Connect with us

ನೆಲದನಿ

ಕೋರೆಗಾವ ವಿಜಯ : ದಲಿತ ಸ್ವಾಭಿಮಾನ ದಿನ

Published

on

  • ಡಾ.ಸಿದ್ರಾಮ ಕಾರಣಿಕ, ಧಾರವಾಡ, ಮೊ:9035343031

ಜನೇವರಿ 1…
ಇದು ದಲಿತ ಸ್ವಾಭಿಮಾನದ ದಿನ ! ದಲಿತರಾದವರೆಲ್ಲ ಮರೆಯದೇ ನೆನಪಿಡಬೇಕಾದ ದಿನ. ಇಡೀ ದೇಶದಲ್ಲಿಯೇ ವರ್ಣಧರ್ಮವನ್ನು ಪಾಲಿಸಿ, ದಲಿತರನ್ನು ನಿರಂತರವಾಗಿ ಶೋಷಣೆ ಮಾಡುತ್ತ, ಅವರ ಮೇಲೆ ದಿನನಿತ್ಯ ಅನ್ಯಾಯವೆಸಗುತ್ತ ಬಂದಿದ್ದ ಮಹಾರಾಷ್ಟ್ರದ ಪೇಶ್ವೆಗಳ ಸೊಕ್ಕಡಗಿಸಿ ಪೇಶ್ವಾಯಿ ಸಾಮ್ರಾಜ್ಯವನ್ನು ಇನ್ನಿಲ್ಲದಂತೆ ಮಾಡಿದ ಐತಿಹಾಸಿಕ ದಿನವಿದು. ಸುಮಾರು ನಲವತ್ತು ಸಾವಿರದಷ್ಟಿದ್ದ ಪೇಶ್ವೆ ಸೈನಿಕರನ್ನು ಕೇವಲ ಐದು ನೂರು ವೀರ ಯೋಧರು ಮಣ್ಣುಮುಕ್ಕಿಸಿದ ದಿನವಿದು.

ಹೌದು !
ಹಿಂದೂ ಧರ್ಮದ ಅನಾಚಾರಗಳನ್ನೆಲ್ಲ ದಲಿತರ ಮೇಲೆ ಹೇರಿ, ನಿರ್ದಯಿಯಾಗಿ ವರ್ತಿಸಿದ್ದ ಪೇಶ್ವೆಗಳಿಗೆ ಇಂಥದ್ದೊಂದು ಅಂತ್ಯ ತೋರಿಸುವ ಅವಶ್ಯಕತೆ ಇತ್ತು. ಅದನ್ನು ಸಾಧ್ಯ ಮಾಡಿ ತೋರಿಸಿದವರು ಬ್ರಿಟಿಷ್ ಸೇನೆಯಲ್ಲಿದ್ದ ದಲಿತ ಯೋಧರು.

ಪುಣೆ-ಅಹಮದಾನಗರ ಮಾರ್ಗದಲ್ಲಿ ಭೀಮಾನದಿಯ ತೀರದಲ್ಲಿ ಕೋರೆಗಾವ ಹೆಸರಿನ ಒಂದು ಸಣ್ಣ ಹಳ್ಳಿಯಿದೆ. ಹಳ್ಳಿ ಸಣ್ಣದಿದ್ದರೂ ಭೀಮಾ ತೀರದ ಆ ಹಳ್ಳಿಯಲ್ಲಿ ಅಡಗಿರುವ ಇತಿಹಾಸ ತುಂಬ ದೊಡ್ಡದು. ಅಷ್ಟೇ ಅಲ್ಲ ಅದು ಸ್ಫೂರ್ತಿದಾಯಕವಾದುದ್ದೂ ಹೌದು ! ಅದೊಂದು ನಮ್ಮನ್ನು ಹುರಿದುಂಬಿಸುವ ಮತ್ತು ಅಭಿಮಾನ ಪಡುವಂತೆ ಮಾಡುವ ಇತಿಹಾಸವೇ ಸರಿ.

ದಲಿತ ವರ್ಗದಿಂದ ಬಂದವರು ಯಾವುದೇ ಕೆಲಸದಲ್ಲಿದ್ದರೂ ನಿಷ್ಠೆಗೆ ಹೆಸರಾದವರು. ವರ್ಣವ್ಯವಸ್ಥೆಯಿಂದ ವ್ಯತಿತರಾಗಿ ನಲುಗಿ ಹೋದ ಅವರು, ಸೇನೆ ಸೇರಿ ಸಾಧಿಸಿದ ಸಿದ್ಧಿಗಳು ಒಂದೆರಡರಲ್ಲ. ಅವುಗಳನ್ನು ಒಂದೊಂದಾಗಿ ಮೆಲುಕು ಹಾಕಿದಾಗ ಮುಚ್ಚಿಟ್ಟ ಅಥವಾ ಮರೆತು ಹೋದ ಇತಿಹಾಸದ ದೊಡ್ಡದೊಂದು ಅಧ್ಯಾಯ ತೆರೆದುಕೊಳ್ಳುತ್ತದೆ.

ಅಸಹ್ಯವೆನ್ನಿಸುವಂತಹ ಅಸ್ಪøಶ್ಯತೆಯನ್ನು ಹೇರಿ ಪ್ರತಿಕ್ಷಣವೂ ಸಂಶಯಿತ ದೃಷ್ಟಿಯಿಂದ ನೋಡುವ ಪೇಶ್ವೆಗಳ ನಡೆಯನ್ನು ವಿರೋಧಿಸಿ, ಅದಕ್ಕೆ ತಕ್ಕ ಪ್ರತೀಕಾರ ತೀರಿಸಿಕೊಳ್ಳಲು ತಮಗಾದ ಅವಮಾನವನ್ನು ಹೊಟ್ಟೆಯೊಳಗಿಟ್ಟುಕೊಂಡಿದ್ದ ಮಹಾರರು ಸ್ವಾಭಿಮಾನದಿಂದ ಪುಟಿದೆದ್ದು ಗೆಲುವು ಸಾಧಿಸುವುದಕ್ಕೆ ಐತಿಹಾಸಿಕವಾದ ಕೋರೆಗಾವ ಕದನ ಅವಕಾಶ ನೀಡಿತು.

ಬ್ರಿಟಿಷರು ಅಸ್ಪøಶ್ಯತೆಯ ವಿಚಾರದಿಂದ ದೂರವುಳಿದು ಕೇವಲ ವೀರತನವನ್ನೇ ಮುಖ್ಯವಾಗಿಟ್ಟುಕೊಂಡು ತಮ್ಮ ಸೇನೆಯಲ್ಲಿ ಮಹಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಪ್ರವೇಶ ನೀಡಿ, ಅವರಿಗೆ ಸೇನಾ ಶಿಕ್ಷಣ ನೀಡಿದರು. ಈ ಮಹಾರರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾವ ಕದನವನ್ನು ಗೆಲ್ಲಲು ಸಾಧ್ಯವಾಯಿತು. ಇತಿಹಾಸದ ಯಾವುದೇ ಪ್ರಸಂಗಗಳು ಮಹಾರರ ಈ ಕಲಿತನಕ್ಕೆ ಸರಿಸಾಟಿಯಾಗಿ ನಿಲ್ಲಲಾರವು.

ಕೋರೆಗಾವದಲ್ಲಿ ಅಖಂಡವಾಗಿ ನಿಂತಿರುವ ವಿಜಯಸ್ತಂಭ ಇಂದಿಗೂ ಆ ವೀರ ಮಹಾರರ ನೆನಪನ್ನು ಹಚ್ಚ ಹಸಿರಾಗಿಟ್ಟಿದೆ.ಢೋಂಗಿ, ಪಾಖಂಡಿ, ಸಮಯಸಾಧಕತನ ಮತ್ತು ದೇವರು-ಧರ್ಮದ ಹೆಸರಿನಲ್ಲಿ ಮಹಾರರ ಬದುಕನ್ನೇ ಹರಾಮ ಮಾಡಿದ, ಸೂತ್ರದ ಗೊಂಬೆಯನ್ನಾಗಿಸಿದ ಈ ಸಮಾಜಕ್ಕೆ ಮಹಾರ ರಕ್ತದಲ್ಲಿರುವ ಉಮೇದಿನ ಝಲಕ್ ತೋರಿಸುವ ಸಂಧಿ ಸಿಕ್ಕಿತೆಂಬ ಒಂದೇ ಒಂದು ಕಾರಣದಿಂದ ಕೋರೆಗಾವ ಕದನ ನಡೆಯಿತು.

ಮಹಾರರ ಸ್ವಾಭಿಮಾನವನ್ನೇ ಹಾಳು ಮಾಡಿದ ಪೇಶ್ವೆಗಳ ವಿರುದ್ಧ ಹೋರಾಟ ಮಾಡಿದ ಕೋರೆಗಾವ ಕದನದಲ್ಲಿ ಬ್ರಿಟಿಷ್ ಸರಕಾರ ಜಯ ಗಳಿಸಲು ಮಹಾರ ವೀರರ ಪರಾಕ್ರಮವೇ ಕಾರಣ ಎಂಬುದನ್ನು ಮರೆಯಬಾರದು.

ಯಾರಿಗೆ ಮನುಷ್ಯರೆಂದು ಬದುಕಲು ಅವಕಾಶವನ್ನೇ ನೀಡಿರಲಿಲ್ಲವೋ, ಯಾರಿಗೆ ಒಳ್ಳೆಯ ಬಟ್ಟೆ ಅಥವಾ ಪಾತ್ರೆ ಬಳಸುವುದಕ್ಕೆ ನಿರ್ಬಂಧವಿತ್ತೋ, ಯಾರಿಗೆ ಬೀದಿಗಳಲ್ಲಿ ಅಡ್ಡಾಡಲೂ ಅವಕಾಶವಿರಲಿಲ್ಲವೋ, ಯಾರ ವೀರತ್ವ ಮತ್ತು ಶೌರ್ಯತ್ವಕ್ಕೆ ಅವಕಾಶ ದೊರೆಯುತ್ತಿರಲಿಲ್ಲವೋ, ಯಾರಿಗೆ ಅವಮಾನಿತರಾಗಿ ಬದುಕುವ ಅನಿವಾರ್ಯತೆಯನ್ನು ಸೃಷ್ಟಿಸಲಾಗಿತ್ತೋ ಅವರು ಅಂಥವುಗಳನ್ನೆಲ್ಲ ವಿರೋಧಿಸುವುದಕ್ಕಾಗಿಯೇ ಬ್ರಿಟಿಷ್ ಸೇನೆಯನ್ನು ಸೇರಿ ತಮ್ಮ ಪರಾಕ್ರಮದ ಒಂದು ಝಲಕ್‍ನ್ನು ತೋರಿಸುವುದಕ್ಕೆ ಸಾಧ್ಯವಾಯಿತು.

ಶಿರೂರದಿಂದ 27 ಮೈಲುಗಳ ಸತತ ಕಾಲ್ನಡಿಗೆ ಮತ್ತು ಹಸಿವು-ನೀರಡಿಕೆಗಳಿಂದ ವ್ಯಾಕುಲಗೊಂಡಿದ್ದರೂ ಬೆರಳೆಣಿಕೆಯಷ್ಟಿದ್ದ ಸ್ವಾಭಿಮಾನಿ ಮಹಾರ ಯೋಧರು ತಮಗಿಂತ 40 ಪಟ್ಟು ಹೆಚ್ಚಿದ್ದ ಸರ್ವಶಸ್ತ್ರಸಜ್ಜಿತ ಪೇಶ್ವೆ ಸೇನೆಯನ್ನು 12 ಗಂಟೆಗಳ ಕಾಲದ ಕದನದಲ್ಲಿ ದಾರುಣವಾಗಿ ಪರಾಭವಗೊಳಿಸಿ ಪೇಶ್ವೆಯ ಶಾಹಿತನವನ್ನು ಧೂಳಿಪಟ ಮಾಡಿದರು.

ಈ ಕದನದಲ್ಲಿ ಮೊದಲನೇ ಹಾಗೂ ಎರಡನೇ ರೆಜಿಮೆಂಟಿನ ಒಟ್ಟು 50 ಯೋಧರು ವೀರ ಮರಣವನ್ನಪ್ಪಿದರು. 205 ಯೋಧರು ಗಾಯಾಳುಗಳಾದರು. ಹುತಾತ್ಮರಾದವರಲ್ಲಿ 22 ಮಹಾರರು, 16 ಮರಾಠರು, 8 ರಜಪೂತರು ಇಬ್ಬರು ಹಿಂದೂಗಳು ಹಾಗೂ ತಲಾ ಒಬ್ಬೊಬ್ಬ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಯೋಧರು ಸೇರಿದ್ದಾರೆ.

ಇದಕ್ಕೆಲ್ಲ ಪೂರ್ವಿಕರು ಸ್ಫೂರ್ತಿಯೂ ಕಾರಣವಾಗಿತ್ತು. ಹಿಂದೆ ಶಿವಾಜಿ ಕಾಲದಿಂದಲೂ ಮಹಾರರು ತಮ್ಮ ವೀರ-ಶೌರ್ಯ-ಸಾಹಸಗಳಿಂದ ಪ್ರಖ್ಯಾತರಗಿದ್ದಾರೆ. ಪಾಚಗಡದ ರಾಯನಾಕ, ಸುಭನಾಕ ವಾಘನಾಕ, ಮದನಾಕ ಏಸನಾಕ, ಧೋಂಡನಾಕ ಪುಂಡನಾಕ, ಮೊದಲು ಸಾತಾರಕ್ಕೆ ಸೇರಿದ್ದ ಸಾಂಗ್ಲಿ ಜಿಲ್ಲೆಯ ತಾಸಗಾವ ತಾಲೂಕಿನ ಕಾಳಂಬಿ ಗ್ರಾಮದ ಜಾಗೀರದಾರನಾಗಿದ್ದ ಶೂರ ಮೊದಲನೆ ಶಿದನಾಕ, ರಾಯನಾಕ ಮಹಾರ ಮೊದಲಾದವರ ಪಟ್ಟಿಯೇ ಇದೆ. ಇದರ ಮುಂದುವರಿಕೆಯಾಗಿ ಕೋರೆಗಾವ ಕದನ ಕಲಿಗಳಾದ ಮಹಾರ ಯೋಧರು ಕಾಣಿಸಿಕೊಳ್ಳುತ್ತಾರೆ.

1822 ರಲ್ಲಿ ಕೋರೆಗಾವದಲ್ಲಿ ಭೀಮಾ ನದಿಯ ದಂಡೆಯ ಮೇಲೆ ವಿಜಯಸ್ತಂಭವನ್ನು ನಿರ್ಮಿಸಲಾಗಿದೆ. ವಿಜಯಸ್ತಂಭದ ಮೇಲೆ “One of the proudest triumphs of the British Army in the East” ಎಂದು ಬರೆಯಲಾಗಿದೆ. ಅಂದರೆ ಭಾರತದ ಪೂರ್ವ ಪ್ರದೇಶಗಳಲ್ಲಿ ತನ್ನದಾಗಿಸಿಕೊಂಡಿರುವ ಹಲವಾರು ವಿಜಯಗಳಲ್ಲಿಯೇ ಈ ವಿಜಯವು ಬ್ರಿಟಿಷ ಸೇನೆ ಹೆಮ್ಮೆ ಪಡುವಂತಿದೆ ಎಂಬುದು ಅಲ್ಲಿ ಉಲ್ಲೇಖಿತವಾಗಿದೆ.

ಸ್ತಂಭದ ಬದಿಗಳಲ್ಲಿ ಇಂಗ್ಲೀಷ್ ಮತ್ತು ದೇವನಾಗರಿ ಲಿಪಿಯಲ್ಲಿ ಹುತಾತ್ಮರದ ವೀರಯೋಧರ ಹೆಸರುಗಳು ಕೆತ್ತಲ್ಪಟ್ಟಿವೆ. ಸೀನನಾಕ ಕಮಲನಾಕ, ರಾಮನಾಕ ಏಸನಾಕ, ಗೋಂದನಾಕ ಕೋಢೆನಾಕ, ರಾಮನಾಕ ಏಸನಾಕ, ಭಾಗನಾಕ ಹರನಾಕ, ಅಂಬರನಾಕ ಕಾನನಾಕ, ರೂಪನಾಕ ಲಖನಾಕ, ಗಣನಾಕ ಬಾಳನಾಕ, ಕಾಳನಾಕ ಕೋಂಡನಾಕ, ವಪನಾಕ ರಾಮನಾಕ, ವಿಟನಾಕ ಧಾಮನಾಕ, ರಾಜನಾಕ ಗಣನಾಕ, ವಪನಾಕ ಹರನಾಕ, ರೈನಾಕ ವಾನನಾಕ, ಗಣನಾಕ ಧರಮನಾಕ, ದೇವನಾಕ ಆನನಾಕ, ಗೋಪಾಳನಾಕ ಬಾಳನಾಕ, ಹರನಾಕ ಹೀರನಾಕ, ಜೇಠನಾಕ ದೈನಾಕ, ಗಣನಾಕ ಲಖನಾಕ ಎಂಬ ಅಲ್ಲಿಯ ಹೆಸರುಗಳೇ ನಮ್ಮ ಮೈ ಮನಗಳನ್ನು ರೋಮಾಂಚಿತಗೊಳಿಸುತ್ತವೆ. ಮರೆತು ಹೋದ ಇತಿಹಾಸವನ್ನು ಕಣ್ಮುಂದೆ ಕಟ್ಟಿ ಕೊಡುತ್ತವೆ.
ಬಹುಶಃ ಇಂತಹ ಮಹಾರ ವೀರರನ್ನು ಕಂಡೇ ಸಂತ ತುಕಾರಾಮರು, “ಮಹಾರಾಸಿ ಶಿವೆ / ಕೋಪೆ ತೋ ಬ್ರಾಹ್ಮಣ ನವ್ಹೆ/” ಎಂದು ತಮ್ಮ ಅಭಂಗದಲ್ಲಿ ಹೇಳಿದ್ದಾರೆ. ಅಂದರೆ ಬ್ರಾಹ್ಮಣರಿಗಿಂತ ಮಹಾರರು ಮಹಾಮಹಿಮರು ಎಂಬುದೇ ಇಲ್ಲಿಯ ಭಾವ.

ಡಾ. ಬಾಬಾಸಾಹೇಬ ಅಂಬೇಡ್ಕರರು ತಮ್ಮ ಅನುಯಾಯಿಗಳೊಂದಿಗೆ ಶಿರೂರ ಸಮೀಪದ ಭೀಮಾ-ಕೋರೆಗಾವಕ್ಕೆ ಬಂದು ವೀರ-ಪರಾಕ್ರಮದದ ಗತ ಸಾಹಸವನ್ನು ಸಾರುವ ವಿಜಯ ಸ್ತಂಭಕ್ಕೆ 1ನೇ ಜನೇವರಿ 1927 ರಂದು ಗೌರವ ವಂದನೆ ಸಲ್ಲಿಸಿದರು. ಆ ದಿನವನ್ನು ಕೋರೆಗಾವ ಕದನದ ಮಹಾರ ಕಲಿಗಳ ಸ್ಮøತಿದಿನವನ್ನಾಗಿ ಆಚರಿಸಿದರು. ಇದಕ್ಕಿಂತ ಮೊದಲು ಇತಿಹಾಸದಲ್ಲಿ ಮುಚ್ಚಿಹೋಗಿದ್ದ ಅಥವಾ ಮುಚ್ಚಿ ಹಾಕಲ್ಪಟ್ಟ ವಿಜಯ ಸ್ತಂಭದತ್ತ ಯಾರೂ ಹಾಯುತ್ತಿರಲಿಲ್ಲ ಕೂಡ.

ಆದರೆ ಯಾವಾಗ ಡಾ. ಬಾಬಾಸಾಹೇಬ ಅಂಬೇಡ್ಕರರು ಸ್ಮøತಿದಿನವನ್ನು ಆಚರಿಸಿದರೋ ಅಂದಿನಿಂದ ಇಂದಿನವರೆಗೆ ಪ್ರತಿವರ್ಷ ಜನೇವರಿ 1 ರಂದು ದೇಶದ ವಿವಿಧ ಭಾಗಗಳಿಂದ ಬರುವ ಅಸಂಖ್ಯಾತ ಜನ ಸಮೂಹ ಸ್ಮøತಿ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.. ಡಾ. ಬಾಬಾಸಾಹೇಬ ಅಂಬೇಡ್ಕರರು ಯಾವುದೇ ಮಹತ್ವದ ಕೆಲಸವಿದ್ದರೂ ಅದನ್ನೆಲ್ಲ ಬದಿಗೊತ್ತಿ ಜನೇವರಿ ಒಂದರಂದು ಕೋರೆಗಾವಕ್ಕೆ ಬಂದು ವಿಜಯ ಸ್ತಂಭಕ್ಕೆ ಗೌರವ ವಂದನೆ ಸಲ್ಲಿಸುತ್ತಿದ್ದರು.

ಹೀಗೆಲ್ಲ ಇದ್ದರೂ ಕೂಡ ಕೆಲವು ಸಮಯಸಾಧಕರು ಕೋರೆಗಾವ ಕದನದ ಬಗ್ಗೆ ಹೇಳುವುದೇನೆಂದರೆ `ಈ ಕದನ ನಮ್ಮದೇ ದೇಶದಲ್ಲಿಯ ನಮ್ಮದೇ ಬಂಧುಗಳ ವಿರುದ್ಧವಾಗಿತ್ತು ! ಆ ಕದನದ ಫಲವಾದರೂ ಏನು ?’ ಹೀಗೆ ಹೇಳುವವರಿಗೆ ಒಂದು ಸವಾಲನ್ನು ಈ ಸಂದರ್ಭದಲ್ಲಿ ಹಾಕಲೇಬೇಕೆನಿಸುತ್ತದೆ ; ಅಲ್ಲ ಸ್ವಾಮಿ, ತಮ್ಮ ಬಂಧುಗಳನ್ನು ಯಾರಾದರೂ ಗುಲಾಮರನ್ನಾಗಿ ಮಾಡಿಕೊಳ್ಳುತ್ತಾರೆಯೇ ? ತಮ್ಮ ಬಂಧುವಿನ ಹೆಣ್ಣುಮಗಳೊಬ್ಬಳ ಮಾನವನ್ನು ಕಳೆಯುತ್ತಾರೆಯೇ ? ತಮ್ಮ ಬಂಧುಗಳನ್ನು ಯಾರಾದರೂ ಅನ್ನ-ನೀರಿಗಾಗಿ ಚಡಪಡಿಸುವಂತೆ ಮಾಡುತ್ತಾರೆಯೇ ? ಸಾರ್ವಜನಿಕ ಜಾಗದಲ್ಲಿ ಅಡ್ಡಾಡಲು ನಿರ್ಬಂಧ ವಿಧಿಸಬಹುದೇ ? ತಮ್ಮ ಬಾಂಧವರನ್ನು ಯಾರಾದರೂ ಹೇಳಹೆಸರಿಲ್ಲದಂತೆ ನಾಶ ಮಾಡುವ ಕುತಂತ್ರ ಮಾಡಬಹುದೇ ? ತಾವೇ ಕೆಸರು ಎರಚಿ, ಅಪಹಾಸ್ಯ ಮಾಡಿ ನಗಬಹುದೇ ? ಈ ಪ್ರಕರಣಗಳು ನಡೆಯುತ್ತಲೇ ಇವೆ ಎಂದಾದರೆ ಅವರು ನಮ್ಮ ಬಂಧುಗಳು ಹೇಗಾಗುತ್ತಾರೆ ?

ಕೇವಲ ಬೆರಳೆಣಿಕೆಯಷ್ಟಿದ್ದ ಮಹಾರ ವೀರ ಯೋಧರು, ಪೇಶ್ವೆಗಳ ಬಲಾಢ್ಯ ಸೇನೆಯನ್ನು ಈ ಕೋರೆಗಾವ ಕದನದಲ್ಲಿ ಹೀನಾಯವಾಗಿ ಸೋಲಿಸಿದ್ದು ಸೋಜಿಗವಲ್ಲ. ಪೇಶ್ವೆಗಳಿಂದ ಉಂಟಾದ ಸಾಮಾಜಿಕ ಅನಿಷ್ಟ, ಅನ್ಯಾಯ ಮತ್ತು ಅಸ್ಪøಶ್ಯತೆಗಳಿಂದ ತಮಗಾದ ಶೋಷಣೆಗೆ ಪ್ರತಿಯಾಗಿ ಪ್ರತಿಕಾರ ಸಾಧಿಸಿದ ಈ ನಡೆ ಮಹಾರರ ಸ್ವಾಭಿಮಾನವನ್ನು ಎತ್ತಿ ಹಿಡಿಯುತ್ತದೆ. ಕೋರೆಗಾವ ಕದನದ ಗೆಲುವು ಎಂದರೆ ಅನ್ಯಾಯದ ವಿರುದ್ಧ ಪಡೆದ ಗೆಲುವೇ ಆಗಿದೆ.

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರೂ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಿಸುತ್ತಾರೆ. “ಬ್ರಿಟಿಷರ ಪರವಾಗಿ ಮಹಾರ ಯೋಧರು ಯುದ್ಧ ಮಾಡಿದ್ದು ಅಭಿಮಾನ ಪಡುವ ಸಂಗತಿಯಲ್ಲದಿದ್ದರೂ ಮಹಾರ ಯೋಧರು ಬ್ರಿಟಿಷರ ಪರ ಯಾಕೆ ಹೋದರು ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡುವುದು ಸಹಜವೇ ಆಗಿದೆ. ಮಹಾರರು ಮತ್ತೇನು ಮಾಡಲು ಸಾಧ್ಯವಿತ್ತು ? ಹಿಂದುಗಳೆನಿಸಿಕೊಂಡವರು ಅವರನ್ನು ಕೀಳು ಎಂದು ಪರಿಗಣಿಸಿ ನಾಯಿ-ನರಿಗಳಿಗಿಂತಲೂ ಕಡೆಯಾಗಿ ವರ್ತಿಸಿದಾಗ ಆ ಅವಮಾನವನ್ನು ಸಹಿಸಿಕೊಂಡು ಎಷ್ಟು ದಿನ ಬದುಕುವುದು ? ಸ್ವಾಭಿಮಾನದ ನೆಲೆಯಲ್ಲಿ ಮತ್ತು ಹೊಟ್ಟೆಗೆ ಹಿಟ್ಟು ದೊರಕಿಸಿಕೊಳ್ಳಲು ಅವರು ಅನಿವಾರ್ಯವಾಗಿ ಬ್ರಿಟಿಷರ ಸೇನೆ ಸೇರಿದರೆಂಬುದನ್ನು ಪ್ರತಿಯೊಬ್ಬರು ಲಕ್ಷ್ಯದಲ್ಲಿಡಬೇಕು” ಎಂಬ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಮಾತುಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕು.

ಮಹಾರ ಯೋಧರು ಮುಂಚಿನಿಂದಲೂ ಅಂದರೆ ಶಿವಾಜಿಯ ಕಾಲದಿಂದಲೂ ಮರಾಠಾ ಸೇನೆಯಲ್ಲಿ ಪ್ರಾಮಾಣಿಕತೆಯಿಂದ, ಪರಾಕ್ರಮದಿಂದ ದುಡಿದವರು. ಆದರೆ ಎರಡನೇ ಬಾಜಿರಾವ ಗದ್ದುಗೆ ಏರಿದಾಗ ಅನುಭವಿಸಿದ ಜಾತಿಯತೆಯ ತಾರತಮ್ಯತೆ ದಲಿತರನ್ನು ಸಹಜವಾಗಿಯೇ ಕೆರಳಿಸಿತ್ತು. ಆ ಸಂದರ್ಭದಲ್ಲಿ ಅದನ್ನು ಹೇಳಲಾಗಿತ್ತು ಕೂಡ.

ಎರಡನೇ ಬಾಜಿರಾವನ ಬದಲಿಗೆ ಬೇರೆಯವರು ಯಾರಾದರೂ ಸಮರ್ಥರು ಪೇಶ್ವೆಗಳಾದರೆ ಮಾತ್ರ ತಾವು ತಮ್ಮ ತಾಯ್ನೆಲವನ್ನು ಪ್ರಾಣವನ್ನೇ ಬಲಿ ಕೊಟ್ಟಾದರೂ ಕೂಡ ಕಾಪಾಡಲು ಸಿದ್ಧವಿರುವುದಾಗಿ ಪರಾಕ್ರಮಿ ಶಿದನಾಕ ಮನವಿ ಮೂಲಕ ಪ್ರಕಟಿಸಿದ್ದ. ಪೇಶ್ವೆ ಈ ವಿನಂತಿಯನ್ನು ಅತ್ಯಂತ ತಿರಸ್ಕಾರದಿಂದ ತಳ್ಳಿ ಹಾಕಿದ.

ಆದ್ದರಿಂದಲೇ ಮಹಾರ ಯೋಧರು ಬ್ರಿಟಿಷ ಪಡೆ ಸೇರಿ ಪೇಶ್ವೆಯನ್ನು ಮುಗಿಸಲು ಮುಂದಾದರು. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ ಯೋಧರು, ತಮ್ಮ ಮೇಲೆ ಅಮಾನವೀಯವಾದ ಬಂಧನಕಾರಿ ನಿಯಮಗಳಿಂದ ಅಸ್ಪøಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಕದನದಲ್ಲಿ ಮಣ್ಣು ಮುಕ್ಕಿಸಿದರು.

ಪ್ರತಿ ವರ್ಷ ಜನೇವರಿ ಒಂದರಂದು ದೇಶದ ಮೂಲೆ ಮೂಲೆಗಳಿಂದ ಬೃಹತ್ ಪ್ರಮಾಣದಲ್ಲಿ ಆಗಮಿಸುವ ದಲಿತರು ಮೊದಲು ವಿಜಯ ಸ್ತಂಭಕ್ಕೆ ಗೌರವ ವಂದನೆ ಸಲ್ಲಿಸುತ್ತಾರೆ. ನಂತರ ಮೈದಾನದ ಆಟಗಳು ಆರಂಭಗೊಳ್ಳುತ್ತವೆ. ಮಧ್ಯಾಹ್ನ ಸಹಭೋಜನ ಕೂಡ ಇರುತ್ತದೆ. ಭೋಜನದ ನಂತರ ಒಂದಿಷ್ಟು ವಿಶ್ರಾಂತಿ ಪಡೆದುಕೊಂಡು ಸಂಜೆಯ ಇಳಿ ಹೊತ್ತಿನ ಸಮಯದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಗೆದ್ದವರಿಗೆ ಬಹುಮಾನ ವಿತರಣೆಯಾಗುತ್ತದೆ. ಈ ಸಂದರ್ಭದಲ್ಲಿ ಸಭೆಯೂ ನಡೆಯುತ್ತದೆ.

ನಾವು ಆ ವೀರ ವಿಜಯಸ್ತಂಭದ ಹತ್ತಿರ ಹೋಗಿ ಗಂಟಲು ಹರಿಯುವಂತೆ ಘೋಷಣೆ ಕೂಗುತ್ತೇವೆ. ಇದನ್ನು ತಪ್ಪೆಂದು ನಾನು ಹೇಳುತ್ತಿಲ್ಲ. ಒಳ್ಳೆಯ ಸಂಗತಿಯೇ ಸರಿ ! ಆದರೆ ಅದೇ ಛಲದಿಂದ ; ಅದೇ ಮನಸ್ಸಿನಿಂದ ನಾವು ನಮ್ಮ ಪೂರ್ವಿಕರ ಪರಾಕ್ರಮವನ್ನು ಉಳಿಸಿಕೊಂಡು ಬರಬೇಕು ಎಂದು ಕೂಡ ನಮಗೆ ಆಗ ಅನ್ನಿಸಬೇಕಲ್ಲವೇ ? ಅನ್ನಿಸಿದರೂ ಆ ಪರಾಕ್ರಮ ಶಕ್ತಿ ಇಂದು ನಮ್ಮಲ್ಲಿ ಉಳಿದಿದೆಯೇ ? ಉಳಿಯದಿದ್ದರೆ ಅದಕ್ಕಾಗಿ ಚಿಂತಿಸುವ ಕನಿಷ್ಟ ಸೌಜನ್ಯವಾದರೂ ನಮಗೆ ಇರಬೇಡವೇ ? ಜೀವದ ಹಂಗು ತೊರೆದು ಅವರು ಅಂದರೆ ನಮ್ಮ ಪೂರ್ವಿಕರು ತಲಾ ನಲವತ್ತು ಸೈನಿಕರಿಗೆ ಒಬ್ಬ ಮಹಾರ ಯೋಧರಾಗಿ ಘನಘೋರ ಕದನದಲ್ಲಿ ವಿಜಯಿಯಾಗುತ್ತಾರೆ !

ಹಾಗಾದರೆ ಇಂದು ನಮ್ಮ ಯುದ್ಧ ಎಲ್ಲಿ ಆಗಬೇಕಿದೆ ? ಯಾರೊಂದಿಗೆ ಆಗಬೇಕಿದೆ ? 500 ಮಹಾರರು ಒಂದೇ ಜೀವವಾಗಿ ಹೋರಾಟ ಮಾಡಿದ್ದರಿಂದಲೇ ವಿಜಯಶ್ರೀ ಅವರಿಗೆ ಒಲಿದಳು. ಹಾಗಾದರೆ ಅಂಥ ಶಕ್ತಿ ಇಂದು ನಮ್ಮಲ್ಲಿ ಉಳಿದಿದೆಯೇ ? ನಾವು ಸ್ವಾರ್ಥಿ ಮತ್ತು ಢೋಂಗಿ ಮಂದಿಯಲ್ಲ ಅಲ್ಲವೇ ?
ನಮ್ಮ ಒಗ್ಗಟ್ಟಿನ (ಏಕತೆಯ) ಇತಿಹಾಸವನ್ನು ನಾವು ಮರೆತಿದ್ದೇವೆ ಅಲ್ಲವೇ ? ಇದರಿಂದಲೇ ಶೋಷಣೆ ಮಿತಿ ಮೀರುತ್ತದೆಯಲ್ಲವೇ ? ನಾವು ನಮ್ಮ ನಮ್ಮಲ್ಲಿಯೇ ಜಗಳವಾಡುತ್ತ ಕುಳಿತ್ತಿದ್ದೇವೆ ಎಂಬುದನ್ನು ಕಂಡಾಗ ಅನಿಸುತ್ತದೆ ; ಯಾರ್ಯಾರು ಕಲಿತರೋ ಅವರಲ್ಲಿಯ ಕೆಲವರು ತಮ್ಮ ಹೊಟ್ಟೆಯನ್ನಷ್ಟೇ ದೊಡ್ಡದಾಗಿಸಿಕೊಂಡರು ! ತಮ್ಮ ಸಮಾಜಕ್ಕೆ ತಾವೇನಾದರೂ ಋಣ ಸಂದಾಯ ಮಾಡಬೇಕಿದೆಯೇ ಎಂಬ ಅರಿವು ಅವರಲ್ಲಿ ಮಕಾಡೆ ಮಲಗಿ ಬಿಟ್ಟಿದೆ !

ನಾವು ನಮ್ಮ ಶೌರ್ಯದ ಇತಿಹಾಸವನ್ನೇ ಮರೆತಿದ್ದೇವೆ ; ಹತ್ತು ಜನ ಹತ್ತು ಕಡೆ ಮುಖ ಮಾಡಿ ನಿಂತಿದ್ದೇವೆ ! ಒಂದುಗೂಡುವ ; ಒಗ್ಗಟ್ಟು ಪ್ರದರ್ಶಿಸುವ ಮಾತೇ ಇಲ್ಲ ! ಅದರ ಪರಿಣಾಮವನ್ನೇ ನಾವು ಅನುಭವಿಸುತ್ತಿದ್ದೇವೆ. ಸಾಮಾನ್ಯನಾದ ನನ್ನನ್ನೂ ಸೇರಿಸಿ ನಮ್ಮವರೇ ಆಗಿರುವ ಮುಖಂಡರೂ ಇದಕ್ಕೆ ಹೊಣೆಗಾರರಾಗಿದ್ದಾರೆ ಎನಿಸುವುದಿಲ್ಲವೇ ?`ಅಸಹಾಯಕವಾಗಿ ಬದುಕುವುದಕ್ಕಿಂತ ಅವ್ವನ ಹೊಟ್ಟೆಯಲ್ಲಿಯೇ ಸತ್ತು ಹೋಗುವುದು ಮೇಲು’ ಎಂದು ಡಾ. ಬಾಬಾಸಾಹೇಬ ಅಂಬೇಡ್ಕರ್‍ರು ಹೇಳಿದ್ದರು.

ಇಂಥ ಮರ್ಮಭೇದಕ ಮಾತುಗಳೇನಾದರೂ ನಿಮಗೆ ತಟ್ಟಿದ್ದಾವೆಯೇ ? ಇಲ್ಲ ! ನಾವೆಲ್ಲ ತಟಸ್ಥರಾಗಿ ಸಂಬಳ ಪಡೆದು ಬೆಚ್ಚಗೆ ಹೊದ್ದುಕೊಂಡು ಮಲಗಿದ್ದೇವೆ ; ಎಚ್ಚರಾಗಿದ್ದೇವೆ ಎನ್ನುವ ಕೆಲವರು ವಿನಾಕರಣ ತಮ್ಮ ತಮ್ಮಲ್ಲಿ ಜಗಳ ಮಾಡಿಕೊಳ್ಳುತ್ತಿದ್ದಾರೆ ; ಇನ್ನೂ ಕೆಲವರು ಮತ್ಸರದಿಂದ ಪರಸ್ಪರ ಮಾತನಾಡುವುದನ್ನೇ ಬಿಟ್ಟುಬಿಟ್ಟಿದ್ದಾರೆ.

ಬಂಧುಗಳೇ,
ಈ ಸಂದರ್ಭದಲ್ಲಿ ನಾನು ವಿಶ್ವವಿದ್ಯಾಲಯ ಮಟ್ಟದಲ್ಲಿ ನಿಂತು ಒಂದು ಮಾತು ಹೇಳುತ್ತಿದ್ದೇನೆ. ನೀವೆಲ್ಲ ಸ್ವಾಭಿಮಾನಿ ದಲಿತರೇ ಆಗಿದ್ದರೆ, ಕಿಂಚಿತ್ತಾದರೂ ಪಡೆದುಕೊಂಡಿದ್ದರ ಋಣ ತೀರಿಸುವ ಕಾರ್ಯವನ್ನು ಯಾಕೆ ಮಾಡಬಾರದು ? ಶಿಕ್ಷಕೇತರ ಸಿಬ್ಬಂದಿಯನ್ನು ಬಿಡಿ ; ಯುಜಿಸಿ ಸಂಬಳ ಪಡೆಯುತ್ತಿರುವ ದಲಿತ ಪ್ರಾಧ್ಯಾಪಕರು ತಿಂಗಳಿಗೆ ಕೇವಲ ನೂರು ರುಪಾಯಿ ನೀಡಿ ಒಂದು ನಿಧಿಯನ್ನು ಆರಂಭಿಸಬೇಕು ; ಅಲ್ಲಿ ಸೇರುವ ಹಣ ದಲಿತ ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸದುಪಯೋಗವಾಗಬೇಕು ಎನಿಸುವುದಿಲ್ಲವೆ ? ಒಳಜಾತಿಗಳನ್ನೇ ಮುಂದು ಮಾಡಿಕೊಂಡು ಪರಸ್ಪರ ದ್ವೇಷ-ಜಗಳ ಮರೆಯಬೇಕು ಎನಿಸುವುದಿಲ್ಲವೇ ? ವಿದ್ಯಾರ್ಥಿಗಳನ್ನೂ ಹಾದಿ ತಪ್ಪಿಸುವ ಚಾಳಿಯನ್ನು ಬಿಟ್ಟು ಕೂಡಿ ಬಾಳುವ ಕನಸನ್ನು ನನಸು ಮಾಡಿಕೊಳ್ಳಲು ಸಾಧ್ಯವಿಲ್ಲವೇ ? ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ.

ದಯವಿಟ್ಟು ಒಂದು ಮಾತನ್ನು ಮಾತ್ರ ನಾನು ಇಲ್ಲಿ ಹೇಳಬಯಸುತ್ತೇನೆ ; ಮೊಟ್ಟಮೊದಲು ನೀವು ನಿಮ್ಮ ನಿಮ್ಮ ಗೂಡುಗಳನ್ನು ಬಿಟ್ಟು ಹೊರಬನ್ನಿ ; ಪೊರೆಯನ್ನು ಹರಿದೊಗೆಯಿರಿ ಸೋದರ ಸಂಬಂಧಗಳನ್ನು ಬೆಸೆಯಲು ಮುಂದಾಗಿ ! ನಮ್ಮ ಪೂರ್ವಿಕರ ಇತಿಹಾಸದ ಅರಿವು ಇದ್ದುದ್ದೇ ಆದಲ್ಲಿ ಇದು ಅಸಾಧ್ಯವೇನೂ ಅಲ್ಲ ಎಂಬುದು ನನ್ನ ಅಚಲ ವಿಶ್ವಾಸವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

Trending