ನೆಲದನಿ
ಕೋರೆಗಾವ ವಿಜಯ : ದಲಿತ ಸ್ವಾಭಿಮಾನ ದಿನ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/12/Koregaon-Bhima-suddidina-5986.jpg&description=ಕೋರೆಗಾವ ವಿಜಯ : ದಲಿತ ಸ್ವಾಭಿಮಾನ ದಿನ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/12/Koregaon-Bhima-suddidina-5986.jpg&description=ಕೋರೆಗಾವ ವಿಜಯ : ದಲಿತ ಸ್ವಾಭಿಮಾನ ದಿನ', 'pinterestShare', 'width=750,height=350'); return false;" title="Pin This Post">
- ಡಾ.ಸಿದ್ರಾಮ ಕಾರಣಿಕ, ಧಾರವಾಡ, ಮೊ:9035343031
ಜನೇವರಿ 1…
ಇದು ದಲಿತ ಸ್ವಾಭಿಮಾನದ ದಿನ ! ದಲಿತರಾದವರೆಲ್ಲ ಮರೆಯದೇ ನೆನಪಿಡಬೇಕಾದ ದಿನ. ಇಡೀ ದೇಶದಲ್ಲಿಯೇ ವರ್ಣಧರ್ಮವನ್ನು ಪಾಲಿಸಿ, ದಲಿತರನ್ನು ನಿರಂತರವಾಗಿ ಶೋಷಣೆ ಮಾಡುತ್ತ, ಅವರ ಮೇಲೆ ದಿನನಿತ್ಯ ಅನ್ಯಾಯವೆಸಗುತ್ತ ಬಂದಿದ್ದ ಮಹಾರಾಷ್ಟ್ರದ ಪೇಶ್ವೆಗಳ ಸೊಕ್ಕಡಗಿಸಿ ಪೇಶ್ವಾಯಿ ಸಾಮ್ರಾಜ್ಯವನ್ನು ಇನ್ನಿಲ್ಲದಂತೆ ಮಾಡಿದ ಐತಿಹಾಸಿಕ ದಿನವಿದು. ಸುಮಾರು ನಲವತ್ತು ಸಾವಿರದಷ್ಟಿದ್ದ ಪೇಶ್ವೆ ಸೈನಿಕರನ್ನು ಕೇವಲ ಐದು ನೂರು ವೀರ ಯೋಧರು ಮಣ್ಣುಮುಕ್ಕಿಸಿದ ದಿನವಿದು.
ಹೌದು !
ಹಿಂದೂ ಧರ್ಮದ ಅನಾಚಾರಗಳನ್ನೆಲ್ಲ ದಲಿತರ ಮೇಲೆ ಹೇರಿ, ನಿರ್ದಯಿಯಾಗಿ ವರ್ತಿಸಿದ್ದ ಪೇಶ್ವೆಗಳಿಗೆ ಇಂಥದ್ದೊಂದು ಅಂತ್ಯ ತೋರಿಸುವ ಅವಶ್ಯಕತೆ ಇತ್ತು. ಅದನ್ನು ಸಾಧ್ಯ ಮಾಡಿ ತೋರಿಸಿದವರು ಬ್ರಿಟಿಷ್ ಸೇನೆಯಲ್ಲಿದ್ದ ದಲಿತ ಯೋಧರು.
ಪುಣೆ-ಅಹಮದಾನಗರ ಮಾರ್ಗದಲ್ಲಿ ಭೀಮಾನದಿಯ ತೀರದಲ್ಲಿ ಕೋರೆಗಾವ ಹೆಸರಿನ ಒಂದು ಸಣ್ಣ ಹಳ್ಳಿಯಿದೆ. ಹಳ್ಳಿ ಸಣ್ಣದಿದ್ದರೂ ಭೀಮಾ ತೀರದ ಆ ಹಳ್ಳಿಯಲ್ಲಿ ಅಡಗಿರುವ ಇತಿಹಾಸ ತುಂಬ ದೊಡ್ಡದು. ಅಷ್ಟೇ ಅಲ್ಲ ಅದು ಸ್ಫೂರ್ತಿದಾಯಕವಾದುದ್ದೂ ಹೌದು ! ಅದೊಂದು ನಮ್ಮನ್ನು ಹುರಿದುಂಬಿಸುವ ಮತ್ತು ಅಭಿಮಾನ ಪಡುವಂತೆ ಮಾಡುವ ಇತಿಹಾಸವೇ ಸರಿ.
ದಲಿತ ವರ್ಗದಿಂದ ಬಂದವರು ಯಾವುದೇ ಕೆಲಸದಲ್ಲಿದ್ದರೂ ನಿಷ್ಠೆಗೆ ಹೆಸರಾದವರು. ವರ್ಣವ್ಯವಸ್ಥೆಯಿಂದ ವ್ಯತಿತರಾಗಿ ನಲುಗಿ ಹೋದ ಅವರು, ಸೇನೆ ಸೇರಿ ಸಾಧಿಸಿದ ಸಿದ್ಧಿಗಳು ಒಂದೆರಡರಲ್ಲ. ಅವುಗಳನ್ನು ಒಂದೊಂದಾಗಿ ಮೆಲುಕು ಹಾಕಿದಾಗ ಮುಚ್ಚಿಟ್ಟ ಅಥವಾ ಮರೆತು ಹೋದ ಇತಿಹಾಸದ ದೊಡ್ಡದೊಂದು ಅಧ್ಯಾಯ ತೆರೆದುಕೊಳ್ಳುತ್ತದೆ.
ಅಸಹ್ಯವೆನ್ನಿಸುವಂತಹ ಅಸ್ಪøಶ್ಯತೆಯನ್ನು ಹೇರಿ ಪ್ರತಿಕ್ಷಣವೂ ಸಂಶಯಿತ ದೃಷ್ಟಿಯಿಂದ ನೋಡುವ ಪೇಶ್ವೆಗಳ ನಡೆಯನ್ನು ವಿರೋಧಿಸಿ, ಅದಕ್ಕೆ ತಕ್ಕ ಪ್ರತೀಕಾರ ತೀರಿಸಿಕೊಳ್ಳಲು ತಮಗಾದ ಅವಮಾನವನ್ನು ಹೊಟ್ಟೆಯೊಳಗಿಟ್ಟುಕೊಂಡಿದ್ದ ಮಹಾರರು ಸ್ವಾಭಿಮಾನದಿಂದ ಪುಟಿದೆದ್ದು ಗೆಲುವು ಸಾಧಿಸುವುದಕ್ಕೆ ಐತಿಹಾಸಿಕವಾದ ಕೋರೆಗಾವ ಕದನ ಅವಕಾಶ ನೀಡಿತು.
ಬ್ರಿಟಿಷರು ಅಸ್ಪøಶ್ಯತೆಯ ವಿಚಾರದಿಂದ ದೂರವುಳಿದು ಕೇವಲ ವೀರತನವನ್ನೇ ಮುಖ್ಯವಾಗಿಟ್ಟುಕೊಂಡು ತಮ್ಮ ಸೇನೆಯಲ್ಲಿ ಮಹಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಪ್ರವೇಶ ನೀಡಿ, ಅವರಿಗೆ ಸೇನಾ ಶಿಕ್ಷಣ ನೀಡಿದರು. ಈ ಮಹಾರರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾವ ಕದನವನ್ನು ಗೆಲ್ಲಲು ಸಾಧ್ಯವಾಯಿತು. ಇತಿಹಾಸದ ಯಾವುದೇ ಪ್ರಸಂಗಗಳು ಮಹಾರರ ಈ ಕಲಿತನಕ್ಕೆ ಸರಿಸಾಟಿಯಾಗಿ ನಿಲ್ಲಲಾರವು.
ಕೋರೆಗಾವದಲ್ಲಿ ಅಖಂಡವಾಗಿ ನಿಂತಿರುವ ವಿಜಯಸ್ತಂಭ ಇಂದಿಗೂ ಆ ವೀರ ಮಹಾರರ ನೆನಪನ್ನು ಹಚ್ಚ ಹಸಿರಾಗಿಟ್ಟಿದೆ.ಢೋಂಗಿ, ಪಾಖಂಡಿ, ಸಮಯಸಾಧಕತನ ಮತ್ತು ದೇವರು-ಧರ್ಮದ ಹೆಸರಿನಲ್ಲಿ ಮಹಾರರ ಬದುಕನ್ನೇ ಹರಾಮ ಮಾಡಿದ, ಸೂತ್ರದ ಗೊಂಬೆಯನ್ನಾಗಿಸಿದ ಈ ಸಮಾಜಕ್ಕೆ ಮಹಾರ ರಕ್ತದಲ್ಲಿರುವ ಉಮೇದಿನ ಝಲಕ್ ತೋರಿಸುವ ಸಂಧಿ ಸಿಕ್ಕಿತೆಂಬ ಒಂದೇ ಒಂದು ಕಾರಣದಿಂದ ಕೋರೆಗಾವ ಕದನ ನಡೆಯಿತು.
ಮಹಾರರ ಸ್ವಾಭಿಮಾನವನ್ನೇ ಹಾಳು ಮಾಡಿದ ಪೇಶ್ವೆಗಳ ವಿರುದ್ಧ ಹೋರಾಟ ಮಾಡಿದ ಕೋರೆಗಾವ ಕದನದಲ್ಲಿ ಬ್ರಿಟಿಷ್ ಸರಕಾರ ಜಯ ಗಳಿಸಲು ಮಹಾರ ವೀರರ ಪರಾಕ್ರಮವೇ ಕಾರಣ ಎಂಬುದನ್ನು ಮರೆಯಬಾರದು.
ಯಾರಿಗೆ ಮನುಷ್ಯರೆಂದು ಬದುಕಲು ಅವಕಾಶವನ್ನೇ ನೀಡಿರಲಿಲ್ಲವೋ, ಯಾರಿಗೆ ಒಳ್ಳೆಯ ಬಟ್ಟೆ ಅಥವಾ ಪಾತ್ರೆ ಬಳಸುವುದಕ್ಕೆ ನಿರ್ಬಂಧವಿತ್ತೋ, ಯಾರಿಗೆ ಬೀದಿಗಳಲ್ಲಿ ಅಡ್ಡಾಡಲೂ ಅವಕಾಶವಿರಲಿಲ್ಲವೋ, ಯಾರ ವೀರತ್ವ ಮತ್ತು ಶೌರ್ಯತ್ವಕ್ಕೆ ಅವಕಾಶ ದೊರೆಯುತ್ತಿರಲಿಲ್ಲವೋ, ಯಾರಿಗೆ ಅವಮಾನಿತರಾಗಿ ಬದುಕುವ ಅನಿವಾರ್ಯತೆಯನ್ನು ಸೃಷ್ಟಿಸಲಾಗಿತ್ತೋ ಅವರು ಅಂಥವುಗಳನ್ನೆಲ್ಲ ವಿರೋಧಿಸುವುದಕ್ಕಾಗಿಯೇ ಬ್ರಿಟಿಷ್ ಸೇನೆಯನ್ನು ಸೇರಿ ತಮ್ಮ ಪರಾಕ್ರಮದ ಒಂದು ಝಲಕ್ನ್ನು ತೋರಿಸುವುದಕ್ಕೆ ಸಾಧ್ಯವಾಯಿತು.
ಶಿರೂರದಿಂದ 27 ಮೈಲುಗಳ ಸತತ ಕಾಲ್ನಡಿಗೆ ಮತ್ತು ಹಸಿವು-ನೀರಡಿಕೆಗಳಿಂದ ವ್ಯಾಕುಲಗೊಂಡಿದ್ದರೂ ಬೆರಳೆಣಿಕೆಯಷ್ಟಿದ್ದ ಸ್ವಾಭಿಮಾನಿ ಮಹಾರ ಯೋಧರು ತಮಗಿಂತ 40 ಪಟ್ಟು ಹೆಚ್ಚಿದ್ದ ಸರ್ವಶಸ್ತ್ರಸಜ್ಜಿತ ಪೇಶ್ವೆ ಸೇನೆಯನ್ನು 12 ಗಂಟೆಗಳ ಕಾಲದ ಕದನದಲ್ಲಿ ದಾರುಣವಾಗಿ ಪರಾಭವಗೊಳಿಸಿ ಪೇಶ್ವೆಯ ಶಾಹಿತನವನ್ನು ಧೂಳಿಪಟ ಮಾಡಿದರು.
ಈ ಕದನದಲ್ಲಿ ಮೊದಲನೇ ಹಾಗೂ ಎರಡನೇ ರೆಜಿಮೆಂಟಿನ ಒಟ್ಟು 50 ಯೋಧರು ವೀರ ಮರಣವನ್ನಪ್ಪಿದರು. 205 ಯೋಧರು ಗಾಯಾಳುಗಳಾದರು. ಹುತಾತ್ಮರಾದವರಲ್ಲಿ 22 ಮಹಾರರು, 16 ಮರಾಠರು, 8 ರಜಪೂತರು ಇಬ್ಬರು ಹಿಂದೂಗಳು ಹಾಗೂ ತಲಾ ಒಬ್ಬೊಬ್ಬ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಯೋಧರು ಸೇರಿದ್ದಾರೆ.
ಇದಕ್ಕೆಲ್ಲ ಪೂರ್ವಿಕರು ಸ್ಫೂರ್ತಿಯೂ ಕಾರಣವಾಗಿತ್ತು. ಹಿಂದೆ ಶಿವಾಜಿ ಕಾಲದಿಂದಲೂ ಮಹಾರರು ತಮ್ಮ ವೀರ-ಶೌರ್ಯ-ಸಾಹಸಗಳಿಂದ ಪ್ರಖ್ಯಾತರಗಿದ್ದಾರೆ. ಪಾಚಗಡದ ರಾಯನಾಕ, ಸುಭನಾಕ ವಾಘನಾಕ, ಮದನಾಕ ಏಸನಾಕ, ಧೋಂಡನಾಕ ಪುಂಡನಾಕ, ಮೊದಲು ಸಾತಾರಕ್ಕೆ ಸೇರಿದ್ದ ಸಾಂಗ್ಲಿ ಜಿಲ್ಲೆಯ ತಾಸಗಾವ ತಾಲೂಕಿನ ಕಾಳಂಬಿ ಗ್ರಾಮದ ಜಾಗೀರದಾರನಾಗಿದ್ದ ಶೂರ ಮೊದಲನೆ ಶಿದನಾಕ, ರಾಯನಾಕ ಮಹಾರ ಮೊದಲಾದವರ ಪಟ್ಟಿಯೇ ಇದೆ. ಇದರ ಮುಂದುವರಿಕೆಯಾಗಿ ಕೋರೆಗಾವ ಕದನ ಕಲಿಗಳಾದ ಮಹಾರ ಯೋಧರು ಕಾಣಿಸಿಕೊಳ್ಳುತ್ತಾರೆ.
1822 ರಲ್ಲಿ ಕೋರೆಗಾವದಲ್ಲಿ ಭೀಮಾ ನದಿಯ ದಂಡೆಯ ಮೇಲೆ ವಿಜಯಸ್ತಂಭವನ್ನು ನಿರ್ಮಿಸಲಾಗಿದೆ. ವಿಜಯಸ್ತಂಭದ ಮೇಲೆ “One of the proudest triumphs of the British Army in the East” ಎಂದು ಬರೆಯಲಾಗಿದೆ. ಅಂದರೆ ಭಾರತದ ಪೂರ್ವ ಪ್ರದೇಶಗಳಲ್ಲಿ ತನ್ನದಾಗಿಸಿಕೊಂಡಿರುವ ಹಲವಾರು ವಿಜಯಗಳಲ್ಲಿಯೇ ಈ ವಿಜಯವು ಬ್ರಿಟಿಷ ಸೇನೆ ಹೆಮ್ಮೆ ಪಡುವಂತಿದೆ ಎಂಬುದು ಅಲ್ಲಿ ಉಲ್ಲೇಖಿತವಾಗಿದೆ.
ಸ್ತಂಭದ ಬದಿಗಳಲ್ಲಿ ಇಂಗ್ಲೀಷ್ ಮತ್ತು ದೇವನಾಗರಿ ಲಿಪಿಯಲ್ಲಿ ಹುತಾತ್ಮರದ ವೀರಯೋಧರ ಹೆಸರುಗಳು ಕೆತ್ತಲ್ಪಟ್ಟಿವೆ. ಸೀನನಾಕ ಕಮಲನಾಕ, ರಾಮನಾಕ ಏಸನಾಕ, ಗೋಂದನಾಕ ಕೋಢೆನಾಕ, ರಾಮನಾಕ ಏಸನಾಕ, ಭಾಗನಾಕ ಹರನಾಕ, ಅಂಬರನಾಕ ಕಾನನಾಕ, ರೂಪನಾಕ ಲಖನಾಕ, ಗಣನಾಕ ಬಾಳನಾಕ, ಕಾಳನಾಕ ಕೋಂಡನಾಕ, ವಪನಾಕ ರಾಮನಾಕ, ವಿಟನಾಕ ಧಾಮನಾಕ, ರಾಜನಾಕ ಗಣನಾಕ, ವಪನಾಕ ಹರನಾಕ, ರೈನಾಕ ವಾನನಾಕ, ಗಣನಾಕ ಧರಮನಾಕ, ದೇವನಾಕ ಆನನಾಕ, ಗೋಪಾಳನಾಕ ಬಾಳನಾಕ, ಹರನಾಕ ಹೀರನಾಕ, ಜೇಠನಾಕ ದೈನಾಕ, ಗಣನಾಕ ಲಖನಾಕ ಎಂಬ ಅಲ್ಲಿಯ ಹೆಸರುಗಳೇ ನಮ್ಮ ಮೈ ಮನಗಳನ್ನು ರೋಮಾಂಚಿತಗೊಳಿಸುತ್ತವೆ. ಮರೆತು ಹೋದ ಇತಿಹಾಸವನ್ನು ಕಣ್ಮುಂದೆ ಕಟ್ಟಿ ಕೊಡುತ್ತವೆ.
ಬಹುಶಃ ಇಂತಹ ಮಹಾರ ವೀರರನ್ನು ಕಂಡೇ ಸಂತ ತುಕಾರಾಮರು, “ಮಹಾರಾಸಿ ಶಿವೆ / ಕೋಪೆ ತೋ ಬ್ರಾಹ್ಮಣ ನವ್ಹೆ/” ಎಂದು ತಮ್ಮ ಅಭಂಗದಲ್ಲಿ ಹೇಳಿದ್ದಾರೆ. ಅಂದರೆ ಬ್ರಾಹ್ಮಣರಿಗಿಂತ ಮಹಾರರು ಮಹಾಮಹಿಮರು ಎಂಬುದೇ ಇಲ್ಲಿಯ ಭಾವ.
ಡಾ. ಬಾಬಾಸಾಹೇಬ ಅಂಬೇಡ್ಕರರು ತಮ್ಮ ಅನುಯಾಯಿಗಳೊಂದಿಗೆ ಶಿರೂರ ಸಮೀಪದ ಭೀಮಾ-ಕೋರೆಗಾವಕ್ಕೆ ಬಂದು ವೀರ-ಪರಾಕ್ರಮದದ ಗತ ಸಾಹಸವನ್ನು ಸಾರುವ ವಿಜಯ ಸ್ತಂಭಕ್ಕೆ 1ನೇ ಜನೇವರಿ 1927 ರಂದು ಗೌರವ ವಂದನೆ ಸಲ್ಲಿಸಿದರು. ಆ ದಿನವನ್ನು ಕೋರೆಗಾವ ಕದನದ ಮಹಾರ ಕಲಿಗಳ ಸ್ಮøತಿದಿನವನ್ನಾಗಿ ಆಚರಿಸಿದರು. ಇದಕ್ಕಿಂತ ಮೊದಲು ಇತಿಹಾಸದಲ್ಲಿ ಮುಚ್ಚಿಹೋಗಿದ್ದ ಅಥವಾ ಮುಚ್ಚಿ ಹಾಕಲ್ಪಟ್ಟ ವಿಜಯ ಸ್ತಂಭದತ್ತ ಯಾರೂ ಹಾಯುತ್ತಿರಲಿಲ್ಲ ಕೂಡ.
ಆದರೆ ಯಾವಾಗ ಡಾ. ಬಾಬಾಸಾಹೇಬ ಅಂಬೇಡ್ಕರರು ಸ್ಮøತಿದಿನವನ್ನು ಆಚರಿಸಿದರೋ ಅಂದಿನಿಂದ ಇಂದಿನವರೆಗೆ ಪ್ರತಿವರ್ಷ ಜನೇವರಿ 1 ರಂದು ದೇಶದ ವಿವಿಧ ಭಾಗಗಳಿಂದ ಬರುವ ಅಸಂಖ್ಯಾತ ಜನ ಸಮೂಹ ಸ್ಮøತಿ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.. ಡಾ. ಬಾಬಾಸಾಹೇಬ ಅಂಬೇಡ್ಕರರು ಯಾವುದೇ ಮಹತ್ವದ ಕೆಲಸವಿದ್ದರೂ ಅದನ್ನೆಲ್ಲ ಬದಿಗೊತ್ತಿ ಜನೇವರಿ ಒಂದರಂದು ಕೋರೆಗಾವಕ್ಕೆ ಬಂದು ವಿಜಯ ಸ್ತಂಭಕ್ಕೆ ಗೌರವ ವಂದನೆ ಸಲ್ಲಿಸುತ್ತಿದ್ದರು.
ಹೀಗೆಲ್ಲ ಇದ್ದರೂ ಕೂಡ ಕೆಲವು ಸಮಯಸಾಧಕರು ಕೋರೆಗಾವ ಕದನದ ಬಗ್ಗೆ ಹೇಳುವುದೇನೆಂದರೆ `ಈ ಕದನ ನಮ್ಮದೇ ದೇಶದಲ್ಲಿಯ ನಮ್ಮದೇ ಬಂಧುಗಳ ವಿರುದ್ಧವಾಗಿತ್ತು ! ಆ ಕದನದ ಫಲವಾದರೂ ಏನು ?’ ಹೀಗೆ ಹೇಳುವವರಿಗೆ ಒಂದು ಸವಾಲನ್ನು ಈ ಸಂದರ್ಭದಲ್ಲಿ ಹಾಕಲೇಬೇಕೆನಿಸುತ್ತದೆ ; ಅಲ್ಲ ಸ್ವಾಮಿ, ತಮ್ಮ ಬಂಧುಗಳನ್ನು ಯಾರಾದರೂ ಗುಲಾಮರನ್ನಾಗಿ ಮಾಡಿಕೊಳ್ಳುತ್ತಾರೆಯೇ ? ತಮ್ಮ ಬಂಧುವಿನ ಹೆಣ್ಣುಮಗಳೊಬ್ಬಳ ಮಾನವನ್ನು ಕಳೆಯುತ್ತಾರೆಯೇ ? ತಮ್ಮ ಬಂಧುಗಳನ್ನು ಯಾರಾದರೂ ಅನ್ನ-ನೀರಿಗಾಗಿ ಚಡಪಡಿಸುವಂತೆ ಮಾಡುತ್ತಾರೆಯೇ ? ಸಾರ್ವಜನಿಕ ಜಾಗದಲ್ಲಿ ಅಡ್ಡಾಡಲು ನಿರ್ಬಂಧ ವಿಧಿಸಬಹುದೇ ? ತಮ್ಮ ಬಾಂಧವರನ್ನು ಯಾರಾದರೂ ಹೇಳಹೆಸರಿಲ್ಲದಂತೆ ನಾಶ ಮಾಡುವ ಕುತಂತ್ರ ಮಾಡಬಹುದೇ ? ತಾವೇ ಕೆಸರು ಎರಚಿ, ಅಪಹಾಸ್ಯ ಮಾಡಿ ನಗಬಹುದೇ ? ಈ ಪ್ರಕರಣಗಳು ನಡೆಯುತ್ತಲೇ ಇವೆ ಎಂದಾದರೆ ಅವರು ನಮ್ಮ ಬಂಧುಗಳು ಹೇಗಾಗುತ್ತಾರೆ ?
ಕೇವಲ ಬೆರಳೆಣಿಕೆಯಷ್ಟಿದ್ದ ಮಹಾರ ವೀರ ಯೋಧರು, ಪೇಶ್ವೆಗಳ ಬಲಾಢ್ಯ ಸೇನೆಯನ್ನು ಈ ಕೋರೆಗಾವ ಕದನದಲ್ಲಿ ಹೀನಾಯವಾಗಿ ಸೋಲಿಸಿದ್ದು ಸೋಜಿಗವಲ್ಲ. ಪೇಶ್ವೆಗಳಿಂದ ಉಂಟಾದ ಸಾಮಾಜಿಕ ಅನಿಷ್ಟ, ಅನ್ಯಾಯ ಮತ್ತು ಅಸ್ಪøಶ್ಯತೆಗಳಿಂದ ತಮಗಾದ ಶೋಷಣೆಗೆ ಪ್ರತಿಯಾಗಿ ಪ್ರತಿಕಾರ ಸಾಧಿಸಿದ ಈ ನಡೆ ಮಹಾರರ ಸ್ವಾಭಿಮಾನವನ್ನು ಎತ್ತಿ ಹಿಡಿಯುತ್ತದೆ. ಕೋರೆಗಾವ ಕದನದ ಗೆಲುವು ಎಂದರೆ ಅನ್ಯಾಯದ ವಿರುದ್ಧ ಪಡೆದ ಗೆಲುವೇ ಆಗಿದೆ.
ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರೂ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಿಸುತ್ತಾರೆ. “ಬ್ರಿಟಿಷರ ಪರವಾಗಿ ಮಹಾರ ಯೋಧರು ಯುದ್ಧ ಮಾಡಿದ್ದು ಅಭಿಮಾನ ಪಡುವ ಸಂಗತಿಯಲ್ಲದಿದ್ದರೂ ಮಹಾರ ಯೋಧರು ಬ್ರಿಟಿಷರ ಪರ ಯಾಕೆ ಹೋದರು ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡುವುದು ಸಹಜವೇ ಆಗಿದೆ. ಮಹಾರರು ಮತ್ತೇನು ಮಾಡಲು ಸಾಧ್ಯವಿತ್ತು ? ಹಿಂದುಗಳೆನಿಸಿಕೊಂಡವರು ಅವರನ್ನು ಕೀಳು ಎಂದು ಪರಿಗಣಿಸಿ ನಾಯಿ-ನರಿಗಳಿಗಿಂತಲೂ ಕಡೆಯಾಗಿ ವರ್ತಿಸಿದಾಗ ಆ ಅವಮಾನವನ್ನು ಸಹಿಸಿಕೊಂಡು ಎಷ್ಟು ದಿನ ಬದುಕುವುದು ? ಸ್ವಾಭಿಮಾನದ ನೆಲೆಯಲ್ಲಿ ಮತ್ತು ಹೊಟ್ಟೆಗೆ ಹಿಟ್ಟು ದೊರಕಿಸಿಕೊಳ್ಳಲು ಅವರು ಅನಿವಾರ್ಯವಾಗಿ ಬ್ರಿಟಿಷರ ಸೇನೆ ಸೇರಿದರೆಂಬುದನ್ನು ಪ್ರತಿಯೊಬ್ಬರು ಲಕ್ಷ್ಯದಲ್ಲಿಡಬೇಕು” ಎಂಬ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಮಾತುಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕು.
ಮಹಾರ ಯೋಧರು ಮುಂಚಿನಿಂದಲೂ ಅಂದರೆ ಶಿವಾಜಿಯ ಕಾಲದಿಂದಲೂ ಮರಾಠಾ ಸೇನೆಯಲ್ಲಿ ಪ್ರಾಮಾಣಿಕತೆಯಿಂದ, ಪರಾಕ್ರಮದಿಂದ ದುಡಿದವರು. ಆದರೆ ಎರಡನೇ ಬಾಜಿರಾವ ಗದ್ದುಗೆ ಏರಿದಾಗ ಅನುಭವಿಸಿದ ಜಾತಿಯತೆಯ ತಾರತಮ್ಯತೆ ದಲಿತರನ್ನು ಸಹಜವಾಗಿಯೇ ಕೆರಳಿಸಿತ್ತು. ಆ ಸಂದರ್ಭದಲ್ಲಿ ಅದನ್ನು ಹೇಳಲಾಗಿತ್ತು ಕೂಡ.
ಎರಡನೇ ಬಾಜಿರಾವನ ಬದಲಿಗೆ ಬೇರೆಯವರು ಯಾರಾದರೂ ಸಮರ್ಥರು ಪೇಶ್ವೆಗಳಾದರೆ ಮಾತ್ರ ತಾವು ತಮ್ಮ ತಾಯ್ನೆಲವನ್ನು ಪ್ರಾಣವನ್ನೇ ಬಲಿ ಕೊಟ್ಟಾದರೂ ಕೂಡ ಕಾಪಾಡಲು ಸಿದ್ಧವಿರುವುದಾಗಿ ಪರಾಕ್ರಮಿ ಶಿದನಾಕ ಮನವಿ ಮೂಲಕ ಪ್ರಕಟಿಸಿದ್ದ. ಪೇಶ್ವೆ ಈ ವಿನಂತಿಯನ್ನು ಅತ್ಯಂತ ತಿರಸ್ಕಾರದಿಂದ ತಳ್ಳಿ ಹಾಕಿದ.
ಆದ್ದರಿಂದಲೇ ಮಹಾರ ಯೋಧರು ಬ್ರಿಟಿಷ ಪಡೆ ಸೇರಿ ಪೇಶ್ವೆಯನ್ನು ಮುಗಿಸಲು ಮುಂದಾದರು. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ ಯೋಧರು, ತಮ್ಮ ಮೇಲೆ ಅಮಾನವೀಯವಾದ ಬಂಧನಕಾರಿ ನಿಯಮಗಳಿಂದ ಅಸ್ಪøಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಕದನದಲ್ಲಿ ಮಣ್ಣು ಮುಕ್ಕಿಸಿದರು.
ಪ್ರತಿ ವರ್ಷ ಜನೇವರಿ ಒಂದರಂದು ದೇಶದ ಮೂಲೆ ಮೂಲೆಗಳಿಂದ ಬೃಹತ್ ಪ್ರಮಾಣದಲ್ಲಿ ಆಗಮಿಸುವ ದಲಿತರು ಮೊದಲು ವಿಜಯ ಸ್ತಂಭಕ್ಕೆ ಗೌರವ ವಂದನೆ ಸಲ್ಲಿಸುತ್ತಾರೆ. ನಂತರ ಮೈದಾನದ ಆಟಗಳು ಆರಂಭಗೊಳ್ಳುತ್ತವೆ. ಮಧ್ಯಾಹ್ನ ಸಹಭೋಜನ ಕೂಡ ಇರುತ್ತದೆ. ಭೋಜನದ ನಂತರ ಒಂದಿಷ್ಟು ವಿಶ್ರಾಂತಿ ಪಡೆದುಕೊಂಡು ಸಂಜೆಯ ಇಳಿ ಹೊತ್ತಿನ ಸಮಯದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಗೆದ್ದವರಿಗೆ ಬಹುಮಾನ ವಿತರಣೆಯಾಗುತ್ತದೆ. ಈ ಸಂದರ್ಭದಲ್ಲಿ ಸಭೆಯೂ ನಡೆಯುತ್ತದೆ.
ನಾವು ಆ ವೀರ ವಿಜಯಸ್ತಂಭದ ಹತ್ತಿರ ಹೋಗಿ ಗಂಟಲು ಹರಿಯುವಂತೆ ಘೋಷಣೆ ಕೂಗುತ್ತೇವೆ. ಇದನ್ನು ತಪ್ಪೆಂದು ನಾನು ಹೇಳುತ್ತಿಲ್ಲ. ಒಳ್ಳೆಯ ಸಂಗತಿಯೇ ಸರಿ ! ಆದರೆ ಅದೇ ಛಲದಿಂದ ; ಅದೇ ಮನಸ್ಸಿನಿಂದ ನಾವು ನಮ್ಮ ಪೂರ್ವಿಕರ ಪರಾಕ್ರಮವನ್ನು ಉಳಿಸಿಕೊಂಡು ಬರಬೇಕು ಎಂದು ಕೂಡ ನಮಗೆ ಆಗ ಅನ್ನಿಸಬೇಕಲ್ಲವೇ ? ಅನ್ನಿಸಿದರೂ ಆ ಪರಾಕ್ರಮ ಶಕ್ತಿ ಇಂದು ನಮ್ಮಲ್ಲಿ ಉಳಿದಿದೆಯೇ ? ಉಳಿಯದಿದ್ದರೆ ಅದಕ್ಕಾಗಿ ಚಿಂತಿಸುವ ಕನಿಷ್ಟ ಸೌಜನ್ಯವಾದರೂ ನಮಗೆ ಇರಬೇಡವೇ ? ಜೀವದ ಹಂಗು ತೊರೆದು ಅವರು ಅಂದರೆ ನಮ್ಮ ಪೂರ್ವಿಕರು ತಲಾ ನಲವತ್ತು ಸೈನಿಕರಿಗೆ ಒಬ್ಬ ಮಹಾರ ಯೋಧರಾಗಿ ಘನಘೋರ ಕದನದಲ್ಲಿ ವಿಜಯಿಯಾಗುತ್ತಾರೆ !
ಹಾಗಾದರೆ ಇಂದು ನಮ್ಮ ಯುದ್ಧ ಎಲ್ಲಿ ಆಗಬೇಕಿದೆ ? ಯಾರೊಂದಿಗೆ ಆಗಬೇಕಿದೆ ? 500 ಮಹಾರರು ಒಂದೇ ಜೀವವಾಗಿ ಹೋರಾಟ ಮಾಡಿದ್ದರಿಂದಲೇ ವಿಜಯಶ್ರೀ ಅವರಿಗೆ ಒಲಿದಳು. ಹಾಗಾದರೆ ಅಂಥ ಶಕ್ತಿ ಇಂದು ನಮ್ಮಲ್ಲಿ ಉಳಿದಿದೆಯೇ ? ನಾವು ಸ್ವಾರ್ಥಿ ಮತ್ತು ಢೋಂಗಿ ಮಂದಿಯಲ್ಲ ಅಲ್ಲವೇ ?
ನಮ್ಮ ಒಗ್ಗಟ್ಟಿನ (ಏಕತೆಯ) ಇತಿಹಾಸವನ್ನು ನಾವು ಮರೆತಿದ್ದೇವೆ ಅಲ್ಲವೇ ? ಇದರಿಂದಲೇ ಶೋಷಣೆ ಮಿತಿ ಮೀರುತ್ತದೆಯಲ್ಲವೇ ? ನಾವು ನಮ್ಮ ನಮ್ಮಲ್ಲಿಯೇ ಜಗಳವಾಡುತ್ತ ಕುಳಿತ್ತಿದ್ದೇವೆ ಎಂಬುದನ್ನು ಕಂಡಾಗ ಅನಿಸುತ್ತದೆ ; ಯಾರ್ಯಾರು ಕಲಿತರೋ ಅವರಲ್ಲಿಯ ಕೆಲವರು ತಮ್ಮ ಹೊಟ್ಟೆಯನ್ನಷ್ಟೇ ದೊಡ್ಡದಾಗಿಸಿಕೊಂಡರು ! ತಮ್ಮ ಸಮಾಜಕ್ಕೆ ತಾವೇನಾದರೂ ಋಣ ಸಂದಾಯ ಮಾಡಬೇಕಿದೆಯೇ ಎಂಬ ಅರಿವು ಅವರಲ್ಲಿ ಮಕಾಡೆ ಮಲಗಿ ಬಿಟ್ಟಿದೆ !
ನಾವು ನಮ್ಮ ಶೌರ್ಯದ ಇತಿಹಾಸವನ್ನೇ ಮರೆತಿದ್ದೇವೆ ; ಹತ್ತು ಜನ ಹತ್ತು ಕಡೆ ಮುಖ ಮಾಡಿ ನಿಂತಿದ್ದೇವೆ ! ಒಂದುಗೂಡುವ ; ಒಗ್ಗಟ್ಟು ಪ್ರದರ್ಶಿಸುವ ಮಾತೇ ಇಲ್ಲ ! ಅದರ ಪರಿಣಾಮವನ್ನೇ ನಾವು ಅನುಭವಿಸುತ್ತಿದ್ದೇವೆ. ಸಾಮಾನ್ಯನಾದ ನನ್ನನ್ನೂ ಸೇರಿಸಿ ನಮ್ಮವರೇ ಆಗಿರುವ ಮುಖಂಡರೂ ಇದಕ್ಕೆ ಹೊಣೆಗಾರರಾಗಿದ್ದಾರೆ ಎನಿಸುವುದಿಲ್ಲವೇ ?`ಅಸಹಾಯಕವಾಗಿ ಬದುಕುವುದಕ್ಕಿಂತ ಅವ್ವನ ಹೊಟ್ಟೆಯಲ್ಲಿಯೇ ಸತ್ತು ಹೋಗುವುದು ಮೇಲು’ ಎಂದು ಡಾ. ಬಾಬಾಸಾಹೇಬ ಅಂಬೇಡ್ಕರ್ರು ಹೇಳಿದ್ದರು.
ಇಂಥ ಮರ್ಮಭೇದಕ ಮಾತುಗಳೇನಾದರೂ ನಿಮಗೆ ತಟ್ಟಿದ್ದಾವೆಯೇ ? ಇಲ್ಲ ! ನಾವೆಲ್ಲ ತಟಸ್ಥರಾಗಿ ಸಂಬಳ ಪಡೆದು ಬೆಚ್ಚಗೆ ಹೊದ್ದುಕೊಂಡು ಮಲಗಿದ್ದೇವೆ ; ಎಚ್ಚರಾಗಿದ್ದೇವೆ ಎನ್ನುವ ಕೆಲವರು ವಿನಾಕರಣ ತಮ್ಮ ತಮ್ಮಲ್ಲಿ ಜಗಳ ಮಾಡಿಕೊಳ್ಳುತ್ತಿದ್ದಾರೆ ; ಇನ್ನೂ ಕೆಲವರು ಮತ್ಸರದಿಂದ ಪರಸ್ಪರ ಮಾತನಾಡುವುದನ್ನೇ ಬಿಟ್ಟುಬಿಟ್ಟಿದ್ದಾರೆ.
ಬಂಧುಗಳೇ,
ಈ ಸಂದರ್ಭದಲ್ಲಿ ನಾನು ವಿಶ್ವವಿದ್ಯಾಲಯ ಮಟ್ಟದಲ್ಲಿ ನಿಂತು ಒಂದು ಮಾತು ಹೇಳುತ್ತಿದ್ದೇನೆ. ನೀವೆಲ್ಲ ಸ್ವಾಭಿಮಾನಿ ದಲಿತರೇ ಆಗಿದ್ದರೆ, ಕಿಂಚಿತ್ತಾದರೂ ಪಡೆದುಕೊಂಡಿದ್ದರ ಋಣ ತೀರಿಸುವ ಕಾರ್ಯವನ್ನು ಯಾಕೆ ಮಾಡಬಾರದು ? ಶಿಕ್ಷಕೇತರ ಸಿಬ್ಬಂದಿಯನ್ನು ಬಿಡಿ ; ಯುಜಿಸಿ ಸಂಬಳ ಪಡೆಯುತ್ತಿರುವ ದಲಿತ ಪ್ರಾಧ್ಯಾಪಕರು ತಿಂಗಳಿಗೆ ಕೇವಲ ನೂರು ರುಪಾಯಿ ನೀಡಿ ಒಂದು ನಿಧಿಯನ್ನು ಆರಂಭಿಸಬೇಕು ; ಅಲ್ಲಿ ಸೇರುವ ಹಣ ದಲಿತ ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸದುಪಯೋಗವಾಗಬೇಕು ಎನಿಸುವುದಿಲ್ಲವೆ ? ಒಳಜಾತಿಗಳನ್ನೇ ಮುಂದು ಮಾಡಿಕೊಂಡು ಪರಸ್ಪರ ದ್ವೇಷ-ಜಗಳ ಮರೆಯಬೇಕು ಎನಿಸುವುದಿಲ್ಲವೇ ? ವಿದ್ಯಾರ್ಥಿಗಳನ್ನೂ ಹಾದಿ ತಪ್ಪಿಸುವ ಚಾಳಿಯನ್ನು ಬಿಟ್ಟು ಕೂಡಿ ಬಾಳುವ ಕನಸನ್ನು ನನಸು ಮಾಡಿಕೊಳ್ಳಲು ಸಾಧ್ಯವಿಲ್ಲವೇ ? ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ.
ದಯವಿಟ್ಟು ಒಂದು ಮಾತನ್ನು ಮಾತ್ರ ನಾನು ಇಲ್ಲಿ ಹೇಳಬಯಸುತ್ತೇನೆ ; ಮೊಟ್ಟಮೊದಲು ನೀವು ನಿಮ್ಮ ನಿಮ್ಮ ಗೂಡುಗಳನ್ನು ಬಿಟ್ಟು ಹೊರಬನ್ನಿ ; ಪೊರೆಯನ್ನು ಹರಿದೊಗೆಯಿರಿ ಸೋದರ ಸಂಬಂಧಗಳನ್ನು ಬೆಸೆಯಲು ಮುಂದಾಗಿ ! ನಮ್ಮ ಪೂರ್ವಿಕರ ಇತಿಹಾಸದ ಅರಿವು ಇದ್ದುದ್ದೇ ಆದಲ್ಲಿ ಇದು ಅಸಾಧ್ಯವೇನೂ ಅಲ್ಲ ಎಂಬುದು ನನ್ನ ಅಚಲ ವಿಶ್ವಾಸವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.
ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ
ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.
ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.
‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.
‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.
ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ
ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.
ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


