ದಿನದ ಸುದ್ದಿ
ಬಿ.ಆರ್. ಜೋಯಪ್ಪ ಅವರ ‘ಕಾಟಿಬೆಟ್ಟದ ಕಥೆಗಳು’ ಪುಸ್ತಕ ಲೋಕಾರ್ಪಣೆ
ಸುದ್ದಿದಿನ, ಮಡಿಕೇರಿ : ಕೊಡಗು ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಸಾಹಿತಿ ಬಿ.ಆರ್.ಜೋಯಪ್ಪ ಅವರು ಬರೆದ ‘ಕಾಟಿಬೆಟ್ಟದ ಕಥೆಗಳು’ ಪುಸ್ತಕ ಲೋಕಾರ್ಪಣೆ ಸಮಾರಂಭವು ಶನಿವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು.
ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ರಂಗಕರ್ಮಿ ಶಿವಮೊಗ್ಗದ ಕವಿ ಕಾವ್ಯ ಟ್ರಸ್ಟ್ನ ಪ್ರಸನ್ನ ಅವರು ಸಣ್ಣ ಊರಿನಲ್ಲಿದ್ದು, ಸಣ್ಣ ಸಣ್ಣ ವಿಚಾರಗಳನ್ನು ಅದ್ಭುತ ಸಾಹಿತ್ಯ ರೂಪದಲ್ಲಿ ಪುಸ್ತಕದಲ್ಲಿ ಅನಾವರಣ ಮಾಡಿದ್ದಾರೆ ಎಂದರು. ಬಿ.ಆರ್.ಜೋಯಪ್ಪ ಅವರ ಬಾಲ್ಯದಲ್ಲಿ ಕಂಡಂತಹ ಅನುಭವವು ಕಥೆ ರೂಪದಲ್ಲಿ ಮೂಡಿ ಬಂದಿರುವುದು ಸಂತಸದ ವಿಷಯವಾಗಿದೆ ಎಂದರು.
ಮನುಷ್ಯನ ಜೀವನದಲ್ಲಿ ಪ್ರಕೃತಿ ಮತ್ತು ಪುರುಷ ಸಂಬಂಧದ ಬಾಂಧವ್ಯವನ್ನು ಈ ಪುಸ್ತಕವು ತೋರಿಸಿಕೊಡುತ್ತದೆ. ಸಭ್ಯತೆಯ ಬಾಲ್ಯ ಕಾಲದಲ್ಲಿ ಪ್ರಕೃತಿ ಮತ್ತು ಮನುಷ್ಯನ ಒಡನಾಟ ಮತ್ತು ಮನುಷ್ಯ ಬೆಳೆದಂತೆ ಪ್ರಕೃತಿಯ ಮೇಲೆ ಅತಿಕ್ರಮಣವಾಗುತ್ತ ಪ್ರಕೃತಿಯನ್ನು ವಿಕಾರಗೊಳಿಸುವ ಘಟನೆಗಳು ಈ ಪುಸ್ತಕದಲ್ಲಿ ಮೂಡಿಬಂದಿದೆ ಎಂದು ಅವರು ನುಡಿದರು.
ಶಿಕ್ಷಣ ಬೌದ್ಧಿಕ ಜ್ಞಾನವೂ ಹೌದು ಹಾಗೂ ಹೃದಯದ ಅನುಭವವು ಹೌದು. ಇಂದಿನ ವಿದ್ಯಾರ್ಥಿಗಳು ಅವಸರದ ಬದುಕಿನಿಂದ ಹೊರಬಂದು ತಮ್ಮ ಪರಿಸರವನ್ನು ಗಮನಿಸಿ ನೆರೆ ಹೊರೆಯವರೊಂದಿಗೆ ಉತ್ತಮ ಬಾಂಧವ್ಯ ಹೊಂದಿ ನಮ್ಮ ಭಾಷೆ, ನಮ್ಮ ಪರಿಸರದ ಬಗ್ಗೆ ಕೆಲಸ ಮಾಡಬೇಕು. ಬೇಕಾದದ್ದನ್ನು ಇಟ್ಟುಕೊಂಡು ಬೇಡವಾದದನ್ನು ಬಿಟ್ಟು ಸಮೃದ್ಧ ನಾಡನ್ನು ಕಟ್ಟುವಂತಹ ಕೆಲಸಗಳು ಮುಂದುವರೆಯಬೇಕು ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.
ಹೆಸರಾಂತ ಕಥೆಗಾರರು ಹಾಗೂ ಮೈಸೂರು ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರಾದ ಅಬ್ದುಲ್ ರಶೀದ್ ಅವರು ಮಾತನಾಡಿ ಕಾಟಿಬೆಟ್ಟದ ಕಥೆಗಳು ಪುಸ್ತಕದಲ್ಲಿ ಬಿ.ಆರ್.ಜೋಯಪ್ಪ ಅವರು ತಮ್ಮ ಬಾಲ್ಯದ ತಮ್ಮ ಮನೆಯ ಪರಿಸರದ ಸುತ್ತಮುತ್ತಲಿನ ಆಗು ಹೋಗುಗಳು ಕಥೆಯ ರೂಪದಲ್ಲಿ ಅನಾವರಣಗೊಳಿಸಿದ್ದಾರೆ. ಕೊಡಗಿನ ಜೀವನ ಶೈಲಿ, ತಮ್ಮ ಸುತ್ತಮುತ್ತಲಿನ ಅನುಭವ, ಜೀವನ ಶಿಕ್ಷಣವನ್ನು ಕೃತಿಯಲ್ಲಿ ತೋರಿಸಿಕೊಟ್ಟಿದ್ದಾರೆ.
ವಿದ್ಯಾರ್ಥಿ ದಿನದಲ್ಲಿ ಸಾಹಿತ್ಯದ ಪ್ರಭಾವದಿಂದ ತಮಗಾದ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳುತ್ತ ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿ ಇರುವ ಸಾಹಿತ್ಯದ ಅಭಿರುಚಿಯನ್ನು ವೃದ್ಧಿಪಡಿಸಿಕೊಂಡು ತಂತ್ರಜ್ಞಾನವನ್ನು ತಮ್ಮ ಬೆಳವಣಿಗೆಗೆ ಉಪಯುಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಪ್ರಯತ್ನಶೀಲ ಬದುಕಿನಲ್ಲಿ ಯಶಸ್ಸಿನ ಗುಟ್ಟು ಅಡಗಿದೆ ಎಂಬುದನ್ನು ಕಾಟಿಬೆಟ್ಟದ ಕಥೆಗಳು ಪುಸ್ತಕದಲ್ಲಿ ಅಡಕವಾಗಿದೆ. ಬಿ.ಆರ್.ಜೋಯಪ್ಪ ಅವರು ಶಿಕ್ಷಕರಾಗಿ, ಲೇಖಕರಾಗಿ, ಅವರ ಪರಿಶ್ರಮದ ಅನಾವರಣ, ಗ್ರಾಮೀಣ ಪರಿಸರ, ಬಡತನದ ಅನಾವರಣ, ನಾಟಿ ಔಷಧಿಯ ಮಹತ್ವ, ಅವರ ಕಾಲಘಟ್ಟದ ಬದುಕಿನ ಚಿತ್ರಣವನ್ನು ಸೊಗಸಾಗಿ ಈ ಪುಸ್ತಕದಲ್ಲಿ ಅನಾವರಣಗೊಳಿಸಿದ್ದಾರೆ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಕಥೆಗಳ ಲೇಖಕರಾದ ಬಿ.ಆರ್.ಜೋಯಪ್ಪ ಅವರುಕಾಟಿಬೆಟ್ಟದ ಈ ಪುಸ್ತಕ ರಚಿಸಲು ತಮಗೆ ಪ್ರೇರಣೆ ನೀಡಿದ ಮಹನೀಯರಿಗೆ ಕೃತಜ್ಞತೆ ಸಲ್ಲಿಸುತ್ತಾ ಕಥೆ ಬರೆಯುವ ಸಂದರ್ಭವನ್ನು ಹಂಚಿಕೊಳ್ಳುತ್ತಾ ತಮ್ಮ ಕುಟುಂಬ ಸದಸ್ಯರ ಸಹಕಾರ ಈ ಮುಂಚೆ ತಾವು ಬರೆದ ಪುಸ್ತಕಗಳ ಮಾಹಿತಿಗಳನ್ನು ನೀಡಿ ಪುಸ್ತಕವು ಉತ್ತಮ ರೀತಿಯಲ್ಲಿ ಮೂಡಿಬರಲು ಸಹಕಾರ ನೀಡಿದ ಎಲ್ಲಾ ಮಾರ್ಗದರ್ಶಕರಿಗೆ ವಿಮರ್ಶಕರಿಗೆ ಧನ್ಯವಾದ ತಿಳಿಸಿದರು.
ಕೊಡಗು ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರು ಮಾತನಾಡಿ ಶಾಲಾ ಕಾಲೇಜುಗಳಲ್ಲಿ ಸಾಹಿತ್ಯದ ಬೆಳವಣಿಗೆ ಆಗಬೇಕೆಂಬ ಉದ್ದೇಶದಿಂದ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ, ಚಿಂತನ-ಚಿತ್ತಾರ ಪ್ರಕಾಶನದ ಡಿ.ನಿಂಗರಾಜು ಚಿತ್ತಣ್ಣನವರ್, ಲೇಖಕರ ಕುಟುಂಬಸ್ಥರು ಇತರರು ಇದ್ದರು. ಕೊಡಗು ಲೇಖಕ ಮತ್ತು ಕಲಾವಿದರ ಬಳಗದ ಪ್ರಧಾನ ಕಾರ್ಯದರ್ಶಿ ವಿಲ್ಪರ್ಡ್ ಕ್ರಾಸ್ತಾ ನಿರೂಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


