ರಾಜಕೀಯ
ನೆಹರೂ ಕುರಿತು ಅಟಲ ಬಿಹಾರಿ ವಾಜಪೇಯಿ ಅವರು ಏನು ಹೇಳಿದ್ದರು ಗೊತ್ತಾ..?
- ಮೂಲ : ಅಟಲ್ ಬಿಹಾರಿ ವಾಜಪೇಯಿ, ಕನ್ನಡಕ್ಕೆ: ಗಿರೀಶ್ ತಾಳಿಕಟ್ಟೆ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಆಧುನಿಕ ಭಾರತದ ನಿರ್ಮಾತೃ, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಶ್ರೀ ಪಂಡಿತ್ ಜವಾಹರಲಾಲ್ ನೆಹರೂ ಅವರು 27 ಮೇ 1964ರಲ್ಲಿ ನಮ್ಮನ್ನು ಅಗಲಿದಾಗ, ಅಂದಿನ ರಾಜ್ಯಸಭಾ ಸದಸ್ಯರಾಗಿದ್ದ ಭಾರತೀಯ ಜನಸಂಘದ (ಇಂದಿನ ಬಿಜೆಪಿಯ ಪೂರ್ವರೂಪ) ಶ್ರೀ ಅಟಲ್ ಬಿಹಾರಿ ವಾಜಪೇಯಿಯವರು ರಾಜ್ಯಸಭೆಯಲ್ಲಿ ಮಾಡಿದ್ದ ಭಾಷಣ ಹೀಗಿದೆ.
ಶ್ರೀಯುತರೇ, ಇವತ್ತು ಕನಸೊಂದು ಛಿದ್ರವಾಗಿದೆ; ಗಾನವೊಂದು ಮೌನವಾಗಿದೆ; ಜ್ಯೋತಿಯೊಂದು ಅನಂತದೊಳಗೆ ಲೀನವಾಗಿದೆ. ಹಸಿವುಮುಕ್ತ ಮತ್ತು ಭಯರಹಿತ ಜಗತ್ತನ್ನು ಸೃಷ್ಟಿಸಬೇಕೆಂಬ ಕನಸಾಗಿತ್ತು ಅದು. ಗೀತೆಯ ಸಾರವನ್ನು ಧ್ವನಿಸುತ್ತಿದ್ದ, ಗುಲಾಬಿಯ ಸುಗಂಧವನ್ನು ಪಸರಿಸುತ್ತಿದ್ದ ಗಾನವಾಗಿತ್ತು ಅದು. ರಾತ್ರಿಯಿಡೀ ನಿರಂತರವಾಗಿ ಜ್ವಲಿಸುತ್ತಾ, ಪ್ರತಿ ಅಂಧಕಾರದೊಂದಿಗೆ ಹೋರಾಡಿ ನಮಗೆ ದಾರಿತೋರಿ, ಇವತ್ತು ಬೆಳಗಿನ ಜಾವ ನಿರ್ವಾಣಹೊಂದಿದ ಜ್ಯೋತಿ ಅದು.
ಹೌದು, ಸಾವು ನಿಶ್ಚಿತ; ದೇಹ ನಶ್ವರ. ಶ್ರೀಗಂಧದ ಚಿತೆಯ ಜ್ವಾಲೆಗೆ ನಿನ್ನೆ ನಾವು ಅರ್ಪಿಸಿದ ಆ ಸ್ವರ್ಣ ದೇಹ ಕೂಡಾ ಕೊನೆ ಉಳ್ಳಂತದ್ದೆ. ಆದರೆ ಸಾವು ಇಷ್ಟೊಂದು ಕದೀಮನಾಗಬಹುದೇ? ನಾವು ಸ್ನೇಹಿತರೆಲ್ಲ ನಿದ್ರಿಸುತ್ತಿದ್ದಾಗ, ಅಂಗರಕ್ಷಕರೆಲ್ಲ ಮೈಮರೆತಿದ್ದಾಗ, ಸಟ್ಟನೆ ದಾಳಿ ಮಾಡಿ ನಮ್ಮ ಜೀವನದಲ್ಲಿ ನಮಗೆ ಸಿಕ್ಕಿದ್ದ ಒಂದು ಬೆಲೆಕಟ್ಟಲಾಗದ ಉಡುಗೊರೆಯನ್ನು ಕದ್ದೊಯ್ದಿದೆಯಲ್ಲ.
ಇವತ್ತು ಭಾರತಮಾತೆ ಅತೀವ ದುಃಖಿತಳಾಗಿದ್ದಾಳೆ – ಆಕೆ ತನ್ನ ಮುದ್ದಿನ ಕುವರನನ್ನು ಕಳೆದುಕೊಂಡಿದ್ದಾಳೆ. ಇವತ್ತು ಮಾನವೀಯತೆ ಸಂಕಟದಲಿ ಮಿಂದಿದೆ – ಅದು ತನ್ನ ಆರಾಧಕನನ್ನು ಕಳೆದುಕೊಂಡಿದೆ. ಇವತ್ತು ಶಾಂತಿ ನಿತ್ರಾಣಗೊಂಡಿದೆ – ಅದರ ರಕ್ಷಕ ಇನ್ನಿಲ್ಲ. ದಮನಿತರು ತಮ್ಮ ಆಸರೆಯನ್ನು ಕಳೆದುಕೊಂಡಿದ್ದಾರೆ. ಸಾಮಾನ್ಯ ಭಾರತೀಯ ತನ್ನ ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡಿದ್ದಾನೆ. ಎಲ್ಲದಕ್ಕೂ ತೆರೆ ಬಿದ್ದಿದೆ. ನಾಟಕದ ಕಥಾನಾಯಕ ತನ್ನ ಪಾಲಿನ ಕೊನೇ ಅಂಕವನ್ನು ಮುಗಿಸಿ, ಜಗತ್ತಿನ ಮುಂದೆ ಶಿರಬಾಗಿ ನಿರ್ಗಮಿಸಿದ್ದಾನೆ.
ಶ್ರೀರಾಮನ ಬದುಕಿನ ಕುರಿತ ರಾಮಾಯಣವನ್ನು ಬರೆದ ವಾಲ್ಮೀಕಿ ಮಹರ್ಷಿಯು ತಾನು ಅಸಾಧ್ಯವಾದದ್ದನ್ನೆಲ್ಲ ಒಂದುಗೂಡಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಪಂಡಿತ್ಜಿ (ನೆಹರೂ) ಅವರ ಬದುಕಿನಲ್ಲೂ ನಾವು ಆ ಮಹಾಕವಿಯ ಉಲ್ಲೇಖದ ಮಿನುಗುಗಳನ್ನು ಕಾಣಬಹುದು. ಅವರು ಶಾಂತಿಯ ಆರಾಧಕರಾಗಿದ್ದರು; ಆದಾಗ್ಯೂ ಕ್ರಾಂತಿಯ ಮುಂಗಾಮಿಯಾಗಿದ್ದರು. ಅವರು ಅಹಿಂಸೆಯ ರೂವಾರಿಯಾಗಿದ್ದರು; ಆದಾಗ್ಯೂ, ಸ್ವಾತಂತ್ರ್ಯ ಮತ್ತು ದೇಶದ ಆತ್ಮಗೌರವದ ರಕ್ಷಣೆಗಾಗಿ ಯಾವುದೇ ಅಸ್ತ್ರವನ್ನು ಬಳಸುವುದಕ್ಕು ಸಿದ್ದವಿದ್ದರು.
ಅವರು ಪ್ರತಿಯೊಬ್ಬರ ವೈಯಕ್ತಿಕ ಸ್ವಾತಂತ್ರ್ಯದ ಪ್ರತಿಪಾದಕರಾಗಿದ್ದರು; ಆದಾಗ್ಯೂ, ಆರ್ಥಿಕ ಸಮಾನತೆಯ ಕನಸಿಗೆ ಬದ್ಧರಾಗಿದ್ದರು. ಪ್ರಗತಿಗಾಗಿ ಅವರು ಯಾರ ಜೊತೆ ಬೇಕಾದರೂ ರಾಜಿಗೆ ಸಿದ್ದವಿದ್ದರು, ಆದರೆ ಯಾರಿಗೋ ಅಂಜಿ ಅವರು ರಾಜಿಗೆ ಮುಂದಾದವರಲ್ಲ. ಪಾಕಿಸ್ತಾನ ಮತ್ತು ಚೀನಾ ದೇಶಗಳ ಕುರಿತಂತೆ ಅವರ ನೀತಿಗಳು ಈ ಗುಣಮಿಶ್ರಣದ ಪ್ರತೀಕವಾಗಿದ್ದವು. ಅದು ಅವರ ಉದಾರತೆಯೂ ಹೌದು, ಬದ್ಧತೆಯೂ ಹೌದು. ಆದರೆ ಕೆಲವರು ಅವರ ಉದಾರತೆಯನ್ನು ಬಲಹೀನತೆಯೆಂತಲೂ, ಅದರ ಬದ್ಧತೆಯನ್ನು ಹಠಮಾರಿತನವೆಂತಲೂ ತಪ್ಪಾಗಿ ಅರ್ಥೈಸಿಕೊಂಡಿದ್ದು ವಿಪರ್ಯಾಸವೇ ಸರಿ.
ಅವರು ಕೋಪಿಷ್ಟರಾಗಿದ್ದನ್ನು ನಾನೊಮ್ಮೆ ಕಂಡಿದ್ದು, ಇನ್ನೂ ಚೆನ್ನಾಗಿ ನೆನಪಿದೆ. ಚೀನಾದೊಟ್ಟಿಗೆ ನಮ್ಮ ಸಂಘರ್ಷ ಉತ್ತುಂಗಕ್ಕೇರಿದ್ದ ದಿನಗಳು ಅವು. ಸಂದರ್ಭದ ಲಾಭ ಪಡೆದ ನಮ್ಮ ಪಾಶ್ಚಾತ್ಯ ಮಿತ್ರರಾಷ್ಟ್ರಗಳು ಕಾಶ್ಮೀರ ವಿಚಾರದಲ್ಲಿ ಒಂದಷ್ಟು ರಾಜಿ ಮಾಡಿಕೊಳ್ಳುವಂತೆ ನಮ್ಮ ಮೇಲೆ ಒತ್ತಡ ತರುತ್ತಿದ್ದರು. ನಾವೀಗ ಒಂದಷ್ಟು ರಾಜಿಗೆ ಸಿದ್ದವಾಗದಿದ್ದರೆ ಏಕಕಾಲಕ್ಕೆ ಎರಡು ಶತ್ರುರಾಷ್ಟ್ರಗಳೊಂದಿಗೆ ಯುದ್ಧ ಮಾಡಬೇಕಾಗಿ ಬಂದೀತು ಎಂಬ ಸಲಹೆ ಬಂದಾಗ, ಅವರು ಕೆಂಡಾಮಂಡಲವಾಗಿ “ಅಗತ್ಯಬಿದ್ದರೆ ನಾವು ಏಕಕಾಲಕ್ಕೆ ಎರಡೂ ಕಡೆ ಯುದ್ಧಕ್ಕೆ ಸಿದ್ಧ” ಎಂದು ಪ್ರತಿಕ್ರಿಯಿಸಿದ್ದರು. ಒತ್ತಡ ತಂದು ಅವರನ್ನು ಮಣಿಸಲು ಸಾಧ್ಯವಿರಲಿಲ್ಲ.
ಶ್ರೀಯುತರೇ, ಅವರ ನೇತೃತ್ವ ಮತ್ತು ಸಂರಕ್ಷಣೆಯಲ್ಲಿ ಪ್ರತಿಷ್ಟಾಪನೆಯಾಗಿದ್ದ ಸ್ವಾತಂತ್ರ್ಯ ಇವತ್ತು ಅಪಾಯಕ್ಕೆ ತುತ್ತಾಗಿದೆ. ನಮ್ಮೆಲ್ಲ ಬಲವನ್ನು ಒಗ್ಗೂಡಿಸಿ ಅದನ್ನು ನಾವು ರಕ್ಷಿಸಿಕೊಳ್ಳಬೇಕಿದೆ. ಅವರು ಆಳವಾಗಿ ಪ್ರತಿಪಾದಿಸಿದ ರಾಷ್ಟ್ರೀಯ ಐಕ್ಯತೆ ಮತ್ತು ಸಮಗ್ರತೆಗಳು ಸಹಾ ಅಪಾಯಕ್ಕೆ ಸಿಲುಕಿವೆ. ಯಾವುದೇ ಬೆಲೆ ತೆತ್ತಾದರೂ ಸರಿ, ಅವುಗಳನ್ನು ನಾವು ಸಂರಕ್ಷಿಸಬೇಕಿದೆ. ಅವರು ಅನುಷ್ಠಾನಗೊಳಿಸಿದ ಭಾರತೀಯ ಪ್ರಜಾಪ್ರಭುತ್ವ, ಮತ್ತು ಅದರ ಮೂಲಕ ಅವರು ಸಾಧಿಸಿದ ಯಶಸ್ಸುಗಳು ಸಹಾ ಮಂಕಾದ ಭವಿಷ್ಯವನ್ನು ಎದುರಿಸುತ್ತಿವೆ. ಒಗ್ಗಟ್ಟು, ಶಿಸ್ತು ಮತ್ತು ಆತ್ಮವಿಶ್ವಾದಿಂದ ನಾವು ಈ ಪ್ರಜಾಪ್ರಭುತ್ವವನ್ನು ಯಶಸ್ವಿಗೊಳಿಸಬೇಕಿದೆ.
ನಾಯಕ ನಿರ್ಗಮಿಸಿರಬಹುದು, ಅನುಯಾಯಿಗಳು ಇನ್ನೂ ಇದ್ದಾರೆ. ಸೂರ್ಯ ಅಸ್ತಮಿಸಿರಬಹುದು, ಆಗಸದಲ್ಲಿ ಮೂಡುವ ತಾರೆಗಳ ಬೆಳಕಿನಲ್ಲೇ ನಾವೀಗ ಮುಂದಿನ ದಾರಿ ಹುಡುಕಿಕೊಳ್ಳಬೇಕಿದೆ. ಇದು ನಮ್ಮ ಪರೀಕ್ಷೆಯ ಉತ್ತುಂಗದ ಕಾಲ. ಜಗತ್ತಿನ ಶಾಂತಿಗಾಗಿ ಗೌರವಯುತವಾದ ಕಾಣಿಕೆ ನೀಡಬಹುದಾದ ಮಾದರಿಯುತ ಸದೃಢ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸಲು ನಾವು ಪರಸ್ಪರ ಒಗ್ಗೂಡಿ ದುಡಿಯುವುದು ಮಾತ್ರವೇ ಆ ನಾಯಕನಿಗೆ ಸಲ್ಲಿಸುವ ನಿಜವಾದ ಗೌರವ.
ಅವರ ಅಗಲಿಕೆ ಸಂಸತ್ತಿಗೆ ತುಂಬಲಾರದ ನಷ್ಟ. ಆ ಸ್ಪಂದನಶೀಲ ವ್ಯಕ್ತಿತ್ವ, ವಿರೋಧಪಕ್ಷಗಳನ್ನೂ ಜೊತೆಗೆ ಕೊಂಡೊಯ್ಯುವ ಆ ಧೋರಣೆ, ಆ ಸೂಕ್ಷ್ಮ ಸಜ್ಜನಿಕೆ, ಆ ಉದಾತ್ತತೆಗಳನ್ನು ಸದ್ಯೋಭವಿಷ್ಯದಲ್ಲಿ ಮತ್ತೆ ನಾವು ಕಾಣಲು ಸಾಧ್ಯವಿಲ್ಲ. ನಮ್ಮ ನಡುವೆ ವಿಚಾರ ಭೇದಗಳು ಇದ್ದಾಗ್ಯೂ ಕೂಡಾ, ಅವರ ಮಹಾನ್ ಚಿಂತನೆಗಳು, ಅವರ ಸಮಗ್ರತೆ, ಈ ದೇಶದೆಡೆಗೆ ಅವರಿಗಿದ್ದ ಅದ್ವಿತೀಯ ಪ್ರೀತಿ ಮತ್ತು ಅವರ ಆ ಅದಮ್ಯ ಧೈರ್ಯದ ಪ್ರತಿಯಾಗಿ ಅವರ ಬಗ್ಗೆ ನಮ್ಮಲ್ಲಿ ಗೌರವವಲ್ಲದೆ ಮತ್ತೇನೂ ಇರಲು ಸಾಧ್ಯವಿಲ್ಲ.
ಈ ನನ್ನ ನುಡಿಗಳ ಮೂಲಕ, ಆ ಮಹಾನ್ ಚೇತನಕ್ಕೆ ನನ್ನ ನಮ್ರ ಗೌರವವನ್ನು ಅರ್ಪಿಸುತ್ತೇನೆ.
– ಅಟಲ್ ಬಿಹಾರಿ ವಾಜಪೇಯಿ
ರಾಜ್ಯಸಭಾ ಸದಸ್ಯರು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.
ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ5 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ3 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

