ದಿನದ ಸುದ್ದಿ
ಬಹುಜನರು ನಂಬಿರುವ ‘ಕತ್ತೆ ಕಥೆ’..!
- ಪರಶುರಾಮ್. ಎ
ಕತ್ತೆ ಕಥೆ ಇದೇನು ಪಂಚತಂತ್ರ ಕತೆಯೊ ಅಥವಾ ನೀತಿಕತೆಯೋ ಅಲ್ಲ. ನಿಮ್ಮಗಳ ನಿಜ ಜೀವನದಲ್ಲಿ ನೀವುಗಳೇ ನಂಬಿರುವ ಕಥೆಯಿದು. ನಿಮ್ಮ ಇಡೀ ಜೀವನದಲ್ಲಿ ಹಾಸು ಹೊಕ್ಕಾಗಿರುವ ದಿನನಿತ್ಯ ಕೈಮುಗಿದು ಮೂರ್ಖರಾಗಿರುವ ಮೂರ್ಖರನ್ನಾಗಿಸಿರುವ ಕತೆ. ಬಹುಶಃ ಈ ಕಥೆಯಲ್ಲಿ ನೀವುಗಳೇ ನಿಮ್ಮ ನಂಬಕೆಗಳೇ ಪ್ರಧಾನ ಆಗಿವೆ.
ನಂಬಿಕೆ, ಭಕ್ತಿ, ಮೌಲ್ಯಗಳನ್ನು ಬಂಡವಾಳವಾಗಿಸಿಕೊಂಡಿರುವವರೇ ಈ ಕಥೆಯ ಸೃಷ್ಟಿಕರ್ತರು. ಯಾವುದೋ ಒಂದು ಕಾಲದಲ್ಲಿ ಹುಟ್ಟಿರಬಹುದಾದ ಈ ಕಥೆ ಇನ್ನೂ ನಿಮ್ಮನ್ನು ಬಂಧನದಲ್ಲಿ ಇಟ್ಟಿದೆ ಎಂದರೆ ಅದಿನ್ನೆಂತಹ ಕ್ರೂರ ಲಾಭಕೋರ ವ್ಯವಸ್ಥೆ ಇರಬಹುದು ನೀವೇ ಊಹಿಸಿ ಯೋಚಿಸಿ! ಈ ಕಥೆ ಬಗ್ಗೆ ಈಗಾಗಲೇ ಕನ್ನಡದ ಲೇಖಕರು ಭಾಷಣಕಾರರು ಬಹುಜನರಿಗೆ ತಿಳಿಸಿ ಎಚ್ಚರಿಸುತಿದ್ದರು ಬಹುಜನರು ಇನ್ನೂ ಅದೇ ಕುತಂತ್ರ ಷಡ್ಯಂತ್ರಗಳಿಗೆ ಬಲಿಯಾಗಿರುವುದು ಸಮಾಜದ ಅಧೋಗತಿಗೆ ಒಂದು ಕಾರಣವು ಹೌದು. ತಮ್ಮನ್ನು ತಾವು ಶೋಷಿಸಿಕೊಳ್ಳುವುದು ಮತಿಹೀನ ಕೃತ್ಯ ಅಜ್ಞಾನ ಮೌಢ್ಯ ಪ್ರದರ್ಶನವಾಗಿದೆ.
ಡಾ.ಸಿದ್ದಲಿಂಗಯ್ಯ ನವರ “ಕತ್ತೆ ಮತ್ತು ಧರ್ಮ” ಕವನದಲ್ಲಿದೆ ನಾನು ಹೇಳಲು ಹೊರಟ ಸಾರಾಂಶ. (ಬಹುಜನರು ಕತ್ತೆ ಮತ್ತು ಧರ್ಮ ಕವನ ಓದಿ) ನಾನು ಇಲ್ಲಿ ಅದರ ಸಣ್ಣ ಸಾರಾಂಶ ಮಾತ್ರ ಉದಾಹರಿಸುವೆ. ಸಿದ್ದಯ್ಯನೆಂಬ ಅಗಸನಿಗೆ ಕತ್ತೆ ಎಂಬುದು ಜೊತೆಗಾರ, ಅದರೊಂದಿಗೆ ಅಪಾರ ಸ್ನೇಹ ಮಮತೆ ಹೊಂದಿದವನು ಈತ. ಎಷ್ಟರಮಟ್ಟಿಗೆ ಎಂದರೆ ಜನಗಳು ಕತ್ತೆಯನ್ನು ಸಿದ್ದಯ್ಯನ ಸಾಕುಮಗಳು ಅನ್ನುವಷ್ಟು ಪ್ರೀತಿ ಒಬ್ಬರಿಗೊಬ್ಬರಿಗೆ.
ಇಂಥ ತನ್ನ ನೆಚ್ಚಿನ ಕತ್ತೆ ಒಂದು ದಿನ ಇದ್ದಕ್ಕಿದ್ದಂತೆ ಕೊನೆಯುಸಿರೆಳೆದು ಮಲಗಿತು. ದಾರಿಯ ಮೂಲೆಯಲ್ಲಿ ಒಂದು ಕಡೆ ಮಣ್ಣು ಮಾಡಿ ಸಮಾಧಿಗೆ ನಮಿಸಿ ಪೂಜಿಸಿ ನೊಂದ ಸಿದ್ದಯ್ಯ ದೇಶಾಂತರ ಹೊರಟು ಹೋದ. ವ್ಯಾಪಾರಕ್ಕೆ ಅದೇ ದಾರಿಯಲ್ಲಿ ಹೊರಟಿದ್ದ ಜಯಶೆಟ್ಟಿ ಎಂಬುವನು ಅಗಸನ ಪೂಜೆ ನೋಡಿ ಯಾವುದೊ ಮಹಾತ್ಮರ ಸನ್ನಿಧಿಯೆಂದುಕೊಂಡು ಕೈ ಮುಗಿದು ತನ್ನ ವ್ಯಾಪಾರಕ್ಕೆ ಮರಳಿದ.
ಶೆಟ್ಟಿಗೆ ಅವತ್ತು ಲಾಭದ ಮೇಲೆ ಲಾಭ ವ್ಯಾಪಾರ ‘ದಿಲ್ಕುಷ್’ ಆಗಿ ಸಮಾಧಿಗೆ ದೇವರಕಂಬ ಎಣ್ಣೆ ತಂದುಕೊಟ್ಟ. ಈ ಸುದ್ದಿ ಇಡೀ ಊರಿಗೆ ಹರಡಿ ಕೆಲವೇ ದಿನಗಳಲ್ಲಿ ಭಕ್ತರು ಹೆಚ್ಚಾಗಿ ಅಲ್ಲೊಂದು ದೇವಾಲಯ ನಿರ್ಮಾಣವಾಗಿ ಪರಿಷೆ ನಡೆಯೊ ಮಟ್ಟಿಗೆ ಬೆಳೆದಿರುತ್ತೆ. ಆ ದೇವಾಲಯದ ಮುಂದೆ ಭಿಕ್ಷುಕರು ಸಣ್ಣ ಸಣ್ಣ ಅಂಗಡಿಗಳು ಜನಗಳು ವೈದಿಕರು, ದಾನ ನೀಡಲು ಸಾಹುಕಾರರು ಎಲ್ಲರೂ ಸೇರಿರುತ್ತಾರೆ.
ಈ ಸುದ್ದಿ ಅರಮನೆಯ ತಲುಪಿ ರಾಜ ರಾಣಿ ಈ ದೇವಾಲಯ(ಅಲ್ಲಲ್ಲ ಕತ್ತೆ ಸಮಾಧಿ) ನೋಡಲು ಬಯಸಿ ಹೊರಟು ಬರುತ್ತಾರೆ. ವರ್ಷ ಕಳೆದ ನಂತರ ಅಗಸ ಸಿದ್ದಯ್ಯ ತಾನು ಮಾಡಿದ ಕತ್ತೆ ಸಮಾಧಿ ಹುಡುಕಿ ಕಾಣಲು ಬರುತ್ತಾನೆ ಆದರೆ ತಳವಾರರು ಅವನನ್ನು ಕತ್ತು ಹಿಡಿದು ಆಚೆ ತಳ್ಳುತ್ತಾರೆ ಇದಿಷ್ಟು ಕವನದ ಸಾರಾಂಶ.
ಈ ಕವನದಲ್ಲಿ ಬಹುಜನರು ನಂಬಿರಬಹುದಾದ ಅನೇಕ ಮೌಢ್ಯಗಳನ್ನು ಹೊತ್ತಿವೆ. ಜ್ಞಾನದ ಮಾರ್ಗವು ಸಹ ಇದೆ. ನಮಗೆಲ್ಲರಿಗೂ ಗೊತ್ತು ಸಿಂಧೂ ಬಯಲಿನ ನಾಗರೀಕತೆಯಿಂದಲೂ ಇಲ್ಲಿನ ಮೂಲನಿವಾಸಿ ತಳಸಮುದಾಯದ “ಬಹುಜನರು” ಪ್ರಾಣಿ- ಪಕ್ಷಿ. ನಾಯಿ. ಪಶುಸಂಗೋಪನೆ, ಕಾಡು ಪ್ರಾಣಿಗಳ ಬೇಟೆಯಲ್ಲಿ ಬಹು ಪ್ರಸಿದ್ಧರು ನಿಷ್ಣತೆಯುಳ್ಳವರು ಕೂಡಾ.
ಅವು ತಮ್ಮ ಜೀವನದ ಅವಿಭಾಜ್ಯ ಅಂಗವೇನೊ ಎಂಬ ಮಟ್ಟಿಗೆ ಸಹ ಪಳಗಿಸಿ ಸಾಕುತ್ತಿದ್ದರು. ಹೀಗೆಯೇ ಸಿದ್ದಯ್ಯನೆಂಬ ಅಗಸ ತನ್ನ ಕತ್ತೆ ಸಾಕಿದ್ದು ಅದು ಸತ್ತ ನಂತರ ಅದರ ಗುರುತಿಗೆ ಮಣ್ಣು ಮಾಡಿ ಧನ್ಯವಾದಕ್ಕಾಗಿ ಪೂಜೆ ಸಲ್ಲಿಸುವುದು ಸಹ ಈ ನೆಲದ ನೈಜ ಸಂಸ್ಕೃತಿಗಳ ಬಿಂಬವೇ ಅಗಿದೆ.
ಈಗಲೂ ಕೂಡ ನಾವುಗಳು ಸತ್ತವರ ಸಮಾಧಿ ಮೇಲೆ ತುಳಸಿ ಗಿಡ ವಿವಿಧ ಸಸಿ ನೆಟ್ಟು ಪೋಷಿಸುವುದು ಕಾಣಬಹುದು.(ಬೆಂಕಿಯಲ್ಲಿ ದೇಹ ಸುಟ್ಟು ಅದರ ಅಸ್ಥಿಯನ್ನು ನೀರಿನಲ್ಲಿ ಬಿಟ್ಟು ಗುರುತೇ ಇಲ್ಲದಂತೆ ಸಂಬಂಧ ಕಡಿದು ಕೊಳ್ಳುವುದು ಕುತಂತ್ರಿ ಆರ್ಯರ ಸಂಸ್ಕೃತಿಯಾಗಿದೆ ನೆನಪಿರಲಿ).
ಮಹಾನವಮಿ ಅಥವಾ ಮಾರ್ನಾಮಿ ಹಬ್ಬದ ಸಂದರ್ಭದಲ್ಲಿ ತೀರಿ ಹೋದ ಹಿರಿಯರಿಗೆ – ವ್ಯಕ್ತಿಗಳಿಗೆ ಎಡೆ ಇಡುವುದು ಈ ನೆಲ ಮೂಲದ ಸಂಸ್ಕೃತಿ, ಪಿಂಡ ಪ್ರದಾನವಲ್ಲ. ಆದರೆ ಈ ಕುತಂತ್ರಕ್ಕೂ ಬಹುಜನರು ಬಲಿಯಾಗಿದ್ದಾರೆ. ಕತ್ತೆ ಸಮಾಧಿಗೆ ಪೂಜೆ ಸಲ್ಲಿಸುವಾಗ ಜಯಶೆಟ್ಟಿ ಎಂಬುವ ವ್ಯಾಪಾರಸ್ಥ ನೋಡಿ ಕೈಮುಗಿದು ಹೋದ ನಂತರ ಲಾಭವಾಯಿತು ಎಂಬುದು ಇಲ್ಲಿ ಬೇರೆಯವರು ಯಾರು ಏನು ಮಾಡುತ್ತಿದ್ದಾರೆ ತಾನು ಅವರಂತೆ ಅನುಕರಿಸುವುದು ಸಾಬೀತಾಗುತ್ತದೆ.
ಆಗಲೇ ಹೇಳಿದಂತೆ ನಮ್ಮದಲ್ಲದ ಪಿಂಡ ಪ್ರದಾನವೂ ಸಹ. ನಿಮಗೆ ಗೊತ್ತಿರಲಿ ಧ್ಯಾನ ಯೋಗ ಪ್ರಾರ್ಥನೆ ವಿವಿಧ ಚಟುವಟಿಕೆ ಯಿಂದ ಮನಸ್ಸು ಉಲ್ಲಾಸಿತಗೊಂಡು ಪಾಸಿಟಿವ್ ನಿಂದ ಆ ದಿನದ ಚಟುವಟಿಕೆಯ ಎಲ್ಲದರ ಮೇಲೂ ಪ್ರಭಾವ ಬೀರುತ್ತದೆ. ಶೆಟ್ಟಿಗೆ ಇಲ್ಲಾಗಿದ್ದು ಅದೇ. ನಂತರ ತನ್ನ ಸ್ವಪ್ರಯತ್ನ ಸ್ವಂತ ಶಕ್ತಿ ಮರೆತವನೊಬ್ಬ ಸಮಾಧಿಯ ಬಗ್ಗೆ ದೊಡ್ಡ ಪುಕಾರು ಮಾಡಿ ಮೌಢ್ಯ ಪ್ರಸಾರದಲ್ಲಿ ತೊಡಗಿದ.
ಅಲ್ಲೊಂದು ಜಾತ್ರೆ ಪೂಜೆ ನಡೆಯುತ್ತದೆ. ದಾನ ವ್ಯವಹಾರ ಆಗುವಂತೆ ಮಾಡುವಲ್ಲಿ ತಾನು ತೊಡಗಿಸಿಕೊಂಡ. ಇಂತದ್ದೇ ಪರಿಸ್ಥಿತಿ ಈಗಲೂ ಕಾಣಬಹುದು. ವರ್ಷ ಕಳೆದ ನಂತರ ಕತ್ತೆ ಸಮಾಧಿಯ ಜಾಗ ಹುಡುಕಿ ಸತ್ಯ ಅರಿತಿದ್ದ ಸಿದ್ದಯ್ಯ ಅಲ್ಲಿಗೆ ಬಂದ. ತಳವಾರ್ರು ಅವನನ್ನು ಕತ್ತು ಹಿಡಿದು ಆಚೆ ತಳ್ಳಿ ದೇವಾಲಯದ ಹತ್ತಿರವು ಬಿಟ್ಟು ಕೊಳ್ಳಲಿಲ್ಲ.
ಇದು ಈಗಲೂ ಸತ್ಯ ಬೇಕಾದರೆ ನೋಡಿ ದೇವಸ್ಥಾನದಲ್ಲಿ ಇರುವ ಸತ್ಯವನ್ನು ವಿವಿಧ ಸಂಶೋಧಕರು, ಲೇಖಕರು ಮೌಢ್ಯಭಂಜಕರು ಅದನ್ನು ಬಯಲಿಗೆಳೆಯುವರು ಎಂಬ ಭಯ ಆ ವರ್ಗಕ್ಕಿದೆ. ಅದಕ್ಕೆ ಆಳುವ ಜನರ ಸಹಕಾರವು ಸಿಗುತ್ತದೆ. ಕತ್ತೆ ಸಮಾಧಿ ಎಲ್ಲಿಯಾದರೂ ಪವಾಡ ಸೃಷ್ಟಿಸಲು ಸಾಧ್ಯವ? ಇಂತಹ ಅದೆಷ್ಟೋ ನಿರ್ವೀರ್ಯ ಕತ್ತೆಯ ಸಮಾಧಿಗಳು ಓಣಿ ಓಣಿಗಳಲ್ಲಿ ರಸ್ತೆ ರಸ್ತೆಯಲ್ಲಿ ಸಿಗುತ್ತವೆ.
ಅದೆಲ್ಲವೂ ದೇವಾಲಯವೆಂಬ ಮೌಢ್ಯದ ಆಸ್ಥಾನಗಳೆಂದು ತಿಳಿದಿರಲಿ. ಇನ್ನೂ ಕರ್ನಾಟಕದ ವಾಗ್ಮಿಗಳಾದ ಗುರುರಾಜ ಕರ್ಜಗಿಯವರು ಕರುಣಾಳು ಬಾ ಬೆಳಕೆ 2ನೇ ಸಂಪುಟದಲ್ಲಿ ಉಲ್ಲೇಖಿಸಿರುವಂತೆ ‘ಸಮಾಧಿಯ ಮಹಿಮೆ’ ಎಂಬ ಲೇಖನ ಸಹ ಇದೇ ಕತೆಯ ತಿರುಳು ಹೊಂದಿದೆ. ಗುರುಕುಲದಲ್ಲಿ ಲೋಕ ಜ್ಞಾನ ವ್ಯವಹಾರ ಜ್ಞಾನವಿಲ್ಲದ ದಡ್ಡ ವಿದ್ಯಾರ್ಥಿಯೊಬ್ಬನಿಗೆ ಬರಗಾಲ ಬಂದಾಗ ಗುರುಗಳು ಆತನಿಗೆ ಒಂದು ಕತ್ತೆಯನ್ನು ನೀಡಿ ನಿನ್ನ ಜೀವನ ನೀನು ನೋಡಿಕೊ ಎಂದು ಕಳುಹಿಸಿ ಕೊಡುವರು.
ಮುಂದೊಂದು ದಿನ ಆ ಕತ್ತೆ ಸತ್ತಾಗ ಅದನ್ನು ಮಣ್ಣು ಮಾಡಿ ಸಮಾಧಿಗೆ ತನಗೆ ತಿಳಿದಂತೆ ದಿನನಿತ್ಯ ಪೂಜೆ ಸಲ್ಲಿಸುತ್ತಿರುತ್ತಾನೆ. ಈ ದಡ್ಡ ವಿದ್ಯಾರ್ಥಿಯ ಕತ್ತೆ ಸಮಾಧಿ ಮುಂದೆ ಅದೊಂದು ಜಾಗೃತ ಸ್ಥಾನವೆಂಬಂತೆ ಪ್ರಚಲಿತಗೊಂಡು ಹರಕೆ ಹೊತ್ತು ಜನ ಬಂದರು. ಈತನ ಆದಾಯ ಹೆಚ್ಚಿತು. ಸಮಾಧಿಗೊಂದು ದೇವಾಲಯ ಶಿಷ್ಯನಿಗೆ ಒಂದು ಕೊಠಡಿ ಆಯಿತು.
ಶಿಷ್ಯನ ಗುರುಗಳು ಭೇಟಿಯಾಗಿ ಅದು ಯಾವ ಮಹಾತ್ಮನ ಕಂಡು ನಿನ್ನ ಜೀವನ ಉದ್ದರಿಸಿಕೊಂಡೆ ಎಂದು ಪ್ರಶ್ನಿಸಿದಾಗ ಶಿಷ್ಯ ನೀವು ಕೊಟ್ಟ ಕತ್ತೆಯೇ ನನ್ನ ಪಾಲಿನ ಮಹಾತ್ಮ: ಅದರ ಸಮಾಧಿಯೇ ಈ ದೇವಾಲಯ. ಅದ ನಂಬಿದ ಮೂರ್ಖ ಮಂದಿಗಳ ಭಕ್ತಿಯೇ ಇಂದಿನ ನನ್ನ ಆದಾಯ ಎಂದು ಹೇಳಿ ಬೆರಗಾಗಿಸಿದ್ದ. ಒಟ್ಟಾರೆ ಈ ಮೇಲಿನ ಎರಡೂ ಕತೆಗಳು ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡ ವರ್ಗವೊಂದು ಅದರ ಹೆಸರಿನಲ್ಲಿ ವ್ಯವಹಾರಕ್ಕಿಳಿದು ಪೂಜೆ ಪುರಸ್ಕಾರ ಜಾತ್ರೆ ಹೋಮ ಹವನ ಅರ್ಚನೆ ದಕ್ಷಿಣೆ ಅಂಗಡಿ ಇತರೆ ಎಲ್ಲರಿಂದಲೂ ಲಾಭಗಳನ್ನು ಪಡೆಯುತ್ತ ಬಂದರು.
ತಮ್ಮ ಬುದ್ದಿ ಸಾಮರ್ಥ್ಯ ಮರೆತು ಸತ್ಯವನ್ನರಿಯದ ಗೋಜಿಗೆ, ಸತ್ಯ ಮಾರ್ಗಕ್ಕೆ ಹೋಗದೇ ತಮ್ಮನ್ನು ತಾವೇ ಶೋಷಣೆಗೆ ಒಡ್ಡಿ ಬಹುಜನರು ಪ್ರಜ್ಞಾಹೀನ ಸ್ಥಿತಿಯ ತಲುಪಿದರು. ಮೌಢ್ಯಕ್ಕೆ ಬಲಿಯಾದರು. ಇಂತಹ ವರ್ಣ ರಂಜಿತ ಕತೆಗಳನ್ನು ಈಗಲೂ ಹಲವಾರು ದೇವರು ನಂಬಿ ನಿಮಗೆ ಒಳ್ಳೆಯದಾಗುತ್ತೆ, ನಾನು ಹೇಳೊದು ಕೇಳಿ: ಹೇಳಿದಂತೆ ಮಾಡಿ ನಿಮ್ಮ ಭವಿಷ್ಯ ಸರಿ ಹೋಗುತ್ತೆ ಎಂದು ಬೊಬ್ಬೆ ಇಡುವವರೇ ಹೆಚ್ಚು. ಇಂತಹವರ ಮದ್ಯದಲ್ಲಿ ಸತ್ಯ ನುಡಿಯುವ ಬಹುಜನರಿಗೆ ವೈಚಾರಿಕತೆ ಬಿತ್ತುವ ಸತ್ಯ ಮಾರ್ಗಕ್ಕೆ ಮಾರ್ಗದರ್ಶನ ನೀಡುವ ಶ್ರೀನಿಜಗುಣಾನಂದ ಸ್ವಾಮಿಗಳೇ ನಮ್ಮೆಲ್ಲರಿಗೂ ಆದರ್ಶ.
ನಿಜಗುಣ ಸ್ವಾಮಿಗಳು ವಿವಿಧ ವೇದಿಕೆಯಲ್ಲಿ ಈ ಮೇಲಿನ ಕತೆಯನ್ನು ಉದಾಹರಿಸಿ ಜನರನ್ನು ಮೌಢ್ಯದಿಂದ ಬಿಡುಗಡೆಗೊಳಿಸಲು ಪ್ರಯತ್ನಿಸಿದ್ದಾರೆ. ಜನರಿಗೆ ತಿಳಿ ಹೇಳಿ ಜ್ಞಾನ ಹಂಚುತ್ತಿದ್ದಾರೆ. ನಮಗೆ ಆದರ್ಶವಾಗಬೇಕಾದವರು ನಿಜಗುಣ ಸ್ವಾಮೀಜಿಗಳೆ ಹೊರತು ಬ್ರಹ್ಮಾಂಡ ಅಂಡ ಪಿಂಡ ದಿನ ವಾರ ವರ್ಷ ಭವಿಷ್ಯ ನುಡಿವ, ಸ್ತ್ರೀವಶ, ಧನಪ್ರಾಪ್ತಿ ಅತ್ತೆ ಸೊಸೆ ಕಿತ್ತಾಟ ಕೋರ್ಟ್ ಕೇಸ್ ಈಡೇರಿಸಿ ಕೊಡುವೆನೆಂಬ ಸಾಧು ಗುರೂಜಿಗಳಲ್ಲ. ನಿಮ್ಮನ್ನು ಮೌಢ್ಯದಿಂದ ಬಿಡುಗಡೆಗೊಳಿಸಿ ಸನ್ಮಾರ್ಗದಲ್ಲಿ ಕೊಂಡೊಯ್ಯುವವರ ಬಳಿ ಸಾಗಿ. ಮೌಢ್ಯದ ಬಾವಿಗೆ ಹಾಕುವವರೆಡೆಯಲ್ಲ. ಈ ಕತ್ತೆ ಕಥೆ ನಿಮಗೆ ಸತ್ಯವನ್ನು ತಿಳಿಯಲು ಸಾಧ್ಯವಾಯಿತು ಎಂದು ಭಾವಿಸಿ ಕುವೆಂಪುರವರ ಈ ಸಾಲು
“ಸುಳ್ಳಿನ ಮಾಲೆಯ ಕೊರಳಿಗೆ ಸೂಡಿ
ಕಳ್ಳನೊಬ್ಬನನ್ನು ಗುರುವನು ಮಾಡಿ
ಬಡವರ ಹಣವನು ಕಾಣಿಕೆ ನೀಡಿ
ಧರ್ಮವ ಮೆರೆದರು ನೋಡಯ್ಯ”
“ಪವಾಡ – ಮೂಢನಂಬಿಕೆಗಳು, ದುರ್ಬಲತೆ ಮತ್ತು ಮೃತ್ಯುವಿನ ಸಂಕೇತಗಳು ಅವುಗಳ ಬಗ್ಗೆ ಎಚ್ಚರಿಕೆಯಿಂದಿರಿ”
– ಸ್ವಾಮಿ ವಿವೇಕಾನಂದರು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.
ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


