ರಾಜಕೀಯ
ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ‘ಜಿ.ಎಂ. ಸಿದ್ದೇಶ್ವರ್’ ಸಂದರ್ಶನ : ಮಿಸ್ ಮಾಡ್ದೆ ಓದಿ..!
- ಸಂದರ್ಶನ: ಗಣೇಶ್ ಕಮ್ಲಾಪುರ
ಅಲೆ, ಅನುಕಂಪ, ಆಶೀರ್ವಾದದಿಂದ ಗೆದ್ದಿಲ್ಲ, ಅಭಿವೃದ್ಧಿಯಿಂದ ಗೆದ್ದಿದ್ದೇನೆ
ಅಭಿವೃದ್ಧಿ ಕಾರ್ಯಗಳೇ ನನ್ನ ಗೆಲವಿಗೆ ಶ್ರೀರಕ್ಷೆ
ಮೈತ್ರಿಪಕ್ಷಕ್ಕೆ ಚೌಕಿದಾರ್ ಮಣಿಯಲ್ಲ
ಮೂರು ಬಾರಿ ಸಂಸದನಾಗಿ ಕಳೆದ 15 ವರ್ಷಗಳಿಂದ ಕ್ಷೇತ್ರವನ್ನು ಸಮರ್ಥವಾಗಿ ಪ್ರತಿನಿಧಿಸುತ್ತಿದ್ದು, ನನ್ನ ಅಭಿವೃದ್ಧಿ ಕಾರ್ಯಗಳು ಗೆಲವಿಗೆ ಕಾರಣವಾಗಿವೆಯೇ ಹೊರತು ನನ್ನ ರಾಜಕೀಯ ವಿರೋಧಿಗಳು ಹೇಳುವಂತೆ ಯಾವುದೇ ಅಲೆ, ಅನುಕಂಪ, ಆಶೀರ್ವಾದದಿಂದ ನಾನು ಗೆದ್ದಿಲ್ಲ. ಸಂಸತ್ತಿನ ಒಳ, ಹೊರಗೆ ಜನರ ಸಮಸ್ಯೆ, ಸಂಕಷ್ಟದ ಕುರಿತು ದನಿ ಎತ್ತುವ ಮೂಲಕ ಕಳೆದ 5 ವರ್ಷದಲ್ಲಿ ಸುಮಾರು 10 ಸಾವಿರ ಕೋಟಿ ಅನುದಾನ ತಂದು ಜಿಲ್ಲೆಯನ್ನು ಅಭಿವೃದ್ಧಿಪಡಿಸಿ ಜನದನಿಯಾಗಿದ್ದೇನೆ. ಈ ಬಾರಿಯೂ ನಾನು ಮಾಡಿದ ಅಭಿವೃದ್ಧಿ, ಜನಪರ ಕಾರ್ಯಗಳೇ ಗೆಲವಿಗೆ ಕಾರಣವಾಗಲಿವೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸುತ್ತಾರೆ ಮೂರು ಬಾರಿ ಸಂಸದರಾಗಿ ನಾಲ್ಕನೇ ಬಾರಿ ಬಿಜೆಪಿ ದಾವಣಗೆರೆ ಲೋಕಸಭಾ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ಜಿ.ಎಂ. ಸಿದ್ದೇಶ್ವರ್. ಈ ಕುರಿತು ಅವರು “ಸುದ್ದಿದಿನ”ಕ್ಕೆ ನೀಡಿದ ಸಂದರ್ಶನ ಪೂರ್ಣಪಾಠ ಇಲ್ಲಿದೆ.
ಚುನಾವಣಾ ಪ್ರಚಾರದ ಭರಾಟೆ ಹೇಗಿದೆ?
ಚುನಾವಣಾ ಘೋಷಣೆಗೂ ಮುನ್ನವೇ ಶೇ. 60ರಷ್ಟು ಭಾಗ ಜಿಲ್ಲೆಯ ತಾಲೂಕು, ಗ್ರಾಮಗಳನ್ನು ಸುತ್ತಿದ್ದೇನೆ. ಈಗಾಗಲೇ ಹೊನ್ನಾಳಿ ತಾಲೂಕಿನ 80 ಹಳ್ಳಿಗಳು, ಮಾಯಕೊಂಡ ಕ್ಷೇತ್ರದ 60 ಹಳ್ಳಿಗಳು, ಹರಪನಹಳ್ಳಿ ಕ್ಷೇತ್ರದಲ್ಲಿ ಶೇ. 75ರಷ್ಟು ಭಾಗ ಹಾಗೂ ಹರಿಹರ, ಜಗಳೂರಿನ ನೂರಾರು ಹಳ್ಳಿಗಳಿಗೆ ತಲುಪಿದ್ದೇನೆ. ಇನ್ನೊಮ್ಮೆ ಎಲ್ಲಾ ತಾಲೂಕು, ಗ್ರಾಮಕ್ಕೆ ತೆರಳಲಿದ್ದೇನೆ. ಎಲ್ಲೆಡೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸುಭದ್ರ ಆಡಳಿತ, ದಿಟ್ಟ ನಿರ್ಧಾರ ಕೈಗೊಳ್ಳುವಂತಹ ನಾಯಕತ್ವವನ್ನು ಜನರು ಪ್ರಧಾನಿ ಮೋದಿ ಅವರಲ್ಲಿ ಕಂಡಿದ್ದು, ಈ ಬಾರಿಯೂ ಕಮಲದ ಕೈಹಿಡಿಯಲು ಜನತೆ ನಿರ್ಧರಿಸಿಯಾಗಿದೆ.
3 ಬಾರಿ ಸಂಸದರಾಗಿ ಜಿಲ್ಲೆಗೆ ನಿಮ್ಮ ಕೊಡುಗೆ ಏನು?
ಕಳೆದ 5 ವರ್ಷದ ಅವಧಿಯಲ್ಲಿಯೇ ಕೇಂದ್ರದಿಂದ ಜಿಲ್ಲೆಗೆ ನಾನು ತಂದಿರುವ ಅನುದಾನ ಬರೋಬ್ಬರಿ 10 ಸಾವಿರ ಕೋಟಿ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, ರೇಲ್ವೆ ಅಭಿವೃದ್ಧಿ, ಸ್ಮಾರ್ಟ್ಸಿಟಿ, ತುಂಗಾನಾಲಾ ಆಧುನೀಕರಣ, ಅಮೃತ್ ಯೋಜನೆ, ಸಂಸದರ ಸ್ಥಳೀಯಾಭಿವೃದ್ಧಿ, ಇಎಸ್ಐ ಆಸ್ಪತ್ರೆ ಮೇಲ್ದರ್ಜೆಗೆ ಯೋಜನೆ ಸೇರಿದಂತೆ ನೂರಾರು ಯೋಜನೆ ಜಿಲ್ಲೆಗೆ ಒತ್ತುತಂದಿದ್ದೇನೆ. ಇದರಲ್ಲಿ ಕೆಲ ಯೋಜನೆಗಳು ಪೂರ್ಣಗೊಂಡಿದ್ದು, ಮತ್ತೊಂದಿಷ್ಟು ಪ್ರಗತಿಯಲ್ಲಿವೆ. ಅಲ್ಲದೆ, ಜಿಲ್ಲೆಯ ಕಟ್ಟಕಡೆ ಗ್ರಾಮ ತಲುಪಿ, ಅಲ್ಲಿನ ಕಷ್ಟಕಾರ್ಪಣ್ಯ ಅರಿತಿದ್ದೇನೆ. ತಪ್ಪದೇ ನನ್ನ ಕಚೇರಿಯಲ್ಲಿ ಜನಸಂಪರ್ಕ ಸಭೆ ಆಯೋಜಿಸಿ ಸಾರ್ವಜನಿಕರಿಂದ ಆಹವಾಲು ಸ್ವೀಕಾರ, ಸಮಸ್ಯೆ ಶೀಘ್ರ ಪರಿಹಾರ ಕಾರ್ಯ ನಡೆಸುತ್ತಾ ಬಂದಿದ್ದೇನೆ.
ಜೆಡಿಎಸ್, ಕಾಂಗ್ರೆಸ್ ಮೈತ್ರಿಯಿಂದ ನಿಮಗೆ ಗೆಲವು ಕಷ್ಟ ಸಾಧ್ಯವೇ?
ಯಾವ ಮಹಾಘಟಬಂದನ್ ಏರ್ಪಟ್ಟರೂ, ಎಷ್ಟೇ ಎದುರಾಳಿಗಳು ಹುಟ್ಟಿಕೊಂಡರೂ ದೇಶದಲ್ಲಿ ಬಿಜೆಪಿ ಈ ಬಾರಿ 300ಕ್ಕೂ ಅಧಿಕ, ರಾಜ್ಯದಲ್ಲಿ 22ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ. ಮೋದಿ ಅಲೆ ಸುನಾಮಿಯಂತಿದೆ. ನಮ್ಮ ಜಿಲ್ಲೆಯಲ್ಲಿ ಈ ಬಾರಿ 1.20 ಲಕ್ಷ ನೂತನ ಮತದಾರರಲ್ಲಿ ಶೇ. 80ರಷ್ಟು ಯುವಮತದಾರರು ಮೋದಿ ಸುಭದ್ರ ಆಡಳಿತ, ದೇಶದ ಭದ್ರತೆ ವಿಷಯದಲ್ಲಿ ಅವರು ತೆಗೆದುಕೊಂಡ ದಿಟ್ಟ ನಿರ್ಧಾರ ಬೆಂಬಲಿಸಿದ್ದಾರೆ. ಆದ್ದರಿಂದ ಯಾರು ಎಷ್ಟೇ ಒಗ್ಗಟ್ಟಾದರೂ ಬಿಜೆಪಿ ಚೌಕಿದಾರ್ರನ್ನು ಮಣಿಸಲು ಸಾಧ್ಯವೇ ಇಲ್ಲ. ಇನ್ನು, ಜಿಲ್ಲೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿಯಿಂದ ಬಿಜೆಪಿಗೆ ಗೆಲವಿಗೆ ಯಾವುದೇ ತೊಂದರೆ ಇಲ್ಲ. ಮೂರು ಬಾರಿ ಸಂಸದನಾಗಿ ಮಾಡಿರುವ ಅಭಿವೃದ್ಧಿ ಕಾರ್ಯ ನನ್ನ ಗೆಲವಿನ ಅಂತರವನ್ನು ಈ ಬಾರಿ ಮತ್ತಷ್ಟು ಹೆಚ್ಚಿಸಲಿವೆ.
ನಿಮ್ಮ ಎದುರಾಳಿಯ ನಕಾರಾತ್ಮಕ ಅಂಶಗಳು ಗೆಲವಿಗೆ ಸಹಾಯಕವೇ?
ಖಂಡಿತಾ ಇಲ್ಲ. ಎದುರಾಳಿ ಎಷ್ಟೇ ಪ್ರಭಲ ಅಥವಾ ದುರ್ಬಲನಾಗಿದ್ದರೂ ಅದು ನನಗೆ ಲೆಕ್ಕಕ್ಕಿಲ್ಲ. ನಾನು ಯಾವುದೇ ಯಾರದ್ದೋ ಅಲೆ, ಮತ್ಯಾರದ್ದೋ ಅನುಕಂಪ, ಇನ್ಯಾರದ್ದೋ ಆಶೀರ್ವಾದದಿಂದಲೇ ಗೆದ್ದುಬಂದಿಲ್ಲ. ನಾನು ಜನತೆಯ ಆಶೀರ್ವಾದಿಂದ ಗೆದ್ದಿದ್ದೇನೆ. ನಾನು ಮತ್ತು ನಮ್ಮ ಬಿಜೆಪಿ ಪಕ್ಷ ಮಾಡಿದ ಅಭಿವೃದ್ಧಿ ಕಾರ್ಯಗಳು, ಜನಸಾಮಾನ್ಯರಿಗೆ ತಕ್ಷಣಕ್ಕೆ ಸ್ಪಂದಿಸುವ, ಅವರ ಸಮಸ್ಯೆಗೆ ಮುಕ್ತಿ ಕಾಣಿಸುವಂತ ಜನಪರ ಖಾಳಜಿ, ನಿಲುವುಗಳು, ದಿಟ್ಟ ನಿರ್ಧಾರ ಗೆಲವಿಗೆ ಸಹಾಯಕವಾಗಿವೆಯೇ ವಿನಾ ಎದುರಾಳಿ ಸ್ಪರ್ಧಿಗಳ ನಕಾರಾತ್ಮಕ ಅಂಶ, ವೈಫಲ್ಯ ಕಾರಣವಲ್ಲ. ಈ ಬಾರಿಯು ಜಿಲ್ಲೆಯಲ್ಲಿ ಮೈತ್ರಿ ಪಕ್ಷಗಳು ನಮ್ಮೊಂದಿಗೆ ಪೈಪೋಟಿ ನಡೆಸಲು ಸಜ್ಜಾಗಿವೆ. ಆದರೆ, ನಾನು ಮಾಡಿದ ಅಭಿವೃದ್ಧಿ ಕಾರ್ಯ ನನ್ನ ಕೈ ಹಿಡಿಯಲಿದ್ದು, ಗೆಲವು ನಿಶ್ಚಿತ.
ಗೆದ್ದರೆ, ಮುಂದಿನ ನಿಮ್ಮ ಯೋಜನೆಗಳೇನು?
ಗೆದ್ದರೇ. ಎಂಬುದು ಬೇಡ, ಗೆದ್ದೆ ಗೆಲ್ಲುವೆ. ಮುಖ್ಯವಾಗಿ, 3 ದಶಕಗಳ ಬೇಡಿಕೆಯಾದ ದಾವಣಗೆರೆಯ ಅಶೋಕ ಥೇಟರ್ ಮೇಲ್ಸೆತುವೆ ನಿರ್ಮಾಣಕ್ಕೆ ಮುಂದಾಗುವೆ. 2014ರಲ್ಲೇ ಬಜೆಟ್ನಲ್ಲಿ 35 ಕೋಟಿ ಮೇಲ್ಸೇತುವೆ ನಿರ್ಮಾಣಕ್ಕೆ ಮೀಸಲಿಡಲಾಗಿದೆ. ಆದರೆ, ರಾಜ್ಯ ಸರ್ಕಾರ, ಜಿಲ್ಲಾಡಳಿತದ ನಿರ್ಲಕ್ಷ್ಯ, ಅಸಹಕಾರದಿಂದ ನೆನೆಗುದಿಗೆ ಬಿದ್ದಿದೆ. ಲೋಕಾ ಚುನಾವಣೆ ನಂತರ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಮತ್ತೆ ಅಧಿಕಾರಕ್ಕೇರಿ, ಕೇಂದ್ರ, ರಾಜ್ಯಗಳೆರೆಡು ಬಿಜೆಪಿ ಅಧಿಕಾರದಲ್ಲಿರುವುದರಿಂದ ಮೇಲ್ಸೆತುವ ಖಂಡಿತಾ ಪೂರ್ಣಗೊಳ್ಳುತ್ತದೆ. ಅಲ್ಲದೆ, ಜಿಲ್ಲೆಯಲ್ಲಿ ಕಾರ್ಖಾನೆಗಳ ಸಂಖ್ಯೆ ಕಡಿಮೆ ಇದೆ ಎಂಬ ಕೊರಗು ಹೋಗಲಾಡಿಸುವ ನಿಟ್ಟಿನಲ್ಲಿ ರಾಸಾಯನಿಕ ಕಾರ್ಖಾನೆಗಳ ಘಟಕಗಳ ಅಭಿವೃದ್ಧಿ, ದೇಶದಲ್ಲಿಯೇ ಅತಿದೊಡ್ಡದಾದ 2ಜಿ ಎಥೆನಾಲ್ ಘಟಕ 2 ಲಕ್ಷ ಮಿಲಿಯನ್ ಟನ್ ಸಾಮಾಥ್ರ್ಯವಿದ್ದು, ಇದರಿಂದ ಪ್ರತ್ಯಕ್ಷ, ಪರೋಕ್ಷವಾಗಿ ಸಾವಿರಾರು ಜನರಿಗೆ ಉದ್ಯೋಗವಕಾಶ ಸಿಗಲಿದೆ. ಅಲ್ಲದೆ, ಶೀಘ್ರವೇ ರಾಷ್ಟ್ರೀಯ ಹೆದ್ದಾರಿ ಮುಂದಿನ ವರ್ಷದೊಳಗೆ ಪೂರ್ಣಗೊಳಿಸುವುದು ಸೇರಿದಂತೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಯತ್ನಿಸುವೆ.

ದಿನದ ಸುದ್ದಿ
ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’
ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ . ಸಿ. ಹೆಚ್ ಅವರು ಉದ್ಘಾಟಿಸಿದರು.
ಸನಾವುಲ್ಲಾ ನವಿಲೇಹಾಳು ಅವರು ಉಪನ್ಯಾಸ ಮಾಡಿ ಹೊಸ ತಲೆಮಾರಿನವರು ಸಮಾಜಿಕ ಜಾಲತಾಣಗಳಲ್ಲಿ ಗೇಮ್ , ರೀಲ್ಸ್ ಇತರೆ ವಿಷಯಗಳಲ್ಲಿ ಮುಳುಗಿ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ಕಟ್ಟಿಕೊಳ್ಳಬೇಕು. ತ್ಯಾಗ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆಕೊಟ್ಟರು.
ಉಪಸ್ಥಿತರಿದ್ದ ಕಾಲೇಜಿನ ಕುಲಸಚಿವರಾದ ಶ್ರೀ ಜಗದೀಶ್ ಹೆಚ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮಗೆ ಎದುರಾಗುವ ಸಮಸ್ಯೆಗಳನ್ನು ಮೆಟ್ಟಿನಿಂತು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರು. ಸಿಸಿಟೆಕ್ ಮ್ಯಾನೇಜರ್ ಆದ ಶ್ರೀ ಶಿವಕುಮಾರ ಸ್ವಾಮಿ ಎಸ್.ಹೆಚ್. ಸಂಯೋಜಕರಾದ ಶ್ರೀ ಮತಿ ಆಸೀಯಾ ಬಾನು ಬಿ. ಪ್ರಾಸ್ಥಾವಿಕವಾಗಿ ಮಾತನಾಡಿದರು ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಬೃಂದ ಕಾರ್ಯಕ್ರಮ ನಿರೂಪಿಸಿದರು,
ವೈಷ್ಣವಿ, ಲಾವಣ್ಯ, ಭಾವನ ಪ್ರಾರ್ಥಿಸಿದರು, ಉಪನ್ಯಾಸಕಿ ಪ್ರಿಯಾಂಕ ಟಿ ಎಸ್ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ2 days agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ3 days agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ3 days agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ23 hours agoಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

