ರಾಜಕೀಯ
ಬಿಜೆಪಿ, ಕಾಂಗ್ರೆಸ್, ಆರೆಸ್ಸೆಸ್ ನ ಎರಡು ಮುಖಗಳು ಮತ್ತು ಮುಸ್ಲಿಮರು
ಭಯಮುಕ್ತ, ಹಸಿವು ಮುಕ್ತ, ಸದೃಢ ಸಮಾಜದ ನಿರ್ಮಾಣ ಕಾಂಗ್ರೆಸ್ ನ ಈ ಬಾರಿಯ ಚುನಾವಣೆಯ ತಲೆಬರಹ. ಈ ಕುರಿತು ಬ್ಯಾನರ್ ಗಳು, ಭಿತ್ತಿಪತ್ರಗಳು ಎಲ್ಲೊಂದರಲ್ಲಿ ರಾರಾಜಿಸುತ್ತಿದೆ. ಅಹಿಂದ ಮಂತ್ರ ಸದಾ ಜಪಿಸುತ್ತಿರುವ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಜನರಲ್ಲಿ ಅದರಲ್ಲೂ ಮುಸ್ಲಿಮರಲ್ಲಿ ಭೀತಿಯ ಗಂಟೆ ಬಡಿದು ರಾಜಕೀಯ ನಡೆಸುತ್ತಿದೆ.
ಧರ್ಮ ರಾಜಕೀಯ, ಜಾತಿ ರಾಜಕೀಯ, ಹೆಣ ರಾಜಕೀಯ, ಹತ್ಯಾ ರಾಜಕಾರಣಗಳಿಗೆ ರಾಜ್ಯದಲ್ಲಿ ಕೊಂಚ ತೆರೆ ಬಿದ್ದರೆ, ಇತ್ತ ಭೀತಿಯ ರಾಜಕೀಯ ಟ್ರೆಂಡ್ ಪ್ರಾರಂಭವಾಗಿದೆ. ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ ಹರಿದ ರಕ್ತಗಳಿಗೆ- ಕಾಂಗ್ರೆಸ್ ಬಿಜೆಪಿಯೆಡೆಗೆ, ಬಿಜೆಪಿ ಕಾಂಗ್ರೆಸ್ ನೆಡೆಗೆ ಬೊಟ್ಟು ಮಾಡಿದರೆ, ಇವೆರಡರ ಮಧ್ಯೆ ಇರುವ ಆರೆಸ್ಸೆಸ್ ಮಾತ್ರ ಚುನಾವಣೆಗೆ ಬೇಕಾದ ಎಲ್ಲಾ ಪೂರ್ವ ಬೆಂಬಲವನ್ನು ಕಾಂಗ್ರೆಸ್ ಮತ್ತು ಬಿಜೆಪಿಗೆ ಮಾಡಿ ಮುಗಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಆರೆಸ್ಸೆಸ್ ನ ಎರಡು ಮುಖಗಳು. ಬಿಜೆಪಿಯವರು ಮುಸ್ಲಿಮರನ್ನು ಬಹಿರಂಗವಾಗಿ ವಿರೋಧಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಮುಸ್ಲಿಮರ ಅಧಃಪತನಕ್ಕೆ ದೇಶದಲ್ಲಿ ಕಾರಣವಾಗಿದೆ. ಈ ಬಗ್ಗೆ ಅವಲೋಕಿಸಿದರೆ ಬಿಜೆಪಿಗಿಂತಲೂ ಕಾಂಗ್ರೆಸ್ ಮುಸಲ್ಮಾನರಿಗೆ ಅತ್ಯಂತ ಅಪಾಯಕಾರಿ.
ಬಿಜೆಪಿ ಮತ್ತು ಕಾಂಗ್ರೆಸ್ ಮುಸ್ಲಿಮರನ್ನು ಇಂದು ಪುಟ್ಬಾಲ್ ರೀತಿಯಲ್ಲಿ ಬಳಕೆ ಮಾಡುತ್ತಿದೆ. ಕಾಂಗ್ರೆಸ್ ಗೆ ಮುಸ್ಲಿಮರು ಕೇವಲ ಮತಬ್ಯಾಂಕ್ ಅಷ್ಟೆ. ಇಂದು ದೇಶದ ಮುಸ್ಲಿಮರಲ್ಲಿ ಬಿಜೆಪಿ, ಆರೆಸ್ಸೆಸನ್ನು ತೋರಿಸಿ ಭಯವನ್ನು ತೋರಿಸಿ, ಭೀತಿಯನ್ನು ಉಂಟುಮಾಡಿ ಹೊಡೆದು ಆಳುವ ರಾಜಕೀಯ ಕಾಂಗ್ರೆಸ್ ಮಾಡುತ್ತಿದೆ. ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶದಲ್ಲಿ ಮುಸ್ಲಿಮರನ್ನು ಇಬ್ಭಾಗಗೊಳಿಸಿ, ಭಾರತದ ವಿಭಜನೆಗೆ ಕಾಂಗ್ರೆಸ್ ಕಾರಣವಾಯಿತು. ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ದೇಶದಲ್ಲಿ ಹಿಂದೂ- ಮುಸ್ಲಿಮರ ಮಧ್ಯೆ ಭೀತಿ ಸೃಷ್ಟಿಸಿ ಆಂತರಿಕ ಅಭದ್ರತೆಯನ್ನು ಸದ್ದಿಲ್ಲದೆ ಮಾಡುತ್ತಿದೆ ಎಂದರೆ ತಪ್ಪಾಗಲಾರದು.
ಮುಸ್ಲಿಮರ ಅಸುರಕ್ಷೆತೆಯನ್ನು ಬಂಡವಾಳ ಮಾಡಿಕೊಂಡ ಕಾಂಗ್ರೆಸ್. ನಿಜವಾಗಿಯೂ ಜನರಲ್ಲಿ ಭಯವನ್ನು, ಭೀತಿಯನ್ನು ಉಂಟುಮಾಡಿದೆ. ಬಿಜೆಪಿಯನ್ನು ತೋರಿಸಿ, ರಾಜಕೀಯ ಲಾಭ ಪಡೆಯುವುದೇ ಕಾಂಗ್ರೆಸ್ ನ ಪ್ರಮುಖ ತಂತ್ರವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಗೋಹತ್ಯೆ ನಿಷೇಧ ಮಾಡುತ್ತಾರೆ, ಮುಸ್ಲಿಮರಿಗೆ ರಕ್ಷಣೆ ಇಲ್ಲ. ಮುಸ್ಲಿಮರ ಹತ್ಯೆ ನಡೆಯುತ್ತದೆ. ಹಾಗಾಗಿ ಈ ಬಾರಿ ಬಿಜೆಪಿಯನ್ನು ಅಧಿಕಾರಕ್ಕೆ ಬಾರದ ರೀತಿಯಲ್ಲಿ ತಡೆದು ಮುಸಲ್ಮಾನರನ್ನು ರಕ್ಷಿಸಿಕೊಳ್ಳಬೇಕು. ಅದಕ್ಕಾಗಿ ಕಾಂಗ್ರೆಸ್ಸನ್ನು ಗೆಲ್ಲಿಸಬೇಕು ಎಂದು ಜನರನ್ನು ಬೆದರಿಸಿ ರಾಜಕೀಯ ಮಾಡುತ್ತಿದ್ದು, ಬಿಜೆಪಿಗೆ ಪರ್ಯಾಯ ಕಾಂಗ್ರೆಸ್ ಎನ್ನುವ ಭ್ರಮೆಯನ್ನು ಮುಸ್ಲಿಮರಲ್ಲಿ ಉಂಟು ಮಾಡುವ ಮೂಲಕ ಮುಸ್ಲಿಮರು ಪರ್ಯಾಯ ರಾಜಕೀಯ ಶಕ್ತಿಯಾಗಿ ಬೆಳೆಯದಂತೆ ತಡೆಹಿಡಿದಿದ್ದಾರೆ. ದೇಶದಲ್ಲಿ 172 ಮಿಲಿಯನ್ ಮುಸ್ಲಿಮರಿದ್ದು ಅವರ ರಾಜಕೀಯ ಪ್ರಾಶಸ್ತ್ಯವನ್ನು ಸೀಮಿತಗೊಳಿಸಿ ಅವರ ರಾಜಕೀಯ ಬೆಳವಣಿಗೆಯನ್ನು ತಡೆ ಹಿಡಿದಿದೆ.
60 ವರ್ಷಗಳ ಕಾಲ ದೇಶದಲ್ಲಿ ಕಾಂಗ್ರೆಸ್ ದೇಶದ ದಲಿತರ, ಹಿಂದುಳಿದವರ, ಮುಸಲ್ಮಾನರ, ಕ್ರೈಸ್ತರ ಅಭಿವೃದ್ಧಿ ಮಾಡಿ ಅಧಿಕಾರ ಪಡೆದದ್ದಲ್ಲ. ಆರೆಸ್ಸೆಸ್ ನ ಕೋಲು, ಚಡ್ಡಿಗಳನ್ನು ತೋರಿಸಿ ಬೆದರಿಸಿ ಅದು ನಿರಂತರ ಅಧಿಕಾರವನ್ನು ಪಡೆಯಿತು. ಮನುವಾದದ ಮೃದು ಸಿದ್ದಾಂತಗಳು ಕಾಂಗ್ರೆಸ್ ನ ಜೀವಾಳವಾಗಿದೆ. ಹಾಗಾಗಿ ಬಿಜೆಪಿ ದೇಶದ ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ನೇರ ವಿರೋಧಿಯಾಗಿದೆ. ಕಾಂಗ್ರೆಸ್ ನಾನು ಬಿಜೆಪಿಯಿಂದ ರಕ್ಷಿಸುತ್ತೇನೆಂದು ಹೇಳಿ ಬಳಿಕ ಬೆನ್ನಿಗೆ ಚೂರಿ ಹಾಕಿದ ಪಕ್ಷವಾಗಿದೆ. ಇವೆರಡರ ಮೂಲ ಉದ್ದೇಶ ಒಂದೇ ಆಗಿದೆ. ಆದಿವಾಸಿಗಳ ಬಳಿಕ ಎರಡನೇ ದರ್ಜೆಯ ಜೀವನವನ್ನು ಮುಸ್ಲಿಮರು ನಡೆಸುತ್ತಿದ್ದಾರೆ. ಅಂದರೆ ದಲಿತರಿಗಿಂತಲೂ ಮುಸ್ಲಿಮರು ಆರ್ಥಿಕವಾಗಿ, ಸಾಮಾಜಿಕವಾಗಿ ದುರ್ಬಲರಾಗಿದ್ದಾರೆ. ಲಕ್ಷಾಂತರ ರೂ. ಖರ್ಚುಮಾಡಿ ಮುಸ್ಲಿಮರ ಕಣ್ಣಿಗೆ ಮಣ್ಣೆರೆಚಲು ಸಾಚಾರ್ ಕಮಿಟಿ ವರದಿಯನ್ನು ಮಾತ್ರ ಸರಕಾರ ಸಿದ್ಧಪಡಿಸಿದೆಯೇ ಹೊರತು ಅದರಲ್ಲಿ ಸೂಚಿಸಿರುವ ತಕ್ಷಣ ವರದಿ ಜಾರಿ ಮಾಡಬೇಕೆಂಬುವುದನ್ನು ಯುಪಿಎ ಸರಕಾರ ಮಾಡಿಲ್ಲ. ಕಾಂಗ್ರೆಸ್ ಸರಕಾರವಿರುವ ಯಾವ ರಾಜ್ಯದಲ್ಲೂ ಮಾಡಿಲ್ಲ. ನನೆಗುದಿಗೆ ಬಿದ್ದ ಸಾಚಾರ್ ಕಮಿಟಿ ವರದಿಯನ್ನು ಕಾಂಗ್ರೆಸ್ ಸರಕಾರ ಜಾರಿಗೆ ತಂದಿಲ್ಲ, ಅದನ್ನು ಕೇಂದ್ರ ಸರಕಾರವೇ ಮಾಡಬೇಕೆಂದಲ್ಲ, ರಾಜ್ಯ ಸರಕಾರವು ಜಾರಿಗೆ ತರಬಹುದು.
ದೇಶದಲ್ಲಿ 25% ರಷ್ಟು 6-14 ವರ್ಷದವರೆಗಿನ ಮುಸ್ಲಿಂ ಮಕ್ಕಳು ಶಾಲೆಯ ಬಾಗಿಲನ್ನೇ ಕಂಡಿಲ್ಲ. ಮುಸ್ಲಿಮರಿಗೆ ಸಾಮಾಜಿಕ ಭದ್ರತೆಯನ್ನು ನೀಡಿಲ್ಲ. ಮುಸ್ಲಿಮರಿಗೆ ಸಿಗಬೇಕಾದ ರಾಜಕೀಯ, ಸಾಮಾಜಿಕ ಭದ್ರತೆ 60 ವರ್ಷಗಳಲ್ಲಿ ಕಾಂಗ್ರೆಸ್ ಕಲ್ಪಿಸಿಲ್ಲ. ಅಂಕಿ ಅಂಶಗಳನ್ನು ನೋಡಿದರೆ ದೇಶದಲ್ಲಿ ವಿವಿಧ ಉನ್ನತ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುವ ಮುಸ್ಲಿಮರ ಶೇಕಡಾವಾರು ಪಾಲುದಾರಿಕೆ 2%-3% ಗಳಿಗೆ ಸೀಮಿತವಾಗಿದೆ. ಆರ್ಥಿಕವಾಗಿ ಅತ್ಯಂತ ದುರ್ಬಲರಾಗಿರುವ ಮುಸ್ಲಿಮರು ಶಿಕ್ಷಣ, ಮೂಲಸೌಕರ್ಯ, ರಾಜಕೀಯ ಪ್ರಾತಿನಿಧ್ಯ ಎಲ್ಲದರಿಂದಲೂ ವಂಚಿತರಾಗಿದ್ದಾರೆ.
ಅಹಿಂದ ಅಭಿವೃದ್ಧಿ, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರಕಾರ ಬಜೆಟ್ ನಲ್ಲಿ ಯೋಜನೆಗಳನ್ನು ಜಾರಿಗೆ ತರುತ್ತದೆ ಹೊರತು ಅದು ಯಾವ ಕಟ್ಟ ಕಡೆಯ ಫಲಾನುಭವಿಗಳಿಗೂ ತಲುಪುವುದಿಲ್ಲ. ಅಹಿಂದ ಎನ್ನುವುದು ಒಂದು ಅಲೆ, ಬಲವಂತದ ರಾಜಕಾರಣ ಅಷ್ಟೇ. ಈಗಿರುವುದು ಸಹಕಾರ ರಾಜಕಾರಣವೇ ಹೊರತು ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ರಾಜಕಾರಣ ಅಲ್ಲ . ದೇಶದಲ್ಲಿ ದಲಿತ, ಹಿಂದುಳಿದ ವರ್ಗದವರು, ಮುಸ್ಲಿಂ, ಕ್ರಿಶ್ಚಿಯನ್ನರು ಒಗ್ಗಟ್ಟಾಗದಂತೆ ನೋಡಿಕೊಳ್ಳುವ ಹುನ್ನಾರಗಳು ಕೂಡ ಕಾಂಗ್ರೆಸ್ ನಿಂದ ನಡೆಯುತ್ತಿದೆ.
ಕಾಂಗ್ರೆಸ್ ಆಡಳಿತದ ಕರ್ನಾಟಕ ಇಂದು ಕೋಮುಗಲಭೆಯಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಅಪರಾಧಗಳಲ್ಲಿ 2ನೇ ಸ್ಥಾನದಲ್ಲಿ ಇವೆ. ಇನ್ನು ಜೆಡಿಎಸ್ ಗೆದ್ದರೆ ಬಿಜೆಪಿ ಗೆದ್ದಂತೆ ಎಂದು ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರು, ಕಾಂಗ್ರೆಸ್ ಹೊರತು ಪಡಿಸಿ ಬೇರೆ ಎಲ್ಲಾ ಪಕ್ಷಗಳು ಮುಸ್ಲಿಮರ ವಿರೋಧಿಯಾಗಿದೆ ಎಂಬ ಭಾವನಾತ್ಮಕ ಬ್ಲ್ಯಾಕ್ ಮೇಲ್ ಮಾಡುತ್ತಿದೆ. ಎಸ್ ಡಿಪಿಐ, ಎಮ್ ಐ ಎಮ್, ಬಿಎಸ್ಪಿ ಇಂತಹ ಯಾವುದೇ ಪಕ್ಷಗಳ ಕಡೆ ಜನರು ವಾಲದಂತೆ ಬೆದರಿಕೆ ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಮುಸ್ಲಿಮರ ಸರಣಿ ಹತ್ಯೆ, ಗುಜರಾತ್ ಹತ್ಯಾಕಾಂಡ, ನುಸ್ರತ್ ಜಹಾನ್ ನಕಲಿ ಎನ್ ಕೌಂಟರ್, ಬಾಬರಿ ಮಸೀದಿ ಅನ್ಯಾಯ, ಮುಸ್ಲಿಂ ವಿರೋಧಿ ಕಾನೂನು ಜಾರಿಗೊಳಿಸಿ ವಿಚಾರಣೆಯ ನೆಪದಲ್ಲಿ ಖಾಕಿಗಳು ದೇಶದಲ್ಲಿ ಅಮಾಯಕ ಮುಸ್ಲಿಮರನ್ನು ಜೈಲಿಗೆ ತಲ್ಲಿದ್ದು ಸತ್ಯ.
ದೇಶದಲ್ಲಿ ರೈಲ್ವೇ ಇಲಾಖೆ ಬಳಿಕ ಅತ್ಯಧಿಕ ಭೂಮಿಯನ್ನು ವಕ್ಫ್ ಇಲಾಖೆ ಹೊಂದಿದ್ದು, ಮುಸ್ಲಿಮರ ಹೆಸರಿನಲ್ಲಿ ನೂರಾರು ಪೂರ್ವಿಕರು ದೇವರ ಹೆಸರಿನಲ್ಲಿ ವಕ್ಫ್ ಮಾಡಿದ ಭೂಮಿಗಳಿವು. ಇಡೀ ದೇಶದಲ್ಲಿ 4 ಲಕ್ಷಕ್ಕೂ ಅಧಿಕ ಎಕರೆ ಭೂಮಿಯನ್ನು ವಕ್ಫ್ ಇಲಾಖೆ ಹೊಂದಿದೆ. ಈ ಭೂಮಿ ಮುಸ್ಲಿಮರಿಗೆ ಸದ್ಬಳಕೆಯಾಗಿದ್ದರೆ, ಹಂಚಿಕೆಯಾಗಿದ್ದರೆ ಇಂದು ದೇಶದಲ್ಲಿ ಮುಸ್ಲಿಮರು ಈ ರೀತಿ ದಯಾನೀಯ ಪರಿಸ್ಥಿತಿಗೆ ತಲುಪುತ್ತಿರಲಿಲ್ಲ. ಆದರೆ ಈ ಆಸ್ತಿ ಯಾರದೋ ಪಾಲಾಗಿದೆ. ಸಾವಿನೂಟದಂತೆ ಇದನ್ನು ಕಂಡ ಕಂಡವರು ತಿಂದು ತೇಗುತ್ತಿದ್ದಾರೆ. ಬಾಬರಿ ಮಸೀದಿಯ 2 ಎಕ್ರೆ ಭೂಮಿಗೆ ಹೋರಾಟ ಮಾಡುವ ಜನರಿಗೆ ಈ ಅನ್ಯಾಯದ ಪರಿವೆಯೇ ಇಲ್ಲ. ಯಾಕೆಂದರೆ ಇದನ್ನು ತಿಂದು ತೇಗಿರುವುದು ರಾಜಕೀಯ ನಾಯಕರು, ಉದ್ಯಮಿಗಳು, ಇದರಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ.
ಕಾಂಗ್ರೆಸ್ ನ ಆಡಳಿತದಲ್ಲೇ ದೇಶದ ಭವ್ಯ ಬಾಬರಿ ಮಸೀದಿ ಧ್ವಂಸಗೊಂಡಿದ್ದು, ಇಂದಿಗೂ ಇದು ಕಾಂಗ್ರೆಸ್ ನ ಪ್ರಮುಖ ರಾಜಕೀಯ ಅಸ್ತ್ರವಾಗಿದೆ. ಅಲ್ಲದೇ, ಚರಿತ್ರೆಯ ಪುಟಗಳಲ್ಲಿ ದೇಶದಲ್ಲಿನ ಕೋಮು ದ್ವೇಷಕ್ಕೆ ದಲಿತ, ಹಿಂದುಳಿದ ವರ್ಗಗಳ, ಕ್ರೈಸ್ತರ, ಮುಸ್ಲಿಮರ ಭಾವ್ಯಕ್ಯತೆಗೆ ಬೆಂಕಿ ಇಟ್ಟ ಚರಿತ್ರೆಯಾಗಿದೆ. ರಾಜ್ಯ ಕಾಂಗ್ರೆಸ್ ಆಡಳಿತದಲ್ಲಿ 15 ಲಕ್ಷ ಕೋಟಿ ರೂ. ಮೌಲ್ಯದ ವಕ್ಫ್ ಅವ್ಯವಹಾರ ಹೊರಬಂದಿತ್ತು. ಈ 15 ಲಕ್ಷ ಕೋಟಿಯನ್ನು ರಾಜ್ಯದ ಮುಸ್ಲಿಮರ ಕಲ್ಯಾಣಕ್ಕಾಗಿ ಉಪಯೋಗಿಸಿದ್ದರೆ, ದೆಹಲಿ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಾಜಿಂದರ್ ಸಿಂಗ್ ಸಾಚಾರ್, ಮುಸ್ಲಿಂ ಸಮುದಾಯದಲ್ಲಿ ಕೆಲವರಿಗೆ ಅಗತ್ಯ ಸೌಲಭ್ಯವು ಸಿಕ್ಕಿಲ್ಲ ದಲಿತರಿಗಿಂತ ಕೆಲ ಮುಸ್ಲಿಮರು ಹಿಂದುಳಿದಿದ್ದಾರೆ ಅವರ ಮೇಲೆ ಕಾಳಜಿ ಇಲ್ಲ. ಕಾಳಜಿ ಇದ್ದಿದ್ದರೆ ಸಾಚಾರ್ ವರದಿ ಜಾರಿಗೊಳಿಸಲಿ ಎಂದು ಹೇಳುವ ಅನಿವಾರ್ಯತೆ ಬರುತ್ತಿರಲಿಲ್ಲ. ಇನ್ನು ಲೆಕ್ಕಕ್ಕಿಲ್ಲದ ಅಲ್ಪಸಂಖ್ಯಾತರ ಇಲಾಖೆ, ಜನಸಾಮಾನ್ಯನಿಗೆ ಇದರ ಉಪಯೋಗವೇನು ಎಂದು ಯಾರಿಗೂ ತಿಳಿದಿಲ್ಲ, ಶಾದಿಭಾಗ್ಯ, ಭ್ರಷ್ಟರ ಭಾಗ್ಯವಾಗಿದೆ. ಅಲ್ಪಸಂಖ್ಯಾತರ ಇಲಾಖೆ ಬಡವರಿಗೆ, ವಿದ್ಯಾರ್ಥಿಗಳಿಗೆ ಕೈಗೆಟಕದಾಗಿದೆ. ಇಲ್ಲಿ ಮಧ್ಯವರ್ತಿಗಳು, ಅಧಿಕಾರಿಗಳದ್ದೇ ರಾಜ್ಯಭಾರವಾಗಿದೆ.
–ಸಿದ್ದಿಕ್ ನೆಲ್ಲಿಗುಡ್ಡೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್, ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಕೋಟ್ಯಾಂತರ ರೂಪಾಯಿಗಳನ್ನು ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡ ಮಾಹಿತಿ ತಿಳಿದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಉಪ ವಿಭಾಗ, ಚನ್ನಗಿರಿ ಇವರಿಂದ ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಪಡೆಯಲಾಗಿದೆ.
ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಾಕಷ್ಟು ಅವ್ಯವಹಾರ ನಡೆದಿರುವುದು ಕಂಡುಬಂದ ಕಾರಣ ಸೂಕ್ತ ದಾಖಲೆಗಳೊಂದಿಗೆ ದಿನಾಂಕ: 05-07-2025 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ, ದಾವಣಗೆರೆ ಇವರಿಗೆ ದೂರು ನೀಡಿ, ತನಿಖೆಗೆ ಒಳಪಡಿಸುವಂತೆ ಕೋರಿದ್ದರು. ದೂರು ನೀಡಿ 3 ತಿಂಗಳು ಕಳೆದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೊಂಡ ಬಗ್ಗೆ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ದಿನಾಂಕ: 29-10-2025 ರಂದು ಜ್ಞಾಪನವನ್ನು ಸಹ ನೀಡಲಾಗಿತ್ತು.
ಆದರೆ ನಾವು ಜ್ಞಾಪನ ನೀಡಿ ಒಂದು ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.
ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕೊರತೆಯಾಗಬಾರದು. 100 ವಿದ್ಯಾರ್ಥಿಗಳು ವಾಸಿಸುವ ಕಟ್ಟಡಕ್ಕೆ ಬದಲಾಗಿ 400 ವಿದ್ಯಾರ್ಥಿಗಳು ವಾಸ ಮಾಡುವ ಕಟ್ಟಡವನ್ನು ನಿರ್ಮಿಸಬೇಕು ಎಂದರು. ಖಬರಸ್ಥಾನಕ್ಕೆ ಮತ್ತು ಸ್ಮಶಾನಕ್ಕೆ ಜಾಗದ ಅವಶ್ಯಕತೆ ಇದ್ದರೆ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
ಅಂಗನವಾಡಿ ಕೇಂದ್ರಗಳನ್ನು ಅಲ್ಪಸಂಖ್ಯಾತರ ಸಮುದಾಯದ ಜನರು ಅಧಿಕವಾಗಿ ವಾಸಿಸುತ್ತಿರುವ ತಾಲ್ಲೂಕುಗಳು ಮತ್ತು ಗ್ರಾಮಗಳಲ್ಲಿ ತೆರೆಯುವುದು, ಇದರಿಂದಾಗಿ ಯೋಜನೆಯ ಪ್ರಯೋಜನೆಗಳು ಅವರುಗಳಿಗೆ ನೇರವಾಗಿ ಸಿಗುತ್ತವೆ. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ವಕ್ಫ್ ಬೋರ್ಡ್ ಅಥವಾ ಯಾವುದೇ ಇಲಾಖೆಯ ಅಧೀನದಲ್ಲಿನ ನಿವೇಶನವಿದ್ದರೂ ಗುರುತಿಸಿ ಶಾಲೆ, ಕಾಲೇಜುಗಳ ಕಟ್ಟಡ ನಿರ್ಮಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತಿರುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಇಲಾಖೆಗಳಲ್ಲಿನ ಯೋಜನೆಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು.
ವಿವಿಧ ಇಲಾಖೆಯ ಅನುಪಾಲನಾ ವರದಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಭಕ್ತಮಾರ್ಕಡೇಶ್ವರ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದರು.
ಸಮಾಜದ ಧಾರ್ಮಿಕ ಮುಖಂಡರು ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ವಸತಿ ಶಾಲೆಗೆ ಸೇರಿಸುವಂತಾಗಲು ಪ್ರೇರೇಪಿಸಬೇಕು. ವಸತಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವುದರ ಜೊತೆಗೆ ಅಗತ್ಯ ಸೌಲಭ್ಯ ಇರುವ ಬಗ್ಗೆ ತಿಳಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಮತ ಹೊಸಗೌಡ್ರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ, ಡಿಡಿಪಿಐ ಕೊಟ್ರೇಶ್, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

