Connect with us

ದಿನದ ಸುದ್ದಿ

ಬಹುಜನರು ನಂಬಿರುವ ‘ಕತ್ತೆ ಕಥೆ’..!

Published

on

  • ಪರಶುರಾಮ್. ಎ

ಕತ್ತೆ ಕಥೆ ಇದೇನು ಪಂಚತಂತ್ರ ಕತೆಯೊ ಅಥವಾ ನೀತಿಕತೆಯೋ ಅಲ್ಲ. ನಿಮ್ಮಗಳ ನಿಜ ಜೀವನದಲ್ಲಿ ನೀವುಗಳೇ ನಂಬಿರುವ ಕಥೆಯಿದು. ನಿಮ್ಮ ಇಡೀ ಜೀವನದಲ್ಲಿ ಹಾಸು ಹೊಕ್ಕಾಗಿರುವ ದಿನನಿತ್ಯ ಕೈಮುಗಿದು ಮೂರ್ಖರಾಗಿರುವ ಮೂರ್ಖರನ್ನಾಗಿಸಿರುವ ಕತೆ. ಬಹುಶಃ ಈ ಕಥೆಯಲ್ಲಿ ನೀವುಗಳೇ ನಿಮ್ಮ ನಂಬಕೆಗಳೇ ಪ್ರಧಾನ ಆಗಿವೆ.

ನಂಬಿಕೆ, ಭಕ್ತಿ, ಮೌಲ್ಯಗಳನ್ನು ಬಂಡವಾಳವಾಗಿಸಿಕೊಂಡಿರುವವರೇ ಈ ಕಥೆಯ ಸೃಷ್ಟಿಕರ್ತರು. ಯಾವುದೋ ಒಂದು ಕಾಲದಲ್ಲಿ ಹುಟ್ಟಿರಬಹುದಾದ ಈ ಕಥೆ ಇನ್ನೂ ನಿಮ್ಮನ್ನು ಬಂಧನದಲ್ಲಿ ಇಟ್ಟಿದೆ ಎಂದರೆ ಅದಿನ್ನೆಂತಹ ಕ್ರೂರ ಲಾಭಕೋರ ವ್ಯವಸ್ಥೆ ಇರಬಹುದು ನೀವೇ ಊಹಿಸಿ ಯೋಚಿಸಿ! ಈ ಕಥೆ ಬಗ್ಗೆ ಈಗಾಗಲೇ ಕನ್ನಡದ ಲೇಖಕರು ಭಾಷಣಕಾರರು ಬಹುಜನರಿಗೆ ತಿಳಿಸಿ ಎಚ್ಚರಿಸುತಿದ್ದರು ಬಹುಜನರು ಇನ್ನೂ ಅದೇ ಕುತಂತ್ರ ಷಡ್ಯಂತ್ರಗಳಿಗೆ ಬಲಿಯಾಗಿರುವುದು ಸಮಾಜದ ಅಧೋಗತಿಗೆ ಒಂದು ಕಾರಣವು ಹೌದು. ತಮ್ಮನ್ನು ತಾವು ಶೋಷಿಸಿಕೊಳ್ಳುವುದು ಮತಿಹೀನ ಕೃತ್ಯ ಅಜ್ಞಾನ ಮೌಢ್ಯ ಪ್ರದರ್ಶನವಾಗಿದೆ.

ಡಾ.ಸಿದ್ದಲಿಂಗಯ್ಯ ನವರ “ಕತ್ತೆ ಮತ್ತು ಧರ್ಮ” ಕವನದಲ್ಲಿದೆ ನಾನು ಹೇಳಲು ಹೊರಟ ಸಾರಾಂಶ. (ಬಹುಜನರು ಕತ್ತೆ ಮತ್ತು ಧರ್ಮ ಕವನ ಓದಿ) ನಾನು ಇಲ್ಲಿ ಅದರ ಸಣ್ಣ ಸಾರಾಂಶ ಮಾತ್ರ ಉದಾಹರಿಸುವೆ. ಸಿದ್ದಯ್ಯನೆಂಬ ಅಗಸನಿಗೆ ಕತ್ತೆ ಎಂಬುದು ಜೊತೆಗಾರ, ಅದರೊಂದಿಗೆ ಅಪಾರ ಸ್ನೇಹ ಮಮತೆ ಹೊಂದಿದವನು ಈತ. ಎಷ್ಟರಮಟ್ಟಿಗೆ ಎಂದರೆ ಜನಗಳು ಕತ್ತೆಯನ್ನು ಸಿದ್ದಯ್ಯನ ಸಾಕುಮಗಳು ಅನ್ನುವಷ್ಟು ಪ್ರೀತಿ ಒಬ್ಬರಿಗೊಬ್ಬರಿಗೆ.

ಇಂಥ ತನ್ನ ನೆಚ್ಚಿನ ಕತ್ತೆ ಒಂದು ದಿನ ಇದ್ದಕ್ಕಿದ್ದಂತೆ ಕೊನೆಯುಸಿರೆಳೆದು ಮಲಗಿತು. ದಾರಿಯ ಮೂಲೆಯಲ್ಲಿ ಒಂದು ಕಡೆ ಮಣ್ಣು ಮಾಡಿ ಸಮಾಧಿಗೆ ನಮಿಸಿ ಪೂಜಿಸಿ ನೊಂದ ಸಿದ್ದಯ್ಯ ದೇಶಾಂತರ ಹೊರಟು ಹೋದ. ವ್ಯಾಪಾರಕ್ಕೆ ಅದೇ ದಾರಿಯಲ್ಲಿ ಹೊರಟಿದ್ದ ಜಯಶೆಟ್ಟಿ ಎಂಬುವನು ಅಗಸನ ಪೂಜೆ ನೋಡಿ ಯಾವುದೊ ಮಹಾತ್ಮರ ಸನ್ನಿಧಿಯೆಂದುಕೊಂಡು ಕೈ ಮುಗಿದು ತನ್ನ ವ್ಯಾಪಾರಕ್ಕೆ ಮರಳಿದ.

ಶೆಟ್ಟಿಗೆ ಅವತ್ತು ಲಾಭದ ಮೇಲೆ ಲಾಭ ವ್ಯಾಪಾರ ‘ದಿಲ್ಕುಷ್’ ಆಗಿ ಸಮಾಧಿಗೆ ದೇವರಕಂಬ ಎಣ್ಣೆ ತಂದುಕೊಟ್ಟ. ಈ ಸುದ್ದಿ ಇಡೀ ಊರಿಗೆ ಹರಡಿ ಕೆಲವೇ ದಿನಗಳಲ್ಲಿ ಭಕ್ತರು ಹೆಚ್ಚಾಗಿ ಅಲ್ಲೊಂದು ದೇವಾಲಯ ನಿರ್ಮಾಣವಾಗಿ ಪರಿಷೆ ನಡೆಯೊ ಮಟ್ಟಿಗೆ ಬೆಳೆದಿರುತ್ತೆ. ಆ ದೇವಾಲಯದ ಮುಂದೆ ಭಿಕ್ಷುಕರು ಸಣ್ಣ ಸಣ್ಣ ಅಂಗಡಿಗಳು ಜನಗಳು ವೈದಿಕರು, ದಾನ ನೀಡಲು ಸಾಹುಕಾರರು ಎಲ್ಲರೂ ಸೇರಿರುತ್ತಾರೆ.

ಈ ಸುದ್ದಿ ಅರಮನೆಯ ತಲುಪಿ ರಾಜ ರಾಣಿ ಈ ದೇವಾಲಯ(ಅಲ್ಲಲ್ಲ ಕತ್ತೆ ಸಮಾಧಿ) ನೋಡಲು ಬಯಸಿ ಹೊರಟು ಬರುತ್ತಾರೆ. ವರ್ಷ ಕಳೆದ ನಂತರ ಅಗಸ ಸಿದ್ದಯ್ಯ ತಾನು ಮಾಡಿದ ಕತ್ತೆ ಸಮಾಧಿ ಹುಡುಕಿ ಕಾಣಲು ಬರುತ್ತಾನೆ ಆದರೆ ತಳವಾರರು ಅವನನ್ನು ಕತ್ತು ಹಿಡಿದು ಆಚೆ ತಳ್ಳುತ್ತಾರೆ ಇದಿಷ್ಟು ಕವನದ ಸಾರಾಂಶ.

ಈ ಕವನದಲ್ಲಿ ಬಹುಜನರು ನಂಬಿರಬಹುದಾದ ಅನೇಕ ಮೌಢ್ಯಗಳನ್ನು ಹೊತ್ತಿವೆ. ಜ್ಞಾನದ ಮಾರ್ಗವು ಸಹ ಇದೆ. ನಮಗೆಲ್ಲರಿಗೂ ಗೊತ್ತು ಸಿಂಧೂ ಬಯಲಿನ ನಾಗರೀಕತೆಯಿಂದಲೂ ಇಲ್ಲಿನ ಮೂಲನಿವಾಸಿ ತಳಸಮುದಾಯದ “ಬಹುಜನರು” ಪ್ರಾಣಿ- ಪಕ್ಷಿ. ನಾಯಿ. ಪಶುಸಂಗೋಪನೆ, ಕಾಡು ಪ್ರಾಣಿಗಳ ಬೇಟೆಯಲ್ಲಿ ಬಹು ಪ್ರಸಿದ್ಧರು ನಿಷ್ಣತೆಯುಳ್ಳವರು ಕೂಡಾ.

ಅವು ತಮ್ಮ ಜೀವನದ ಅವಿಭಾಜ್ಯ ಅಂಗವೇನೊ ಎಂಬ ಮಟ್ಟಿಗೆ ಸಹ ಪಳಗಿಸಿ ಸಾಕುತ್ತಿದ್ದರು. ಹೀಗೆಯೇ ಸಿದ್ದಯ್ಯನೆಂಬ ಅಗಸ ತನ್ನ ಕತ್ತೆ ಸಾಕಿದ್ದು ಅದು ಸತ್ತ ನಂತರ ಅದರ ಗುರುತಿಗೆ ಮಣ್ಣು ಮಾಡಿ ಧನ್ಯವಾದಕ್ಕಾಗಿ ಪೂಜೆ ಸಲ್ಲಿಸುವುದು ಸಹ ಈ ನೆಲದ ನೈಜ ಸಂಸ್ಕೃತಿಗಳ ಬಿಂಬವೇ ಅಗಿದೆ.

ಈಗಲೂ ಕೂಡ ನಾವುಗಳು ಸತ್ತವರ ಸಮಾಧಿ ಮೇಲೆ ತುಳಸಿ ಗಿಡ ವಿವಿಧ ಸಸಿ ನೆಟ್ಟು ಪೋಷಿಸುವುದು ಕಾಣಬಹುದು.(ಬೆಂಕಿಯಲ್ಲಿ ದೇಹ ಸುಟ್ಟು ಅದರ ಅಸ್ಥಿಯನ್ನು ನೀರಿನಲ್ಲಿ ಬಿಟ್ಟು ಗುರುತೇ ಇಲ್ಲದಂತೆ ಸಂಬಂಧ ಕಡಿದು ಕೊಳ್ಳುವುದು ಕುತಂತ್ರಿ ಆರ್ಯರ ಸಂಸ್ಕೃತಿಯಾಗಿದೆ ನೆನಪಿರಲಿ).

ಮಹಾನವಮಿ ಅಥವಾ ಮಾರ್ನಾಮಿ ಹಬ್ಬದ ಸಂದರ್ಭದಲ್ಲಿ ತೀರಿ ಹೋದ ಹಿರಿಯರಿಗೆ – ವ್ಯಕ್ತಿಗಳಿಗೆ ಎಡೆ ಇಡುವುದು ಈ ನೆಲ ಮೂಲದ ಸಂಸ್ಕೃತಿ, ಪಿಂಡ ಪ್ರದಾನವಲ್ಲ. ಆದರೆ ಈ ಕುತಂತ್ರಕ್ಕೂ ಬಹುಜನರು ಬಲಿಯಾಗಿದ್ದಾರೆ. ಕತ್ತೆ ಸಮಾಧಿಗೆ ಪೂಜೆ ಸಲ್ಲಿಸುವಾಗ ಜಯಶೆಟ್ಟಿ ಎಂಬುವ ವ್ಯಾಪಾರಸ್ಥ ನೋಡಿ ಕೈಮುಗಿದು ಹೋದ ನಂತರ ಲಾಭವಾಯಿತು ಎಂಬುದು ಇಲ್ಲಿ ಬೇರೆಯವರು ಯಾರು ಏನು ಮಾಡುತ್ತಿದ್ದಾರೆ ತಾನು ಅವರಂತೆ ಅನುಕರಿಸುವುದು ಸಾಬೀತಾಗುತ್ತದೆ.

ಆಗಲೇ ಹೇಳಿದಂತೆ ನಮ್ಮದಲ್ಲದ ಪಿಂಡ ಪ್ರದಾನವೂ ಸಹ. ನಿಮಗೆ ಗೊತ್ತಿರಲಿ ಧ್ಯಾನ ಯೋಗ ಪ್ರಾರ್ಥನೆ ವಿವಿಧ ಚಟುವಟಿಕೆ ಯಿಂದ ಮನಸ್ಸು ಉಲ್ಲಾಸಿತಗೊಂಡು ಪಾಸಿಟಿವ್ ನಿಂದ ಆ ದಿನದ ಚಟುವಟಿಕೆಯ ಎಲ್ಲದರ ಮೇಲೂ ಪ್ರಭಾವ ಬೀರುತ್ತದೆ. ಶೆಟ್ಟಿಗೆ ಇಲ್ಲಾಗಿದ್ದು ಅದೇ. ನಂತರ ತನ್ನ ಸ್ವಪ್ರಯತ್ನ ಸ್ವಂತ ಶಕ್ತಿ ಮರೆತವನೊಬ್ಬ ಸಮಾಧಿಯ ಬಗ್ಗೆ ದೊಡ್ಡ ಪುಕಾರು ಮಾಡಿ ಮೌಢ್ಯ ಪ್ರಸಾರದಲ್ಲಿ ತೊಡಗಿದ.

ಅಲ್ಲೊಂದು ಜಾತ್ರೆ ಪೂಜೆ ನಡೆಯುತ್ತದೆ. ದಾನ ವ್ಯವಹಾರ ಆಗುವಂತೆ ಮಾಡುವಲ್ಲಿ ತಾನು ತೊಡಗಿಸಿಕೊಂಡ. ಇಂತದ್ದೇ ಪರಿಸ್ಥಿತಿ ಈಗಲೂ ಕಾಣಬಹುದು. ವರ್ಷ ಕಳೆದ ನಂತರ ಕತ್ತೆ ಸಮಾಧಿಯ ಜಾಗ ಹುಡುಕಿ ಸತ್ಯ ಅರಿತಿದ್ದ ಸಿದ್ದಯ್ಯ ಅಲ್ಲಿಗೆ ಬಂದ. ತಳವಾರ್ರು ಅವನನ್ನು ಕತ್ತು ಹಿಡಿದು ಆಚೆ ತಳ್ಳಿ ದೇವಾಲಯದ ಹತ್ತಿರವು ಬಿಟ್ಟು ಕೊಳ್ಳಲಿಲ್ಲ.

ಇದು ಈಗಲೂ ಸತ್ಯ ಬೇಕಾದರೆ ನೋಡಿ ದೇವಸ್ಥಾನದಲ್ಲಿ ಇರುವ ಸತ್ಯವನ್ನು ವಿವಿಧ ಸಂಶೋಧಕರು, ಲೇಖಕರು ಮೌಢ್ಯಭಂಜಕರು ಅದನ್ನು ಬಯಲಿಗೆಳೆಯುವರು ಎಂಬ ಭಯ ಆ ವರ್ಗಕ್ಕಿದೆ. ಅದಕ್ಕೆ ಆಳುವ ಜನರ ಸಹಕಾರವು ಸಿಗುತ್ತದೆ. ಕತ್ತೆ ಸಮಾಧಿ ಎಲ್ಲಿಯಾದರೂ ಪವಾಡ ಸೃಷ್ಟಿಸಲು ಸಾಧ್ಯವ? ಇಂತಹ ಅದೆಷ್ಟೋ ನಿರ್ವೀರ್ಯ ಕತ್ತೆಯ ಸಮಾಧಿಗಳು ಓಣಿ ಓಣಿಗಳಲ್ಲಿ ರಸ್ತೆ ರಸ್ತೆಯಲ್ಲಿ ಸಿಗುತ್ತವೆ.

ಅದೆಲ್ಲವೂ ದೇವಾಲಯವೆಂಬ ಮೌಢ್ಯದ ಆಸ್ಥಾನಗಳೆಂದು ತಿಳಿದಿರಲಿ. ಇನ್ನೂ ಕರ್ನಾಟಕದ ವಾಗ್ಮಿಗಳಾದ ಗುರುರಾಜ ಕರ್ಜಗಿಯವರು ಕರುಣಾಳು ಬಾ ಬೆಳಕೆ 2ನೇ ಸಂಪುಟದಲ್ಲಿ ಉಲ್ಲೇಖಿಸಿರುವಂತೆ ‘ಸಮಾಧಿಯ ಮಹಿಮೆ’ ಎಂಬ ಲೇಖನ ಸಹ ಇದೇ ಕತೆಯ ತಿರುಳು ಹೊಂದಿದೆ. ಗುರುಕುಲದಲ್ಲಿ ಲೋಕ ಜ್ಞಾನ ವ್ಯವಹಾರ ಜ್ಞಾನವಿಲ್ಲದ ದಡ್ಡ ವಿದ್ಯಾರ್ಥಿಯೊಬ್ಬನಿಗೆ ಬರಗಾಲ ಬಂದಾಗ ಗುರುಗಳು ಆತನಿಗೆ ಒಂದು ಕತ್ತೆಯನ್ನು ನೀಡಿ ನಿನ್ನ ಜೀವನ ನೀನು ನೋಡಿಕೊ ಎಂದು ಕಳುಹಿಸಿ ಕೊಡುವರು.

ಮುಂದೊಂದು ದಿನ ಆ ಕತ್ತೆ ಸತ್ತಾಗ ಅದನ್ನು ಮಣ್ಣು ಮಾಡಿ ಸಮಾಧಿಗೆ ತನಗೆ ತಿಳಿದಂತೆ ದಿನನಿತ್ಯ ಪೂಜೆ ಸಲ್ಲಿಸುತ್ತಿರುತ್ತಾನೆ. ಈ ದಡ್ಡ ವಿದ್ಯಾರ್ಥಿಯ ಕತ್ತೆ ಸಮಾಧಿ ಮುಂದೆ ಅದೊಂದು ಜಾಗೃತ ಸ್ಥಾನವೆಂಬಂತೆ ಪ್ರಚಲಿತಗೊಂಡು ಹರಕೆ ಹೊತ್ತು ಜನ ಬಂದರು. ಈತನ ಆದಾಯ ಹೆಚ್ಚಿತು. ಸಮಾಧಿಗೊಂದು ದೇವಾಲಯ ಶಿಷ್ಯನಿಗೆ ಒಂದು ಕೊಠಡಿ ಆಯಿತು.

ಶಿಷ್ಯನ ಗುರುಗಳು ಭೇಟಿಯಾಗಿ ಅದು ಯಾವ ಮಹಾತ್ಮನ ಕಂಡು ನಿನ್ನ ಜೀವನ ಉದ್ದರಿಸಿಕೊಂಡೆ ಎಂದು ಪ್ರಶ್ನಿಸಿದಾಗ ಶಿಷ್ಯ ನೀವು ಕೊಟ್ಟ ಕತ್ತೆಯೇ ನನ್ನ ಪಾಲಿನ ಮಹಾತ್ಮ: ಅದರ ಸಮಾಧಿಯೇ ಈ ದೇವಾಲಯ. ಅದ ನಂಬಿದ ಮೂರ್ಖ ಮಂದಿಗಳ ಭಕ್ತಿಯೇ ಇಂದಿನ ನನ್ನ ಆದಾಯ ಎಂದು ಹೇಳಿ ಬೆರಗಾಗಿಸಿದ್ದ. ಒಟ್ಟಾರೆ ಈ ಮೇಲಿನ ಎರಡೂ ಕತೆಗಳು ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡ ವರ್ಗವೊಂದು ಅದರ ಹೆಸರಿನಲ್ಲಿ ವ್ಯವಹಾರಕ್ಕಿಳಿದು ಪೂಜೆ ಪುರಸ್ಕಾರ ಜಾತ್ರೆ ಹೋಮ ಹವನ ಅರ್ಚನೆ ದಕ್ಷಿಣೆ ಅಂಗಡಿ ಇತರೆ ಎಲ್ಲರಿಂದಲೂ ಲಾಭಗಳನ್ನು ಪಡೆಯುತ್ತ ಬಂದರು.

ತಮ್ಮ ಬುದ್ದಿ ಸಾಮರ್ಥ್ಯ ಮರೆತು ಸತ್ಯವನ್ನರಿಯದ ಗೋಜಿಗೆ, ಸತ್ಯ ಮಾರ್ಗಕ್ಕೆ ಹೋಗದೇ ತಮ್ಮನ್ನು ತಾವೇ ಶೋಷಣೆಗೆ ಒಡ್ಡಿ ಬಹುಜನರು ಪ್ರಜ್ಞಾಹೀನ ಸ್ಥಿತಿಯ ತಲುಪಿದರು. ಮೌಢ್ಯಕ್ಕೆ ಬಲಿಯಾದರು. ಇಂತಹ ವರ್ಣ ರಂಜಿತ ಕತೆಗಳನ್ನು ಈಗಲೂ ಹಲವಾರು ದೇವರು ನಂಬಿ ನಿಮಗೆ ಒಳ್ಳೆಯದಾಗುತ್ತೆ, ನಾನು ಹೇಳೊದು ಕೇಳಿ: ಹೇಳಿದಂತೆ ಮಾಡಿ ನಿಮ್ಮ ಭವಿಷ್ಯ ಸರಿ ಹೋಗುತ್ತೆ ಎಂದು ಬೊಬ್ಬೆ ಇಡುವವರೇ ಹೆಚ್ಚು. ಇಂತಹವರ ಮದ್ಯದಲ್ಲಿ ಸತ್ಯ ನುಡಿಯುವ ಬಹುಜನರಿಗೆ ವೈಚಾರಿಕತೆ ಬಿತ್ತುವ ಸತ್ಯ ಮಾರ್ಗಕ್ಕೆ ಮಾರ್ಗದರ್ಶನ ನೀಡುವ ಶ್ರೀನಿಜಗುಣಾನಂದ ಸ್ವಾಮಿಗಳೇ ನಮ್ಮೆಲ್ಲರಿಗೂ ಆದರ್ಶ.

ನಿಜಗುಣ ಸ್ವಾಮಿಗಳು ವಿವಿಧ ವೇದಿಕೆಯಲ್ಲಿ ಈ ಮೇಲಿನ ಕತೆಯನ್ನು ಉದಾಹರಿಸಿ ಜನರನ್ನು ಮೌಢ್ಯದಿಂದ ಬಿಡುಗಡೆಗೊಳಿಸಲು ಪ್ರಯತ್ನಿಸಿದ್ದಾರೆ. ಜನರಿಗೆ ತಿಳಿ ಹೇಳಿ ಜ್ಞಾನ ಹಂಚುತ್ತಿದ್ದಾರೆ. ನಮಗೆ ಆದರ್ಶವಾಗಬೇಕಾದವರು ನಿಜಗುಣ ಸ್ವಾಮೀಜಿಗಳೆ ಹೊರತು ಬ್ರಹ್ಮಾಂಡ ಅಂಡ ಪಿಂಡ ದಿನ ವಾರ ವರ್ಷ ಭವಿಷ್ಯ ನುಡಿವ, ಸ್ತ್ರೀವಶ, ಧನಪ್ರಾಪ್ತಿ ಅತ್ತೆ ಸೊಸೆ ಕಿತ್ತಾಟ ಕೋರ್ಟ್ ಕೇಸ್ ಈಡೇರಿಸಿ ಕೊಡುವೆನೆಂಬ ಸಾಧು ಗುರೂಜಿಗಳಲ್ಲ. ನಿಮ್ಮನ್ನು ಮೌಢ್ಯದಿಂದ ಬಿಡುಗಡೆಗೊಳಿಸಿ ಸನ್ಮಾರ್ಗದಲ್ಲಿ ಕೊಂಡೊಯ್ಯುವವರ ಬಳಿ ಸಾಗಿ. ಮೌಢ್ಯದ ಬಾವಿಗೆ ಹಾಕುವವರೆಡೆಯಲ್ಲ. ಈ ಕತ್ತೆ ಕಥೆ ನಿಮಗೆ ಸತ್ಯವನ್ನು ತಿಳಿಯಲು ಸಾಧ್ಯವಾಯಿತು ಎಂದು ಭಾವಿಸಿ ಕುವೆಂಪುರವರ ಈ ಸಾಲು

ಸುಳ್ಳಿನ ಮಾಲೆಯ ಕೊರಳಿಗೆ ಸೂಡಿ
ಕಳ್ಳನೊಬ್ಬನನ್ನು ಗುರುವನು ಮಾಡಿ
ಬಡವರ ಹಣವನು ಕಾಣಿಕೆ ನೀಡಿ
ಧರ್ಮವ ಮೆರೆದರು ನೋಡಯ್ಯ

ಪವಾಡ – ಮೂಢನಂಬಿಕೆಗಳು, ದುರ್ಬಲತೆ ಮತ್ತು ಮೃತ್ಯುವಿನ ಸಂಕೇತಗಳು ಅವುಗಳ ಬಗ್ಗೆ ಎಚ್ಚರಿಕೆಯಿಂದಿರಿ”

ಸ್ವಾಮಿ ವಿವೇಕಾನಂದರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

Published

on

ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ ಸಹ ಲಸಿಕೆಯಿಂದ ವಂಚಿತವಾಗದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಸೂಚಿಸಿದರು.

ಅವರು ಭಾನುವಾರ ಪಾಷನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಬ್ದುಲ್ ರೆಹಮಾನ್ ಎಂಬ 4 ತಿಂಗಳ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ಸೇರಿದಂತೆ ಎಲ್ಲಾ ಭಾಗಗಳ ಅರ್ಹ ಮಕ್ಕಳಿಗೂ ಲಸಿಕೆ ತಲುಪಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ ಎಸ್. ಅವರು ಮಾತನಾಡಿ, ಜಿಲ್ಲೆಯನ್ನು ಸಂಪೂರ್ಣ ಪೋಲಿಯೋ ಮುಕ್ತವಾಗಿಸಲು ಆರೋಗ್ಯ ಇಲಾಖೆ ಪಣತೊಟ್ಟಿದೆ. ಜಿಲ್ಲೆಯಲ್ಲಿ ಒಟ್ಟು 18,28,153 ಜನಸಂಖ್ಯೆಯಿದ್ದು, 3,79,338 ಮನೆಗಳಿವೆ. ಇವುಗಳಲ್ಲಿ ಗುರುತಿಸಲಾಗಿರುವ 5 ವರ್ಷದ ಒಳಗಿನ 1,37,339 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ವಿವರ ನೀಡಿದರು.

ಇದಕ್ಕಾಗಿ ಜಿಲ್ಲಾದ್ಯಂತ 1,090 ಲಸಿಕಾ ಬೂತ್ಗಳನ್ನು ಸ್ಥಾಪಿಸಲಾಗಿದೆ. ಬೂತ್ಗಳಲ್ಲಿ ಲಸಿಕೆ ಹಾಕುವುದರ ಜೊತೆಗೆ, ಜೂನ್ 29 ರಿಂದ ಜುಲೈ 1 ರವರೆಗೆ ಒಟ್ಟು 3 ದಿನಗಳ ಕಾಲ ಜಿಲ್ಲೆಯ ಎಲ್ಲಾ ಮನೆ-ಮನೆಗೆ ತೆರಳಿ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ಈ ಕಾರ್ಯಕ್ರಮವನ್ನು 2 ಹಂತಗಳಲ್ಲಿ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಲಸಿಕಾ ಅಭಿಯಾನದ ಯಶಸ್ಸಿಗಾಗಿ ಮನೆ-ಮನೆ ಭೇಟಿ ತಂಡ, ಟ್ರಾನ್ಸಿಸ್ಟ್ (ಸಾರಿಗೆ ನಿಲ್ದಾಣಗಳ ತಂಡ) ಮತ್ತು ಸಂಚಾರಿ (ಮೊಬೈಲ್) ತಂಡ ಹೀಗೆ ಮೂರು ಪ್ರಮುಖ ವಿಭಾಗಗಳ ತಂಡಗಳನ್ನು ರಚಿಸಲಾಗಿದೆ. ನಿಯೋಜಿತ ಸಿಬ್ಬಂದಿ ಹಾಗೂ ಮೇಲ್ವಿಚಾರಕರು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದು, ವಲಸೆ ಕಾರ್ಮಿಕರ ಮಕ್ಕಳು, ಹರವಿಗಿ ಹೋಗುವ ಕುಟುಂಬಗಳ ಮಕ್ಕಳು ಸೇರಿದಂತೆ ಒಂದೂ ಮಗುವು ಲಸಿಕೆಯಿಂದ ವಂಚಿತವಾಗದಂತೆ ಕಟ್ಟುನಿಟ್ಟಿನ ನಿಗಾ ಇಡಲಾಗುವುದು ಎಂದು ತಿಳಿಸಿದರು.

ಡಾ. ರೇಣುಕಾರಾಧ್ಯ ಆರ್.ಸಿ.ಹೆಚ್.ಒ ಅವರು ಮಾತನಾಡಿ, ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿಸಲಾಗಿದೆ ಆದರೆ ಪ್ರಸ್ತುತ ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ 5 ಪೋಲಿಯೋ ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿನ ನಾಗರಿಕರು ಭಾರತಕ್ಕೆ ಬಂದು ಹೋಗುವ ಸಾಧ್ಯತೆ ಇರುವುದರಿಂದ, ವೈರಸ್ ಮತ್ತೆ ಇಲ್ಲಿ ಹರಡಬಾರದು ಎಂಬ ಮುಂದಾಲೋಚನೆಯಿಂದ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಈ ಪಲ್ಸ್ ಪೋಲಿಯೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪಲ್ಸ್ ಪೋಲಿಯೋ ನೊಡೆಲ್ ಅಧಿಕಾರಿ ಡಾ.ಚಂದ್ರಶೇಖರ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending