Connect with us

ದಿನದ ಸುದ್ದಿ

ವಿಧಾನಸಭಾ ಚುನಾವಣೆ | ಬಹಿರಂಗ ಪ್ರಚಾರಕ್ಕೆ ತೆರೆ : ಮತದಾನಕ್ಕೆ ಸಕಲ ಸಿದ್ಧತೆ

Published

on

ಸುದ್ದಿದಿನ, ಬೆಂಗಳೂರು : ಇದೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸಂಜೆ ತೆರೆ ಬಿದ್ದಿದೆ. ಇನ್ನೇನಿದ್ದರು ಅಭ್ಯರ್ಥಿಗಳು ಮತ್ತು ಸ್ಥಳೀಯ ರಾಜಕೀಯ ಮುಖಂಡರು ಮನೆ-ಮನೆಗೆ ತೆರಳಿ ಮತಯಾಚನೆಗೆ ಅವಕಾಶವಿರುತ್ತದೆ.

ಬಹಿರಂಗ ಪ್ರಚಾರದ ಗಡುವು ಮುಗಿದಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ವಿವಿಧ ರಾಜಕೀಯ ಪಕ್ಷಗಳ ತಾರಾಪ್ರಚಾರಕರು ಹಾಗೂ ಆಯಾ ವಿಧಾನಸಭಾ ಕ್ಷೇತ್ರಗಳ ಮತಪಟ್ಟಿಯಲ್ಲಿ ಹೆಸರಿಲ್ಲದ ರಾಜಕೀಯ ನಾಯಕರು ಸೇರಿದಂತೆ ಎಲ್ಲ ಮುಖಂಡರು ಕ್ಷೇತ್ರಗಳನ್ನು ಖಾಲಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಒಂದೇ ಹಂತದ ಮತದಾನ

ರಾಜ್ಯದ ಎಲ್ಲ 224 ಕ್ಷೇತ್ರಗಳಿಗೆ ನಾಡಿದ್ದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮುಕ್ತ ಹಾಗೂ ನ್ಯಾಯಸಮ್ಮತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಅಂದು ಬೆಳಗ್ಗೆ7 ರಿಂದ ಸಂಜೆ 6 ಗಂಟೆವರೆಗೆ ಮತದಾರರು ತಮ್ಮ ಸಂವಿಧಾನಬದ್ಧ ಹಕ್ಕನ್ನು ಚಲಾಯಿಸಲು ಆಯೋಗ ಅನುವು ಮಾಡಿಕೊಟ್ಟಿದೆ.

ಈ ನಡುವೆ 80 ವರ್ಷ ಮೇಲ್ಪಟ್ಟ ಹಾಗೂ ದಿವ್ಯಾಂಗರು ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಅವಕಾಶ ಮಾಡಿಕೊಟ್ಟಿತ್ತು. ಈ ಸದಾವಕಾಶವನ್ನು ಹಿರಿಯ ನಾಗರಿಕರು ಮತ್ತು ದಿವ್ಯಾಂಗರು ಅಧಿಕ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಂಡಿರುವುದು ಆಯೋಗದ ವರದಿಯಿಂದ ತಿಳಿದುಬಂದಿದೆ.

ಬಹಿರಂಗ ಪ್ರಚಾರ

ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಗಡುವಿಗೆ ಮುನ್ನ ಬಿಜೆಪಿ, ಕಾಂಗ್ರೆಸ್,ಜೆಡಿಎಸ್, ಆಮ್ ಆದ್ಮಿ ಪಕ್ಷ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರು ಸಾರ್ವಜನಿಕ ಸಭೆ, ರೋಡ್ ಶೋ, ರ್‍ಯಾಲಿಗಳ ಮುಖಾಂತರ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ವಕ್ಷೇತ್ರ ಶಿಗ್ಗಾವಿಯಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ಈ ಕ್ಷೇತ್ರದಿಂದ ಅವರು ನಾಲ್ಕನೇ ಬಾರಿಗೆ ಆಯ್ಕೆ ಬಯಸಿದ್ದಾರೆ.

ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಹಾಗೂ ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಮತ್ತು ರಾಜೀವ್ ಚಂದ್ರಶೇಖರ್ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಕಲಬುರಗಿ ವಲಯದಲ್ಲಿ ಮೊಕ್ಕಾಂ ಹೂಡಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮ್ಮ ತವರು ಜಿಲ್ಲೆ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕನಕಪುರ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರೆ, ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಬೆಂಗಳೂರಿನ ವಿಜಯನಗರದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಮತ್ತೊಬ್ಬ ಕಾಂಗ್ರೆಸ್ ಮುಖಂಡ ರಾಹುಲ್‌ಗಾಂಧಿ ಬೆಂಗಳೂರಿನಲ್ಲಿಂದು ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುವ ಮೂಲಕ ಮಹಿಳಾ ಕಾರ್ಮಿಕರು ಮತ್ತು ಕಾಲೇಜು ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ, ಮತಯಾಚನೆ ನಡೆಸಿದರು.

ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಮನವರಿಕೆ ಮಾಡಿಕೊಟ್ಟರು. ಚಲನಚಿತ್ರ ನಟ ಶಿವರಾಜ್‌ಕುಮಾರ್ ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಪರ ಮತಯಾಚಿಸಿದರು.

ಮತ್ತೊಂದೆಡೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮಳವಳ್ಳಿ, ಹೊಳೆನರಸೀಪುರ, ಹಾಸನ ಮತ್ತು ರಾಮನಗರದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದರು. ಅವರ ಪುತ್ರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಾವು ಪ್ರತಿನಿಧಿಸುವ ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು.

ಆಮ್ ಆದ್ಮಿ ಪಕ್ಷ ನಾಯಕರು ಬೆಂಗಳೂರಿನಲ್ಲಿ ರೋಡ್ ಶೋ ಮೂಲಕ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು.

ಏತನ್ಮಧ್ಯೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರರ ವಿರುದ್ಧ ಪ್ರತ್ಯೇಕವಾಗಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending