ದಿನದ ಸುದ್ದಿ
ಮೇ 15 ರಿಂದ ಭದ್ರಾ ನಾಲೆಗಳಿಗೆ ನೀರು ಬಂದ್
ಸುದ್ದಿದಿನ,ಶಿವಮೊಗ್ಗ : ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುವುದು. ಹಾಗೂ ನೀರಿನ ಅವಶ್ಯಕತೆಗನುಸಾರವಾಗಿ ಮೇ 20 ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿತು.
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ಇಂದು ಮಲವಗೊಪ್ಪದ ಕಚೇರಿಯಲ್ಲಿ ನಡೆದ 80 ನೇ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಅಧ್ಯಕ್ಷತೆ ವಹಿಸಿದ್ದ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಮಾತನಾಡಿ, ನೀರಾ ಸಲಹಾ ಸಮಿತಿ ಮತ್ತು ರೈತ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಿ ಎಲ್ಲ ರೈತರ ಹಿತದೃಷಿಯಿಂದ ಭದ್ರಾ ಜಲಾಶಯದ ಬೇಸಿಗೆ ಬೆಳೆಗಳಿಗೆ ಹರಿಸುತ್ತಿದ್ದ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುತ್ತಿದೆ. ಹಾಗೂ ನೀರಿನ ಅವಶ್ಯಕತೆಗನುಗುಣವಾಗಿ ಮೇ 20 ರವರೆಗೆ ನೀರನ್ನು ಹರಿಸಲು ಸಮಿತಿ ನಿರ್ಧಾರ ಕೈಗೊಂಡಿದೆ.
ನಾನು ಪ್ರಾಧಿಕಾರದ ಅಧ್ಯಕ್ಷೆಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೀನಿ. ಅಧಿಕಾರಿಗಳಿಗೆ ಚುರುಕು ಮುಟ್ಟಿಸಿ ಕೆಲಸ ಮಾಡಿಸಿದ್ದೇನೆ. ನಾವು ಕೇವಲ ಅಧಿಕಾರಿಗಳ ಮೇಲೆ ಅವಲಂಬಿತರಾಗದೇ ಕೆಲಸ ಮಾಡಬೇಕು. ಹಿಂದೆ ಬರ ಇಲ್ಲದಿದ್ದ ಸಮಯದಲ್ಲೂ ಸಹ ಕಡೆಯ ಭಾಗಕ್ಕೆ ನೀರು ಸಿಕ್ಕಿರಲಿಲ್ಲ. ಆದರೆ ಕಾಳಜಿ ಮತ್ತು ಜವಾಬ್ದಾರಿ ವಹಿಸಿದಲ್ಲಿ ಎಲ್ಲರಿಗೆ ನ್ಯಾಯ ಒದಗಿಸಬಹುದು. ಜೊತೆಗೆ ಅಧಿಕಾರಿಗಳು ಸರಿ ಹೋಗ್ತಾರೆ.
ಕಳೆದ ಬಾರಿ ಹಾಗೂ ಈ ಬಾರಿ ಎರಡೂ ಸಲ ಜಲಾಶಯದಲ್ಲಿ ನೀರು ಉಳಿಕೆ ಮಾಡಿದ್ದೇವೆ. ಅನಾವಶ್ಯಕವಾಗಿ ಹರಿಯುತ್ತಿದ್ದ ನೀರನ್ನು ವಾಣಿವಿಲಾಸ ಜಲಾಶಯಕ್ಕೆ ಹರಿಸಿದ್ದೇವೆ. ಭದ್ರಾ ಮೇಲ್ದಂಡೆ ಯೋಜನೆಯ ಡಿಪಿಆರ್ ನಲ್ಲಿ ಬದಲಾವಣೆ ಆಗಬೇಕು. ಶಾಸಕರು ಸಹ ಈ ಬಗ್ಗೆ ಇಚ್ಚಾಶಕ್ತಿ ತೋರಬೇಕೆಂದರು.
ಸಮಿತಿ ಸದಸ್ಯರು ಹಾಗೂ ರೈತ ಮುಖಂಡರಾದ ಹೆಚ್.ಆರ್.ಬಸವರಾಜಪ್ಪ ಮಾತನಾಡಿ, ಕಡೆಯ ಭಾಗದ ರೈತರು ಸೇರಿದಂತೆ ಎಲ್ಲರ ಹಿತದೃಷ್ಟಿಯಿಂದ ನೀರನ್ನು ಮೇ 15 ಕ್ಕೆ ನಿಲ್ಲಿಸುವ ನಿರ್ಧಾರಕ್ಕೆ ಬರಲಾಗಿದೆ. 29.9 ಟಿಎಂಸಿ ನೀರು ಹರಿಸುವ ಭದ್ರಾ ಮೇಲ್ದಂತೆ ಯೋಜನೆಗೆ ತುಂಗಾದಿಂದ 17.4 ಟಿಂಎಂಸಿ ಮತ್ತು ಭದ್ರಾ ಜಲಾಶಯದಿಂದ 12.5 ಟಿಎಂಸಿ ನೀರು ಬಿಡಬೇಕೆಂದು ಡಿಪಿಆರ್ ಆಗಿದೆ. ಆದರೆ ಭದ್ರಾದ ಬದಲಾಗಿ ಸಂಪೂರ್ಣ 29.9 ಟಿಎಂಸಿ ನೀರು ತುಂಗಾದಿಂದಲೇ ಹರಿಸುವಂತೆ ಆಗಬೇಕೆಂದು ಮನವಿ ಮಾಡಿದರು.
- ರೈತರ ಹಿತವೇ ನಮ್ಮ ಮೂಲ ಉದ್ದೇಶ. ಕಾಡಾ ಅಧ್ಯಕ್ಷರು ಈ ಪ್ರಾಧಿಕಾರಕ್ಕೆ ಸೂಕ್ತವಾದ ವ್ಯಕ್ತಿಗಳಾಗಿದ್ದು, ಅತ್ಯುತ್ತಮವಾಗಿ ನೀರಿನ ನಿರ್ವಹಣೆ ಮಾಡಿ, ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ಸಂಪೂರ್ಣವಾಗಿ ತುಂಗಾದಿಂದಲೇ ನೀರು ಹರಿಸುವ ಸಂಬಂಧ ಹಾಗೂ ನೀರಾವರಿಗೆ ಸಂಬಂಧಿಸಿದ ಇತರೆ ಸಮಸ್ಯೆಗಳ ಕುರಿತು ನೀರಾವರಿ ಸಚಿವರೊಂದಿಗೆ ಮಾತನಾಡುತ್ತೇನೆ. ಹಾಗೂ ಅನುದಾನ, ಮತ್ತಿತರೆ ಸಮಸ್ಯೆಗಳ ಪರಿಹಾರದ ಕುರಿತು ಪ್ರಯತ್ನ ಮಾಡುತ್ತೇನೆ ಹಾಗೂ ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ಸಹ ತರುತ್ತೇನೆ. ನನ್ನ ಸಹಕಾರ ಸದಾ ಪ್ರಾಧಿಕಾರಕ್ಕೆ ಇದೆ.
| ಡಿ.ಎಸ್.ಅರುಣ್, ವಿಧಾನ ಪರಿಷರ್ ಶಾಸಕರು
ಸಮಿತಿ ಸದಸ್ಯರಾದ ಷಡಕ್ಷರಪ್ಪ ಗೌಡ್ರು ಮಾತನಾಡಿ, ಸಭೆಗೆ ಕೃಷಿ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಹಾಜರಾಗಬೇಕೆಂದು ಠರಾವು ಮಾಡಿ ಸರ್ಕಾರಕ್ಕೆ ಕಳುಹಿಸಬೇಕು ಹಾಗೂ ಶಾಸಕರೂ ಸಹ ಸಭೆಗೆ ಹಾಜರಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸದಸ್ಯರಾದ ಲಿಂಗರಾಜ್ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆ ಎಂಬ ಹೆಸರಿನಿಂದ ಕರೆಯಲಾಗುತ್ತಿರುವ ಈ ಯೋಜನೆಯು ಏತ ನೀರಾವರಿ ಆಗಿರುವುದರಿಂದ ಸದರಿ ಯೋಜನೆಗೆ ಭದ್ರಾ ಏತ ನೀರಾವರಿ ಯೋಜನೆ ಎಂದು ನೇಮಕ ಮಾಡಬೇಕೆಂದು ಸಲಹೆ ನೀಡಿದರು.
ಸದಸ್ಯರಾದ ತೇಜಸ್ವಿ ಪಟೇಲ್, ವೈ.ಸಿ.ಮಲ್ಲಿಕಾರ್ಜುನ, ರುದ್ರಮೂರ್ತಿ, ಮಂಜುನಾಥ್ ರೆಡ್ಡಿ, ಮಹೇಶ್ ಇತರೆ ಸದಸ್ಯರು ಹಾಗೂ ರೈತ ಸಂಘಟನೆ ಪದಾಧಿಕಾರಿಗಳು, ರೈತ ಮುಖಂಡರು ಮಾತನಾಡಿ. ಸಲಹೆ ಸೂಚನೆಗಳನ್ನು ನೀಡಿದರು.
ಭದ್ರಾ ಜಲಾಶಯದ ನೀರಿನ ಪ್ರಮಾಣ
ದಿ: 27.04.2022 ರಂದು ಹಾಲಿ ಬಳಕೆಗೆ ಬರುವ ನೀರಿನ ಪ್ರಮಾಣ 25.894 ಟಿಎಂಸಿ. 2021-22 ನೇ ಸಾಲಿನ ಬೇಸಿಗೆ ಬೆಳೆಗಳಿಗೆ ಹೆಚ್ಚುವರಿ ದಿನಗಳಿಗೆ ಹರಿಸಲು ಬೇಕಾಗಬಹುದಾದ ಸರಾಸರಿ ನೀರಿನ ಪ್ರಮಾಣ 6.20 ಟಿಂಎಂಸಿ. ಒಟ್ಟು ಬಳಕೆಯಾಗುವ ನೀರಿನ ಪ್ರಮಾಣ 17.24 ಟಿಂಎಂಸಿ. ಭದ್ರಾ ಜಲಾಶಯದಲ್ಲಿ ಉಳಿಯಬಹುದಾದ ನೀರಿನ ಪ್ರಮಾಣ 8.65 ಟಿಎಂಸಿ.
ಸಭೆಯಲ್ಲಿ ಭದ್ರಾ ನೀರಾವರಿ ಸಲಹಾ ಸಮಿತಿ ಸದಸ್ಯರು, ರೈತ ಮುಖಂಡರು, ಆಡಳಿತಾಧಿಕಾರಿ ಅರುಣ್, ಕನೀನಿನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಚಂದ್ರಹಾಸ್, ಇತರೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು ತಿಳಿಸಿದ್ದಾರೆ.
ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ5 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ4 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ2 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

