ರಾಜಕೀಯ
ಆ ಮಹಾತ್ಯಾಗಿ ನುಡಿದ ಭವಿಷ್ಯ ಸುಳ್ಳಾಗಲಿಲ್ಲ
ಇಂದು ಅಕ್ಕ ಮಾಯಾವತಿಯವರ 64 ನೇ ಹುಟ್ಟು ಹಬ್ಬ. ಅವರಿಗೆ ಭೀಮ ಶುಭಾಶಯಗಳನ್ನು ಕೋರುತ್ತಾ..
- ಮಹೇಶ್ ಸರಗೂರು
ಅದು 1977 ರ ಚಳಿಗಾಲದ ಸಮಯ. ದೆಹಲಿಯ ಚಳಿ ಎಂದರೆ ಕೇಳಬೇಕೆ? ಚಳಿ ಎಂದರೆ ಅಂತಿಂಥ ಚಳಿಯಲ್ಲ. ಅತ್ಯಂತ ಭೀಕರವಾದ ಚಳಿ. ನರನಾಡಿಗಳಲ್ಲಿ ನಡುಕ ಹುಟ್ಟಿಸುವ ಚಳಿ.ಇಂತಹ ವಿಪರೀತ ಚಳಿಯ ಅವಧಿಯಲ್ಲೂ ಕಾನ್ಷೀರಾಮ್ ಸಾಹೇಬರು ಬಾಂಸೆಫ್ ಸಂಘಟನೆಯನ್ನು ಹುಟ್ಟುಹಾಕಲು ಹಗಲಿರುಳು ಹೆಣಗುತ್ತಿದ್ದರು.
ಇಂತಹ ಸಮಯದಲ್ಲಿ ಒಂದು ದಿನ ಕಾನ್ಷೀರಾಮ್ ಸಾಹೇಬರು ಮನದಲ್ಲಿ ಅದೇನೋ ಒಂದು ಗಟ್ಟಿ ನಿರ್ಧಾರ ಮಾಡಿಕೊಂಡು ಮೇಲಕ್ಕೆದ್ದರು. ಕಿವಿಗೆ ಮತ್ತು ಕುತ್ತಿಗೆಗೆ ಉಲ್ಲನ್ ಸ್ಕಾರ್ಫ್ ಸುತ್ತಿಕೊಂಡು ಸಹೊದ್ಯೋಗಿಯೊಬ್ಬನನ್ನು ಜೊತೆಗೆ ಕರೆದುಕೊಂಡು ಹೊರನಡೆದರು. ಆಗ ಸಮಯ ರಾತ್ರಿ ಒಂಭತ್ತು ಗಂಟೆ.
ದೆಹಲಿಯ ಬಹುತೇಕ ಜನರು ಆ ಕೊರೆಯುವ ಚಳಿಗೆ ಹೆದರಿಕೊಂಡು, ಬೆಚ್ಚನೆಯ ಹಾಸಿಗೆಯಲ್ಲಿ ಮೈ ತುಂಬಾ ಹೊದ್ದುಕೊಂಡು ಮಲಗಿದ್ದರು. ಇಂತಹ ಸಮಯದಲ್ಲಿ ದೆಹಲಿಯ ಇಂದ್ರಪುರಿ ಪ್ರದೇಶವನ್ನು ಪ್ರವೇಶಿಸಿದ ಕಾನ್ಷೀರಾಮ್ ಸಾಹೇಬರು ಮತ್ತು ಅವರ ಸಹೋದ್ಯೋಗಿ ಇಕ್ಕಟ್ಟಾದ ಓಣಿಯಲ್ಲಿ ನಡೆದು ಮನೆಯೊಂದರ ಬಾಗಿಲು ಬಡಿದರು.
ಅದೇ ತಾನೇ ಊಟ ಮುಗಿಸಿ ಓದುತ್ತಿದ್ದ ಹೆಣ್ಣುಮಗಳೊಬ್ಬಳು ಇಂತಹ ಅಪರಾತ್ರಿಯಲ್ಲಿ ಅದ್ಯಾರು ಬಾಗಿಲು ಬಡಿಯುತ್ತಿರಬಹುದೆಂದು ಯೋಚಿಸುತ್ತಲೇ ಬಾಗಿಲು ತೆರೆದು ನೋಡಿದರೆ ಎದುರಿಗೆ ಕಾನ್ಷೀರಾಮ್ ಸಾಹೇಬರು ನಿಂತಿದ್ದರು.
ಬಾಗಿಲು ತೆರೆದ ಆ ಹೆಣ್ಣು ಮಗಳು ಬೇರಾರೂ ಆಗಿರಲಿಲ್ಲ. ಅವರೇ ಮಾಯಾವತಿ.
ಆಧುನಿಕ ಭಾರತದ ರಾಜಕೀಯ ಇತಿಹಾಸದಲ್ಲಿಯೇ ಅಚ್ಚರಿಯ ಪವಾಡ ಸೃಷ್ಟಿಸಿದ ಆ ಇಬ್ಬರು ಮಹಾಮಹಿಮರು ಒಬ್ಬರಿಗೊಬ್ಬರು ಎದುರುಗೊಂಡ ಮೊದಲ ಕ್ಷಣ ಅದಾಗಿತ್ತು.
ಅಕ್ಕ ಮಾಯಾವತಿಯವರಿಗೆ ಒಂದು ಕ್ಷಣ ಉಸಿರು ನಿಂತಂತಾಯಿತು. ಕಾರಣ ಅಲ್ಲಿ ನಿಂತವರು ವಾಸ್ತವವಾಗಿ ಕಾನ್ಷೀರಾಮ್ ಸಾಹೇಬರಾಗಿದ್ದರೂ ಅವರ ರೂಪ, ಪ್ರತಿರೂಪ ಸಾಕ್ಷಾತ್ ಭಗವಾನ್ ಬುದ್ದನಂತಿತ್ತು. ಭೋಧಿಸತ್ವ ಬಾಬಾಸಾಹೇಬ್ ಅಂಬೇಡ್ಕರ್ ರವರನ್ನು ಹೋಲುತ್ತಿತ್ತು.
ತನ್ನ ಕಣ್ಣನ್ನು ತಾನೇ ನಂಬದಾದ ಮಾಯಾವತಿಯವರು ಸಾವರಿಸಿಕೊಂಡು ಕಾನ್ಷೀರಾಮ್ ಸಾಹೇಬರನ್ನು ಮನೆಯೊಳಗೆ ಬರಮಾಡಿಕೊಂಡರು. ಕಾನ್ಷೀರಾಮ್ ಸಾಹೇಬರ ಆಕಸ್ಮಿಕ ಆಗಮನ ಮಾಯಾವತಿಯವರ ಮನೆಯಲ್ಲಿ ಮಿಂಚಿನ ಸಂಚಾರವನ್ನುಂಟುಮಾಡಿತ್ತು.
ಮಾಯಾವತಿಯವರ ತಂದೆತಾಯಿಗಳು ಗಡಬಡಿಸಿ ಬಂದು, ಆದರದಿಂದ ಸ್ವಾಗತಿಸಿ, ಪರಸ್ಪರ ಕ್ಷೇಮ ಸಮಾಚಾರ ವಿನಿಮಯ ಮಾಡಿಕೊಂಡರು. ಬಾಂಸೆಫ್ ಕೆಲಸದ ಮೂಲಕ ಅದಾಗಲೇ ಉತ್ತರ ಭಾರತದಾದ್ಯಂತ ಮನೆಮಾತಾಗಿದ್ದ ಕಾನ್ಷೀರಾಮ್ ಸಾಹೇಬರು ಇಂತಹ ಅಪರಾತ್ರಿ ಹೊತ್ತಲ್ಲಿ ಮನೆಗೆ ಬಂದಿದ್ದು ಪ್ರಭುದಾಸ್ ದಯಾಳ್ ಮತ್ತು ರಾಮರತಿಯವರಿಗೆ ಬಿಡಿಸಲಾಗದ ಒಗಟಿನಂತಾಗಿತ್ತು. ಏತಕ್ಕೆ ಬಂದಿದ್ದಾರೋ, ಏನು ಸುದ್ದಿ ತಂದಿದ್ದಾರೋ ಎಂಬ ಅಳುಕು ಅವರದಾಗಿತ್ತು.
ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದ್ದೀರಿ
ಕಾನ್ಷೀರಾಮ್ ಸಾಹೇಬರು ಆ ಅಪರಾತ್ರಿಯಲ್ಲಿ ಮಾಯಾವತಿಯವರನ್ನು ಹುಡುಕಿಕೊಂಡು ಬರಲು ಕಾರಣವೊಂದಿತ್ತು. ಆ ಕಾರಣವೇನೆಂದರೆ, 1977 ರ ಸೆಪ್ಟೆಂಬರ್ ನಲ್ಲಿ ಸರ್ಕಾರದ ವತಿಯಿಂದ ದೆಹಲಿಯ Constitution club ನಲ್ಲಿ ಮೂರು ದಿನಗಳ ಕಾಲ ‘ಜಾತಿ ವಿನಾಶ’ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಆ ಕಾರ್ಯಕ್ರಮದಲ್ಲಿ ಅಂದಿನ ಕೇಂದ್ರ ಆರೋಗ್ಯ ಸಚಿವರಾಗಿದ್ದ ಮತ್ತು ಹೆಸರಾಂತ ಸಮಾಜವಾದಿ ನಾಯಕರಾಗಿದ್ದ ರಾಜ್ ನಾರಾಯಣ್ ರವರು ತಮ್ಮ ಭಾಷಣದಲ್ಲಿ ಅವಹೇಳನಕಾರಿಯಾದ ‘ಹರಿಜನ’ ಪದವನ್ನು ಪದೇ ಪದೇ ಬಳಸಿ ಮಾತನಾಡುತ್ತಿದ್ದರು.
ಅಲ್ಲೇ ಹಾಜರಿದ್ದ ಸರ್ಕಾರಿ ಶಿಕ್ಷಕಿ ಮಾಯಾವತಿಯವರು ಎದ್ದು ನಿಂತು ರಾಜ್ ನಾರಾಯಣ್ ರವರನ್ನು ತರಾಟೆಗೆ ತೆಗೆದುಕೊಂಡರು. ಪರಿಶಿಷ್ಟ ಜಾತಿಯವರಿಗೆ ಹರಿಜನರೆಂದು ಕರೆದು ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದ್ದೀರಿ. ನಿಮ್ಮ ಘನತೆ ಮತ್ತು ಗೌರವಗಳನ್ನು ಮರೆತು ಬೇಜವಾಬ್ದಾರಿಯಿಂದ ಮಾತನಾಡಿದ್ದೀರಿ. ನೀವು ಈ ಕೂಡಲೇ ಬಹಿರಂಗ ಕ್ಷಮೆ ಕೇಳಬೇಕು ಎಂದು ಸಭೆಯಲ್ಲಿ ಕ್ಷಮೆ ಕೇಳಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಘಟನೆಯಿಂದ ಮಾಯಾವತಿಯವರು ಎಲ್ಲರ ಕೇಂದ್ರ ಬಿಂದುವಾದರು.
ಇದೇ ಸಭೆಯಲ್ಲಿದ್ದ ಕೆಲವು ಬಾಂಸೆಫ್ ಕಾರ್ಯಕರ್ತರು ಮಾಯಾವತಿಯವರ ವಿಷಯವನ್ನು ಕಾನ್ಷೀರಾಮ್ ಸಾಹೇಬರಿಗೆ ವಿವರಿಸಿ, ಮಾಯಾವತಿಯವರು ನಮ್ಮ ಸಂಘಟನೆಯಲ್ಲಿದ್ದರೆ ಬಾಂಸೆಫ್ ಗೆ ಹೆಚ್ಚು ಬಲ ಬರುತ್ತದೆ ಎಂದು ತಿಳಿಸಿದರು. ಬಾಂಸೆಫ್ ಕಾರ್ಯಕರ್ತರ ಮಾತಿನಿಂದ ಉತ್ತೇಜಿತರಾದ ಕಾನ್ಷೀರಾಮ್ ಸಾಹೇಬರು ಮಾಯಾವತಿಯವರ ಅರಿವಿಗೆ ಬಾರದಂತೆ ಅವರ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಮಾಯಾವತಿಯವರ ಚಿಂತನೆಗಳನ್ನು ಗಮನವಿಟ್ಟು ಆಲಿಸಿದರು. ಅದಕ್ಕಾಗಿ ಮಾಯಾವತಿಯವರನ್ನು ಹುಡುಕಿಕೊಂಡು ಬಂದಿದ್ದರು.
ಐಎಎಸ್ ಅಧಿಕಾರಿಯಾಗಿ ಶೋಷಿತ ಜನಾಂಗಗಳ ಸೇವೆ ಮಾಡಬೇಕು
ಕಾನ್ಷೀರಾಮ್ ಸಾಹೇಬರು ಮಾಯಾವತಿಯವರ ಜೊತೆ ಸುಮಾರು ಒಂದು ಗಂಟೆಗಳ ಕಾಲ ಭಾರತದ ಸಾಮಾಜಿಕ ಮತ್ತು ರಾಜಕೀಯ ಸ್ಥಿತಿಗತಿಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದರು. ಮಹಾತ್ಮ ಜ್ಯೋತಿಭಾಫುಲೆಯವರಿಂದಿಡಿದು ಬಾಬಾಸಾಹೇಬ್ ಅಂಬೇಡ್ಕರ್ ವರೆಗಿನ ಎಲ್ಲಾ ಮಹಾಪುರುಷರ ಹೋರಾಟವನ್ನು ಮತ್ತು ಅದರ ಮುಂದುವರಿಕೆಯ ಮಹತ್ವವನ್ನು ಮನಮುಟ್ಟುವಂತೆ ವಿವರಿಸಿ ಹೇಳಿದರು.
ಇದಾದ ಬಳಿಕ ಮಾಯಾವತಿಯವರ ಜೀವನದ ಆಸೆ ಆಕಾಂಕ್ಷೆಗಳನ್ನು, ದ್ಯೇಯೋದ್ದೇಶಗಳನ್ನು ಕೇಳಿ ತಿಳಿದುಕೊಂಡರು. ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ತಾನು ಐಎಎಸ್ ಅಧಿಕಾರಿಯಾಗಿ ಶೋಷಿತ ಜನಾಂಗಗಳ ಸೇವೆ ಮಾಡಬೇಕು ಎನ್ನುವುದು ನನ್ನ ಗುರಿ ಎಂದು ಮಾಯಾವತಿಯವರು ತಿಳಿಸಿದರು.
ನಂತರ ಹೊರಡುವ ಸಮಯದಲ್ಲಿ ಅಂತಿಮವಾಗಿ ಒಂದು ನಿರ್ಧಾರಕ್ಕೆ ಬಂದ ಕಾನ್ಷೀರಾಮ್ ಸಾಹೇಬರು ” ನೀನು ಅಂದುಕೊಂಡಂತೆ ಖಂಡಿತವಾಗಿ ನೀನು ಐಎಎಸ್ ಅಧಿಕಾರಿ ಆಗಬಹುದು. ಆ ಅರ್ಹತೆ ನಿನಗಿದೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ನೀನು ಅಂದುಕೊಂಡಂತೆ ನಿನ್ನ ಜನರ ಸೇವೆ ಮಾಡುವುದು ಮಾತ್ರ ನಿಮ್ಮಿಂದ ಸಾಧ್ಯವಾಗುವುದಿಲ್ಲ.
ಕಾರಣ, ಒಬ್ಬ ಸರ್ಕಾರಿ ಅಧಿಕಾರಿಯಾಗಿ ನೀನು ಸರಕಾರ ನಡೆಸುವ ರಾಜಕಾರಿಣಿಗಳ ಇಚ್ಚೆಯಂತೆ ನಡೆಯಬೇಕಾಗುತ್ತದೆ. ಶ್ರೀಮಂತರ ನೋಟುಗಳಿಂದ ಬಡವರ ಓಟುಗಳನ್ನು ಖರೀದಿಸುವುದನ್ನೇ ಪ್ರಜಾಪ್ರಭುತ್ವ ಎಂದು ಪರಿಗಣಿಸಿರುವ ಭಾರತದಲ್ಲಿ ರಾಜಕೀಯ ನಾಯಕರ ಯೋಜನೆಗಳು ಮತ್ತು ಯೋಚನೆಗಳು ಜಾರಿಯಾಗುತ್ತವೆಯೇ ಹೊರತು ಐಎಎಸ್ ಅಧಿಕಾರಿಗಳ ಯೋಜನೆಗಳು ಮತ್ತು ಯೋಚನೆಗಳಲ್ಲ.
ಈಗ ನಮ್ಮ ಸಮಾಜದಲ್ಲಿ ಬೇಕಾದಷ್ಟು ಮಂದಿ ಐಎಎಸ್ ಅಧಿಕಾರಿಗಳಿದ್ದಾರೆ. ಆದರೆ ಅವರೆಲ್ಲ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದ್ದಾರೆ. ಅವರಿಂದ ಏನನ್ನೂ ನಿರೀಕ್ಷಿಸುವಂತಿಲ್ಲ. ಇದು ಎಲ್ಲರಿಗೂ ತಿಳಿದಿರುವ ಸಂಗತಿ. ಹೀಗಾಗಿ ನಮಗೆ ಬೇಕಾಗಿರುವುದು ಐಎಎಸ್ ಅಧಿಕಾರಿಗಳಲ್ಲ. ರಾಜಕೀಯ ನಾಯಕರು. ಐಎಎಸ್ ಅಧಿಕಾರಿಗಳಿಂದ ಸರಿಯಾಗಿ ಕೆಲಸ ಮಾಡಿಸಬಲ್ಲ, ವಿಧಾನಸಭೆ ಮತ್ತು ಲೋಕಸಭೆಗಳಲ್ಲಿ ಕುಳಿತು ಜನಪರ ಶಾಸನಗಳನ್ನು ರೂಪಿಸಬಲ್ಲ , ಅವುಗಳನ್ನು ಜಾರಿಗೊಳಿಸಬಲ್ಲ ಸಮರ್ಥ ರಾಜಕೀಯ ನಾಯಕರು.
ನಮ್ಮ ಸಮಾಜದಲ್ಲಿ ಇಂಥ ನಾಯಕರ ಕೊರತೆ ಇದೆ. ನೀನು ಆ ಕೊರತೆಯನ್ನು ನೀಗಿಸಬೇಕು. ನಿನ್ನಲ್ಲಿ ಆ ಶಕ್ತಿಯಿದೆ. ನನ್ನ ಮಾತನ್ನು ನೀನು ನಂಬುವುದಾದರೆ, ನಿನ್ನಲ್ಲಿ ಇಂತದ್ದೊಂದು ಬಯಕೆ ಇದ್ದುದಾದರೆ ನಾನು ನಿನ್ನನ್ನು ಅಂಥ ಒಬ್ಬ ಸಮರ್ಥ ನಾಯಕಿಯನ್ನಾಗಿ ತಯಾರು ಮಾಡುತ್ತೇನೆ. ಆಗ ನೂರಾರು ಜನ ಐಎಎಸ್ ಅಧಿಕಾರಿಗಳು ತಮ್ಮ ಫೈಲುಗಳನ್ನು ಹಿಡಿದುಕೊಂಡು ಬಂದು ನಿನ್ನ ಆದೇಶಕ್ಕಾಗಿ ಕಾಯುತ್ತಾರೆ.
ಒಳ್ಳೆಯ ಮತ್ತು ಕೆಟ್ಟ ಕೆಲಸ ಎರಡನ್ನೂ ಮಾಡುವ ಶಕ್ತಿ ಹೊಂದಿರುವ ಐಎಎಸ್ ಅಧಿಕಾರಿಗಳಿಂದ ನೀನು ನಿನ್ನೆಲ್ಲ ಒಳ್ಳೆಯ ಕೆಲಸಗಳನ್ನೇ ಮಾಡಿಸಬಹುದು. ಅದಕ್ಕಾಗಿ ನೀನು ಒಬ್ಬ ಐಎಎಸ್ ಅಧಿಕಾರಿಯಾಗುವ ಬದಲು ಒಬ್ಬ ಸಮರ್ಥ ರಾಜಕೀಯ ನಾಯಕಿಯಾಗುವುದು ಒಳ್ಳೆಯದು. ಯಾವುದಕ್ಕೂ ಯೋಚಿಸಿ ಒಂದು ಸರಿಯಾದ ನಿರ್ಧಾರಕ್ಕೆ ಬಾ… ನೀನು ತೆಗೆದುಕೊಳ್ಳುವ ನಿರ್ಧಾರದಲ್ಲಿ ಬಹುಜನರ ಭವಿಷ್ಯ ಅಡಗಿದೆ ಎಂದು ಹೇಳಿ ಅಲ್ಲಿಂದ ಹೊರಟು ಹೋದರು.
ಮುಂದೆ ನಡೆದಿದ್ದೆಲ್ಲವೂ ನಮ್ಮ ಕಣ್ಣ ಮುಂದಿರುವ ಇತಿಹಾಸ. ನುಡಿದಂತೆ ನಡೆದು, ಯಕಶ್ಚಿತ್ ಶಾಲಾ ಶಿಕ್ಷಕಿಯೊಬ್ಬಳನ್ನು ಉತ್ತರಪ್ರದೇಶದಂತಹ ಅತಿದೊಡ್ಡ ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯನ್ನಾಗಿ ಮಾಡಿ, ದೇಶವೇ ಕೊಂಡಾಡುವಂತೆ ಅದ್ಬುತ ಕಾರ್ಯಗಳನ್ನು ಸಾಧಿಸಿ ತೋರಿಸಿದ ಪವಾಡ ಪುರುಷ ಕಾನ್ಷೀರಾಮ್. ಅಂದು ಆ ಮಹಾತ್ಯಾಗಿ ನುಡಿದ ಭವಿಷ್ಯ ಸುಳ್ಳಾಗಲಿಲ್ಲ. ಕಾರಣ, ಮಹಾಜ್ಞಾನಿಗಳ ಮಾತುಗಳು ಸುಳ್ಳಾಗಲು ಸಾದ್ಯವೇ ಇಲ್ಲ..!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.
ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.
ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್ನಾಯ್ಕ್.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕನಗೊಂಡನಹಳ್ಳಿಯಲ್ಲಿ ಸ್ವಚ್ಛ ಸಂಕೀರ್ಣ, ಕೂಸಿನ ಮನೆ ಉದ್ಘಾಟನೆ: ಸುಸ್ಥಿರ ಗ್ರಾಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಕಸ ವಿಲೇವಾರಿ ಘಟಕಗಳನ್ನು ಗ್ರಾಮಸ್ಥರೇ ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಗ್ರಾಮಗಳನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸಬೇಕು ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ಶುಕ್ರವಾರದಂದು ಕನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಸ್ವಚ್ಛ ಸಂಕೀರ್ಣ ಘಟಕ, ಕೂಸಿನ ಮನೆ ಹಾಗೂ ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ 39 ಕಸ ವಿಲೇವಾರಿ ಘಟಕಗಳ ಪೈಕಿ, ಕನಗೊಂಡನಹಳ್ಳಿಯಲ್ಲಿ 17 ಲಕ್ಷ ರೂ. ವೆಚ್ಚದಲ್ಲಿ ನೂತನ ಘಟಕ ನಿರ್ಮಿಸಲಾಗಿದೆ. ಇದರ ನಿರ್ವಹಣೆಗಾಗಿ ಸಿಬ್ಬಂದಿಗೆ ತರಬೇತಿ ನೀಡಲಾಗಿದ್ದು, ಸಾರ್ವಜನಿಕರು ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಗ್ರಾಮಸ್ಥರೇ ಘಟಕಗಳನ್ನು ನಿರ್ವಹಿಸಿದರೆ ಗ್ರಾಮದ ಆರ್ಥಿಕತೆಗೆ ಬಲ ಬರುತ್ತದೆ. ಇದರ ಜೊತೆಗೆ ಚರಂಡಿ ಸ್ವಚ್ಛತೆಯಲ್ಲೂ ಗ್ರಾಮಸ್ಥರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಕಾಮಗಾರಿಗಳ ವಿವರಗಳನ್ನು ತಕ್ಷಣವೇ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇತರ ಉದ್ಘಾಟನೆಗಳು
ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಂಸದರು ಹೊಸಕೊಳೇನಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ‘ಕೂಸಿನ ಮನೆ’ ಮತ್ತು ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು. ತದನಂತರ ಹಳೆಕೊಳೇನಹಳ್ಳಿಯಲ್ಲಿ ಮೂರು ಹೊಸ ಶಾಲಾ ಕೊಠಡಿಗಳು ಹಾಗೂ ಅಡುಗೆ ಕೊಠಡಿಯನ್ನು ಲೋಕಾರ್ಪಣೆಗೊಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಿತ್ತೆ ಮಾಧವ ವಿಠಲರಾವ್, ತಾಲ್ಲೂಕು ಪಂಚಾಯಿತಿ ಇಓ ರಾಮ್ ಭೋವಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ
ಸುದ್ದಿದಿನ,ದಾವಣಗೆರೆ:ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.25 ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಪ್ರಾಂಶುಪಾಲರು, ಮೇಲ್ವಿಚಾರಕರು, ವೀಕ್ಷಕರೊಂದಿಗೆ ಚರ್ಚಿಸಲು ಆಯೋಜಿಸಿದ್ದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು .ಮತ್ತು ಪರೀಕ್ಷಾ ವೇಳೆಯಲ್ಲಿ ಯಾವುದೇ ಗೊಂದಲಗಳಿಗೆ ಒಳಗಾಗದೇ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.
ಎಲ್ಲಾ ಕೇಂದ್ರಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಪರೀಕ್ಷೆಗೆ 45 ನಿಮಿಷ ಮುಂಚಿತವಾಗಿ ಬಂದು ಪರೀಕ್ಷಾ ಕೊಠಡಿಯಲ್ಲಿ ವರದಿ ಸಿದ್ದಪಡಿಸಿಕೊಳ್ಳಬೇಕು. ಹಾಗೂ ಪರೀಕ್ಷೆ ನಡೆಯುವ ಕೊಠಡಿಯ ಒಳಗೆ ವಾಚ್, ಕ್ಯಾಲುಕಿಲೇಟರ್, ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಬರುವಂತಿಲ್ಲ್ಲ. ಪರೀಕ್ಷೆ ಮುಗಿದ ನಂತರ ಗೈರು ಹಾಜರಾಗಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್ಲೈನ್ನಲ್ಲಿ ಅಪ್ಡೇಟ್ ಮಾಡಿಸಬೇಕು. ಕೊಠಡಿಯಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡಿಸಬೇಕು ಎಂದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಳನಿವಿಲೋ ದೊರೆಸ್ವಾಮಿ ಮಾತನಾಡಿ, ಜ.25 ರಂದು ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯು ನಗರದ 18 ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಎಲ್ಲಾ ಕೇಂದ್ರಗಳಿಗೂ ಮೇಲ್ವಿಚಾರಕರು, ಮತ್ತು ವೀಕ್ಷಕರನ್ನು ನೇಮಿಸಲಾಗಿದೆ.
ಬೆಳಿಗ್ಗೆ 10.30 ರಿಂದ 12.30 ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2.30 ರಿಂದ 4.30 ರವೆರೆಗೆ ಪತ್ರಿಕೆ-2 ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಎಲ್ಲ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರನ್ನೆ ಸಂಪರ್ಕಿಸಿ, ಪ್ರತಿ 24 ಅಭ್ಯರ್ಥಿಗಳಿಗೆ ಒಬ್ಬರು ಕೊಠಡಿ ಮೇಲ್ವಿಚಾರಕರಂತೆ ಅವಶ್ಯವಿರುವಷ್ಟು ಕೊಠಡಿ ಮೇಲ್ವಿಚಾರಕರನ್ನು ನೇಮಿಸಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ವಿವರಗಳನ್ನು ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮೂಲಕ ಪಡೆಯುವ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಜಾಮರ್ (Jamar) ವ್ಯವಸ್ಥೆ ಮಾಡಲಾಗುವುದು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ನೀಡಲಾಗಿದ್ದು, ಪ್ರಾಧಿಕಾರದ ವೆಬ್ಸೈಟಿನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳನ್ನು ತಪಾಸಣೆ ಮಾಡಲು ಪ್ರತಿ ಕೇಂದ್ರಕ್ಕೆ ಅಗತ್ಯವಿರುವಷ್ಟು ಹೋಮ್ಗಾರ್ಡ್ಗಳನ್ನು ನಿಯೋಜಿಸಬೇಕು. ತಪಾಸಣೆ ಮಾಡುವ ಸಿಬ್ಬಂದಿಗಳಿಗೆ ಸಹಾಯವಾಗುವಂತೆ ಪ್ರತಿ ಕೇಂದ್ರಕ್ಕೆ ಎರಡು ಹ್ಯಾಂಡ್ ಮೆಟಲ್ ಡಿಟೆಕ್ಟರ್ಗಳನ್ನು ಒದಗಿಸಲಾಗುವುದು.
ಕಾಲೇಜಿನ ಪ್ರಾಂಶುಪಾಲರನ್ನು ಆಯಾ ಕಾಲೇಜಿಗೆ ಮೇಲ್ವಿಚಾರಕರನ್ನಾಗಿ ನೇಮಿಸಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾಣುವಂತೆ ಪರೀಕ್ಷಾ ವೇಳಾಪಟ್ಟಿಯನ್ನು ಅಲ್ಲಲ್ಲಿ ಅಳವಡಿಸಿರಬೇಕು. ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯವಾಗಿ ಗಡಿಯಾರಗಳನ್ನು ಅಳವಡಿಸಬೇಕು. ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು ಮತ್ತು ಸಮೀಪವಿರುವ ಜೆರಾಕ್ಸ್ ಅಂಗಡಿಗಳನ್ನು ಪೊಲೀಸರ ಸಹಾಯದಿಂದ ಮುಚ್ಚಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ 18 ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

