ದಿನದ ಸುದ್ದಿ
ರಾಜ್ಯ ಬಜೆಟ್ ನ ಪಾವಿತ್ರ್ಯವನ್ನೇ ಹಾಳು ಮಾಡಿದ ಬಿ.ಎಸ್.ಯಡಿಯೂರಪ್ಪ : ಸಿದ್ದರಾಮಯ್ಯ ಕಿಡಿ
ಸುದ್ದಿದಿನ, ಬೆಂಗಳೂರು: ‘ಆಪರೇಷನ್ ಕಮಲ’ ಎಂಬ ಅನೈತಿಕ ರಾಜಕೀಯದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ರಾಜ್ಯವನ್ನು ದಶಕಗಳ ಹಿಂದಕ್ಕೆ ಒಯ್ಯುವ “ಆಪರೇಷನ್ ಬರ್ಬಾದ್” ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡುತ್ತಿದೆ. ಇದಕ್ಕೆ ಕಳೆದ ಮತ್ತು ಈ ವರ್ಷದ ಎರಡು ಬಜೆಟ್ಗಳೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಇಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ ಬಜೆಟ್ -2021 ರ ಬಗ್ಗೆ ಪ್ರತಿಜ್ರಿಯಿಸಿದ ಅವರು,
ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರ್ಕಾರ ಪಾರದರ್ಶಕವಾಗಿ ಕೆಲಸ ಮಾಡಬೇಕೆನ್ನುವುದು ಸಂವಿಧಾನಬದ್ಧ ಬದ್ಧತೆ. ಆದರೆ, ಇದೊಂದು ಮುಚ್ಚುಮರೆಯ ಸರ್ಕಾರ. ಈ ಬಜೆಟ್ನಲ್ಲಿ ಸರ್ಕಾರ ಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಎಂದರು.ಎಂದು ಕಿಡಿಕಾರಿದರು.
ಆಯವ್ಯಯವನ್ನು ಇಲಾಖಾವಾರು ನೀಡದೆ ಆರು ವಲಯಗಳಾಗಿ ವಿಂಗಡಿಸಿ ಯಾವ ಇಲಾಖೆಗೆ ಎಷ್ಟು ಅನುದಾನ ನೀಡಲಾಗಿದೆ. ಇಲಾಖೆಗಳ ಕಾರ್ಯಕ್ರಮಗಳೇನು, ಕಳೆದ ವರ್ಷದ ಸಾಧನೆಗಳೇನು, ಹೊಸ ಯೋಜನೆಗಳೇನು ಎಂಬ ವಿವರಗಳೇ ಇಲ್ಲ.
ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಬಜೆಟ್ಗೆ ಇದ್ದ ಮಹತ್ವ ಮತ್ತು ಪಾವಿತ್ರ್ಯವನ್ನೇ ಹಾಳು ಮಾಡಿದ್ದಾರೆ. ರಾಜ್ಯದಲ್ಲಿರುವ 33 ಇಲಾಖೆಗಳನ್ನು ಆರು ವಲಯಗಳನ್ನಾಗಿ ಮಾಡಿ ಗೊಂದಲ ಸೃಷ್ಟಿಸಲಾಗಿದೆ. ಈ ಆರೂ ವಲಯಗಳಿಗೆ ಕಳೆದ ಬಜೆಟ್ನಲ್ಲಿ ನಿಗದಿಪಡಿಸಲಾಗಿದ್ದ ಅನುದಾನಕ್ಕಿಂತ ಕಡಿಮೆ ಹಣ ನಿಗದಿಪಡಿಸಲಾಗಿದೆ.
ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ರೂ 1231 ಕೋಟಿ , ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ ರೂ 9943 ಕೋಟಿ, ಆರ್ಥಿಕ ಅಭಿವೃದ್ಧಿ ಪ್ರಚೋದನೆ ವಲಯಕ್ಕೆ ರೂ 3203 ಕೋಟಿ, ಬೆಂಗಳೂರು ಸಮಗ್ರ ಅಭಿವೃದ್ಧಿಗೆ ರೂ 997 ಕೋಟಿ, ಸಂಸ್ಕೃತಿ – ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲ ವಲಯಕ್ಕೆ 1907 ಕೋಟಿ ಕಡಿಮೆ ಅನುದಾನವನ್ನು ನಿಗದಿಪಡಿಸಲಾಗಿದೆ ಎಂದರು.
ಆಡಳಿತ ಸುಧಾರಣಾ ವಲಯಕ್ಕೆ ಮಾತ್ರ ರೂ.42,325 ಕೋಟಿಯಷ್ಟು ಅನುದಾವನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಈ ಹೆಚ್ಚುವರಿ ಅನುದಾನಕ್ಕೆ ಯಾವ ಹೊಸ ಯೋಜನೆಗಳನ್ನೂ ಪ್ರಕಟಮಾಡಿಲ್ಲ.
ಸಂಕಷ್ಟಗಳ ಸರಮಾಲೆಗೆ ಸಿಲುಕಿರುವ ರೈತರು ದೇಶಾದ್ಯಂತ ಬೀದಿಗಿಳಿದಿದ್ದಾರೆ. ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರನ್ನು ದಿವಾಳಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ಜೊತೆ ಸೇರಿರುವ ರಾಜ್ಯ ಸರ್ಕಾರ ತನ್ನ ಬಜೆಟ್ನಲ್ಲೂ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.
ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲೂ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ‘ಒಂದು ಲಕ್ಷದವರೆಗಿನ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರ ಬ್ಯಾಂಕ್ಗಳಲ್ಲಿನ ಕೃಷಿ ಸಾಲವನ್ನು ಮನ್ನಾ ಮಾಡುತ್ತೇವೆ’ ಎಂದು ಭರವಸೆ ನೀಡಿತ್ತು. ಈ ಸರಕಾರ ಅಧಿಕಾರಕ್ಕೆ ಬಂದ ನಂತರ ಮಂಡಿಸಿದ ಎರಡೂ ಬಜೆಟ್ಗಳಲ್ಲೂ ರೈತರ ಸಾಲ ಮನ್ನಾದ ಪ್ರಸ್ತಾಪವೇ ಇಲ್ಲ.
ಕೃಷಿ, ತೋಟಗಾರಿಕೆ, ಜಲಸಂಪನ್ಮೂಲ, ಸಹಕಾರ, ಮೀನುಗಾರಿಕೆ, ರೇಷ್ಮೆ ಮೊದಲಾದ ಕೃಷಿ ಸಂಬಂಧಿತ ಇಲಾಖೆಗಳಿಗೆ ಕಳೆದ ಬಜೆಟ್ನಲ್ಲಿ ರೂ. 32,259 ಕೋಟಿ ಅನುದಾನ ನೀಡಿದ್ದರೆ ಪ್ರಸಕ್ತ ಬಜೆಟ್ನಲ್ಲಿ ರೂ 31,028 ಕೋಟಿ ಅನುದಾನ ಒದಗಿಸಲಾಗಿದೆ. ಅಂದರೆ, ರೂ 1,231 ಕೋಟಿ ಅನುದಾನ ಕಡಿಮೆ ಮಾಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತನ್ನ ಎರಡನೇ ಬಜೆಟ್ನಲ್ಲಿ ಕೂಡ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿ ಹಾಗೂ ಅಲ್ಪಸಂಖ್ಯಾತ ವರ್ಗಗಳನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಹೇಳಿದರು.
2020-21 ನೇ ಸಾಲಿನಲ್ಲಿ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಗೆ 26,930 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಬಜೆಟ್ ಗಾತ್ರ ಹೆಚ್ಚಳಕ್ಕೆ ಅನುಗುಣವಾಗಿ ಈ ಯೋಜನೆಗೆ ಅನುದಾನವನ್ನು ಹೆಚ್ಚಿಸಬೇಕಿತ್ತು. ಆದರೆ ಈ ವರ್ಷದ ಬಜೆಟ್ನಲ್ಲಿ ನೀಡಲಾಗಿರುವ ಅನುದಾನ ರೂ 26,005 ಕೋಟಿ ಮಾತ್ರ.
ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮಾಜದ ಅಭಿವೃದ್ಧಿಗಾಗಿ ನಿಗಮವನ್ನು ಸ್ಥಾಪಿಸಿ ತಲಾ ರೂ.500 ಕೋಟಿ ಅನುದಾನ ನಿಗದಿಪಡಿಸಿರುವುದನ್ನು ನಾನು ಸ್ವಾಗತಿಸುತ್ತೇನೆ. ಅಂಬೇಡ್ಕರ್, ವಾಲ್ಮೀಕಿ, ಆದಿಜಾಂಬವ, ಬೋವಿ, ವಿಶ್ವಕರ್ಮ, ಕಾಡುಗೊಲ್ಲರ, ಅಂಬಿಗರ ಚೌಡಯ್ಯ, ಸವಿತಾ ಸಮಾಜ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಒಟ್ಟು ಕೇವಲ 500 ಕೋಟಿ ಅನುದಾನ ನೀಡುವ ಮೂಲಕ ತಳಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ.
ಮುಖ್ಯಮಂತ್ರಿಗಳು ಆರ್ಥಿಕತೆ ಸಕಾರಾತ್ಮಕ ಹಾದಿಯಲ್ಲಿ ಇದೆ ಎಂದು ಬಜೆಟ್ನಲ್ಲಿ ಹೇಳಿದ್ದಾರೆ. ಆದರೆ ಶೇ.14 ರಷ್ಟು ಪ್ರಗತಿಯಲ್ಲಿದ್ದ ರಾಜ್ಯದ ಆರ್ಥಿಕತೆ ಈ ಬಾರಿಯ ಬಜೆಟ್ನಲ್ಲಿರುವ ಅಂಕಿಅಂಶಗಳನ್ನು ನೋಡಿದರೆ ಗಾಬರಿ ಹುಟ್ಟಿಸುವಂತೆ ಇವೆ.
ರಾಜ್ಯ ಆದಾಯ ಎಂದು ಹೇಳುತ್ತಿರುವುದು ಬರಿ ಸಾಲವನ್ನು. ತೆರಿಗೆ ಸಂಗ್ರಹವು ಮುಖ್ಯಮಂತ್ರಿಗಳ ಭಾಷಣದ ಪ್ರಕಾರ ಕರ್ನಾಟಕದಲ್ಲಿ ತುಸು ಸಮಾಧಾನಕರವಾಗಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾದ ಪ್ರಮಾಣದಲ್ಲಿ ನೀಡದೆ ಹೋದ ಕಾರಣಕ್ಕೆ ರಾಜ್ಯವು ಭೀಕರ ಹಣಕಾಸಿನ ಸಮಸ್ಯೆಯನ್ನು ಎದುರಿಸುತ್ತಿದೆ.
ರಾಜ್ಯದ ಇತ್ತೀಚಿನ ವರ್ಷಗಳಲ್ಲಿಯೆ ಪ್ರಥಮ ಬಾರಿ ರೂ.19,485.84 ಕೋಟಿ ರಾಜಸ್ವ ಕೊರತೆ 2020-21 ರಲ್ಲಿ ಎದುರಾಗಿದೆ. 2021-22 ಕ್ಕೆ ರೂ.15,133 ಕೋಟಿ ರಾಜಸ್ವದ ಕೊರತೆ ಆಗುವುದೆಂದು ಬಜೆಟ್ನಲ್ಲಿ ತಿಳಿಸಿದ್ದಾರೆ. 2020-21 ರಲ್ಲಿ ಬಜೆಟ್ ಮಂಡಿಸಿದಾಗ ರೂ.143 ಕೋಟಿ ರಾಜಸ್ವ ಉಳಿಕೆ ಇರುತ್ತದೆ ಎಂದು ಅಂದಾಜಿಸಲಾಗಿತ್ತು ನಂತರದ ಪರಿಷ್ಕೃತ ಬಜೆಟ್ನಲ್ಲಿ ರಾಜಸ್ವ ಕೊರತೆ ಎದುರಾಯಿತು. 5 ವರ್ಷದ ನಮ್ಮ ಸರ್ಕಾರದಲ್ಲಿ ರಾಜಸ್ವದ ಕೊರತೆ ಎಂದೂ ಆಗಿಲ್ಲ.
ಬಜೆಟ್ನ ಅಂದಾಜಿನ ಪ್ರಕಾರ ವಿತ್ತೀಯ ಕೊರತೆ ಜಿ.ಎಸ್.ಡಿ.ಪಿ.ಯ ಶೇ.3.48 ರಷ್ಟು ಇರುತ್ತದೆ. ಇದರ ಪ್ರಕಾರ 2021-22 ರಲ್ಲಿ ವಿತ್ತೀಯ ಕೊರತೆ ರೂ.59,240 ಕೋಟಿ ಇರುತ್ತದೆ. ಈ ವರ್ಷ ರೂ.71,332 ಕೋಟಿಗಳಷ್ಟು ರಾಜ್ಯ ಸರ್ಕಾರ ಸಾಲ ಪಡೆಯುವುದಾಗಿ ಘೋಷಿಸಿದೆ. ಇದರಿಂದ ಸರ್ಕಾರದ ಮೇಲೆ ಬಹಳಷ್ಟು ಹೊರೆಯಾಗುತ್ತದೆ.
ಎಫ್.ಆರ್.ಬಿ.ಎಂ. ಕಾಯ್ದೆ ಪ್ರಕಾರ ವಿತ್ತೀಯ ಕೊರತೆಯು ಜಿ.ಡಿ.ಪಿ.ಯ ಶೇ.3 ಕ್ಕಿಂತ ಕಡಿಮೆ ಇರಬೇಕೆಂದು ನಿಯಮವಿದೆ. ಆದರೆ ಸರ್ಕಾರವು ಕೊರೋನಾ ಸಂದರ್ಭದಲ್ಲಿ ಸರಿಯಾದ ಆಡಳಿತವನ್ನು ನಡೆಸದೇ ಸರ್ಕಾರದ ವೈಫಲ್ಯವನ್ನು ಮುಚ್ಚಿ ಹಾಕಲು ಜಿ.ಎಸ್.ಡಿ.ಪಿ.ಯ ಶೇ.4 ರಷ್ಟು ಹೆಚ್ಚಿಗೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿಕೊಳ್ಳಲಾಗಿದೆ. ಇದು ಒಳ್ಳೆಯ ಆರ್ಥಿಕ ನೀತಿಯ ಲಕ್ಷಣವಲ್ಲ.
5 ವರ್ಷದ ನಮ್ಮ ಸರ್ಕಾರದಲ್ಲಿ ವಿತ್ತೀಯ ಕೊರತೆಯು ಜಿ.ಎಸ್.ಡಿ.ಪಿಯ. ಶೇ.2.5 ರ ಆಸುಪಾಸಿನಲ್ಲೇ ಇತ್ತು.
2020-21 ರಲ್ಲಿ ಬಿಡುಗಡೆ ಮಾಡಿದ ಮಧ್ಯಮಾವಧಿ ವಿತ್ತೀಯ ಯೋಜನೆ – 2020-2024 ರ ಪ್ರಕಾರ ಹೆಚ್ಚುವರಿ ರಾಜಸ್ವ ನಿರೀಕ್ಷೆಯಲ್ಲಿದ್ದ ರಾಜ್ಯ 2020-21 ರಲ್ಲೇ ದೊಡ್ಡ ಮಟ್ಟದ ರಾಜಸ್ವ ಕೊರತೆಯನ್ನು ಎದುರಿಸುತ್ತಿದೆ.
2022-23 ರಿಂದ ಜಿ.ಎಸ್.ಟಿ. ಪರಿಹಾರ ಸ್ಥಗಿತಗೊಳ್ಳುವುದರಿಂದ ಇದರ ಜೊತೆಗೆ ರೂ.30,743 ಕೋಟಿ ರಾಜಸ್ವ ಕೊರತೆಯಾಗಲಿದೆ ಎಂದು ಅಂದಾಜು ಮಾಡಲಾಗಿದೆ. 2023-24 ರಲ್ಲಿ ಈ ರಾಜಸ್ವ ಕೊರತೆಯು ರೂ.46,831 ಕೋಟಿಯಾಗಲಿದೆ.
2020-21 ರಲ್ಲಿ ರೂ.70,411 ಕೋಟಿ ಸಾಲ ಮಾಡಿದೆ. 2019-20 ರವರೆಗೆ ರೂ.3,27,209 ಕೋಟಿ ಸಾಲ ರಾಜ್ಯದ ಮೇಲಿತ್ತು. ನಮ್ಮ ಸರ್ಕಾರದ ಅಂತಿಮ ವರ್ಷದಲ್ಲಿ (2017-18)ರಲ್ಲಿ ರೂ.2,42,420 ಕೋಟಿ ಸಾಲ ಮಾಡಲಾಗಿತ್ತು. ಜಿ.ಎಸ್.ಡಿ.ಪಿಯ ಮೇಲೆ ಸಾಲದ ಪ್ರಮಾಣ ಶೇ.18.93 ಇತ್ತು.
2020-21 ರ ಫೆಬ್ರವರಿ ಅಂತ್ಯಕ್ಕೆ ರಾಜ್ಯದ ಸಾಲ ರೂ.3,97,881 ಕೋಟಿ ಇದೆ. ಮುಂದಿನ ವರ್ಷಕ್ಕೆ ರೂ.4,57,889 ಕೋಟಿಗಳಷ್ಟು ಸಾಲ ರಾಜ್ಯದ ಜನರ ಮೇಲೆ ಇರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಜಿ.ಎಸ್.ಡಿ.ಪಿ.ಯ ಶೇ.26.9 ರಷ್ಟು ಆಗಿದೆ. ಎಫ್.ಆರ್.ಬಿ.ಎಂ. ಕಾಯ್ದೆಯ ನಿಯಮದ ಪ್ರಕಾರ ಜಿ.ಎಸ್.ಡಿ.ಪಿಯ ಶೇ.25 ರಷ್ಟು ಕಡಿಮೆ ಇರಬೇಕು. 5 ವರ್ಷದ ನಮ್ಮ ಸರ್ಕಾರವು ಅದು ಶೇ.20 ರ ಆಸುಪಾಸಿನಲ್ಲಿ ಇತ್ತು.
ರಾಜಸ್ವ ಆದಾಯವು ಕಳೆದ ಬಜೆಟ್ ಅಂದಾಜಿಗಿಂತ ಈ ವರ್ಷದ ಅಂದಾಜಿನಲ್ಲಿ ಸುಮಾರು ರೂ.7,000 ಕೋಟಿಯಷ್ಟು ಕಡಿಮೆಯಾಗಿದೆ. ಕಳೆದ ಬಜೆಟ್ನ ಅಂದಾಜು ಮತ್ತು ಪರಿಷ್ಕೃತ ರಾಜಸ್ವ ಸ್ವೀಕೃತಿಯಲ್ಲಿ ರೂ.20,000 ಕೋಟಿಯಷ್ಟು ಕಡಿಮೆಯಾಗಿದೆ. ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ಮತ್ತು ಅನುದಾನದ ಕೊರತೆಯೇ ಇದಕ್ಕೆ ಹೊಣೆ.
2020-21 ರ ಪರಿಷ್ಕೃತ ವೆಚ್ಚವು ರೂ.2,29,924.73 ಕೋಟಿ ಇರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಬಜೆಟ್ನ ಅಂದಾಜಿಗಿಂತ ರೂ.8,000 ಕೋಟಿಯಷ್ಟು ಕಡಿಮೆಯಾಗಿದೆ.
2020-21 ರಲ್ಲಿ ರೂ.2,37,893 ಕೋಟಿಗಳಷ್ಟು ಬಜೆಟ್ ಅನ್ನು ಮಂಡಿಸಿದ್ದರೂ ಕಡೆಯದಾಗಿ ಇಲಾಖೆಗಳಿಗೆ ನೀಡಲು ಉದ್ದೇಶಿಸಿದ್ದ ಮೊತ್ತ ರೂ.1,96,369.2 ಕೋಟಿ. ಅದರಲ್ಲಿ ಹಳೆಯ ಬಾಕಿ ರೂ.13,491.7 ಕೋಟಿ. ಒಟ್ಟಿಗೆ ಸೇರಿ ಖರ್ಚು ಮಾಡಲು ಲಭ್ಯವಿದ್ದ ಅನುದಾನ ರೂ.2,09,860 ಕೋಟಿ.
ಇಲಾಖೆಗಳಿಗೆ ಜನವರಿಯವರೆಗೆ ಬಿಡುಗಡೆ ಮಾಡಿದ್ದು ರೂ.1,42,851 ಕೋಟಿ. ಖರ್ಚಾಗಿರುವುದು ರೂ.1,30,998 ಕೋಟಿ ಮಾತ್ರ. 2020-21 ರಲ್ಲಿ ರೂ.2,37,893 ಕೋಟಿಯನ್ನು ಪರಿಷ್ಕರಿಸಿ ರೂ.2,29,925 ಕೋಟಿಗಳಿಗೆ ಇಳಿಸಿಕೊಂಡರು.
ಇದನ್ನೂ ಓದಿ | ರಾಜ್ಯ ಬಜೆಟ್-2021 ವಿಶ್ಲೇಷಣೆ | ಯಡ್ಡಿ ಬಜೆಟ್ – ಉತ್ಪ್ರೇಕ್ಷೆ, ತಾರತಮ್ಯ ಮತ್ತು ಸುಳ್ಳು ಅಂಕಿಅಂಶಗಳ ಕಣ್ಕಟ್ಟು..!
ಕೊರೋನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಿಯೂ ಒಟ್ಟು ಖರ್ಚು ಅವರ ಬಜೆಟ್ ಅಂದಾಜಿಗಿಂತ ಕಡಿಮೆಯಿದೆ. ಇದರಲ್ಲಿ ಇಲಾಖೆಗಳಿಗೆ ಖರ್ಚು ಮಾಡಲು ಸಿಕ್ಕಿದ್ದು ರೂ.1,96,369 ಕೋಟಿ. ಇನ್ನು ಉಳಿದ ರೂ.33,556 ಕೋಟಿಗಳು ಸಾಲ ಮರುಪಾವತಿ ಮತ್ತು ಬಡ್ಡಿ ಪಾವತಿಗೆ ಖರ್ಚಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 2021-22 ರಲ್ಲಿ ಜಿ.ಡಿ.ಪಿ.ಯು ಶೇ.11 ರಷ್ಟು ಬೆಳವಣಿಗೆ ಕಾಣುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಆದರೆ ರಾಜ್ಯದ ಸ್ವಂತ ತೆರಿಗೆಗಳ ಸಂಗ್ರಹಗಳ ಗುರಿಯು 2020-21 ರ ಮೂಲ ಬಜೆಟ್ಗೆ ಹೋಲಿಸಿದರೆ ಶೇ.3.12 ರಷ್ಟು ಕಡಿಮೆಯಾಗಿದೆ.
ಕೇಂದ್ರದ ತೆರಿಗೆ ಪಾಲು 2020-21ರ ಮೂಲ ಬಜೆಟ್ನಲ್ಲಿ ರೂ.28,591.23 ಕೋಟಿ ನಿರೀಕ್ಷೆ ಮಾಡಲಾಗಿತ್ತು. 2021-22 ರ ಆಯವ್ಯಯದಲ್ಲಿ ಇದು ರೂ.24,273.6 ಕೋಟಿಗೆ ಇಳಿಯಲಿದೆ. ರೂ.4,318 ಕೋಟಿಗಳಷ್ಟು ಕಡಿಮೆಯಾಗಿದೆ. ಅಂದರೆ ಶೇ.15 ರಷ್ಟು ಕಡಿಮೆಯಾಗಿದೆ.
ದೇಶದ ಜಿ.ಡಿ.ಪಿ.ಯು ಶೇ.11 ಕ್ಕೂ ಹೆಚ್ಚು ಪ್ರಗತಿಯಾಗುವುದಾದರೆ ನಮಗೆ ನೀಡಬೇಕಾದ ತೆರಿಗೆ ಹಂಚಿಕೆಯೂ ಅಷ್ಟೇ ಪ್ರಮಾಣದಲ್ಲಿ ಹೆಚ್ಚಾಗಿ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಆದಾಯ ಬರಬೇಕಿತ್ತು ಅಲ್ಲವೇ? ಕೇಂದ್ರ ಮತ್ತು ರಾಜ್ಯಗಳಲ್ಲಿನ ಎರಡೂ ಬಿ.ಜೆ.ಪಿ. ಸರ್ಕಾರಗಳು ಜನರ ತಲೆಗೆ ಟೋಪಿ ಹಾಕುತ್ತಿವೆ ಎಂದರು.
ರಾಜ್ಯ ಬಜೆಟ್ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ವಿಧಿಸಲಾಗುತ್ತಿದ್ದ ಮಾರಾಟ ತೆರಿಗೆಯನ್ನು ಕಡಿಮೆ ಮಾಡುವ ಮೂಲಕ ಜನರಿಗೆ ನೆರವಾಗಬೇಕಿತ್ತು ಹಾಗೂ ಕೇಂದ್ರ ಸರ್ಕಾರದ ಮೇಲೆ ತೆರಿಗೆ ಕಡಿತಗೊಳಿಸುವಂತೆ ಒತ್ತಡ ಹೇರಬೇಕಿತ್ತು. ಈ ಅಂಶಗಳೇ ಇಂದಿನ ಬಜೆಟ್ನಲ್ಲಿ ಇಲ್ಲ ಎಂದು ಆರೋಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ22 hours agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ22 hours agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

