ಅಂತರಂಗ
ಅರಿಮೆಯ ಅರಿವಿರಲಿ-54 : ಮನಸಿನ ಸುಳಿಯಲ್ಲಿ ಮೈ
- ಯೋಗೇಶ್ ಮಾಸ್ಟರ್
ಆಲೋಚನೆ, ಅದೇನು ಬರತ್ವೆ ಹೋಗತ್ವೆ ಚಲಿಸುವ ಮೋಡಗಳಂತೆ. ಇಷ್ಟೇ ಆಗಿದ್ದರೆ ಇಷ್ಟು ಬರೆಯುವ ಅಗತ್ಯವೇನಿರುತ್ತಿತ್ತು! ಅವುಗಳು ಸುಳಿಯುತ್ತವೆ, ಸುಳಿದಾಡುತ್ತವೆ, ಸುಳಿಯಾಗಿ ಮೈಯನ್ನೂ ಒಳಗೆಳೆದುಕೊಳ್ಳುತ್ತವೆ.
ಅಲೆಕ್ಸ್ ಪ್ರಸಂಗ
ಅದೊಂದು ಕ್ರೈಸ್ತ ಅಧ್ಯಯನ ಸಂಸ್ಥೆ. ಪಾದ್ರಿಯಾಗಲು ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿಗಳು ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಆ ವಿದ್ಯಾರ್ಥಿಗಳಲ್ಲಿ ಅಲೆಕ್ಸ್ ಒಳ್ಳೆಯ ಕಟ್ಟುಮಸ್ತಾದ, ಹುರುಪುಗಟ್ಟಿದ ದೇಹದವನು. ಪ್ರತಿದಿನವೂ ಬೆಳಗ್ಗೆಯೇ ವ್ಯಾಯಾಮ ಮಾಡುತ್ತಿದ್ದ. ಅತ್ಯಂತ ಕಟ್ಟುನಿಟ್ಟಾಗಿ ಊಟದ ವಿಷಯದಲ್ಲಿ ಕ್ರಮವನ್ನು ಅನುಸರಿಸುತ್ತಿದ್ದ. ಎಂದಿಗೂ ಕಣ್ಣಿನ ಆಸೆಗೆ, ನಾಲಿಗೆಯ ಚಪಲಕ್ಕೆ ಮುಕ್ಕಿದವನೇ ಅಲ್ಲ. ಕಸ ತಿನ್ನುವ ಬದಲು ತುಸ ತಿನ್ನು ಎಂದು ತಿಳಿದವನು.
ಲಘನಂ ಪರಮೌಷಧಂ ಎನ್ನುವಂತೆ (ಉಪವಾಸವೇ ಉತ್ತಮ ಚಿಕಿತ್ಸೆ) ಅವರ ಉಪವಾಸ ಕಾಲವಿಲ್ಲದಿದ್ದರೂ (ಲೆಂಟ್ ಸೀಸನ್) ಕಾಲಕಾಲಕ್ಕೆ ಉಪವಾಸವನ್ನು ಮಾಡುತ್ತಿದ್ದ. ಆದರೆ ತಾನು ಎಂದಿಗೂ ಜ್ವರ ಬಂದು ಮಲಗೇ ಇಲ್ಲ, ಡಾಕ್ಟರ್ ಬಳಿಗೆ ಹೋಗುವುದೇ ಇಲ್ಲ ಎನ್ನುವ ಅವನ ಹೆಮ್ಮೆ ಅಥವಾ ನೋಡುಗರ ದೃಷ್ಟಿಯ ‘ಜಂಭ’ ಹಲವು ವಿದ್ಯಾರ್ಥಿ ಗೆಳೆಯರ ಅಣಕಿಸುತ್ತಿತ್ತು. ಅವನಿಗೆ ಹೇಗಾದರೂ ಮಾಡಿ ಬುದ್ಧಿ ಕಲಿಸಬೇಕು ಎಂದು ತೀರ್ಮಾನಿಸಿದರು.
ಒಂದು ಬೆಳಗ್ಗೆ ಅಲೆಕ್ಸ್ ತನ್ನ ವ್ಯಾಯಾಮ ಶಾಲೆಯಿಂದ ಹೊರಗೆ ಬರುತ್ತಿದ್ದಂತೆ ಎದುರಾದ ಒಬ್ಬ ಸೋದರ ಕೇಳಿದ, “ಯಾಕೆ ಅಲೆಕ್ಸ್? ಒಂದು ತರಾ ಇದ್ದೀಯಾ?” ಎಂದು.
ಅಲೆಕ್ಸ್ ತಾನು ಸರಿಯಿದ್ದೇನೆ ಎಂದು ಮುಂದೆ ಹೋದ. ಆದರೆ ಅವನಿಗೆ ಎದುರಾದ ಮಿತ್ರರೆಲ್ಲಾ “ರಾತ್ರಿಯೆಲ್ಲಾ ನಿದ್ದೆ ಕೆಟ್ಟಾ?”, “ಮುಖವೇಕೆ ಬಾಡಿದೆ?”, “ಮೈ ಹುಷಾರಿಲ್ಲವಾ?”, “ಆರ್ ಯೂ ಆಲ್ ರೈಟ್?” ಇತ್ಯಾದಿ ಕೇಳುತ್ತಲೇ ಇದ್ದರು. ಸಂಜೆ ಐದೂವರೆಯ ಹೊತ್ತಿಗೆ ಅಲೆಕ್ಸ್ಗೆ ಹೈ ಟೆಂಪರೇಚರಲ್ಲಿ ಜ್ವರ ಬಂದಿತ್ತು.
ಸಾರಾ ಪ್ರಸಂಗ
ಸಾರಾ ಶಾಲೆಯೊಂದರಲ್ಲಿ ಉಪಾಧ್ಯಾಯಿನಿ. ಆಕೆ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದಾಗ ಚಲಿಸುವ ಜೀಪಿನಿಂದ ಸ್ಟೆಪ್ನಿ ಟಯರೊಂದು ಕೆಳಗೆ ಬಿದ್ದು ಆಕೆಗೆ ಬಡಿದು ಅವಳನ್ನು ದೊಡ್ಡ ಹಳ್ಳಕ್ಕೆ ತಳ್ಳಿತ್ತು. ಇದರಿಂದ ಮೂರ್ಚಿತಳಾಗಿ ಬಿದ್ದ ಸಾರಾಗೆ ಕಾಲಿನ ಮೂಳೆ ವಿವಿಧ ಭಾಗಗಳಲ್ಲಿ ಮುರಿದಿತ್ತು. ಅವಳನ್ನು ಆಸ್ಪತ್ರೆಗೆ ಸೇರಿಸಿದರು. ಅಲ್ಲಿಯೇ ಒಳರೋಗಿಯಾಗಿ ಇದ್ದು ಕೆಲವು ಶಸ್ತ್ರಚಿಕಿತ್ಸೆಗೆ ಸಾರ ಒಳಗಾದಳು. ಸುಮಾರು ಆರು ತಿಂಗಳ ನಂತರ ಅವಳು ಕ್ಲಿನಿಕಲಿ ಫಿಟ್ ಎಂದು ಹೇಳಿ ಡಾಕ್ಟರ್ ಸರ್ಟಿಫೈ ಮಾಡಿದರೂ ಅವಳು ಎದ್ದು ನಡೆದಾಡಲು ಸಾಧ್ಯವಾಗಲಿಲ್ಲ. ಅವಳಿಗೆ ಒಂದು ಹೆಜ್ಜೆಯೂ ಇಡಲಾಗುತ್ತಿರಲಿಲ್ಲ.
ಸಾವಿತ್ರಮ್ಮ ಪ್ರಸಂಗ
ಸಾವಿತ್ರಮ್ಮ ಎಂಬ ಗೃಹಿಣಿ ಗರ್ಭಿಣಿಗೆ ತಪಾಸಣೆಯ ಸಮಯದಲ್ಲಿ ಮಗುವಿನ ಹೃದಯ ದುರ್ಬಲವಾಗಿದೆಯೆಂದೂ, ಸ್ಪಂದಿಸುತ್ತಿರುವುದು ಬರುಬರುತ್ತಾ ಕ್ಷೀಣವಾಗುತ್ತಿದೆಯೆಂದೂ, ಬಹುಶಃ ಉಳಿಯಲಾರದೆಂದೂ ಡಾಕ್ಟರ್ ಹೇಳಿದ್ದರು. ಆದರೆ ಒಂದು ದಿನದ ಕಾಲಾವಕಾಶ ಕೇಳಿದ ಸಾವಿತ್ರಮ್ಮ ತನ್ನ ಗುರುಗಳೋರ್ವರ (ಈ ಲೇಖನ ಬರೆದವನು) ಹತ್ತಿರ ಹೋಗಿ ವಿಷಯವನ್ನು ತಿಳಿಸಿದಳು.
ಮಗುವು ಜೀವಂತವಾಗಿರುವುದಕ್ಕೆ ಮಾತ್ರವಲ್ಲದೇ, ಅದು ಆರೋಗ್ಯವಾಗಿರುವಂತೆ ಸಂಕಲ್ಪ ಮಾಡಿಕೊಂಡಳು. ಮರುದಿನ ಡಾಕ್ಟರ್ ಹತ್ತಿರ ಹೋದಾಗ ಮಗುವು ಸ್ಪಂದಿಸುತ್ತಿದೆಯೆಂದೂ, ಹೃದಯ ಬಡಿತವು ಸಾಮಾನ್ಯವಾಗಿದೆ ಎಂದೂ ತಿಳಿಯಿತು. ಆ ಮಗುವಿನ ಸುಖ ಪ್ರಸವವಾಯಿತು.
ಮಂಜು ಪ್ರಸಂಗ
ಮಂಜುಳಾಳ ವಿಷಯದಲ್ಲಿ ಗರ್ಭ ನಿರೋಧಕ ಔಷಧಿಯ ನಂತರ ಗರ್ಭಧಾರಣೆಯಾಗಿತ್ತು. ಕೆಲವರು ತಮ್ಮ ಅನುಭವ ಮತ್ತು ಸಾಕ್ಷೀಕರಿಸಿದ ಸಂಗತಿಗಳ ಪ್ರಕಾರ ಆ ಮಗುವಿಗೆ ಮೆದುಳಿನ ಅಥವಾ ನರಗಳ ಅಥವಾ ಯಾವುದಾದರೂ ಅಂಗಗಳ ನ್ಯೂನ್ಯತೆಗಳಿರುತ್ತವೆ ಎಂದೂ, ಅಥವಾ ಇನ್ನೇನಾದರೂ ಸಮಸ್ಯೆ ಇರುತ್ತದೆ ಎಂದೂ ಹೇಳಿದರು.
ಎಲ್ಲರೂ ಗರ್ಭಪಾತ ಮಾಡಿಸಲು ಸೂಚಿಸುತ್ತಿದ್ದರು. ತನ್ನ ಮೊದಲ ಗರ್ಭಧಾರಣೆಯಾದ ಕಾರಣದಿಂದ ಗರ್ಭಪಾತಕ್ಕೆ ಇಷ್ಟವಿಲ್ಲದ ಮಂಜು ಸಕಾರಾತ್ಮಕವಾಗಿ ಹೇಳುವ ಬೇರೊಂದು ವೈದ್ಯರಿಂದ ಸೆಕೆಂಡ್ ಒಪಿನಿಯನ್ ತೆಗೆದುಕೊಳ್ಳಲು ಯತ್ನಿಸುತ್ತಿದ್ದಳು. ಜೊತೆಗೆ ಅವಳಿಗೆ ತಂದೆ ಸಮಾನದಲ್ಲಿ ಅವಳೊಡನೆ ಬೆಂಬಲವಾಗಿದ್ದ ಗುರುಗಳ ಮೂಲಕ ಸಾವಿತ್ರಮ್ಮನ ಪ್ರಸಂಗದ ಜೀವಂತ ಉದಾಹರಣೆ ಕಣ್ಣ ಮುಂದಿತ್ತು.
ಗರ್ಭಕಟ್ಟಿದ, ಗರ್ಭನಿರೋಧಕ ಔಷಧಿಯನ್ನು ತೆಗೆದುಕೊಂಡ ಅವಧಿಗಳನ್ನೆಲ್ಲಾ ಕೂಲಂಕುಶವಾಗಿ ವಿಚಾರ ಮಾಡಿದ ಮತ್ತೊಬ್ಬ ವೈದ್ಯರು 50-50 ಎಂದರು.
ಕೆಲವೊಮ್ಮೆ ಆ ಬಗೆಯ ಸಮಸ್ಯೆಗಳಾಗಬಹುದು. ಕೆಲವೊಮ್ಮೆ ಸಮಸ್ಯೆ ಆಗದಿರಲೂಬಹುದು ಎಂದರು. ಮಂಜು ಮಗುವಾಗಲಿ ಎಂದು ಬಯಸಿದಳು. ಆದುದ್ದಾಗಲಿ ನೋಡೇಬಿಡೋಣ ಎಂದು ಕಾದಳು. ಹೆಣ್ಣುಮಗು ಜನಿಸಿತು. ಆರೋಗ್ಯವಾಗಿತ್ತು. ಈಗ ಆ ಮಗು ಶಾಲೆಗೆ ಹೋಗುತ್ತಿದೆ. ಸುಂದರ ಮತ್ತು ಆರೋಗ್ಯವಾಗಿರುವ ಆ ಮಗು ನೃತ್ಯ ಕಲಿಯುತ್ತಿದೆ. ಮನೆಯವರೆಲ್ಲರ ಕಣ್ಮಣಿಯಾಗಿ ಬೆಳೆಯುತ್ತಿದೆ.
ಭಾಗ್ಯಮ್ಮನ ಪ್ರಸಂಗ
ಅದೊಂದು ತುಂಬು ಕುಟುಂಬ. ಭಾಗ್ಯಮ್ಮ ಹಿರಿಯ ಸೊಸೆ. ಬೆಳಗ್ಗಿನಿಂದ ರಾತ್ರಿಯವರೆಗೂ ಕೆಲಸ. ಗಂಡ, ಅತ್ತೆ, ಮಾವ, ಮೈದುನಂದಿರು, ವಾರಗಿತ್ತಿಯರು, ಎಲ್ಲರ ಮಕ್ಕಳು, ಮನೆಯ ಕೆಲಸದಾಳುಗಳು, ಮನೆಯ ವ್ಯವಹಾರ, ಅಂಗಡಿಗೆ ಹೋಗಿ ಸಾಮಾನುಗಳನ್ನು ತರುವುದರಿಂದ ಹಿಡಿದು ಅಡುಗೆ ಮಾಡಿ ಬಡಿಸುವವರೆಗೂ ಅವಳದೇ ಉಸ್ತುವಾರಿ, ಅವಳದೇ ಜವಾಬ್ದಾರಿ.
ಕಬ್ಬಿಣದ ಪೆಟ್ಟಿಗೆಯಲ್ಲಿ ಇಡುವ ಹಣ ಮತ್ತು ವಡವೆಗಳಿಂದ ಹಿಡಿದು, ಕೂಲಿಯವರಿಗೆ ಕೊಡುವ ಸಂಬಳ, ಮನೆಯವರಿಗೆ ವ್ಯವಹಾರಕ್ಕೆ ಕೊಡುವ ಹಣ, ವಾರಗಿತ್ತಿಯರಿಗೆ, ಮಕ್ಕಳಿಗೆ ಕೊಡುವ ಖರ್ಚು ಎಲ್ಲವೂ ಅವಳ ಸುಪರ್ದಿನಲ್ಲೇ ಇರುವುದು.
ಕೆಲವೊಮ್ಮೆ ಅವಳಿಗೆ ಜ್ವರ ಬರುವುದು. ಭಯಂಕರವಾಗಿ ಹುಷಾರು ತಪ್ಪುವುದು. ಹಾಸಿಗೆ ಹಿಡಿಯುವಳು. ಯಾವ ಡಾಕ್ಟರು ಎಷ್ಟು ನೋಡಿದರೂ, ಏನೇ ಔಷಧಿ ಕೊಟ್ಟರೂ ವಾಸಿಯಾಗುವುದಿಲ್ಲ. ಒಂದಷ್ಟು ಕಾಲ ಹಾಸುಗೆ ಹಿಡಿದೇ ಹಿಡಿಯುವಳು. ನಂತರ ತಾನಾಗಿಯೇ ವಾಸಿಯಾಗಿ ತನ್ನ ಜವಾಬ್ದಾರಿಯ ನೊಗಕ್ಕೆ ತನ್ನ ಹೆಗಲನ್ನು ಕೊಡುವಳು.
ಪ್ರಸಂಗಗಳ ವಿಶ್ಲೇಷಣೆ
ಅಲೆಕ್ಸ್ ಪ್ರಸಂಗದಲ್ಲಿ ತನ್ನ ಭೇಟಿಯಾಗುತ್ತಿದ್ದ ಒಬ್ಬೊಬ್ಬರೂ ಕೂಡಾ ನಿನಗೇನೋ ಆಗಿದೆ, ನೀನು ಹುಷಾರು ತಪ್ಪಿದಂತೆ ಕಾಣುತ್ತಿದ್ದೀಯಾ, ನಿನ್ನಲ್ಲಿ ಸಮಸ್ಯೆ ಇದೆ ಎಂದು ಒಂದೇ ಸಮನೆ ಹೇಳುತ್ತಿದ್ದರು. ಮೊದಮೊದಲು ನಿರಾಕರಿಸಿದ ಅಲೆಕ್ಸ್ ನಂತರ ಇಷ್ಟು ಜನ ಹೇಳುತ್ತಿರುವಾಗ ಬಹುಶಃ ನಿಜವೇ ಇರಬಹುದೆಂದು ನಂಬತೊಡಗಿದ. ತನಗೆ ಹುಷಾರು ತಪ್ಪಿದೆ ಎಂದು ಅನ್ನಿಸತೊಡಗಿದಾಗ, ಅದನ್ನು ನಂಬತೊಡಗಿದಾಗ ನಿಜವಾಗಿಯೇ ಹುಷಾರು ತಪ್ಪಿದ.
ತನಗೆ ನೀಡುತ್ತಿದ್ದ ನಕಾರಾತ್ಮಕ ಸೂಚನೆಗಳನ್ನು ತೆಗೆದುಕೊಂಡದಷ್ಟೇ ಅಲ್ಲದೇ ಅದನ್ನು ನಂಬಿದರಿಂದ ಅವನಿಗೆ ಅವನು ಸ್ವೀಕರಿಸಿದ ಸೂಚನೆಯ ಸ್ಥಿತಿಯನ್ನೇ ಪಡೆದ.
ಸಾರಾ ಪ್ರಸಂಗದಲ್ಲಿ, ಅವಳು ಸ್ಟೆಪ್ನಿ ಟಯರ್ ತಗುಲಿ ಹಳ್ಳಕ್ಕೆ ಬಿದ್ದು, ಮಲ್ಟಿಪಲ್ ಫ್ರಾಕ್ಚರ್ ಆದ ಮೇಲೆ ಆಸ್ಪತ್ರೆಗೆ ಸೇರಿಸಿದ್ದರು. ಆಸ್ಪತ್ರೆಯಲ್ಲಿ ಸಾರಾ ಮೂರ್ಚಾವಸ್ಥೆಯಲ್ಲಿ ಇರುವಾಗ ನೆಲ ಸಾರಿಸುತ್ತಿದ್ದ ಇಬ್ಬರು ಹೆಂಗಸರು ಸಾರಾಳ ಸ್ಥಿತಿಗೆ ಮರುಗುತ್ತಾ, “ಪಾಪ, ಇಷ್ಟು ದೊಡ್ಡ ಪೆಟ್ಟಾಗಿ ಕಾಲು ಹೀಗೆ ಮುರಿದುಹೋಗಿದೆ. ಇನ್ನು ಮುಂದೆ ಎಂದಿಗೂ ಇವಳು ನಡೆಯಲಾರಳು” ಎಂಬರ್ಥದಲ್ಲಿ ಚರ್ಚಿಸಿದ್ದರು.
ಸಾರಾ ಜಾಗೃತವಾಗಿರದಿದ್ದರೂ ಅವಳ ಮನಸ್ಸಿನ ಸುಪ್ತಚೇತನ ಅದನ್ನು ಒಪ್ಪಿಬಿಟ್ಟಿತ್ತು. ಅದನ್ನು ಸತ್ಯವೆಂದು ನಂಬಿತ್ತು. ಹಾಗಾಗಿ ಅವಳು ಸಂಪೂರ್ಣ ಗುಣಮುಖಳಾಗಿದ್ದರೂ ಅವಳ ಒಳಮನಸ್ಸು ಅವಳಿಗೆ ನಡೆಯಲು ಬಿಟ್ಟಿರಲಿಲ್ಲ. ಮತ್ತೆ ಅವಳನ್ನು ಸಂಮೋಹನಕ್ಕೊಳಪಡಿಸಿ, ಸಮಾಲೋಚನೆಗಳಿಂದ ಅವಳಿಗೆ ನಡೆಯಲು ಸಾಧ್ಯವಿದೆ ಎಂದು ಮನವರಿಕೆ ಮಾಡಿಸಿದ ಮೇಲೆ ಎಂದಿನಂತೆ ನಡೆಯತೊಡಗಿದಳು.
ಸಾವಿತ್ರಮ್ಮನೋ, ಅವಳಿಗೆ ಅವಳ ಗುರುಗಳು ಹೇಳಿದ್ದರು. ತಮ್ಮ ದೇಹದ ಆರೋಗ್ಯ ಮತ್ತು ಗರ್ಭದೊಳಗಿನ ಶಿಶುವಿನ ಬೆಳವಣಿಗೆಯು ತಾಯಿಯ ಆಲೋಚನೆಯ ಮೇಲೆ ಅವಲಂಬಿಸಿರುತ್ತದೆ ಎಂದು. ಹಾಗಾಗಿ, ವೈದ್ಯರು ಮಗುವು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದಾಗ, ಅವಳು ದಿನ ಪೂರ್ತಿ ಸುಮಧುರ ಸಂಗೀತವನ್ನು ಕೇಳುತ್ತಾ, ಗುರುಗಳು ನೀಡುತ್ತಿದ್ದ ಸಕಾರಾತ್ಮಕ ಸಂದೇಶಗಳನ್ನು ಕೇಳುತ್ತಾ ತನ್ನ ಮಗುವು ಆರೋಗ್ಯವಾಗಿಯೂ, ಜೀವಂತವಾಗಿಯೂ ತನ್ನ ಜೊತೆಯಲ್ಲಿರಬೇಕೆಂದು ಬಯಸಿದ್ದಳು.
ಅದೊಂದು ವೈದ್ಯಕೀಯ ಪವಾಡವೆಂದು ಡಾಕ್ಟರ್ ಉದ್ಗರಿಸುವಂತೆ ಮರುದಿನದ ತಪಾಸಣೆಯ ಸಂದರ್ಭದಲ್ಲಿ ಮಗುವು ಸ್ಪಂದಿಸುತ್ತಿತ್ತು.
ಅದೇ ರೀತಿ ಮಂಜು ಕೂಡಾ, 50-50 ಎಂದು ಹೇಳಿದ ವೈದ್ಯರ ಮಾತಲ್ಲಿ ತನಗೆ ಬೇಕಾದ ಸಮಸ್ಯೆ ಇಲ್ಲದ ಮಗುವು ಹುಟ್ಟುತ್ತದೆ ಎಂಬ ಮಾತನ್ನು ಮಾತ್ರ ಸ್ವೀಕರಿಸಿದಳು. ಅದರಂತೆಯೇ ತನ್ನ ಗರ್ಭದೊಳಗಿನ ಮಗುವು ಆರೋಗ್ಯವಾಗಿ, ಚೆನ್ನಾಗಿ ಇರುವುದರ ಚಿತ್ರಣವನ್ನು ಮನಸ್ಸಿನ ಪರದೆಯ ಮೇಲೆ ರೂಪಿಸಿಕೊಂಡು ಬಸುರಿನ ದಿನಗಳನ್ನು ಕಳೆದಳು. ಆರೋಗ್ಯವಾಗಿರುವ ಮಗುವು ಹುಟ್ಟಿತು.
ಭಾಗ್ಯಮ್ಮನ ಪ್ರಸಂಗದಲ್ಲಿ, ದಿನನಿತ್ಯವೂ ಇಡೀ ಸಂಸಾರದ ನೊಗಕ್ಕೆ ಹೆಗಲುಗೊಟ್ಟು ದುಡಿವ ಅವಳಿಗೆ ಮನೆಯಲ್ಲಿ ಯಾರೊಬ್ಬರಿಗೂ ನೀನು ಹೇಗಿದ್ದೀಯಾ? ಉಂಡೆಯಾ? ಕುಡಿದೆಯಾ? ಸ್ನಾನ ಆಯಿತಾ? ಯಾವ ಬಟ್ಟೆ ಹಾಕಿಕೊಳ್ಳುತ್ತಿದ್ದೀಯಾ? ಎಂದು ಕೇಳುವವರು, ಉಪಚರಿಸುವವರು ಯಾರೂ ಇರುತ್ತಿರಲಿಲ್ಲ. ಹಾಗೆ ಉಪಚರಿಸಬಾರದೆಂದೇನೂ ಯಾರಿಗೂ ಇಲ್ಲ ಆದರೆ, ಅವಳೇ ಉಪಚಾರ ಮಾಡುವವಳಾಗಿದ್ದಳು.
ಎಲ್ಲರನ್ನೂ ನೋಡಿಕೊಳ್ಳುವ ಅವಳನ್ನು ನೋಡಿಕೊಳ್ಳಬೇಕೆಂಬ ಅಗತ್ಯ ಇದೆ ಎಂದು ಯಾರಿಗೂ ಅನ್ನಿಸಿಯೇ ಇರಲಿಲ್ಲ. ಹೀಗೆ ಯಾವುದಾದರೂ ಕಾರಣಕ್ಕೆ ಸಣ್ಣ ಜ್ವರ ಬಂದರೆ, ಪುಟ್ಟದಾಗಿ ಹುಷಾರು ತಪ್ಪಿದರೂ ಅವಳು ಗಂಭೀರವಾಗಿ ಮಲಗಿಬಿಡುತ್ತಿದ್ದಳು. ತನ್ನ ಜ್ವರವನ್ನು ವಾಸಿ ಮಾಡಿಕೊಳ್ಳಲು ಬಿಡುತ್ತಿರಲಿಲ್ಲ. ಅವಳು ಮಲಗಿದರೆ ಎಲ್ಲರೂ ಅವಳ ಉಪಚಾರಕ್ಕೆ ಮುಂದಾಗುತ್ತಿದ್ದರು.
ಹಣ್ಣು ಹಂಪಲು ಕೊಡುವುದು, ಹಣ್ಣಿನ ರಸ ಮತ್ತು ಔಷಧಿಯನ್ನು ಕುಡಿಸುವುದು, ಹೇಗಿದೆ? ಹೇಗನಿಸುತ್ತಿದೆ? ಬೇಗ ಹುಷಾರಾಗು ಎಂದು ನೋಡಿಕೊಳ್ಳುವುದೆಲ್ಲಾ ಆಗುತ್ತಿತ್ತು. ಈ ಬಗೆಯ ಪ್ರೀತಿಯ ಮತ್ತು ಕಾಳಜಿಯ ಕ್ಷಣಗಳನ್ನು ಅನುಭವಿಸಲು, ಆನಂದಿಸಲು ಭಾಗ್ಯಮ್ಮ ತನ್ನ ಜ್ವರವನ್ನು ಹೋಗಗೊಡುತ್ತಿರಲಿಲ್ಲ. ತನ್ನ ಜ್ವರದಿಂದ ಸಿಗುವಂತಹ ಸೆಕೆಂಡರಿ ಬೆನಿಫಿಟ್ ಅವಳಿಗೆ ತುಂಬಾ ಮುಖ್ಯ ಅನ್ನಿಸುತ್ತಿತ್ತು.
ಈ ಪ್ರಸಂಗಗಳನ್ನೆಲ್ಲಾ ಗಮನಿಸಿದರೆ, ಮಾಡುವ ಆಲೋಚನೆ, ಹೊಂದುವ ಚಿಂತನೆಗಳು, ರೂಪಿಸಿಕೊಳ್ಳುವ ಚಿತ್ರಣಗಳು ಜೈವಿಕವಾದಂತಹ ಪರಿಣಾಮವನ್ನು ಬೀರುತ್ತವೆ ಎಂದು ಅನಿಸುತ್ತದೆ, ಅಲ್ಲವೇ?
(ಮುಂದುವರಿಯುವುದು)
- ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ
-
ದಿನದ ಸುದ್ದಿ7 days agoಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
-
ದಿನದ ಸುದ್ದಿ4 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ4 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ5 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ5 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ5 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ5 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

