ದಿನದ ಸುದ್ದಿ
ಬಿ.ಎಸ್.ಯಡಿಯೂರಪ್ಪ ಅವರ ಸಿಎಂ ಕುರ್ಚಿ ಮೇಲೆ ವರಿಷ್ಠರ ಕಣ್ಣು ; ದನಿಯೆತ್ತಲಿದೆಯೇ ಲಿಂಗಾಯತ ಸಮುದಾಯ

ಸುದ್ದಿದಿನ,ಬೆಂಗಳೂರು: ಸದ್ಯ ರಾಜ್ಯದಲ್ಲಿ ‘ಮುಖ್ಯಮಂತ್ರಿ’ ಬದಲಾವಣೆ ಕುರಿತ ಚರ್ಚೆಗಳು ನಡೆಯುತ್ತಿವೆ. ಬಿ.ಎಸ್.ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಅವರ ಬದಲಿಗೆ ಬೇರೆವರಿಗೆ ಅವಕಾಶ ಮಾಡಿಕೊಡಬೇಕು ಎಂದು ವರಿಷ್ಠರು ಸೂಚಿಸಿದ್ದಾರೆ ಎಂಬ ವದಂತಿಗಳು ದೃಶ್ಯ ಮಾಧ್ಯಮದಲ್ಲಿ ಜೋರಾಗಿ ಸದ್ದು ಮಾಡುತ್ತಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸುವುದಾಗಿ ಸ್ವತಃ ಬಿ.ಎಸ್.ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ ಎಂಬ ವದಂತಿಗಳು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಅದೇನೆ ಇರಲಿ ಒಂದು ವೇಳೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೆ ರಾಜ್ಯದ ಪ್ರಬಲ ಲಿಂಗಾಯ ಸಮುದಾಯ ಸುಮ್ಮನಿರುವುದೇ ಎಂಬ ಪ್ರಶ್ನೆಗಳು ಎದ್ದಿವೆ.
ಪದೇಪದೇ ಯಡಿಯೂರಪ್ಪ ಕುರ್ಚಿ ಮೇಲೇಕೆ ಕಣ್ಣು..?
ರಾಜ್ಯದ ಪ್ರಬಲ ನಾಯಕರಲ್ಲಿ ಮುಂಚೂಣಿಯಲ್ಲಿರುವ ಬಿ.ಎಸ್.ಯಡಿಯೂರಪ್ಪ ಹೋರಾಟದಿಂದ ಬಂದವರು. ರಾಜ್ಯದ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಹುತೇಕ ಸಂದರ್ಭಗಳಲ್ಲಿ ಸಂಕಷ್ಟದ ಪರಿಸ್ಥಿತಿಗಳು ಎದುರಾಗಿವೆ. ಆದರೆ ಬಿ.ಎಸ್.ಯಡಿಯೂರಪ್ಪ ಅವುಗಳನ್ನು ಸಮರ್ಥವಾಗಿ ಎದುರಿಸುವ ಕಾರ್ಯ ಮಾಡಿದ್ದಾರೆ. ಇಂತಹ ನಾಯಕನ ಬದಲಾವಣೆಗೆ ಪಕ್ಷದ ಒಳಗಿನಿಂದಲೇ ಹಲವು ಸಲ ಒತ್ತಡಗಳು ಕೇಳಿ ಬರುತ್ತಿವೆ. ಬಿ.ಎಸ್.ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ ಎಂಬ ಕಾರಣ ನೀಡಿ ಅವರ ಬದಲಾವಣೆ ಕುರಿತ ಸುದ್ದಿಗಳನ್ನು ಹರಿಬಿಡಲಾಗುತ್ತಿದೆ.
ದನಿಯೆತ್ತಲಿದೆಯೇದೇ ಸಮುದಾಯ..?
ರಾಜ್ಯದ ಲಿಂಗಾಯ ಸಮುದಾಯಕ್ಕೆ ಬಿ.ಎಸ್.ಯಡಿಯೂರಪ್ಪ ಅವರೇ ಸರ್ವ ಶ್ರೇಷ್ಠನಾಯಕ. ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವದಲ್ಲಿ ಇರುವುದೇ ಬಿ.ಎಸ್.ಯಡಿಯೂರಪ್ಪ ಅವರ ಶ್ರಮ ಹಾಗೂ ವರ್ಚಸ್ಸಿನಿಂದ ಎಂಬ ಮಾತು ಇದೆ. ಈಗ ಬಿ.ಎಸ್.ಯಡಿಯೂರಪ್ಪ ಅವರನ್ನು ವರಿಷ್ಠರು ಸಿಎಂ ಕುರ್ಚಿಯಿಂದ ಇಳಿಸುವ ಪ್ರಯತ್ನ ಮಾಡಿದರೆ ಲಿಂಗಾಯ ಸಮುದಾಯ ಸುಮ್ಮನಿರುವುದೇ ಎಂಬ ಮಾತು ಕೇಳಿಬರುತ್ತಿವೆ. ಒಂದು ವೇಳೆ ಯಡಿಯೂರಪ್ಪ ಅವರು ತಮ್ಮ ಸ್ಥಾನದಿಂದ ಕೆಳಗಿಳಿದರೆ ಬಿಜೆಪಿ ಮತ ಬ್ಯಾಂಕ್ ಗೆ ದೊಡ್ಡ ನಷ್ಟವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಸುದ್ದಿದಿನ.ಕಾಂ | ವಾಟ್ಸಾಪ್ | 9980346243
ದಿನದ ಸುದ್ದಿ
ದಾವಣಗೆರೆ | ಕೆಎಸ್ಆರ್ಟಿಸಿ ತಾತ್ಕಾಲಿಕ ಬಸ್ ನಿಲ್ದಾಣ ಉದ್ಘಾಟನೆ

ಸುದ್ದಿದಿನ,ದಾವಣಗೆರೆ : ಕ.ರಾ.ರ.ಸಾ ನಿಗಮದ ಕೇಂದ್ರ ಬಸ್ ನಿಲ್ದಾಣ ದಾವಣಗೆರೆ ಇಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕ.ರಾ.ರ.ಸಾ ನಿಗಮದ ಬಸ್ ನಿಲ್ದಾಣದ ಪುನರ್ ನಿರ್ಮಾಣದ ಹಿನ್ನೆಲೆ ಹೈಸ್ಕೂಲ್ ಮೈದಾನದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕವಾಗಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣವನ್ನು ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸಂ.ಸವದಿ ಸೇರಿದಂತೆ ಗಣ್ಯರು ಸೋಮವಾರದಂದು ಉದ್ಘಾಟಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ, ಸಂಸದರಾದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಎಸ್.ಎ.ರವೀಂದ್ರನಾಥ, ಪ್ರೊ.ಲಿಂಗಣ್ಣ, ಜಿ.ಪಂ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ, ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ.
ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಉಪ ಮೇಯರ್ ಸೌಮ್ಯ ನರೇಂದ್ರ ಕುಮಾರ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಟಿ.ವೀರೇಶ್, ಸಾರಿಗೆ ಮಂಡಳಿ ನಿರ್ದೇಶಕರುಗಳಾದ ರಾಜು, ಆರುಂಡಿ ನಾಗರಾಜ್, ರುದ್ರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಎಎಸ್ಪಿ ರಾಜೀವ್ ಮುಖ್ಯ ಇಂಜಿನಿಯರ್ ಜಗದೀಶ್ ಚಂದ್ರ ಇತರೆ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಈ ಶೈಕ್ಷಣಿಕ ವರ್ಷದಿಂದ ಹೊಸ ಕೇಂದ್ರೀಯ ವಿದ್ಯಾಲಯ ಆರಂಭಕ್ಕೆ ಕ್ರಮ : ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ

ಸುದ್ದಿದಿನ,ಶಿವಮೊಗ್ಗ: ಶಿವಮೊಗ್ಗದಲ್ಲಿ ಹೊಸದಾಗಿ ಇನ್ನೊಂದು ಕೇಂದ್ರೀಯ ವಿದ್ಯಾಲಯವನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.
ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ ನಗರಕ್ಕೆ ಇನ್ನೊಂದು ಕೇಂದ್ರೀಯ ವಿದ್ಯಾಲಯ ಮಂಜೂರು ಮಾಡಲು ಕೇಂದ್ರ ಮಾನವ ಸಂಪನ್ಮೂಲ ಸಚಿವರಿಗೆ ಮನವಿಯನ್ನು ಮಾಡಲಾಗಿತ್ತು. ಇದಕ್ಕೆ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಹೊಸ ಕೇಂದ್ರೀಯ ವಿದ್ಯಾಲಯ ಆರಂಭಿಸುವ ಕುರಿತು ಪರಿಶೀಲನೆಗಾಗಿ ಹಿರಿಯ ಅಧಿಕಾರಿಗಳು ಮಂಗಳವಾರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.
ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಕೇಂದ್ರೀಯ ವಿದ್ಯಾಲಯ ಕಾರ್ಯಾರಂಭ ಮಾಡಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿದೆ. ತಾತ್ಕಾಲಿಕವಾಗಿ ನಗರದ ರಾಗಿಗುಡ್ಡದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತರಗತಿಯನ್ನು ಆರಂಭಿಸಲು ನಿರ್ಧರಿಸಲಾಗಿದೆ.
ಹೊಸ ಕೇಂದ್ರೀಯ ವಿದ್ಯಾಲಯಕ್ಕೆ ತ್ಯಾವರೆ ಚಟ್ನಳ್ಳಿಯಲ್ಲಿ 5ಎಕ್ರೆ ಸ್ಥಳವನ್ನು ಗುರುತಿಸಲಾಗಿದ್ದು, ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಮುಂದಿನ ವರ್ಷದಿಂದ ಇಲ್ಲಿ ವಿದ್ಯಾಲಯ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಡಿಆರ್ಡಿಒ ಲ್ಯಾಬ್ ಆರಂಭಿಸುವ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಭದ್ರಾವತಿಯಲ್ಲಿ ಕೇಂದ್ರೀಯ ವಿದ್ಯಾಲಯ, ಸುಸಜ್ಜಿತ ಕ್ರೀಡಾಂಗಣ ನಿರ್ಮಿಸುವ ಘೋಷಣೆಯನ್ನು ಮಾಡಿದ್ದಾರೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಹುಬ್ಬಳ್ಳಿ- ಧಾರವಾಡ ಬೈಪಾಸ್ ರಸ್ತೆಯಲ್ಲಿ ಸಂಚಾರಿ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ನಿತೇಶ ಪಾಟೀಲ

ರಸ್ತೆ ಅಪಘಾತಗಳನ್ನು ತಪ್ಪಿಸಲು ಇಲಾಖೆಗಳು ಸಮನ್ವಯತೆಯಿಂದ ಕಾರ್ಯಮಾಡಬೇಕು : ಜಿಲ್ಲಾಧಿಕಾರಿ ನಿತೇಶ ಪಾಟೀಲ
ಸುದ್ದಿದಿನ,ಧಾರವಾಡ : ಕಳೆದ ಸಾಲಿಗೆ ಹೋಲಿಸಿದರೆ ಧಾರವಾಡ ಜಿಲ್ಲೆಯಲ್ಲಿ 2020 ನೇ ಸಾಲಿಗೆ ಕಡಿಮೆ ಪ್ರಮಾಣದಲ್ಲಿ ರಸ್ತೆ ಅಪಘಾತ ಪ್ರಕರಣಗಳು ದಾಖಲಾಗಿದ್ದು, ಸಾರಿಗೆ, ಪೊಲೀಸ್, ಲೊಕೋಪಯೋಗಿ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಿದರೆ ರಸ್ತೆ ಅಪಘಾತಗಳು ಸಂಭವಿಸದಂತೆ ಸಂಪೂರ್ಣವಾಗಿ ನಿಯಂತ್ರಿಸಬಹುದು ಎಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಭವನದಲ್ಲಿ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಇರುವ ರಾಷ್ಟ್ರೀಯ ಹೆದ್ದಾರಿ 4 ರಲ್ಲಿನ 30 ಕಿ.ಮೀ ರಸ್ತೆಯಲ್ಲಿನ ಅಪಘಾತಗಳನ್ನು ತಪ್ಪಿಸಲು ಸಂಚಾರಿ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಪ್ರತಿ ಕಿ.ಮೀ.ಗೆ 60 ವೇಗದ ಮಿತಿ ಇದ್ದರೂ ಬಸ್, ಟ್ರಕ್, ಮಿನಿಬಸ್, ಕಾರ್ ಮುಂತಾದ ವಾಹನಗಳ ಚಾಲಕರು ನಿಯಮ ಪಾಲಿಸದೇ ವೇಗವಾಗಿ ವಾಹನ ಚಾಲನೆ, ವಾಹನಗಳ ಓವರ್ಟೆಕ್ ಮಾಡುತ್ತಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಅಪಘಾತ, ಸಾವು-ನೋವು ಆಗುತ್ತಿವೆ.
ರಸ್ತೆ ನಿರ್ವಾಹಕ ಗುತ್ತಿಗೆದಾರ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹುಬ್ಬಳ್ಳಿ-ಧಾರವಾಡ ಬೈಪಾಸ್ನ 30 ಕಿ.ಮೀ ರಸ್ತೆ ಪರಿಶೀಲಿಸಿ ಮುಂದಿನ 72 ಗಂಟೆಗಳಲ್ಲಿ ಅಪಾಯಕಾರಿ ಸ್ಥಳ, ಸೇತುವೆ ತಿರುವು ಗುರುತಿಸಿ ಅಲ್ಲಿ ಕನಿಷ್ಠ 20 ಎಚ್ಚರಿಕೆ ಫಲಕ, ವೇಗದ ಮೀತಿ ಸೂಚಿಸುವ ಮತ್ತು ಸುರಕ್ಷತಾ ನಿಯಮಗಳ ಫಲಕಗಳನ್ನು ಅಳವಡಿಸಿ ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.
ಹುಬ್ಬಳ್ಳಿ-ಧಾರವಾಡದ 30 ಕಿ.ಮೀ. ಬೈಪಾಸ್ ರಸ್ತೆಯ ಮಧ್ಯದಲ್ಲಿ ರಬ್ಬರ ಮತ್ತು ಫೈಬರ್ ಸಾಧನ ಬಳಸಿ, ರಸ್ತೆ ವಿಭಜಕಗಳನ್ನು ನಿರ್ಮಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದರು. ರಸ್ತೆ ಅಗಲೀಕರಣ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಆಗಿದ್ದು, ಅನುಮತಿ ಬಂದ ತಕ್ಷಣ ಈ ಕುರಿತು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ಫುಟ್ಪಾತ್ ಅತಿಕ್ರಮಿಸಿ ಅನೇಕ ರೀತಿಯ ಅಂಗಡಿ, ವ್ಯಾಪಾರಗಳು ಅನಧಿಕೃತವಾಗಿ ನಡೆಯುತ್ತಿವೆ. ಟೊಲ್ ಪಕ್ಕದಲ್ಲಿಯೇ ಗುತ್ತಿಗೆದಾರರಿಗೆ ನೀಡಿರುವ ಜಾಗದಲ್ಲಿ ನಿಯಮ ಉಲ್ಲಂಘಿಸಿ ಅಂಗಡಿ ನಿರ್ಮಾಣ, ವಾಹನ ನಿಲುಗಡೆಗೆ ಸ್ಥಳಾವಕಾಶ ನೀಡಲಾಗಿದೆ. ಈ ಕುರಿತು ರಸ್ತೆ ನಿರ್ವಾಹಕ ಗುತ್ತಿಗೆದಾರ ಸಂಸ್ಥೆಗೆ ನೋಟೀಸ್ ನೀಡಿ ಮತ್ತು ಸೂಕ್ತ ಬಂದೋಬಸ್ತ್ನಲ್ಲಿ ಎಲ್ಲ ಅತಿಕ್ರಮಣಗಳನ್ನು ಶೀಘ್ರದಲ್ಲಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದರು.
ಇತ್ತೀಚಿಗೆ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದವರ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಮತ್ತು ಟಿಪ್ಪರ್ ವಾಹನದ ಚಾಲಕನ ಮೇಲೆ ಅಜಾಗರೂಕತೆಯ ವಾಹನ ಚಾಲನೆ ಸೇರಿದಂತೆ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಬಿ.ಆರ್.ಟಿ.ಎಸ್. ರಸ್ತೆಯಲ್ಲಿ ಖಾಸಗಿ ಹಾಗೂ ಕೆಲವು ಸರಕಾರಿ ಇಲಾಖೆ ವಾಹನಗಳು ಸಂಚರಿಸುತ್ತಿರುವುದು ಕಂಡು ಬರುತ್ತಿದೆ. ನಗರ ಪೊಲೀಸ್ ಆಯುಕ್ತರು ಬಿಆರ್ಟಿಎಸ್ ರಸ್ತೆಯಲ್ಲಿ ಬಿಆರ್ಟಿಎಸ್ ಬಸ್ಗಳನ್ನು ಹೊರತುಪಡಿಸಿ ಯಾವ ತುರ್ತು ವಾಹನಗಳು ಸಂಚರಿಸಬೇಕೆಂದು ನಿರ್ಧರಿಸಿ, ಅಧಿಸೂಚನೆ ಹೊರಡಿಸಬೇಕು. ಮತ್ತು ಅಧಿಸೂಚಿತವಲ್ಲದ ವಾಹನಗಳು ಸಂಚರಿಸಿದರೆ ತಕ್ಷಣ ದಂಡ ವಿಧಿಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಗೆ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ರಾಜ್ಯ ಕಾನೂನು, ಸುವ್ಯವಸ್ಥೆ ಹಾಗೂ ಸಂಚಾರಿ ವಿಭಾಗದ ಅಪರ ಪೊಲೀಸ್ ಮಹಾನಿರ್ದೇಶಕ ಪ್ರತಾಪರೆಡ್ಡಿ ಅವರು ಮಾತನಾಡಿ, ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ವಾಹನ ಹಾಗೂ ವಾಹನ ಚಾಲಕರಿಂದ ಕಾನೂನು ಹಾಗೂ ನಿಯಮಗಳ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸಬೇಕು. ಅಪಾಯಕಾರಿ ರಸ್ತೆ, ತಿರುವು, ಸೇತುವೆಗಳ ಸಮೀಪದಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕು. ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಅಪಘಾತ ವಲಯಗಳನ್ನು ಗುರುತಿಸಿ, ಎಚ್ಚರಿಕೆ ಸಂದೇಶಗಳನ್ನು ಚಾಲಕರಿಗೆ ಎದ್ದು ಕಾಣುವಂತೆ ಅಳವಡಿಸಬೇಕು ಎಂದು ಹೇಳಿದರು.
ಉತ್ತರವಲಯದ ಪೊಲೀಸ್ ಮಹಾನಿರೀಕ್ಷಕ ರಾಘವೇಂದ್ರ ಸುಹಾಸ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ, ತಿರುವು, ಸೇತುವೆಗಳ, ಸುಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಬೇಕು. ರಸ್ತೆ ಸುರಕ್ಷತೆ ಹಾಗೂ ಎಚ್ಚರಿಕೆ ಸಂದೇಶದ ಫಲಕಗಳ ಅಳವಡಿಕೆ, ನಿರ್ವಹಣೆ ಕುರಿತು ಮೇಲುಸ್ತುವಾರಿ ಮಾಡಿ ನಿಗಾವಹಿಸಬೇಕು. ಗುತ್ತಿಗೆದಾರನ ನಿರ್ವಹಣೆ ಕುರಿತು ನಿಯಮಗಳ ಪಾಲನೆ ಆಗಿರುವುದನ್ನು ಪರಿಶೀಲಿಸಬೇಕೆಂದು ತಿಳಿಸಿದರು.
ನಗರ ಪೊಲೀಸ್ ಆಯುಕ್ತ ಲಾಬೂರಾಮ ಅವರು ಮಾತನಾಡಿ, ರಸ್ತೆ ಸುರಕ್ಷತಾ ಹಾಗೂ ಸಂಚಾರಿ ನಿಯಮಗಳ ಪಾಲನೆಗೆ ಆಧ್ಯತೆ ನೀಡಬೇಕು. ಹೆದ್ದಾರಿ ಸೇರಿದಂತೆ ನಗರ ಹಾಗೂ ಗ್ರಾಮೀಣ ಭಾಗದ ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಬೈಪಾಸ್, ಬಿಆರ್ಟಿಎಸ್ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳನ್ನು ಪರಿಶೀಲಿಸಿ, ಸೂಕ್ತ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ದೇಶಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ಮಾತನಾಡಿ, ವಾಹನಗಳ ಚಾಲಕರು ರಾತ್ರಿ ಸಂಚರಿಸುವಾಗ ಪ್ರಖರ ಬೆಳಕಿನ ಹೆಡ್ಲೈಟ್ ಬಳಸುತ್ತಾರೆ. ಇದರಿಂದಾಗಿ ಎದುರಿಗೆ ಬರುವ ವಾಹನಗಳಿಗೆ ದಾರಿ ಕಾಣದಾಗುತ್ತದೆ. ತಿರುವುಗಳಲ್ಲಿ ಮತ್ತು ನಿರ್ಧಿಷ್ಟಪಡಿಸಿದ ವೇಗದ ಮಿತಿ ಪಾಲಿಸದೇ ವೇಗವಾಗಿ ವಾಹನ ಚಲಾಯಿಸುತ್ತಾರೆ. ಸಾರಿಗೆ ಇಲಾಖೆ ಅಧಿಕಾರಿಗಳು ವಾಹನಗಳ ನೋಂದಣಿ ಹಾಗೂ ಫಿಟ್ನೆಸ್ ಸರ್ಟಿಫಿಕೇಟ್ ಕೊಡುವಾಗ ಇವುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಡಾ.ಬಿ. ಸುಶೀಲ ಅವರು ರಸ್ತೆ ಸುರಕ್ಷತೆ, ಅಪಘಾತಗಳ ನಿಯಂತ್ರಣ ಕುರಿತು ಸಭೆಯಲ್ಲಿ ಮಾತನಾಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಅಪ್ಪಯ್ಯ ನಾಲ್ವತ್ತವಾಡಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ, ಡಿವೈಎಸ್ಪಿಗಳಾದ ಎಂ.ಬಿ. ಸಂಕದ, ರಾಮನಗೌಡ ಹಟ್ಟಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಯಶವಂತ ಮದೀನಕರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಎಸ್.ಬಿ. ಚೌಡನ್ನವರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರ ಆರ್.ಕೆ. ಮಠದ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎಲ್. ಹಂಚಾಟೆ, ನೈಸ್ ಸಂಸ್ಥೆಯ ಪ್ರತಿನಿಧಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸದಸ್ಯರು, ರಸ್ತೆ ನಿರ್ವಹಣಾ ಗುತ್ತಿಗೆದಾರರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ಲೈಫ್ ಸ್ಟೈಲ್6 days ago
ಏಳಿ ಎದ್ದೇಳಿ ಗುರಿಮುಟ್ಟುವ ತನಕ ನಿಲ್ಲದಿರಿ : ವಿವೇಕಾನಂದ
-
ದಿನದ ಸುದ್ದಿ6 days ago
ಆಂದೋಲನ-ಈ ಜೀವ ಈ ಜೀವನ | ಅಂಗನವಾಡಿ ಕಾರ್ಯಕರ್ತೆಯ ಅಸಾಮಾನ್ಯ ಕರ್ತವ್ಯಪ್ರಜ್ಞೆ..!
-
ದಿನದ ಸುದ್ದಿ5 days ago
“ನೀನು ಅಪ್ಪನಿಗೆ ಹುಟ್ಟಿದಿಯಾ ಅನ್ನೋದಕ್ಕೆ ಸಾಕ್ಷಿ ಏನು..?” : ಸಚಿವ ಈಶ್ವರಪ್ಪ
-
ಸಿನಿ ಸುದ್ದಿ6 days ago
ಬಾಂಬೆ ಹೀರೋಹಿನ್ ಗಳು ಕಡಿಮೆ ಸಂಭಾವನೆಗೆ ಕೆಲಸ ಮಾಡ್ತಾರೆ ಅಂದವರಿಗೆ ಹೀಗಂದ್ರು ನಟಿ ಕೃತ್ತಿಕಾ ರವೀಂದ್ರ..!
-
ದಿನದ ಸುದ್ದಿ5 days ago
ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು, ಸಂಜೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ್ರು ನಾಗೇಶ್..!
-
ದಿನದ ಸುದ್ದಿ5 days ago
ಕೋವಿದ್ ಪ್ರಭಾವಳಿಯಲ್ಲಿ ಪ್ರಭುತ್ವದ ಕ್ರೌರ್ಯ
-
ದಿನದ ಸುದ್ದಿ5 days ago
ಸಚಿವ ಸಂಪುಟ ವಿಸ್ತರಣೆ : ಏಳು ಹೊಸ ಸಚಿವರ ಹೆಸರು ಫೈನಲ್ ಗೊಳಿಸಿದ ಯಡಿಯೂರಪ್ಪ
-
ಲೈಫ್ ಸ್ಟೈಲ್5 days ago
ಪಕ್ಷಿ ಪರಿಚಯ | ಬೆಳ್ಗಣ್ಣ