ದಿನದ ಸುದ್ದಿ
ಬಳ್ಳಾರಿ | ಆರು ಲಕ್ಷ ಜನರಿಗೆ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್
ಸುದ್ದಿದಿನ,ಬಳ್ಳಾರಿ : ಜಿಲ್ಲೆಯಲ್ಲಿ ಆರು ಲಕ್ಷ ಜನರಿಗೆ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ನೀಡಲಾಗಿದೆ. ಇದರಲ್ಲಿ ಎರಡು ಲಕ್ಷ ಜನರು 70 ಕೋಟಿ ರೂಪಾಯಿ ವೆಚ್ಚದ ಚಿಕಿತ್ಸೆ ಪಡೆದಿದ್ದಾರೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.
ಬಳ್ಳಾರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿಂದು ತಾಲೂಕು ಮಟ್ಟದ ಆರೋಗ್ಯ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಡಜನರ ಆರೋಗ್ಯ ಸುಧಾರಣೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆಯುಷ್ಮಾನ್ ಮೇಳ ಆಯೋಜಿಸುತ್ತಿದೆ ಎಂದರು.
ತಾಲೂಕು ಆರೋಗ್ಯ ಮೇಳಗಳ ಮೂಲಕ ಜನರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಿ, ಚಿಕಿತ್ಸಾ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಮೇಳದಲ್ಲಿ ಅಪೌಷ್ಟಿಕತೆ, ಕುಷ್ಟರೋಗ ನಿರ್ಮೂಲನೆಗೆ ಸರ್ಕಾರದ ನೆರವು, ಯೋಗಾಭ್ಯಾಸದಿಂದ ಆರೋಗ್ಯ ರಕ್ಷಣೆ ಸೇರಿದಂತೆ ಇತರ ಆರೋಗ್ಯ ಸೌಲಭ್ಯಗಳ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿತ್ತು. ರಕ್ತದೊತ್ತಡ, ಸಕ್ಕರೆ ಕಾಯಿಲೆ, ನೇತ್ರ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆ ನಡೆಸಿ ಮಾರ್ಗದರ್ಶನ ನೀಡಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243