ದಿನದ ಸುದ್ದಿ
ಬಿ.ಶ್ರೀನಿವಾಸ ಅವರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ ಕೃತಿಯ ಕುರಿತು
ಸಂಡೂರಿನ ಜನರ ಮುದುಡಿದ ಅಂಗಿಯ ಮೇಲೆ,ಹೆಂಗಸರು ಮಾಸಿದ ಸೀರೆಯ ಸೆರಗಿನ ಮೇಲೆ ಬಿ.ಶ್ರೀನಿವಾಸ ಅಕ್ಷರ ಬಿಡಿಸುತ್ತಾರೆ.
ಅನ್ನದ ಅಗುಳು,ಧೂಳು,ಕಾಗದದ ಚೂರು,ಆಟಿಕೆ ಸಾಮಾನು,ಕಿಡ್ನಿ,ಈ ಸಣ್ಣವು ಗಳಲ್ಲಿ ಜೀವಸಾಕ್ಷಿ ಹುಡುಕುವ ಕಥೆಗಳಿವು.ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಅನ್ನದ ಅಗಳು,ಕಾಗದದ ಚೂರನ್ನು ಎತ್ತಿಹಿಡಿಯುವ ಗೆಳೆಯ ಶ್ರೀನಿವಾಸ *ಧೂಳನ್ನೇ ಅಕ್ಷರಗಳನ್ನಾಗಿಸಿದ ಲೇಖಕ.
- ಬಸವರಾಜ ಹೂಗಾರ
ಇಲ್ಲಿನ ಹುಚ್ಚರ ಕತೆಗಳನ್ನು ಓದುವಾಗ ಕುಂ.ವೀ.ಯವರ ಹಾಗೂ ಸಾದತ್ ಹಸನ್ ಮಾಂಟೋ ಅವರ ಹುಚ್ಚರ ಕತೆಗಳು ನೆನಪಾಗುತ್ತವೆ.ಇಲ್ಲಿನ ನತದೃಷ್ಟರ ಬದುಕನ್ನು ಹಿಡಿದಿಡಲು ಲೇಖಕರು ಕಂಡುಕೊಂಡಿರುವ ಅಭಿವ್ಯಕ್ತಿ ವಿನ್ಯಾಸ ವಿಶಿಷ್ಟವಾಗಿದೆ. ಬರಹಗಳು ದೀರ್ಘವಾಗಿಲ್ಲ. ಚುಟುಕಾಗಿವೆ. ಕವನಗಳೊ, ಗದ್ಯಗಳೊ ಎಂದು ಹೇಳಲಾಗದ ರೂಪದಲ್ಲಿವೆ.
ಗಾಢವಾದ ಅರ್ಥವನ್ನು ಕೆಲವೇ ಸಾಲುಗಳಲ್ಲಿ ವ್ಯಂಗ್ಯ ಮತ್ತು ವಿಡಂಬನೆಗಳಲ್ಲಿ ಹಿಡಿಯಲು ಯತ್ನಿಸುತ್ತವೆ.
ಇಲ್ಲಿರುವ ಲೋಕದ ನೋವಿಗೆ ಮಿಡಿವ ಸಂವೇದನೆ,ಓದುವ ಓದುಗರನ್ನೂ ಆವರಿಸಿಕೊಂಡು,ಚಿಂತನೆಗೆ ಹಚ್ಚುತ್ತದೆ.ಓದುತ್ತ,ಓದುತ್ತಾ ನಿಟ್ಟುಸಿರು ಹೊಮ್ಮುತ್ತದೆ.ಮನಸ್ಸು ಮಂಕಾಗುತ್ತದೆ.ಇಂತಹ ಬರಹಗಳನ್ನು ಕೊಟ್ಟಿರುವ ಶ್ರೀನಿವಾಸ ತಮ್ಮ ಅಂತಃಕರಣ ,ಚೂಪಾದ ಗ್ರಹಿಕೆ,ಆಳವಾದ ಸಂವೇದನೆಗಳನ್ನು ಇತರೆ ಪ್ರಕಾರಗಳಲ್ಲಿಯೂ ಪ್ರಕಟಿಸುವ ಜರೂರಿಯಿದೆ.
- ಡಾ.ರಹಮತ್ ತರೀಕೆರೆ
ಒಬ್ಬ ಮನುಷ್ಯ ಮತ್ತೊಬ್ಬನನ್ನು ಕಿತ್ತು ತಿನ್ನಬಾರದು.ಹೊಟ್ಟೆಪಾಡಿಗಾಗಿ ನಿರ್ವಹಿಸುವ ಪ್ರತಿ ಕೆಲಸವೂ ಸೃಜನಶೀಲವಾಗಿರಬೇಕು-ಎಂಬ ಧಾವಂತದಲ್ಲಿ ಹುಟ್ಟಿದ ಮನದ ಪ್ರಕ್ರಿಯೆಗಳಿಗೆಲ್ಲ ಇಲ್ಲಿ ಹರಡಿಕೊಂಡಿವೆ.
- ಬಿ.ಶ್ರೀನಿವಾಸ,ಕೃತಿ ಲೇಖಕ
ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು ನೊಂದವರ ಮನದಲ್ಲಿ ಅಲ್ಪಾವಧಿ ಗುರುತು ಮೂಡಿಸಬಹುದು ನಿಮ್ಮ ಈ ಪುಸ್ತಕ ಮತ್ತು ಅದರಲ್ಲಿರುವ ಎಷ್ಟೋ ವಿಚಾರಗಳು ನನ್ನನ್ನು ಡಿಸ್ಟರ್ಬ್ ಮಾಡಿವೆ. ಕೇವಲ ವಾಟ್ಸಾಪ್ ಲೈನ್ ಸಾಕಾಗಲ್ಲ ಎದುರುಗಡೆ ಕುಳಿತು ಇನ್ನು ಹೆಚ್ಚು ತಿಳಿದುಕೊಳ್ಳಬೇಕೇನಿಸುತ್ತದೆ. ಸಂಡೂರಿನ ದಾರುಣ ಚಿತ್ರಗಳನ್ನು,ಕೋರ್ಟಿನ ಚಿತ್ರಗಳನ್ನು,ಬದುಕಿನ ಚಿತ್ರಗಳನ್ನು ಕಣ್ಣಿಗೆ ರಾಚುವಂತೆ ಮೂಡಿಸಿದ್ದೀರಿ.
ಸಾವಿಗಿಂತ ಹಸಿವು ಬಹಳ ಕ್ರೂರಿ ಎನ್ನುವುದು: ನೋವಿನ ಬದಲು ಹಸಿವಿನ ಏಟುಗಳು ಬೀಳಬೇಕಿತ್ತು ಎನ್ನುವ ಸಾಲುಗಳಂತೂ Geographical Hungrey ಪುಸ್ತಕ ನೆನಪಿಸುತ್ತವೆ. ಸೊಂಡೂರಿನ ಚಿತ್ರಗಳ ಮೂಡಿಸಿದೆ ಗಾಢ ವಿಷಾದತೆ, ನನ್ನನ್ನು ಹೊರಬರಲು ಬಿಡುತ್ತಿಲ್ಲ.
“ಉಳ್ಳವರು ಹೊತ್ತ ಮೂಟೆಗಳಲ್ಲಿ ಬಡವರ ಹಸಿವಿನದ್ದೇ ಭಾರ”ಇವೆಲ್ಲ ಹಸಿವನ್ನು ಅನುಭವಿಸಿದವರಿಗೆ ಮಾತ್ರ ಸರಿಯಾಗಿ ಅರ್ಥವಾಗುವ ಸಾಲುಗಳು.
ಇನ್ನು ,ಕೋರ್ಟಿನ ಚಿತ್ರಗಳು, ಎಷ್ಟು ಜನ ಇರ್ತಾರೆ ಇವನ್ನೆಲ್ಲ ಸೂಕ್ಷ್ಮ ವಾಗಿ ತಿಳಿದುಕೊಳ್ಳುವವರು ?
ಶಾಲೆ ಹಿಂದೆ ತಿರುಗಬಾರದು ಕೋರ್ಟ್ ಕಚೇರಿ ಮುಂದೆ ತಿರುಗಬಾರದು ಎಂದು ನಮ್ಮ ಜನಪದರು ಹೇಳ್ವ ಮಾತು ಎಷ್ಟೋ ಸಲ ಸತ್ಯ ಎನಿಸುತ್ತದೆ.
ನೀವು ಹಿಡಿದಿಟ್ಟ ಬದುಕಿನ ಚಿತ್ರಗಳಲ್ಲಿನ “ಶವಪೆಟ್ಟಿಗೆ ಸಣ್ಣದಿದ್ದಷ್ಟು ಹೊರುವುದು ಬಹಳ ಕಷ್ಟ “ಎಂಬ ಮಾತಂತೂ ಚಿಕ್ಕಮಕ್ಕಳ ತಂದೆತಾಯಿಯರ ಕಣ್ಣಲ್ಲಿ ನೀರು ತರಿಸುವುದು.
ತಲೆ ಮ್ಯಾಲೆ ಮಲ ಸುರುವಿಕೊಂಡೆವಲ್ಲ ಸರ್ ಅವತ್ತೇ… ನಾವ್ ಹುಟ್ಟಿದ್ದು ಎನ್ನುವ ಸವಣೂರಿನ ಭಂಗಿಯ ಮಾತನ್ನು ಎಷ್ಟು ಅರ್ಥಗರ್ಭಿತವಾಗಿ ಸೋ ಕಾಲ್ಡ್ ಸೊಸೈಟಿಗೆ ಮುಟ್ಟಿ ನೋಡಿಕೊಳ್ಳುವಂತೆ ಬರೆದಿದ್ದೀರಿ. ಆಕೆ ಏನನ್ನೋ ಆಯ್ಕೆ ಮಾಡಿಕೊಂಡಿದ್ದಾಳೆ ಎಂಬ ವಿಚಾರಗಳು ಕೇವಲ ವಿಚಾರಗಳಲ್ಲ ,ಬದುಕಿನ ಸತ್ಯ ಚಿತ್ರಣಗಳು ದಿನ ನಿತ್ಯ ನಮ್ಮ ನಡುವೆ ನಡೆಯುವಂತವು.ಅವನ್ನು ಕಾಣುವಂತ ದೃಷ್ಟಿ ಇದ್ದವರಿಗೆ ಮಾತ್ರ ಇವು ಕಾಣುತ್ತವೆ ಸರ್ .
ನಿಮ್ಮ ನೈಜ ದೃಷ್ಟಿಗೆ ದನ್ಯವಾದಗಳು ಸರ್, ಉಳಿದದ್ದು ಎದುರು ಬದುರು ಕುಳಿತು ಮಾತಾಡೋಣ
- ಡಾ.ರಾಮಚಂದ್ರ ಹಂಸನೂರು, ಬೆಟಗೇರಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243