Connect with us

ದಿನದ ಸುದ್ದಿ

ಆತ್ಮಕತೆ | ನಮ್ಮ ಬಿಆರ್‌ಪಿ ಸ್ನಾತಕೋತ್ತರ ಕೇಂದ್ರ

Published

on

  • ರುದ್ರಪ್ಪ ಹನಗವಾಡಿ

ದಟ್ಟ ಮಲೆನಾಡಲ್ಲದಿದ್ದರೂ ಮಳೆಗಾಲದಲ್ಲಿ ಹೆಚ್ಚು ಮಳೆ ಸುರಿದು ನಿಸರ್ಗ ಸೌಂದರ್ಯವನ್ನು ಹೆಚ್ಚಿಸುತ್ತಿತ್ತು. ಆದರೆ ವಿಶ್ವವಿದ್ಯಾಲಯದಲ್ಲಿ ಹೆಚ್ಚಿನ ಶಾಖೆಗಳಾಗಲೀ, ಒಂದು ಸ್ವತಂತ್ರ ವಿಶ್ವವಿದ್ಯಾಲಯವಾಗುವ ಯಾವ ತಯಾರಿಯೂ ಕಾಣುತ್ತಿರಲಿಲ್ಲ.

ಪ್ರಾರಂಭದಿಂದ ಇದ್ದ, ನಾಲ್ಕು ವಿಭಾಗಗಳು ಮತ್ತು 15-16ಜನ ಅಧ್ಯಾಪಕರುಗಳಾಗಿದ್ದನ್ನು ಬಿಟ್ಟರೆ ವಿಕಾಸದ ಯಾವ ಲಕ್ಷಣಗಳೂ ಇರಲಿಲ್ಲ. ನಾನು ಬಂದು ನಾಲ್ಕು ವರ್ಷಗಳಲ್ಲಿ ನನ್ನ ಜೀವನದಲ್ಲಿ ಮದುವೆ ಮತ್ತು ನಮಗೆ ಮಗುವಾದುದ್ದನ್ನು ಬಿಟ್ಟರೆ ಸ್ನಾತಕೋತ್ತರ ಕೇಂದ್ರದ ಬೆಳವಣಿಗೆಯಲ್ಲಿ ಮತ್ತೇನೂ ಬೆಳವಣಿಗೆಗಳು ನಡೆಯಲಿಲ್ಲ.

ಸ್ವಂತ ವಿಷಯದಲ್ಲಿ ನಾನು ಆರ್ಥಿಕ ಸಂಕಷ್ಟಕ್ಕೆ ಬಿದ್ದಿದ್ದೆ. ಮದುವೆಯಾಗುವ ಯಾವ ಪೂರ್ವಭಾವಿ ತಯಾರಿ ಇಲ್ಲದೆ ತಕ್ಷಣ ಆಗಬೇಕಾದ ಕಾರಣ ಸುಮಾರು 15 ಸಾವಿರದಷ್ಟು ವಿಶ್ವಾಸಿಕ ಸ್ನೇಹಿತರಿಂದ ಸಾಲ ಮಾಡಿದ್ದೆ. ಹೊಸ ಸಂಸಾರ ಹೂಡಿಕೆಗೆ ಬೇಕಾದ ಕನಿಷ್ಠ ಸೌಕರ್ಯಗಳೂ ಇಲ್ಲದೆ ಇದ್ದರೂ ಸದ್ಯ ಪಿಡಬ್ಲೂಡಿ ಕ್ವಾಟ್ರಸ್ ಒಂದನ್ನು ಅಲಾಟ್‌ಮೆಂಟ್ ಮಾಡಿಸಿಕೊಂಡಿದ್ದೆ. ಹಾಗಾಗಿ ಮದುವೆಯಾದಾಕ್ಷಣ ಉಳಿದುಕೊಳ್ಳಲು ಅದು ಅನುಕೂಲವಾಗಿತ್ತು. ಪ್ರಭು ಮತ್ತು ರೈತಸಂಘದ ಮಂಜಪ್ಪ, ಸ್ಟೀಲ್ ಅಂಗಡಿ ಶಾಂತು ಎಲ್ಲ ಶಿವಮೊಗ್ಗದಲ್ಲಿ ಪ್ರಭುವಿನ ಸ್ನೇಹಿತರಾಗಿದ್ದರು. ಬೇಕಾದ ಕನಿಷ್ಠ ಪಾತ್ರೆಗಳನ್ನು ಅವನ ಸ್ನೇಹಿತನಿಂದಲೇ ಸಾಲವಾಗಿ ತಂದಿದ್ದೆ. ಉಳಿದಂತೆ ಅವಶ್ಯ ಬಿದ್ದಾಗ ನನ್ನ ಸ್ನೇಹಿತರಾಗಿದ್ದ ಪ್ರಭು, ಜಿಎನ್‌ಕೆ ಜೊತೆ ಸಾಲ ಮಾಡಿ ತೀರಿಸೋ ವ್ಯವಸ್ಥೆಯಲ್ಲಿ ದಿನಗಳು ಕಳೆಯುತ್ತಿದ್ದವು.

ಆರ್ಥಿಕ ಸಂಕಷ್ಟ ಬಿಟ್ಟರೆ ನಮ್ಮಿಬ್ಬರ ಹೊಂದಾಣಿಕೆ ಅನನ್ಯವಾಗಿತ್ತು. ಬೇಂದ್ರೆಯವರ ಕವನದ ಸಾಲಿನಂತೆ
‘ನಾನು ಬಡವಿ ಆತ ಬಡವ
ಒಲವೆ ನಮ್ಮ ಬದುಕು’ ಎಂಬಂತೆ ಪ್ರೀತಿಯಲ್ಲಿ ಮುಳುಗಿ ಹೋಗಿದ್ದೆವು.

ರಜಾ ದಿನಗಳಲ್ಲಿ ಬಿಆರ್‌ಪಿಯಲ್ಲಿ ಇದ್ದ ಟೆಂಟ್ ಸಿನಿಮಾಕ್ಕೆ ಇಲ್ಲವೇ ಶಿವಮೊಗ್ಗಕ್ಕೆ ರಾಜಕುಮಾರ್ ಅವರ ಹೊಸ ಸಿನಿಮಾಗಳಿಗೆ ಹೋಗಿ ಬರುತ್ತಿದ್ದೆವು. ಇಂದಿರಾ ಕೃಷ್ಣಪ್ಪನವರ ಭದ್ರಾವತಿ ಮನೆಗೆ ರಜಾ ದಿನಗಳಲ್ಲಿ ಹೋಗಿ ಬರುತ್ತಿದ್ದೆವು. ಮದುವೆಯಾದಾಕ್ಷಣ ಎಲ್ಲೂ ‘ಹನಿಮೂನ್’ಗೆಂದು ತಿರುಗಾಡಲು ಹೋಗಲಿಲ್ಲ. ಇದ್ದ ಸ್ನೇಹಿತರ ಮನೆ ಕಡೆಗೆ ಹೋಗಿ ಕಾಲ ಕಳೆದು ಬರುತ್ತಿದ್ದೆವು. ಕುಮ್ಮೂರ ಬಸವಣ್ಯಪ್ಪ, ಉಮಾ ಚಿತ್ರದುರ್ಗದಲ್ಲಿ ಇಬ್ಬರೂ ಜ್ಯೂನಿಯರ್ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದರು. ಅವರ ಮನೆಯಲ್ಲಿ ಉಳಿದು ಚಿತ್ರದುರ್ಗದ ಕೋಟೆಯನ್ನು ಇಬ್ಬರೇ ಸುತ್ತಿಕೊಂಡು ಬಂದು ಮಾರನೆ ದಿನ ಚಳ್ಳಕೆರೆಗೆ ಹೋಗಿದ್ದೆವು.

ಚಳ್ಳಕೆರೆಯಲ್ಲಿ ಗಾಯತ್ರಿಯ ಸೀನಿಯರ್ ಮತ್ತು ನನ್ನ ಹಳೇ ವಿದ್ಯಾರ್ಥಿನಿ ಶಾರದಾ, ಡಾ. ಚಂದ್ರಶೇಖರ್ ಎಂಬ ಅವರ ಸೋದರ ಮಾವನನ್ನು ಮದುವೆಯಾಗಿ ಅಲ್ಲಿನ ಪಿಹೆಚ್‌ಸಿಯಲ್ಲಿ ಡಾಕ್ಟರ್ ಆಗಿ ಕೆಲಸದಲ್ಲಿದ್ದರು. ನಾವಿದ್ದ ಎರಡೂ ದಿನಗಳಲ್ಲ್ಲಿ ಅಕ್ಕರೆಯಿಂದ ವಿಶೇಷ ಅಡುಗೆ ಮಾಡಿ ತುಂಬ ವಾತ್ಸಲ್ಯದಿಂದ ನಮ್ಮನ್ನು ಸತ್ಕರಿಸಿದ್ದಳು. ಅವರಿಬ್ಬರ ಅಕ್ಕರೆಯ ಆತಿಥ್ಯ ನಾವಿಬ್ಬರೂ ಎಂದೂ ಮರೆಯಲಾಗದ ನೆನಪಾಗಿ ಉಳಿದಿದೆ. ಆ ನಂತರದ ದಿನಗಳಲ್ಲಿ ಬದಲಾದ ಪರಿಸ್ಥಿತಿಯಲ್ಲಿ ಶಾರದ ಎಲ್ಲಿದ್ದಾರೆ ಎಂಬುದು ತಿಳಿಯದೆ 40 ವರ್ಷಗಳೇ ಕಳೆದು ಹೋಗಿದ್ದವು.

ಈಗ್ಗೆ ಎರಡು ವರ್ಷಗಳಲ್ಲಿ ಯರ‍್ಯಾರನ್ನೋ ಕೇಳಿ, ಅವರ ವಿಳಾಸ ಪಡೆದು ನಾವಿಬ್ಬರು ನೆನಪು ಮಾಡಿ ಮಾತಾಡಿದೆವು. ಮನೆಗೆ ಆಹ್ವಾನಿಸಿದ ಮೇರೆಗೆ ಇತ್ತೀಚೆಗಷ್ಟೆ ಬಂದು ಹೋಗಿದ್ದಳು. ಹೀಗೆ ಬಂದು ಹೋಗಿ 3 ತಿಂಗಳಲ್ಲಿ ಹೃದಯಾಘಾತದಿಂದ ಶಾರದಾ ತೀರಿಕೊಂಡಳು. ಇಷ್ಟು ದೀರ್ಘ ಕಾಲದ ಅಜ್ಞಾತವಾಸದ ಕಾರಣ ತಿಳಿದು ಬೇಸರವಾಗಿತ್ತು. ಶಾರದಾ-ಚಂದ್ರಶೇಖರ್ ಅವರಿಗೆ ಇಬ್ಬರು ಹೆಣ್ಣು ಮಕ್ಕಳಲ್ಲಿ ಒಬ್ಬಳು ಅಕಾಲಿಕ ಮರಣ ಹೊಂದಿದ್ದಳು.

ಇನ್ನೊಬ್ಬಳು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಳಾಗಿ ಕೆಲಸ ನಿರ್ವಹಿಸುತ್ತಿದ್ದಾಳೆ. ಗಂಡ ಡಾಕ್ಟರ್ ಆಗಿದ್ದರೂ ಮನೆಯಲ್ಲಿ ಒಂದು ಎಮ್ಮೆ ಸಾಕಿಕೊಂಡು ಮೇಯಿಸುತ್ತಾ ಗಂಡ ಮಕ್ಕಳಿಗೆ ಹಾಲು, ಮಜ್ಜಿಗೆ ಮಾಡಿ ಉಣಿಸುತ್ತಿದ್ದ ಶಾರದಾ ಅವರಿಗೆ ಬದುಕಿನಲ್ಲಿ ನೆಮ್ಮದಿಗಿಂತ ನೋವೇ ಜಾಸ್ತಿಯಾಗಿದ್ದೊಂದು ವಿಷಾದದ ಸಂಗತಿ. ಒಳ್ಳೆಯ ಮನಸ್ಸುಗಳಿಗೆ ನೋವುಗಳೇ ಹೆಚ್ಚೆಂಬುದು ಅವಳ ವಿಚಾರದಲ್ಲಿ ನಿಜವಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

Published

on

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.

ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪ‌ರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

Published

on

ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.

ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸ್‌ಆ್ಯಪ್/ ಎಸ್‌ಎಂಎಸ್‌ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.

ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‌ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.

ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ

Published

on

ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.

ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending