೂ ತಿಳಿಸಿ.
ಪ್ರಗತಿಪರರು ಯಾರು ಎನ್ನುವ ವ್ಯಾಖ್ಯಾನದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಕಾಗಿಲ್ಲ ಸ್ವಾಮಿ. ಬಹಳ ಸರಳವಾಗಿದೆ. ಪ್ರಗತಿವಿರೋಧಿಗಳಲ್ಲದವರೆಲ್ಲರೂ ಪ್ರಗತಿಪರರೇ ಆಗಿರುತ್ತಾರೆ. ಪ್ರಗತಿ ಎಂದರೆ ಏನು ಎನ್ನುವ ಉಡಾಫೆ ಪ್ರಶ್ನೆ ಕೇಳಿದರೆ ಅದಕ್ಕೆ ನನ್ನ ಉತ್ತರ: ಬಸವ,ಗಾಂಧಿ,ಅಂಬೇಡ್ಕರ್, ಲೋಹಿಯಾ ಹೇಳಿರುವ ಪ್ರಗತಿ.
ಪ್ರಗತಿಪರರು ಪರಿಪೂರ್ಣರೇ? ಖಂಡಿತ ಅಲ್ಲ, ಮನುಷ್ಯ ಮಾತ್ರರಾದ ಅವರಲ್ಲಿಯೂ ಸಣ್ಣಪುಟ್ಟ ಆಸೆ, ಲೋಭ, ಸ್ವಾರ್ಥ, ಅಸೂಯೆಗಳಿರಬಹುದು. ಇವರ ನಡುವೆ ಪರಸ್ಪರ ಆಂತರಿಕ ಭಿನ್ನಾಭಿಪ್ರಾಯಗಳೂ ಇರಬಹುದು. ಹೀಗಿದ್ದರೂ ಫ್ಯಾಸಿಸಮ್, ಸರ್ವಾಧಿಕಾರ ಮತ್ತು ಕೋಮುವಾದದ ಪ್ರಶ್ನೆಗಳು ಎದುರಾದಾಗ ಭಿನ್ನತೆಗಳನ್ನೆಲ್ಲವನ್ನೂ ಮರೆತು ಒಂದಾಗಿ ಇವರು ಕೈಕೈ ಹಿಡಿದು ಬೀದಿಗಿಳಿದಿದ್ದಾರೆ. ದೇಶ-ಕಾಲದ ಕರೆಗೆ ತಕ್ಕ ಹಾಗೆ ತಮ್ಮ ಶತ್ರುಗಳನ್ನು ಅವರು ಬದಲಾಯಿಸಿಕೊಂಡಿದ್ದಾರೆ, ಅಷ್ಟೆ.
ಕಾಲದ ಚಕ್ರ ಒಂದು ಸುತ್ತು ಮುಗಿಸಿದೆ. ಕಾಂಗ್ರೆಸ್ ಜಾಗದಲ್ಲಿ ಬಿಜೆಪಿ ಬಂದು ನಿಂತಿದೆ. ಹಳೆಯ ಸರ್ವಾಧಿಕಾರಿ ಇಂದಿರಾಗಾಂಧಿಯ ಸ್ಥಾನದಲ್ಲಿ ಕೋಮುವಾದದ ವಿಷಯೇರಿಸಿಕೊಂಡ ಹೊಸ ಸರ್ವಾಧಿಕಾರಿ ಅಬ್ಬರಿಸುತ್ತಿದ್ದಾರೆ.ಸರ್ವಾಧಿಕಾರಕ್ಕೆ ಬಲಿಯಾದವರೇ ಸರ್ವಾಧಿಕಾರಿಯ ಭಕ್ತರಾಗಿರುವ ವಿಚಿತ್ರ ಪರಿಸ್ಥಿತಿಯಲ್ಲಿ ‘’ಮೆದುಳು ತೊಳೆಯಲು’’ ನಮಗೆ ಇನ್ನಷ್ಟು ಸಂಖ್ಯೆಯ ಪ್ರಗತಿಪರರು ಬೇಕು. ಸಾಧ್ಯವಾದರೆ ಈ ಪ್ರಯತ್ನಕ್ಕೆ ಇದಕ್ಕೆ ಕೈಜೋಡಿಸಿ. ಅದು ಬಿಟ್ಟು ಅಡ್ಡಗೋಡೆಯ ಮೇಲೆ ಕೂತು ಅವರತ್ತ ಕಲ್ಲೆಸೆದು, ಅವರ ಬಗ್ಗೆ ಇನ್ನಷ್ಟು ಸಂಶಯಗಳನ್ನು ಹುಟ್ಟುಹಾಕಿ ನೈತಿಕವಾಗಿ ಅವರು ಕುಸಿಯುವಂತೆ ಮಾಡುವ ಜನದ್ರೋಹದ ಕೆಲಸ ಮಾಡಬೇಡಿ
ಪ್ರಗತಿಪರರನ್ನು ಹಂಗಿಸಿ, ನಿಂದಿಸಿ ಮೂಲೆಗೆ ತಳ್ಳುವ ಈ ಹುನ್ನಾರ ಪ್ರಾರಂಭಿಸಿದವರು ಬಲಪಂಥೀಯ ಪಡೆ. ಈಗ ನಮ್ಮವರೇ ಕೆಲವರು ಆ ಖೆಡ್ಡಾದಲ್ಲಿ ಬಿದ್ದಿದ್ದಾರೆ. ಅರಿವಿಲ್ಲದೆ ಖೆಡ್ಡಾದಲ್ಲಿ ಬಿದ್ದಿದ್ದರೆ ಅವರನ್ನೂ ಎತ್ತಿ ನಮ್ಮೊಂದಿಗೆ ಕರೆದೊಯ್ಯೋಣ. ಎಲ್ಲವೂ ಅರಿವಿದ್ದು ಆ ಕಡೆಯಿಂದ ಸುಫಾ ರಿ ಪಡೆದಿದ್ದರೆ ಅವರವರ ಕರ್ಮ ನಾವೇನು ಮಾಡಲಾಗದು. ನಾವು ಅಂಪೈರ್ ಗಳಲ್ಲ, ಆಟಗಾರರು. ಗೆಲುವು ನಮ್ಮದೇ.
(ಇಷ್ಟು ಬರೆಯಲು ಸ್ಪೂರ್ತಿ ನೀಡಿದ N A Mahamad Ismail ಪೋಸ್ಟ್ ಗೆ ಋಣಿಯಾಗಿದ್ದೇನೆ)
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


