Connect with us

ಭಾವ ಭೈರಾಗಿ

ಕೃತಿ ವಿಶ್ಲೇಷಣೆ | ‘ನೂಲಿನ ಬೇಲಿ’ ಆವರಣದಿ ಭ್ರಮಣಿಸಿದ ಕ್ಷಣ..!

Published

on

ನೂಲಿನ ಬೇಲಿ
  • ಕು. ಹರ್ಷಿಯಾ ಭಾನು

ಲೇಖಕರನ್ನು ಪರಿಚಯಿಸಿದವರು ಚುಟುಕಾಗಿ ಅವರ ಪರಿಚಯ ಹಾಗೂ ಅವರ ಸಾಹಿತ್ಯಾಸಕ್ತಿಯ ಕುರಿತು ವಿವರಿಸಿದ್ದಾರೆ.ಮುನ್ನುಡಿಯ ಬರೆಹಗಾರರು ಕಾದಂಬರಿಯ ಒಳತಿರುಳನ್ನು ತಮ್ಮ ಮುನ್ನುಡಿಯಲ್ಲಿ ತೆರೆದಿಡುವುದರ ಮೂಲಕ ಓದುಗರಲ್ಲಿ ಕೃತಿಯ ಬಗ್ಗೆ ಕುತೂಹಲ ಕೆರಳಿಸಿ ಸ್ವಾಗತಿಸುವ ಹಾಗಿದೆ . ಈ ಕೃತಿಯನ್ನು ಲೇಖಕರು ತಮ್ಮ ಗುರುಗಳಿಗೆ ಗುರುದಕ್ಷಿಣೆಯ ರೂಪದಲ್ಲಿ ಗೌರವದಿಂದ ಸಮರ್ಪಿಸಿಸಿದ್ದಾರೆ. ಈ ಕೃತಿಯು ಇಪ್ಪತ್ತು ಅದ್ಯಾಯಗಳಿಂದ ಕೂಡಿದೆ.

ಮತ್ತೊಂದು ಬಹುಮುಖ್ಯವಾದ ಅಂಶವೇನೆಂದರೆ ನಿರೂಪಣೆಯ ಶೈಲಿ ವರ್ತಮಾನವನ್ನು ಭೂತಕಾಲದೊಂದಿಗೆ ಸಂಯೋಜನೆಗೊಳಿಸಿ ಕಥೆಯನ್ನು ನಿರೂಪಣೆ ಮಾಡುತ್ತಾ ನಿರೂಪಕರು ಸಾಗುತ್ತಾರೆ. ಇದೊಂದು ನೆನಪುಗಳ ಮೆರವಣಿಗೆ. ರನ್ನನ ಗದಾಯುದ್ದದಲ್ಲಿ ಬಳಕೆಯಾಗಿರುವ ಸಿಂಹಾವಲೋಕನ ಕ್ರಮ(flash back technique) ಲೇಖಕರ ಕಾದಂಬರಿಯಲ್ಲೂ ಬಳಕೆಯಾಗಿದೆ.

ಈ ಕೃತಿಯ ಬಗ್ಗೆ ಲೇಖಕರು ತಮ್ಮ ಮಾತುಗಳಲ್ಲಿ ಹೇಳಿಕೊಂಡಂತೆ, ಅವರು ಬಾಲ್ಯದಲ್ಲಿ ಕಂಡ ಘಟನೆಗಳನ್ನೇ ಆದಾರವಾಗಿಟ್ಟುಕೊಂಡು ಈ ಕಾದಂಬರಿಯನ್ನು ಹೆಣೆದಿದ್ದಾರೆ. ‘ನೂಲಿನ ಬೇಲಿ‘ ಅಂದರೆ ಅತ್ಯಂತ ನಾಜೂಕಾದ ಬೇಲಿ ಎಂಬರ್ಥದಲ್ಲಿ ಈ ಶೀರ್ಷಿಕೆ ಬಳಸಿದ್ದಾರೆ.. ಅಂದರೆ ಇಂತಹ ಬೇಲಿಯಿಂದ ಮೇಲ್ನೋಟಕ್ಕೆ ರಕ್ಷಣೆ ದೊರೆಯುತ್ತೆ ಎನಿಸಿದರೂ ಸಹ ಅಪಾಯವೇ ಹೆಚ್ಚು…. ಕಾಯುವವರೇ ಕೊಲ್ಲುವವರಾದಂತೆ, ರಕ್ಷಕರೇ ಭಕ್ಷಕರಾದಂತೆ, ಬೇಲಿಯೇ ಎದ್ದು ಹೊಲ ಮೇಯುವುದು ಎಂಬಂತೆ ಈ ಕಾದಂಬರಿಯ ಕಥಾ ಹಂದರ ಹಲವು ಗೂಢಾರ್ಥಗಳನ್ನು ಹೊಂದಿದೆ.

ಗೋಪಾಲ್ ಬೆಟ್ಟಳ್ಳಿ, ರಘು ಬೆಟ್ಟಳ್ಳಿ, ಹುಳಿಯಾರ್ ನಟರಾಜ್ ಸರ್, ರಮೇಶ ಮೊದಲಾದವರು ವರ್ತಮಾನದ ಪಾತ್ರಗಳು. ರಮೇಶ ಪೆಟ್ರೋಲ್ ಬಂಕ್ ಹತ್ತಿರ ನಿರೂಪಕರಿಗೆ ಆಕಸ್ಮಿಕವಾಗಿ ಭೇಟಿಯಾದಾಗಲೇ ಅವರ ಸ್ಮೃತಿಪಟಲದಲ್ಲಿ ಹಳೆಯ ನೆನಪುಗಳು ಒಂದೊಂದಾಗಿ ಬರಲಾರಂಭಿಸಿದ್ದು.

ಮೊದಲ ಹಾಗೂ ಎರಡನೆ ಅದ್ಯಾಯವು ವರ್ತಮಾನದ ಕಥೆಯನ್ನು ಹೊಂದಿದೆ, ಗೋಪಾಲ್ ಬೆಟ್ಟಳ್ಳಿಯವರೊಂದಿಗೆ ಕಳೆದ ಕ್ಷಣಗಳು ಹಾಗೂ ನಟರಾಜ್ ಹುಳಿಯಾರ್ ಸರ್ ರವರೊಂದಿಗೆ ಕಾರ್ಯಕ್ರಮಕ್ಕೆ ಹೋದ ಕ್ಷಣಗಳನ್ನು ವಿವರಿಸುತ್ತಾರೆ. ನಿಜವಾದ ಕಥೆ ಪ್ರಾರಂಭವಾಗುವುದು ಕಾರ್ಯಕ್ರಮ ಮುಗಿಸಿ ಮರಳುವಾಗ ಪೆಟ್ರೋಲ್ ಬಂಕ್ ಹತ್ತಿರ ಭೇಟಿಯಾದ ರಮೇಶ ಎಂಬ ವ್ಯಕ್ತಿಯನ್ನು ಕಂಡಾಗ.ಅವರನ್ನು ಭೇಟಿಯಾದ ನಂತರ ನಿರೂಪಕರ ಬಾಲ್ಯಕಾಲದ ನೆನಪುಗಳ ಮೆರವಣಿಗೆ ಪ್ರಾರಂಭವಾಗುತ್ತದೆ.

ಕಾದಂಬರಿಯ ಮುಖ್ಯಪಾತ್ರಧಾರಿ ಮದನ ಓದುಗರಿಗೆ ಖಳನಾಯಕರೇ ಸರಿ. ಅವರ ಮಡದಿ ಸುಮತಿ, ಅವರ ಸಹೋದರರಾದ ಶಂಕರ, ಶಂಕರನ ಮಡದಿ ಭವಾನಿ(ಇವರೇ ಕಾದಂಬರಿಯ ದುರಂತ ನಾಯಕ ನಾಯಕಿಯರು) ಕಾದಂಬರಿಯ ಇತರೆ ಪಾತ್ರಗಳು, ರಾಮಣ್ಣ, ಪಂಕಜ, ಕುಮಾರಿ, ಸುಮತಿಯ ಮಕ್ಕಳು , ನಿರೂಪಕರ ತಾಯಿ, ಶಂಕರನ ಮಕ್ಕಳು ಮುಂತಾದವರು.

ಕಾದಂಬರಿಯು ಸರ್ಕಾರದ ಅರಾಜಕತೆ, ಬೇಜವಾಬ್ದಾರಿತನ, ಕಲಬೆರಕೆ, ಮೂಢನಂಬಿಕೆ, ಬಡತನ, ಕಾಮ ಮತ್ತು ಪ್ರೇಮಗಳ ಸುತ್ತಲಿನ ಕಥಾ ಹಂದರವನ್ನು ಹೊಂದಿದೆ. ಪ್ರಾರಂಭದಲ್ಲಿ ‘ಸರ್ಕಾರದ ಅರಾಜಕತೆ’ ಹಾಗೂ ‘ಬೇಜವಾಬ್ದಾರಿತನ’ದ ಬಗ್ಗೆ ನಿರೂಪಕರು ಧ್ವನಿಯೆತ್ತುತ್ತಾರೆ. ಅಂದರೆ ಸರ್ಕಾರವು ಓಟು ಹಾಕಿದ ಜನಗಳಿಗೆ ಕತ್ತಲೆ ಭಾಗ್ಯ ಕರುಣಿಸಿ ತಾವು ಮಾತ್ರ ಜನಸಾಮಾನ್ಯರ ಕಷ್ಟಗಳಿಗೆ ಕಾರಣರಾಗುತ್ತಾರೆಂಬ ಸೂಕ್ಷ್ಮ ವಿಚಾರವನ್ನು ತಿಳಿಸುತ್ತಾರೆ.

ಮೂಢನಂಬಿಕೆ

ಈ ಮೂಢನಂಬಿಕೆಯನ್ನು ನಂಬದೆ ನಂಬಿಕೆಯನ್ನಷ್ಟೇ ಗೌರವಿಸಬೇಕೆನ್ನುವ ಸ್ಪಷ್ಟ ಸಂದೇಶ ಅವರ ಕಾದಂಬರಿ ನಮಗೆ ನೀಡುತ್ತದೆ, ಉದಾಹರಣೆಗೆ ಭವಾನಿ ಹಾಗೂ ಶಂಕರ ಮದುವೆಯಾದ ಹೊಸದರಲ್ಲಿ ಗೋಚರವಾದ ಅಪಶಕುನಗಳು ಮೇಲ್ನೋಟಕ್ಕೆ ಮೂಢನಂಬಿಕೆಯಂತೆ ಭಾಸವಾದರೂ ಸಹ ಅವರಿಬ್ಬರ ಬದುಕು ದುರಂತ ಅಂತ್ಯ ಕಂಡದ್ದನ್ನು ನಿರೂಪಕರು ಬಲವಾಗಿ ನಂಬುವಂತೆ ಮಾಡಿತು.

ಹೆಣ್ಣಿನ ಮೇಲಿನ ದೌರ್ಜನ್ಯ

ಈ ಸಮಸ್ಯೆ ಇಂದು ನಿನ್ನೆಯದಲ್ಲ.ತಲೆತಲಾಂತರದಿಂದ ಬೆಳೆದು ಬಂದಿರುವ, ಇಂದಿಗೂ ಬಗೆಹರಿಯದ ಹೆಣ್ಣು ಮಕ್ಕಳ ಸಮಸ್ಯೆ. ಪುರುಷನ ವಕ್ರದೃಷ್ಟಿಗೆ ಬಲಿಯಾದ ಹೆಣ್ಣುಗಳೆಷ್ಟೋ ದುರಂತ ಅಂತ್ಯ ಕಾಣೋದನ್ನ ನಾವು ದಿನಬೆಳಗಾದರೆ ಮಾದ್ಯಮಗಳ ಮೂಲಕ ತಿಳಿದುಕೊಳ್ಳುತ್ತೇವೆ. ಕಾದಂಬರಿಯ ಪಾತ್ರಗಳಾದ ಕುಮಾರಿ, ಪಂಕಜ ಹಾಗೂ ಭವಾನಿಯಂತಹ ಮೂವರು ಹೆಣ್ಣು ಮಕ್ಕಳ ಕಥೆಗಳು ವಿಭಿನ್ನವಾಗಿದ್ದರೂ ಸಹ ಪುರುಷನ ದೌರ್ಜನ್ಯಕ್ಕೆ ಒಳಗಾದವರು.

ಬಡತನ

ಇದೊಂದು ಸಾಮಾಜಿಕ ಸಮಸ್ಯೆ ನಿರೂಪಕರು ಬಡತನದ ಬವಣೆಯನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಿಸಿದ್ದಾರೆ, ನಿರೂಪಕರ ಕುಟುಂಬ ಬಡತನದಿಂದ ಕೂಡಿದ್ದರೂ ಸಹ ಅವರಿಗೆ ಸರ್ಕಾರಿ ಶಾಲೆಗೆ ಕಳುಹಿಸಿ ಓದಿಸುವುದು, ಅದೆಷ್ಟೋ ಕಿ.ಮೀ. ನಡೆದುಕೊಂಡೆ ಹೋಗ್ಬೇಕಾದ ಸನ್ನಿವೇಷ, ಮಳೆ ಬಂದ್ರೆ ನೆನೆದುಕೊಂಡೇ ಬರಬೇಕಾದ ಅನಿವಾರ್ಯತೆ, ಮನೆಯಲ್ಲಿ ಬಡತನ ಇರುವುದರಿಂದ ತನ್ನ ಓದು ಮುಂದುವರೆಸಲು ಮಾವನ ಮನೆಗೆ ಕಳುಹಿಸಿ ತಿಂದುಂಡು ಚೆನ್ನಾಗಿರುವನೆಂಬ ತಾಯಿಯ ಕಾಳಜಿ ಇವೆಲ್ಲವುಗಳನ್ನು ಲೇಖಕರು ವಿವರಿಸಿದ್ದಾರೆ.

ಬೀದಿ ಜಗಳಗಳು

ಕೊಳಾಯಿ ನೀರಿಗಾಗಿ ನಡೆಯುವ ಜಗಳಗಳು,ತಾರಕಕ್ಕೇರಿದ ಪ್ರಸಂಗಗಳು, ಉದಾಹರಣೆಗೆ ಪರಿಮಳ ಮತ್ತು ಜಯಮ್ಮರ ನಡುವೆ ನಡೆದ ಜಗಳ ತಾರಕಕ್ಕೇರಿ ಪರಸ್ಪರರನ್ನು ಹೀಯಾಳಿಸುತ್ತಾ, ಹೀಗಳೆಯುತ್ತಾ ಜುಟ್ಟು ಹಿಡಿದು ಹೊಡೆದಾಡುವಷ್ಟರಮಟ್ಟಿಗೆ ತಾರಕಕ್ಕೇರಿ ಜಗಳ ನಿಂತ ಮೇಲೆ ಪೊಲೀಸರು ಬರುವುದು, ಸಮಾಜದಲ್ಲಿ ನಡೆಯುತಿರುವ ಪ್ರಸ್ತುತ ವ್ಯವಸ್ಥೆಯನ್ನು ಬಿಂಬಿಸುತ್ತದೆ. ಇವೇ ಮುಂತಾದ ಸಾಮಾಜಿಕ ಸಮಸ್ಯೆಗಳಿಗೆ ಕನ್ನಡಿಹಿಡಿದಿದ್ದಾರೆ ನಿರೂಪಕರು.ಪರಿಸ್ಥಿತಿಯ ಕೈಗೊಂಬೆಯಾಗಿ ಹೆಣ್ಣು ಯಾವರೀತಿ ಪುರುಷನ ದಾರುಣವಾದ ಶೋಷಣೆಗೆ ಒಳಗಾಗುತ್ತಾಳೆ ಎಂಬುದನ್ನು ಪಂಕಜ, ಕುಮಾರಿ ಹಾಗೂ ಭವಾನಿ ಪಾತ್ರಗಳ ಮೂಲಕ ಓದುಗರಿಗೆ ಲೇಖಕರು ತಿಳಿಸಿದ್ದಾರೆ.

ಹಣದ ಅಮಲೇರಿದರೆ ಮನುಷ್ಯ ಎಂತಹ ಕೀಳುಮಟ್ಟಕ್ಕೆ ಬೇಕಾದರೂ ಇಳಿಯಬಲ್ಲ ಎಂಬುದನ್ನು ಮದನನ ಪಾತ್ರ ಸಂಕೇತಿಸುತ್ತದೆ. ಪಂಕಜಳ ಬಡತನದ ಸ್ಥಿತಿಯನ್ನು ರಾಮಣ್ಣ ತನ್ನ ಸ್ವಾರ್ಥಕ್ಕೆ ಬಳಸಿಕೊಂಡ, ಸುಮತಿ ಅವರ ಸಂಬಂಧಿಕರಾದ ಕುಮಾರಿಯನ್ನ ಮದನ ತನ್ನ ಸ್ವಾರ್ಥಕ್ಕೆ ಬಳಸಿಕೊಂಡದ್ದಲ್ಲದೆ, ತನ್ನ ತಮ್ಮನ ಹೆಂಡತಿಯ ಸಂಸಾರದ ಸರ್ವನಾಶಕ್ಕೂ ಸಹ ಮದನ ಮೂಲ ಕಾರಣನಾದ. ತಾನೇ ತನ್ನ ತಮ್ಮನ ಸಂಸಾರಕ್ಕೆ ಆಸರೆಯಾದಂತೆ ನಟಿಸಿ, ನಂಬಿಸಿ ಭವಾನಿಗೆ ದ್ರೋಹ ಎಸಗಿದ ಕಿರಾತಕನಂತೆ ಓದುಗರಿಗೆ ಕಾಣುತ್ತಾನೆ ಮದನ.

ಕುಮಾರನ ಆತ್ಮಹತ್ಯೆ(ಮಾತು ಬರದವನಾಗಿದ್ದು ಮದುವೆಯಾಗದ್ದಕ್ಕೆ ಜನರ ಚುಚ್ಚು ಮಾತುಗಳಿಂದ ಬೇಸತ್ತು), ಬಾಲ್ಯದಲ್ಲೇ ತನ್ನ ತಾಯಿಗೆ ಸಹಾಯ ಮಾಡಬೇಕೆಂಬ ರಮೇಶನ ಜವಾಬ್ದಾರಿತನ, ಶಂಕರನ ಮೃದು ಸ್ವಭಾವ ಹೀಗೆ ಒಂದೇ ಎರಡೇ,,, ಹತ್ತು ಹಲವು ಸನ್ನಿವೇಷಗಳಿಂದ ಕೂಡಿದ ಅಭೂತಪೂರ್ವ ಕಾದಂಬರಿ ಇದಾಗಿದೆ. ಭವಾನಿಯ ದುರಂತಮಯ ಬದುಕನ್ನು ಓದುವಾಗಲಂತೂ ಕಣ್ಣೆಲ್ಲ ಒದ್ದೆ , ಒದ್ದೆ. ಕಾರಣ ಭವಾನಿಯ ಬದುಕಿಗೆ ಆಸರೆಯಾಗಿ ನಿಲ್ಲಬೇಕಾಗಿದ್ದ ಮದನನೇ ಆಕೆಯ ಬಾಳಿಗೆ ನೂಲಿನ ಬೇಲಿಯಾದದ್ದು, ಬದುಕಿಗೆ ಮುಳುವಾದದ್ದು ನಿಜಕ್ಕೂ ಆಕೆಯ ದುರಂತಕ್ಕೆ ನೇರ ಕಾರಣವಾಗಿಬಿಟ್ಟನು.

ಇಲ್ಲಿ ತಾತ್ವಿಕತೆಯ ಸಂಕೇತವಾಗಿ ನಿಲ್ಲುವುದು ನಿರೂಪಕರ ತಾಯಿ. ಅವರು ಭವಾನಿಗೆ ತೋರುವ ಮಮತೆ ಹಾಗೂ ಸುಮತಿ, ಭವಾನಿ ಇಬ್ಬರಿಗೂ ಹೇಳುವ ಬುದ್ದಿವಾದ ಕಾದಂಬರಿಕಾರರ ಸಾಮಾಜಿಕ ಕಳಕಳಿಗೆ ಸಾಕ್ಷಿಯಾಗಿದೆ. ಕೊಳಾಯಿ ಜಗಳ, ಬೈಗುಳಗಳು, ಕಣ್ಣ ಮುಂದೆ ನಡೆದ ಅಪಶಕುನಗಳು, ನೆರೆಹೊರೆಯವರ ಮಾತುಕತೆಗಳು ಇವೆಲ್ಲವನ್ನೂ ಕಣ್ಣಿಗೆ ಕಟ್ಟುವಂತೆ ಚಿತ್ರಿಸಿದ್ದಾರೆ. ನಿರೂಪಕರು ಸನ್ನಿವೇಷಗಳನ್ನು ನೆನಪಿಸಿಕೊಂಡು ಆಗಾಗ ಭಾವಪರವಶರಾಗುತ್ತಿದ್ದರು.. ಓದುಗರನ್ನೂ ಸಹ ಸರಾಗವಾಗಿ ಓದಿಸುತ್ತಾ ಭಾವಪರವಶರನ್ನಾಗಿ ಮಾಡುತ್ತಿದ್ದರು.

ಹೀಗೆ ಕಾದಂಬರಿ ಓದುಗರನ್ನು ಯಾವುದೋ ಲೋಕಕ್ಕೆ ಕೊಂಡೊಯ್ಯುತ್ತದೆ, ಇದಕ್ಕೆ ನನ್ನ ಅನುಭವವೇ ಕಾರಣ. ಬಿಡುಗಡೆಗೂ ಮುನ್ನವೇ ಮುದಲ್ ವಿಜಯ್ ಅಣ್ಣಾವ್ರಿಗೆ ಕೃತಿಯನ್ನು ಕೇಳಿದಾಗ ವಿಳಾಸ ಪಡೆದು ಕಳುಹಿಸಿದರು. ಒಮ್ಮೆ ಓದಲೆಂದು ಎತ್ತಿಕೊಂಡ ಕೃತಿ ಪೂರ್ತಿ ಓದಿ ಮುಗಿಯುವವರೆಗೂ ಇಡಲು ಮನಸ್ಸೇ ಆಗಲಿಲ್ಲ. ಸಮಯ ಸಿಕ್ಕಾಗ ಓದಬೇಕು ಎನಿಸುವುದಕ್ಕಿಂತಲೂ, ಒಮ್ಮೆ ಓದಲು ಪ್ರಾರಂಭಿಸಿದರೆ ಸಾಕು, ಈ ಕಾದಂಬರಿಯ ಓದಿಗಾಗಿಯೇ ಸಮಯ ಮಾಡ್ಕೊಬೇಕು ಎನಿಸಬಹುದಾದ ಕೃತಿಗಳ ಸಾಲಿಗೆ ಈ ಕಾದಂಬರಿ ಸೇರುತ್ತದೆ.

ಕೃತಿ: ನೂಲಿನ ಬೇಲಿ
ಲೇಖಕರ ಹೆಸರು: ಮುದಲ್ ವಿಜಯ್
ಪ್ರಕಾಶನ: ಮುದಲ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

Published

on

~ಯೋಗೇಶ್ ಮಾಸ್ಟರ್, ಚಿಂತಕರು

ಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.

ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!

ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!

ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.

ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.

ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.

ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!

ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending