ದಿನದ ಸುದ್ದಿ
ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲಿದೆ : ಸಿಎಂ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಯೋಜನೆ ಜಾರಿಗೆ 20 ಸಾವಿರ ಕೋಟಿ ರೂಪಾಯಿ ಮಂಜೂರು ಮಾಡಲಿದೆ ಎಂದರು.
ಮನೆ ಮನೆಗೆ ಗಂಗೆ ಯೋಜನೆಯಡಿ ಚಿತ್ರದುರ್ಗ ತಾಲ್ಲೂಕಿನ 171 ಹಳ್ಳಿಗಳಿಗೆ ಹಾಗೂ ಹಿರಿಯೂರು ತಾಲ್ಲೂಕಿನ 131ಹಳ್ಳಿಗಳಿಗೆ ಬಹುಗ್ರಾಮ ಯೋಜನೆ ಮಂಜೂರು ಮಾಡಲಾಗಿದೆ. ರಾಜ್ಯದ ಜನರ ಆರೋಗ್ಯ ಸುಧಾರಣೆ ದೃಷ್ಠಿಯಿಂದ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಕ್ಯಾನ್ಸರ್ನಿಂದ ಬಳಲುವವರಿಗೆ 10 ಹೊಸ ಕಿಮೋ ಥೆರಪಿ ಕೇಂದ್ರ ತೆರೆಯಲಾಗಿದೆ ಎಂದರು.
ಹೆಣ್ಣು ಮಕ್ಕಳ ಉದ್ಯೋಗ ಸೃಷ್ಠಿಗೆ 500 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ನೀಡಲಾಗುವುದು. ಸ್ತ್ರೀ ಸಂಘಗಳ ಉತ್ಪನ್ನಗಳನ್ನು ಖರೀದಿ ಮಾಡಿ ಸೂಕ್ತ ಮಾರುಕಟ್ಟೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243