ದಿನದ ಸುದ್ದಿ
ಅರಣ್ಯ ಕಾಯ್ದೆ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು : ಅರಣ್ಯ ಮಂತ್ರಿಗಳಿಗೆ ಬೃಂದಾ ಕಾರಟ್ ಪತ್ರ
ಇದು ಕೇಂದ್ರೀಕರಣ, ವ್ಯಾಪಾರೀಕರಣ, ಖಾಸಗೀಕರಣ ಮತ್ತು ಅಪರಾಧೀಕರಣದ ನೀಲನಕ್ಷೆ
ಅರಣ್ಯ ಕಾಯ್ದೆ, 1927ಕ್ಕೆ ಸರಕಾರ ಸೂಚಿಸಿರುವ ಕರಡು ತಿದ್ದುಪಡಿಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅವನ್ನು ಹಿಂತೆದುಕೊಳ್ಳಬೇಕು. ಅದರ ಬದಲಿಗೆ, ಈ ಕಾಯ್ದೆಯನ್ನು ಅರಣ್ಯ ಹಕ್ಕುಗಳ ಕಾಯ್ದೆ ಮತ್ತು ಬುಡಕಟ್ಟು ಸಮುದಾಯಗಳು ಎದುರಿಸುತ್ತಿರುವ ಚಾರಿತ್ರಿಕ ಅನ್ಯಾಯಗಳನ್ನು, ಈಗ ಒಂದೆಡೆಯಲ್ಲಿ ಅಭಿವೃದ್ಧಿಯ ಹೆಸರಲ್ಲಿ, ಮತ್ತೊಂದೆಡೆಯಲ್ಲಿ ಸಂರಕ್ಷಣೆಯ ಹೆಸರಲ್ಲಿ ಆಧುನಿಕ ಸ್ವರೂಪಗಳಲ್ಲಿ ಎಸಗುತ್ತಿರುವ ಅನ್ಯಾಯಗಳನ್ನು ಸರಿಪಡಿಸಲು ಯತ್ನಿಸಿರುವ ಇತರ ಕಾಯ್ದೆಗಳಿಗೆ ಸರಿಹೊಂದುವ ರೀತಿಯಲ್ಲಿ ತರುವುದೇ ಅರಣ್ಯ ಸಂರಕ್ಷಣೆಯ ಹಿತರಕ್ಷಣೆಯ ದೃಷ್ಟಿಯಿಂದ ಉತ್ತಮ ಎಂದು ಸಿಪಿಐ(ಎಂ) ಪೊಲಿಟ್ಬ್ಯುರೊ ಸದಸ್ಯರಾದ ಬೃಂದಾ ಕಾರಟ್ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಿ ಪ್ರಕಾಶ ಜಾವ್ಡೇಕರ್ ಅವರಿಗೆ ಜುಲೈ 9 ರಂದು ಬರೆದಿರುವ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಈ ಮಂತ್ರಾಲಯ ಚರ್ಚೆಗೆ ಬಿಡುಗಡೆ ಮಾಡಿರುವುದು ಅರಣ್ಯ ಕಾಯ್ದೆ, 1927ಕ್ಕೆ ತಿದ್ದುಪಡಿಗಳ ಮೊದಲ ಕರಡನ್ನು ಮಾತ್ರವಾದರೂ, ಲೋಕಸಭೆಯಲ್ಲಿ ಜೂನ್ 28ರಂದು ಪ್ರಕಾಶ್ ಜಾವ್ಡೇಕರ್ ಈ ಕುರಿತು ಸಲ್ಲಿಸಿರುವ ಲಿಖಿತ ಹೇಳಿಕೆ ಬಹಳಷ್ಟು ದಾರಿ ತಪ್ಪಿಸುವಂತದ್ದು. “ನೀವು ತಿದ್ದುಪಡಿಗಳನ್ನು ಸಮರ್ಥಿಸಿ ಕೊಂಡಿದ್ದೀರಿ. ಈ ಕಾಯ್ದೆಯಲ್ಲಿರುವ ಅತ್ಯಂತ ದಮನಕಾರಿ ಕ್ರಮಗಳನ್ನು ಅಷ್ಟೇನೂ ಮುಖ್ಯವಲ್ಲ ಎಂದು ಬದಿಗೆ ಸರಿಸುವ ಪ್ರಯತ್ನ ಮಾಡಿದ್ದೀರಿ, ಅದರಲ್ಲೂ ಬುಡಕಟ್ಟು ಸಮುದಾಯಗಳ ಹಕ್ಕುಗಳನ್ನು ದಮನಮಾಡುತ್ತಿರುವುದನ್ನು ಉಪೇಕ್ಷಿಸಿದ್ದೀರಿ. ಆದ್ದರಿಂದ ಈ ತಿದ್ದುಪಡಿಗಳ ಬಗ್ಗೆ ಹೆಚ್ಚು ವಿವರವಾದ ವಿಮರ್ಶೆಯನ್ನು ತಮಗೆ ಕೊಡುವುದು ಅಗತ್ಯ ಎಂದು ನನಗನಿಸಿದೆ. ಇದು ಸಂಸತ್ತಿಗೆ ಒಂದು ಹೆಚ್ಚು ಸರಿಯಾದ ಚಿತ್ರವನ್ನು ಕೊಡಲು ನೆರವಾಗಬಹುದು” ಎಂದು ಈ ಪತ್ರವನ್ನು ಬರೆದಿರುವುದಕ್ಕೆ ಕಾರಣವನ್ನು ತಿಳಿಸುತ್ತ ಬೃಂದಾ ಕಾರಟ್ ಹೇಳಿದ್ದಾರೆ.
1927ರ ಅರಣ್ಯ ಕಾಯ್ದೆ ಬ್ರಿಟಿಶ್ ವಸಾಹತುಶಾಹಿಗಳಿಗೆ ಭಾರತದ ಅರಣ್ಯಗಳ ಮೇಲೆ ಅವರ ಸರಕಾರದ ಒಡೆತನವನ್ನು ಸ್ಥಾಪಿಸುವ ಒಂದು ಸಾಧನವಾಗಿತ್ತು. ಈ ಕಾಯ್ದೆಯ ಮೂಲಕ ಅವರು ಬುಡಕಟ್ಟು ಸಮುದಾಯಗಳು ಅತಿಕ್ರಮಣಕಾರರು ಎಂದು ಸಾರಿದರು. ಈ ಸಮುದಾಯಗಳ ವಿರುದ್ಧ ಚಾರಿತ್ರಿಕ ಅನ್ಯಾಯಗಳಿಗೆ ಈ ಮೂಲಕ ಕಾನೂನಿನ ಮಂಜೂರಾತಿಯನ್ನು ಪಡೆಯಲಾಯಿತು. ಈಗ ಸೂಚಿಸಿರುವ ತಿದ್ದುಪಡಿಗಳು, ಕೆಲವು ಸಂಪೂರ್ಣ ಹೊಸದಾದ ವಿಭಾಗಗಳನ್ನೂ ಹೊಂದಿದ್ದು, ಈ 91 ಅಂಶಗಳು ಅರಣ್ಯ ಸಂರಕ್ಷಣೆಯನ್ನು ಮಿಲಿಟರೀಕರಿಸಿ ಬ್ರಿಟಿಶರನ್ನೂ ಮೀರಿಸಿವೆ, ಅವರು ಧೈರ್ಯಸಾಲದೆ ಮಾಡದಿರುವುದನ್ನೂ ಮಾಡ ಹೊರಟಿದೆ.
ಈ ತಿದ್ದುಪಡಿಗಳು ಬುಡಕಟ್ಟು ಬದುಕಿನ ಪ್ರತಿಯೊಂದು ಆಯಾಮವನ್ನೂ ಅಪರಾಧೀಕರಿಸಿವೆ, ಅರಣ್ಯ ಅಧಿಕಾರಶಾಹಿಗೆ ವಾರಂಟ್ ನೀಡದೆಯೇ ಬಂಧಿಸುವ, ಕಾನೂನು ಜಾರಿಗೊಳಿಸಲು ಶಸ್ತ್ರಾಸ್ತ್ರಗಳ ಬಳಕೆಗೂ ಲಂಗುಲಗಾಮಿಲ್ಲದ ಅಧಿಕಾರಗಳನ್ನು ಕೊಟ್ಟಿದೆ. ಪ್ರಸ್ತಾವಿತ ರಾಷ್ಟ್ರೀಯ ಅರಣ್ಯ ಮಂಡಳಿಯಲ್ಲಿ ಸೇನಾಪಡೆಗಳ ಮುಖ್ಯಸ್ಥರನ್ನು ಒಬ್ಬ ಸದಸ್ಯರಾಗಿ ಸೂಚಿಸಿರುವುದು ಈ ದಮನಕಾರೀ ನಿಲುವಿನ ಸಂಕೇತವಾಗಿದೆ. ಬಹುಶಃ ಭಾರತದ ಸೇನಾಧಿಪತಿಗಳು ಈಗ ದೇಶದ ಗಡಿಗಳ ಬದಲು ಅರಣ್ಯಗಳನ್ನು ರಕ್ಷಿಸುವುದು ಹೇಗೆ ಎಂಬ ಚರ್ಚೆಗೆ ಸಮಯ ಕೊಡಬೇಕಾಗಿದೆ ಎಂದು ಈ ಬಗ್ಗೆ ಬರೆಯುತ್ತ ಬೃಂದಾ ಅವರು ಗೇಲಿ ಮಾಡಿದ್ದಾರೆ.
ಇನ್ನೊಂದೆಡೆಯಲ್ಲಿ, ಅರಣ್ಯಗಳ ನಿರ್ವಹಣೆಗೆ, ಸಂರಕ್ಷಣೆಗೆ, ಕಾಯ್ದುಕೊಳ್ಳಲಿಕ್ಕೆ ಮತ್ತು ಬುಡಕಟ್ಟು ಹಕ್ಕುಗಳಿಗೆ ಎಷ್ಟೊಂದು ಅನಿವಾರ್ಯವಾದ ಗ್ರಾಮಸಭೆಗಳ, ಅದರಲ್ಲೂ ಬುಡಕಟ್ಟು ಪ್ರದೇಶಗಳಲ್ಲಿನ ಗ್ರಾಮಸಭೆಗಳ ಪಾತ್ರವನ್ನು ಅಳಿಸಿ ಬಿಡಲಾಗಿದೆ ಎಂಬುದನ್ನು ಎತ್ತಿ ತೋರುತ್ತ ಬೃಂದಾ ಕಾರಟ್ ಈ ತಿದ್ದುಪಡಿಗಳು ಕೇಂದ್ರೀಕರಣ, ವ್ಯಾಪಾರೀಕರಣ ಮತ್ತು ಅಪರಾಧೀಕರಣದ ಒಂದು ನೀಲನಕ್ಷೆ ಎಂದು ಟೀಕಿಸಿದ್ದಾರೆ. ಅರಣ್ಯ ಸಂರಕ್ಷಣೆ ಈ ತಿದ್ದುಪಡಿಗಳ ಘೋಷಿತ ಗುರಿ.
ಆದರೆ ಇವು ಆ ಗುರಿಸಾಧನೆಗೆ ನೆರವಾಗುವುದಿಲ್ಲ. ತದ್ವಿರುದ್ಧವಾಗಿ, ಇವು ಅರಣ್ಯ ಹಕ್ಕುಗಳ ಕಾಯ್ದೆಯಲ್ಲಿ, 2006ರಲ್ಲಿ ತಿದ್ದುಪಡಿಗೊಂಡ ವನ್ಯ ಪ್ರಾಣಿಗಳ ರಕ್ಷಣಾ ಕಾಯ್ದೆಯಲ್ಲಿ, ಪರಿಶಿಷ್ಟ ಪ್ರದೇಶಗಳಿಗೆ ಪಂಚಾಯತ್ ವಿಸ್ತರಣೆ ಕಾಯ್ದೆ(ಪಿಎಇಎಸ್ಎಎ), ಭೂಸ್ವಾಧೀನ ಮತ್ತು ಮರುವಸತಿ ಕಾಯ್ದೆ,2013ರಲ್ಲಿ ಮಾತ್ರವಲ್ಲ, ಸಂವಿಧಾನದ ಶೆಡ್ಯೂಲ್ 5 ಮತ್ತು 6ರಲ್ಲಿ ಮಾನ್ಯ ಮಾಡಿರುವ ಬುಡಕಟ್ಟುಗಳು ಮತ್ತು ಇತರ ಪಾರಂಪರಿಕ ಅರಣ್ಯವಾಸಿಗಳ ಈಗಿರುವ ಹಕ್ಕುಗಳನ್ನು ಅಳಿಸಿ ಹಾಕುತ್ತವೆ.
ಮೇಲೆ ಹೇಳಿದಂತೆ, ಈ ತಿದ್ದುಪಡಿಗಳು ಹೇಗೆ ಕೇಂದ್ರೀಕರಣ, ವ್ಯಾಪಾರೀಕರಣ ಮತ್ತು ಅಪರಾಧೀಕರಣದ ನೀಲನಕ್ಷೆ ಎಂಬುದಕ್ಕೆ ವಿವರಗಳನ್ನೂ ಈ ಪತ್ರ ಒಳಗೊಂಡಿದೆ. ಇನ್ನೂ ಗಮನಾರ್ಹ ಸಂಗತಿಯೆಂದರೆ, ಬುಡಕಟ್ಟು ಜನಗಳ ಹಕ್ಕುಗಳ ಪ್ರಶ್ನೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ ಎಂಬುದನ್ನು ಪ್ರಕಾಶ ಜಾವ್ಡೇಕರ್ ಅವರಿಗೆ ಬೃಂದಾ ಕಾರಟ್ ಈ ಪತ್ರದಲ್ಲಿ ನೆನಪಿಸಬೇಕಾಗಿ ಬಂದಿದೆ.
“ಆದ್ದರಿಂದ ಈ ತಿದ್ದುಪಡಿಗಳು, ಒಟ್ಟಿನಲ್ಲಿ, ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ ಮತ್ತು ನಿರ್ದಿಷ್ಟವಾಗಿ ಬುಡಕಟ್ಟು ಜನಗಳ ಹಕ್ಕುಗಳನ್ನು, ಒಟ್ಟಾರೆಯಾಗಿ ಪಾರಂಪರಿಕ ಅರಣ್ಯವಾಸಿಗಳ ಹಕ್ಕುಗಳನ್ನು ರಕ್ಷಿಸುವ ಕಾನೂನು ಚೌಕಟ್ಟಿಗೆ ವ್ಯತಿರಿಕ್ತವಾಗಿವೆ. ಅಲ್ಲದೆ, ಬುಡಕಟ್ಟು ಹಕ್ಕುಗಳು ತಮ್ಮ ಮಂತ್ರಾಲಯದ ಕಾರ್ಯವ್ಯಾಪ್ತಿಗೆ ಸೇರಿದ್ದಲ್ಲ, ಅವು ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ವ್ಯಾಪ್ತಿಗೆ ಸೇರಿದವುಗಳು. ಆದರೂ ಈ ತಿದ್ದುಪಡಿಗಳ ಮೂಲಕ ತಮ್ಮ ಮಂತ್ರಾಲಯ ಬುಡಕಟ್ಟು ಹಕ್ಕುಗಳಿಗೆ ಸಂಬಂಧಪಟ್ಟ ಎಲ್ಲ ಶಾಸನಗಳನ್ನು ಮೀರಿ ನಿಲ್ಲಲು, ಅವನ್ನೆಲ್ಲ ಈ ಪ್ರಸ್ತಾವಿತ ಕಾಯ್ದೆಗೆ ಅಧೀನಗೊಳಿಸಲು ಪ್ರಯತ್ನಿಸುತ್ತಿದೆ. ಇದು ಯಾವುದೇ ರೀತಿಯಲ್ಲಿ ಒಪ್ಪತಕ್ಕಂತದ್ದಲ್ಲ” ಎಂದು ಬೃಂದಾ ಕಾರಟ್ ಪ್ರಕಾಶ ಜಾವ್ಡೇಕರ್ ಅವರಿಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.
( ಈ ವಾರದ ಜನಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


