ರಾಜಕೀಯ
ಬಿಜೆಪಿ, ಕಾಂಗ್ರೆಸ್, ಆರೆಸ್ಸೆಸ್ ನ ಎರಡು ಮುಖಗಳು ಮತ್ತು ಮುಸ್ಲಿಮರು
ಭಯಮುಕ್ತ, ಹಸಿವು ಮುಕ್ತ, ಸದೃಢ ಸಮಾಜದ ನಿರ್ಮಾಣ ಕಾಂಗ್ರೆಸ್ ನ ಈ ಬಾರಿಯ ಚುನಾವಣೆಯ ತಲೆಬರಹ. ಈ ಕುರಿತು ಬ್ಯಾನರ್ ಗಳು, ಭಿತ್ತಿಪತ್ರಗಳು ಎಲ್ಲೊಂದರಲ್ಲಿ ರಾರಾಜಿಸುತ್ತಿದೆ. ಅಹಿಂದ ಮಂತ್ರ ಸದಾ ಜಪಿಸುತ್ತಿರುವ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಜನರಲ್ಲಿ ಅದರಲ್ಲೂ ಮುಸ್ಲಿಮರಲ್ಲಿ ಭೀತಿಯ ಗಂಟೆ ಬಡಿದು ರಾಜಕೀಯ ನಡೆಸುತ್ತಿದೆ.
ಧರ್ಮ ರಾಜಕೀಯ, ಜಾತಿ ರಾಜಕೀಯ, ಹೆಣ ರಾಜಕೀಯ, ಹತ್ಯಾ ರಾಜಕಾರಣಗಳಿಗೆ ರಾಜ್ಯದಲ್ಲಿ ಕೊಂಚ ತೆರೆ ಬಿದ್ದರೆ, ಇತ್ತ ಭೀತಿಯ ರಾಜಕೀಯ ಟ್ರೆಂಡ್ ಪ್ರಾರಂಭವಾಗಿದೆ. ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ ಹರಿದ ರಕ್ತಗಳಿಗೆ- ಕಾಂಗ್ರೆಸ್ ಬಿಜೆಪಿಯೆಡೆಗೆ, ಬಿಜೆಪಿ ಕಾಂಗ್ರೆಸ್ ನೆಡೆಗೆ ಬೊಟ್ಟು ಮಾಡಿದರೆ, ಇವೆರಡರ ಮಧ್ಯೆ ಇರುವ ಆರೆಸ್ಸೆಸ್ ಮಾತ್ರ ಚುನಾವಣೆಗೆ ಬೇಕಾದ ಎಲ್ಲಾ ಪೂರ್ವ ಬೆಂಬಲವನ್ನು ಕಾಂಗ್ರೆಸ್ ಮತ್ತು ಬಿಜೆಪಿಗೆ ಮಾಡಿ ಮುಗಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಆರೆಸ್ಸೆಸ್ ನ ಎರಡು ಮುಖಗಳು. ಬಿಜೆಪಿಯವರು ಮುಸ್ಲಿಮರನ್ನು ಬಹಿರಂಗವಾಗಿ ವಿರೋಧಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಮುಸ್ಲಿಮರ ಅಧಃಪತನಕ್ಕೆ ದೇಶದಲ್ಲಿ ಕಾರಣವಾಗಿದೆ. ಈ ಬಗ್ಗೆ ಅವಲೋಕಿಸಿದರೆ ಬಿಜೆಪಿಗಿಂತಲೂ ಕಾಂಗ್ರೆಸ್ ಮುಸಲ್ಮಾನರಿಗೆ ಅತ್ಯಂತ ಅಪಾಯಕಾರಿ.
ಬಿಜೆಪಿ ಮತ್ತು ಕಾಂಗ್ರೆಸ್ ಮುಸ್ಲಿಮರನ್ನು ಇಂದು ಪುಟ್ಬಾಲ್ ರೀತಿಯಲ್ಲಿ ಬಳಕೆ ಮಾಡುತ್ತಿದೆ. ಕಾಂಗ್ರೆಸ್ ಗೆ ಮುಸ್ಲಿಮರು ಕೇವಲ ಮತಬ್ಯಾಂಕ್ ಅಷ್ಟೆ. ಇಂದು ದೇಶದ ಮುಸ್ಲಿಮರಲ್ಲಿ ಬಿಜೆಪಿ, ಆರೆಸ್ಸೆಸನ್ನು ತೋರಿಸಿ ಭಯವನ್ನು ತೋರಿಸಿ, ಭೀತಿಯನ್ನು ಉಂಟುಮಾಡಿ ಹೊಡೆದು ಆಳುವ ರಾಜಕೀಯ ಕಾಂಗ್ರೆಸ್ ಮಾಡುತ್ತಿದೆ. ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶದಲ್ಲಿ ಮುಸ್ಲಿಮರನ್ನು ಇಬ್ಭಾಗಗೊಳಿಸಿ, ಭಾರತದ ವಿಭಜನೆಗೆ ಕಾಂಗ್ರೆಸ್ ಕಾರಣವಾಯಿತು. ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ದೇಶದಲ್ಲಿ ಹಿಂದೂ- ಮುಸ್ಲಿಮರ ಮಧ್ಯೆ ಭೀತಿ ಸೃಷ್ಟಿಸಿ ಆಂತರಿಕ ಅಭದ್ರತೆಯನ್ನು ಸದ್ದಿಲ್ಲದೆ ಮಾಡುತ್ತಿದೆ ಎಂದರೆ ತಪ್ಪಾಗಲಾರದು.
ಮುಸ್ಲಿಮರ ಅಸುರಕ್ಷೆತೆಯನ್ನು ಬಂಡವಾಳ ಮಾಡಿಕೊಂಡ ಕಾಂಗ್ರೆಸ್. ನಿಜವಾಗಿಯೂ ಜನರಲ್ಲಿ ಭಯವನ್ನು, ಭೀತಿಯನ್ನು ಉಂಟುಮಾಡಿದೆ. ಬಿಜೆಪಿಯನ್ನು ತೋರಿಸಿ, ರಾಜಕೀಯ ಲಾಭ ಪಡೆಯುವುದೇ ಕಾಂಗ್ರೆಸ್ ನ ಪ್ರಮುಖ ತಂತ್ರವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಗೋಹತ್ಯೆ ನಿಷೇಧ ಮಾಡುತ್ತಾರೆ, ಮುಸ್ಲಿಮರಿಗೆ ರಕ್ಷಣೆ ಇಲ್ಲ. ಮುಸ್ಲಿಮರ ಹತ್ಯೆ ನಡೆಯುತ್ತದೆ. ಹಾಗಾಗಿ ಈ ಬಾರಿ ಬಿಜೆಪಿಯನ್ನು ಅಧಿಕಾರಕ್ಕೆ ಬಾರದ ರೀತಿಯಲ್ಲಿ ತಡೆದು ಮುಸಲ್ಮಾನರನ್ನು ರಕ್ಷಿಸಿಕೊಳ್ಳಬೇಕು. ಅದಕ್ಕಾಗಿ ಕಾಂಗ್ರೆಸ್ಸನ್ನು ಗೆಲ್ಲಿಸಬೇಕು ಎಂದು ಜನರನ್ನು ಬೆದರಿಸಿ ರಾಜಕೀಯ ಮಾಡುತ್ತಿದ್ದು, ಬಿಜೆಪಿಗೆ ಪರ್ಯಾಯ ಕಾಂಗ್ರೆಸ್ ಎನ್ನುವ ಭ್ರಮೆಯನ್ನು ಮುಸ್ಲಿಮರಲ್ಲಿ ಉಂಟು ಮಾಡುವ ಮೂಲಕ ಮುಸ್ಲಿಮರು ಪರ್ಯಾಯ ರಾಜಕೀಯ ಶಕ್ತಿಯಾಗಿ ಬೆಳೆಯದಂತೆ ತಡೆಹಿಡಿದಿದ್ದಾರೆ. ದೇಶದಲ್ಲಿ 172 ಮಿಲಿಯನ್ ಮುಸ್ಲಿಮರಿದ್ದು ಅವರ ರಾಜಕೀಯ ಪ್ರಾಶಸ್ತ್ಯವನ್ನು ಸೀಮಿತಗೊಳಿಸಿ ಅವರ ರಾಜಕೀಯ ಬೆಳವಣಿಗೆಯನ್ನು ತಡೆ ಹಿಡಿದಿದೆ.
60 ವರ್ಷಗಳ ಕಾಲ ದೇಶದಲ್ಲಿ ಕಾಂಗ್ರೆಸ್ ದೇಶದ ದಲಿತರ, ಹಿಂದುಳಿದವರ, ಮುಸಲ್ಮಾನರ, ಕ್ರೈಸ್ತರ ಅಭಿವೃದ್ಧಿ ಮಾಡಿ ಅಧಿಕಾರ ಪಡೆದದ್ದಲ್ಲ. ಆರೆಸ್ಸೆಸ್ ನ ಕೋಲು, ಚಡ್ಡಿಗಳನ್ನು ತೋರಿಸಿ ಬೆದರಿಸಿ ಅದು ನಿರಂತರ ಅಧಿಕಾರವನ್ನು ಪಡೆಯಿತು. ಮನುವಾದದ ಮೃದು ಸಿದ್ದಾಂತಗಳು ಕಾಂಗ್ರೆಸ್ ನ ಜೀವಾಳವಾಗಿದೆ. ಹಾಗಾಗಿ ಬಿಜೆಪಿ ದೇಶದ ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ನೇರ ವಿರೋಧಿಯಾಗಿದೆ. ಕಾಂಗ್ರೆಸ್ ನಾನು ಬಿಜೆಪಿಯಿಂದ ರಕ್ಷಿಸುತ್ತೇನೆಂದು ಹೇಳಿ ಬಳಿಕ ಬೆನ್ನಿಗೆ ಚೂರಿ ಹಾಕಿದ ಪಕ್ಷವಾಗಿದೆ. ಇವೆರಡರ ಮೂಲ ಉದ್ದೇಶ ಒಂದೇ ಆಗಿದೆ. ಆದಿವಾಸಿಗಳ ಬಳಿಕ ಎರಡನೇ ದರ್ಜೆಯ ಜೀವನವನ್ನು ಮುಸ್ಲಿಮರು ನಡೆಸುತ್ತಿದ್ದಾರೆ. ಅಂದರೆ ದಲಿತರಿಗಿಂತಲೂ ಮುಸ್ಲಿಮರು ಆರ್ಥಿಕವಾಗಿ, ಸಾಮಾಜಿಕವಾಗಿ ದುರ್ಬಲರಾಗಿದ್ದಾರೆ. ಲಕ್ಷಾಂತರ ರೂ. ಖರ್ಚುಮಾಡಿ ಮುಸ್ಲಿಮರ ಕಣ್ಣಿಗೆ ಮಣ್ಣೆರೆಚಲು ಸಾಚಾರ್ ಕಮಿಟಿ ವರದಿಯನ್ನು ಮಾತ್ರ ಸರಕಾರ ಸಿದ್ಧಪಡಿಸಿದೆಯೇ ಹೊರತು ಅದರಲ್ಲಿ ಸೂಚಿಸಿರುವ ತಕ್ಷಣ ವರದಿ ಜಾರಿ ಮಾಡಬೇಕೆಂಬುವುದನ್ನು ಯುಪಿಎ ಸರಕಾರ ಮಾಡಿಲ್ಲ. ಕಾಂಗ್ರೆಸ್ ಸರಕಾರವಿರುವ ಯಾವ ರಾಜ್ಯದಲ್ಲೂ ಮಾಡಿಲ್ಲ. ನನೆಗುದಿಗೆ ಬಿದ್ದ ಸಾಚಾರ್ ಕಮಿಟಿ ವರದಿಯನ್ನು ಕಾಂಗ್ರೆಸ್ ಸರಕಾರ ಜಾರಿಗೆ ತಂದಿಲ್ಲ, ಅದನ್ನು ಕೇಂದ್ರ ಸರಕಾರವೇ ಮಾಡಬೇಕೆಂದಲ್ಲ, ರಾಜ್ಯ ಸರಕಾರವು ಜಾರಿಗೆ ತರಬಹುದು.
ದೇಶದಲ್ಲಿ 25% ರಷ್ಟು 6-14 ವರ್ಷದವರೆಗಿನ ಮುಸ್ಲಿಂ ಮಕ್ಕಳು ಶಾಲೆಯ ಬಾಗಿಲನ್ನೇ ಕಂಡಿಲ್ಲ. ಮುಸ್ಲಿಮರಿಗೆ ಸಾಮಾಜಿಕ ಭದ್ರತೆಯನ್ನು ನೀಡಿಲ್ಲ. ಮುಸ್ಲಿಮರಿಗೆ ಸಿಗಬೇಕಾದ ರಾಜಕೀಯ, ಸಾಮಾಜಿಕ ಭದ್ರತೆ 60 ವರ್ಷಗಳಲ್ಲಿ ಕಾಂಗ್ರೆಸ್ ಕಲ್ಪಿಸಿಲ್ಲ. ಅಂಕಿ ಅಂಶಗಳನ್ನು ನೋಡಿದರೆ ದೇಶದಲ್ಲಿ ವಿವಿಧ ಉನ್ನತ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುವ ಮುಸ್ಲಿಮರ ಶೇಕಡಾವಾರು ಪಾಲುದಾರಿಕೆ 2%-3% ಗಳಿಗೆ ಸೀಮಿತವಾಗಿದೆ. ಆರ್ಥಿಕವಾಗಿ ಅತ್ಯಂತ ದುರ್ಬಲರಾಗಿರುವ ಮುಸ್ಲಿಮರು ಶಿಕ್ಷಣ, ಮೂಲಸೌಕರ್ಯ, ರಾಜಕೀಯ ಪ್ರಾತಿನಿಧ್ಯ ಎಲ್ಲದರಿಂದಲೂ ವಂಚಿತರಾಗಿದ್ದಾರೆ.
ಅಹಿಂದ ಅಭಿವೃದ್ಧಿ, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರಕಾರ ಬಜೆಟ್ ನಲ್ಲಿ ಯೋಜನೆಗಳನ್ನು ಜಾರಿಗೆ ತರುತ್ತದೆ ಹೊರತು ಅದು ಯಾವ ಕಟ್ಟ ಕಡೆಯ ಫಲಾನುಭವಿಗಳಿಗೂ ತಲುಪುವುದಿಲ್ಲ. ಅಹಿಂದ ಎನ್ನುವುದು ಒಂದು ಅಲೆ, ಬಲವಂತದ ರಾಜಕಾರಣ ಅಷ್ಟೇ. ಈಗಿರುವುದು ಸಹಕಾರ ರಾಜಕಾರಣವೇ ಹೊರತು ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ರಾಜಕಾರಣ ಅಲ್ಲ . ದೇಶದಲ್ಲಿ ದಲಿತ, ಹಿಂದುಳಿದ ವರ್ಗದವರು, ಮುಸ್ಲಿಂ, ಕ್ರಿಶ್ಚಿಯನ್ನರು ಒಗ್ಗಟ್ಟಾಗದಂತೆ ನೋಡಿಕೊಳ್ಳುವ ಹುನ್ನಾರಗಳು ಕೂಡ ಕಾಂಗ್ರೆಸ್ ನಿಂದ ನಡೆಯುತ್ತಿದೆ.
ಕಾಂಗ್ರೆಸ್ ಆಡಳಿತದ ಕರ್ನಾಟಕ ಇಂದು ಕೋಮುಗಲಭೆಯಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಅಪರಾಧಗಳಲ್ಲಿ 2ನೇ ಸ್ಥಾನದಲ್ಲಿ ಇವೆ. ಇನ್ನು ಜೆಡಿಎಸ್ ಗೆದ್ದರೆ ಬಿಜೆಪಿ ಗೆದ್ದಂತೆ ಎಂದು ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರು, ಕಾಂಗ್ರೆಸ್ ಹೊರತು ಪಡಿಸಿ ಬೇರೆ ಎಲ್ಲಾ ಪಕ್ಷಗಳು ಮುಸ್ಲಿಮರ ವಿರೋಧಿಯಾಗಿದೆ ಎಂಬ ಭಾವನಾತ್ಮಕ ಬ್ಲ್ಯಾಕ್ ಮೇಲ್ ಮಾಡುತ್ತಿದೆ. ಎಸ್ ಡಿಪಿಐ, ಎಮ್ ಐ ಎಮ್, ಬಿಎಸ್ಪಿ ಇಂತಹ ಯಾವುದೇ ಪಕ್ಷಗಳ ಕಡೆ ಜನರು ವಾಲದಂತೆ ಬೆದರಿಕೆ ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಮುಸ್ಲಿಮರ ಸರಣಿ ಹತ್ಯೆ, ಗುಜರಾತ್ ಹತ್ಯಾಕಾಂಡ, ನುಸ್ರತ್ ಜಹಾನ್ ನಕಲಿ ಎನ್ ಕೌಂಟರ್, ಬಾಬರಿ ಮಸೀದಿ ಅನ್ಯಾಯ, ಮುಸ್ಲಿಂ ವಿರೋಧಿ ಕಾನೂನು ಜಾರಿಗೊಳಿಸಿ ವಿಚಾರಣೆಯ ನೆಪದಲ್ಲಿ ಖಾಕಿಗಳು ದೇಶದಲ್ಲಿ ಅಮಾಯಕ ಮುಸ್ಲಿಮರನ್ನು ಜೈಲಿಗೆ ತಲ್ಲಿದ್ದು ಸತ್ಯ.
ದೇಶದಲ್ಲಿ ರೈಲ್ವೇ ಇಲಾಖೆ ಬಳಿಕ ಅತ್ಯಧಿಕ ಭೂಮಿಯನ್ನು ವಕ್ಫ್ ಇಲಾಖೆ ಹೊಂದಿದ್ದು, ಮುಸ್ಲಿಮರ ಹೆಸರಿನಲ್ಲಿ ನೂರಾರು ಪೂರ್ವಿಕರು ದೇವರ ಹೆಸರಿನಲ್ಲಿ ವಕ್ಫ್ ಮಾಡಿದ ಭೂಮಿಗಳಿವು. ಇಡೀ ದೇಶದಲ್ಲಿ 4 ಲಕ್ಷಕ್ಕೂ ಅಧಿಕ ಎಕರೆ ಭೂಮಿಯನ್ನು ವಕ್ಫ್ ಇಲಾಖೆ ಹೊಂದಿದೆ. ಈ ಭೂಮಿ ಮುಸ್ಲಿಮರಿಗೆ ಸದ್ಬಳಕೆಯಾಗಿದ್ದರೆ, ಹಂಚಿಕೆಯಾಗಿದ್ದರೆ ಇಂದು ದೇಶದಲ್ಲಿ ಮುಸ್ಲಿಮರು ಈ ರೀತಿ ದಯಾನೀಯ ಪರಿಸ್ಥಿತಿಗೆ ತಲುಪುತ್ತಿರಲಿಲ್ಲ. ಆದರೆ ಈ ಆಸ್ತಿ ಯಾರದೋ ಪಾಲಾಗಿದೆ. ಸಾವಿನೂಟದಂತೆ ಇದನ್ನು ಕಂಡ ಕಂಡವರು ತಿಂದು ತೇಗುತ್ತಿದ್ದಾರೆ. ಬಾಬರಿ ಮಸೀದಿಯ 2 ಎಕ್ರೆ ಭೂಮಿಗೆ ಹೋರಾಟ ಮಾಡುವ ಜನರಿಗೆ ಈ ಅನ್ಯಾಯದ ಪರಿವೆಯೇ ಇಲ್ಲ. ಯಾಕೆಂದರೆ ಇದನ್ನು ತಿಂದು ತೇಗಿರುವುದು ರಾಜಕೀಯ ನಾಯಕರು, ಉದ್ಯಮಿಗಳು, ಇದರಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ.
ಕಾಂಗ್ರೆಸ್ ನ ಆಡಳಿತದಲ್ಲೇ ದೇಶದ ಭವ್ಯ ಬಾಬರಿ ಮಸೀದಿ ಧ್ವಂಸಗೊಂಡಿದ್ದು, ಇಂದಿಗೂ ಇದು ಕಾಂಗ್ರೆಸ್ ನ ಪ್ರಮುಖ ರಾಜಕೀಯ ಅಸ್ತ್ರವಾಗಿದೆ. ಅಲ್ಲದೇ, ಚರಿತ್ರೆಯ ಪುಟಗಳಲ್ಲಿ ದೇಶದಲ್ಲಿನ ಕೋಮು ದ್ವೇಷಕ್ಕೆ ದಲಿತ, ಹಿಂದುಳಿದ ವರ್ಗಗಳ, ಕ್ರೈಸ್ತರ, ಮುಸ್ಲಿಮರ ಭಾವ್ಯಕ್ಯತೆಗೆ ಬೆಂಕಿ ಇಟ್ಟ ಚರಿತ್ರೆಯಾಗಿದೆ. ರಾಜ್ಯ ಕಾಂಗ್ರೆಸ್ ಆಡಳಿತದಲ್ಲಿ 15 ಲಕ್ಷ ಕೋಟಿ ರೂ. ಮೌಲ್ಯದ ವಕ್ಫ್ ಅವ್ಯವಹಾರ ಹೊರಬಂದಿತ್ತು. ಈ 15 ಲಕ್ಷ ಕೋಟಿಯನ್ನು ರಾಜ್ಯದ ಮುಸ್ಲಿಮರ ಕಲ್ಯಾಣಕ್ಕಾಗಿ ಉಪಯೋಗಿಸಿದ್ದರೆ, ದೆಹಲಿ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಾಜಿಂದರ್ ಸಿಂಗ್ ಸಾಚಾರ್, ಮುಸ್ಲಿಂ ಸಮುದಾಯದಲ್ಲಿ ಕೆಲವರಿಗೆ ಅಗತ್ಯ ಸೌಲಭ್ಯವು ಸಿಕ್ಕಿಲ್ಲ ದಲಿತರಿಗಿಂತ ಕೆಲ ಮುಸ್ಲಿಮರು ಹಿಂದುಳಿದಿದ್ದಾರೆ ಅವರ ಮೇಲೆ ಕಾಳಜಿ ಇಲ್ಲ. ಕಾಳಜಿ ಇದ್ದಿದ್ದರೆ ಸಾಚಾರ್ ವರದಿ ಜಾರಿಗೊಳಿಸಲಿ ಎಂದು ಹೇಳುವ ಅನಿವಾರ್ಯತೆ ಬರುತ್ತಿರಲಿಲ್ಲ. ಇನ್ನು ಲೆಕ್ಕಕ್ಕಿಲ್ಲದ ಅಲ್ಪಸಂಖ್ಯಾತರ ಇಲಾಖೆ, ಜನಸಾಮಾನ್ಯನಿಗೆ ಇದರ ಉಪಯೋಗವೇನು ಎಂದು ಯಾರಿಗೂ ತಿಳಿದಿಲ್ಲ, ಶಾದಿಭಾಗ್ಯ, ಭ್ರಷ್ಟರ ಭಾಗ್ಯವಾಗಿದೆ. ಅಲ್ಪಸಂಖ್ಯಾತರ ಇಲಾಖೆ ಬಡವರಿಗೆ, ವಿದ್ಯಾರ್ಥಿಗಳಿಗೆ ಕೈಗೆಟಕದಾಗಿದೆ. ಇಲ್ಲಿ ಮಧ್ಯವರ್ತಿಗಳು, ಅಧಿಕಾರಿಗಳದ್ದೇ ರಾಜ್ಯಭಾರವಾಗಿದೆ.
–ಸಿದ್ದಿಕ್ ನೆಲ್ಲಿಗುಡ್ಡೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು.
ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೆ ಎಂದ ಅವರು ಶಾಮನೂರು ಕುಟುಂಬವು ಸದಾ ಜನರ ಸಮಸ್ಯೆಗಳ ಪರಿಹಾರಕ್ಕೆ ನಿಂತುಕೊಳ್ಳುತ್ತದೆ ಎಂಬ ಭರವಸೆಯನ್ನೂ ನೀಡಿದರು.
ಪ್ರಚಾರದ ವೇಳೆ ಸ್ಥಳೀಯರು ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರ ಬಗ್ಗೆ ಜನರಿಗೆ ಭರವಸೆ ನೀಡಿದರು. ಜನರ ಹಕ್ಕುಪತ್ರದ ಸಮಸ್ಯೆಗಳು ಕುರಿತು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದ್ದರು.ಈಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜನರ ಎಲ್ಲಾ ಸಮಸ್ಯೆಗಳ ಪರಿಹಾರ ಮಾಡುತ್ತಿದ್ದಾರೆ ಎಂದರು.
ಯುವ ನಾಯಕ ಸಮರ್ಥ್ ಶಾಮನೂರು ಕುರಿತು ಮಾತನಾಡಿದ ಅವರು ಸಮರ್ಥ್ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿ, ಏಪ್ರಿಲ್ 9 ರಂದು ಮತಗಟ್ಟೆಗೆ ಬಂದು ಕ್ರಮ ಸಂಖ್ಯೆ 3ರ ‘ಹಸ್ತ’ ಚಿಹ್ನೆಗೆ ಮತ ಹಾಕಿ ಸಮರ್ಥ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗಿವೆ. ಈ ಅವಧಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಇವತ್ತು ಬಿಡುಗಡೆ ಮಾಡಿದ್ದೇವೆ ಎಂದರು.
ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಇದೆ. ಸರಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿಯರು, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಗೆ ಈ ಸರಕಾರ ಸುದ್ದಿಯಲ್ಲಿತ್ತು. ಅಂಗನವಾಡಿ ಶಿಕ್ಷಕಿಯರ ಚಳವಳಿ, ಆಶಾ ಕಾರ್ಯಕರ್ತೆಯರ ಚಳವಳಿ, ಅತಿಥಿ ಉಪನ್ಯಾಸಕರಿಂದ ಸಂಬಳ ಸಿಗುತ್ತಿಲ್ಲವೆಂದು ಹೋರಾಟ, ಗುತ್ತಿಗೆ ನೌಕರರ ಹೋರಾಟ- ಹೀಗೆ ಚಳವಳಿಗಳ ಕಾಟಕ್ಕೆ ಈ ಸರಕಾರ ಸುದ್ದಿಯಲ್ಲಿದೆ ಎಂದು ವ್ಯಂಗ್ಯವಾಡಿದರು.
ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ…
ಕಳೆದ 3 ವರ್ಷದಲ್ಲಿ ಕೆಟ್ಟ ಕಾರಣಕ್ಕಾಗಿ ಈ ಸರಕಾರ ಸುದ್ದಿಯಲ್ಲಿದೆಯೇ ಹೊರತು ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ವಿಶ್ಲೇಷಿಸಿದರು. ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಲಿಯಾದವರು ನೂರಾರು ಜನ; ರಸ್ತೆ ಗುಂಡಿ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಹೀಗೆ ಪ್ರತಿನಿತ್ಯ ಸರಕಾರ ಸುದ್ದಿಯಲ್ಲಿ ಇರುವುದು ಕೇವಲ ಕೆಟ್ಟ ಕಾರಣಕ್ಕಾಗಿ ಎಂದು ಆರೋಪಿಸಿದರು. ಅಭಿವೃದ್ಧಿ ಕೆಲಸ ಮಾಡಿದ್ದಕ್ಕಾಗಿ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ಆಕ್ಷೇಪಿಸಿದರು.
ಮುಡಾ, ವಾಲ್ಮೀಕಿ ನಿಗಮದ ಹಗರಣ ಮಾನಗೆಟ್ಟ ಕೆಲಸವಲ್ಲವೇ?
ಮುಖ್ಯಮಂತ್ರಿಗಳು ಬಿಜೆಪಿಯವರು ಮಾನಗೆಟ್ಟವರು ಎಂದು ಭಾಷಣದಲ್ಲಿ ಹೇಳಿದ್ದಾರೆ. ಯಾರು ಮುಖ್ಯಮಂತ್ರಿಗಳೇ ಮಾನಗೆಟ್ಟವರು? ಮುಡಾ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ಎಂದು ಕೇಳಿದರು. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾದ ಹಣವನ್ನು ನಿಮ್ಮ ಒಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್ ನಿಂದ ಎಣ್ಣೆ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ ಎಂದು ಕೇಳಿದರು.
ಮರ್ಯಾದೆ ಇದ್ದವರು ಅಧಿಕಾರಕ್ಕೆ ಅಂಟಿಕೊಳ್ಳುವರೇ?
ನೀವು ಬಿಜೆಪಿ ಮೇಲೆ ಶೇ 40 ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಶೇ 60 ಕಮಿಷನ್ನ ಸರಕಾರ ಎಂದು ನಿಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಆ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುವ ಕುರಿತು ಆರೋಪ ಮಾಡಿದ್ದಾರಲ್ಲವೇ? ಇದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮಾನಗೆಟ್ಟವರು ಮಾಡುವ ಕೆಲಸವೇ ಎಂದು ಪ್ರಶ್ನೆ ಹಾಕಿದರು.
ಮುಖ್ಯಮಂತ್ರಿಗಳೇ, ಇಡೀ ಸಂಪುಟದಲ್ಲಿ ಮಾನಗೆಟ್ಟವರು ಇದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ ಎಂದು ಕೇಳಿದರು. ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರನ್ನಾಗಿ ಮಾಡಿಕೊಂಡು, ಶೇ 60ರ ಆರೋಪ ಹೊತ್ತುಕೊಂಡು ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಎಂದು ಆರೋಪ ಮಾಡುತ್ತೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
ನಿಮ್ಮದು ದರೋಡೆಕೋರ ಸರಕಾರವಲ್ಲವೇ?
ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿಕೆಗಳಾಗಿವೆ. ನಿಮ್ಮ ಸರಕಾರವನ್ನು ದರೋಡೆಕೋರ ಸರಕಾರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು. ನಿಮ್ಮ ಸರಕಾರ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂಬ ಪಟ್ಟಿ ಕೊಡಲೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ..
ನಂದಿನಿ ಹಾಲಿನ ದರ ಏರಿಕೆ ಮಾಡಿದ್ದೀರಿ. ಪೆಟ್ರೋಲ್ ಮೇಲೆ 3 ರೂ. ಸೆಸ್, ಡೀಸೆಲ್ ಮೇಲೆ 5.08 ರೂ. ಸೆಸ್ ಹಾಕಿದ್ದೀರಿ. ಕೇಂದ್ರ ಸರಕಾರ ದರ ಇಳಸಿದರೆ ನೀವು ಸೆಸ್ ಹಾಕಿ ಅವರ ಲಾಭ ಜನರಿಗೆ ಸಿಗದಂತೆ ಮಾಡಿದ್ದೀರಿ ಎಂದು ಟೀಕಿಸಿದರು. ಬಸ್ ಪ್ರಯಾಣ ದರ ಶೇ 15, ಮೆಟ್ರೋ ದರ ಶೇ 50ರಷ್ಟು ಹೆಚ್ಚಿಸಿದ್ದೀರಿ. ಪ್ರತಿ ಯೂನಿಟ್ 4.50 ರೂ. ವಿದ್ಯುತ್ ದರವನ್ನು ರೂ 5.90 ಮಾಡಿದ್ದೀರಿ. ವಾಣಿಜ್ಯ ದರವನ್ನು 7 ರೂ.ಗೂ ಹೆಚ್ಚಳ ಮಾಡಲಾಗಿದೆ. ಅಬಕಾರಿ ಸುಂಕವನ್ನು ಶೇ 20ರಷ್ಟು ಏರಿಸಿದ್ದೀರಿ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದೀರಿ. 20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ. ಅದರ ಜಾಗಕ್ಕೆ 100, 200 ರೂ.ಗಳ ಸ್ಟಾಂಪ್ ಪೇಪರ್ ಖರೀದಿಸಬೇಕಾಗಿದೆ. ನಮ್ಮ ಚಿನ್ನ ನಾವು ಒತ್ತೆ ಇಡಲು 0.5ರಷ್ಟು ಸ್ಟಾಂಪ್ ಡ್ಯೂಟಿ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ3 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ4 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ಅಂಕಣ2 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ4 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ3 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ2 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

