Connect with us

ದಿನದ ಸುದ್ದಿ

ಬಿ.ಶ್ರೀನಿವಾಸ ಅವರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ ಕೃತಿಯ ಕುರಿತು

Published

on


ಸಂಡೂರಿನ ಜನರ ಮುದುಡಿದ ಅಂಗಿಯ ಮೇಲೆ,ಹೆಂಗಸರು ಮಾಸಿದ ಸೀರೆಯ ಸೆರಗಿನ ಮೇಲೆ ಬಿ.ಶ್ರೀನಿವಾಸ ಅಕ್ಷರ ಬಿಡಿಸುತ್ತಾರೆ.

ಅನ್ನದ ಅಗುಳು,ಧೂಳು,ಕಾಗದದ ಚೂರು,ಆಟಿಕೆ ಸಾಮಾನು,ಕಿಡ್ನಿ,ಈ ಸಣ್ಣವು ಗಳಲ್ಲಿ ಜೀವಸಾಕ್ಷಿ ಹುಡುಕುವ ಕಥೆಗಳಿವು.ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಅನ್ನದ ಅಗಳು,ಕಾಗದದ ಚೂರನ್ನು ಎತ್ತಿಹಿಡಿಯುವ ಗೆಳೆಯ ಶ್ರೀನಿವಾಸ *ಧೂಳನ್ನೇ ಅಕ್ಷರಗಳನ್ನಾಗಿಸಿದ ಲೇಖಕ.

  • ಬಸವರಾಜ ಹೂಗಾರ

ಇಲ್ಲಿನ ಹುಚ್ಚರ ಕತೆಗಳನ್ನು ಓದುವಾಗ ಕುಂ.ವೀ.ಯವರ ಹಾಗೂ ಸಾದತ್ ಹಸನ್ ಮಾಂಟೋ ಅವರ ಹುಚ್ಚರ ಕತೆಗಳು ನೆನಪಾಗುತ್ತವೆ.ಇಲ್ಲಿನ ನತದೃಷ್ಟರ ಬದುಕನ್ನು ಹಿಡಿದಿಡಲು ಲೇಖಕರು ಕಂಡುಕೊಂಡಿರುವ ಅಭಿವ್ಯಕ್ತಿ ವಿನ್ಯಾಸ ವಿಶಿಷ್ಟವಾಗಿದೆ. ಬರಹಗಳು ದೀರ್ಘವಾಗಿಲ್ಲ. ಚುಟುಕಾಗಿವೆ. ಕವನಗಳೊ, ಗದ್ಯಗಳೊ ಎಂದು ಹೇಳಲಾಗದ ರೂಪದಲ್ಲಿವೆ.

ಗಾಢವಾದ ಅರ್ಥವನ್ನು ಕೆಲವೇ ಸಾಲುಗಳಲ್ಲಿ ವ್ಯಂಗ್ಯ ಮತ್ತು ವಿಡಂಬನೆಗಳಲ್ಲಿ ಹಿಡಿಯಲು ಯತ್ನಿಸುತ್ತವೆ.
ಇಲ್ಲಿರುವ ಲೋಕದ ನೋವಿಗೆ ಮಿಡಿವ ಸಂವೇದನೆ,ಓದುವ ಓದುಗರನ್ನೂ ಆವರಿಸಿಕೊಂಡು,ಚಿಂತನೆಗೆ ಹಚ್ಚುತ್ತದೆ.ಓದುತ್ತ,ಓದುತ್ತಾ ನಿಟ್ಟುಸಿರು ಹೊಮ್ಮುತ್ತದೆ.ಮನಸ್ಸು ಮಂಕಾಗುತ್ತದೆ.ಇಂತಹ ಬರಹಗಳನ್ನು ಕೊಟ್ಟಿರುವ ಶ್ರೀನಿವಾಸ ತಮ್ಮ ಅಂತಃಕರಣ ,ಚೂಪಾದ ಗ್ರಹಿಕೆ,ಆಳವಾದ ಸಂವೇದನೆಗಳನ್ನು ಇತರೆ ಪ್ರಕಾರಗಳಲ್ಲಿಯೂ ಪ್ರಕಟಿಸುವ ಜರೂರಿಯಿದೆ.

  • ಡಾ.ರಹಮತ್ ತರೀಕೆರೆ

ಒಬ್ಬ ಮನುಷ್ಯ ಮತ್ತೊಬ್ಬನನ್ನು ಕಿತ್ತು ತಿನ್ನಬಾರದು.ಹೊಟ್ಟೆಪಾಡಿಗಾಗಿ ನಿರ್ವಹಿಸುವ ಪ್ರತಿ ಕೆಲಸವೂ ಸೃಜನಶೀಲವಾಗಿರಬೇಕು-ಎಂಬ ಧಾವಂತದಲ್ಲಿ ಹುಟ್ಟಿದ ಮನದ ಪ್ರಕ್ರಿಯೆಗಳಿಗೆಲ್ಲ ಇಲ್ಲಿ ಹರಡಿಕೊಂಡಿವೆ.

  • ಬಿ.ಶ್ರೀನಿವಾಸ,ಕೃತಿ ಲೇಖಕ

ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು ನೊಂದವರ ಮನದಲ್ಲಿ ಅಲ್ಪಾವಧಿ ಗುರುತು ಮೂಡಿಸಬಹುದು ನಿಮ್ಮ ಈ ಪುಸ್ತಕ ಮತ್ತು ಅದರಲ್ಲಿರುವ ಎಷ್ಟೋ ವಿಚಾರಗಳು ನನ್ನನ್ನು ಡಿಸ್ಟರ್ಬ್ ಮಾಡಿವೆ. ಕೇವಲ ವಾಟ್ಸಾಪ್ ಲೈನ್ ಸಾಕಾಗಲ್ಲ ಎದುರುಗಡೆ ಕುಳಿತು ಇನ್ನು ಹೆಚ್ಚು ತಿಳಿದುಕೊಳ್ಳಬೇಕೇನಿಸುತ್ತದೆ. ಸಂಡೂರಿನ ದಾರುಣ ಚಿತ್ರಗಳನ್ನು,ಕೋರ್ಟಿನ ಚಿತ್ರಗಳನ್ನು,ಬದುಕಿನ ಚಿತ್ರಗಳನ್ನು ಕಣ್ಣಿಗೆ ರಾಚುವಂತೆ ಮೂಡಿಸಿದ್ದೀರಿ.

ಸಾವಿಗಿಂತ ಹಸಿವು ಬಹಳ ಕ್ರೂರಿ ಎನ್ನುವುದು: ನೋವಿನ ಬದಲು ಹಸಿವಿನ ಏಟುಗಳು ಬೀಳಬೇಕಿತ್ತು ಎನ್ನುವ ಸಾಲುಗಳಂತೂ Geographical Hungrey ಪುಸ್ತಕ ನೆನಪಿಸುತ್ತವೆ. ಸೊಂಡೂರಿನ ಚಿತ್ರಗಳ ಮೂಡಿಸಿದೆ ಗಾಢ ವಿಷಾದತೆ, ನನ್ನನ್ನು ಹೊರಬರಲು ಬಿಡುತ್ತಿಲ್ಲ.

“ಉಳ್ಳವರು ಹೊತ್ತ ಮೂಟೆಗಳಲ್ಲಿ ಬಡವರ ಹಸಿವಿನದ್ದೇ ಭಾರ”ಇವೆಲ್ಲ ಹಸಿವನ್ನು ಅನುಭವಿಸಿದವರಿಗೆ ಮಾತ್ರ ಸರಿಯಾಗಿ ಅರ್ಥವಾಗುವ ಸಾಲುಗಳು.

ಇನ್ನು ,ಕೋರ್ಟಿನ ಚಿತ್ರಗಳು, ಎಷ್ಟು ಜನ ಇರ್ತಾರೆ ಇವನ್ನೆಲ್ಲ ಸೂಕ್ಷ್ಮ ವಾಗಿ ತಿಳಿದುಕೊಳ್ಳುವವರು ?
ಶಾಲೆ ಹಿಂದೆ ತಿರುಗಬಾರದು ಕೋರ್ಟ್ ಕಚೇರಿ ಮುಂದೆ ತಿರುಗಬಾರದು ಎಂದು ನಮ್ಮ ಜನಪದರು ಹೇಳ್ವ ಮಾತು ಎಷ್ಟೋ ಸಲ ಸತ್ಯ ಎನಿಸುತ್ತದೆ.

ನೀವು ಹಿಡಿದಿಟ್ಟ ಬದುಕಿನ ಚಿತ್ರಗಳಲ್ಲಿನ “ಶವಪೆಟ್ಟಿಗೆ ಸಣ್ಣದಿದ್ದಷ್ಟು ಹೊರುವುದು ಬಹಳ ಕಷ್ಟ “ಎಂಬ ಮಾತಂತೂ ಚಿಕ್ಕಮಕ್ಕಳ ತಂದೆತಾಯಿಯರ ಕಣ್ಣಲ್ಲಿ ನೀರು ತರಿಸುವುದು.

ತಲೆ ಮ್ಯಾಲೆ ಮಲ ಸುರುವಿಕೊಂಡೆವಲ್ಲ ಸರ್ ಅವತ್ತೇ… ನಾವ್ ಹುಟ್ಟಿದ್ದು ಎನ್ನುವ ಸವಣೂರಿನ ಭಂಗಿಯ ಮಾತನ್ನು ಎಷ್ಟು ಅರ್ಥಗರ್ಭಿತವಾಗಿ ಸೋ ಕಾಲ್ಡ್ ಸೊಸೈಟಿಗೆ ಮುಟ್ಟಿ ನೋಡಿಕೊಳ್ಳುವಂತೆ ಬರೆದಿದ್ದೀರಿ. ಆಕೆ ಏನನ್ನೋ ಆಯ್ಕೆ ಮಾಡಿಕೊಂಡಿದ್ದಾಳೆ ಎಂಬ ವಿಚಾರಗಳು ಕೇವಲ ವಿಚಾರಗಳಲ್ಲ ,ಬದುಕಿನ ಸತ್ಯ ಚಿತ್ರಣಗಳು ದಿನ ನಿತ್ಯ ನಮ್ಮ ನಡುವೆ ನಡೆಯುವಂತವು.ಅವನ್ನು ಕಾಣುವಂತ ದೃಷ್ಟಿ ಇದ್ದವರಿಗೆ ಮಾತ್ರ ಇವು ಕಾಣುತ್ತವೆ ಸರ್ .
ನಿಮ್ಮ ನೈಜ ದೃಷ್ಟಿಗೆ ದನ್ಯವಾದಗಳು ಸರ್, ಉಳಿದದ್ದು ಎದುರು ಬದುರು ಕುಳಿತು ಮಾತಾಡೋಣ

  • ಡಾ.ರಾಮಚಂದ್ರ ಹಂಸನೂರು, ಬೆಟಗೇರಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending