ಬಹಿರಂಗ
ಬುದ್ಧರ ಪ್ರಕಾರ ದಾನ ರೂಪದಲ್ಲಿ ಬಂದರೆ ಭಿಕ್ಕುಗಳೂ ಕೂಡ ಮಾಂಸ ತಿನ್ನಬಹುದು
ಬೌದ್ಧರು ಮಾಂಸ ತಿನ್ನಬಹುದೆ? ನೀವು ಬೌದ್ಧರಾಗಿ ನಿಮ್ಮ ಮನೆಯ ಕಾರ್ಯಕ್ರಮ (ದಿ:8-7-18 ರಂದು ನಡೆದ ನಮ್ಮ ತಂದೆ ತಾಯಿಯವರ 50ನೇ ವಿವಾಹ ವಾರ್ಷಿಕೋತ್ಸವ)ದಲ್ಲಿ ಮೇಕೆ ಕುಯ್ದಿರಿ. ಹೀಗೊಂದು ಪ್ರಶ್ನೆ ನನ್ನನ್ನು ಸ್ನೇಹಿತರು ಕೇಳಿದರು. ಉತ್ತರ ತಮ್ಮ “ಬುದ್ಧ ಅಂಡ್ ಹಿಸ್ ಧಮ್ಮ” ಕೃತಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ರು ನೀಡುತ್ತಾರೆ.
ಅಂಬೇಡ್ಕರರ ಪ್ರಕಾರ ಬುದ್ಧ ಎಂದು ಕೂಡ ಎಲ್ಲಿಯೂ ಕೂಡ ಅಹಿಂಸೆಗೆ ವ್ಯಾಖ್ಯೆ ನೀಡಿಲ್ಲ. ಅಪರೂಪಕ್ಕೆ ಅದೂ ಸಾಂದರ್ಭಿಕವಾಗಿ ಅದರ ಬಗ್ಗೆ ಬುದ್ಧ ಹೇಳುತ್ತಾರೆ ಅಷ್ಟೇ. ಸಾಂದರ್ಭಿಕ ಸಾಕ್ಷ್ಯಗಳ ಮೂಲಕ ತಿಳಿಯಬರುವುದೇನೆಂದರೆ “ದಾನದ ಭಾಗವಾಗಿ ಮಾಂಸಾಹಾರ ನೀಡಿದರೆ ಬುದ್ಧ ಅದನ್ನು ಎಂದೂ ಕೂಡ ತಿರಸ್ಕರಿಸಲಿಲ್ಲ” ಎಂಬುದು. ಈ ಹಿನ್ನೆಲೆಯಲ್ಲಿ ಭಿಕ್ಕುಗಳೂ ಕೂಡ ಮಾಂಸಾಹಾರ ಸೇವಿಸಬಹುದು. ಆದರೆ ಒಂದು ಸಣ್ಣ ಕಂಡೀಷನ್ ಎಂದರೆ ಅವರು ಆ ಪ್ರಾಣಿಯ ಹತ್ಯೆಯಲ್ಲಿ ಪಾಲುದಾರ ರಾಗಿರಬಾರದು ಅಷ್ಟೇ. (ನಿಜ ಹೇಳಬೇಕೆಂದರೆ, ನಮ್ಮ ಕಾರ್ಯಕ್ರಮಕ್ಕೆ ಅಂದು ಆಗಮಿಸಿದ್ದ ಇಬ್ಬರು ಬೌದ್ಧ ಭಿಕ್ಕುಗಳು
ಮಾಂಸಹಾರವನ್ನೆ ಸೇವಿಸಿದುದು). ಮತ್ತೂ ಒಂದು ವಾಸ್ತವವೆಂದರೆ ಭಿಕ್ಕುಗಳು ದಾನದ ರೂಪದಲ್ಲಿ ಬಂದ ಮಾಂಸಾಹಾರವನ್ನೂ ಸೇವಿಸಬಾರದು ಎಂದು ದೇವದತ್ತ ವಿರೋಧ ವ್ಯಕ್ತಪಡಿಸಿದಾಗ ಬುದ್ಧರು ದೇವದತ್ತನ ಆ ನಿಲುವನ್ನೇ ವಿರೋಧಿಸುತ್ತಾರೆ. ಆ ಮೂಲಕ ದಾನದ ರೂಪದಲ್ಲಿ ಮಾಂಸಾಹಾರ ಬಂದರೆ ಭಿಕ್ಕುಗಳು ಅದನ್ನು ಸೇವಿಸಬಹುದು ಎಂಬ ಅಂಶಕ್ಕೆ ಬುದ್ಧರು ಒಪ್ಪುಗೆಯ ಮುದ್ರೆ ಒತ್ತುತ್ತಾರೆ. ಅಂದಹಾಗೆ ಇದನ್ನು ಹೇಳುತ್ತಾ ಅಂಬೇಡ್ಕರರು “ಅಹಿಂಸೋ ಪರಮ ಧರ್ಮ” ಎಂಬುದು ಅತಿರೇಕದ ಸಿದ್ಧಾಂತವಾಗಿದೆ ಮತ್ತು ಅದು ಜೈನ ಧರ್ಮಕ್ಕೆ ಸೇರಿದ್ದೇ ಹೊರತು ಬೌದ್ಧ ಧರ್ಮಕ್ಕಲ್ಲ. ಬೌದ್ಧ ಧರ್ಮಕ್ಕೂ ಅದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟ ಪದಗಳಲ್ಲಿ ಹೇಳುತ್ತಾರೆ.
ಹಾಗಿದ್ದರೆ ಅಹಿಂಸೆ? ಅರ್ಥಾತ್ ಕೊಲ್ಲುವುದು ಅಥವಾ ಕೊಲ್ಲದಿರುವುದು? ಯಾಕೆಂದರೆ ಕೆಲವು ಕಾರಣಗಳಿಗಾಗಿಯೂ ಮನುಷ್ಯ ಮತ್ತೊಬ್ಬರನ್ನು ಕೊಲ್ಲುವ ಸಂದರ್ಭ ಬರುತ್ತದೆ. ಇದಕ್ಕೆ ಬುದ್ಧರು ನೇರ ಮಾತುಗಳಲ್ಲಿ ಹೇಳುವುದು “ಎಲ್ಲರನ್ನೂ ಪ್ರೀತಿಸು ಹೇಗೆಂದರೆ ಅವರನ್ನು ಕೊಲ್ಲುವ ಆಸೆಯೇ ನಿನಗೆ ಬರಬಾರದು” ಎಂದು! ಇದನ್ನು ಉಲ್ಲೇಖಿಸುತ್ತ ಬಾಬಾಸಾಹೇಬರು “ಇದು ಅಹಿಂಸೆಯ ಧನಾತ್ಮಕ ವ್ಯಾಖ್ಯೆಯಾಗಿದೆ” ಎನ್ನುತ್ತಾರೆ.
ಮುಂದುವರೆದು ಅಂಬೇಡ್ಕರರು ಹೇಳುವುದು, ಬುದ್ಧರು “ಕೊಲ್ಲುವುದಕ್ಕಾಗಿ ಕೊಲ್ಲು, ಅಗತ್ಯ ಇರುವುದರಿಂದ ಕೊಲ್ಲು” ಇವೆರಡರ ನಡುವಿನ ವ್ಯತ್ಯಾಸ ತಿಳಿಸಬಯಸಿದ್ದರು ಎಂದು. ಇದರರ್ಥ ಬುದ್ಧರು ಎಂದು ಕೂಡ “ಅಗತ್ಯ ಇರುವುದರಿಂದ ಕೊಲ್ಲುವುದನ್ನು ನಿಷೇಧಿಸಲಿಲ್ಲ”. ಹಾಗಿದ್ದರೆ ನಿಷೇಧಿಸಿದ್ದು? “ಕೊಲ್ಲುವುದಕ್ಕಾಗಿ ಕೊಲ್ಲು” ಎಂಬುದನ್ನು. ಇದನ್ನು ಬ್ರಾಹ್ಮಣಧರ್ಮ ಮತ್ತು ಜೈನ ಧರ್ಮಗಳಿಗೆ ಹೋಲಿಸುತ್ತ ಅಂಬೇಡ್ಕರರು ಹೇಳುವುದು “ಬ್ರಾಹ್ಮಣ ಧರ್ಮ ತನ್ನಲ್ಲಿ ‘ಕೊಲ್ಲುವುದಕ್ಕಾಗಿ ಕೊಲ್ಲು’ ಎಂಬ ಸಿದ್ಧಾಂತ ಹೊಂದಿದ್ದರೆ, ಜೈನಧರ್ಮ ‘ಕೊಲ್ಲಲೇಬಾರದು’ ಎಂಬ ಸಿದ್ಧಾಂತ ಹೊಂದಿದೆ. ಆದರೆ ಬೌದ್ಧ ಧರ್ಮ ಇವೆರಡರ ನಡುವಿನ ಮಧ್ಯಮ ಮಾರ್ಗ ಹೊಂದಿದೆ” ಎಂದು. ಈ ದಿಸೆಯಲ್ಲಿ ಬೌದ್ಧ ಧರ್ಮ ಪ್ರತಿಪಾದಿಸುವುದು “ಅಗತ್ಯ ಇರುವುದರಿಂದ ಕೊಲ್ಲು” ಸಿದ್ಧಾಂತವನ್ನು.
ಹಾಗಿದ್ದರೆ ಕೊಲ್ಲುವ ಅಗತ್ಯ ಎಲ್ಲಿದೆ? ಎಲ್ಲಾ ಕಡೆಯೂ ಇರುತ್ತದಲ್ಲವೆ? ಎಂದು ಯಾರಾದರೂ ಪ್ರಶ್ನಿಸಬಹುದು. ಅದಕ್ಕೆ ಬುದ್ಧ ಹೇಳುವುದು “ಅಂತಹ ಕೊಲ್ಲುವ ಅಗತ್ಯತೆಯನ್ನು ಸಂಬಂಧಿಸಿದ ವ್ಯಕ್ತಿ ನಿರ್ಧರಿಸಬೇಕು. ಏಕೆಂದರೆ ಮನುಷ್ಯನಿಗೆ ಪ್ರಜ್ಞೆ ಎಂಬುದೊಂದಿದೆ. ಆದ್ದರಿಂದ ಅಂತಹ ಸಂದರ್ಭದಲ್ಲಿ, ಅಂದರೆ ಕೊಲ್ಲುವ ಅಗತ್ಯತೆಯ ಸಂದರ್ಭದಲ್ಲಿ ಆತ ಅದನ್ನು ನಿರ್ಧರಿಸಲು ತನ್ನ ಪ್ರಜ್ಞೆಯನ್ನು ಬಳಸಬೇಕು” ಎಂದು.
ಒಟ್ಟಾರೆ ಬುದ್ಧರ ಈ ಬೋಧನೆಗಳನ್ನೆಲ್ಲ ಉಲ್ಲೇಖಿಸುತ್ತ ಬಾಬಾಸಾಹೇಬರು ಹೇಳುವುದು, “ಬುದ್ಧ ಅಹಿಂಸೆಯನ್ನು ಮದ್ಯಮ ಮಾರ್ಗದಲ್ಲಿ ಇಟ್ಟರು.ಇದರರ್ಥ ಬುದ್ಧ ಅಹಿಂಸೆಯನ್ನು ಒಂದು ಕಾನೂನಾಗಿ ಇಡಲಿಲ್ಲ, ಬದಲಿಗೆ ಒಂದು ತತ್ವವಾಗಿ ಇಟ್ಟರು. ಅಂದಹಾಗೆ ತತ್ವವನ್ನು ವ್ಯಕ್ತಿಯೊಬ್ಬ ಸ್ವತಂತ್ರವಾಗಿ ಅಚರಿಸಬಹುದು. ಅದರಲ್ಲಿ ಕಟ್ಟುಪಾಡಿಲ್ಲ. ಆದರೆ ಕಾನೂನು ಹಾಗಲ್ಲ ಅದನ್ನು ಉಲ್ಲಂಘಿಸಲೇಬಾರದು. ಈ ನಿಟ್ಟಿನಲ್ಲಿ ಬುದ್ಧ ಅಹಿಂಸೆಯನ್ನು ಕಾನೂನಾಗಿ ಇಡದೆ ತತ್ವವಾಗಿ ಇಟ್ಟಿರುವುದರಿಂದ ಅನುಯಾಯಿಗಳು ಅದನ್ನು ಆಚರಿಸಲು ಸರ್ವ ಸ್ವತಂತ್ರರು ಮತ್ತು ಅದರಲ್ಲಿ ಅಂತಹ ನಿರ್ಬಂಧವೇನಿಲ್ಲ”.
ಒಂದಂತು ಸ್ಪಷ್ಟ, ಬುದ್ಧನೇ ಅಂತಹ ನಿರ್ಬಂಧಗಳನ್ನು ಹೇರಿಲ್ಲದಿರುವುದರಿಂದ ನಾವ್ಯಾಕೆ ಹೇರಿಕೊಳ್ಳಬೇಕು ಮಾಂಸ ತಿನ್ನಬಾರದು ಅದು ಮಾಡಬಾರದು ಇದು ಮಾಡಬಾರದು ಎಂದು? In fact ದಾನದ ರೂಪದಲ್ಲಿ ಬಂದರೆ ಭಿಕ್ಕುಗಳು ಮಾಂಸ ತಿನ್ನುವುದಕ್ಕೂ ಬುದ್ಧ ನಿಷೇಧ ಹೇರಿಲ್ಲ. ಹೀಗಿರುವಾಗ ಸಾಮಾನ್ಯ ಅನುಯಾಯಿಗಳಿಗೆ? ಆದ್ದರಿಂದ ಬೌದ್ಧ ಧರ್ಮ ಪ್ರಚಾರ ಮಾಡುವಾಗ ಮಾಂಸ ತಿನ್ನಬಾರದು, ಮದ್ಯಪಾನ ಮಾಡಬಾರದು ಎಂದು ಅನವಶ್ಯಕವಾಗಿ ಹೇಳುವುದು ಬೇಡ. ಬದಲಿಗೆ ಅದನ್ನು ಅನುಯಾಯಿಗಳಿಗೆ ಬಿಟ್ಟು ಬಿಡಬೇಕು. ಒಂದು ಕಾನೂನಾಗಿ ಅದನ್ನು ಅನುಯಾಯಿಗಳ ಮೇಲೆ ಹೇರಲು ಹೋಗಬಾರದು. ಈ ನಿಟ್ಟಿನಲ್ಲಿ ಬಾಬಾಸಾಹೇಬ್ ಅಂಬೇಡ್ಕರರ “ಬುದ್ಧ ಅಂಡ್ ಹಿಸ್ ಧಮ್ಮ” ಕೃತಿ ಓದದೆ, ಬುದ್ಧರ ಈ ಮಧ್ಯಮ ಮಾರ್ಗವನ್ನು ಅರ್ಥಮಾಡಿಕೊಳ್ಳದೆ ಇನ್ನೊಬ್ಬರ ಮೇಲೆ “ಮಾಂಸ ತಿನ್ನಬೇಡ, ಮದ್ಯಪಾನ ಮಾಡಬೇಡ” ಎಂದು ಕಾನೂನಿನ ರೀತಿ ಬಲವಂತ ಪಡಿಸಿದರೆ ಖಂಡಿತ ಅದು ಬೌದ್ಧ ಧರ್ಮದ ಬೆಳವಣಿಗೆಗೆ ಮಾರಕವಾಗಲಿದೆ.
–ರಘೋತ್ತಮ ಹೊ.ಬ
(ಈ ಲೇಖನಕ್ಕೆ ಆಧಾರ: Buddha and his Dhamma by Babasaheb Ambedkar, Pp.346& 347)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

ದಿನದ ಸುದ್ದಿ
ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
- ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
- ಇಂಡಿಯಾ ಗೇಟ್ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
- NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
- “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.
CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.
http://Visit : www.suddidina.com
ಇಂಡಿಯಾ ಗೇಟ್ನಿಂದ ಮೆರವಣಿಗೆ
ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.
ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.
‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’
ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.
“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.
“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ”
|
ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ
ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.
ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.
ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

-
ಅಂತರಂಗ7 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ4 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ5 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ4 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ5 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ5 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ5 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ



