ದಿನದ ಸುದ್ದಿ
ಬ್ಯಾಂಕುಗಳಲ್ಲಿ ಕನ್ನಡ ಬಳಕೆಗೆ ಆದ್ಯತೆ ನೀಡಿ ; ತ್ರಿಭಾಷಾ ಸೂತ್ರ ಪಾಲನೆ ಕಡ್ಡಾಯ : ಜಿಲ್ಲಾಧಿಕಾರಿ ನಿತೇಶ ಕೆ ಪಾಟೀಲ
ಸುದ್ದಿದಿನ,ಧಾರವಾಡ : ಜಿಲ್ಲೆಯಾದ್ಯಂತ ಬಹುತೇಕ ಬ್ಯಾಂಕುಗಳಲ್ಲಿ ನೆರೆಯ ರಾಜ್ಯಗಳ ಅಧಿಕಾರಿ, ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರೆಲ್ಲರೂ ಕನ್ನಡವನ್ನು ಕಲಿತುಕೊಂಡು ಸ್ಥಳೀಯ ಜನರೊಂದಿಗೆ ಇಲ್ಲಿನ ಭಾಷೆಯಲ್ಲಿಯೇ ವ್ಯವಹರಿಸಿ, ಗ್ರಾಮೀಣ ಜನರನ್ನೂ ಬ್ಯಾಂಕಿಂಗ್ ಕ್ಷೇತ್ರಕ್ಕೆ ಒಳಪಡಿಸಬೇಕು.
ಇಲ್ಲದಿದ್ದರೆ ಭಾಷಾ ಸಮಸ್ಯೆಯಿಂದ ಗ್ರಾಮೀಣ ಜನರು ಬ್ಯಾಂಕಿಂಗ್ ವಲಯದಿಂದ ಹೊರಗುಳಿಯವ ಸಂಭವಗಳಿರುತ್ತವೆ. ಡಿ.ಡಿ.,ಚಲನ್ ಸೇರಿದಂತೆ ಬ್ಯಾಂಕಿನ ಎಲ್ಲ ಅರ್ಜಿ ನಮೂನೆಗಳನ್ನು ತ್ರಿಭಾಷಾ ಸೂತ್ರದಲ್ಲಿ ಪ್ರಕಟಿಸಬೇಕು. ನಾಮಫಲಕಗಳಲ್ಲಿ ಅಗ್ರಸ್ಥಾನದಲ್ಲಿ ಕನ್ನಡ ಬಳಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಕೆ ಪಾಟೀಲ ಹೇಳಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ಜಿಲ್ಲಾ ಮಟ್ಟದ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಜಿಲ್ಲೆಯ ವಾಣಿಜ್ಯ ಮತ್ತು ಗ್ರಾಮೀಣ ಬ್ಯಾಂಕುಗಳಲ್ಲಿ ಇತ್ತೀಚೆಗೆ ನೆರೆಯ ರಾಜ್ಯಗಳ ಅಭ್ಯರ್ಥಿಗಳು ಅಧಿಕಾರಿಗಳು ಹಾಗೂ ಸಿಬ್ಬಂದಿಗಳಾಗಿ ನೇಮಕಗೊಂಡಿದ್ದಾರೆ.
ಅವರು ನಿತ್ಯದ ಬ್ಯಾಂಕ್ ವ್ಯವಹಾರಗಳಲ್ಲಿ ಕನ್ನಡ ಬಳಸದಿರುವ ಬಗ್ಗೆ ಗ್ರಾಮೀಣ ಪ್ರದೇಶಗಳ ಜನರಿಂದ ದೂರುಗಳು ಬರುತ್ತಿವೆ. ಸಿಬ್ಬಂದಿಯ ಈ ವರ್ತನೆಗಳಿಂದ ಗ್ರಾಮೀಣ ಜನರು ಬ್ಯಾಂಕುಗಳಿಂದ ದೂರ ಸರಿದು ಖಾಸಗಿ ಲೇವಾದೇವಿಗಾರರ ಬಳಿ ಸಾಲ ಪಡೆಯುವ ಸಾಧ್ಯತೆಗಳಿರುತ್ತವೆ. ನಂತರ ಅದರಿಂದ ವ್ಯತಿರಿಕ್ತ ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿರುತ್ತದೆ. ಬ್ಯಾಂಕುಗಳು ಎಲ್ಲರನ್ನೂ ಒಳಗೊಳ್ಳುವಂತೆ ತಮ್ಮ ವ್ಯವಹಾರಗಳನ್ನು ನಿರ್ವಹಿಸಬೇಕು.
ತ್ರಿಭಾಷಾ ಸೂತ್ರದ ಪಾಲನೆ, ಕನ್ನಡದ ಬಳಕೆಯನ್ನು ಬ್ಯಾಂಕುಗಳಲ್ಲಿ ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು. ಈ ನಿಯಮಗಳನ್ನು ಪಾಲಿಸದವರ ವಿರುದ್ಧ ಕ್ರಮ ಕೈಗೊಂಡು ಅದರ ಕುರಿತು ಎಲ್ಲ ಶಾಖೆಗಳಿಗೆ ಮಾಹಿತಿ ನೀಡಬೇಕು. ಹಾಗಾದಾಗ ಮಾತ್ರ ಜಾಗೃತಿ ಮೂಡುತ್ತದೆ.
ಗ್ರಾಮೀಣ ಜನರಿಗೆ ಆರ್ಥಿಕ ಸಾಕ್ಷರತೆ ಮುಖ್ಯವಾಗಿದೆ. ಅನಕ್ಷರಸ್ಥರು ಮತ್ತು ಗ್ರಾಮೀಣ ಜನರನ್ನು ಬ್ಯಾಂಕಿಗ್ ಕ್ಷೇತ್ರ ಒಳಗೊಳ್ಳದೆ ಹೋದರೆ ಒಟ್ಟು ಆರ್ಥಿಕ ರಂಗದ ಮೇಲೆ ವ್ಯತಿರಿಕ್ತ ಪರಿಣಾಮಗಳಾಗುತ್ತವೆ ಎಂದು ಜಿಲ್ಲಾಧಿಕಾರಿಗಳು ಕಾಳಜಿ ವ್ಯಕ್ತಪಡಿಸಿದರು.
ಬೆಳೆ ಹಾಗೂ ಮನೆ ಪರಿಹಾರದ ಹಣ ಸಾಲಕ್ಕೆ ಹೊಂದಾಣಿಕೆ ಬೇಡ
ಬರ,ಪ್ರವಾಹದ ಸಂದರ್ಭದಲ್ಲಿ ಬೆಳೆಹಾನಿ, ಮನೆಹಾನಿಗಳಿಂದ ಸಂಕಷ್ಟಕ್ಕೀಡಾದ ಜನರಿಗೆ ಸರ್ಕಾರ ನೀಡುವ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಂಬಂಧಿಸಿದ ರೈತರ ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಳ್ಳಬಾರದು.
ಮಹತ್ಮಾಗಾಂಧಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ನೀಡುವ ಗೌರವ ಸಂಭಾವನೆಯ ಹಣವನ್ನು ಕೂಡ ಕೆಲವು ಬ್ಯಾಂಕುಗಳು ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳುತ್ತಿವೆ ಎಂಬ ದೂರುಗಳಿವೆ. ಬ್ಯಾಂಕುಗಳ ಇಂತಹ ವರ್ತನೆಗಳಿಂದ ಜನರು ನರೇಗಾ ಉದ್ಯೋಗದಿಂದಲೂ ದೂರ ಸರಿದು ಖಾಸಗಿ ಭೂ ಮಾಲೀಕರ ಬಳಿ ದುಡಿಯಲು ತೆರಳುವ ಸಾಧ್ಯತೆಗಳು ಹೆಚ್ಚಾಗುತ್ತವೆ. ಜಿಲ್ಲಾಡಳಿತದ ಗಮನಕ್ಕೆ ಬಂದ ಕೆಲವೇ ಕೆಲವು ಪ್ರಕರಣಗಳನ್ನು ಮಾತ್ರ ನಾವು ಖುದ್ದಾಗಿ ಪರಿಹರಿಸಬಹುದು .
ಯಾರ ಗಮನಕ್ಕೂ ಬಾರದೇ ಬಹಳಷ್ಟು ಸಂದರ್ಭದಲ್ಲಿ ಗ್ರಾಮೀಣ ಜನರು ಬ್ಯಾಂಕುಗಳಿಂದ ದೂರ ಸರಿದು ಬಿಡುತ್ತಾರೆ. ಪರಿಹಾರದ ಹಣವನ್ನು ಸಾಲಕ್ಕೆ ಹೊಂದಾಣಿಕೆ ಮಾಡಿಕೊಂಡವರ ವಿರುದ್ಧ ಯಾವ ಕ್ರಮಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಮುಂದಿನ ಸಭೆಗೆ ಬರುವಾಗ ತರಬೇಕು. ಇದಲ್ಲದೇ ಬಹಳಷ್ಟು ಬ್ಯಾಂಕುಗಳು ಅರ್ಹರಿಗೆ ಶೈಕ್ಷಣಿಕ ಸಾಲ ಕೊಡುತ್ತಿಲ್ಲ ಎಂಬ ಅಹವಾಲುಗಳು ಬರುತ್ತಿವೆ. ಸ್ವಸಹಾಯ ಸಂಘಗಳಿಗೆ ಖಾತೆ ತೆರೆಯಲು ಅನಗತ್ಯ ತೊಂದರೆ ನೀಡಬಾರದು.
ಕನಿಷ್ಟ ದಾಖಲೆಗಳನ್ನು ಪಡೆದು ಬೇಸಿಕ್ ಉಳಿತಾಯ ಖಾತೆ (BSB) ಅಥವಾ ಉಳಿತಾಯ ಖಾತೆ (SB) ತೆರೆದು ಕೊಡಿ ಪರ್ವನೆಂಟ್ ಅಕೌಂಟ ನಂಬರ್ (PAN) ಎಲ್ಲರಿಗೂ ಕಡ್ಡಾಯಗೊಳಿಸಬೇಡಿ ಎಂದು ಸೂಚಿಸಿದರು.
ಬ್ಯಾಂಕುಗಳಲ್ಲಿ ಸ್ಥಳೀಯ ಭಾಷೆ ಬಳಸದೇ ಇರುವವರು ಮತ್ತು ಸಹಾಯ ಡೆಸ್ಕ್ ಮೂಲಕ ಅನಕ್ಷರಸ್ಥ ಗ್ರಾಹಕರಿಗೆ ನೆರವಾಗದ ಶಾಖೆಗಳು ಹಾಗೂ ಅಧಿಕಾರಿ, ಸಿಬ್ಬಂಧಿ, ವಿವರಗಳನ್ನು ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಬಹಿರಂಗ ಪಡಿಸುವ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಮಾತನಾಡಿ, ಸರ್ಕಾರದ ಸೇವೆಯಲ್ಲಿರುವ ನಮ್ಮೆಲ್ಲರ ಮೇಲೆ ಸರ್ಕಾರದ ಯೋಜನೆಗಳನ್ನು ಯಶಸ್ವಿಗೊಳಿಸುವ ಹೊಣೆ ಇರುತ್ತದೆ. ಉದ್ಯೋಗಾವಕಾಶಗಳಿಗೆ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಬರುವುದು ಅನಿವಾರ್ಯ.
ವಿಶೇಷವಾಗಿ ಗ್ರಾಮೀಣ ಜನರ ಸಂಪರ್ಕಕ್ಕೆ ಬರುವಂತಹ ಸೇವೆಗಳಲ್ಲಿರುವ ಬ್ಯಾಂಕಿಂಗ್ ವಲಯದ ಅಧಿಕಾರಿ, ಸಿಬ್ಬಂದಿ, ಕನ್ನಡ ಬಳಸುವುದು ಮತ್ತು ಸ್ಥಳೀಯರೊಂದಿಗೆ ಅವರ ಮಾತೃ ಭಾಷೆಯಲ್ಲಿಯೇ ವ್ಯವಹರಿಸುವುದು ಕಡ್ಡಾಯ. ಬ್ಯಾಂಕಿಂಗ್ ನೇಮಕಾತಿ ನಿಯಮಗಳಲ್ಲಿ ಕನ್ನಡ ವ್ಯಾಸಂಗ ಕಡ್ಡಾಯವಾಗಿರದಿದ್ದರೂ ಸ್ಥಳೀಯ ಭಾಷೆ ಗೊತ್ತಿರಬೇಕು ಎಂಬ ಸರಳ ನಿಯಮವಿದೆ.
ಸೇವೆಯನ್ನು ಸಮರ್ಪಕವಾಗಿ ನೀಡಲು ಸ್ಥಳೀಯ ಭಾಷೆಯಲ್ಲಿ ವ್ಯವಹರಿಸುವುದು ಅತ್ಯಗತ್ಯ ಆರ್ಥಿಕ ಸಾಕ್ಷರತಾ ಶಿಬಿರಗಳನ್ನು ಎಲ್ಲ ಬ್ಯಾಂಕುಗಳು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಬೆಳೆ, ಮನೆ ಹಾನಿಗೊಳಗಾದ ವ್ಯಕ್ತಿಗಳಿಗೆ ನೀಡಿದ ಪರಿಹಾರ ಹಣವನ್ನು ಅವರ ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಬಾರದು.
ಬ್ಯಾಂಕುಗಳ ಮೂಲಕ ಅನೇಕ ಸರ್ಕಾರಿ ಸೌಲಭ್ಯಗಳು ಜನರಿಗೆ ದೊರೆಯುತ್ತಿವೆ ಅವುಗಳ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಬೇಕು. ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಗಳ ಮೂಲಕ ಸಾಮಾನ್ಯ ಗ್ರಾಹಕರಿಗೆ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಆರ್. ಅಣ್ಣಯ್ಯ ಮಾತನಾಡಿ ಬ್ಯಾಂಕುಗಳು ತಮ್ಮ ದಿನನಿತ್ಯದ ಕಾರ್ಯಗಳಲ್ಲಿ ಕನ್ನಡದ ಬಳಕೆಗೆ ಮೊದಲ ಆದ್ಯತೆ ನೀಡಬೇಕು. ಕನ್ನಡ ಕಲಿಯುವ ಅವಕಾಶ ಕಲ್ಪಿಸಬೇಕು. ಸ್ಥಳೀಯ ಎಲ್ಲಾ ಶಾಖೆಗಳಲ್ಲಿ ಸಹಾಯ ಡೆಸ್ಕ್ ತೆರೆದು ಗ್ರಾಹಕರಿಗೆ ಅಗತ್ಯ ಮಾರ್ಗದರ್ಶನ ನೆರವು ನೀಡಬೇಕು ಎಂದರು. ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ನೇರವುಬ ನೀಡುವ ಪ್ರಧಾನ ಮಂತ್ರಿ ಸ್ವ ನಿಧಿ ಯೋಜನೆ ಅನುಷ್ಠಾನದಲ್ಲಿ ಜಿಲ್ಲೇಯು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿರುವುದು ಸಂತಸ ತಂದಿದೆ ಎಂದು ತಿಳಿಸಿದರು.
ಬ್ಯಾಂಕ್ ಆಫ್ ಬರೋಡಾದ ಪ್ರಾದೇಶಿಕ ವ್ಯವಸ್ಥಾಪಕ ಮತಿ ಚಕ್ರವರ್ತಿ, ನಬಾರ್ಡ ಉಪ ಪ್ರಧಾನ ವ್ಯವಸ್ಥಾಪಕ ಮಯೂರ ಕಾಂಬಳೆ ಮತ್ತಿತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

