Connect with us

ಭಾವ ಭೈರಾಗಿ

ಕವಿತೆ | ಭೂತ

Published

on

ಗೋಪಾಲಕೃಷ್ಣ ಅಡಿಗ

ಇಂದು (ಫೆ.18) ಗೋಪಾಲಕೃಷ್ಣ ಅಡಿಗರ ಹುಟ್ಟು ಹಬ್ಬ. ಅವರ ನೆನಪಿಗಾಗಿ ಅವರದೇ ಪದ್ಯ ‘ಭೂತ’. ಓದಿ. ಅಭಿಪ್ರಾಯ ತಿಳಿಸಿ.


  • ಗೋಪಾಲಕೃಷ್ಣ ಅಡಿಗ

-೧-
ಕಾಡುತ್ತಿವೆ ಭೂತಕಾಲದ ಭ್ರೂಣಗೂಢಗಳು :
ಹುಗಿದ ಹಳಬಾವಿಯೊಳ ಕತ್ತಲ ಹಳಸುಗಾಳಿ
ಅಂಬೆಗಾಲಿಟ್ಟು ತಲೆಕೆಳಗು ತೆವಳುತ್ತೇರಿ
ಅಳ್ಳಳ್ಳಾಯಿ ಜಪಿಸುವ ಬಿಸಿಲಕೋಲಿಗೇರಿ ತೆಕ್ಕಾಮುಕ್ಕಿ
ಹಾಯುತ್ತಿದೆ ಆಗಾಗ್ಗೆ ತುಳಸಿವೃಂದಾವನದ ಹೊದರಿಗೂ.
ತೊಟ್ಟು ಕಳಚಿದ ಹೊಕ್ಕುಳಿನ ಬಳ್ಳಿ ದಡದಲ್ಲಿ
ಕತ್ತರಿಸಿದಿಲಿಬಾಲ ಮಿಡುಕುತ್ತದೆ.
ಕತ್ತಲಲ್ಲೇ ಕಣ್ಣುನೆಟ್ಟು ತಡಕುವ ನನಗೆ
ಹೊಳೆವುದು ಹಠಾತ್ತನೊಂದು ಚಿನ್ನದ ಗೆರೆ :
ಅಮವಾಸ್ಯೆ ಕಂದಕಗಳಲ್ಲಿ ಹೇಗೋ ಬಿದ್ದು ಒದ್ದಾಡುತ್ತಿರುವ ಗರಿ ಸುಟ್ಟ ತಾರೆ.

-೨-

ವರ್ತಮಾನಪತ್ರಿಕೆಯ ತುಂಬ ಭೂತದ ಸುದ್ದಿ :
ನೀರ ಮೇಲಕ್ಕೊಂದು ಮಡಿ, ಕೆಳಕ್ಕೇಳು ಮಂಜಿನ ಶಿಖರಿ ;
ಇದ್ದಕ್ಕಿದ್ದಂತಕಸ್ಮಾತ್ತಗ್ನಿನುಡಿಯುಗಿದ
ಮಂಜು ಮುಸುಕಿದ ಮುಗ್ಧ ಜ್ವಾಲಾಮುಖಿ.
ಪತ್ರಿಕೆಯ ಮುಚ್ಚಿದರು—-
ಸದ್ದಿರದ ಖಾಲಿಕಂಕಾಲ ಕೋಣೆಗಳಲ್ಲಿ
ತಾಳವಿಲ್ಲದೆ ಮೂಕಸನ್ನೆ ಮುಲುಕುವ ತಿರುಗುಮುರುಗು ಪಾದದ ಪರಿಷೆ
ಅಂತರಾಳಗಲ್ಲಿ ನಿಂತ ನೀರುಗಳಲ್ಲಿ
ಕಂತಿ ಕೈಬಡೆವ ಬೀಜಾಣುಜಾಲ ;
ಕಾಳರಂಗಸ್ಥಳದ ಫರದೆ ಮುರಿಮರೆಯಲ್ಲಿ
ಮಾತು ಹೆಕ್ಕುವ ಮಿಣುಕು ಮೊನೆಯ ಬಾಲ—– ಇವು
ಬಯಸವೆ ಹೊರಂಗಳದ ರಂಗುರಂಗಿನ ಬಳ್ಳಿ ಹೂವು ಹೊದರ ?

-೩—

ನೀರು ನೆಲೆಯಿಲ್ಲದವರು ಪಿತೃಪಿತಾಮಹರು,
ಗಾಳಿಹೆದ್ದೆರೆಲಾಳಿಗಂಟಿ ನೆಲಸಿಕ್ಕಿಯೂ ದಕ್ಕದವರು.
ಉಚ್ಛಾಟನೆಯ, ತರ್ಪಣದ ತಂತ್ರ ಬಲ್ಲೆ ; ಆದರು ಮಂತ್ರ ಮರೆತೆ ;
ಬರಿದೇ ಹೀಗೆ ಆಡಿಸುತ್ತಿದ್ದೇನೆ ಮಂತ್ರದಂಡ.
ಪುರೋಹಿತರ ನೆಚ್ಚಿ ಪಶ್ಚಿಮಬುದ್ಧಿಯಾದೆವೋ ;
ಇನ್ನಾದರೂ ಪೂರ್ವಮೀಮಾಂಸೆ ಕರ್ಮಕಾಂಡಗಳನ್ನು ಬಗೆಯಬೇಕು.
ಅಗೆವಾಗ್ಗೆ ಮೊದಲು ಕೋಶಾವಸ್ಥೆ ಮಣ್ಣು ;
ಕೆಳಕ್ಕೆ ತಳಕ್ಕೆ ಗುದ್ದಲಿಯೊತ್ತಿ ಕುಕ್ಕಿದರೆ
ಕಂಡೀತು ಗೆರೆ ಮಿರಿವ ಚಿನ್ನದದಿರು,
ಹೊರತೆಗೆದು ಸುಟ್ಟು ಸೋಸುವಪರಂಜಿ ವಿದ್ಯೆಗಳ
ಇನ್ನಾದರೂ ಕೊಂಚ ಕಲಿಯಬೇಕು :
ಹೊನ್ನ ಕಾಯಿಸಿ ಹಿಡಿದು ಬಡಿದಿಷ್ಟದೇವತಾ—
ವಿಗ್ರಹಕ್ಕೊಗ್ಗಿಸುವ ಅಸಲು ಕಸಬು.

-೪—

ಬಾವಿಯೊಳಗಡೆ ಕೊಳೆವ ನೀರು ; ಮೇಲಕ್ಕಾವಿ ;
ಆಕಾಶದುದ್ದವೂ ಅದರ ಕಾರಣ ಬೀದಿ ;
ಕಾರ್ಮುಗಿಲ ಖಾಲಿಕೋಣೆಯ ಅಗೋಚರ ಬಿಂದು
ನವಮಾಸವೂ ಕಾವ ಭ್ರೂಣರೂಪಿ—
ಅಂತರಪಿಶಾಚಿ ಗುಡುಗಾಟ, ಸಿಡಿಲಿನ ಕಾಟ—
ಭೂತರೂಪಕ್ಕೆ ಮಳೆ ವರ್ತಮಾನ ;
ಅಗೆದುತ್ತ ಗದ್ದೆಗಳ ಕರ್ಮಭೂಮಿಯ ವರಣ ;
ಭತ್ತಗೋಧುವೆ ಹಣ್ಣುಬಿಟ್ಟ ವೃಂದಾವನ,
ಗುಡಿಗೋಪುರಗಳ ಬಂಗಾರ ಶಿಖರ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಆತ್ಮಕತೆ | ತುರ್ತು ಪರಿಸ್ಥಿತಿ ಮತ್ತು ನಮ್ಮೂರಿನ ಭೂ ಹೋರಾಟ

Published

on

  • ರುದ್ರಪ್ಪ ಹನಗವಾಡಿ

ದೇಶದಾದ್ಯಂತ ತುರ್ತುಪರಿಸ್ಥಿತಿ ಇತ್ತು. ಶಾಲಾ ಕಾಲೇಜುಗಳಲ್ಲಿ ಪಾಠ ಪ್ರವಚನಗಳು ನಿಗದಿಯಂತೆ ನಡೆಯುತ್ತಿದ್ದವು. ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾಂಗ್ರೆಸ್ ವಿರೋಧಿ ರಾಜಕೀಯ ನಾಯಕರನ್ನು ಬಂಧಿಸಿ ಜೈಲಿನಲ್ಲಿರಿಸಿದ್ದರು. ಇಂದಿರಾ ಗಾಂಧಿಯವರ 20 ಅಂಶದ ಕಾರ್ಯಕ್ರಮಗಳು ವಿಶೇಷವಾಗಿ ದಲಿತ ಹಿಂದುಳಿದವರ ಪರವಾಗಿದ್ದುದನ್ನು ಮುಖ್ಯಮಂತ್ರಿ ದೇವರಾಜ ಅರಸು ಅವರು ಒತ್ತಿ ಹೇಳುತ್ತಿದ್ದರು ಮತ್ತು ತುರ್ತು ಪರಿಸ್ಥಿತಿಯನ್ನು ಸಮರ್ಥಿಸಿಕೊಂಡು ರಾಜ್ಯಾಡಳಿತವನ್ನು ನಡೆಸುತ್ತಿದ್ದರು.

ದೇವರಾಜ ಅರಸು ಅವರು ಕರ್ನಾಟಕದಲ್ಲಿ ಹಿಂದೆಂದೂ ನೀಡಿರದಿದ್ದ ವಿಶೇಷ ಸವಲತ್ತುಗಳನ್ನು ದಲಿತರು, ಹಿಂದುಳಿದವರಿಗೆ ಮತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿದ್ದರು. ಹಾಗೆ ಹೇಳುತ್ತಲೂ ಇದ್ದರು. ಅದು ನಿಜವೂ ಆಗಿತ್ತು. ಆದರೆ ನಾವೆಲ್ಲ ತುರ್ತುಪರಿಸ್ಥಿತಿಯ ವಿರುದ್ಧವಾಗಿ ಕೆಲಸ ಮಾಡುತ್ತಿದ್ದೆವು.

ನಮ್ಮ ಊರಿನಲ್ಲಿ ವೀರಭದ್ರ ದೇವರ ಚಾಕರಿ (ಮ್ಯಾಳ) ಮಾಡುತ್ತಿದ್ದ ಕಾರಣ ಹದಿನೇಳು ಎಕರೆ ವೀರಭದ್ರ ದೇವರ ಹೆಸರಿನಲ್ಲಿದ್ದುದನ್ನು ನಮ್ಮ ಎಲ್ಲ ಆರು ಕುಟುಂಬಗಳಿಗೆ ಊರಿನ ಪ್ರಮುಖರು ನಾವಿನ್ನು ಹುಟ್ಟುವ ಮುಂಚೆಯೇ ಹಂಚಿ ಕೊಟ್ಟಿದ್ದರು. ಅದರಲ್ಲಿ ಅಪ್ಪನಿಗೆ ಸುಮಾರು ನಾಲ್ಕು ಎಕರೆಯಷ್ಟನ್ನು ನೀಡಿದ್ದು ಸಾಗುವಳಿ ಮಾಡಿಕೊಂಡು ಬರುತ್ತಿದ್ದೆವು. ಈ ನಡುವೆ ಭೂಸುಧಾರಣಾ ಕಾನೂನು ಜಾರಿ ಮಾಡುವ ಬಗ್ಗೆ ಅರಸು ಸರ್ಕಾರ ವಿಶೇಷವಾಗಿ ಭೂನ್ಯಾಯ ಮಂಡಳಿಯನ್ನು ರಚಿಸಿತ್ತು. ಇದನ್ನರಿತ ನಮ್ಮವರೆಲ್ಲ ಸೇರಿ ನಮ್ಮ ಅಣ್ಣ ತಿಪ್ಪಣ್ಣನ ಪ್ರಯತ್ನದಿಂದ ಸರ್ಕಾರ ರಚಿಸಿದ್ದ ಭೂನ್ಯಾಯ ಮಂಡಳಿಯ ಮುಂದೆ ಎಲ್ಲ ಆರು ಜನರೂ ತಮಗೆ ಭೂಮಿಯ ಹಕ್ಕು ನೀಡಲು ನಮೂನೆ 7ರ ಅರ್ಜಿ ಸಲ್ಲಿಸಿದ್ದರು.

ಭೂನ್ಯಾಯ ಮಂಡಳಿಯ ಮುಂದೆ ಅರ್ಜಿ ಹಾಕಿದ ವಿಷಯ ಊರಲ್ಲಿ ದೊಡ್ಡ ಅಸಮಾಧಾನದ ಕಿಚ್ಚನ್ನು ಮೂಡಿಸಿತ್ತು. ಈ ನಡುವೆ ನಮಗಾಗಿ ಕೊಟ್ಟಿದ್ದ 17 ಎಕರೆಯಲ್ಲಿ ಮಧ್ಯ ಭಾಗದಲ್ಲಿ 4 ಎಕರೆಯನ್ನು ಕಬಳಿಸುವಷ್ಟು ರಾಷ್ಟ್ರೀಯ ಹೆದ್ದಾರಿಯು ದಾವಣಗೆರೆಯಿಂದ ಹುಬ್ಬಳ್ಳಿವರೆಗೆ ಬೈಪಾಸ್ ರಸ್ತೆಗಾಗಿ ಸರ್ಕಾರ ವಶಪಡಿಸಿಕೊಂಡಿತ್ತು. ಸರ್ಕಾರದಿಂದ ನೀಡಿದ ನಾಲ್ಕು ಎಕರೆ ಪರಿಹಾರದ ಹಣವನ್ನು ಕೂಡ ದೇವಸ್ಥಾನದವರೇ ತೆಗೆದುಕೊಂಡಿದ್ದರು. ಉಳಿದಿದ್ದ 13 ಎಕರೆಯಲ್ಲಿ ಮತ್ತೆ ಪುನಃ ಮರು ಹಂಚಿಕೆ ಮಾಡಿಕೊಂಡು ಆರು ಜನರು ಸುಮಾರು ಎರಡೆರಡು ಎಕರೆಗಳಷ್ಟು ಸಾಗುವಳಿ ಮಾಡುತ್ತಿದ್ದರು.
ದೇವಸ್ಥಾನ ಧರ್ಮದರ್ಶಿ ಕಮಿಟಿಯಲ್ಲಿ ಊರಿನ ಹಿರಿಯರಿದ್ದರೂ ಉಳಿದಿರುವ ಭೂಮಿಯನ್ನು ನಮ್ಮವರಿಂದ ಬಿಡಿಸುವುದು ಮತ್ತು ಪ್ರತಿ ಮಂಗಳವಾರ ಗುಡಿಯಲ್ಲಿ ಮಾಡುತ್ತಿರುವ ಮ್ಯಾಳಗಳನ್ನು ನಿಲ್ಲಿಸಬೇಕೆಂದು ಚರ್ಚೆ ಆಗ ಊರಲ್ಲಿ ನಡೆಯುತ್ತಿತ್ತು. ಅವರೆಲ್ಲರ ಚರ್ಚೆಗಳ ಮಧ್ಯೆ ಮ್ಯಾಳದವರು ನಿಲ್ಲಿಸದೆ ಪ್ರತಿ ಮಂಗಳವಾರ ತಪ್ಪಿಸದೆ ಗುಡಿಗೆ ಹೋಗಿ ಎಂದಿನಂತೆ ಮ್ಯಾಳ ಮಾಡಿ ಬರುತ್ತಿದ್ದರು.

ನಮ್ಮೂರ ಚಲುವಾದಿಗಳಿಗೆ ಈ ರೀತಿಯ ಧೈರ್ಯವಿರಲಿಲ್ಲ. ಇವೆಲ್ಲದರ ಹಿಂದಿನ ಯೋಜಕ ಮೈಸೂರಲ್ಲಿ ಓದುತ್ತಿರುವ ಹುಡುಗ ನಾನೇ ಎಂದು ಊರವರು ಮಾತಾಡಿಕೊಂಡರು. ಅವನು ಊರಿಗೆ ಯಾವ ದಾರಿಯಲ್ಲಿ ಬರುತ್ತಾನೋ ಕಾದು ಕುಳಿತು ಕಾಲು ಮುರಿಯಬೇಕೆಂಬ ಯೋಜನೆ ಕೂಡ ಹಾಕಿಕೊಂಡಿದ್ದರಂತೆ. ಆದರೆ ಏಕಾಂಗಿಯಾಗಿ ಓಡಾಡುತ್ತಿದ್ದ ನನಗೆ ಒಳಗೊಳಗೆ ಅಳುಕು ಇದ್ದರೂ ನಾನೇನು ತಪ್ಪು ಮಾಡುತ್ತಿಲ್ಲ ಎಂಬ ತಿಳುವಳಿಕೆ ಧರ‍್ಯ ನೀಡುತ್ತಿತ್ತು. ಆದರೆ ಊರಿಗೆ ಬಂದು ಹೊರಗೆ ಓಡಾಡುತ್ತಿದ್ದರೆ ನಮ್ಮವರೆಲ್ಲ ದೂರದಲ್ಲಿದ್ದುಕೊಂಡೇ ನನ್ನನ್ನು ಊರಲ್ಲಿರುವ ತನಕ ವಿಶೇಷವಾಗಿ ಕವರ್ ಮಾಡುತ್ತಿದ್ದರು.

ಇದಕ್ಕೂ ಮುಂಚೆ ನಾನಿನ್ನು ಬಿ.ಎ.ನಲ್ಲಿ ಓದುತ್ತಿರುವಾಗ ಸರ್ಕಾರದ ವತಿಯಿಂದ ನಮ್ಮ ಮನೆಯ ಹತ್ತಿರದಲ್ಲೇ ಸಾರ್ವಜನಿಕರಿಗಾಗಿ ಕುಡಿಯಲು ಒಂದು ತೆರೆದ ಬಾವಿಯನ್ನು ತೆಗೆದಿದ್ದರು. ಊರಲ್ಲಿದ್ದ ಎರಡು ಬಾವಿಗಳಿಂದ ನೀರು ಸೇದುತ್ತಿದ್ದ ಮೇಲ್ಜಾತಿಗಳ ಜನರಿಂದ ನಮ್ಮವರೆಲ್ಲ ಹೊಯ್ ನೀರು ತರುತ್ತಿದ್ದರು. ಅಂದರೆ ಮೇಲ್ಜಾತಿಯವರಿಂದ ನೀರು ಸೇದಿ ಇವರ ಕೊಡಗಳಿಗೆ ನೀರು ಹಾಕಬೇಕು, ಆಗ ಇವರ ಮನೆಗಳಿಗೆ ತೆಗೆದುಕೊಳ್ಳಬೇಕು. 1936ರಲ್ಲಿ ಸರ್ಕಾರ ನಮಗೊಂದು ರಂಗಜ್ಜನ ಮಠದ ಹತ್ತಿರ ಬಾವಿ ತೆಗೆಸಿತ್ತು. ಅದು ನಮ್ಮ ಮನೆಗಳಿಗೆ ಅರ್ಧ ಕಿಲೋಮೀಟರ್ ದೂರದಲ್ಲಿತ್ತು. ಆದರೆ ಅಲ್ಲಿನ ನೀರು ಕುಡಿಯಲು ಯೋಗ್ಯವಾಗಿರಲಿಲ್ಲ.

ಮನೆಯ ಹತ್ತಿರವಿರುವ ಬಾವಿಯನ್ನು ವಿಧ್ಯುಕ್ತವಾಗಿ ಉದ್ಘಾಟಿಸುವ ಮುನ್ನ ನಾನು ನಮ್ಮಲ್ಲಿದ್ದ ಹಸುವಿನ ಜೊತೆ ಆ ಹೊಸ ಬಾವಿಯಿಂದ ನೀರು ಸೇದಿ ಅದಕ್ಕೆ ಕುಡಿಸಿ ನಾನು ಅಲ್ಲೇ ಸ್ನಾನ ಮಾಡಿಕೊಂಡು ಬರುತ್ತಿದ್ದೆ. ನಾನಿರುವಾಗ ಯಾರೂ ಮಾತಾಡದೆ ಇದ್ದವರು, ನಾನು ಮೈಸೂರಿಗೆ ವಾಪಸ್ ಓದಲು ಹೋದಾಕ್ಷಣ ಮಾರನೆ ದಿನ ನಮ್ಮ ಮನೆಯ ಹೆಣ್ಣು ಮಕ್ಕಳು ನೀರಿಗೆ ಹೋದಾಗ ಹಗ್ಗ ಕೊಡಪಾನಗಳನ್ನು ಕಿತ್ತು ಬಿಸಾಕಿ ನೀರು ಸೇದಲು ಬಿಟ್ಟಿರಲಿಲ್ಲ. ಆಗಿನ್ನು ಅಪ್ಪ ಇದ್ದ. ‘ನೀನು ಊರ ಉಸಾಬರಿಗೆ ಬರಬೇಡ ನಿನ್ನ ಓದು ನೀನು ಮಾಡಿಕೊಂಡು ಸುಮ್ಮನಿರು’ ಎಂದು ಪತ್ರ ಬರೆಸಿ ಸಮಾಧಾನ ಹೇಳಿದ್ದ. ಆದರೂ ನಾನು ಆಗಿರುವ ಅವಮಾನದ ಬಗ್ಗೆ ಚಿಂತಿಸುತ್ತಿದ್ದಾಗ ಒಂದು ದಿನ ಮೈಸೂರಿಗೆ ಬಂದಿದ್ದ ಕಂದಾಯ ಮಂತ್ರಿಗಳಾಗಿದ್ದ ಬಸವಲಿಂಗಪ್ಪನವರ ಹತ್ತಿರ ಹೋಗಿ, ನಮ್ಮೂರಲ್ಲಿ ಸಾರ್ವಜನಿಕ ಬಾವಿಯಿಂದ ನೀರು ಸೇದಲು ಲಿಂಗಾಯತರು ತೊಂದರೆ ಕೊಡುತ್ತಿರುವ ಬಗ್ಗೆ ಹೇಳಿದೆ.

ಅವರು ಅದನ್ನು ಮನಸ್ಸಿನಲ್ಲಿಕೊಂಡು ಬೆಂಗಳೂರಿಗೆ ವಾಪಸಾಗಿದ್ದರು. ನಮ್ಮೂರ ಛರ‍್ಮನ್ ಬಸಪ್ಪನವರು ಮತ್ತು ನಮ್ಮ ಹರಿಹರದವರೇ ಬಿ. ಬಸವಲಿಂಗಪ್ಪನವರು ಮೊದಲಿಂದಲೂ ಬಳಕೆಯಲ್ಲಿದ್ದವರಾಗಿದ್ದರು. ಛರ‍್ಮನ್ ಬಸಪ್ಪನವರು ಇನ್ನು ನಮ್ಮ ಊರಿನವರೊಡನೆ ಬೆಂಗಳೂರಲ್ಲಿ ತಮ್ಮ ಯಾವುದೋ ಕೆಲಸಕ್ಕೆ ಭೇಟಿ ಮಾಡಿದಾಗ ನಾನು ಹೇಳಿದ ವಿಷಯವನ್ನು ಪ್ರಸ್ತಾಪಿಸಿ, ‘ನೀವೇನು ಹೆಂಡ ಕುಡಿಯೋದಿಲ್ಲವಾ? ಮಾಂಸ ತಿನ್ನೋದಿಲ್ವಾ’ ಎಂದೆಲ್ಲಾ ಕೇಳಿ ‘ಬಸವಣ್ಣ ಏನು ಹೇಳಿದ್ದಾನೆ ಗೊತ್ತಾ? ಅದನ್ನ ಪಾಲಿಸೋದು ಬಿಟ್ಟು, ಸರ್ಕಾರ ಕಟ್ಟಿಸಿದ ಬಾವಿಯ ನೀರು ಸೇದಲು ಅಡ್ಡಿಪಡಿಸಬಾರದೆಂದು ಗರ್ಜನೆ ಹಾಕಿ ತಾಕೀತು ಮಾಡಿ ಕಳಿಸಿದ್ದರು.

ನಮ್ಮೂರ ಛರ‍್ಮನ್ ಬಸಪ್ಪನವರು ಬಹಳ ದಿನಗಳ ಕಾಲ ನಮ್ಮೂರ ಛರ‍್ಮನ್‌ರಾಗಿ ಎಲ್ಲರ ಜೊತೆ ಒಳ್ಳೆಯ ಸಂಬಂಧವಿಟ್ಟುಕೊಂಡಿದ್ದರು. ಆದರೆ ಊರ ಸಮಷ್ಟಿಯ ಸಮಸ್ಯೆಗಳು ಬಂದಾಗ ಧೈರ್ಯವಾಗಿ ಒಬ್ಬರೇ ತೀರ್ಮಾನ ತೆಗೆದುಕೊಳ್ಳಲು ಆಗುತ್ತಿರಲಿಲ್ಲ. ಆದರೆ ಬೆಂಗಳೂರಿನಿಂದ ಬಂದವರೇ ಯಾರು ನಿಮಗೆ ನೀರು ತರಲು ಅಡ್ಡಿಪಡಿಸಿದವರು ಎಂದು ಹೇಳಿ ಅವರೇ ನಮ್ಮ ಕೇರಿಗೆ ಬಂದು ನಮ್ಮವರನ್ನೇ ನೀರು ಸೇದಿಕೊಳ್ಳಲು ಹೇಳಿದ್ದರು. ಊರಲ್ಲಿ ವಿರೋಧಿಸಿದವರಿಗೆ ಸರ್ಕಾರದಿಂದ ಆದೇಶವಾಗಿದೆ ಎಂದೆಲ್ಲ ಹೇಳಿ ಬಾಯಿ ಮುಚ್ಚಿಸಿದ್ದರು. ಛರ‍್ಮನ್ ಬಸಪ್ಪನವರು ಸುಮಾರು 20 ವರ್ಷಗಳ ಕಾಲ ಛರ‍್ಮನ್‌ರಾಗಿದ್ದರು. ಯಾರಿಗೂ ಕೇಡು ಬಯಸುವ ವ್ಯಕ್ತಿಯಾಗಿರಲಿಲ್ಲ. ಇದೇ ಸಮಸ್ಯೆ ಬೇರೆಯವರ ಕೈಗೆ ಬಿದ್ದಿದ್ದರೆ, ಏನೆಲ್ಲಾ ಅನಾಹುತ ಮಾಡುತ್ತಿದ್ದರೋ ಊಹಿಸಲೂ ಅಸಾಧ್ಯ.

ಈ ಹಿನ್ನೆಲೆಯಲ್ಲಿ ಈಗ ಊರ ಮಟ್ಟದಲ್ಲಿ ಮತ್ತೊಂದು ಮಹತ್ತರವಾದ ಸಮಸ್ಯೆಯಾಗಿ ಎದ್ದು ಕೂತಿತ್ತು. ಅದು ಭೂ ನ್ಯಾಯ ಮಂಡಳಿಗೆ ಅರ್ಜಿ ಫಾರಂ ಹಾಕಿದ್ದು. ಹರಿಹರದಲ್ಲಿ ನಡೆಸುತ್ತಿದ್ದ ಭೂನ್ಯಾಯ ಮಂಡಳಿಯ ಮುಂದೆ ಹಾಜರಾಗಬೇಕು. ನಮ್ಮವರೆಲ್ಲ ದೇವಸ್ಥಾನದ ಧರ್ಮದರ್ಶಿಗಳ ಜೊತೆಗೆ ಮಾತಾಡಿಕೊಂಡು ಅವರು ತರುತ್ತಿದ್ದ ಟ್ರಾಕ್ಟರ್‌ನಲ್ಲಿ ಕೂತು ಹೋಗುತ್ತಿದ್ದರು. ನಮ್ಮ ಅಣ್ಣ ತಿಪ್ಪಣ್ಣ ಮಾತ್ರ ಅವರ ಜೊತೆಗೆ ಹೋಗುತ್ತಿರಲಿಲ್ಲ. ಅವರ ಜೊತೆ ಇರುವಾಗ, ನೀವು ಹೇಳಿದ ಹಾಗೆ ಸಾಕ್ಷಿ ಹೇಳುತ್ತೇವೆಂದು ಅವರ ಹತ್ತಿರವೇ ಬೀಡಿ ಕೇಳಿ ಸೇದಿಕೊಳ್ಳುತ್ತಿದ್ದರು. `ಇದೆಲ್ಲ ನಮ್ಮ ಹುಡುಗನ ಕೆಲಸ, ನಮಗ್ಯಾಕಣ್ಣ ದೇವರ ಜಮೀನು’ ಎಂದೆಲ್ಲ ಅವರ ಜೊತೆಯೇ ತಾಳ ಹಾಕುತ್ತ ಇದ್ದರು. ನಾನು ಊರಿಗೆ ಹೋದಾಗ ಯಾವಾಗ ತೀರ್ಮಾನಿಸಲಾಗುತ್ತದೆ ಎಂದು ಬಂದು ಗುಟ್ಟಾಗಿ ನನ್ನ ಬಳಿ ಕೇಳುತ್ತಿದ್ದರು. ನಮ್ಮವರೆಲ್ಲರ ಅದೃಷ್ಟವೋ ಎನ್ನುವಂತೆ ನನಗೆ 1969-1972ರಲ್ಲಿ ಮಹಾರಾಜಾ ಕಾಲೇಜಿನಲ್ಲಿ ಸಹಪಾಠಿಯಾಗಿದ್ದ ಕೆ.ಎಂ. ಶಂಕರಲಿಂಗೇಗೌಡರನ್ನು ದಾವಣಗೆರೆ ಭೂನ್ಯಾಯ ಮಂಡಳಿಯ ಅಧ್ಯಕ್ಷರಾಗಿ ಸರ್ಕಾರ ನೇಮಕ ಮಾಡಿತ್ತು. ನಾನು ನಮ್ಮ ಊರಿನ ಸ್ಥಿತಿಯನ್ನೆಲ್ಲ್ಲ ಅವರಿಗೆ ವಿವರಿಸಿ, ನಮಗೆ ಆದಷ್ಟು ಬೇಗ ಇತ್ಯರ್ಥಗೊಳಿಸಿಕೊಡಬೇಕೆಂದು ಅವರಲ್ಲಿ ವಿನಂತಿಸಿದೆ. ನಾನು ಹೋಗಿ ವಿನಂತಿಸಿದ 3-4 ತಿಂಗಳಲ್ಲಿ ನಮ್ಮವರೆಲ್ಲರ ಹೆಸರಿಗೆ ಭೂನ್ಯಾಯ ಮಂಡಳಿಯಲ್ಲಿ 1976ರ ವರ್ಷದ ಮಧ್ಯ ಭಾಗದಲ್ಲಿ ಭೂನ್ಯಾಯ ಮಂಡಳಿಯಿಂದ ತೀರ್ಮಾನಿಸಲಾಗಿತ್ತು.

ಆ ಸಂದರ್ಭದಲ್ಲಿ ಹೆಚ್. ಶಿವಪ್ಪನವರು ಹರಿಹರ ತಾಲ್ಲೂಕು ಶಾಸಕರು ಮತ್ತು ಭೂನ್ಯಾಯ ಮಂಡಳಿಯ ಸದಸ್ಯರಾಗಿದ್ದರು. ಅವರು ನಮಗೆಲ್ಲ ಜಮೀನು ನೋಂದಾಯಿಸುವ ಪ್ರಕರಣದಲ್ಲಿ ವಿರೋಧಿಸದೆ ಸಹಕಾರ ನೀಡಿದ್ದನ್ನು ನಾನು ನೆನಪಿಸಿಕೊಳ್ಳಬೇಕು. ಆದೇಶ ನೀಡುವ ಸಮಯದಲ್ಲಿ ದೇವಸ್ಥಾನದ ಧರ್ಮದರ್ಶಿಗಳು, ಭೂನ್ಯಾಯ ಮಂಡಳಿಯ ಅಧ್ಯಕ್ಷರ ಎದುರೇ ‘ಊರಿಗೆ ರ‍್ರಲೇ ನೋಡಿಕೊಳ್ಳುತ್ತೇವೆ’ ಎನ್ನೋ ಧಮ್ಕಿ ಹಾಕಿದಾಗ, ಅಧ್ಯಕ್ಷರು ‘ನಿಮ್ಮನ್ನೆಲ್ಲ ಪೊಲೀಸ್ ಕರೆಸಿ ಈಗಲೇ ಜೈಲಿಗೆ ಕಳಿಸುತ್ತೇನೆಂದು ಹೇಳಿ ಎಚ್ಚರಿಕೆ ನೀಡಿದರೆಂದು ನಮ್ಮವರೆಲ್ಲ ನನ್ನ ಬಳಿ ಸಂತೋಷದಿಂದ ಎಲ್ಲ ಮುಗಿದ ಮೇಲೆ ಹೇಳಿಕೊಂಡಿದ್ದರು.

ಮುಂದುವರಿಯುವುದು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಆತ್ಮಕತೆ | ಅಪ್ಪನ ಮೈಸೂರು ಭೇಟಿ ಸಾವು – ನೋವು

Published

on

  • ರುದ್ರಪ್ಪ ಹನಗವಾಡಿ 

ನಾನು ಮೈಸೂರಿನಲ್ಲಿ ಅಧ್ಯಾಪಕನಾಗಿ ಕೆಲಸ ನಿರ್ವಹಿಸುತ್ತಿರುವುದರ ಬಗ್ಗೆ ತಿಳಿದ ನಮ್ಮೂರಲ್ಲಿ ಎಲ್ಲರಿಗೂ ಸಂತೋಷವಾಗಿತ್ತು. ಅತ್ಯಂತ ಸಂತೋಷಗೊಂಡಿದ್ದ ಅಪ್ಪನನ್ನು ನಾನು ಮೈಸೂರಿಗೆ ಕರೆದುಕೊಂಡು ಬಂದು ಒಮ್ಮೆ ತೋರಿಸಬೇಕೆಂದು ಯೋಚಿಸಿದ್ದೆ. ಅಪ್ಪನು ಓಡಾಡಲು ಶಕ್ತಿ ಇದ್ದ ಕಾಲದಲ್ಲಿ ಎಲೆ ವ್ಯಾಪಾರಕ್ಕಾಗಿ ಧಾರವಾಡ, ಕಂಪ್ಲಿ, ಗಂಗಾವತಿ, ಹೊಸಪೇಟೆ, ಹರಿಹರ, ದಾವಣಗೆರೆ ಸಂತೆಗಳಲ್ಲಿ ಓಡಾಡುತ್ತಿದ್ದನು. ಇತ್ತೀಚೆಗೆ ಅವರಿಗೆ ಇದ್ದ ಕೆಮ್ಮು ದಮ್ಮುಗಳಿಂದ ಹೊರ ಊರುಗಳಿಗೆಲ್ಲೂ ಹೋಗುತ್ತಿರಲಿಲ್ಲ. ಅಪ್ಪನ ಹೆಚ್ಚಾದ ವಯಸ್ಸಿನ ಕಾರಣದಿಂದಲೇ ಹರಿಹರದಲ್ಲಿ ಹೈಸ್ಕೂಲಿಗೆ ಸೇರಿದ್ದ ಅಣ್ಣ ತಿಪ್ಪಣ್ಣನನ್ನು ಶಾಲೆ ಬಿಡಿಸಿ ತೋಟದ ಕೆಲಸಕ್ಕೆ ಹಾಕಿಕೊಂಡಿದ್ದ. ಹಾಗಾಗಿ ಈಗೆಲ್ಲ ಸಂತೆಗಳಿಗೆ ಅಣ್ಣನನ್ನೇ ಕಳಿಸುತ್ತಿದ್ದ.

ನಾನು ಮೈಸೂರಿನಲ್ಲಿ ಮತ್ತೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪುನಃ ನನ್ನ ಉಪನ್ಯಾಸಕ ಹುದ್ದೆಯನ್ನು ವಿಶ್ವವಿದ್ಯಾಲಯ ಮುಂದುವರೆಸಿತು. ಈ ನಡುವೆ ಪಾಲ್ ಇ ಸೈಮನ್ಸ್ ಅವರ ಪ್ರಾಜೆಕ್ಟ್ ಪೂರ್ಣಗೊಂಡಿತ್ತು. ಹಾಗಾಗಿ ಅವರು ವಾಪಸ್ ಅಮೇರಿಕೆಗೆ ಹೊರಟುಹೋದರು. ಹೋಗುವ ಮುನ್ನ ತಮ್ಮಲ್ಲಿದ್ದ ರ‍್ಯಾಲೀ ಬೈಸಿಕಲ್ ಮತ್ತು ಆರಾಮವಾಗಿ ಕೂರಲು ತೆಗೆದುಕೊಂಡಿದ್ದ `ಇಸೀ ಚೇರ್’ನ್ನು ನನಗೆ ಇಟ್ಟುಕೊಳ್ಳಲು ಹೇಳಿದರು. ಉಳಿದಂತೆ ತನ್ನೆಲ್ಲ ವಸ್ತುಗಳನ್ನು ಅಚ್ಚುಕಟ್ಟಾಗಿ ಪ್ಯಾಕ್ ಮಾಡಿಕೊಳ್ಳಲು ನಾನು ಸಹಕರಿಸಿದೆ.

ಈ ಸಮಯಕ್ಕಾಗಲೇ ಮಹೇಶ ರಾಜ್ಯಶಾಸ್ತçದಲ್ಲಿ ಎಂ.ಎ. ಮುಗಿಸಿದ್ದ. ಅವನು ಮುಂದೆ ಕಾನೂನು ವ್ಯಾಸಂಗ ಮಾಡಲು ಮೈಸೂರಿನಲ್ಲಿಯೇ ಇರುವ ತೀರ್ಮಾನ ಮಾಡಿದ್ದ. ಹಾಗಾಗಿ ಹಾಲಿ ಇದ್ದ ಮನೆಯನ್ನು ನಾನು ಬಿಟ್ಟು
ಕೆ.ಜಿ. ಕೊಪ್ಪಲಲ್ಲಿ ನಾನು ಅವನೂ ಸೇರಿ ಬಾಡಿಗೆ ಮನೆ ಮಾಡಿದೆವು. ನಂತರದಲ್ಲಿ ನಮ್ಮ ಊರಿನಲ್ಲಿ ಪಿಯುಸಿ ಪಾಸು ಮಾಡಿ ಊರಲ್ಲಿದ್ದ ಬಾರಿಕರ ಮಾಂತೇಶಿ, ಐನೇರ ಮುಕ್ತಾಯಕ್ಕ ಇವರುಗಳು ಕೂಡ ಮೈಸೂರಿಗೆ ಬಂದು ಓದು ಮುಂದುವರೆಸಲು ನನ್ನ ಸಹಾಯ ಕೋರಿದ್ದರು. ನಾನು ಅವರನ್ನೂ ಸಹ ನನ್ನ ಜೊತೆಗೆ ಮೈಸೂರಿಗೆ ಕರೆತಂದು, ಮುಕ್ತಾಯಕ್ಕನಿಗೆ ಸರಸ್ವತಿಪುರಂನಲ್ಲಿ ಸಣ್ಣ ಬಾಡಿಗೆ ಮನೆ ಮಾಡಿಕೊಟ್ಟು ಮಾಂತೇಶಿಗೆ ಮಹಾರಾಜ ಕಾಲೇಜಿನಲ್ಲಿ ಮತ್ತು ಬಿ.ಸಿ.ಎಂ. ಹಾಸ್ಟೆಲ್‌ನಲ್ಲಿ ಸೀಟು ಕೊಡಿಸಿ ಬಿ.ಎ. ಮುಂದುವರೆಸಲು ಅವಕಾಶ ಮಾಡಿಕೊಟ್ಟೆ. ಈ ನಡುವೆ ನಾನು ಊರಿಗೆ ಹೋದಾಗ ನನ್ನ ಅವ್ವನ ತಂಗಿ ಮಗ ಸಿರಿಗೇರಿ ರಾಮಣ್ಣ ಬಿ.ಎ. ಪದವಿ ಕೋರ್ಸು ಮುಗಿಸಿ ಕೆಲವು ವಿಷಯಗಳಲ್ಲಿ ಫೇಲಾಗಿ ತನ್ನ ಊರಿನಲ್ಲಿದ್ದ. ಅವನನ್ನು ಕೂಡ ಮೈಸೂರಿಗೆ ಕರೆದುಕೊಂಡು ಬಂದು ನಾವಿದ್ದ ಮನೆಯಲ್ಲಿಟ್ಟುಕೊಂಡು, ಬಾಕಿ ಉಳಿದ ವಿಷಯಗಳಿಗಾಗಿ ಟ್ಯೂಷನ್ ತೆಗೆದುಕೊಳ್ಳಲು ವ್ಯವಸ್ಥೆ ಮಾಡಿದೆ. ನಂತರ ಬಿ.ಎ. ಪಾಸು ಮಾಡಿಕೊಂಡು ಮುಂದೆ ಕೆ.ಇ.ಬಿ.ಯಲ್ಲಿ ಸರ್ಕಾರಿ ಕೆಲಸಕ್ಕೆ ಸೇರಿದ.

ಕೆ.ಜಿ. ಕೊಪ್ಪಲ ಮನೆಯಲ್ಲಿ ನಾನು ಮಹೇಶ ಅಧಿಕೃತ ಬಾಡಿಗೆದಾರರಾದರೂ ಅನಧಿಕೃತವಾಗಿ ವಿದ್ಯಾರ್ಥಿ ಬಳಗ ಮತ್ತು ನಿರುದ್ಯೋಗಿಗಳ ಬಳಗದ ಸದಸ್ಯರು ಯಾರಾದರೊಬ್ಬರು ಇರುತ್ತಿದ್ದರು. ನಮ್ಮಿಬ್ಬರಿಗೆ ಅಡಿಗೆ ಮಾಡಿಡಲು ಒಪ್ಪಿಕೊಂಡಿದ್ದ ಶಿವಪ್ಪ ಎನ್ನುವ ಅಡಿಗೆಯವನು ನಮ್ಮಲ್ಲಿ ದಿನವೂ ಏರುಪೇರಾಗುತ್ತಿದ್ದ ಸಂಖ್ಯೆ ಮತ್ತು ಹೊಲೆ ಮಾದಿಗರೆಗೆಲ್ಲ ನಾನು ಅಡಿಗೆ ಮಾಡುವುದಿಲ್ಲ ಎಂದು ಹೇಳಿ ಹೊರಟು ಹೋಗಿದ್ದ. ಈ ನಡುವೆ ಹಾಸ್ಟೆಲ್‌ನಲ್ಲಿ ಸೀಟು ಸಿಗುವವರೆಗೆ ಮಾಂತೇಶಿ ಮತ್ತು ರಾಮಣ್ಣನೇ ತೋಚಿದಂತೆ ಅಡುಗೆ ಮಾಡುತ್ತಿದ್ದರು. ಅದನ್ನೇ ಎಲ್ಲರೂ ಹಂಚಿ ಉಣ್ಣುತ್ತಿದ್ದೆವು. ಇದನ್ನೆಲ್ಲ ನೆನಪಿಸಿಕೊಳ್ಳುವ ಸಮಯಕ್ಕೆ ರಾಮಣ್ಣ ಮತ್ತು ಮಾಂತೇಶಿ ಇಬ್ಬರೂ ತೀರಿಕೊಂಡಿದ್ದಾರೆ. ಮುಕ್ತಾಯಕ್ಕ ಹೊಳೆ ದಾಟಿದ ಮನುಷ್ಯ ಸ್ವಭಾವದಂತೆ ಗುರ್ತಿಲ್ಲದವರಂತೆ ದಾವಣಗೆರೆಯಲ್ಲಿ ಅರಾಮ ಇದ್ದಾಳೆ.

ಇದೇ ಸಮಯಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಇಂದಿರಾ ಗಾಂಧಿ ಅವರ ಬಗ್ಗೆ ಅಲಹಾಬಾದ್ ಕೈಕೋರ್ಟ್ ನೀಡಿದ ತೀರ್ಪಿನಂತೆ ಪಾರ್ಲಿಮೆಂಟ್ ಸದಸ್ಯತ್ವವನ್ನು ರದ್ದುಗೊಳಿಸಿದ ಕಾರಣ ದೇಶದಾದ್ಯಂತ ಆಂತರಿಕ ತುರ್ತು ಪರಿಸ್ಥಿತಿ ಘೋಷಣೆಯಿಂದಾಗಿ ಧಾರವಾಡದಲ್ಲಿದ್ದು ಪತ್ರಿಕೆ ನಡೆಸುತ್ತಿದ್ದ ರಾಜಶೇಖರ ಕೋಟಿ ಕೂಡ ಮೈಸೂರಿಗೆ ಬಂದಿದ್ದರು ಹಾಗೂ ನಮ್ಮ ಈ ಬಾಡಿಗೆ ಮನೆಯ ಗೌರವಾನ್ವಿತ ಸದಸ್ಯರಾಗಿದ್ದರು.

ನನಗೆ ಬರುತ್ತಿದ್ದ 600ರೂಗಳ ಸಂಬಳ ಮತ್ತು ಮಹೇಶನ ಊರಿನಿಂದ ಬರುತ್ತಿದ್ದ ಅಕ್ಕಿ ಮತ್ತು ಸಾಂಬಾರು ಪದಾರ್ಥಗಳು ಸೇರಿಕೊಂಡು ಎಲ್ಲರಿಗೂ ಊಟ-ತಿಂಡಿಗಳು ಸಾಧಾರಣವಾಗಿ ನಡೆಯುತ್ತಿದ್ದವು. ಬಿ.ಎ. ಮತ್ತು ಎಂ.ಎ.ಗಳಲ್ಲಿ ಹಾಸ್ಟೆಲ್‌ನಲ್ಲಿನ ಸೊಗಸಾದ ಊಟ ನಂತರ ಪಾಲ್ ಸೈಮನ್ಸ್ ಜೊತೆ ಅಡಿಗೆ ಭಟ್ಟನ ಕೈರುಚಿ ನೋಡಿದ್ದ ನನಗೆ ಇಲ್ಲಿನ ಅನಿಶ್ಚಿತವಾದ ಊಟೋಪಚಾರಗಳನ್ನು ಸಹಿಸಿಕೊಳ್ಳುವುದು ಕಷ್ಟವಾಗುತ್ತಿತ್ತು. ಆದರೇನು? ನಮ್ಮ ಮಿತ್ರ ಬಳಗದ ಬೆಚ್ಚಗಿನ ಸೆಳೆತಗಳು ಇದನ್ನೆಲ್ಲ ಮೀರಿ ಒಬ್ಬರಿಗೊಬ್ಬರು ಸಹಕರಿಸಿಕೊಂಡು ಕಾಲ ಹಾಕುತ್ತಿದ್ದೆವು.
ದಸರಾ ರಜೆ ಬಂದು ಊರಿಗೆ ಹೋದಾಗ ಅಪ್ಪನನ್ನು ಒಮ್ಮೆ ಮೈಸೂರಿಗೆ ಕರೆತಂದು ದಸರಾ ಹಬ್ಬ ಮತ್ತು ನಮ್ಮ ಕಾಲೇಜು ತೋರಿಸಬೇಕೆಂಬ ಆಸೆಯಾಯಿತು. ಈ ಬಾರಿ ದಸರೆಯಲ್ಲಿ ಊರಿಗೆ ಹೋದಾಗ ಸೈಕಲ್ ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡು ನಮ್ಮ ಅಜ್ಜಿ (ಅಪ್ಪನ ತಾಯಿ) ಪಕ್ಕೀರಜ್ಜಿಯ ಹೆಸರಿಗಿದ್ದ ಹಳ್ಳದಾಚೆಗಿನ ಹೊಲದಲ್ಲಿನ ಬೆಳೆ ನೋಡಲು ಹೋಗಿದ್ದೆವು. ಅಣ್ಣ ಸರಿಯಾಗಿ ಕೆಲಸ ಮಾಡದೆ ಎಲ್ಲಾ ಕಡೆ ನಿರೀಕ್ಷಿತ ಉತ್ಪಾದನೆ ಇಲ್ಲವೆಂದು ನನ್ನ ಬಳಿ ಅಪ್ಪ ಅಲವತ್ತುಕೊಂಡಿದ್ದ. ಅವನೂ ಆಗ ತಾನೆ ಓದುವುದನ್ನು ಬಿಟ್ಟು ತೋಟದ ಕೆಲಸಗಳಲ್ಲಿ ತೊಡಗಿದ್ದರಿಂದಲೋ ಏನೋ ವ್ಯವಸಾಯದಲ್ಲಾಗಲೀ, ತೋಟ ಮಾಡುವುದರಲ್ಲಾಗಲೀ, ಅಪ್ಪನ ನಿರೀಕ್ಷಿತ ಮಟ್ಟದ ಕೆಲಸಗಾರನಾಗಿರಲಿಲ್ಲ. ಅದಕ್ಕೆ ನಮ್ಮವ್ವನ ಕಟಿಪಿಟಿಯೂ ಕಾರಣವಾಗಿತ್ತು. ನಮ್ಮ ಸೈಕಲ್ ಸವಾರಿ ಮುಗಿದು ಮನೆಗೆ ಬಂದಾಗ ಮೈಸೂರು ದಸರಾ ನೋಡಲು ಕರೆದುಕೊಂಡು ಹೋಗುವ ತೀರ್ಮಾನ ಅಪ್ಪನಿಗೆ ಹೇಳಿ ಒಪ್ಪಿಸಿದೆ. ನಂತರ ರೈಲಿನಲ್ಲಿ ಮಾರನೇ ದಿನ ಅಪ್ಪನೊಡನೆ ಮೈಸೂರಿಗೆ ಪ್ರಯಾಣ ಬೆಳೆಸಿದೆ.

ಮೈಸೂರು ನಗರ ದಸರಾ ಹಬ್ಬದ ಸಂಭ್ರಮದಲ್ಲಿ ಗಿಜುಗುಡುತ್ತಿತ್ತು. ವಿದ್ಯುತ್ ಅಲಂಕಾರದಿಂದ ಶೃಂಗಾರಗೊಂಡಿದ್ದರಿಂದ ಚಾಮುಂಡೇಶ್ವರಿ ಬೆಟ್ಟ, ಸಂಜೆ ವೇಳೆ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡ ನಮ್ಮ ಕಾಲೇಜನ್ನು ಎಲ್ಲಾ ತೋರಿಸಿದೆ. ನಾನು ಈಗ್ಗೆ 2-3 ವರ್ಷಗಳ ಹಿಂದೆ ಇಲ್ಲಿಯೇ ಓದಿ ಈಗ ಅಲ್ಲಿಯೇ ಮೇಷ್ಟರಾಗಿ ಕೆಲಸ ಮಾಡುತ್ತಿರುವುದನ್ನು ಕಣ್ಣಾರೆ ಕಂಡ ಅಪ್ಪ ಖುಷಿಗೊಂಡಿದ್ದ. ಅರಮನೆ, ಚಾಮುಂಡಿ ಬೆಟ್ಟ, ನಮ್ಮ ಕಾಲೇಜು, ಎಲ್ಲ ನೋಡಿದ ಅಪ್ಪ `ನಾನಿನ್ನು ಸತ್ತರೂ ಚಿಂತೆಯಿಲ್ಲ, ನೀನೊಂದು ದಡ ಸೇರಿದೆ’ ಎಂದು ಹೇಳಿ ಪುಳಕಗೊಂಡಿದ್ದ. ಮಾರನೇ ದಿನ ಸಂಜೆ ಕೃಷ್ಣರಾಜ ಸಾಗರ ಅಣೆಕಟ್ಟು ವೀಕ್ಷಣೆಗೆ ಹೋಗುವ ಮಾತಾಡಿದಾಗ ಅವನು ಆಸಕ್ತಿ ತೋರಲಿಲ್ಲ. ಹಾಗಾಗಿ ಅವನನ್ನು ರಾಮನಗರದಲ್ಲಿದ್ದ ಅಕ್ಕನ ಮನೆಗೆ ಬಸ್ಸಿನಲ್ಲಿ ಹತ್ತಿಸಿ ಕಳಿಸಿದೆ.

ದೇಶಾದಾದ್ಯಂತ ತುರ್ತು ಪರಿಸ್ಥಿತಿ, ದೇವರಾಜ ಅರಸರ 20 ಅಂಶದ ಕಾರ್ಯಕ್ರಮಗಳು, ಈ ಬಗ್ಗೆ ರಾಷ್ಟ್ರಮಟ್ಟದಲ್ಲಿ ಜೆಪಿ ಅವರು ಸೇರಿದಂತೆ ವಿರೋಧ ಪಕ್ಷಗಳ ಧುರೀಣರನ್ನು ಬಂಧಿಸಿ ಜೈಲಿನಲ್ಲಿಡುವಂತಾದ ವಿಷಯಗಳ ಚರ್ಚೆ ನಮ್ಮ ಕೆ.ಜಿ.ಕೊಪ್ಪಲ ಮನೆಯಲ್ಲಿ ನಡೆಯುತ್ತಿತ್ತು. ತುರ್ತು ಪರಿಸ್ಥಿತಿಯ ಕಾರಣದಿಂದಾಗಿ ವಿದ್ಯಾರ್ಥಿಗಳಿಂದ ಆಗಾಗ ನಡೆಯುತ್ತಿದ್ದ ಮುಷ್ಕರಗಳಾಗಲಿ, ವಿದ್ಯಾರ್ಥಿ ಸಂಘದ ಚುನಾವಣೆಗಳಾಗಲೀ ನಡೆಯದೆ, ಎಲ್ಲರೂ ಬೆದರಿದಂತೆ, ಸ್ವಯಂ ನಿಯಂತ್ರಿತರಾದವರಂತೆ ಕೆಲಸ ಮಾಡುವ ವಾತಾವರಣ, ಶೈಕ್ಷಣಿಕ ಮತ್ತು ಸರ್ಕಾರಿ ಕಛೇರಿಗಳಲ್ಲಿ ಮೂಡಿದಂತೆ ತೋರುತ್ತಿತ್ತು.

ಅಪ್ಪನನ್ನು ಊರಿಗೆ ಕಳಿಸಿ, ನಂತರದ ದಿನಗಳಲ್ಲಿ ಓದು, ತರಗತಿಗಳ ಪಾಠ ಮತ್ತು ಸಮಾಜವಾದಿ ಯುವಜನ ಸಭಾ, ಲೋಹಿಯಾ, ಅಂಬೇಡ್ಕರ್ ಚಿಂತನೆಗಳ ಕಡೆ ವಾಲಿಕೊಂಡಿದ್ದೆ. ಅಪ್ಪನಿಗೆ 80-85 ವರ್ಷಗಳಾಗಿರಬಹುದು. ಆಗಿದ್ದರೂ ಎಂದೂ ಮನೆಯಲ್ಲಿ ಕೂತು ವಿಶ್ರಾಂತಿ ಪಡೆಯುವ ಪರಿಪಾಟ ಅಪ್ಪನಿಗಿರಲಿಲ್ಲ. ಬೆಳಿಗ್ಗೆ ಎದ್ದು ದನಕರುಗಳ ಕೊಟ್ಟಿಗೆಯ ಕಸವನ್ನು ತಿಪ್ಪೆಗೆ ಹಾಕಿ, ಚಾ ಕುಡಿದು ತೋಟಕ್ಕೆ ಹೋದರೆ ಮತ್ತೆ ಬರುವುದು ರಾತ್ರಿಗೆ, ಬಂದು ಬಿಸಿನೀರಿನಲ್ಲಿ ಸ್ನಾನ ಮಾಡಿ ಊಟ ಮಾಡಿದರೆ ಅವನ ದಿನಚರಿ ಮುಗಿಯುತ್ತಿತ್ತು. ಯಾರಾದರೂ ಊರಿನಿಂದಲೋ ಇಲ್ಲ ನಮ್ಮ ಚಿಕ್ಕಪ್ಪಂದಿರಾಗಿದ್ದ ನಾಗಪ್ಪ, ಮಹಾದೇವಪ್ಪ ಮತ್ತು ಭೀಮಪ್ಪ ಇವರುಗಳು ಏನಾದರೂ ಮಾತಾಡೋ ನೆಪದಲ್ಲಿ ಸಂಜೆ ಸೇರಿಕೊಂಡರೆ ಸಾರಾಯಿ ಸಮಾರಾಧನೆ ಆಗಿ ಊಟ ಮಾಡುತ್ತಿದ್ದರು. ಇಲ್ಲ ಊರಲ್ಲಿನ ಲಿಂಗಾಯತ ಸ್ನೇಹಿತರಲ್ಲಿ ವಾರಕ್ಕೋ 15ದಿನಗಳಿಗೊಮ್ಮೆಯೋ ಗೌಪ್ಯವಾಗಿ ನಮ್ಮಲ್ಲಿನ ಕೋಣೆಯೊಂದರಲ್ಲಿ ಕೂತು ಪಾರ್ಟಿ ಮಾಡುತ್ತಿದ್ದರು. ಅವ್ವ ಲೊಟಗುಡುತ್ತಾ ಜೋಳದ ಹಪ್ಪಳವನ್ನೋ ಇಲ್ಲ ಮನೆಯಲ್ಲಿದ್ದ ಮೊಟ್ಟೆಗಳನ್ನು ಹುರಿದು ಅವರ ಪಾರ್ಟಿಗೆ ನೆಂಚಿಗೆ ಮಾಡಿ ಕೊಡುತ್ತಿದ್ದಳು.

ಅಪ್ಪನ ಅಣ್ಣ ರಂಗಪ್ಪಜ್ಜ ಇದ್ದು, ಅವನು ಮದುವೆಯಾಗಿ, ಮಕ್ಕಳು ಮನಿ ಎಂತೆಲ್ಲಾ ಆದ ಮೇಲೆ ಖಾವಿ ಧರಿಸಿ ಸಾಧುವಾಗಿದ್ದ. ಅವನು ಊರ ಹೊರಗಿನ ಗೋಮಾಳದಲ್ಲಿ ನಮ್ಮಜ್ಜಿ ಫಕ್ಕೀರಜ್ಜಿಯನ್ನು ಸಮಾಧಿ ಮಾಡಿದ್ದು. ಅಲ್ಲಿಯೇ ಒಂದು ವಿಶಾಲ ಗುಡಿಸಲು ಕಟ್ಟಿಕೊಂಡು, ದಿನವೂ ಅಜ್ಜಿಯ ಸಮಾಧಿಯನ್ನು ಪೂಜೆ ಮಾಡಿಕೊಂಡು, ನಮ್ಮ ಊರಿನ ಲಿಂಗಾಯತರ ಮನೆಯಿಂದ ಕಂತೆ ಭಿಕ್ಷೆ ಎತ್ತಿ ಅದರಲ್ಲಿಯೇ ಊಟ ಮಾಡಿಕೊಂಡಿದ್ದ. ಕ್ರಮೇಣ ಎಲ್ಲ ಜನರೂ ಸಾಧು ರಂಗಜ್ಜನ ಮಠ ಎಂದು ಗುರುತಿಸುತ್ತಿದ್ದರು. ಊರಿನ ಲಿಂಗಾಯತರು ಮತ್ತು ಇತರೆ ಜಾತಿಯ ಪ್ರಮುಖರೆಲ್ಲ ಶ್ರಾವಣಮಾಸದಲ್ಲಿ ದೇವಿಪುರಾಣವನ್ನೋ, ಭಜನೆಯನ್ನೋ ಮಾಡುತ್ತಾ ಕೊನೆಯಲ್ಲಿ ಕರಿಯ ಕೊಳವೆಯಂತಹ ವುದರಲ್ಲಿ ಸಾಂಬ್ರಾಣಿಯಂತಹದನ್ನು ನಾದಿ ಚಿಲುಮೆಯಲ್ಲಿ ತುಂಬಿ ಒಂದು ತುದಿಯಲ್ಲಿ ಬಟ್ಟೆಯನ್ನು ಸುತ್ತಿ ಎಡಗೈಯಲ್ಲಿ ಒಂದು ವಿಶೇಷ ಸ್ಟೈಲ್‌ನಲ್ಲಿ ಹಿಡಿದು ಜೋರಾಗಿ ದಮ್ಮು ಎಳೆಯುತ್ತಿದ್ದರು. ಬಲಕ್ಕೊ ಎಡಕ್ಕೊ ಕೂತವನೊಬ್ಬನು ಕಡ್ಡಿ ಗೀರಿ ಬೆಂಕಿ ಹಚ್ಚಿದರೆ ಉಸಿರು ಬಿಗಿ ಹಿಡಿದು ಎಳದಾಗ ರೈಲ್ವೆ ಉಗಿ ಬಂಡಿ ಹೊಗೆ ಉಗುಳಿದಂತೆ, ಮೂಗು ಬಾಯಿಯಿಂದ ಪುಂಖಾನುಪುಂಖವಾಗಿ ಹೊಗೆ ಹೊರಬರುತ್ತಿತ್ತು. ಹಾಗೆ ಎಳೆದವನು ಮತ್ತೊಬ್ಬನಿಗೆ ಭಯ ಮಿಶ್ರಿತ ಭಕ್ತಿಯಿಂದ ನಮಸ್ಕರಿಸಿ `ಗುರುವೇ ತಿಪ್ಪೇಶಾ’ ಎಂಬ ಉದ್ಘಾರದೊಂದಿಗೆ ಕೊಡುತ್ತಿದ್ದನು. ಆತನೂ ಸೇದಿ ಭಗವಂತನ ಕೃಪೆ, ದೇವಿಯ ಮಹಾತ್ಮೆ ಎಂದೇನೇನೋ ಮಾತಾಡಿಕೊಳ್ಳುತ್ತಿದ್ದರು. ಈ ಪಾರ್ಟಿಯಲ್ಲಿ ಅಪ್ಪನೂ ಆಗಾಗ ಅಲ್ಲಿ ಸೇರಿಕೊಳ್ಳುತ್ತಿದ್ದನು. ನಾವೆಲ್ಲ ಕೆಲವು ಹುಡುಗರು ನಮ್ಮ ಕೇರಿಯಿಂದ ಪ್ರಸಾದದ ಆಸೆಗಾಗಿ ಅಲ್ಲಿಗೆ ಹೋಗುತ್ತಿದ್ದೆವು. ಏಕೆಂದರೆ ಪ್ರತಿ ಭಜನೆ ಮುಗಿದಾಕ್ಷಣ ಪೂಜೆಗಾಗಿ ಒಡೆದ ತೆಂಗಿನ ಕಾಯಿಯ ಹಸಿ ಕೊಬ್ಬರಿಯ ಚೂರುಗಳು, ಜೊತೆಗೆ ಕತ್ತರಿಸಿದ ಬಾಳೆಯ ಹಣ್ಣು ಮಂಡಕ್ಕಿ ಕಾರ ಎಲ್ಲ ಸೇರಿಸಿ ಎಲ್ಲರಿಗೂ ಹಂಚುತ್ತಿದ್ದರು.

ಮಠದ ರಂಗಪ್ಪಜ್ಜ ನಮಗೆ ಸ್ವಂತ ಅಪ್ಪನ ಅಣ್ಣ, ದೊಡ್ಡಪ್ಪನಾಗಿದ್ದವರು ಎನ್ನುವ ವಿಷಯ ನಮಗಾರಿಗೂ ನಮ್ಮ ಬಾಲ್ಯ ಕಳೆಯುವವರೆಗೂ ಗೊತ್ತೇ ಇರಲಿಲ್ಲ. ನಾನು ಮತ್ತೆ ನಮ್ಮ ಕೇರಿಯ ಕಡೆಮನೆ ತಿಪ್ಪಣ್ಣ, ಕರಿಬಸಪ್ಪ, ಕುಬೇರ ಜೋಗಪ್ಪ ತುಂಗಣ್ಣ ಸಂಜೆ 4-5 ಗಂಟೆಯ ಸಮಯಕ್ಕೆ ಮಠದ ಕಡೆಗೆ ಹೋಗಿ ಅಲ್ಲಿಯೇ ಇದ್ದ ಬಾವಿಯಿಂದ ನೀರು ಸೇದಿ ಮಠದಲ್ಲಿನ ಗಿಡಬಳ್ಳಿಗಳಿಗೆ ಹೊಯ್ಯುತ್ತಿದ್ದವು. ನೀರು ಸೇದಿ ಹಾಕಿದ ನಾಟಕ ಮುಗಿದ ಮೇಲೆ ಎಲ್ಲರಿಗೂ ಅಲ್ಲಿದ್ದ ಮಣ್ಣಿನ ಮುಚ್ಚಳಗಳಲ್ಲಿ ಊರಲ್ಲಿನ ಕಂತೆ ಭಿಕ್ಷೆಯಲ್ಲಿ ತಂದ ರೊಟ್ಟಿ ಮತ್ತು ಎಲ್ಲರ ಮನೆಯ ಸಾರನ್ನು ಒಂದೇ ಮಡಕೆಯಲ್ಲಿ ಕುದಿಸಿಟ್ಟದ್ದನ್ನು ಬಡಿಸುತ್ತಿದ್ದರು. ಅದನ್ನೆಲ್ಲ ನಾವು ತುಂಬಾ ಖುಷಿಯಿಂದ ಉಣ್ಣುತ್ತಿದ್ದೆವು. ನಂತರ ಎಲ್ಲ ಮಣ್ಣಿನ ಮುಚ್ಚಳದಂತಿದ್ದ ತಟ್ಟೆಯನ್ನು ತೊಳೆದಿಟ್ಟು ಅವರ ಕಾಲಿಗೆ ನಮಸ್ಕರಿಸಿ ಮನೆಗೆ ಹೋಗುತ್ತಿದ್ದೆವು. ನಮ್ಮಲ್ಲೆಲ್ಲ ದೊಡ್ಡವನಾಗಿದ್ದ ಕಡೆಮನೆ ತಿಪ್ಪಣ್ಣನೇ ನಮ್ಮ ಎಲ್ಲರನ್ನೂ ಕೂಡಿಸಿ ಕರೆದುಕೊಂಡು ಹೋಗುತ್ತಿದ್ದ. ಎಲ್ಲರಿಗೂ ಬೇರೆ ಬೇರೆ ನೀಡಿದ ಮೇಲೆ ಮಠದೊಳಗೆ ಅಜ್ಜ ಹೋಗುತ್ತಿದ್ದರು. ನಮಗೆ ನೀಡಿದ ರೊಟ್ಟಿಯಲ್ಲಿ ಕಡೆಮನೆ ತಿಪ್ಪಣ್ಣನಿಗೆ ಹೆಚ್ಚುವರಿಯಾಗಿ ತನಗೆ ಕೊಡುವುದರ ಬಗ್ಗೆ ಬಂದವರಿಗೆಲ್ಲ ಮೊದಲೇ ಕೊಡುವಂತೆ ತಾಕೀತು ಮಾಡಿರುತ್ತಿದ್ದ. ಕೆಲವು ಸಮಯ ತಟ್ಟೆಗಳು ಕಡಿಮೆ ಇದ್ದುದರಿಂದ ಒಂದೇ ತಟ್ಟೆಯಲ್ಲಿ ಇಬ್ಬರು ಅಥವಾ ಮೂವರು ಕೂತು ಉಣ್ಣುವುದಾದರೆ, ನಮಗೆ ಸಾಕೆಂದು ಮೊದಲೇ ಎದ್ದು ಅವನಿಗೆ ಹೆಚ್ಚಿನ ರೊಟ್ಟಿ ಉಣ್ಣಲು ಅವಕಾಶ ಮಾಡಿಕೊಡಬೇಕಾಗಿತ್ತು. ಹಾಗೆ ಮಾಡದಿದ್ದರೆ ನಾಳೆ ಮತ್ತೆ ನಿಮ್ಮನ್ನು ಇಲ್ಲಿಗೆ ಕರೆತರುವುದಿಲ್ಲ ಎನ್ನೋ ಧಮಕಿ ಹಾಕುತ್ತಿದ್ದ. ಅವನು ನಮ್ಮೆಲ್ಲರಿಗಿಂತಲೂ 2-3 ವರ್ಷಕ್ಕೂ ಹಿರಿಯವನು, ನಮ್ಮ ಚಿಕ್ಕಪ್ಪ ಭೀಮಪ್ಪನ ಮಗನಾಗಿದ್ದ ಅವರಿಗೆ ಮನೆಯಲ್ಲಿ ಆರೇಳು ಹೆಣ್ಣು ಮಕ್ಕಳ ನಂತರ ಹುಟ್ಟಿದ ಕಾರಣ ಇವನಿಗೆ ಯಾವ ಕೆಲಸವನ್ನೂ ಹೇಳುತ್ತಿರಲಿಲ್ಲ. ವಿಶೇಷವಾಗಿ ಬುಗುರಿ, ಚಿನ್ನಿ ದಾಂಡು, ಕೀಳಾಪಟ್ಟಿ ಆಟಗಳಲ್ಲಿ ನಮಗೆ ಗುರುವಾಗಿದ್ದವನು. ಆದರೆ ಊರ ಎಲ್ಲರ ದೃಷ್ಟಿಯಲ್ಲಿ ದಂಡಪಿಂಡ ಎಂಬಂತೆ ಅವನನ್ನು ಅವರ ಮನೆಯವರೂ ಸೇರಿದಂತೆ ಊರಿನಲ್ಲಿ ಜನ ಪರಿಗಣಿಸಿದ್ದರು. ಆದರೀಗ ಒಂದು ದಂಡನ್ನೇ ಕಟ್ಟುವಷ್ಟು ಮಕ್ಕಳನ್ನು, ಮೊಮ್ಮಕ್ಕಳನ್ನು ಪಡೆದು ದುಡಿಮೆ ಮಾಡಿಕೊಂಡು ಹಾಯಾಗಿದ್ದಾನೆ. ಊರಲ್ಲಿರುವಾಗಲೆಲ್ಲ ನನ್ನನ್ನು ಸೆಳೆದುಕೊಂಡಿದ್ದ ಅವನು ನಂತರದ ದಿನಗಳಲ್ಲಿ ಸಣ್ಣ ವ್ಯತ್ಯಾಸದಿಂದ ದೂರವಾಗಿದ್ದಾನೆ. ಈಗ ಮತ್ತೆ ಕರೆದು ಮಾತಾಡಿಸಬೇಕೆಂದು ನೆನಪಾದಾಗ ಅನ್ನಿಸುತ್ತಿದೆ.

ಅಜ್ಜನ ಗುಡಿಸಲು ಅರ್ಥಾತ್ ಮಠ ಸುಮಾರು ಅರ್ಧ ಎಕರೆಯಲ್ಲಿ ಸುತ್ತ ಬೇಲಿಯ ಮಧ್ಯದಲ್ಲಿನ ಅಜ್ಜಿ ಸಮಾದಿಗೆ ಮತ್ತು ಅಜ್ಜಯ್ಯ ಇರುವಿಕೆಗೆ ತೆಂಗಿನ ಗರಿ ಮತ್ತು ಭತ್ತದ ಹುಲ್ಲಿನ ಮುಚ್ಚಳಿಕೆಯಿಂದ ಗಾಳಿ ಬಿಸಿಲು ಮಳೆಗಳಿಂದ ರಕ್ಷಣೆ ಪಡೆದಿತ್ತು. ಆಗಾಗ ಅಜ್ಜಯ್ಯ ಮಠ ಕಟ್ಟುತ್ತೇನೆಂದು ಹಣ ಸಂಗ್ರಹದಲ್ಲಿ ತೊಡಗಿದ್ದರೆಂದು, ಅಪ್ಪ ಮನೆಯಲ್ಲಿ ಮಾತಾಡುತ್ತಿದ್ದರು. ಹಬ್ಬ ಹರಿದಿನಗಳಲ್ಲಿ ದೊಡ್ಡಪ್ಪ ಮನೆಗೆ ಬಂದರೆ ಅವರಿಗೆ ವಿಶೇಷವಾಗಿ ಪಾದಪೂಜೆ ಮಾಡಿ ಆ ನೀರನ್ನೆಲ್ಲ ಮನೆಯ ಎಲ್ಲ ದಿಕ್ಕುಗಳಿಗೂ ಪ್ರೋಕ್ಷಿಸುತ್ತಿದ್ದರು. ಹಾಗೆ ನಮ್ಮಲ್ಲಿನ ಇತರೆ ನಾಲ್ಕು ಚಲವಾದಿ ಮನೆತನದವರೂ ಕರೆದು ಪಾದಪೂಜೆ ಮಾಡುತ್ತಿದ್ದರು. ನಮ್ಮೂರ ಹತ್ತಿರದ ಕಡ್ಲಬಾಳ ಊರಿನ ತೇರಿಗೆ ಮತ್ತು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿಯ ರಥೋತ್ಸವಕ್ಕೆ ಹೋಗಿ ವಾರಗಟ್ಟಲೇ ಅಲ್ಲಿದ್ದು, ಅನೇಕ ಇತರೆ ಸಾಧು ಸಂತರ ಸಂಗಡದಲ್ಲಿ ಭಜನೆ ಮತ್ತು ಗಾಂಜಾ ಸೇವನೆ ಮಾಡುತ್ತಿದ್ದುದರ ಬಗ್ಗೆ ಅವರ ಜೊತೆ ಹೋಗಿ ಬಂದವರು ಆಗಾಗ ಮಾತಾಡಿಕೊಳ್ಳುತ್ತಿದ್ದರು.

ಈ ರೀತಿಯಲ್ಲಿ ಇದ್ದ ದೊಡ್ಡಪ್ಪ ನಾನು ಸಾಗರದ ಹೈಸ್ಕೂಲಿನಲ್ಲಿ ಓದುವ ಸಮಯದಲ್ಲಿ ಒಂದೆರಡು ದಿನಗಳ ಅಸ್ವಸ್ಥತೆಯಿಂದ ಹರಿಹರದ ಹತ್ತಿರವಿರುವ ಗುತ್ತೂರಿನ ಗುರು ಬಸಜ್ಜನ ಮಠದಲ್ಲಿ ತೀರಿಹೋಗಿದ್ದರು. ಅಲ್ಲಿಯ ಮಠದಲ್ಲಿಯೇ ಅವರ ಸಮಾಧಿ ಮಾಡಿದ್ದಾರೆ. ಅದೇ ಮಠದಲ್ಲಿ ನನ್ನ ಗುರುಗಳಾಗಿದ್ದ
ಪ್ರೊ. ಬಿ. ಕೃಷ್ಣಪ್ಪನವರು ಮತ್ತವರ ತಂಗಿ ಹಾಲಮ್ಮ ತಮ್ಮ ಬಾಲ್ಯದ ದಿನಗಳಲ್ಲಿ ಗಿಡಗಳಿಗೆ ನೀರು ಹಾಕುವುದು, ಹೂ ಕೀಳುವ ಸೇವೆ ಮಾಡುತ್ತಿದ್ದರು ಎಂಬುದನ್ನು ಕೃಷ್ಣಪ್ಪನವರ ತಂಗಿ ಹಾಲಜ್ಜಿ ಆಗಾಗ ನಮ್ಮೂರಿಗೆ ಬಂದಾಗ ಜ್ಞಾಪಿಸಿಕೊಳ್ಳುತ್ತಿದ್ದರು. ಅಪ್ಪನ ಅಣ್ಣ ಈ ರೀತಿಯ ಜೀವನ ಸಾಗಿಸುತ್ತಾ ಕಾಲವಾದರೆ ಅಪ್ಪ ಒಂದಲ್ಲವೆಂದರೂ ಎರಡು ಮದುವೆಯಾಗಿ, ಮ್ಯಾಳ ಮಾಡುತ್ತಾ ಅವರೆಲ್ಲರಿಗೂ ನಾಯಕನಾಗಿ, ಮಾಡಿದ ಹೊಲಮನಿ ಕೆಲಸಗಳಲ್ಲಿ ಸೈ ಎನಿಸಿಕೊಂಡು, ನಾನು ಎಂ.ಎ. ಮಾಡಿ ಅಧ್ಯಾಪಕನಾಗಿರುವವರೆಗೆ ಬದುಕಿದ್ದೇ ಒಂದು ಪವಾಡ. ಸದಾ ಕೆಲಸದಲ್ಲಿ ತೊಡಗಿರುತ್ತಿದ್ದ ಅಪ್ಪ ಸಣ್ಣಪುಟ್ಟ ಖಾಯಿಲೆಗಳಿಗೆ ಜಗ್ಗುತ್ತಿರಲಿಲ್ಲ ಯವ್ವನದ ಕಾಲಘಟ್ಟದಲ್ಲಿ ಎಲೆ ಅಡಿಕೆ ತಂಬಾಕು ಬೀಡಿ ಸೇದುತ್ತಿದ್ದ ಅಪ್ಪ ನಂತರದ ದಿನಗಳಲ್ಲಿ ಕೆಮ್ಮು ದಮ್ಮುಗಳ ಕಾಟದಿಂದ ಅವನ್ನೆಲ್ಲ ಬಿಟ್ಟು ಬಿಟ್ಟಿದ್ದನು. ನಾನು ಕೆಲಸಕ್ಕೆ ಸೇರಿ ಊರಿಗೆ ಹೋದಾಗ ಅವ್ವನಿಗೆ, ಓಬಜ್ಜನಿಗೆ, ಅಪ್ಪನಿಗೆ ವಿಶೇಷವಾಗಿ ಸಣ್ಣ ಮೊತ್ತದ ಹಣ ಕೊಡಲು ಹೋದಾಗಲೆಲ್ಲ `ನನಗ್ಯಾಕೆ ಕೊಡುತ್ತೀ, ನಿಮ್ಮವ್ವನಿಗೇ ಕೊಡು’ ಎಂದು ಹೇಳಿ ಸುಮ್ಮನಾಗುತ್ತಿದ್ದ. ಇಂತಹ ಅಪ್ಪನನ್ನು ನಾನು ಅಧ್ಯಾಪಕನಾಗಿ ಕೆಲಸಕ್ಕೆ ಸೇರಿದ ಒಂದು ವರ್ಷ ತುಂಬಿದ ದಿನ (4.12.1975)ರಲ್ಲಿ ನಾನು ಎರಡನೇ ಬಿ.ಎ. ಕ್ಲಾಸ್ ರೂಮ್‌ನಲ್ಲಿ ಪಾಠ ಮಾಡುವಾಗ ತಂತಿ ಸಂದೇಶದಲ್ಲಿ ಅಪ್ಪ ತೀರಿದ ಸುದ್ದಿ ಹೊತ್ತು ತಂದಿತ್ತು. ಅಂದಿಗೆ ಸಂಬಳ ಬಂದು 4 ದಿನಗಳಾಗಿದ್ದರೂ ಎಲ್ಲಾ ಬಟವಾಡೆ ಮಾಡಿ ನನ್ನಲ್ಲಿ 50ರೂಗಳು ಮಾತ್ರ ಜೇಬಿನಲ್ಲಿದ್ದವು. ನೇರ ರಮಾವಿಲಾಸ್ ರಸ್ತೆಯಲ್ಲಿದ್ದ ಮಯೂರ ಪ್ರಿಂರ‍್ಸ್ನಲ್ಲಿಗೆ ಹೋಗಿ ಪಿ. ಮಲ್ಲೇಶ್ ಅವರಿಂದ 100 ರೂಗಳ ಸಾಲ ಪಡೆದು ನಾನು ಮತ್ತು ನನ್ನ ಕಾಲೇಜಿನಲ್ಲಿಯೇ ಓದುತ್ತಿದ್ದ ನಮ್ಮೂರಿನ ಹುಡುಗ ಮಾಂತೇಶಿಯನ್ನು ಕರೆದುಕೊಂಡು ರಾತ್ರಿಯ ಬಸ್ ಹತ್ತಿ ಬೆಳಗಿನ ಜಾವಕ್ಕೆ ಊರಿಗೆ ಬಂದು ಸೇರಿದೆ. ಅಪ್ಪನ ಸೋತ ಮುಖನೋಡಿ ನಾನು ತೀವ್ರ ಮೌನಕ್ಕೆ ಜಾರಿದೆ. ಎಂದೂ ಏನಲೇ ಎಂದು ಗದರಿಸದೆ ತನ್ನೆಲ್ಲ ಶಕ್ತಿ ಮೀರಿದ ದುಡಿಮೆಯಿಂದ, ಪ್ರೀತಿಯಿಂದ ನಮ್ಮನ್ನು ಸಾಕಿದ ಅಪ್ಪ, ಅವನ ಜೀವನದ ಹೋರಾಟಕ್ಕೆ ಅಂತ್ಯ ಹಾಡಿದ್ದ. ನಮ್ಮೆಲ್ಲರನ್ನು ತಿದ್ದಿ ಬೆಳೆಸಿ ಬದುಕಲು ನಮಗೆ ಅನುವು ಮಾಡಿ ಇಹಲೋಕದ ವ್ಯಾಪಾರ ಮುಗಿಸಿದ್ದ ಅಪ್ಪನ ನೆನಪು ನನ್ನ ಮನಸ್ಸಿನಾಳದಲ್ಲಿ ದಿನವೂ ಸ್ಫೂರ್ತಿಯಾಗಿ, ಸಾಮಾನ್ಯ ನ್ಯಾಯದ ದೊಂದಿಯಾಗಿ ಅನುರಣಿಸುತ್ತಿರುತ್ತಾನೆ.

ನಾನು ಕೆ.ಜಿ. ಕೊಪ್ಪಲಿನ ಮನೆಯಿಂದ ಮಹಾರಾಜ ಕಾಲೇಜಿಗೆ ಹೋಗಿ ಬರುತ್ತಿದ್ದೆ. ಬಿಡುವಿನ ವೇಳೆಯಲ್ಲಿ ನಾನು ಮಹೇಶ ಇತರೆ ಸ್ನೇಹಿತರು ಜೆಪಿ ಚಳುವಳಿ ನವನಿರ್ಮಾಣ ಕ್ರಾಂತಿ, ಜಾತಿ ವಿನಾಶ ಸಮ್ಮೇಳನ, ಬೂಸಾ ಚಳುವಳಿಗಳಲ್ಲಿ ಭಾಗವಹಿಸಿದ್ದೆವು. ಈ ಎಲ್ಲ ಸಂಘಟನೆಗಳ ಮೂಲ ಹೋರಾಟಗಾರರು ಮೈಸೂರಿನಲ್ಲಿದ್ದ ಎಂ.ಡಿ. ನಂಜುಂಡಸ್ವಾಮಿ, ಪಿ. ಮಲ್ಲೇಶ್, ಕೆ. ರಾಮದಾಸ್, ಮಾದೇವ, ಭಕ್ತ, ರಾಜಶೇಖರ ಕೋಟಿ, ರಾಮದೇವ ರಾಕೆ, ನಂಜುಂಡೇ ಗೌಡ, ಗೋವಿಂದಯ್ಯ, ಶಂಕರಲಿಂಗಪ್ಪ, ಗೊಟ್ಟಿಗೆರೆ ಶಿವರಾಜು, ಇಂದೂಧರ ಹೊನ್ನಾಪುರ, ದೇವನೂರ ಶಿವಮಲ್ಲು, ವಿಶ್ವವಿದ್ಯಾಲಯದ ಗಂಗೋತ್ರಿಯಿಂದ ಪ್ರೊ. ರಾಮಲಿಂಗಂ, ಕೆ.ಎಂ. ಜಯರಾಮಯ್ಯ, ಹೊರೆಯಾಲ ದೊರೆಸ್ವಾಮಿ, ಚಂದ್ರಶೇಖರ ತಾಳ್ಯ, ಎಲ್ಲರೂ ಇದೇ ಪೂರ್ಣಾವಧಿ ಕೆಲಸವೆಂಬಂತೆ ತೊಡಗಿಸಿಕೊಂಡಿದ್ದರು. ಹಾಗೆಯೇ ರಾಷ್ಟ್ರ ಮತ್ತು ರಾಜ್ಯ ಸರ್ಕಾರಗಳಲ್ಲಿನ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಇಂತಹ ವಿಷಯಗಳ ಬಗ್ಗೆ ಬೆಳಕು ಚೆಲ್ಲುವ `ಮ್ಯಾನ್ ಕೈಂಡ್’, `ಬಂಡಾಯ’, `ಶೋಷಿತ’, `ನರ’, `ಪಂಚಮ’ ಎಂಬ ಅಕಾಲಿಕ ಪತ್ರಿಕೆಗಳನ್ನು ಅಸಾಧ್ಯ ಹಣಕಾಸಿನ ತೊಂದರೆಗಳ ನಡುವೆಯೂ ಹೊರ ತರುತ್ತಿದ್ದರು.

ಆ ದಿನಗಳಲ್ಲಿ ಇಂತಹದೇ ಪತ್ರಿಕೆಯಲ್ಲಿ ನಮ್ಮೂರಿನಲ್ಲಿ ನಡೆದ ಹಿಂದುಳಿದ ಜಾತಿಯ ಹುಡುಗಿಯೊಬ್ಬಳನ್ನು ಲಿಂಗಾಯತರ ಹುಡುಗನೊಬ್ಬ ಕೆಣಕಿದ ಬಗ್ಗೆ ನಾನು ಊರಿಗೆ ಹೋದಾಗ ತಿಳಿಯಿತು. ಈ ಕೃತ್ಯ ಎಸಗಿದವನನ್ನು ಯಾರೂ ವಿಚಾರಿಸುವಂತಿರಲಿಲ್ಲ. ಹುಡುಗಿಯ ಕಡೆಯವರು ಯಾರೂ ಅದನ್ನು ಪ್ರಶ್ನಿಸಲೂ ಇಲ್ಲ. ಇದೆಲ್ಲ ಗೊತ್ತಾದ ನಾನು ನರ ಬಂಡಾಯದ ಪತ್ರಿಕೆಗೆ ಬರೆದು ಪ್ರಕಟಿಸಿದ್ದೆ. ಆ ಪ್ರತಿಗಳನ್ನು ಮಾಂತೇಶಿ ಊರಿಗೆ ತೆಗೆದುಕೊಂಡು ಹೋಗಿ ಊರಲ್ಲೆಲ್ಲಾ ಹಂಚಿದನು. ವಿಷಯ ತಿಳಿದ ಊರಿನ ಪ್ರಮುಖರು, ಈ ರುದ್ರಪ್ಪ ಊರ ಮಾನ ಹರಾಜು ಹಾಕಿದ ಎಂದೆಲ್ಲ ಕೂಗಾಡಿದ್ದರು.

`ಅವನು ಊರಿಗೆ ಬರಲಿ ವಿಚಾರಿಸುತ್ತೇವೆ’ ಎಂದೆಲ್ಲಾ ಕೂಗಾಡಿದರು. ನಾನು ತಿಂಗಳೊಪ್ಪತ್ತಿನಲ್ಲಿ ಊರಿಗೆ ಹೋದಾಗ ಯಾರೂ ಆ ಬಗ್ಗೆ ಮಾತಾಡಲಿಲ್ಲ. ಮುಖ್ಯ ಕಾರಣ ಬರೆದುದೆಲ್ಲ ನಿಜವಾದ ಘಟನೆಯಾಗಿತ್ತು. ಮತ್ತೆ ಹೆಚ್ಚು ಕೆದಕಿದರೆ ತಮಗೆ ಇದು ಅವಮಾನದ ಘಟನೆಯ ಮರು ಪ್ರಸ್ತಾಪವಾಗಿ ವಿಪರೀತಕ್ಕೆ ಹೋಗಬಹುದೆಂದು ಸುಮ್ಮನಾಗಿದ್ದರು. ಹೀಗೆ ನಾನು ಮೈಸೂರಲ್ಲಿದ್ದಾಗ ಊರ ಘಟನೆಗಳಿಗೆ ಸ್ಪಂದಿಸುತ್ತಾ ಇರುವುದು ಮೈಸೂರಿನಲ್ಲಿದ್ದ ಪ್ರಗತಿಪರ ಸಂಘಟನೆಗಳ ಮತ್ತು ವಿಚಾರವಂತರ ಒಡನಾಟವೇ ಅದಕ್ಕೆ ಕಾರಣವಾಗಿತ್ತು ಎಂಬುದನ್ನ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಮುಂದುವರಿಯುವುದು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಆತ್ಮಕತೆ | ಮಹಾರಾಜಾ ಕಾಲೇಜಿನಲ್ಲಿ ಉಪನ್ಯಾಸಕನಾಗಿ : 1974-1976

Published

on

  • ರುದ್ರಪ್ಪ ಹನಗವಾಡಿ

1967ರಲ್ಲಿ ಎಸ್.ಎಸ್.ಎಲ್.ಸಿ. ಪಾಸು ಮಾಡಿದ ದಿನಗಳಿಂದಲೂ ಮುಂದಿನ ಕಲಿಕೆಗಾಗಿ ಮೈಸೂರಿಗೇ ಹೋಗಬೇಕೆಂದು ಕನಸು ಕಾಣುತ್ತಿದ್ದ ನನಗೆ ಅಲ್ಲಿಯೇ ಓದಿ ನಂತರ ಅಧ್ಯಾಪಕ ವೃತ್ತಿ ದೊರೆತದ್ದು ನನ್ನ ಸಂತೋಷಕ್ಕೆ ಪಾರವೇ ಇರಲಿಲ್ಲ. ಪ್ರಿನ್ಸಿಪಾಲರಾದ ಎನ್. ಶಂಕರಲಿಂಗಯ್ಯನವರು, ರಾಜ್ಯಶಾಸ್ತ್ರದ ಪಾಠ ಮಾಡುತ್ತಿದ್ದರು. ಮತ್ತು ಆಡಳಿತಾಧಿಕಾರಿಯಾಗಿದ್ದ, ಜೆ. ಬಿಲ್ಲಯ್ಯನವರು ನಮ್ಮದೇ ಅರ್ಥಶಾಸ್ತ್ರ ವಿಷಯದಲ್ಲಿ ಅಧ್ಯಾಪಕರಾಗಿದ್ದವರು. ನಮ್ಮ ಅರ್ಥಶಾಸ್ತç ವಿಭಾಗದಲ್ಲಿ ಇಲಾಖಾ ಮುಖ್ಯಸ್ಥರಾಗಿದ್ದ ಪ್ರೊ. ಸಿದ್ದೇಗೌಡರು, ಮತ್ತು ಹರಿಚರಣ್ ನನಗೆ ಎರಡು ವರ್ಷಗಳ ಹಿಂದೆ ಗುರುಗಳಾಗಿದ್ದವರು, ಉಳಿದಂತೆ ಇನ್ನಿಬ್ಬರು ಮಹಿಳಾ ಅಧ್ಯಾಪಕರುಗಳು ಮತ್ತು ಎಂ.ಎ.ನಲ್ಲಿ ನನಗಿಂತ ಹಿರಿಯರಾಗಿದ್ದ ಕೆ.ಸಿ. ಬಸವರಾಜ್ ಕೂಡ ಅಧ್ಯಾಪಕರಾಗಿದ್ದರು.

ಬಿ.ಎ. ಮತ್ತು ಎಂ.ಎ. ತರಗತಿಗಳಲ್ಲಿ ಓದುವಾಗ ಪಠ್ಯಗಳಿಗಿಂತಲೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ನನಗೆ ಈಗ ಪಠ್ಯಕ್ರಮಕ್ಕನುಗುಣವಾಗಿ ಒಂದು ಗಂಟೆಗೆ ಬೇಕಾದ ತಯಾರಿಯೊಡನೆ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಮಾಡುವುದು ಸವಾಲಿನ ಪ್ರಶ್ನೆಯಾಗಿತ್ತು. ಪ್ರತಿ ತರಗತಿಗಳಲ್ಲಿ 50-60 ವಿದ್ಯಾರ್ಥಿಗಳಿದ್ದು ಕೆಲವರು ನನಗಿಂತ ಹೆಚ್ಚಿನ ವಯಸ್ಸು ಮತ್ತು ದೈಹಿಕವಾಗಿ ಬಲವಾಗಿದ್ದವರು ಕೂಡ ಇದ್ದರು. ವಾರಕ್ಕೆ 16 ಗಂಟೆಗಳ ಪಾಠ ಮಾಡುವುದು ಎಲ್ಲ ಅಧ್ಯಾಪಕರಿಗೆ ನಿಗದಿಯಾಗಿತ್ತು. ಹೊಸ ಅಧ್ಯಾಪಕರುಗಳಿಗೆ ವಿಶೇಷವಾಗಿ ದ್ವಿತೀಯ ಮತ್ತು ಅಂತಿಮ ಬಿ.ಎ. ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳಿ ಅಧ್ಯಾಪಕರಿಗೆ ತಬ್ಬಿಬ್ಬು ಮಾಡುವುದು ನನಗೆ ಕೂಡ ಗೊತ್ತಿದ್ದ ವಿಷಯವಾಗಿತ್ತು. ಆ ಕಾರಣದಿಂದಲೇ ಸರಿರಾತ್ರಿಯರೆಗೆ ಓದಿಕೊಂಡು ಸಜ್ಜಾಗಿಯೇ ತರಗತಿಗಳಿಗೆ ಹೋಗುತ್ತಿದ್ದೆ. ನಿಜವಾದ ಅರ್ಥಶಾಸ್ತçದ ವಿದ್ಯಾರ್ಥಿಯಾಗಿದ್ದುದು, ನಾನು ಅಧ್ಯಾಪಕನಾಗಿ ಸೇರಿದ ಮೇಲೆಯೆ ಎಂದು ನನಗನ್ನಿಸತೊಡಗಿತು. ಪಾಠಗಳನ್ನು ಶಿಸ್ತಿನಿಂದ ಮಾಡಿಕೊಂಡು ಬರುತ್ತಿದ್ದ ಕಾಲದಲ್ಲಿ ಅಂತಿಮ ಬಿ.ಎ. ವಿದ್ಯಾರ್ಥಿಗಳ ತರಗತಿಗಳು ಜೂನಿಯರ್ ಮತ್ತು ಸೀನಿಯರ್ ಹಾಲ್‌ಗಳಲ್ಲಿ ನಡೆಯುತ್ತಿದ್ದವು. ಆಗ ಪ್ರತಿ ಪಿರಿಯಡ್‌ಗೆ ಹಾಜರಾತಿ ತೆಗೆದುಕೊಳ್ಳುವ ಪರಿಪಾಠವಿತ್ತು. ನಾನು ಹಾಜರಾತಿ ತೆಗೆದುಕೊಂಡು ಪಾಠ ಮಾಡಲು ಪ್ರಾರಂಭಿಸಿದಾಗ ಕೆಲವು ವಿದ್ಯಾರ್ಥಿಗಳು ನಾವು ತರಗತಿಯಿಂದ ಹೊರ ಹೋಗಲು ಅನುಮತಿ ನೀಡಬೇಕೆಂದು ಕೋರಿದರು. ಅದರ ಉದ್ದೇಶ ನಿಮ್ಮ ಪಾಠದ ಅಗತ್ಯವಿಲ್ಲ ಎನ್ನೋ ಧೋರಣೆಯಿಂದ ಕೇಳಿದ ಅವರಿಗೆ ನಾನು, ನೀವು ಹೊರಗೆ ಹೋದರೆ ನಿಮ್ಮ ಹಾಜರಾತಿ ದಾಖಲೆ ಪುಸ್ತಕದಲ್ಲಿ ಗೈರು ಹಾಜರಿ ಎಂದು ನಮೂದಿಸುವುದಾಗಿ ಹೇಳಿದೆ.

ಅದಕ್ಕೇನು ಉತ್ತರಿಸದೆ ಹಾಗೆ ಹೊರಗೆ ಹೋದ ಹುಡುಗರು, ಮಾರನೆಯ ದಿನ ಪ್ರಿನ್ಸಿಪಾಲರಾಗಿದ್ದ ಶಂಕರಲಿಂಗಯ್ಯನವರಿಗೆ ಹೋಗಿ ನಾನು ಮಾಡುವ ಪಾಠ ಅರ್ಥವಾಗುತ್ತಿಲ್ಲ ಎಂದೂ ಇವರ ಬದಲು ಬೇರೆ ಅಧ್ಯಾಪಕರನ್ನು ನೇಮಿಸಲು ಮೌಖಿಕವಾಗಿ ಕೇಳಿದ್ದರು. ಪ್ರಿನ್ಸಿಪಾಲರು ಅಲ್ಲೇ ಗದರಿಸಿ ಕಳಿಸುವುದನ್ನು ಬಿಟ್ಟು ನನ್ನನ್ನು ಕರೆಸಿ ಚರ್ಚಿಸಿದರು. ನಾನು ನಡೆದ ವಿಚಾರವನ್ನು ತಿಳಿಸಿದೆ. ಆಯ್ತು ನಾನೇ ನಾಳೆ ನಿಮ್ಮ ಕ್ಲಾಸಿಗೆ ಬರುವೆ ಎಂದು ಹೇಳಿದ ಅವರು ಬಂದು ಕೂತರು. ಅದೇನು ಅವರಿಗೆ ಅನ್ನಿಸಿತೋ, ಅಂತೂ ಕೊನೆಗೆ ಇನ್ನೂ ಹೇಗೆ ಪಾಠ ಮಾಡಬೇಕು ನಿಮಗೆ? ಎಂದು ವಿದ್ಯಾರ್ಥಿಗಳಿಗೆ ಕ್ಲಾಸಿನಲ್ಲಿ ಹೇಳಿ ಹೊರಟು ಹೋದರು.

ಆ ನಂತರ ಬೇರಾವ ಕ್ಲಾಸಿನಲ್ಲಿಯೂ ಈ ರೀತಿಯ ಘಟನೆಗಳು ನಡೆಯಲಿಲ್ಲ ದಿನ ಕಳೆದಂತೆ ನನ್ನ ಆತ್ಮವಿಶ್ವಾಸವೂ ಹೆಚ್ಚಿ ವಿದ್ಯಾರ್ಥಿಗಳು ಆತ್ಮೀಯತೆಯಿಂದ ಸ್ಪಂದಿಸಿ ಆಸಕ್ತಿಯಿಂದ ಕಲಿಯುತ್ತಿದ್ದರು. ನಾನು ತಾತ್ಕಾಲಿಕವಾಗಿ ಮಹೇಶನ ರೂಂನಿಂದ ಕಾಲೇಜಿಗೆ ಓಡಾಡುತ್ತಿದ್ದು ಬೇರೆ ಮನೆ ಅಥವಾ ಪ್ರತ್ಯೇಕ ರೂಮಿಗಾಗಿ ಸರಸ್ವತಿಪುರಂನಲ್ಲಿ ಹುಡುಕುತ್ತಿದ್ದೆ. ಈ ಮಧ್ಯೆ ನನಗೆ ಸೋಷಿಯಾಲಜಿ ವಿಭಾಗದಲ್ಲಿ ಸಂಶೋಧನ ಸಹಾಯಕನಾಗಿದ್ದಾಗ ಪರಿಚಯವಾಗಿದ್ದ ಡಾ. ಪಿ.ಕೆ. ಮಿಶ್ರಾಜಿ ಅವರು ( Director for South Indian Anthropoligical Survey of India ) ಅವರೂ ಕೂಡ ಅಮೇರಿಕನ್ ಸ್ನೇಹಿತರೊಬ್ಬರಿಗೆ ಮನೆಯನ್ನು ಹುಡುಕುತ್ತಿದ್ದರು. ಹೀಗೆ ನಾನೂ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಸೇರಿದ ಬಗ್ಗೆ ತಿಳಿಸಿ ಮನೆ ಹುಡುಕುತ್ತಿರುವ ವಿಷಯ ತಿಳಿಸಿದಾಗ ನೀವಿಬ್ಬರು ಯಾಕೆ ಒಟ್ಟಿಗೆ ಇರುವ ಬಗ್ಗೆ ಯೋಚಿಸಬಾರದು ಎಂದು ಸಲಹೆ ನೀಡಿದರು. ಅದರಂತೆ ನನಗೆ ಸರಸ್ವತಿಪುರಂನ 15ನೇ ಮುಖ್ಯರಸ್ತೆಯಲ್ಲಿ ಒಂದು ಸ್ವತಂತ್ರ ಮನೆ ಬಾಡಿಗೆಗೆ ಸಿಕ್ಕಿತು. 300 ರೂಗಳ ಬಾಡಿಗೆ ಮನೆ ನನ್ನ ಕಾಲೇಜಿಗೂ ಹತ್ತಿರವಾಗಿತ್ತು.

ನನ್ನ ಜೊತೆ ಪ್ರೊ. ಮಿಶ್ರಾಜಿ ಅವರಿಗೆ ಪರಿಚಿತರಾದ ಅಮೇರಿಕಾದ ಒರೆಗಾನ್ ವಿಶ್ವವಿದ್ಯಾಲಯದಿಂದ ಬಂದ ಪ್ರೊ. ಪಾಲ್ ಇ. ಸೈಮನ್ಸ್ ಅವರು ಖ್ಯಾತ ಮಾನವಶಾಸ್ತ್ರದ ಅಧ್ಯಾಪಕರಾಗಿದ್ದು, ಅವರು ನನ್ನೊಟ್ಟಿಗೆ ಇರಲು ಒಪ್ಪಿದರು. ಅವರು ಮೈಸೂರಿಗೆ ಮಂಗಗಳ ಸ್ವಭಾವಗಳ ಮೇಲೆ ಅಧ್ಯಯನ ಮಾಡಲು ಬಂದಿದ್ದರು. ಬೆಳಿಗ್ಗೆ 7 ಗಂಟೆಗೆ ಎದ್ದು ಕುಕ್ಕರಹಳ್ಳಿ ಕೆರೆ ಮೇಲೆ ಓಡಾಡುವ ಮಂಗಗಳ ಬಗ್ಗೆ ತನ್ನ ಕ್ಯಾಮರಾ ತೆಗೆದುಕೊಂಡು ಸೈಕಲ್‌ನಲ್ಲಿ ಹೊರ ಹೋಗಿ 9 ಗಂಟೆಗೆ ಬಂದು ಅವರು ಬೆಳಗಿನ ಉಪಹಾರ ಮಾಡುತ್ತಿದ್ದರು. ಮಧ್ಯಾಹ್ನ ಹಣ್ಣು ಮತ್ತು ಜ್ಯೂಸಿನಲ್ಲಿ ಕಾಲ ಕಳೆದು ಸಂಜೆ 7 ಗಂಟೆಗೆ ಊಟ ಮಾಡುತ್ತಿದ್ದರು. ಮಧ್ಯಾಹ್ನ ಓದು ಮತ್ತು ಬೆಳಗಿನ ಸಮಯದಲ್ಲಿ, ನೋಡಿ ಬಂದ ಮಂಗಗಳ ಬಗೆಗೆ ತನ್ನ ಅಬ್ಸರ್‌ವೇಷನ್‌ಗಳನ್ನು ನೋಟ್ಸ್ ಮಾಡುತ್ತಿದ್ದರು. ಅವರೇ ನಿಗದಿಪಡಿಸಿದ ಊಟಿಯಿಂದ ಬಂದಿದ್ದ ಅಡುಗೆ ಭಟ್ಟ ಚೆನ್ನಾಗಿ ತಿಂಡಿ ಊಟಗಳ ವ್ಯವಸ್ಥೆ ಮಾಡುತ್ತಿದ್ದ. ಮೊದಲ ದಿನ ರಾತ್ರಿ ಊಟ ಮಾಡುವ ಸಮಯಕ್ಕೆ ನಾನು ಬರುವುದು ತಡವಾಯಿತು. ಆತ 7 ಗಂಟೆಗೆ ಊಟ ಮಾಡಿ ಮುಗಿಸಿದ್ದ. ನನಗೆ ದೊಡ್ಡ ತಟ್ಟೆಯಲ್ಲಿ ಮಾಂಸಾಹಾರದ ಅಡುಗೆಯನ್ನು ಬಡಿಸಿಟ್ಟು ನನ್ನ ಮುಂದೆ ಹಿಡಿದು Hope this is sufficeint for you ? ಎಂದು ಕೇಳಿದರು. ನಾನು ಉಂಡು ಇನ್ನೊಬ್ಬರಿಗೂ ಆಗಿ ಮಿಗುವಷ್ಟು ಅದರಲ್ಲಿತ್ತು. ನಾನು ಬಾಡಿಗೆ ಮತ್ತು ವಿದ್ಯುತ್ ವೆಚ್ಚಗಳನ್ನು ನೋಡಿಕೊಂಡರೆೆ ಉಳಿದಂತೆ ಇತರೆ ಎಲ್ಲಾ ಖರ್ಚುಗಳು ಸೈಮನ್ಸ್ ನೋಡಿಕೊಳ್ಳುವಂತೆ ಮಾತಾಡಿ ಹಂಚಿಕೊಂಡಿದ್ದೆವು.

ತಿಂಗಳಲ್ಲಿ ಒಂದೆರಡು ಬಾರಿ ಗುಂಡ್ಲುಪೇಟೆ ಕಡೆ ಹೋಗಿ ಮಂಗಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದರು. ನಾನು ಅಮೆರಿಕನ್ ಜೊತೆ ಪ್ರತ್ಯೇಕ ಅಡುಗೆಯವನೊಬ್ಬನನ್ನು ಇರಿಸಿಕೊಂಡು ಊಟ ಉಪಚಾರ ನಡೆಯುತ್ತಿದ್ದುದರ ಬಗ್ಗೆ ನಮ್ಮ ಮೈಸೂರಿನ ಹಿರಿಕಿರಿ ಸ್ನೇಹಿತರು ವಿಶೇಷವೆಂಬಂತೆ ವಿಚಾರಿಸುತ್ತಿದ್ದರು. ನನ್ನ ಅನೇಕ ಸಮಾಜವಾದಿ ಯುವಜನ ಸಭಾ ಮತ್ತು ದಲಿತ ವಿದ್ಯಾರ್ಥಿ ಮಿತ್ರರು ನನ್ನಲ್ಲಿಗೆ ಬಂದಾಗ ನಮ್ಮಲ್ಲಿಯೇ ಊಟ ತಿಂಡಿ ಮಾಡಿಕೊಂಡು ಹೋಗುತ್ತಿದ್ದರು.

ನಾನು 1974 ಡಿಸೆಂಬರ್ 4 ರಂದು ಅಧ್ಯಾಪಕ ವೃತ್ತಿಗೆ ಸೇರಿದ್ದು, ಮಾರ್ಚ್ ಅಥವಾ ಏಪ್ರಿಲ್ ಶೈಕ್ಷಣಿಕ ವರ್ಷದ ಕೊನೆಯಲ್ಲಿ ರಿಲೀವ್ ಮಾಡುತ್ತಿದ್ದರು. ಸ್ಥಳೀಯ ಅಭ್ಯರ್ಥಿಯಾಗಿ ತೆಗೆದುಕೊಂಡ ಎಲ್ಲ ವಿಷಯದ ಅಧ್ಯಾಪಕರುಗಳಿಗೂ ಇದೇ ವ್ಯವಸ್ಥೆ ಆಗ ಜಾರಿಯಲ್ಲಿತ್ತು. ಅದರಲ್ಲಿ ಆರು ತಿಂಗಳಿಗಿಂತ ಹೆಚ್ಚು ದಿನ ಕೆಲಸ ಮಾಡಿದವರಿಗೆ ಶೈಕ್ಷಣಿಕವಾಗಿದ್ದ ರಜೆಯಲ್ಲೂ ಬೇಸಿಗೆಯ ಸಂಬಳ ನೀಡುತ್ತಿದ್ದರು. ನಾನು ಆರು ತಿಂಗಳಿಗಿAತಲೂ ಕಡಿಮೆ ಅವಧಿಗೆ ಕೆಲಸ ಮಾಡಿದ್ದ ಕಾರಣಕ್ಕೆ ಶೈಕ್ಷಣಿಕ ವರ್ಷದ ಕೊನೆಯಲ್ಲಿ ಸೇರಿಕೊಂಡಿದ್ದೆ. ಆ ಕಾರಣದಿಂದ ನನಗೆ ಮತ್ತೆ ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಪುನರ್ ನೇಮಕವಾಗುವವರೆಗೂ ಸಂಬಳವಿರಲಿಲ್ಲ. ಸುಮಾರು 3-4 ತಿಂಗಳು ರಜೆ ಮತ್ತು ಖರ್ಚಿಗೆ ಹಣವಿಲ್ಲದೆ ಚಿಂತಿತನಾಗಿದ್ದಾಗ ಡಾ. ಮಿಶ್ರಾಜಿ ಅವರು ನನ್ನ ಸಹಾಯಕ್ಕೆ ಬಂದರು.

ಈ ಮೂರು ತಿಂಗಳ ಕಾಲ ನಾನು ಪಾಲ್ ಇ. ಸೈಮನ್ಸ್ ಅವರಿಗೆ ಅನುವಾದಕನಾಗಿ ಕೆಲಸಮಾಡಲು ಸೂಚಿಸಿದ್ದರು. ಅದಕ್ಕಾಗಿ ನನಗೆ ತಿಂಗಳಿಗೆ 500 ರೂ ಸಂಬಳವನ್ನು ನಿಗದಿಪಡಿಸಿದ್ದರು. ಅದೇನು ಕಟ್ಟುನಿಟ್ಟಿನ ಕೆಲವಲ್ಲದೆ, ಸೈಮನ್ಸ್ ಕೇಳುವ ವಿಷಯಗಳ ಕೆಲವು ಹಾಗೂ ಸ್ಥಳೀಯ ಪ್ರದೇಶದ ಬಗ್ಗೆ ಕೇಳಿದಾಗ ಕನ್ನಡದಲ್ಲಿ ವಿಷಯ ಸಂಗ್ರಹಿಸಿ ಇಂಗ್ಲಿಷ್‌ನಲ್ಲಿ ವಿವರಿಸಿ ಹೇಳುವಂತಹದ್ದಾಗಿತ್ತು. ಆಗ ಅದೊಂದು ಕಷ್ಟದ ಕೆಲಸವಾಗೇನೂ ನನಗೆ ಅನ್ನಿಸಿರಲಿಲ್ಲ. ಆದರೆ ಈ ಕೆಲಸ ನನಗೆ ಹಣದ ಬಿಕ್ಕಟ್ಟಿನಿಂದ ಪಾರು ಮಾಡಿತ್ತು. ಅದು ನನ್ನ ಬೇಸಿಗೆ ರಜೆಯಲ್ಲಿ ಸಿಗದ ಸಂಬಳದ ಕೊರತೆಯನ್ನು ಕೂಡ ನೀಗಿಸಿತ್ತು.
ಈ ಮಧ್ಯೆ ಮೂರು ತಿಂಗಳ ರಜೆಯಲ್ಲಿ ನಮ್ಮ ಊರಿಗೆ ಡಾ. ಮಿಶ್ರಾಜಿ ಅವರನ್ನು ಕರೆದುಕೊಂಡು ಹೋಗುವ ಅವಕಾಶವಾಯಿತು. 1975ರ ಬೇಸಿಗೆ ದಿನಗಳಲ್ಲಿ ನಮ್ಮೂರಿಗೆ ಹೊರಟಿದ್ದೆವು. 1975ರ ನಮ್ಮ ಊರಲ್ಲಿ ನಮಗಿದ್ದ ಒಂದು ಮಾಳಿಗೆ ಮನೆ, ದನ ಕರುಗಳನ್ನು ಕಟ್ಟಲು ಬೇರೆ ತಗಡಿನ ಮನೆ ಇದ್ದವು. ಬಂದ ಅತಿಥಿಗಳಿಗೆ ಅನುಕೂಲವಾಗಲೆಂದು ವಾಸ್ತವ್ಯಕ್ಕೆ ಪ್ರತ್ಯೇಕ ಕೊಠಡಿಗಳಾಗಲೀ, ಹಾಸಿಗೆ ದಿಂಬುಗಳಾಗಲೀ ಮನೆಯಲ್ಲಿರಲಿಲ್ಲ. ಆದರೂ ಅದಾವುದರ ಬಗ್ಗೆ ಚಿಂತಿಸದೆ ಅವರನ್ನು ನಮ್ಮ ಊರಿಗೆ ಕರೆದುಕೊಂಡು ಹೋಗಿದ್ದೆ. ರಾತ್ರಿಗೆ ಊರು ಸೇರಿದ್ದ ನಾವು ಮನೆಯಲ್ಲಿ ಊಟ ಮಾಡಿ ಪ್ರೊ. ಮಿಶ್ರಾಜಿ ಅವರಿಗೆ ನಮ್ಮ ಹೊರಗಿನ ಜಗಲಿಯ ಮೇಲೆ ಸೊಳ್ಳೆಪರದೆ ಕಟ್ಟಿ ಮಲಗುವ ವ್ಯವಸ್ಥೆ ಮಾಡಿದೆ. ಬೆಳಗಿನ ಅಗತ್ಯಗಳಿಗೆ ಅವರನ್ನು ಸೀದಾ ಕರೆದುಕೊಂಡು ನಮ್ಮೂರ ಹತ್ತಿರವೇ ಹರಿಯುತ್ತಿರುವ ಸೂಳೆಕೆರೆ ಹಳ್ಳಕ್ಕೆ ಹೋಗಿ ಬೆಳಗಿನ ಕಾರ್ಯಗಳನ್ನು ಮುಗಿಸಿಕೊಂಡು ಬಂದೆವು. ಮನೆಯಲ್ಲಿ ಮಾಡಿದ ತಿಂಡಿ ತಿಂದು ಊರಲ್ಲಿನ ಗೆಳೆಯರಾದ ದಾವಣಗೆರೆ ನಾಗರಾಜ, ಬಾರಿಕರ ಮಾಂತೇಶಿ, ಮತ್ತಿತರ ಗೆಳೆಯರ ಜೊತೆ ತೋಟಕ್ಕೆ ಹೋದೆವು.

ಪ್ರೊ. ಮಿಶ್ರಾಜಿ ಅವರು ಒಬ್ಬ ಸಮಾಜ ವಿಜ್ಞಾನಿ – ಸಂಶೋಧಕ ಹಾಗೂ ಸಾಮಾಜಿಕ ಸಮಸ್ಯೆಗಳ ಆಳವಾದ ಜ್ಞಾನ ಉಳ್ಳವರಾಗಿದ್ದರು. ಊರಲ್ಲಿನ ಸಾಮಾಜಿಕ ಶೈಕ್ಷಣಿಕ ಹಾಗೂ ಕೂಲಿ ಕಾರ್ಮಿಕರ ಸ್ಥಿತಿಗತಿಗಳನ್ನು ವಿಚಾರಿಸುತ್ತಾ ಸೂಕ್ಷö್ಮವಾಗಿ ಎಲ್ಲರನ್ನು ಗಮನಿಸುತ್ತಿದ್ದರು. ಡಿ. ನಾಗರಾಜು ನಾನು ಪ್ರಾಥಮಿಕ ಶಾಲೆಯಲ್ಲಿ ಸಹಪಾಠಿಯಾಗಿದ್ದು ಈಗ ಊರಲ್ಲಿಯೇ ವೀಳ್ಯದೆಲೆ ತೋಟ ಮಾಡಿಕೊಂಡು ಆರಾಮವಾಗಿದ್ದನು. ಅವರ ತೋಟದಲ್ಲಿ ತೆರೆದ ಬಾವಿಯಲ್ಲಿ ಮಿಶ್ರಾಜಿಯೂ ನಾನು ಸೇರಿದಂತೆ ನಾವೆಲ್ಲರು ಈಜಾಡಿದೆವು. ಆಗ ಹೊರಬಂದು ತೋಟದಲ್ಲಿನ ತೆಂಗಿನ ಮರಗಳಿಂದ ಇಳಿಸಿದ ತೆಂಗಿನ ಹೆಂಡವನ್ನು ಸವಿದೆವು. ಮನೆಯಿಂದ ರೊಟ್ಟಿ ಬುತ್ತಿಯನ್ನು ಅಲ್ಲಿಗೇ ತರಿಸಿದ್ದು, ವೀಳ್ಯದೆಲೆಯ ತೋಟದಲ್ಲಿ ಎಲ್ಲರೂ ಕೂತು ಊಟ ಮಾಡಿದೆವು. ಮಿಶ್ರಾಜಿ ಅವರು ಸಂತೋಷದಿಂದಲೇ ಇಡೀ ದಿನ ಕಳೆದರು. ಮಾತಿನ ಮಧ್ಯೆ ನಮ್ಮೂರಲ್ಲಿನ ಶ್ರೀಮಂತರು ಮತ್ತು ದೊಡ್ಡ ರೀತಿಯಲ್ಲಿ ಒಕ್ಕಲುತನ ಮಾಡುವ ಬಣಕಾರ ಸಿದ್ದಪ್ಪನವರನ್ನು ನೋಡುವ ಆಸೆ ವ್ಯಕ್ತಪಡಿಸಿದರು. ಪ್ರೊ. ಅವರನ್ನು ಅವರ ಮನೆಗೂ ಕರೆದುಕೊಂಡು ಹೋದೆ. ನಮ್ಮಪ್ಪನ ಬಹುದೊಡ್ಡ ವಿಶ್ವಾಸಿಕರಾಗಿದ್ದ ಬಣಕಾರ ಸಿದ್ದಪ್ಪನವರು ಮಿಶ್ರಾಜಿ ಅವರ ಜೊತೆ ಗ್ರಾಮೀಣ ಅರ್ಥವ್ಯವಸ್ಥೆಯ, ಕೂಲಿಕಾರ್ಮಿಕರ, ಹಬ್ಬಹರಿದಿನಗಳ ಕುರಿತು ದೀರ್ಘವಾಗಿ ಚರ್ಚಿಸಿದರು. ಕೊನೆಗೆ ಟೀ ಕುಡಿದು ಅವರ ಮನೆಯಿಂದ ವಾಪಸ್ ಬಂದೆವು.

 

ಸಂಜೆ ಸಮಯಕ್ಕೆ ನಮ್ಮೂರಿನಲ್ಲಿಯೇ ಹೊಸದಾಗಿ ಕಲಿತಿದ್ದ ಬ್ಯಾಂಡ್‌ಅನ್ನು ಅವರ ಮುಂದೆ ಬಾರಿಸಿದರು. ಆ ಕಾಲಕ್ಕೆ ದೇಶ ವಿದೇಶಗಳನ್ನು ಪ್ರವಾಸ ಮಾಡಿ ನಮ್ಮ ದೇಶದಲ್ಲಿನ ದಕ್ಷಿಣ ಭಾರತಕ್ಕೆ ಮಾನವಶಾಸ್ತçದ ಅಧ್ಯಯನಕ್ಕೆ ಮುಖ್ಯಸ್ಥರಾಗಿದ್ದ, ಜಾತಿಯಲ್ಲಿ ಅತ್ಯುನ್ನತವಾದ ಶ್ರೇಣಿಗೆ ಸೇರಿದ ಬ್ರಾಹ್ಮಣರಾಗಿದ್ದ ಪ್ರಾಧ್ಯಾಪಕರೊಬ್ಬರು ಯಾವ ಹಮ್ಮು ಬಿಮ್ಮುಗಳಿಲ್ಲದೆ ಸಾಮಾನ್ಯ ಹಳ್ಳಿಗೆ ಬಂದು ಊರಲ್ಲಿಯ, ನಮ್ಮ ಮನೆಯಲ್ಲಿಯೇ ಉಳಿದು ಹೋಗಿದ್ದು ನಮ್ಮೂರಿನ ಮತ್ತು ನನ್ನ ಜೀವನ ಕಾಲಘಟ್ಟದಲ್ಲಿ ಮರೆಯಲಾಗದ ಸವಿನೆನಪಾಗಿ ಉಳಿದಿದೆ. ಅವರ ಸರಳ, ಸಜ್ಜನಿಕೆಯ ವ್ಯಕ್ತಿತ್ವದಿಂದಾಗಿ ಅಂದು ಪರಿಚಯವಾಗಿ, ನನಗೆ ಬೌದ್ಧಿಕ ಮತ್ತು ಆರ್ಥಿಕವಾಗಿ ಶಕ್ತಿ ನೀಡಿ, 50 ವರ್ಷಗಳ ನಂತರ ಇಂದಿಗೂ ನನ್ನ ಮಾರ್ಗದರ್ಶಕ ಗುರುಗಳಾಗಿ ಉಳಿದಿರುವುದು ನನ್ನ ಜೀವನದ ಭಾಗ್ಯವೆಂದೇ ಭಾವಿಸಿದ್ದೇನೆ. ಅವರು ಮಾಡಿದ ಯಾವ ಸಹಾಯವನ್ನೂ, ತಾನು ಮಾಡಿದೆನೆಂಬ ಅಹಂ ಎಲ್ಲೂ ಸುಳಿಯುವುದಿಲ್ಲ. ಅಂದು ನನಗೆ ಸಿಕ್ಕ ಈ ಪ್ರೊಫೆಸರ್ ನಂತರ ನನ್ನ ಸ್ನೇಹ ಬಳಗದ ಮಾದೇವ, ಅರ್ಕೇಶ, ಮಹೇಶ, ಭಕ್ತ, ಗೊಟ್ಟಿಗೆರೆ ಶಿವರಾಜು ಎಲ್ಲರಿಗೂ ಸ್ನೇಹದ ಗುರುಗಳಾಗಿ ಇಂದಿಗೂ ಉಳಿದಿದ್ದಾರೆ. ಈಗಲೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಶ್ವವಿದ್ಯಾಲಯಗಳಿಗೆ ವಿಶೇಷ ಉಪನ್ಯಾಸಕರಾಗಿ ಹೋಗಿ ಬರುತ್ತಿರುವುದನ್ನ ನೋಡಿದರೆ ಆಶ್ಚರ್ಯವಾಗುತ್ತದೆ. ಅವರಿಗಿಂತ ಇಪ್ಪತ್ತು ವರ್ಷಗಳಷ್ಟು ಕಿರಿಯರಾದ ನಾವುಗಳು ಅವರನ್ನು ಇಂದಿಗೂ ಅನುಸರಿಸುತ್ತಾ ಜೀವನ ಸಾಗಿಸುತ್ತಿದ್ದೇವೆ.

ನಾನು ಅಧ್ಯಾಪಕನಾಗಿದ್ದ ಸಮಯದಲ್ಲಿ ಶೈಕ್ಷಣಿಕ ವರ್ಷ ಮುಗಿದು ಮೂರು ತಿಂಗಳ ರಜೆಯಲ್ಲಿ ಊರಿಗೆ ಹೋಗಿದ್ದೆ. ಆಗ ಪಾಲ್ ಇ. ಸೈಮನ್ಸ್ಗೆ ನಾನು ಅನುವಾದಕನಾಗಿ ಕೆಲಸವೊಂದನ್ನು ಮಾಡಲು ಪ್ರೊ. ಮಿಶ್ರಾಜಿ ಅವರು ಒಪ್ಪಿಸಿದ್ದರು ಎಂಬುದನ್ನು ಆಗಲೇ ಹೇಳಿದ್ದೇನೆ. ಅದನ್ನು ನಾನು ಮಾಡುತ್ತಿದ್ದೆನಾದರೂ ನನಗೆ ಪ್ರತಿ ತಿಂಗಳು ಮುಗಿದಾಕ್ಷಣ ಸಂಬಳ ನೀಡಿರಲಿಲ್ಲ. ಆದರೆ ನಾನು ನನ್ನ ಹಳ್ಳಿಯಲ್ಲಿ ಇರುವಾಗ ಮೂರು ತಿಂಗಳ ಒಟ್ಟು ಸಂಬಳ 1500 ರೂಪಾಯಿಗಳನ್ನು ನನ್ನ ವಿಳಾಸಕ್ಕೆ ಮನಿ ಆರ್ಡರ್ ಮುಖಾಂತರ ಕಳಿಸಿದ್ದರು. ನಮ್ಮೂರಿಗೆ ಆಗತಾನೆ ಹೊಸದಾಗಿ ಬಂದಿದ್ದ ಪೋಸ್ಟ್ ಆಫೀಸ್ ಮತ್ತು ಅದರ ಉಸ್ತುವಾರಿಯನ್ನು ನಮ್ಮ ಊರಿನ ಗೌಡ್ರ ಈರಣ್ಣ ಎಂಬುವವರು ನೋಡಿಕೊಳ್ಳುತ್ತಿದ್ದರು. ಅವರು ನನಗೆ ಬಂದ 1500ರೂಗಳಷ್ಟು ಮನಿ ಆರ್ಡರ್ ಹಣ ನೋಡಿ ಆಶ್ರ‍್ಯಗೊಂಡಿದ್ದರು. ಆಗ ನಮ್ಮೂರಿಗೆ ಹೆಚ್ಚೆಂದರೆ 50-100ರೂಗಳು ಎಂ.ಓ. ಗಳು ಬರುತ್ತಿದ್ದ ಕಾಲ. ಇಷ್ಟೊಂದು ಹಣ ಬರುವಷ್ಟು ಈ ಹುಡುಗ ಹೆಂಗೆ ಬೆಳೆದ ಎಂಬೆಲ್ಲ ಯೋಚನೆ ಮಾಡುತ್ತಾ ಊರಿಗೆಲ್ಲ ಸುದ್ದಿ ಮಾಡಿದ್ದ. ಆಗ ನಮ್ಮ ಅಪ್ಪ ಇನ್ನೂ ಸಕ್ರಿಯವಾಗಿ ಕೆಲಸ ಕಾರ್ಯ ಮಾಡುತ್ತಿದ್ದರು. ‘ಅದೇನಪ್ಪ ಅಷ್ಟೊಂದು ದುಡ್ಡು, ಕಳಿಸಿದರ‍್ಯಾರು?’ ಎಂದು ಅಪ್ಪ ಕೂಡ ಆಶ್ಚರ್ಯದಿಂದ ಕೇಳಿದ್ದರು. ಆಗ ಪಡೆದ 1500 ರೂಗಳನ್ನು ಎಂ.ಓ. ಮೂಲಕ ಬಂದು ನೀಡಿದ ಸಂತೋಷವನ್ನು ಅಳೆಯಲಾಗದು. ಎಲ್ಲ ಕೊರತೆಗಳ ಆಗರದಲ್ಲಿ ಹೋರಾಡುತ್ತಿದ್ದ ನನಗೆ ಅದೊಂದು ಯಾವ ಮಾಪಕದಿಂದಲೂ ಅಳಿಯಲಾಗದ ಶಕ್ತಿವರ್ಧಕ ಔಷಧಿಯಂತೆ ಹುರುಪು ನೀಡಿ ಊರಲ್ಲಿ ನನ್ನ ಗೌರವ ಬೆಳೆಸಿತ್ತು.

ಮುಂದುವರಿಯುವುದು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending