ದಿನದ ಸುದ್ದಿ
ಬೆಳಗಾವಿ | ಸಂತ್ರಸ್ತರಿಗೆ ಸಹಾಯಹಸ್ತ ಚಾಚಿದ ಮದೀನಾ ಮಸೀದಿ | ಧರ್ಮಕ್ಕಿಂತ ಮಾನವೀಯತೆ ಮೇಲು: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ
ಸುದ್ದಿದಿನ,ಬೆಳಗಾವಿ : ಮಾನವೀಯತೆಗೆ ಜಾತಿ-ಧರ್ಮ, ಭಾಷೆ ಸೇರಿದಂತೆ ಯಾವುದೇ ಅಡ್ಡಿಯಾಗಲ್ಲ ಎಂಬುದಕ್ಕೆ ಪ್ರವಾಹ ಸಂತ್ರಸ್ತರಿಗೆ ಜನರು ನೀಡಿದ ಉದಾರ ನೆರವು ಸಾಕ್ಷಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು.
ನಗರದ ಕ್ಯಾಂಪ್ ಪ್ರದೇಶದ ಮದೀನಾ ಮಸೀದಿಗೆ ಬುಧವಾರ(ಆ.14) ಭೇಟಿ ನೀಡಿದ ಅವರು ಮದೀನಾ ಮಸೀದಿ ವತಿಯಿಂದ ಪ್ರವಾಹ ಸಂತ್ರಸ್ತರಿಗಾಗಿ ಸಂಗ್ರಹಿಸಲಾಗಿರುವ ಪರಿಹಾರ ಸಾಮಗ್ರಿಗಳನ್ನು ವೀಕ್ಷಿಸಿದ ಬಳಿಕ ಮಾತನಾಡಿದರು.
ಮಸೀದಿಯ ಮೌಲಾನಾಗಳು ಸೇರಿದಂತೆ ಸಮಾಜದ ಮುಖಂಡರ ನೇತೃತ್ವದಲ್ಲಿ ಸಂತ್ರಸ್ತರ ನೆರವಿಗಾಗಿ ಮಾಡುತ್ತಿರುವ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಮಾನವೀಯತೆ ಧರ್ಮವನ್ನು ಮೀರಿದ್ದು, ಅದನ್ನು ಪ್ರವಾಹ ಸಂದರ್ಭದಲ್ಲಿ ತಾವು ಸಾಬೀತುಪಡಿಸಿದ್ದೀರಿ ಎಂದರು.
ಸರ್ಕಾರ ಎಷ್ಟೇ ಸಹಾಯ-ಸೌಲಭ್ಯಗಳನ್ನು ನೀಡಿದ್ದರೂ ಅದು ಕೆಲವೊಮ್ಮೆ ಸಾಕಾಗಲ್ಲ. ಈ ಸಂದರ್ಭದಲ್ಲಿ ಸರ್ಕಾರದ ಜತೆ ಕೈಜೋಡಿಸಿದ ತಮಗೆಲ್ಲರಿಗೂ ಧನ್ಯವಾದಗಳು.
ಬಹಳಷ್ಟು ಜನರು ಶ್ರೀಮಂತರಿದ್ದಾರೆ. ಆದರೆ ಒಳ್ಳೆಯ ಕೆಲಸ ಮಾಡುವ ಅವಕಾಶಗಳು ಕಡಿಮೆ ಇರುತ್ತವೆ. ಅಂತಹ ಸಮಯ ಈಗ ಬಂದಿದೆ. ಮುಂಬರುವ ದಿನಗಳಲ್ಲಿ ಇದೇ ರೀತಿಯ ಸಹಾಯ ಸಹಕಾರ ಇರಲಿ. ದಾನಿಗಳು ನಿಮ್ಮನ್ನು ನಂಬಿ ಇಷ್ಟೊಂದು ಸಾಮಗ್ರಿಗಳನ್ನು ನೀಡಿದ್ದಾರೆ. ಅದನ್ನು ನಾವೆಲ್ಲರೂ ಸೇರಿ ಸಂತ್ರಸ್ತರಿಗೆ ತಲುಪಿಸುವ ಕೆಲಸ ಮಾಡೋಣ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ ಮಾತನಾಡಿ, ಜಾತಿ-ಧರ್ಮದ ಗೋಡೆ ದಾಟಿ ತಾವೆಲ್ಲರೂ ಮಾನವೀಯತೆಯ ಸಹಾಯ ಹಸ್ತ ಚಾಚಿರುವುದು ದೇವರು ಮೆಚ್ಚುತ್ತಾನೆ ಎಂದರು.ಪರಿಹಾರ ಕೇಂದ್ರಗಳಲ್ಲಿ ಬಡವರು, ಶ್ರೀಮಂತರು ಇದ್ದಾರೆ ಎಲ್ಲರಿಗೂ ನೆರವಿನ ಅಗತ್ಯವಿದೆ. ಮುಂಬರುವ ದಿನಗಳಲ್ಲಿ ಸಂತ್ರಸ್ತರ ಪುನರ್ಸತಿಗೆ ಸೂಕ್ತ ಯೋಜನೆ ರೂಪಿಸಿ ತಮ್ಮ ನೆರವು ಪಡೆಯಲಾಗುವುದು ಎಂದರು.
ಪೊಲೀಸ್ ಆಯುಕ್ತರಾದ ಲೋಕೇಶ್ ಕುಮಾರ್ ಮಾತನಾಡಿ, ಮಸೀದಿ ವತಿಯಿಂದ ಒಳ್ಳೆಯ ಕೆಲಸ ಮಾಡಲಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೇ ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಇಂತಹ ಕೆಲಸಗಳು ಪೂರಕವಾಗಿವೆ ಎಂದರು.ದಲಿತ ಸಂಘಟನೆಯ ಮುಖಂಡರಾದ ಮಲ್ಲೇಶ ಚೌಗುಲೆ ಮಾತನಾಡಿ, ಸಂಕಷ್ಟದಲ್ಲಿರುವ ಜನರಿಗೆ ತಾವು ಸ್ಪಂದಿಸಿದ ರೀತಿ ಅತ್ಯುತ್ತಮವಾಗಿದೆ. ಇದನ್ನು ಮೆಚ್ಚಿ ಸ್ವತಃ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಬಂದಿದ್ದಾರೆ ಎಂದು ಹೇಳಿದರು.
ಮದೀನಾ ಮಸೀದಿ ವತಿಯಿಂದ ಮಾಡಲಾಗುತ್ತಿರುವ ಕೆಲಸದ ಬಗ್ಗೆ ಮಾಹಿತಿ ನೀಡಿದ ಉದ್ಯಮಿ ಜಹೀರ್ ಸಾಜನ್ ಹಾಗೂ ಶಬ್ಬೀರ್ ಶೇಟ್ ಅವರು ಜಿಲ್ಲಾಧಿಕಾರಿ ಭೆಟಿ ನೀಡಿ ನಮ್ಮ ಸಣ್ಣ ಸಹಾಯವನ್ನು ಗುರುತಿಸಿ, ಬೆನ್ನುತಟ್ಟಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಆರಂಭದಲ್ಲಿ ಊಟ ಮತ್ತು ಶುದ್ಧ ಕುಡಿಯುವ ನೀರಿನ ಪೂರೈಕೆ. ನಂತರದ ದಿನಗಳಲ್ಲಿ ಇತರೆ ಸಾಮಗ್ರಿಗಳನ್ನು ವಿತರಿಸಲಾಯಿತು ಎಂದು ಜಹೀರ್ ಸಾಜನ್ ತಿಳಿಸಿದರು.
ಎಲ್ಲಿಲ್ಲಿ ಯಾವ್ಯಾವ ಬೇಡಿಕೆಯಿದೆ ಎಂಬುದನ್ನು ಆಧರಿಸಿ ಸಾಮಗ್ರಿಗಳನ್ನು ಸರಬರಾಜು ಮಾಡಲಾಗುತ್ತಿದೆ ಎಂದು ವಿವರಿಸಿದರು.ಜಿಲ್ಲಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳ ಭೇಟಿಯಿಂದ ಇಂತಹ ಒಳ್ಳೆಯ ಕೆಲಸಗಳಿಗೆ ಪ್ರೋತ್ಸಾಹ ನೀಡಿದಂತಾಗಿದೆ ಎಂದು ಹೇಳಿದರು.
ಬೆಳಗಾವಿ ನಗರ ಸೇರಿದಂತೆ 28 ಗ್ರಾಮಗಳಿಗೆ ಬಟ್ಟೆ, ಹಾಸಿಗೆ, ಹೊದಿಕೆ ಸೇರಿದಂತೆ ವಿವಿಧ ಬಗೆಯ ಪರಿಹಾರ ಸಾಮಗ್ರಿಗಳನ್ನು ಕಳಿಸಲಾಗುತ್ತಿದೆ.
ದಾನಿಗಳು ಅಕ್ಕಿ, ಉಪ್ಪು, ಎಣ್ಣೆ ಪ್ಯಾಕೆಟ್, ರವಾ, ತರಕಾರಿ, ಉಪ್ಪು, ಸಕ್ಕರೆ, ಚಹಾಪುಡಿ, ಪೇಸ್ಟ್, ಬ್ರಷ್, ಜಾನ್ಸನ್ ಬೇಬಿ ಸೋಪ್, ಡೆಟಾಲ್, ಮಾತ್ರೆ, ಸೊಳ್ಳೆಬತ್ತಿ, ಮೇಣದ ಬತ್ತಿ,, ಸ್ನಾನದ ಸೋಪ್, ಬಟ್ಟೆಗಳು, ಚಪ್ಪಲಿಗಳು, ವಿಕ್ಸ್, ಚಾಪೆಗಳು ಹೀಗೆ ತಮ್ಮ ಕೈಯಿಂದಾದ ನೆರವು ನೀಡಿದ್ದಾರೆ.
ಪ್ರತಿಯೊಂದು ಸಾಮಗ್ರಿಗಳ ರಿಜಿಸ್ಟರ್ ಪ್ರತ್ಯೇಕವಾಗಿ ಇಟ್ಟು, ಪರಿಹಾರ ಕೇಂದ್ರಗಳಿಗೆ ಕಳುಹಿಸಲಾಗುತ್ತಿದೆ ಎಂದು ವಿವರಿಸಿದರು.ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ್ ದುಡಗುಂಟಿ, ಮೌಲಾನಾ ಸಾಜಿದ್, ಸಲೀಂ, ಶಬ್ಬೀರ್ ಶೇಟ್ ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

