Connect with us

ಅಂತರಂಗ

ಧರ್ಮ ಮರ್ಮ – 07 : ಕ್ರಿಸ್ತನೆಂಬ ಮೀನು ಬಸವಣ್ಣನೆಂಬ ಎತ್ತು

Published

on

  • ಯೋಗೇಶ್ ಮಾಸ್ಟರ್

ಇಕ್ತ್ಯುಸ್ ಎಂದರೆ ಪ್ರಾಚೀನ ಗ್ರೀಕ್ ಪದ. ಅದರ ಅರ್ಥ ಮೀನು. ಎರಡು ವಕ್ರರೇಖೆಗಳ ತುಂಡುಗಳು ಒಂದನ್ನೊಂದು ಹಾದು (ಇಂಗ್ಲೀಷಿನ ಎಕ್ಸ್ ಅಕ್ಷರದಂತೆ) ಎರಡರ ತುದಿಗಳು ಮಾತ್ರ ಒಂದು ಬಿಂದುವಲ್ಲಿ ಸೇರಿದರೆ ಅದು ಮೀನಿನ ಆಕೃತಿಯಲ್ಲಿ ಕಾಣುತ್ತದೆ. ಇದು ಹಿಂದೊಮ್ಮೆ ಕ್ರೈಸ್ತರ ರಹಸ್ಯ ಚಿಹ್ನೆಯಾಗಿತ್ತು.

ಕ್ರಿಸ್ತನ ಜೀವನದಲ್ಲಿ ಮತ್ತು ಬೋಧನೆಗಳಲ್ಲಿ ಮೀನು ಲೌಕಿಕವಾಗಿ, ತಾತ್ವಿಕವಾಗಿ ಮತ್ತು ಸಾಂಕೇತಿಕವಾಗಿ ತನ್ನ ಕುರುಹುಗಳನ್ನು ತೋರಿಸುತ್ತದೆ. ಕ್ರಿಸ್ತನೇ ಮೀನು ಹಿಡಿಯುತ್ತಾನೆ, ಮೀನು ಹಿಡಿಯುವವರ ಜೊತೆಗಾರನಾಗಿರುತ್ತಾರೆ, ಹೆಚ್ಚು ಮೀನುಗಳನ್ನು ಹಿಡಿಯುವ ಎಡೆ ತೋರುತ್ತಾನೆ, ಅಷ್ಟೇಕೆ ಯೇಸುವನ್ನು ಮಾನವರ ಕ್ರಿಸ್ತನೆಂದೂ (ಮಾರ್ಕ್ 1:17) ಕರೆಯುತ್ತಾರೆ.

ಮ್ಯಾಥ್ಯೂ, ಮಾರ್ಕ್, ಲೂಕ್, ಜಾನ್; ಈ ಎಲ್ಲರ ಬರಹಗಳಲ್ಲೂ ಸಾವಿರಾರು ಜನರಿಗೆ ಮೀನನ್ನು ಮತ್ತು ರೊಟ್ಟಿಯನ್ನು ಪವಾಡ ಸದೃಶವಾಗಿ ಉಣಬಡಿಸಿದ ಪ್ರಸಂಗವಿದೆ. ಅದೆಲ್ಲದಕ್ಕಿಂತ ಮುಖ್ಯವಾಗಿ ಗ್ರೀಕ್ ವರ್ಣಮಾಲೆಯ ಅನುಸಾರವಾಗಿ ಇಕ್ತ್ಯುಸ್ ಎನ್ನುವ ಪದದಲ್ಲಿ ಒಂದೊಂದು ಅಕ್ಷರಗಳು ‘ಯೇಸುವು ಅಭಿಷಕ್ತ ದೇವರ ಮಗ – ರಕ್ಷಕ’ ಎಂದು ಹೇಳುತ್ತದೆ.

ಕ್ರೈಸ್ತರ ಮತ್ತು ಶರಣರ ಕ್ರಾಂತಿಯ ದಿನಗಳು

ಯೇಸುವನ್ನು ಶಿಲುಬೆಗೆ ಏರಿಸಿ ಕೊಂದ ನಂತರದ ದಿನಗಳು ಕರ್ನಾಟಕದ ಶರಣರ ಕ್ರಾಂತಿಯ ದಿನಗಳನ್ನು ಹೋಲುತ್ತವೆ. ಯೇಸುವಿನ ಅನುಯಾಯಿಗಳು ರೋಮನ್ನರ ದಾಳಿ ಮತ್ತು ಹಿಂಸೆಯಿಂದ ತಪ್ಪಿಸಿಕೊಳ್ಳಬೇಕಾಗಿತ್ತು. ತಾವು ಯೇಸುವಿನ ಅನುಯಾಯಿಗಳು ಎಂದು ಬಹಿರಂಗವಾಗಿ ಹೇಳಿಕೊಳ್ಳಲು ಸಾಧ್ಯವಿರಲಿಲ್ಲ. ಅದೇ ರೀತಿ ಹನ್ನೆರಡನೆಯ ಶತಮಾನದಲ್ಲಿ ಬಸವಣ್ಣನವರ ಧಾರ್ಮಿಕ ಚಳವಳಿಯು ಪ್ರಬಲವಾಗುತ್ತಿತ್ತು.

ವೈದಿಕ ಮತ್ತು ಇನ್ನಿತರ ವರ್ಣಾಶ್ರಮಧರ್ಮವನ್ನು ಪ್ರತಿಪಾದಿಸುತ್ತಿದ್ದ ಸಂಪ್ರದಾಯವಾದಿಗಳು ಬಸವಣ್ಣ ಕಟ್ಟಿದ ಸಮಾಜೋಧಾರ್ಮಿಕ ಚಳವಳಿಯು ಗಟ್ಟಿಯಾಗಿ ತಳವೂರುವ ಲಕ್ಷಣಗಳನ್ನು ತೋರುತ್ತಿದ್ದ ಸಮಯದಲ್ಲಿಯೇ ಬಿಜ್ಜಳರಾಜನು ತನ್ನ ಎರಡನೆಯ ಮಗನಾದ ಸೋವೀದೇವನಿಗೆ ಪಟ್ಟ ಕಟ್ಟಿದ್ದನು.

ಹಾಗಾಗಿ ಅವನ ಇತರ ಮಕ್ಕಳಲ್ಲಿ ಮತ್ತು ಬಂಧುಗಳಲ್ಲಿ ತಿಕ್ಕಾಟ ಪ್ರಾರಂಭವಾಗಿತ್ತು. ಆಗಲೇ ಬಸವಣ್ಣನವರ ನೇತೃತ್ವದಲ್ಲಿ ಪ್ರೇಮವಿವಾಹ ಮಾತ್ರವಲ್ಲದೇ, ವರ್ಗಾಂತರವಿರುವ ಮತ್ತು ವರ್ಣಾಂತರವಾದ ವಿವಾಹವೂ ಇದಾಗಿತ್ತು. ಬಸವಣ್ಣನ ಚಳವಳಿಯನ್ನು ದಮನಿಸಲು ಯತ್ನಿಸುತ್ತಿದ್ದ ಆಸ್ಥಾನದ ಸಂಪ್ರದಾಯವಾದಿಗಳು ಆಗ ಹುಟ್ಟಿದ ರಾಜಕೀಯ ಆತಂಕವನ್ನು ಬಳಸಿಕೊಂಡರು.

ಇದರಿಂದ ಬಸವಣ್ಣ ತಮ್ಮ ಮಂತ್ರಿಪದವಿಯನ್ನು ತ್ಯಜಿಸಿ ಕಲ್ಯಾಣವನ್ನು ತೊರೆಯಬೇಕಾಯ್ತು. ಈ ಸಮಯವನ್ನು ಬಳಸಿಕೊಂಡು ವೈದಿಕರು ಮತ್ತು ವರ್ಣಾಶ್ರಮ ಸಂಪ್ರದಾಯಸ್ಥರು ವರ್ಣಾಂತರ ವಿವಾಹವಾದ ಮತ್ತು ಅದಕ್ಕೆ ಕಾರಣರಾದ ಹರಳಯ್ಯ, ಮಧುವರಸ ಮತ್ತು ಅವರ ಮಕ್ಕಳಿಗೆಲ್ಲಾ ಕಣ್ಣುಗಳನ್ನು ಕೀಳಿಸಿ ಆನೆಯ ಕಾಲಿಗೆ ಕಟ್ಟಿ ಎಳೆಸಿ ಕೊಲ್ಲುವಂತ ಶಿಕ್ಷೆ ಕೊಟ್ಟರು. ಕಂಡಕಂಡಲ್ಲಿ ಶರಣರ ಕಗ್ಗೊಲೆಗಳಾಗ ತೊಡಗಿದವು.

ಈ ಸಮಯದಲ್ಲಿ ವಚನ ಸಾಹಿತ್ಯವನ್ನು ರಕ್ಷಿಸುವ, ಶರಣರನ್ನು ರಕ್ಷಿಸುವ ಮಹತ್ತರ ಕೆಲಸದಲ್ಲಿ ಅನೇಕ ತ್ಯಾಗ ಬಲಿದಾನಗಳಾದವು. ಆಗಲೇ ಬಿಜ್ಜಳನ ಕೊಲೆಯಾಯಿತು. ರಾಜಕೀಯ ಸಂಘರ್ಷದಲ್ಲಿ ಬಲವುಳ್ಳವರ ಪರವಹಿಸುವ ಆಸ್ಥಾನಿಕರು ಕೊಲೆಗೆ ಕಾರಣ ಯಾರೇ ಆಗಿದ್ದರೂ ಅದನ್ನು ಶರಣರ ತಲೆಗೆ ಕಟ್ಟಲಾಯಿತು. ಪಾಲ್ಕುರಿಕೆ ಸೋಮನಾಥನು ರಚಿಸಿರುವ ಪುರಾಣದಲ್ಲಿ ಮಲ್ಲೆಬೊಮ್ಮ ಮತ್ತು ಜಗದೇವ ಎಂಬ ವೀರರು ಬಿಜ್ಜಳನ ಕೊಂದರೆಂದು ಹೇಳಿದರೆ, ಶಾಸನಗಳನ್ನು ಅನುಸರಿಸಿದರೆ ಸಿಗುವ ಮಾಹಿತಿಗಳಲ್ಲಿ ವ್ಯತ್ಯಾಸಗಳಿವೆ.

ಶಾಸನಗಳು ಮತ್ತು ಪುರಾಣಗಳನ್ನು ಆಧರಿಸಿಯೇ ಅಂದಿನ ಇತಿಹಾಸ ರಚಿಸಬೇಕಾಗಿರುವುದರಿಂದ ಅನೇಕ ವ್ಯತ್ಯಾಸಗಳಿವೆ. ಆದರೆ ಅಲ್ಲೊಂದು ಸಮಾಜೋಧಾರ್ಮಿಕ ಸಂಘರ್ಷ, ರಾಜಕೀಯ ಕೋಲಾಹಲಗಳು ನಡೆದು ವಚನ ಚಳವಳಿ ಮತ್ತು ಶರಣ ಸಂಸ್ಕೃತಿಗಳು ರೂಪುಗೊಂಡವು.

ಅದೆಲ್ಲಾ ಏನಾದರಾಗಲಿ ಬಸವಣ್ಣನ ಗಡಿಪಾರಿನ ನಂತರ, ಶರಣರ ತಲೆದಂಡದ ತರುವಾಯ ಮತ್ತು ಬಿಜ್ಜಳನ ಕೊಲೆಯ ಬೆನ್ನಲ್ಲೇ ಶರಣರು ಚದುರಲೇ ಬೇಕಾದ ಅನಿವಾರ್ಯ ಒದಗಿತ್ತು. ಅವರ ಕಗ್ಗೊಲೆಗಳಾಗತೊಡಗಿತ್ತು. ಬಸವಣ್ಣನ ಅನುಯಾಯಿಗಳು ಅಂದು ರೋಮನ್ನರಿಂದ ತಲೆಮರೆಸಿಕೊಳ್ಳಬೇಕಾದ ಅನಿವಾರ್ಯತೆಯುಳ್ಳ ಯೇಸುವಿನ ಅನುಯಾಯಿಗಳ ಸ್ಥಿತಿಯನ್ನೇ ಅನುಭವಿಸಿದ್ದರು.

ಅಂದಿನ ದಿನಗಳಲ್ಲಿ ರಸ್ತೆಯಲ್ಲೋ ಅಥವಾ ಇನ್ನೆಲ್ಲಾದರೂ ಅಪರಿಚಿತ ಕ್ರೈಸ್ತರು ಭೇಟಿಯಾದರೆ, ‘ತಾನು ಕ್ರಿಸ್ತನ ಅನುಯಾಯಿ, ನೀನು?’ ಎಂದು ಕೇಳಬೇಕಾದರೆ ಧೂಳಿನ ಮೇಲೋ, ಮಣ್ಣಿನ ಮೇಲೋ ಒಂದು ವಕ್ರರೇಖೆಯನ್ನು ಒಬ್ಬ ಎಳೆಯುತ್ತಿದ್ದ. ಮತ್ತೊಬ್ಬನು ಅದೇ ವಕ್ರರೇಖೆಗೆ ತನ್ನ ವಕ್ರರೇಖೆಯನ್ನು ಎಳೆದು ಮೀನಿನ ಆಕೃತಿ ಮೂಡಿಸಿದರೆ ಅವರು ಕ್ರಿಸ್ತಾನುಯಾಯಿಗಳು ಎಂದು ತಮ್ಮ ಸಂಗಾತಿತನವನ್ನು ದೃಢಪಡಿಸಿಕೊಳ್ಳುತ್ತಿದ್ದರು.

ತಾವು ಕ್ರಿಸ್ತನಲ್ಲಿ ಶ್ರದ್ಧೆ ಮತ್ತು ವಿಶ್ವಾಸವುಳ್ಳವರು ಎಂಬುದನ್ನು ಒಬ್ಬರಿಗೊಬ್ಬರು ಹೇಳಿಕೊಳ್ಳುತ್ತಿದ್ದರು. ಇದನ್ನು ತಾವು ರಹಸ್ಯ ಸಭೆ ನಡೆಸುವ ಜಾಗಗಳಿಗೂ ಗುರುತಿಗೆ ಉಪಯೋಗಿಸುತ್ತಿದ್ದರು. ಮುಂದೆ ರೋಮನ್ನರ ಚಕ್ರಾಧಿಪತ್ಯವನ್ನು ವಿರೋಧಿಸುವ ಸಂಕೇತವಾಗಿಯೂ ಕೂಡಾ ಅಲೆಕ್ಸಾಂಡ್ರಿಯಾದ ನಾಣ್ಯಗಳಲ್ಲಿ ಮೂಡಿರುವ ದಾಖಲೆಗಳಿವೆ.
ಆರಂಭದಲ್ಲಿ ಕ್ರೈಸ್ತರಾದವರೂ ಯಹೂದ್ಯರೇ. ಅವರಿಗೆ ಸಮಸ್ಯೆಗಳು ತಪ್ಪಿರಲಿಲ್ಲ. ಹನ್ನೆರಡು ಮಂದಿ ಪ್ರೇಷಿತರು ಎಂದು ಕರೆಯಿಸಿಕೊಳ್ಳುವ ಶಿಷ್ಯರು ಯೇಸುವಿನ ಬೋಧನೆಗಳನ್ನು ಧರ್ಮಸಭೆಯ ಸ್ಥಾಪನೆಯ ಉದ್ದೇಶದಿಂದ ಪ್ರಚಾರ ಮಾಡತೊಡಗಿದರು.

ಬಹಿರಂಗವಾಗಿ ಪೇತ್ರ ಮತ್ತು ಯೊವಾನ್ನರು ಪ್ರವಚನಗಳನ್ನು ಮಾಡುವಾಗಲೇ ಯಹೂದ್ಯರ ಕೆಂಗಣ್ಣಿಗೆ ಗುರಿಯಾದರು. ಪ್ರೇಷಿತರಿಗೆ ಚಾಟಿಗಳಿಂದ ಹೊಡೆಯುವುದು, ವಿವಿಧ ಬಗೆಯ ಅವಮಾನಗಳನ್ನು ಮಾಡುವುದು ಮುಂದುವರೆದಿತ್ತು. ಆದರೂ ಇವರು ಆಡುತ್ತಿರುವ ಮಾತುಗಳಲ್ಲಿ ವಿಶ್ವಾಸವನ್ನು ಕಂಡವರ ಸಂಖ್ಯೆ ಹೆಚ್ಚುತ್ತಾ ಹೋಯಿತು. ಏಳು ಜನ ಸಹಾಯಕರನ್ನು ಆಯ್ದುಕೊಂಡರು. ಅವರಲ್ಲಿ ಸ್ತೇಫನ ತುಂಬಾ ಶಕ್ತಿಭರಿತವಾಗಿ ಮಾತಾಡುತ್ತಿದ್ದ. ಅವನು ಮಾಡುತ್ತಿದ್ದ ಪ್ರವಚನ ಮತ್ತು ಬೋಧನೆ ಬಹಳ ಪರಿಣಾಮಕಾರಿಯಾಗಿದ್ದು, ನ್ಯಾಯಸಭೆಗಳು ಥರಗುಟ್ಟಿದವು.

ವಿಚಾರಣೆ ಮಾಡುವಾಗಲೂ ಸ್ತೇಫನ ಹಿಂಜರಿಯಲಿಲ್ಲ, ಧೃತಿಗೆಡಲಿಲ್ಲ. ತನ್ನ ಸತ್ಯವಿಶ್ವಾಸದ ಮಾತುಗಳನ್ನು ಆಡಿಯೇ ತೀರಿದನು. “ನೀವು ನಿಮ್ಮ ಹಳೆಯ ಸಂಪ್ರದಾಯಸ್ಥ ಪೂರ್ವಜರಂತೆಯೇ ಹಟಕ್ಕೆ ಬಿದ್ದು ಕಠಿಣ ಹೃದಯದವರಾಗಿದ್ದೀರಿ ಮತ್ತು ಹಿಂದಿನ ಎಲ್ಲಾ ಪ್ರವಾದಿಗಳನ್ನೂ ನೀವು ಹಿಂಸೆ ಕೊಟ್ಟಿರುವರೇ ಆಗಿದ್ದೀರಿ” ಎಂದು ಧೈರ್ಯವಾಗಿ ಹೇಳುತ್ತಿದ್ದನು. ನ್ಯಾಯಸಭೆಯ ಸದಸ್ಯರು ಸ್ತೇಫನಿಗೆ ಕಲ್ಲು ಹೊಡೆದು ಕೊಂದರು.

ಆಗ ಸ್ತೇಫನ, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ” ಎಂದು ಪ್ರಾರ್ಥಿಸಿದ್ದಲ್ಲದೇ, “ಪ್ರಭೂ, ಈ ಪಾಪವನ್ನು ಇವರ ಮೇಲೆ (ತನ್ನ ಮೇಲೆ ಕಲ್ಲು ಹೊಡೆಯುತ್ತಿರುವವರ ಮೇಲೆ) ಹೊರಿಸಬೇಡಿ” ಎಂದು ಪ್ರಾಣಬಿಟ್ಟನು.

ಧರ್ಮ ಎನ್ನುವುದು ಸ್ಥಾಪಕರೊಬ್ಬರ ಕ್ರಮವನ್ನು ಅನುಸರಿಸುವುದೆಂದರೆ ಹೀಗೆಯೇ. ಕ್ರಿಸ್ತನು ತನ್ನ ಸಾವಿನಲ್ಲೂ ಸೇಡನ್ನು ಹೊಂದದೇ ಕ್ಷಮಿಸಿದಂತೆ ಸ್ತೇಫನೂ ಕೂಡಾ ಹಾಗೇ ಮಾಡಿದನು. ಅವನು ಸತ್ತ ದಿನ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭವಾಯಿತು. ಪ್ರೇಷಿತರ ಹೊರತು ಇತರ ವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದುರಿಹೋದರು. ಆಗ ಮನೆಮನೆಗೂ ನುಗ್ಗಿ ಹೆಂಗಸರು ಗಂಡಸರು ಎಂದು ನೋಡದೇ ಯೇಸುವಿನ ವಿಶ್ವಾಸಿಗಳನ್ನು ಎಳೆದು ತಂದು ಸೆರೆಮನೆಗೆ ತಳ್ಳುತ್ತಿದ್ದರು.

ಅಂತಹ ಸನ್ನಿವೇಶಗಳನ್ನು ಎದುರಿಸುತ್ತಿದ್ದ ಯೇಸುವಿನ ವಿಶ್ವಾಸಿಗಳು ತಮ್ಮ ಧರ್ಮಸಭೆಗಳನ್ನು ರಹಸ್ಯವಾಗಿಯೇ ಮಾಡಬೇಕಿತ್ತು. ಆಗ ಇಕ್ತ್ಯುಸ್ ಎಂಬ ಮೀನಿನ ಗುರುತನ್ನು ತಮ್ಮ ರಹಸ್ಯ ಚಿಹ್ನೆಯಾಗಿಸಿಕೊಂಡಿದ್ದರು.

ಚದುರಿದ ಶರಣರು

ಹನ್ನೆರಡನೆಯ ಶತಮಾನದಲ್ಲಿ ಕರ್ನಾಟಕದಲ್ಲಿಯೂ ಕೂಡಾ ಆಗಿನ ಜೆರೂಸಲೇಮಿನ ಪರಿಸ್ಥಿತಿ ಉಂಟಾಗಿತ್ತು. ಚದುರಿದ ಶರಣರು ಉಳವಿ, ಶ್ರೀಶೈಲವೇ ಮೊದಲಾದ ಸ್ಥಳಗಳಿಗೆ ಹೊರಟು ಹೋದರು. ಅಲ್ಲಿ ಯೇಸು ಎದುರಿಸಿದ್ದ ಸಂಪ್ರದಾಯವಾದಿಗಳ ಆರೋಪ ಮತ್ತು ರಾಜಾಡಳಿತದ ತಲೆದಂಡವನ್ನು ಇಲ್ಲಿ ಬಸವಣ್ಣ ಎದುರಿಸಬೇಕಾಗಿತ್ತು. ಏಕೆಂದರೆ ಅಲ್ಲಿ ಯೇಸು ಸಮಾಜದ ತಳವರ್ಗದವರನ್ನು ತನ್ನ ಸಾಂಗತ್ಯದಲ್ಲಿ ಆಪ್ತಗೊಳಿಸಿಕೊಂಡಂತೆ ಇಲ್ಲಿ ಬಸವಣ್ಣನ ಮಹಾಮನೆಯಲ್ಲಿ ಮೇಲ್ವರ್ಗ ಮತ್ತು ಸವರ್ಣೀಯರು ಕೀಳಾಗಿ ಕಂಡವರೆಲ್ಲಾ ಮೌಲ್ಯವನ್ನು ಕಂಡುಕೊಂಡಿದ್ದರು. ಎರಡೂ ಕಡೆಯೂ ಸಮಾಜೋಧಾರ್ಮಿಕ ಆಂದೋಲನವು ಸಂಪ್ರದಾಯವಾದಿಗಳ, ಯಥಾಸ್ಥಿತಿವಾದಿಗಳನ್ನು ಕೆರಳಿಸಿತ್ತು. ರಾಜಕೀಯವನ್ನು ಬಳಸಿಕೊಂಡರು. ಅತ್ತ ಪ್ರೇಷಿತರು ಮತ್ತು ಯೇಸುವಿನ ವಿಶ್ವಾಸಿಗಳು ಕಿರುಕುಳ ಮತ್ತು ಹಿಂಸೆ ಅನುಭವಿಸುತ್ತಾ ಚದುರಿದರು. ಇತ್ತ ಶರಣರು ಹಾಗೂ ಇತರ ಬಸವಾನುಯಾಯಿಗಳು ಅದೇ ರೀತಿ ಚದುರಿದರು.

ಕುಂಬಾರಣ್ಣನ ಮಡದಿ ಕಡಗಾದ ಕೈಯಿಕ್ಕಿ
ಕೊಡದ ಮ್ಯಾಲೇನ ಬರೆದಾಳ ಕಲ್ಯಾಣದ
ಶರಣಬಸವಣ್ಣನ ನಿಲಿಸ್ಯಾಳ.

ಕ್ರಿಸ್ತನ ಅನುಯಾಯಿಗಳು ರೇಖೆಗಳಿಂದ ಇಕ್ತ್ಯುಸ್ ರಚಿಸಿ ತಾವು ಕ್ರಿಸ್ತನ ವಿಶ್ವಾಸಿಗಳು ಎಂದು ಗುಪ್ತಸಂದೇಶವನ್ನು ರವಾನೆ ಮಾಡುತ್ತಿದ್ದಂತೆ ಚದುರಿದ ಶರಣರು ಮತ್ತೆ ತಮ್ಮ ಶರಣ ಪರಂಪರೆಯನ್ನು ಮತ್ತು ಲಿಂಗಾಯತ ಧರ್ಮವನ್ನು ಪುನರುತ್ಥಾನ ಮಾಡುವ ಸಲುವಾಗಿ ಒಂದಾಗಲು ಶ್ರಮಿಕ ವರ್ಗದ ಕಾಯಕ ಯೋಗಿಗಳು ಹಾತೊರೆಯುತ್ತಿದ್ದರದು ಆಶ್ಚರ್ಯವೇನಿರಲಿಲ್ಲ.

ಶರಣರ ಬರವೆಮಗೆ ಪ್ರಾಣ ಜೀವಾಳವಯ್ಯ ಎನ್ನುತ್ತಿದ್ದ ಶರಣರು ಮತ್ತೊಬ್ಬ ಶರಣರನ್ನು ಗುರುತಿಸಲು ವಿವಾದಕ್ಕೆ ಒಳಗಾಗಿದ್ದ ಬಸವಣ್ಣನ ಹೆಸರೆತ್ತುವ ಬದಲು ಹೊಲದಲ್ಲಿನ ದುಡಿಮೆಯ ಬಸವನನ್ನು ಸಂಕೇತಿಸುತ್ತಿದ್ದರೂ ಆಶ್ಚರ್ಯವೇನಿಲ್ಲ. ಈ ದಿಕ್ಕಿನಲ್ಲಿ ಒಂದಷ್ಟು ಅಧ್ಯಯನ ಮತ್ತು ಆಲೋಚನೆಗಳನ್ನು ಮಾಡಬೇಕಿದೆ.

ನಾನು ಸಣ್ಣವನಿದ್ದಾಗಿನಿಂದಲೂ ಲಿಂಗಾಯತರ ರುದ್ರಭೂಮಿಯಲ್ಲಿ ಬಹುಪಾಲು ಸಮಾಧಿಗಳ ಮೇಲೆ ಲಿಂಗಕ್ಕಿಂತಲೂ ಹೆಚ್ಚಿನ ಕೋಡಿನ ಬಸವಣ್ಣನ ವಿಗ್ರಹಗಳನ್ನು ನೋಡುತ್ತಿದ್ದೆ. ಹಿರಿಯರೊಬ್ಬರಲ್ಲಿ ವಿಚಾರಿಸಿದಾಗ ಅದು ಶಿವನ ಮುಂದಿನ ನಂದಿ ಎಂದರು. ಅದು ತಾರ್ಕಿಕವಾಗಿ ಖಂಡಿತವಾಗಿ ಸಮ್ಮತವಾಗಿರಲಿಲ್ಲ. ಏಕೆಂದರೆ ಕೈಲಾಸದ ಶಿವನನ್ನೇ ಪರಿಗಣಿಸಿ, ಆತನ ವಾಹನವಾದ ನಂದಿಯೆಂದೇ ಗುರುತಿಸಿದರೂ, ಶಿವನ ಗುರುತೇ ಸುಲಭವೂ ಮತ್ತು ಉನ್ನತವೂ ಆಗಿರುವಾಗ ಬಿಡಿಸುವಲ್ಲಿ ಅಥವಾ ಕೆತ್ತುವಲ್ಲಿ ಲಿಂಗಕ್ಕಿಂತ ಕ್ಲಿಷ್ಟವಾಗಿರುವ ನಂದಿಯೇಕೇ ಎಂದು ವಿಚಾರಿಸುತ್ತಿದ್ದೆ.

ಆದರೆ, ನನಗೆ ಕ್ರಮೇಣ ತೋರತೊಡಗಿದ್ದು, ಅದು ಶಿವನ ವಾಹನ ನಂದಿಯಲ್ಲ, ಉಳುವ ಎತ್ತಿನ ಬಸವ ಎಂದು. ಹಾಗಾದರೆ, ಕೃಷಿಕರಲ್ಲದ, ಅಂತಹ ಎತ್ತಿನ ಜೊತೆಗೆ ಕಾಯಕದಲ್ಲಿ ಏನೂ ಸಂಬಂಧ ಹೊಂದಿಲ್ಲದ ನನ್ನ ಸಂಬಂಧಿಕರು ಬರೀ ಲಿಂಗಾಯತರು ಎಂಬ ಕಾರಣದಿಂದ ಬಸವನನ್ನು ಹೊಂದುವ ಕಾರಣವೇನು ಎಂಬುದು ದೀರ್ಘಕಾಲದ ಜಿಜ್ಞಾಸೆಯಾಗಿತ್ತು.

ಮುಂಜಾನೆದ್ದು ಕುಂಬಾರಣ್ಣದಂತಹ ಕೆಲವು ಜಾನಪದ ಗೀತೆಗಳಲ್ಲಿ ಕಲ್ಯಾಣದ ಶರಣಬಸವಣ್ಣನ ನಿಲ್ಲಿಸುವುದು ಅಥವಾ ಮೂಡಿಸುವುದರ ಉಲ್ಲೇಖವಿದೆ. ರಹಸ್ಯವಾಗಿ ಇಕ್ತ್ಯುಸ್ ಮೂಲಕ ಯೇಸುವನ್ನು ಸಂಕೇತಿಸುವ ಕ್ರಿಸ್ತಾನುಯಾಯಿಗಳಂತೆ ಕೋಡಿನ ಬಸವನ ಮೂಲಕ ಬಸವಣ್ಣನ ಅನುಯಾಯಿ ನಾನು ಎಂದು ಸಂಕೇತಿಸುವ ಚಿಹ್ನೆ ಇದಾಗಿದ್ದಿರಬಹುದೆಂದು ತೋರಿತು.

ಹಲವಾರು ಜಾನಪದ ಕಲಾಕೃತಿಗಳಲ್ಲಿ, ವಾದ್ಯಗಳ ಮೇಲಿನ ಕುಸುರಿ ಕೆಲಸಗಳಲ್ಲಿ, ಬಟ್ಟೆಗಳಲ್ಲಿ ವಿಭೂತಿ ಧರಿಸಿರುವ ಕೋಡಿನ ಬಸವ ಮತ್ತು ಅದರ ಡುಬ್ಬದ ಮೇಲೆ ಲಿಂಗ, ಕೆಲವೊಮ್ಮೆ ಡುಬ್ಬವನ್ನೇ ಲಿಂಗದಂತೆ ರೂಪಿಸುವ ಚಿತ್ರಗಳನ್ನು ಗುರುತಿಸಬಹುದು. ಕುಂಬಾರ, ನೇಯ್ಕಾರರಂತಹ ಶ್ರಮಿಕ ವರ್ಗಗಳು ಬಸವಣ್ಣನನ್ನು ತಮ್ಮ ಸಂಕೇತಗಳಲ್ಲಿ ಬಸವನ ರೂಪಿಸಿರಲು ಸಾಧ್ಯ.
ಆ ಸಾಂಕೇತಿಕತೆಯ ಮುಂದುವರಿಕೆಯ ಭಾಗವಾಗಿ ಅರಿವಿಲ್ಲದೆಯೇ ಇಂದಿಗೂ ಬಸವ ಜಯಂತಿಯ ದಿನ ಕೋಡಿನ ಬಸವನ ಪೂಜೆ ಮಾಡುವ ಸಂಪ್ರದಾಯವನ್ನು ಕೆಲವರು ಇಟ್ಟುಕೊಂಡಿದ್ದರೆ ಆಶ್ಚರ್ಯಪಡಬೇಕಾಗಿಲ್ಲ. ನಮ್ಮಲ್ಲಿ ವಾಸ್ತವವನ್ನು ಬಿಟ್ಟು ಸಂಕೇತಕ್ಕೇ ಅಂಟಿಕೊಳ್ಳುವುದು ಒಂದು ಹಳೆಯ ರೂಢಿ.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending