ದಿನದ ಸುದ್ದಿ
ಆತ್ಮಕತೆ | ನಮ್ಮ ಬಿಆರ್ಪಿ ಸ್ನಾತಕೋತ್ತರ ಕೇಂದ್ರ
- ರುದ್ರಪ್ಪ ಹನಗವಾಡಿ
ದಟ್ಟ ಮಲೆನಾಡಲ್ಲದಿದ್ದರೂ ಮಳೆಗಾಲದಲ್ಲಿ ಹೆಚ್ಚು ಮಳೆ ಸುರಿದು ನಿಸರ್ಗ ಸೌಂದರ್ಯವನ್ನು ಹೆಚ್ಚಿಸುತ್ತಿತ್ತು. ಆದರೆ ವಿಶ್ವವಿದ್ಯಾಲಯದಲ್ಲಿ ಹೆಚ್ಚಿನ ಶಾಖೆಗಳಾಗಲೀ, ಒಂದು ಸ್ವತಂತ್ರ ವಿಶ್ವವಿದ್ಯಾಲಯವಾಗುವ ಯಾವ ತಯಾರಿಯೂ ಕಾಣುತ್ತಿರಲಿಲ್ಲ.
ಪ್ರಾರಂಭದಿಂದ ಇದ್ದ, ನಾಲ್ಕು ವಿಭಾಗಗಳು ಮತ್ತು 15-16ಜನ ಅಧ್ಯಾಪಕರುಗಳಾಗಿದ್ದನ್ನು ಬಿಟ್ಟರೆ ವಿಕಾಸದ ಯಾವ ಲಕ್ಷಣಗಳೂ ಇರಲಿಲ್ಲ. ನಾನು ಬಂದು ನಾಲ್ಕು ವರ್ಷಗಳಲ್ಲಿ ನನ್ನ ಜೀವನದಲ್ಲಿ ಮದುವೆ ಮತ್ತು ನಮಗೆ ಮಗುವಾದುದ್ದನ್ನು ಬಿಟ್ಟರೆ ಸ್ನಾತಕೋತ್ತರ ಕೇಂದ್ರದ ಬೆಳವಣಿಗೆಯಲ್ಲಿ ಮತ್ತೇನೂ ಬೆಳವಣಿಗೆಗಳು ನಡೆಯಲಿಲ್ಲ.
ಸ್ವಂತ ವಿಷಯದಲ್ಲಿ ನಾನು ಆರ್ಥಿಕ ಸಂಕಷ್ಟಕ್ಕೆ ಬಿದ್ದಿದ್ದೆ. ಮದುವೆಯಾಗುವ ಯಾವ ಪೂರ್ವಭಾವಿ ತಯಾರಿ ಇಲ್ಲದೆ ತಕ್ಷಣ ಆಗಬೇಕಾದ ಕಾರಣ ಸುಮಾರು 15 ಸಾವಿರದಷ್ಟು ವಿಶ್ವಾಸಿಕ ಸ್ನೇಹಿತರಿಂದ ಸಾಲ ಮಾಡಿದ್ದೆ. ಹೊಸ ಸಂಸಾರ ಹೂಡಿಕೆಗೆ ಬೇಕಾದ ಕನಿಷ್ಠ ಸೌಕರ್ಯಗಳೂ ಇಲ್ಲದೆ ಇದ್ದರೂ ಸದ್ಯ ಪಿಡಬ್ಲೂಡಿ ಕ್ವಾಟ್ರಸ್ ಒಂದನ್ನು ಅಲಾಟ್ಮೆಂಟ್ ಮಾಡಿಸಿಕೊಂಡಿದ್ದೆ. ಹಾಗಾಗಿ ಮದುವೆಯಾದಾಕ್ಷಣ ಉಳಿದುಕೊಳ್ಳಲು ಅದು ಅನುಕೂಲವಾಗಿತ್ತು. ಪ್ರಭು ಮತ್ತು ರೈತಸಂಘದ ಮಂಜಪ್ಪ, ಸ್ಟೀಲ್ ಅಂಗಡಿ ಶಾಂತು ಎಲ್ಲ ಶಿವಮೊಗ್ಗದಲ್ಲಿ ಪ್ರಭುವಿನ ಸ್ನೇಹಿತರಾಗಿದ್ದರು. ಬೇಕಾದ ಕನಿಷ್ಠ ಪಾತ್ರೆಗಳನ್ನು ಅವನ ಸ್ನೇಹಿತನಿಂದಲೇ ಸಾಲವಾಗಿ ತಂದಿದ್ದೆ. ಉಳಿದಂತೆ ಅವಶ್ಯ ಬಿದ್ದಾಗ ನನ್ನ ಸ್ನೇಹಿತರಾಗಿದ್ದ ಪ್ರಭು, ಜಿಎನ್ಕೆ ಜೊತೆ ಸಾಲ ಮಾಡಿ ತೀರಿಸೋ ವ್ಯವಸ್ಥೆಯಲ್ಲಿ ದಿನಗಳು ಕಳೆಯುತ್ತಿದ್ದವು.
ಆರ್ಥಿಕ ಸಂಕಷ್ಟ ಬಿಟ್ಟರೆ ನಮ್ಮಿಬ್ಬರ ಹೊಂದಾಣಿಕೆ ಅನನ್ಯವಾಗಿತ್ತು. ಬೇಂದ್ರೆಯವರ ಕವನದ ಸಾಲಿನಂತೆ
‘ನಾನು ಬಡವಿ ಆತ ಬಡವ
ಒಲವೆ ನಮ್ಮ ಬದುಕು’ ಎಂಬಂತೆ ಪ್ರೀತಿಯಲ್ಲಿ ಮುಳುಗಿ ಹೋಗಿದ್ದೆವು.
ರಜಾ ದಿನಗಳಲ್ಲಿ ಬಿಆರ್ಪಿಯಲ್ಲಿ ಇದ್ದ ಟೆಂಟ್ ಸಿನಿಮಾಕ್ಕೆ ಇಲ್ಲವೇ ಶಿವಮೊಗ್ಗಕ್ಕೆ ರಾಜಕುಮಾರ್ ಅವರ ಹೊಸ ಸಿನಿಮಾಗಳಿಗೆ ಹೋಗಿ ಬರುತ್ತಿದ್ದೆವು. ಇಂದಿರಾ ಕೃಷ್ಣಪ್ಪನವರ ಭದ್ರಾವತಿ ಮನೆಗೆ ರಜಾ ದಿನಗಳಲ್ಲಿ ಹೋಗಿ ಬರುತ್ತಿದ್ದೆವು. ಮದುವೆಯಾದಾಕ್ಷಣ ಎಲ್ಲೂ ‘ಹನಿಮೂನ್’ಗೆಂದು ತಿರುಗಾಡಲು ಹೋಗಲಿಲ್ಲ. ಇದ್ದ ಸ್ನೇಹಿತರ ಮನೆ ಕಡೆಗೆ ಹೋಗಿ ಕಾಲ ಕಳೆದು ಬರುತ್ತಿದ್ದೆವು. ಕುಮ್ಮೂರ ಬಸವಣ್ಯಪ್ಪ, ಉಮಾ ಚಿತ್ರದುರ್ಗದಲ್ಲಿ ಇಬ್ಬರೂ ಜ್ಯೂನಿಯರ್ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದರು. ಅವರ ಮನೆಯಲ್ಲಿ ಉಳಿದು ಚಿತ್ರದುರ್ಗದ ಕೋಟೆಯನ್ನು ಇಬ್ಬರೇ ಸುತ್ತಿಕೊಂಡು ಬಂದು ಮಾರನೆ ದಿನ ಚಳ್ಳಕೆರೆಗೆ ಹೋಗಿದ್ದೆವು.
ಚಳ್ಳಕೆರೆಯಲ್ಲಿ ಗಾಯತ್ರಿಯ ಸೀನಿಯರ್ ಮತ್ತು ನನ್ನ ಹಳೇ ವಿದ್ಯಾರ್ಥಿನಿ ಶಾರದಾ, ಡಾ. ಚಂದ್ರಶೇಖರ್ ಎಂಬ ಅವರ ಸೋದರ ಮಾವನನ್ನು ಮದುವೆಯಾಗಿ ಅಲ್ಲಿನ ಪಿಹೆಚ್ಸಿಯಲ್ಲಿ ಡಾಕ್ಟರ್ ಆಗಿ ಕೆಲಸದಲ್ಲಿದ್ದರು. ನಾವಿದ್ದ ಎರಡೂ ದಿನಗಳಲ್ಲ್ಲಿ ಅಕ್ಕರೆಯಿಂದ ವಿಶೇಷ ಅಡುಗೆ ಮಾಡಿ ತುಂಬ ವಾತ್ಸಲ್ಯದಿಂದ ನಮ್ಮನ್ನು ಸತ್ಕರಿಸಿದ್ದಳು. ಅವರಿಬ್ಬರ ಅಕ್ಕರೆಯ ಆತಿಥ್ಯ ನಾವಿಬ್ಬರೂ ಎಂದೂ ಮರೆಯಲಾಗದ ನೆನಪಾಗಿ ಉಳಿದಿದೆ. ಆ ನಂತರದ ದಿನಗಳಲ್ಲಿ ಬದಲಾದ ಪರಿಸ್ಥಿತಿಯಲ್ಲಿ ಶಾರದ ಎಲ್ಲಿದ್ದಾರೆ ಎಂಬುದು ತಿಳಿಯದೆ 40 ವರ್ಷಗಳೇ ಕಳೆದು ಹೋಗಿದ್ದವು.
ಈಗ್ಗೆ ಎರಡು ವರ್ಷಗಳಲ್ಲಿ ಯರ್ಯಾರನ್ನೋ ಕೇಳಿ, ಅವರ ವಿಳಾಸ ಪಡೆದು ನಾವಿಬ್ಬರು ನೆನಪು ಮಾಡಿ ಮಾತಾಡಿದೆವು. ಮನೆಗೆ ಆಹ್ವಾನಿಸಿದ ಮೇರೆಗೆ ಇತ್ತೀಚೆಗಷ್ಟೆ ಬಂದು ಹೋಗಿದ್ದಳು. ಹೀಗೆ ಬಂದು ಹೋಗಿ 3 ತಿಂಗಳಲ್ಲಿ ಹೃದಯಾಘಾತದಿಂದ ಶಾರದಾ ತೀರಿಕೊಂಡಳು. ಇಷ್ಟು ದೀರ್ಘ ಕಾಲದ ಅಜ್ಞಾತವಾಸದ ಕಾರಣ ತಿಳಿದು ಬೇಸರವಾಗಿತ್ತು. ಶಾರದಾ-ಚಂದ್ರಶೇಖರ್ ಅವರಿಗೆ ಇಬ್ಬರು ಹೆಣ್ಣು ಮಕ್ಕಳಲ್ಲಿ ಒಬ್ಬಳು ಅಕಾಲಿಕ ಮರಣ ಹೊಂದಿದ್ದಳು.
ಇನ್ನೊಬ್ಬಳು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಳಾಗಿ ಕೆಲಸ ನಿರ್ವಹಿಸುತ್ತಿದ್ದಾಳೆ. ಗಂಡ ಡಾಕ್ಟರ್ ಆಗಿದ್ದರೂ ಮನೆಯಲ್ಲಿ ಒಂದು ಎಮ್ಮೆ ಸಾಕಿಕೊಂಡು ಮೇಯಿಸುತ್ತಾ ಗಂಡ ಮಕ್ಕಳಿಗೆ ಹಾಲು, ಮಜ್ಜಿಗೆ ಮಾಡಿ ಉಣಿಸುತ್ತಿದ್ದ ಶಾರದಾ ಅವರಿಗೆ ಬದುಕಿನಲ್ಲಿ ನೆಮ್ಮದಿಗಿಂತ ನೋವೇ ಜಾಸ್ತಿಯಾಗಿದ್ದೊಂದು ವಿಷಾದದ ಸಂಗತಿ. ಒಳ್ಳೆಯ ಮನಸ್ಸುಗಳಿಗೆ ನೋವುಗಳೇ ಹೆಚ್ಚೆಂಬುದು ಅವಳ ವಿಚಾರದಲ್ಲಿ ನಿಜವಾಗಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.



