ರಾಜಕೀಯ
ನೆಹರೂ ಕುರಿತು ಅಟಲ ಬಿಹಾರಿ ವಾಜಪೇಯಿ ಅವರು ಏನು ಹೇಳಿದ್ದರು ಗೊತ್ತಾ..?
- ಮೂಲ : ಅಟಲ್ ಬಿಹಾರಿ ವಾಜಪೇಯಿ, ಕನ್ನಡಕ್ಕೆ: ಗಿರೀಶ್ ತಾಳಿಕಟ್ಟೆ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಆಧುನಿಕ ಭಾರತದ ನಿರ್ಮಾತೃ, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಶ್ರೀ ಪಂಡಿತ್ ಜವಾಹರಲಾಲ್ ನೆಹರೂ ಅವರು 27 ಮೇ 1964ರಲ್ಲಿ ನಮ್ಮನ್ನು ಅಗಲಿದಾಗ, ಅಂದಿನ ರಾಜ್ಯಸಭಾ ಸದಸ್ಯರಾಗಿದ್ದ ಭಾರತೀಯ ಜನಸಂಘದ (ಇಂದಿನ ಬಿಜೆಪಿಯ ಪೂರ್ವರೂಪ) ಶ್ರೀ ಅಟಲ್ ಬಿಹಾರಿ ವಾಜಪೇಯಿಯವರು ರಾಜ್ಯಸಭೆಯಲ್ಲಿ ಮಾಡಿದ್ದ ಭಾಷಣ ಹೀಗಿದೆ.
ಶ್ರೀಯುತರೇ, ಇವತ್ತು ಕನಸೊಂದು ಛಿದ್ರವಾಗಿದೆ; ಗಾನವೊಂದು ಮೌನವಾಗಿದೆ; ಜ್ಯೋತಿಯೊಂದು ಅನಂತದೊಳಗೆ ಲೀನವಾಗಿದೆ. ಹಸಿವುಮುಕ್ತ ಮತ್ತು ಭಯರಹಿತ ಜಗತ್ತನ್ನು ಸೃಷ್ಟಿಸಬೇಕೆಂಬ ಕನಸಾಗಿತ್ತು ಅದು. ಗೀತೆಯ ಸಾರವನ್ನು ಧ್ವನಿಸುತ್ತಿದ್ದ, ಗುಲಾಬಿಯ ಸುಗಂಧವನ್ನು ಪಸರಿಸುತ್ತಿದ್ದ ಗಾನವಾಗಿತ್ತು ಅದು. ರಾತ್ರಿಯಿಡೀ ನಿರಂತರವಾಗಿ ಜ್ವಲಿಸುತ್ತಾ, ಪ್ರತಿ ಅಂಧಕಾರದೊಂದಿಗೆ ಹೋರಾಡಿ ನಮಗೆ ದಾರಿತೋರಿ, ಇವತ್ತು ಬೆಳಗಿನ ಜಾವ ನಿರ್ವಾಣಹೊಂದಿದ ಜ್ಯೋತಿ ಅದು.
ಹೌದು, ಸಾವು ನಿಶ್ಚಿತ; ದೇಹ ನಶ್ವರ. ಶ್ರೀಗಂಧದ ಚಿತೆಯ ಜ್ವಾಲೆಗೆ ನಿನ್ನೆ ನಾವು ಅರ್ಪಿಸಿದ ಆ ಸ್ವರ್ಣ ದೇಹ ಕೂಡಾ ಕೊನೆ ಉಳ್ಳಂತದ್ದೆ. ಆದರೆ ಸಾವು ಇಷ್ಟೊಂದು ಕದೀಮನಾಗಬಹುದೇ? ನಾವು ಸ್ನೇಹಿತರೆಲ್ಲ ನಿದ್ರಿಸುತ್ತಿದ್ದಾಗ, ಅಂಗರಕ್ಷಕರೆಲ್ಲ ಮೈಮರೆತಿದ್ದಾಗ, ಸಟ್ಟನೆ ದಾಳಿ ಮಾಡಿ ನಮ್ಮ ಜೀವನದಲ್ಲಿ ನಮಗೆ ಸಿಕ್ಕಿದ್ದ ಒಂದು ಬೆಲೆಕಟ್ಟಲಾಗದ ಉಡುಗೊರೆಯನ್ನು ಕದ್ದೊಯ್ದಿದೆಯಲ್ಲ.
ಇವತ್ತು ಭಾರತಮಾತೆ ಅತೀವ ದುಃಖಿತಳಾಗಿದ್ದಾಳೆ – ಆಕೆ ತನ್ನ ಮುದ್ದಿನ ಕುವರನನ್ನು ಕಳೆದುಕೊಂಡಿದ್ದಾಳೆ. ಇವತ್ತು ಮಾನವೀಯತೆ ಸಂಕಟದಲಿ ಮಿಂದಿದೆ – ಅದು ತನ್ನ ಆರಾಧಕನನ್ನು ಕಳೆದುಕೊಂಡಿದೆ. ಇವತ್ತು ಶಾಂತಿ ನಿತ್ರಾಣಗೊಂಡಿದೆ – ಅದರ ರಕ್ಷಕ ಇನ್ನಿಲ್ಲ. ದಮನಿತರು ತಮ್ಮ ಆಸರೆಯನ್ನು ಕಳೆದುಕೊಂಡಿದ್ದಾರೆ. ಸಾಮಾನ್ಯ ಭಾರತೀಯ ತನ್ನ ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡಿದ್ದಾನೆ. ಎಲ್ಲದಕ್ಕೂ ತೆರೆ ಬಿದ್ದಿದೆ. ನಾಟಕದ ಕಥಾನಾಯಕ ತನ್ನ ಪಾಲಿನ ಕೊನೇ ಅಂಕವನ್ನು ಮುಗಿಸಿ, ಜಗತ್ತಿನ ಮುಂದೆ ಶಿರಬಾಗಿ ನಿರ್ಗಮಿಸಿದ್ದಾನೆ.
ಶ್ರೀರಾಮನ ಬದುಕಿನ ಕುರಿತ ರಾಮಾಯಣವನ್ನು ಬರೆದ ವಾಲ್ಮೀಕಿ ಮಹರ್ಷಿಯು ತಾನು ಅಸಾಧ್ಯವಾದದ್ದನ್ನೆಲ್ಲ ಒಂದುಗೂಡಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಪಂಡಿತ್ಜಿ (ನೆಹರೂ) ಅವರ ಬದುಕಿನಲ್ಲೂ ನಾವು ಆ ಮಹಾಕವಿಯ ಉಲ್ಲೇಖದ ಮಿನುಗುಗಳನ್ನು ಕಾಣಬಹುದು. ಅವರು ಶಾಂತಿಯ ಆರಾಧಕರಾಗಿದ್ದರು; ಆದಾಗ್ಯೂ ಕ್ರಾಂತಿಯ ಮುಂಗಾಮಿಯಾಗಿದ್ದರು. ಅವರು ಅಹಿಂಸೆಯ ರೂವಾರಿಯಾಗಿದ್ದರು; ಆದಾಗ್ಯೂ, ಸ್ವಾತಂತ್ರ್ಯ ಮತ್ತು ದೇಶದ ಆತ್ಮಗೌರವದ ರಕ್ಷಣೆಗಾಗಿ ಯಾವುದೇ ಅಸ್ತ್ರವನ್ನು ಬಳಸುವುದಕ್ಕು ಸಿದ್ದವಿದ್ದರು.
ಅವರು ಪ್ರತಿಯೊಬ್ಬರ ವೈಯಕ್ತಿಕ ಸ್ವಾತಂತ್ರ್ಯದ ಪ್ರತಿಪಾದಕರಾಗಿದ್ದರು; ಆದಾಗ್ಯೂ, ಆರ್ಥಿಕ ಸಮಾನತೆಯ ಕನಸಿಗೆ ಬದ್ಧರಾಗಿದ್ದರು. ಪ್ರಗತಿಗಾಗಿ ಅವರು ಯಾರ ಜೊತೆ ಬೇಕಾದರೂ ರಾಜಿಗೆ ಸಿದ್ದವಿದ್ದರು, ಆದರೆ ಯಾರಿಗೋ ಅಂಜಿ ಅವರು ರಾಜಿಗೆ ಮುಂದಾದವರಲ್ಲ. ಪಾಕಿಸ್ತಾನ ಮತ್ತು ಚೀನಾ ದೇಶಗಳ ಕುರಿತಂತೆ ಅವರ ನೀತಿಗಳು ಈ ಗುಣಮಿಶ್ರಣದ ಪ್ರತೀಕವಾಗಿದ್ದವು. ಅದು ಅವರ ಉದಾರತೆಯೂ ಹೌದು, ಬದ್ಧತೆಯೂ ಹೌದು. ಆದರೆ ಕೆಲವರು ಅವರ ಉದಾರತೆಯನ್ನು ಬಲಹೀನತೆಯೆಂತಲೂ, ಅದರ ಬದ್ಧತೆಯನ್ನು ಹಠಮಾರಿತನವೆಂತಲೂ ತಪ್ಪಾಗಿ ಅರ್ಥೈಸಿಕೊಂಡಿದ್ದು ವಿಪರ್ಯಾಸವೇ ಸರಿ.
ಅವರು ಕೋಪಿಷ್ಟರಾಗಿದ್ದನ್ನು ನಾನೊಮ್ಮೆ ಕಂಡಿದ್ದು, ಇನ್ನೂ ಚೆನ್ನಾಗಿ ನೆನಪಿದೆ. ಚೀನಾದೊಟ್ಟಿಗೆ ನಮ್ಮ ಸಂಘರ್ಷ ಉತ್ತುಂಗಕ್ಕೇರಿದ್ದ ದಿನಗಳು ಅವು. ಸಂದರ್ಭದ ಲಾಭ ಪಡೆದ ನಮ್ಮ ಪಾಶ್ಚಾತ್ಯ ಮಿತ್ರರಾಷ್ಟ್ರಗಳು ಕಾಶ್ಮೀರ ವಿಚಾರದಲ್ಲಿ ಒಂದಷ್ಟು ರಾಜಿ ಮಾಡಿಕೊಳ್ಳುವಂತೆ ನಮ್ಮ ಮೇಲೆ ಒತ್ತಡ ತರುತ್ತಿದ್ದರು. ನಾವೀಗ ಒಂದಷ್ಟು ರಾಜಿಗೆ ಸಿದ್ದವಾಗದಿದ್ದರೆ ಏಕಕಾಲಕ್ಕೆ ಎರಡು ಶತ್ರುರಾಷ್ಟ್ರಗಳೊಂದಿಗೆ ಯುದ್ಧ ಮಾಡಬೇಕಾಗಿ ಬಂದೀತು ಎಂಬ ಸಲಹೆ ಬಂದಾಗ, ಅವರು ಕೆಂಡಾಮಂಡಲವಾಗಿ “ಅಗತ್ಯಬಿದ್ದರೆ ನಾವು ಏಕಕಾಲಕ್ಕೆ ಎರಡೂ ಕಡೆ ಯುದ್ಧಕ್ಕೆ ಸಿದ್ಧ” ಎಂದು ಪ್ರತಿಕ್ರಿಯಿಸಿದ್ದರು. ಒತ್ತಡ ತಂದು ಅವರನ್ನು ಮಣಿಸಲು ಸಾಧ್ಯವಿರಲಿಲ್ಲ.
ಶ್ರೀಯುತರೇ, ಅವರ ನೇತೃತ್ವ ಮತ್ತು ಸಂರಕ್ಷಣೆಯಲ್ಲಿ ಪ್ರತಿಷ್ಟಾಪನೆಯಾಗಿದ್ದ ಸ್ವಾತಂತ್ರ್ಯ ಇವತ್ತು ಅಪಾಯಕ್ಕೆ ತುತ್ತಾಗಿದೆ. ನಮ್ಮೆಲ್ಲ ಬಲವನ್ನು ಒಗ್ಗೂಡಿಸಿ ಅದನ್ನು ನಾವು ರಕ್ಷಿಸಿಕೊಳ್ಳಬೇಕಿದೆ. ಅವರು ಆಳವಾಗಿ ಪ್ರತಿಪಾದಿಸಿದ ರಾಷ್ಟ್ರೀಯ ಐಕ್ಯತೆ ಮತ್ತು ಸಮಗ್ರತೆಗಳು ಸಹಾ ಅಪಾಯಕ್ಕೆ ಸಿಲುಕಿವೆ. ಯಾವುದೇ ಬೆಲೆ ತೆತ್ತಾದರೂ ಸರಿ, ಅವುಗಳನ್ನು ನಾವು ಸಂರಕ್ಷಿಸಬೇಕಿದೆ. ಅವರು ಅನುಷ್ಠಾನಗೊಳಿಸಿದ ಭಾರತೀಯ ಪ್ರಜಾಪ್ರಭುತ್ವ, ಮತ್ತು ಅದರ ಮೂಲಕ ಅವರು ಸಾಧಿಸಿದ ಯಶಸ್ಸುಗಳು ಸಹಾ ಮಂಕಾದ ಭವಿಷ್ಯವನ್ನು ಎದುರಿಸುತ್ತಿವೆ. ಒಗ್ಗಟ್ಟು, ಶಿಸ್ತು ಮತ್ತು ಆತ್ಮವಿಶ್ವಾದಿಂದ ನಾವು ಈ ಪ್ರಜಾಪ್ರಭುತ್ವವನ್ನು ಯಶಸ್ವಿಗೊಳಿಸಬೇಕಿದೆ.
ನಾಯಕ ನಿರ್ಗಮಿಸಿರಬಹುದು, ಅನುಯಾಯಿಗಳು ಇನ್ನೂ ಇದ್ದಾರೆ. ಸೂರ್ಯ ಅಸ್ತಮಿಸಿರಬಹುದು, ಆಗಸದಲ್ಲಿ ಮೂಡುವ ತಾರೆಗಳ ಬೆಳಕಿನಲ್ಲೇ ನಾವೀಗ ಮುಂದಿನ ದಾರಿ ಹುಡುಕಿಕೊಳ್ಳಬೇಕಿದೆ. ಇದು ನಮ್ಮ ಪರೀಕ್ಷೆಯ ಉತ್ತುಂಗದ ಕಾಲ. ಜಗತ್ತಿನ ಶಾಂತಿಗಾಗಿ ಗೌರವಯುತವಾದ ಕಾಣಿಕೆ ನೀಡಬಹುದಾದ ಮಾದರಿಯುತ ಸದೃಢ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸಲು ನಾವು ಪರಸ್ಪರ ಒಗ್ಗೂಡಿ ದುಡಿಯುವುದು ಮಾತ್ರವೇ ಆ ನಾಯಕನಿಗೆ ಸಲ್ಲಿಸುವ ನಿಜವಾದ ಗೌರವ.
ಅವರ ಅಗಲಿಕೆ ಸಂಸತ್ತಿಗೆ ತುಂಬಲಾರದ ನಷ್ಟ. ಆ ಸ್ಪಂದನಶೀಲ ವ್ಯಕ್ತಿತ್ವ, ವಿರೋಧಪಕ್ಷಗಳನ್ನೂ ಜೊತೆಗೆ ಕೊಂಡೊಯ್ಯುವ ಆ ಧೋರಣೆ, ಆ ಸೂಕ್ಷ್ಮ ಸಜ್ಜನಿಕೆ, ಆ ಉದಾತ್ತತೆಗಳನ್ನು ಸದ್ಯೋಭವಿಷ್ಯದಲ್ಲಿ ಮತ್ತೆ ನಾವು ಕಾಣಲು ಸಾಧ್ಯವಿಲ್ಲ. ನಮ್ಮ ನಡುವೆ ವಿಚಾರ ಭೇದಗಳು ಇದ್ದಾಗ್ಯೂ ಕೂಡಾ, ಅವರ ಮಹಾನ್ ಚಿಂತನೆಗಳು, ಅವರ ಸಮಗ್ರತೆ, ಈ ದೇಶದೆಡೆಗೆ ಅವರಿಗಿದ್ದ ಅದ್ವಿತೀಯ ಪ್ರೀತಿ ಮತ್ತು ಅವರ ಆ ಅದಮ್ಯ ಧೈರ್ಯದ ಪ್ರತಿಯಾಗಿ ಅವರ ಬಗ್ಗೆ ನಮ್ಮಲ್ಲಿ ಗೌರವವಲ್ಲದೆ ಮತ್ತೇನೂ ಇರಲು ಸಾಧ್ಯವಿಲ್ಲ.
ಈ ನನ್ನ ನುಡಿಗಳ ಮೂಲಕ, ಆ ಮಹಾನ್ ಚೇತನಕ್ಕೆ ನನ್ನ ನಮ್ರ ಗೌರವವನ್ನು ಅರ್ಪಿಸುತ್ತೇನೆ.
– ಅಟಲ್ ಬಿಹಾರಿ ವಾಜಪೇಯಿ
ರಾಜ್ಯಸಭಾ ಸದಸ್ಯರು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್, ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಕೋಟ್ಯಾಂತರ ರೂಪಾಯಿಗಳನ್ನು ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡ ಮಾಹಿತಿ ತಿಳಿದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಉಪ ವಿಭಾಗ, ಚನ್ನಗಿರಿ ಇವರಿಂದ ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಪಡೆಯಲಾಗಿದೆ.
ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಾಕಷ್ಟು ಅವ್ಯವಹಾರ ನಡೆದಿರುವುದು ಕಂಡುಬಂದ ಕಾರಣ ಸೂಕ್ತ ದಾಖಲೆಗಳೊಂದಿಗೆ ದಿನಾಂಕ: 05-07-2025 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ, ದಾವಣಗೆರೆ ಇವರಿಗೆ ದೂರು ನೀಡಿ, ತನಿಖೆಗೆ ಒಳಪಡಿಸುವಂತೆ ಕೋರಿದ್ದರು. ದೂರು ನೀಡಿ 3 ತಿಂಗಳು ಕಳೆದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೊಂಡ ಬಗ್ಗೆ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ದಿನಾಂಕ: 29-10-2025 ರಂದು ಜ್ಞಾಪನವನ್ನು ಸಹ ನೀಡಲಾಗಿತ್ತು.
ಆದರೆ ನಾವು ಜ್ಞಾಪನ ನೀಡಿ ಒಂದು ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.
ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕೊರತೆಯಾಗಬಾರದು. 100 ವಿದ್ಯಾರ್ಥಿಗಳು ವಾಸಿಸುವ ಕಟ್ಟಡಕ್ಕೆ ಬದಲಾಗಿ 400 ವಿದ್ಯಾರ್ಥಿಗಳು ವಾಸ ಮಾಡುವ ಕಟ್ಟಡವನ್ನು ನಿರ್ಮಿಸಬೇಕು ಎಂದರು. ಖಬರಸ್ಥಾನಕ್ಕೆ ಮತ್ತು ಸ್ಮಶಾನಕ್ಕೆ ಜಾಗದ ಅವಶ್ಯಕತೆ ಇದ್ದರೆ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
ಅಂಗನವಾಡಿ ಕೇಂದ್ರಗಳನ್ನು ಅಲ್ಪಸಂಖ್ಯಾತರ ಸಮುದಾಯದ ಜನರು ಅಧಿಕವಾಗಿ ವಾಸಿಸುತ್ತಿರುವ ತಾಲ್ಲೂಕುಗಳು ಮತ್ತು ಗ್ರಾಮಗಳಲ್ಲಿ ತೆರೆಯುವುದು, ಇದರಿಂದಾಗಿ ಯೋಜನೆಯ ಪ್ರಯೋಜನೆಗಳು ಅವರುಗಳಿಗೆ ನೇರವಾಗಿ ಸಿಗುತ್ತವೆ. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ವಕ್ಫ್ ಬೋರ್ಡ್ ಅಥವಾ ಯಾವುದೇ ಇಲಾಖೆಯ ಅಧೀನದಲ್ಲಿನ ನಿವೇಶನವಿದ್ದರೂ ಗುರುತಿಸಿ ಶಾಲೆ, ಕಾಲೇಜುಗಳ ಕಟ್ಟಡ ನಿರ್ಮಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತಿರುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಇಲಾಖೆಗಳಲ್ಲಿನ ಯೋಜನೆಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು.
ವಿವಿಧ ಇಲಾಖೆಯ ಅನುಪಾಲನಾ ವರದಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಭಕ್ತಮಾರ್ಕಡೇಶ್ವರ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದರು.
ಸಮಾಜದ ಧಾರ್ಮಿಕ ಮುಖಂಡರು ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ವಸತಿ ಶಾಲೆಗೆ ಸೇರಿಸುವಂತಾಗಲು ಪ್ರೇರೇಪಿಸಬೇಕು. ವಸತಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವುದರ ಜೊತೆಗೆ ಅಗತ್ಯ ಸೌಲಭ್ಯ ಇರುವ ಬಗ್ಗೆ ತಿಳಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಮತ ಹೊಸಗೌಡ್ರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ, ಡಿಡಿಪಿಐ ಕೊಟ್ರೇಶ್, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ4 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ4 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ18 hours agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ18 hours agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

