ರಾಜಕೀಯ
ಆ ಮಹಾತ್ಯಾಗಿ ನುಡಿದ ಭವಿಷ್ಯ ಸುಳ್ಳಾಗಲಿಲ್ಲ
ಇಂದು ಅಕ್ಕ ಮಾಯಾವತಿಯವರ 64 ನೇ ಹುಟ್ಟು ಹಬ್ಬ. ಅವರಿಗೆ ಭೀಮ ಶುಭಾಶಯಗಳನ್ನು ಕೋರುತ್ತಾ..
- ಮಹೇಶ್ ಸರಗೂರು
ಅದು 1977 ರ ಚಳಿಗಾಲದ ಸಮಯ. ದೆಹಲಿಯ ಚಳಿ ಎಂದರೆ ಕೇಳಬೇಕೆ? ಚಳಿ ಎಂದರೆ ಅಂತಿಂಥ ಚಳಿಯಲ್ಲ. ಅತ್ಯಂತ ಭೀಕರವಾದ ಚಳಿ. ನರನಾಡಿಗಳಲ್ಲಿ ನಡುಕ ಹುಟ್ಟಿಸುವ ಚಳಿ.ಇಂತಹ ವಿಪರೀತ ಚಳಿಯ ಅವಧಿಯಲ್ಲೂ ಕಾನ್ಷೀರಾಮ್ ಸಾಹೇಬರು ಬಾಂಸೆಫ್ ಸಂಘಟನೆಯನ್ನು ಹುಟ್ಟುಹಾಕಲು ಹಗಲಿರುಳು ಹೆಣಗುತ್ತಿದ್ದರು.
ಇಂತಹ ಸಮಯದಲ್ಲಿ ಒಂದು ದಿನ ಕಾನ್ಷೀರಾಮ್ ಸಾಹೇಬರು ಮನದಲ್ಲಿ ಅದೇನೋ ಒಂದು ಗಟ್ಟಿ ನಿರ್ಧಾರ ಮಾಡಿಕೊಂಡು ಮೇಲಕ್ಕೆದ್ದರು. ಕಿವಿಗೆ ಮತ್ತು ಕುತ್ತಿಗೆಗೆ ಉಲ್ಲನ್ ಸ್ಕಾರ್ಫ್ ಸುತ್ತಿಕೊಂಡು ಸಹೊದ್ಯೋಗಿಯೊಬ್ಬನನ್ನು ಜೊತೆಗೆ ಕರೆದುಕೊಂಡು ಹೊರನಡೆದರು. ಆಗ ಸಮಯ ರಾತ್ರಿ ಒಂಭತ್ತು ಗಂಟೆ.
ದೆಹಲಿಯ ಬಹುತೇಕ ಜನರು ಆ ಕೊರೆಯುವ ಚಳಿಗೆ ಹೆದರಿಕೊಂಡು, ಬೆಚ್ಚನೆಯ ಹಾಸಿಗೆಯಲ್ಲಿ ಮೈ ತುಂಬಾ ಹೊದ್ದುಕೊಂಡು ಮಲಗಿದ್ದರು. ಇಂತಹ ಸಮಯದಲ್ಲಿ ದೆಹಲಿಯ ಇಂದ್ರಪುರಿ ಪ್ರದೇಶವನ್ನು ಪ್ರವೇಶಿಸಿದ ಕಾನ್ಷೀರಾಮ್ ಸಾಹೇಬರು ಮತ್ತು ಅವರ ಸಹೋದ್ಯೋಗಿ ಇಕ್ಕಟ್ಟಾದ ಓಣಿಯಲ್ಲಿ ನಡೆದು ಮನೆಯೊಂದರ ಬಾಗಿಲು ಬಡಿದರು.
ಅದೇ ತಾನೇ ಊಟ ಮುಗಿಸಿ ಓದುತ್ತಿದ್ದ ಹೆಣ್ಣುಮಗಳೊಬ್ಬಳು ಇಂತಹ ಅಪರಾತ್ರಿಯಲ್ಲಿ ಅದ್ಯಾರು ಬಾಗಿಲು ಬಡಿಯುತ್ತಿರಬಹುದೆಂದು ಯೋಚಿಸುತ್ತಲೇ ಬಾಗಿಲು ತೆರೆದು ನೋಡಿದರೆ ಎದುರಿಗೆ ಕಾನ್ಷೀರಾಮ್ ಸಾಹೇಬರು ನಿಂತಿದ್ದರು.
ಬಾಗಿಲು ತೆರೆದ ಆ ಹೆಣ್ಣು ಮಗಳು ಬೇರಾರೂ ಆಗಿರಲಿಲ್ಲ. ಅವರೇ ಮಾಯಾವತಿ.
ಆಧುನಿಕ ಭಾರತದ ರಾಜಕೀಯ ಇತಿಹಾಸದಲ್ಲಿಯೇ ಅಚ್ಚರಿಯ ಪವಾಡ ಸೃಷ್ಟಿಸಿದ ಆ ಇಬ್ಬರು ಮಹಾಮಹಿಮರು ಒಬ್ಬರಿಗೊಬ್ಬರು ಎದುರುಗೊಂಡ ಮೊದಲ ಕ್ಷಣ ಅದಾಗಿತ್ತು.
ಅಕ್ಕ ಮಾಯಾವತಿಯವರಿಗೆ ಒಂದು ಕ್ಷಣ ಉಸಿರು ನಿಂತಂತಾಯಿತು. ಕಾರಣ ಅಲ್ಲಿ ನಿಂತವರು ವಾಸ್ತವವಾಗಿ ಕಾನ್ಷೀರಾಮ್ ಸಾಹೇಬರಾಗಿದ್ದರೂ ಅವರ ರೂಪ, ಪ್ರತಿರೂಪ ಸಾಕ್ಷಾತ್ ಭಗವಾನ್ ಬುದ್ದನಂತಿತ್ತು. ಭೋಧಿಸತ್ವ ಬಾಬಾಸಾಹೇಬ್ ಅಂಬೇಡ್ಕರ್ ರವರನ್ನು ಹೋಲುತ್ತಿತ್ತು.
ತನ್ನ ಕಣ್ಣನ್ನು ತಾನೇ ನಂಬದಾದ ಮಾಯಾವತಿಯವರು ಸಾವರಿಸಿಕೊಂಡು ಕಾನ್ಷೀರಾಮ್ ಸಾಹೇಬರನ್ನು ಮನೆಯೊಳಗೆ ಬರಮಾಡಿಕೊಂಡರು. ಕಾನ್ಷೀರಾಮ್ ಸಾಹೇಬರ ಆಕಸ್ಮಿಕ ಆಗಮನ ಮಾಯಾವತಿಯವರ ಮನೆಯಲ್ಲಿ ಮಿಂಚಿನ ಸಂಚಾರವನ್ನುಂಟುಮಾಡಿತ್ತು.
ಮಾಯಾವತಿಯವರ ತಂದೆತಾಯಿಗಳು ಗಡಬಡಿಸಿ ಬಂದು, ಆದರದಿಂದ ಸ್ವಾಗತಿಸಿ, ಪರಸ್ಪರ ಕ್ಷೇಮ ಸಮಾಚಾರ ವಿನಿಮಯ ಮಾಡಿಕೊಂಡರು. ಬಾಂಸೆಫ್ ಕೆಲಸದ ಮೂಲಕ ಅದಾಗಲೇ ಉತ್ತರ ಭಾರತದಾದ್ಯಂತ ಮನೆಮಾತಾಗಿದ್ದ ಕಾನ್ಷೀರಾಮ್ ಸಾಹೇಬರು ಇಂತಹ ಅಪರಾತ್ರಿ ಹೊತ್ತಲ್ಲಿ ಮನೆಗೆ ಬಂದಿದ್ದು ಪ್ರಭುದಾಸ್ ದಯಾಳ್ ಮತ್ತು ರಾಮರತಿಯವರಿಗೆ ಬಿಡಿಸಲಾಗದ ಒಗಟಿನಂತಾಗಿತ್ತು. ಏತಕ್ಕೆ ಬಂದಿದ್ದಾರೋ, ಏನು ಸುದ್ದಿ ತಂದಿದ್ದಾರೋ ಎಂಬ ಅಳುಕು ಅವರದಾಗಿತ್ತು.
ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದ್ದೀರಿ
ಕಾನ್ಷೀರಾಮ್ ಸಾಹೇಬರು ಆ ಅಪರಾತ್ರಿಯಲ್ಲಿ ಮಾಯಾವತಿಯವರನ್ನು ಹುಡುಕಿಕೊಂಡು ಬರಲು ಕಾರಣವೊಂದಿತ್ತು. ಆ ಕಾರಣವೇನೆಂದರೆ, 1977 ರ ಸೆಪ್ಟೆಂಬರ್ ನಲ್ಲಿ ಸರ್ಕಾರದ ವತಿಯಿಂದ ದೆಹಲಿಯ Constitution club ನಲ್ಲಿ ಮೂರು ದಿನಗಳ ಕಾಲ ‘ಜಾತಿ ವಿನಾಶ’ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಆ ಕಾರ್ಯಕ್ರಮದಲ್ಲಿ ಅಂದಿನ ಕೇಂದ್ರ ಆರೋಗ್ಯ ಸಚಿವರಾಗಿದ್ದ ಮತ್ತು ಹೆಸರಾಂತ ಸಮಾಜವಾದಿ ನಾಯಕರಾಗಿದ್ದ ರಾಜ್ ನಾರಾಯಣ್ ರವರು ತಮ್ಮ ಭಾಷಣದಲ್ಲಿ ಅವಹೇಳನಕಾರಿಯಾದ ‘ಹರಿಜನ’ ಪದವನ್ನು ಪದೇ ಪದೇ ಬಳಸಿ ಮಾತನಾಡುತ್ತಿದ್ದರು.
ಅಲ್ಲೇ ಹಾಜರಿದ್ದ ಸರ್ಕಾರಿ ಶಿಕ್ಷಕಿ ಮಾಯಾವತಿಯವರು ಎದ್ದು ನಿಂತು ರಾಜ್ ನಾರಾಯಣ್ ರವರನ್ನು ತರಾಟೆಗೆ ತೆಗೆದುಕೊಂಡರು. ಪರಿಶಿಷ್ಟ ಜಾತಿಯವರಿಗೆ ಹರಿಜನರೆಂದು ಕರೆದು ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದ್ದೀರಿ. ನಿಮ್ಮ ಘನತೆ ಮತ್ತು ಗೌರವಗಳನ್ನು ಮರೆತು ಬೇಜವಾಬ್ದಾರಿಯಿಂದ ಮಾತನಾಡಿದ್ದೀರಿ. ನೀವು ಈ ಕೂಡಲೇ ಬಹಿರಂಗ ಕ್ಷಮೆ ಕೇಳಬೇಕು ಎಂದು ಸಭೆಯಲ್ಲಿ ಕ್ಷಮೆ ಕೇಳಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಘಟನೆಯಿಂದ ಮಾಯಾವತಿಯವರು ಎಲ್ಲರ ಕೇಂದ್ರ ಬಿಂದುವಾದರು.
ಇದೇ ಸಭೆಯಲ್ಲಿದ್ದ ಕೆಲವು ಬಾಂಸೆಫ್ ಕಾರ್ಯಕರ್ತರು ಮಾಯಾವತಿಯವರ ವಿಷಯವನ್ನು ಕಾನ್ಷೀರಾಮ್ ಸಾಹೇಬರಿಗೆ ವಿವರಿಸಿ, ಮಾಯಾವತಿಯವರು ನಮ್ಮ ಸಂಘಟನೆಯಲ್ಲಿದ್ದರೆ ಬಾಂಸೆಫ್ ಗೆ ಹೆಚ್ಚು ಬಲ ಬರುತ್ತದೆ ಎಂದು ತಿಳಿಸಿದರು. ಬಾಂಸೆಫ್ ಕಾರ್ಯಕರ್ತರ ಮಾತಿನಿಂದ ಉತ್ತೇಜಿತರಾದ ಕಾನ್ಷೀರಾಮ್ ಸಾಹೇಬರು ಮಾಯಾವತಿಯವರ ಅರಿವಿಗೆ ಬಾರದಂತೆ ಅವರ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಮಾಯಾವತಿಯವರ ಚಿಂತನೆಗಳನ್ನು ಗಮನವಿಟ್ಟು ಆಲಿಸಿದರು. ಅದಕ್ಕಾಗಿ ಮಾಯಾವತಿಯವರನ್ನು ಹುಡುಕಿಕೊಂಡು ಬಂದಿದ್ದರು.
ಐಎಎಸ್ ಅಧಿಕಾರಿಯಾಗಿ ಶೋಷಿತ ಜನಾಂಗಗಳ ಸೇವೆ ಮಾಡಬೇಕು
ಕಾನ್ಷೀರಾಮ್ ಸಾಹೇಬರು ಮಾಯಾವತಿಯವರ ಜೊತೆ ಸುಮಾರು ಒಂದು ಗಂಟೆಗಳ ಕಾಲ ಭಾರತದ ಸಾಮಾಜಿಕ ಮತ್ತು ರಾಜಕೀಯ ಸ್ಥಿತಿಗತಿಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದರು. ಮಹಾತ್ಮ ಜ್ಯೋತಿಭಾಫುಲೆಯವರಿಂದಿಡಿದು ಬಾಬಾಸಾಹೇಬ್ ಅಂಬೇಡ್ಕರ್ ವರೆಗಿನ ಎಲ್ಲಾ ಮಹಾಪುರುಷರ ಹೋರಾಟವನ್ನು ಮತ್ತು ಅದರ ಮುಂದುವರಿಕೆಯ ಮಹತ್ವವನ್ನು ಮನಮುಟ್ಟುವಂತೆ ವಿವರಿಸಿ ಹೇಳಿದರು.
ಇದಾದ ಬಳಿಕ ಮಾಯಾವತಿಯವರ ಜೀವನದ ಆಸೆ ಆಕಾಂಕ್ಷೆಗಳನ್ನು, ದ್ಯೇಯೋದ್ದೇಶಗಳನ್ನು ಕೇಳಿ ತಿಳಿದುಕೊಂಡರು. ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ತಾನು ಐಎಎಸ್ ಅಧಿಕಾರಿಯಾಗಿ ಶೋಷಿತ ಜನಾಂಗಗಳ ಸೇವೆ ಮಾಡಬೇಕು ಎನ್ನುವುದು ನನ್ನ ಗುರಿ ಎಂದು ಮಾಯಾವತಿಯವರು ತಿಳಿಸಿದರು.
ನಂತರ ಹೊರಡುವ ಸಮಯದಲ್ಲಿ ಅಂತಿಮವಾಗಿ ಒಂದು ನಿರ್ಧಾರಕ್ಕೆ ಬಂದ ಕಾನ್ಷೀರಾಮ್ ಸಾಹೇಬರು ” ನೀನು ಅಂದುಕೊಂಡಂತೆ ಖಂಡಿತವಾಗಿ ನೀನು ಐಎಎಸ್ ಅಧಿಕಾರಿ ಆಗಬಹುದು. ಆ ಅರ್ಹತೆ ನಿನಗಿದೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ನೀನು ಅಂದುಕೊಂಡಂತೆ ನಿನ್ನ ಜನರ ಸೇವೆ ಮಾಡುವುದು ಮಾತ್ರ ನಿಮ್ಮಿಂದ ಸಾಧ್ಯವಾಗುವುದಿಲ್ಲ.
ಕಾರಣ, ಒಬ್ಬ ಸರ್ಕಾರಿ ಅಧಿಕಾರಿಯಾಗಿ ನೀನು ಸರಕಾರ ನಡೆಸುವ ರಾಜಕಾರಿಣಿಗಳ ಇಚ್ಚೆಯಂತೆ ನಡೆಯಬೇಕಾಗುತ್ತದೆ. ಶ್ರೀಮಂತರ ನೋಟುಗಳಿಂದ ಬಡವರ ಓಟುಗಳನ್ನು ಖರೀದಿಸುವುದನ್ನೇ ಪ್ರಜಾಪ್ರಭುತ್ವ ಎಂದು ಪರಿಗಣಿಸಿರುವ ಭಾರತದಲ್ಲಿ ರಾಜಕೀಯ ನಾಯಕರ ಯೋಜನೆಗಳು ಮತ್ತು ಯೋಚನೆಗಳು ಜಾರಿಯಾಗುತ್ತವೆಯೇ ಹೊರತು ಐಎಎಸ್ ಅಧಿಕಾರಿಗಳ ಯೋಜನೆಗಳು ಮತ್ತು ಯೋಚನೆಗಳಲ್ಲ.
ಈಗ ನಮ್ಮ ಸಮಾಜದಲ್ಲಿ ಬೇಕಾದಷ್ಟು ಮಂದಿ ಐಎಎಸ್ ಅಧಿಕಾರಿಗಳಿದ್ದಾರೆ. ಆದರೆ ಅವರೆಲ್ಲ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದ್ದಾರೆ. ಅವರಿಂದ ಏನನ್ನೂ ನಿರೀಕ್ಷಿಸುವಂತಿಲ್ಲ. ಇದು ಎಲ್ಲರಿಗೂ ತಿಳಿದಿರುವ ಸಂಗತಿ. ಹೀಗಾಗಿ ನಮಗೆ ಬೇಕಾಗಿರುವುದು ಐಎಎಸ್ ಅಧಿಕಾರಿಗಳಲ್ಲ. ರಾಜಕೀಯ ನಾಯಕರು. ಐಎಎಸ್ ಅಧಿಕಾರಿಗಳಿಂದ ಸರಿಯಾಗಿ ಕೆಲಸ ಮಾಡಿಸಬಲ್ಲ, ವಿಧಾನಸಭೆ ಮತ್ತು ಲೋಕಸಭೆಗಳಲ್ಲಿ ಕುಳಿತು ಜನಪರ ಶಾಸನಗಳನ್ನು ರೂಪಿಸಬಲ್ಲ , ಅವುಗಳನ್ನು ಜಾರಿಗೊಳಿಸಬಲ್ಲ ಸಮರ್ಥ ರಾಜಕೀಯ ನಾಯಕರು.
ನಮ್ಮ ಸಮಾಜದಲ್ಲಿ ಇಂಥ ನಾಯಕರ ಕೊರತೆ ಇದೆ. ನೀನು ಆ ಕೊರತೆಯನ್ನು ನೀಗಿಸಬೇಕು. ನಿನ್ನಲ್ಲಿ ಆ ಶಕ್ತಿಯಿದೆ. ನನ್ನ ಮಾತನ್ನು ನೀನು ನಂಬುವುದಾದರೆ, ನಿನ್ನಲ್ಲಿ ಇಂತದ್ದೊಂದು ಬಯಕೆ ಇದ್ದುದಾದರೆ ನಾನು ನಿನ್ನನ್ನು ಅಂಥ ಒಬ್ಬ ಸಮರ್ಥ ನಾಯಕಿಯನ್ನಾಗಿ ತಯಾರು ಮಾಡುತ್ತೇನೆ. ಆಗ ನೂರಾರು ಜನ ಐಎಎಸ್ ಅಧಿಕಾರಿಗಳು ತಮ್ಮ ಫೈಲುಗಳನ್ನು ಹಿಡಿದುಕೊಂಡು ಬಂದು ನಿನ್ನ ಆದೇಶಕ್ಕಾಗಿ ಕಾಯುತ್ತಾರೆ.
ಒಳ್ಳೆಯ ಮತ್ತು ಕೆಟ್ಟ ಕೆಲಸ ಎರಡನ್ನೂ ಮಾಡುವ ಶಕ್ತಿ ಹೊಂದಿರುವ ಐಎಎಸ್ ಅಧಿಕಾರಿಗಳಿಂದ ನೀನು ನಿನ್ನೆಲ್ಲ ಒಳ್ಳೆಯ ಕೆಲಸಗಳನ್ನೇ ಮಾಡಿಸಬಹುದು. ಅದಕ್ಕಾಗಿ ನೀನು ಒಬ್ಬ ಐಎಎಸ್ ಅಧಿಕಾರಿಯಾಗುವ ಬದಲು ಒಬ್ಬ ಸಮರ್ಥ ರಾಜಕೀಯ ನಾಯಕಿಯಾಗುವುದು ಒಳ್ಳೆಯದು. ಯಾವುದಕ್ಕೂ ಯೋಚಿಸಿ ಒಂದು ಸರಿಯಾದ ನಿರ್ಧಾರಕ್ಕೆ ಬಾ… ನೀನು ತೆಗೆದುಕೊಳ್ಳುವ ನಿರ್ಧಾರದಲ್ಲಿ ಬಹುಜನರ ಭವಿಷ್ಯ ಅಡಗಿದೆ ಎಂದು ಹೇಳಿ ಅಲ್ಲಿಂದ ಹೊರಟು ಹೋದರು.
ಮುಂದೆ ನಡೆದಿದ್ದೆಲ್ಲವೂ ನಮ್ಮ ಕಣ್ಣ ಮುಂದಿರುವ ಇತಿಹಾಸ. ನುಡಿದಂತೆ ನಡೆದು, ಯಕಶ್ಚಿತ್ ಶಾಲಾ ಶಿಕ್ಷಕಿಯೊಬ್ಬಳನ್ನು ಉತ್ತರಪ್ರದೇಶದಂತಹ ಅತಿದೊಡ್ಡ ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯನ್ನಾಗಿ ಮಾಡಿ, ದೇಶವೇ ಕೊಂಡಾಡುವಂತೆ ಅದ್ಬುತ ಕಾರ್ಯಗಳನ್ನು ಸಾಧಿಸಿ ತೋರಿಸಿದ ಪವಾಡ ಪುರುಷ ಕಾನ್ಷೀರಾಮ್. ಅಂದು ಆ ಮಹಾತ್ಯಾಗಿ ನುಡಿದ ಭವಿಷ್ಯ ಸುಳ್ಳಾಗಲಿಲ್ಲ. ಕಾರಣ, ಮಹಾಜ್ಞಾನಿಗಳ ಮಾತುಗಳು ಸುಳ್ಳಾಗಲು ಸಾದ್ಯವೇ ಇಲ್ಲ..!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.
ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ‘ಚೈಲ್ಡ್ ಹೆಲ್ಪ್ಲೈನ್’ ಸಂಖ್ಯೆಯನ್ನು ಪ್ರದರ್ಶಿಸಬೇಕು ಹಾಗೂ ಶಿಕ್ಷಕರು ಮತ್ತು ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಆನ್ಲೈನ್ ವಂಚನೆಗಳ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ಶಮ್ಲಾ ಇಕ್ಬಾಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಮ್ಮಿಕೊಳ್ಳಲಾಗಿದ್ದ ದಾವಣಗೆರೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ತಂತ್ರಜ್ಞಾನ ಆಧಾರಿತ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ‘ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್’ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಸಭೆಯಲ್ಲಿದ್ದ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಮಾಹಿತಿ ನೀಡಿ, ಈ ಯೋಜನೆಗಾಗಿ ಸುಮಾರು 20 ಕೋಟಿ ರೂಪಾಯಿಗಳ ಅನುದಾನವನ್ನು ಕೋರಲಾಗಿದ್ದು, ಪ್ರಾಥಮಿಕ ಹಂತವಾಗಿ ಕನಿಷ್ಠ 10 ಕೋಟಿ ರೂಪಾಯಿ ಬಿಡುಗಡೆಯಾದರೂ ತಕ್ಷಣವೇ ಕಾಮಗಾರಿ ಆರಂಭಿಸಲಾಗುವುದು ಎಂದರು. ಈ ಯೋಜನೆಗೆ ಸಂಬಂಧಿಸಿದಂತೆ ಸಚಿವರು ಹಾಗೂ ಐಟಿ ಇಲಾಖೆಯ ಉನ್ನತ ಅಧಿಕಾರಿಗಳು ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವಿವರಿಸಿದರು.
ಪ್ರಸ್ತುತ ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಲ್ಲದಿದ್ದರೂ, ಮುಂಬರುವ ಹೊಸ ಶೈಕ್ಷಣಿಕ ವರ್ಷಕ್ಕೆ ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇನ್ನುಮುಂದೆ ಪ್ರತಿ ತಿಂಗಳು ವಸತಿ ನಿಲಯಗಳಲ್ಲಿ ಸಂಜೆ ವೇಳೆ ಅರ್ಧ ಗಂಟೆಗಳ ಕಾಲ ವಚನ ಸಾಹಿತ್ಯ, ದಲಿತ ಸಾಹಿತ್ಯ ಹಾಗೂ ಮಹಿಳಾ ಸಾಹಿತ್ಯದ ಕುರಿತು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಮುಂದಿನ ತಿಂಗಳಿಂದ ಮಾನ್ಯ ಸಂಸದರ ನೇತೃತ್ವದಲ್ಲಿ ಇದಕ್ಕೆ ಚಾಲನೆ ನೀಡಲಾಗುವುದು. ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದ್ದ ಸಮಾಜ ಕಲ್ಯಾಣ, ಬಿ.ಸಿ.ಎಂ, ಅಲ್ಪಸಂಖ್ಯಾತರ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಎಲ್ಲಾ ವಸತಿ ನಿಲಯಗಳಿಗೆ ಸ್ವಂತ ನಿವೇಶನಗಳನ್ನು ಮಂಜೂರು ಮಾಡಲಾಗಿದ್ದು, ಅನುದಾನ ಬಂದ ತಕ್ಷಣ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.
ವಸತಿ ನಿಲಯದ ಮಕ್ಕಳಿಗೆ ‘ಹೆಲ್ತ್ ಕಾರ್ಡ್’ ವಿತರಿಸಲಾಗುತ್ತಿದ್ದು, ಪ್ರತಿ ತಿಂಗಳು ಕಡ್ಡಾಯ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶವನ್ನು ಉತ್ತಮಪಡಿಸಲು ಶಿಕ್ಷಣ ಇಲಾಖೆ ವಿಶೇಷ ಶ್ರಮವಹಿಸುತ್ತಿದ್ದು, ಫಲಿತಾಂಶದಲ್ಲಿ ಹಿಂದುಳಿದಿರುವ ಶಾಲೆಗಳನ್ನು ಅಧಿಕಾರಿಗಳು ದತ್ತು ಪಡೆದುಕೊಂಡು ನಿರಂತರ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಸಿಇಒ ಸ್ವತಃ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಗುಣಮಟ್ಟವನ್ನು ಪರಿಶೀಲಿಸುತ್ತಿದ್ದು, ಹಿಂದುಳಿದ ವಿದ್ಯಾರ್ಥಿಗಳಿಗೆ ಮುಂಜಾನೆ ಮತ್ತು ಸಂಜೆ ವಿಶೇಷ ತರಗತಿಗಳನ್ನು ಆಯೋಜಿಸುತ್ತಿದ್ದಾರೆ ಎಂದರು.
ಕಳೆದ ವರ್ಷ ಜಿಲ್ಲೆಯಲ್ಲಿ ಯಾವುದೇ ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿರಲಿಲ್ಲ. ಆದರೆ, ಕಳೆದ ತಿಂಗಳು ಶಾದಿಮಹಲ್ನಲ್ಲಿ ನಡೆಯುತ್ತಿದ್ದ ವಿವಾಹವೊಂದರ ಮೇಲೆ ದಾಳಿ ನಡೆಸಿ, ಅಪ್ರಾಪ್ತ ಬಾಲಕಿಯರ ಬಾಲ್ಯವಿವಾಹವನ್ನು ಯಶಸ್ವಿಯಾಗಿ ತಡೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸಭೆಗೆ ತಿಳಿಸಿದರು. ಇನ್ನು ಮುಖ್ಯ ಕಾರ್ಯದರ್ಶಿಗಳ ಆದೇಶದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸಿ.ಇ.ಒ ಅವರು ಜಿಲ್ಲೆಯ ಆಸ್ಪತ್ರೆಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೆಲವು ನರ್ಸಿಂಗ್ ಹೋಂಗಳಲ್ಲಿ ಶೇಕಡಾ 100 ರಷ್ಟು ಸಿಸೇರಿಯನ್ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ, ವೈದ್ಯರ ಸಭೆ ಕರೆದು ಕಡ್ಡಾಯವಾಗಿ ನೈಸರ್ಗಿಕ ಹೆರಿಗೆಗೆ ಆದ್ಯತೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ತಾಯಿ ಮರಣ ಪ್ರಮಾಣವನ್ನು ಯಶಸ್ವಿಯಾಗಿ ನಿಯಂತ್ರಿಸಲಾಗಿದ್ದು, ಪ್ರಸ್ತುತ ಇದು ರಾಜ್ಯದ ಸರಾಸರಿಗಿಂತ ಕಡಿಮೆ ಇರುವುದು ಜಿಲ್ಲೆಯ ದೊಡ್ಡ ಸಾಧನೆಯಾಗಿದೆ. ಜಿಲ್ಲೆಯಲ್ಲಿ ಸದ್ಯ ಚರ್ಮರೋಗ ತಜ್ಞರು, ಸ್ತ್ರೀರೋಗ ತಜ್ಞರು ಹಾಗೂ ಅರಿವಳಿಕೆ ತಜ್ಞರ ಹುದ್ದೆಗಳು ಖಾಲಿ ಇದ್ದು, ಲಭ್ಯವಿರುವ ಸಂಪನ್ಮೂಲಗಳಲ್ಲೇ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಕೃಷಿ, ನೀರಾವರಿ ಹಾಗೂ ನಾಗರಿಕ ಸೌಲಭ್ಯಗಳು
ಮುಂಬರುವ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆ ಸಂಪೂರ್ಣ ಸಜ್ಜಾಗಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ. ಅಡಿಕೆ-ತೆಂಗಿನ ಜೊತೆಗೆ ಹಣ್ಣು ಮತ್ತು ತರಕಾರಿ ಬೆಳೆಗಳಿಗೂ ಉತ್ತೇಜನ ನೀಡಲಾಗುತ್ತಿದ್ದು, ಹನಿ ನೀರಾವರಿ ಯೋಜನೆ ಸಬ್ಸಿಡಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ.
ಗ್ರಾಮೀಣ ಭಾಗದ ‘ಜಲಜೀವನ್ ಮಿಷನ್’ ಯೋಜನೆಯಡಿ ಪೈಪ್ಲೈನ್ ಮತ್ತು ನಲ್ಲಿ ಸಂಪರ್ಕ ಕಾರ್ಯಗಳು ಕೊನೆಯ ಹಂತದಲ್ಲಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗದಂತೆ ಇಂಜಿನಿಯರ್ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ನಗರದ ಪ್ರಮುಖ ರಸ್ತೆಗಳ ನವೀಕರಣ, ಸ್ಮಾರ್ಟ್ ರಸ್ತೆಗಳ ನಿರ್ಮಾಣ ಹಾಗೂ ಒಳಚರಂಡಿ ಆಧುನೀಕರಣ ಪ್ರಗತಿಯಲ್ಲಿದೆ. ಘನತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ವ್ಯವಸ್ಥಿತಗೊಳಿಸಲು ಸೂಚಿಸಲಾಗಿದೆ.
ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನವೇ ದಾವಣಗೆರೆಯಲ್ಲಿ ಬೀದಿನಾಯಿಗಳಿಗೆ ವ್ಯಾಕ್ಸಿನೇಷನ್ ಮತ್ತು ಸ್ಟೆರಿಲೈಸೇಶನ್ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದ್ದು, ಈಗಾಗಲೇ ಶೇಕಡಾ 80 ರಷ್ಟು ಯಶಸ್ಸು ಸಾಧಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ಶೇಖರ್ ಹೆಚ್.ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಗಿತ್ತೆ ಮಾಧವ ವಿಠ್ಠಲರಾವ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ5 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ7 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ4 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ3 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

