ಲೈಫ್ ಸ್ಟೈಲ್
ಭಾರತದ ‘ಜೀವವೈವಿಧ್ಯ ಹಾಟ್ಸ್ಪಾಟ್’ ಗಳ ಬಗ್ಗೆ ನಿಮಗಿಷ್ಟು ತಿಳಿದಿರಲಿ : ಮಿಸ್ ಮಾಡ್ದೆ ಓದಿ..!
- ವೈಶಾಲಿ ದುರ್ಗಪ್ಪ
ಜೀವ ವೈವಿಧ್ಯವು ಸಸ್ಯ ಮತ್ತು ಪ್ರಾಣಿಗಳಿಂದ ಕೂಡಿರುವ ಒಂದು ಬೃಹತ್ ಆವರಣವೇ ಆಗಿದೆ.
ಈ ‘ಜೀವವೈವಿಧ್ಯ ಹಾಟ್ಸ್ಪಾಟ್’ ಒಂದು ಸಮೃದ್ಧ ಸಸ್ಯ ಸಂಪತ್ತು ಹಾಗೂ ಪ್ರಾಣಿಸಂಕುಲವನ್ನು ಹೊಂದಿದ್ದು ಅಳಿವಿನಂಚಿನಲ್ಲಿರುವ ಜೀವವೈವಿಧ್ಯದ ಪ್ರದೇಶವಾಗಿದೆ. ಮನುಷ್ಯ ತನ್ನ ಅಸ್ಮಿತೆಯನ್ನು ಉಳಿಸಿಕೊಳ್ಳಲು ಇದರ ಮೇಲೆ ನಿರಂತರವಾಗಿ ಗಮನ ಹರಿಸುವುದರ ಮೂಲಕ ಸಂರಕ್ಷಣೆ ಮಾಡಬೇಕಾಗಿರುವ ಪ್ರದೇಶವಾಗಿದೆ.
ಹಾಟ್ಸ್ಪಾಟ್ ಗಳನ್ನು ಗುರುತಿಸುವ ಪರಿಕಲ್ಪನೆಯನ್ನು ನಾರ್ಮನ್ ಮೇಯರ್ ಸಾವಿರ 1988 ರಲ್ಲಿ ಮಂಡಿಸಿದರು. ಇಂದಿಗೆ ಒಟ್ಟು 35 ಜೀವವೈವಿಧ್ಯ ಹಾಟ್ಸ್ಪಾಟ್ ಗಳನ್ನು ಪ್ರಪಂಚದಾದ್ಯಂತ ಗುರುತಿಸಲಾಗಿದೆ. ಅವುಗಳಲ್ಲಿ ಹೆಚ್ಚಿನವು ಉಷ್ಣವಲಯದ ಕಾಡುಗಳಲ್ಲಿವೆ.
ಭೂಮಿಯ ಮೇಲ್ಮೈಯು ಸುಮಾರು 2.3% ರಷ್ಟು ಈ ಹಾಟ್ಸ್ಪಾಟ್ ಗಳಿಂದ ಆವೃತವಾಗಿದೆ. ಇದರಲ್ಲಿ ಸುಮಾರು 50% ಸಸ್ಯ ಪ್ರಭೇದ ಹಾಗೂ 42% ಕಶೇರುಕ ಗಳನ್ನು ಒಳಗೊಂಡಿದೆ ಆದರೆ ಅತ್ಯಂತ ದುಃಖಕರ ಸಂಗತಿ ಎಂದರೆ ಈ ಜೀವವೈವಿಧ್ಯ ಹಾಟ್ಸ್ಪಾಟನ ಶೇ 86%ರಷ್ಟು ಭಾಗ ಆವಾಸಸ್ಥಾನ ಈಗಾಗಲೇ ಕಳೆದುಕೊಂಡಿದ್ದೇವೆ. ಇದಕ್ಕೆ ಮುಖ್ಯ ಕಾರಣ ಹವಾಮಾನ ಬದಲಾವಣೆ ಹಾಗೂ ಮುಖ್ಯವಾಗಿ ಮನುಷ್ಯನ ದುರ್ಬಳಕೆ ಎಂದರೆ ತಪ್ಪಾಗಲಾರದು.
ಒಂದು ಪ್ರದೇಶವನ್ನು ಹಾಟ್ಸ್ಪಾಟ್ ಎಂದು ಘೋಷಿಸಲು ಕೆಲವು ಮಾನದಂಡಗಳನ್ನು ಹೊಂದಿರ ಬೇಕು. ಜೀವವೈವಿದ್ಯವು ಕನಿಷ್ಠ 1500 ಜಾತಿಯ ನಾಳೀಯ ಸಸ್ಯಗಳು(vascular plants) ಗಳನ್ನು ಒಳಗೊಂಡಿರಬೇಕು.
ಭಾರತವು ತನ್ನ ಜೀವವೈವಿಧ್ಯದ ಶ್ರೀಮಂತಿಕೆ ಇಂದಾಗಿ, ವಿಶ್ವ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಇದನ್ನು ಭೂಮಿಯ ಜನಸಂಖ್ಯಾ ಶಾಸ್ತ್ರದಲ್ಲಿ ಕಾಣಬಹುದು. ಜೀವವೈವಿಧ್ಯದತೆ, ಜನಸಂಖ್ಯಾ ಶಾಸ್ತ್ರವು ಎರಡು ವಿಭಿನ್ನ ವಿಷಯಗಳಾಗಿದ್ದರೂ, ಮಾನವ ಜನಸಮೂಹವು ಜೀವವೈವಿಧ್ಯದತೆಯ ಮೇಲೆ ಹಲವಾರು ವಿಷಯಗಳಲ್ಲಿ ಅವಲಂಬಿತವಾಗಿದೆ. ಆದರೆ ಏರುಗತಿಯಲ್ಲಿ ಸಾಗುತ್ತಿರುವ ಜನಸಂಖ್ಯಾ ಸ್ಫೋಟವು ವನ್ಯ ಸಂಪತ್ತಿನ ಮೇಲೆ ಒತ್ತಡವನ್ನು ಹೇರುತ್ತಿದೆ.
ಭಾರತವು ಈಗಾಗಲೇ ತಿಳಿಸಿರುವಂತೆ, ಜೀವವೈವಿಧ್ಯದತೆಯಲ್ಲಿ, ಅತ್ಯಂತ ಸಂಪದ್ಭರಿತ ಹಾಗೂ ಶ್ರೀಮಂತ ರಾಷ್ಟ್ರವಾಗಿದ್ದು, ದೇಶವು ಇಂಡೋ-ಮಲಯ ಪರಿಸರ ವಲಯದಲ್ಲಿದೆ. ವಿಶ್ವದ ಒಟ್ಟು 35 ಹಾಟ್ ಸ್ಪಾಟ್ ಗಳಲ್ಲಿ, ಎರಡು ಭಾರತದಲ್ಲಿದೆ. ಇಂಡೋ-ಬರ್ಮಾ ವಲಯವು ಭಾಗಶಃ ಈಶಾನ್ಯ ಭಾಗದಲ್ಲಿದೆ.
ಭಾರತದಲ್ಲಿ ಅಂದಾಜು 350 ಸಸ್ತನಿ ಪ್ರಭೇದಗಳು (ವಿಶ್ವದ 7.6%ರಷ್ಟು)1224 ಪಕ್ಷಿ ಪ್ರಭೇದಗಳು (ವಿಶ್ವದ2.6%ರಷ್ಟು) 197 ಉಭಯಚರ ಪ್ರಭೇದಗಳು(ವಿಶ್ವದ 4.4%ರಷ್ಟು) 408 ಸರೀಸೃಪ ಪ್ರಭೇದಗಳು (ವಿಶ್ವದ 6.2%ರಷ್ಟು) 2546ಮೀನಿನ ಪ್ರಭೇದಗಳು (ವಿಶ್ವದ 11.7%ರಷ್ಟು) 15000ಹೂಬಿಡುವ ಸಸ್ಯ ಪ್ರಭೇದಗಳು (ವಿಶ್ವದ 6% ರಷ್ಟು) ಕಾಣಸಿಗುತ್ತವೆ.
ಇತಿಹಾಸ
ಭಾರತವು ಮೂಲತಃ ಗೊಂಡ್ವಾನ ಭೂಭಾಗಕ್ಕೆ ಸೇರಿದ್ದು, ಇಲ್ಲಿಂದಲೇ ಅನೇಕ ಜೀವಿಗಳ ಉಗಮವಾಗಿದೆ,, ಭಾರತ ಪರ್ಯಾಯ ದ್ವೀಪವು ಲಾರೇಷಿಯನ್ ಭೂಖಂಡದೋಂದಿಗಿನ ಘರ್ಷಣೆ ಇಂದಾಗಿ ಬಹಳಷ್ಟು ಜೀವರಾಶಿ ಅದಲು-ಬದಲಾದವು… ಇದಲ್ಲದೆ, ಜ್ವಾಲಾಮುಖಿ ಸ್ಫೋಟ ಹಾಗೂ 20ಮಿಲಿಯನ್ ವರ್ಷಗಳ ಹವಾಮಾನ ಬದಲಾವಣೆ ಇಂದಾಗಿ ಜೀವವೈವಿಧ್ಯದ ವಿಕಾಸಕ್ಕೆ ಕಾರಣ ಆಗಿದೆ., ನಂತರದ ದಿನಗಳಲ್ಲಿ ಏಷಿಯಾದ ಸಸ್ತನಿಗಳು ಭಾರತಕ್ಕೆ ಹಿಮಾಲಯದ ಮೂಲಕ ಆಗಮಿಸಿದವು. ಇದರ ಪರಿಣಾಮದಿಂದಾಗಿ ಭಾರತದ ಜೀವ ಪ್ರಭೇದಗಳಲ್ಲಿ 12.6%ಸಸ್ತನಿಗಳು ಮತ್ತು 4.5% ಪಕ್ಷಿಗಳು ಹಾಗೂ 4.5%ಸರಿಸೃಪಗಳು ಮತ್ತು 55.8% ಉಭಯಚರಗಳು ಸ್ಥಾನಿಕವಾಗಿವೆ.
ಭಾರತದಲ್ಲಿ ಒಟ್ಟು ನಾಲ್ಕು ಜೀವವೈವಿಧ್ಯ ಹಾಟ್ಸ್ಪಾಟ್ ಗಳನ್ನು ಕಾಣಬಹುದು
1. ಪಶ್ಚಿಮಘಟ್ಟಗಳು
ಭಾರತ ಪರ್ಯಾಯ ದ್ವೀಪದ ದಕ್ಷಿಣ ಭಾಗದ ಪಶ್ಚಿಮದಲ್ಲಿ ಈ ಬೆಟ್ಟದ ಸಾಲುಗಳು ಕಾಣಸಿಗುತ್ತವೆ. ಸಮುದ್ರ ತೀರಕ್ಕೆ ಹೊಂದಿಕೊಂಡಿರುವುದರಿಂದ ಹೆಚ್ಚು ಉಷ್ಣಾಂಶ ಹಾಗೂ ಹೆಚ್ಚು ಮಳೆ ಬೀಳುವ ಪ್ರದೇಶವಾಗಿದೆ. ಘಟ್ಟಗಳು ನಿತ್ಯಹರಿದ್ವರ್ಣ ಹಾಗೂ ಎಲೆ ಉದುರುವ ಕಾಡುಗಳಿಂದ ಆವರಿಸಲ್ಪಟ್ಟಿದೆ.
ಇಲ್ಲಿ ಕಂಡುಬರುವ ಸುಮಾರು 77%ರಷ್ಟು ಉಭಯಚರಗಳು ಹಾಗೂ 62%ರಷ್ಟು ಸರಿಸೃಪಗಳು ವಿಶ್ವದ ಬೇರೆ ಯಾವುದೇ ಭಾಗದಲ್ಲೂ ಗೋಚರಿಸುವುದಿಲ್ಲ. ಸುಮಾರು 450 ಕಿಲೋಮೀಟರ್ ಅಗಲವಿರುವ ಭೂ ಸೇತುವೆಯ ಮೂಲಕ ಭಾರತದೊಂದಿಗೆ ಸಂಪರ್ಕ ಹೊಂದಿರುವ ಶ್ರೀಲಂಕಾದಲ್ಲಿಯೂ ಸಹ ಘಟ್ಟದಲ್ಲಿರುವಷ್ಟೇ ಸಸ್ಯ ಹಾಗೂ ಪ್ರಾಣಿಗಳನ್ನು ಕಾಣಬಹುದು.
ಪಶ್ಚಿಮಘಟ್ಟದಲ್ಲಿ ಅಂದಾಜು 6000ಕ್ಕೂ ಹೆಚ್ಚು ನಾಳೀಯ ಸಸ್ಯಗಳು (vascular plants) ಇವೆ. ಇವುಗಳಲ್ಲಿ 3000 ದಷ್ಟು ಸಸ್ಯಗಳು ಸ್ಥಳೀಯ (endemic) ಆಗಿವೆ ಪ್ರಪಂಚದ ಎಲ್ಲಾ ಮೂಲೆಯಲ್ಲಿ ಕಂಡುಬರುವ ಕರಿಮೆಣಸು, ಏಲಕ್ಕಿಯಂತಹ ಮಸಾಲೆ ಪದಾರ್ಥಗಳು,ಪಶ್ಚಿಮ ಘಟ್ಟದಲ್ಲಿ ಹುಟ್ಟಿಕೊಂಡಿದ್ದು ಎಂದು ನಂಬಲಾಗಿದೆಯಾದರೂ, ಹೆಚ್ಚಿನ ಪ್ರಭೇದಗಳು ದಕ್ಷಿಣ ಭಾಗದಲ್ಲಿರುವ ಅಗಸ್ತ್ಯಮಲೈ ಬೆಟ್ಟದಲ್ಲಿ ಹೆಚ್ಚಾಗಿ ಕಾಣಿಸುತ್ತದೆ.ಈ ಪ್ರದೇಶದಲ್ಲಿ ಸುಮಾರು 450 ಜಾತಿಯ ಪಕ್ಷಿಗಳು 140 ಸಸ್ತನಿಗಳು 260 ಸರಿಸೃಪಗಳು ಮತ್ತು 75 ಉಭಯಚರಗಳು ವಾಸಿಸುತ್ತವೆ.
ಇಂತಹ ಸಂಪದ್ಭರಿತ ಜೀವವೈವಿಧ್ಯ ವು ಇಂದು ಅಳಿವಿನಂಚಿಗೆ ಸರಿಯುತ್ತಿರುವುದು ವಿಷಾದನೀಯವಾಗಿದೆ ಈ ಪ್ರದೇಶದ ಸಸ್ಯ ವರ್ಗವು ಮೂಲತಃ 190000 ಚದರ ಕಿಲೋಮೀಟರ್ ನಷ್ಟು ವಿಶಾಲವಾಗಿ ಹರಡಿತ್ತು. ಆದರೆ ಇಂದು 43000 ಚದರ ಕಿಲೋಮೀಟರ್ ಗೆ ಇಳಿದಿದೆ. ಮೂಲ ಕಾಡಿನ ಶೇ1.5% ರಷ್ಟು ಮಾತ್ರ ಶ್ರೀಲಂಕಾದಲ್ಲಿ ಇನ್ನೂ ಚಾಲ್ತಿಯಲ್ಲಿದೆ.
2. ಹಿಮಾಲಯ
ಭೂತಾನ್ ಈಶಾನ್ಯ ಭಾರತ ನೇಪಾಳದ ದಕ್ಷಿಣ ಮಧ್ಯ ಹಾಗೂ ಪೂರ್ವ ಭಾಗವನ್ನು ಒಳಗೊಂಡಿದೆ. ಹಿಮಾಲಯ ಪರ್ವತ ಶ್ರೇಣಿಗಳಲ್ಲಿರುವ ಮೌಂಟ್ ಎವರೆಸ್ಟ್ ಹಾಗೂ k2 ಶ್ರೇಣಿಗಳು ಪ್ರಪಂಚದ ಎತ್ತರ ಶಿಖರಗಳಲ್ಲಿ ಮೊದಲ ಸ್ಥಾನದಲ್ಲಿವೆ. ಜಗತ್ತಿನ ಕೆಲವು ಮುಖ್ಯ ಜೀವನದಿಗಳು ಹಿಮಾಲಯದಲ್ಲಿ ಹುಟ್ಟಿ ಹರಿಯುತ್ತವೆ. ಹಿಮಾಲಯವು 7200 ಮೀಟರ್ ಗಿಂತ ಎತ್ತರದ 100ಕ್ಕೂ ಹೆಚ್ಚು ಪರ್ವತಗಳನ್ನು ಒಳಗೊಂಡಿದೆ.
ಈ ಪ್ರದೇಶದಲ್ಲಿ ಸುಮಾರು 163ಅಳಿವಿನಂಚಿನಲ್ಲಿರುವ ಪ್ರಭೇದಗಳಿವೆ, ಇದರಲ್ಲಿ ಒಂದು ಕೊಂಬಿನ ಖಡ್ಗಮೃಗ(one horn rhinoceros) ವೈಲ್ಡ್ ಏಷಿಯನ್ ವಾಟರ್ ಬಫಲೋ(wild asiatic Buffalo) ಮತ್ತು 45 ಜಾತಿಯ ಸಸ್ತನಿಗಳು, 50 ಜಾತಿಯ ಪಕ್ಷಿಗಳು, 12 ಉಭಯಚರಗಳು,36 ಸಸ್ಯ ಪ್ರಭೇದಗಳಿವೆ. ರಿಲಿಕ್ಟ್ ಡ್ರಾಗನ್ ಫ್ಲೈ ಹಾಗೂ ಹಿಮಾಲಯನ್ ನ್ಯೂಟ್ ಅಳಿವಿನಂಚಿನಲ್ಲಿರುವ ಮುಖ್ಯ ಪ್ರಭೇದಗಳಾಗಿವೆ.
ಹಿಮಾಲಯದಲ್ಲಿ 10000 ಜಾತಿಯ ಸಸ್ಯಗಳಿವೆ, ಅವುಗಳಲ್ಲಿ ಮೂರನೇ ಒಂದು ಭಾಗ ಸ್ಥಾನಿಕ (endemic) ಆಗಿವೆ.ಮತ್ತು ಜಗತ್ತಿನ ಯಾವ ಮೂಲೆಯಲ್ಲಿಯೂ ಕಾಣಲು ಸಾಧ್ಯವಿಲ್ಲ.ಚೀರ್ ಫೀಸೆಂಟ್(cheer pheasant) ವೆಸ್ಟರ್ನ್ ಟ್ರಾಗೋಪನ್(western tragopan) ಹಿಮಾಲಯನ್ ಕ್ವಿಲ್(himalayan quill)ಹಿಮಾಲಯನ್ ರಣಹದ್ದು(himalayan vulture) ವೈಟ್ ಬೆಲ್ಲೀಡ್ ಹೆರಾನ್(white bellied heran) ಮುಂತಾದವುಗಳು ಅಳಿವಿನಂಚಿನಲ್ಲಿರುವ ಪ್ರಭೇದಗಳಿಗೆ ಉದಾಹರಣೆ ಆಗಿವೆ.
3. ಇಂಡೋ-ಬರ್ಮಾ ಪ್ರದೇಶ
ಇದು ಭಾರತದ ಈಶಾನ್ಯ ಭಾಗ(ಬ್ರಹ್ಮಪುತ್ರ ನದಿಯ ದಕ್ಷಿಣ) ಮಯನ್ಮಾರ್, ಚೀನಾದ ಯುವಾನ್ ಪ್ರಾಂತ್ಯದ ದಕ್ಷಿಣ ಭಾಗ, ಲಾವೋ,ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್ ಪ್ರಾಂತ್ಯ, ವಿಯೆಟ್ನಾಂ, ಕಾಂಬೋಡಿಯಾ, ಥೈಲ್ಯಾಂಡ್, ದೇಶದಲ್ಲಿ, 2ಮಿಲಿಯನ್ನಷ್ಟು ವಿಸ್ತಾರವಾದ ಪ್ರದೇಶದಲ್ಲಿ ಹರಡಿಕೊಂಡಿದೆ.
ಆದರೆ, ಕಳೆದ ಕೆಲವು ದಶಕಗಳಿಂದ ಇಂಡೋ-ಬರ್ಮಾ ವಲಯವು ಅತ್ಯಂತ ವೇಗವಾಗಿ ಕ್ಷೀಣಿಸುತ್ತಿದೆ..ಇತ್ತೀಚೆಗೆ ಈ ಪ್ರದೇಶದಲ್ಲಿ 6 ಜಾತಿಯ ಹೊಸ ಸಸ್ತನಿಗಳಾದ large-antlered muntjac,Annamite Muntjac gray-shanked douc,leaf deer, saola and Annamite striped rabbit ಕಂಡುಹಿಡಿಯಲಾಗಿದೆ ಕೋತಿಗಳು, ಲಂಗೂರ್ ಗಳು, ಗಿಬ್ಬನ್ ಗಳಂತಹ ನೂರಕ್ಕಿಂತ ಹೆಚ್ಚು ಪ್ರಭೇದಗಳನ್ನು ಇಲ್ಲಿ ಕಾಣಬಹುದು.
ಇಲ್ಲಿರುವ ಸಿಹಿನೀರಿನ ಆಮೆಗಳು (fresh water turtles)ಗಳು ಸ್ಥಳೀಯವಾಗಿ ವೆ (endemic) ವೈಟ್ ಇಯರ್ಡ್ಡ ನೈಟ್ ಹೆರಾನ್ ಗ್ರೇ ಕ್ರೌನ್ಡ್ ಕ್ರೊಸಿಯಸ್, ಆರೆಂಜ್ ನೆಕ್ಡ್,ಪ್ಯಾಟ್ರಿಡ್ಜ್ ಗಳಂತವು 13 ಸಾವಿರಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳಿವೆ ಹೆಚ್ಚಿನವು ಈ ವಲಯಕ್ಕೆ ಸ್ಥಾನಿಕ ಪ್ರಭೇದಗಳಿವೆ 13500 ಕ್ಕಿಂತ ಹೆಚ್ಚಿನ ಸಸ್ಯ ಪ್ರಭೇದಗಳಲ್ಲಿ ಅರ್ಧದಷ್ಟು ಈ ವಲಯಕ್ಕೆ ಸ್ಥಾನಿಕ (endemic) ಆಗಿದೆ. ಇಲ್ಲದೆ ಜಗತ್ತಿನ ಯಾವ ಭಾಗದಲ್ಲಿಯೂ ನೋಡಲು ಸಿಗುವುದಿಲ್ಲ.
4. ಸುಂಡಾಲ್ಯಾಂಡ್
ಈ ಪ್ರದೇಶವು ಏಷ್ಯಾಖಂಡದ ಆಗ್ನೇಯ ಭಾಗದ ಥೈಲ್ಯಾಂಡ್ ಸಿಂಗಾಪುರ್ ಇಂಡೋನೇಷಿಯಾ ಮಲೇಶಿಯಾ ದೇಶದಲ್ಲಿ ಈ ಪ್ರದೇಶವು ಹರಡಿಕೊಂಡಿದೆ ಭಾರತದ ನಿಕೋಬಾರ್ ದ್ವೀಪ ಸಮೂಹವು ಸಹ ಇದೇ ವಲಯದಲ್ಲಿ ಗುರುತಿಸಿಕೊಂಡಿದೆ ವಿಶ್ವಸಂಸ್ಥೆಯು ನಿಕೋಬಾರ್ ದ್ವೀಪ ಸಮೂಹವನ್ನು 2013ರಲ್ಲಿ ವಿಶ್ವ ಜೀವಮಂಡಲ ಮೀಸಲು ಪ್ರದೇಶ (ವರ್ಲ್ಡ್ ಬಯೋಗ್ರಫಿ ರಿಸರ್ವ್) ಎಂದು ಘೋಷಣೆ ಮಾಡಿತು ಈ ದ್ವೀಪಗಳು ಭೂ ಪರಿಸರ ಹಾಗೂ ಜಲ ಪರಿಸರ ವ್ಯವಸ್ಥೆ ಎರಡನ್ನು ಹೊಂದಿದೆ.
ಮ್ಯಾಂಗ್ರೋವ್ಸ್, ಸೀಗ್ರಸ್ ಬೆಡ್, ಹವಳ ಹಣ್ಣೆಗಳು, ಇಲ್ಲಿನ ಪ್ರಮುಖ ಆಕರ್ಷಣೆ ಡಾಲ್ಫಿನ್ಗಳು ತಿಮಿಂಗಿಲಗಳು ಮೀನು ಮೊಸಳೆಗಳು ಆಮೆಗಳು(turtles) ಏಡಿ ಕಡಲ ನಳ್ಳಿಗಳು, ಸೀಶೆಲ್ಗಳು ಜಲ ಪರಿಸರ ವ್ಯವಸ್ಥೆಗೆ ಮುಖ್ಯ ಉದಾಹರಣೆಗಳಾಗಿವೆ ಇಂತಹ ಅಮೂಲ್ಯ ಕಡಲ ಸಂಪನ್ಮೂಲಗಳನ್ನು ಅತಿಯಾಗಿ ಬಳಸುವುದರಿಂದ ಪರಿಸರ ವ್ಯವಸ್ಥೆಗೆ ಹಾನಿಯಾಗುವ ಸಾಧ್ಯತೆ ಹೆಚ್ಚಾಗಿದೆ.
ಜೀವವೈವಿಧ್ಯ ಹಾಟ್ಸ್ಪಾಟ್ಗಳು ಕ್ಷೀಣಿಸಲು ಮುಖ್ಯ ಕಾರಣಗಳು
- ಅವಾಸಸ್ಥಾನದ ಹಾನಿ
- ಮಾಲಿನ್ಯ ಹಾಗೂ ಪರಿಸರ ಅವನತಿ
- ಪ್ರಾಣಿಗಳನ್ನು ಬೇಟೆಯಾಡುವುದು
- ಹವಾಮಾನ ಬದಲಾವಣೆ
ಪರಿಸರ ಸಂರಕ್ಷಣೆ ಯತ್ತ ಇತ್ತೀಚಿನ ದಿನಗಳಲ್ಲಿ ಇಕೋಟೂರಿಸಂ ಎಂಬ ಪರಿಕಲ್ಪನೆ ಒಂದು ಶುರುವಾಗಿದ್ದು, ಬಹಳ ಪರಿಣಾಮಕಾರಿ ಆಗಿದೆ., ಪ್ರವಾಸ ಮಾಡುವಾಗ ಪರಿಸರ ಸೂಕ್ಷ್ಮ ವಲಯಗಳನ್ನು ಭೇಟಿ ಮಾಡಿ, ವ್ಯಕ್ತಿ ಒಬ್ಬನು ಸಸ್ಯ ಹಾಗೂ ಪ್ರಾಣಿ ಸಂಪತ್ತನ್ನು ಹತ್ತಿರದಿಂದ ಕಾಣುವುದರಿಂದ, ವನ್ಯಜೀವಿಗಳ ಪ್ರಾಮುಖ್ಯತೆಯನ್ನು ತಾನೇ ಸ್ವತಃ ಅನುಭವಿಸುವನು.
ಒಬ್ಬರಿಂದ ಮತ್ತೊಬ್ಬರಿಗೆ ಪರಿಸರದ ಅರಿವು ಹೆಚ್ಚಾಗಿ, ಪ್ರತಿಯೊಬ್ಬರೂ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಪರಿಸರ ಸಂರಕ್ಷಣೆಯಲ್ಲಿ ತೊಡಗಿಕೊಳ್ಳಲು ಅನುಕೂಲವಾಗುವ ಉದ್ದೇಶದಿಂದ ಪ್ರವಾಸೋದ್ಯಮದಲ್ಲಿ ಇತ್ತೀಚೆಗೆ ಹೆಚ್ಚಿನ ಒತ್ತನ್ನು ನೀಡಲಾಗಿದೆ.
ಒಟ್ಟಾರೆಯಲ್ಲಿ ವನ್ಯ ಸಂಪತ್ತು ಸಂಪೂರ್ಣವಾಗಿ ನಾಶ ಹೊಂದಿ ಮಾನವ ವಿನಾಶದತ್ತ ಸಾಗುವ ಮುನ್ನವೇ,ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ ಆಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
-
ದಿನದ ಸುದ್ದಿ3 days agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ2 days agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
-
ದಿನದ ಸುದ್ದಿ6 hours agoಶಿಕ್ಷಣ ಸಂಸ್ಥೆಗಳು ವೈಚಾರಿಕತೆ ; ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಾಗಲಿ
-
ದಿನದ ಸುದ್ದಿ2 days agoಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ
-
ಅಂತರಂಗ7 hours agoದಿಮಾಗಿ ನಕ್ಸಲ್-ನಗರ ನಕ್ಸಲ್



