Connect with us

ದಿನದ ಸುದ್ದಿ

ಬೌದ್ಧಧರ್ಮ ಮತ್ತು ಅಂಬೇಡ್ಕರ್ ಯಾನ

Published

on

  • ರಘೋತ್ತಮ ಹೊ.ಬ

ಬೌದ್ಧ ಧರ್ಮದಲ್ಲಿ ಎರಡು ಪಂಥಗಳಿವೆ.

  1. ಹೀನಯಾನ
  2. ಮಹಾಯಾನ

ಬಾಬಾಸಾಹೇಬ್ ಅಂಬೇಡ್ಕರ್ ರವರು ಬೌದ್ಧ ಧರ್ಮ ಸ್ವೀಕರಿಸಿದಾಗ ಅವರ ಪಂಥವನ್ನು ನವಯಾನ ಎಂದು ಕರೆದರು. ಹಾಗೆಯೇ ಮಹಾರಾಷ್ಟ್ರದ ಬೌದ್ಧರನ್ನು ನವಬೌದ್ಧರು ಅಥವಾ ಹೊಸಬೌದ್ಧರು ಎಂದು ಕರೆಯಲಾಗುತ್ತದೆ.

ಆದರೆ ಶೋಷಿತರು ಹಳೆಯ ಬೌದ್ಧರು. ಯಾಕೆಂದರೆ ಅಂಬೇಡ್ಕರರೇ ಒಂದೆಡೆ ಹೇಳಿದ್ದಾರೆ “ಏಷ್ಯಾ ಖಂಡದ ಬಹುಭಾಗವನ್ನು ಆಳಿದ ಭವ್ಯ ನಾಗ ಜನಾಂಗಕ್ಕೆ ಸೇರಿದವರು ನಾವು” ಎಂದು. ಈ ದಿಸೆಯಲ್ಲಿ ಸದ್ಯ “ಯಾನ” ಎಂದರೇನು? ಎಂಬುದರ ಬಗ್ಗೆ ಚರ್ಚೆ ಮಾಡುವ ಅಗತ್ಯವಿದೆ.

“ಯಾನ” ಎಂದರೆ ಪಯಣ ಎಂದರ್ಥ. ಅಂದರೆ ಬೌದ್ಧ ಪಯಣ ಎಂದರ್ಥ. Its way of life ಎನ್ನಬಹುದು. ಹಾಗಿದ್ದರೆ ಬಾಬಾಸಾಹೇಬ್ ಅಂಬೇಡ್ಕರ್ ರು ಬೌದ್ಧ ಧರ್ಮ ಸ್ವೀಕರಿಸಿದಾಗ ಆಗ ಅಸ್ತಿತ್ವದಲ್ಲಿದ್ದ ಬೌದ್ಧ ಧರ್ಮವನ್ನು ಯಥಾವತ್ ಸ್ವೀಕರಿಸಿದರೆ? ಊಹ್ಞೂಂ.

ನಿಜ ಹೇಳಬೇಕೆಂದರೆ ಬುದ್ಧ ಅರಮನೆ ತೊರೆದು ಪರಿವ್ರಾಜಕನಾಗಲು ಸಂಬಂಧಿಸಿದ ಮೂಲ ಕತೆಯಾದ, ಪ್ರಸಿದ್ಧ ಕತೆಯಾದ ಆತ ರೋಗಿಯೊಬ್ಬನನ್ನು ನೋಡಿದ, ವೃದ್ಧನೊಬ್ಬನನ್ನು ನೋಡಿದ, ಸತ್ತ ಮನುಷ್ಯನೊಬ್ಬನನ್ನು ನೋಡಿದ ಎಂಬ ಆ very basic ಸಾಂಪ್ರದಾಯಿಕ ಕತೆಯನ್ನೇ ಅಂಬೇಡ್ಕರರು ನಿರಾಕರಿಸಿದರು.

ಇದಕ್ಕೆ ಅವರು ಕೊಡುವ ಕಾರಣ “ಪರಿವ್ರಾಜಕ(ಸನ್ಯಾಸ)ವನ್ನು ಬುದ್ಧ ಸ್ವೀಕರಿಸಿದ್ದು ಆತನ 29ನೇ ವಯಸ್ಸಿನಲ್ಲಿ. ಆ ಮೂರು ದೃಶ್ಯಗಳನ್ನು(ರೋಗಿ, ವೃದ್ಧ, ಸತ್ತ ಮನುಷ್ಯ) ನೋಡಿ ಆತ ಸನ್ಯಾಸ ಸ್ವೀಕರಿಸಿದನೆನ್ನುವುದಾದರೆ ಅದಕ್ಕೂ ಮೊದಲು ಅಂದರೆ ಆತನ 29ನೇ ವಯಸ್ಸಿಗೂ ಮೊದಲು ಆ ಮೂರು ದೃಶ್ಯಗಳನ್ನು ಅತ ನೋಡಿಯೇ ಇರಲಿಲ್ಲ ಎನ್ನುವುದು ಅದು ಹೇಗೆ ಸಾಧ್ಯ?” ಎಂದು (Buddha and his Dhamma, by Ambedkar. Introduction page).

ಮುಂದುವರೆದು ಅವರು “ಮುಪ್ಪು, ರೋಗ, ಸಾವು ಇವು ದಿನಾಲೂ ನೂರಾರು ಸಂಖ್ಯೆಯಲ್ಲಿ ಸಂಭವಿಸುವ ಘಟನೆಗಳಾಗಿದ್ದು ಬುದ್ಧ ಅವುಗಳನ್ನು ನೋಡಿಯೇ ನೋಡಿರುತ್ತಾನೆ. ಆದ್ದರಿಂದ ಇವುಗಳನ್ನೆಲ್ಲ ಮೊದಲು ನೋಡಿ ಆತ ಪರಿವ್ರಾಜಕನಾದ ಎಂಬ ಸಾಂಪ್ರದಾಯಿಕ ವಿವರಣೆಯನ್ನು ಸ್ವೀಕರಿಸಲು ಸಾಧ್ಯವೇ ಇಲ್ಲ.

ಈ ನಿಟ್ಟಿನಲ್ಲಿ ಈ ವಿವರಣೆ ತೋರಿಕೆಯದ್ದಾಗಿದ್ದು, ಯಾರಾದರೂ ಪ್ರಶ್ನಿಸಿದಾಗ ಅವರಿಗೆ ಈ ವಿವರಣೆ ಅಕ್ಷರಶಃ ಒಪ್ಪಿಗೆಯಾಗುವಂಥದ್ದಲ್ಲ. ಹೀಗಿರುವಾಗ ಬುದ್ಧ ಅರಮನೆ ತೊರೆದು ಸನ್ಯಾಸ ಸ್ವೀಕರಿಸಲು ಇದು ಉತ್ತರ ಅಲ್ಲವಾದರೆ ನಿಜವಾದ ಉತ್ತರವಾದರು ಏನು?” ಎಂದು ಪ್ರಶ್ನಿಸುತ್ತಾರೆ. ಹಾಗೆಯೇ ಉತ್ತರವನ್ನು ಕಂಡುಕೊಳ್ಳುತ್ತಾರೆ.

ಒಟ್ಟಾರೆ ಅರ್ಥವಾಗುವುದು ಬುದ್ಧ ರೋಗಿಯೊಬ್ಬನನ್ನು, ವೃದ್ಧನೊಬ್ಬನನ್ನು, ಸತ್ತ ವ್ಯಕ್ತಿಯೊಬ್ಬನನ್ನು ನೋಡಿ ಅರಮನೆ ತೊರೆದ ಎಂಬ ಮೂಲ ಕತೆಯನ್ನೇ ಅಂಬೇಡ್ಕರ್ ರು ಒಪ್ಪಲಿಲ್ಲ. ಅದನ್ನು ಸಕಾರಣದ ಮೂಲಕ ಪ್ರಶ್ನಿಸಿ ಬೇರೆ ವಿವರಣೆ ಇರಬಹುದಾ ಎಂದು ಹುಡುಕಿದರು ಎಂಬುದು. ಇದಕ್ಕಾಗಿ ಅಂಬೇಡ್ಕರರು ಕಂಡುಕೊಂಡ ಉತ್ತರ, ಆ ಕಾಲದಲ್ಲಿ “ಶಾಕ್ಯರು ಮತ್ತು ಕೋಲೀಯ ಎಂಬ ರಾಜ್ಯಗಳ ನಡುವೆ ರೋಹಿಣಿ ನದಿ ನೀರಿನ ಹಂಚಿಕೆ ವಿಚಾರವಾಗಿ ಸಂಘರ್ಷ ನಡೆಯುತ್ತದೆ.

ಆ ಸಂಘರ್ಷದಲ್ಲಿ ಬುದ್ಧ ಪ್ರತಿನಿಧಿಸುವ ಶಾಕ್ಯನ್ನರ ಶಾಕ್ಯ ಸಂಘ ಕೋಲೀಯರ ಮೇಲೆ ಯುದ್ಧ ಸಾರುವ ಬಹುಮತದ ತೀರ್ಮಾನ ಕೈಗೊಳ್ಳುತ್ತದೆ. ಆದರೆ ಸಂಘಧ ಸದಸ್ಯನಾದ ರಾಜಕುಮಾರ ಸಿದ್ಧಾರ್ಥ(ಬುದ್ಧ) ಹಿಂಸೆಯ ಅಂಶ ಮುದ್ದೊಡ್ಡಿ ಸಂಘ ಕೈಗೊಂಡ ಈ ಯುದ್ಧದ ತೀರ್ಮಾನವನ್ನು ವಿರೋಧಿಸುತ್ತಾನೆ.

ಪರಿಣಾಮ ಸಂಘದ ನಿಯಮ ಉಲ್ಲಂಘಿಸಿದ ರಾಜಕುಮಾರ ಸಿದ್ಧಾರ್ಥ ಶಾಕ್ಯ ಸಂಘದ ನಿಯಮದಂತೆ ಸಂಘದಿಂದ ಶಿಕ್ಷೆಗೊಳಗಾಗುವ ಎಚ್ಚರಿಕೆ ಎದುರಿಸಬೇಕಾಗುತ್ತದೆ. ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಕೂಡ. ಇದರಂತೆ ಸಿದ್ಧಾರ್ಥನಿಗೆ ಮೂರು ಆಯ್ಕೆಗಳನ್ನು ನೀಡಲಾಗುತ್ತದೆ.

  1. ಶಾಕ್ಯ ಸಂಘದ ನಿಯಮವನ್ನು ಕಡೆ ಗಳಿಗೆಯಲ್ಲಾದರೂ ಒಪ್ಪಿ ಕೋಲೀಯರ ವಿರುದ್ಧದ ಯುದ್ಧದಲ್ಲಿ ಭಾಗವಹಿಸುವುದು.
  2. ಶಿಕ್ಷೆ ಅನುಭವಿಸಲು ಒಪ್ಪಿ ನೇಣು ಅಥವಾ ದೇಶಭ್ರಷ್ಟನಾಗಿ ಗಡಿಪಾರು ಶಿಕ್ಷೆ ಅನುಭವಿಸುವುದು.
  3. ಆತನ ಕುಟುಂಬದ ವಿರುದ್ಧ ಸಾಮಾಜಿಕ ಬಹಿಷ್ಕಾರ ಹಾಕಲು ಮತ್ತು ‌ಅವರ ಆಸ್ತಿಯನ್ನು ವಶಪಡಿಸಿಕೊಳ್ಳಲು ಸಂಘಕ್ಕೆ ಅನುಮತಿ ನೀಡುವುದು.

ಅಂದಹಾಗೆ ಶಾಂತಿ ಧೂತ ಬುದ್ಧ ಮೊದಲನೆಯ ತೀರ್ಮಾನ ಅಂದರೆ ಖಡಾಖಂಡಿತವಾಗಿ ಕೋಲೀಯರ ವಿರುದ್ಧ ಯುದ್ಧದಲ್ಲಿ ಭಾಗವಹಿಸಲು ನಿರಾಕರಿಸುತ್ತಾನೆ. ಮೂರನೆಯ ತೀರ್ಮಾನ ಅಂದರೆ ತನ್ನ ಕುಟುಂಬದ ಸದಸ್ಯರಿಗೆ ತನ್ನಿಂದ ತೊಂದರೆಯಾಗುವುದನ್ನು ಆತ ಒಪ್ಪುವುದಿಲ್ಲ.

ಈ ನಿಟ್ಟಿನಲ್ಲಿ ತಪ್ಪು ತನ್ನದಾಗಿರುವುದರಿಂದ ಶಿಕ್ಷೆ ತನಗೆ ಮಾತ್ರ ಸಲ್ಲಬೇಕು ಎಂದು ನೇಣು ಶಿಕ್ಷೆಗೆ ಅಥವಾ ರಾಜ್ಯದಿಂದ ಗಡಿಪಾರು ಶಿಕ್ಷೆಗೆ ತನ್ನನ್ನು ಒಳಪಡಿಸಬಹುದು ಎಂದು ಆತ ಶಾಕ್ಯ ಸಂಘಕ್ಕೆ ಹೇಳುತ್ತಾನೆ. ಅದರಂತೆ ಶಾಕ್ಯಸಂಘ ರಾಜಕುಮಾರ ಸಿದ್ಧಾರ್ಥನಿಗೆ ಗಡಿಪಾರು ಶಿಕ್ಷೆ ವಿಧಿಸುತ್ತದೆ, ಸಿದ್ಧಾರ್ಥ ರಾಜ್ಯ ತೊರೆಯುತ್ತಾನೆ.

ಅಂಬೇಡ್ಕರ್ ರು ಕೊಡುವ ಈ ವಿವರಣೆಯಲ್ಲಿ ಖಂಡಿತ ಅವಾಸ್ತವಿಕವಾದ ಅಂಶ ಕಿಂಚಿತ್ತು ಇಲ್ಲ. ನಿಜ, ಇಲ್ಲಿ ರೋಚಕತೆ ಇಲ್ಲದಿರಬಹುದು ಆದರೆ ರಾಜ್ಯ ತೊರೆಯಲು ಪ್ರಮುಖ ಕಾರಣವಂತು ಇದೇ ಆಗುತ್ತದೆ ಮತ್ತು ಇದನ್ನು ಯಾರೂ ಕೂಡ ಪ್ರಶ್ನಿಸಲಾರರು. ಹಾಗಿದ್ದರೆ ಇದಕ್ಕೆ ಆಕರ ಗ್ರಂಥವಾಗಿ ಅಂಬೇಡ್ಕರ್ ರು ಯಾವ ಗ್ರಂಥ ಬಳಸುತ್ತಾರೆ? ಅದಕ್ಕೂ ಕೂಡ ಉತ್ತರ ಇದೆ.

ಅದೆಂದರೆ ಅಂಬೇಡ್ಕರ್ ರವರು ಮೆಟ್ರಿಕ್ಯುಲೇಷನ್ ಪರೀಕ್ಷೆ ಪಾಸು ಮಾಡಿದಾಗ ಸನ್ಮಾನ ಸಮಾರಂಭವೊಂದರಲ್ಲಿ ಅತಿಥಿಯೊಬ್ಬರು ತಾವೇ ಬರೆದ ಗೌತಮ ಬುದ್ಧರ ಜೀವನ ಚರಿತ್ರೆಯ ಪುಸ್ತಕವನ್ನು ಬಾಲಕ ಅಂಬೇಡ್ಕರ್ ಗೆ ಕೊಡುತ್ತಾರೆ ಎಂಬ ವಿಚಾರ ಎಲ್ಲರಿಗೂ ಗೊತ್ತು.

ಮರಾಠಿಯಲ್ಲಿ ಬುದ್ಧನ ಆ ಜೀವನ ಚರಿತ್ರೆ ಬರೆದು(ಬರೆದ ವರ್ಷ 1898) ಬಾಲಕ ಅಂಬೇಡ್ಕರರಿಗೆ ಕೊಡುಗೆ ಇತ್ತವರು ಅಂದಿನ ಸಮಾಜ ಸುಧಾರಕರಾದ ಬಾಂಬೆಯ ವಿಲ್ಸನ್ ಹೈಸ್ಕೂಲ್ ನ ಮಾಜಿ ಪ್ರಾಂಶುಪಾಲರಾದ ಕೃಷ್ಣಾಜಿ ಅರ್ಜುನ್ ಕೆಲೂಸ್ಕರ್ ರವರು. ಈ ನಿಟ್ಟಿನಲ್ಲಿ ರೋಹಿಣಿ ನದಿಯ ನೀರಿನ ವಿಚಾರವಾಗಿ ಸಿದ್ಧಾರ್ಥನು ರಾಜ್ಯ ತೊರೆದ ಪ್ರಸಂಗವನ್ನು ಅಂಬೇಡ್ಕರರು ತಾವು ಪಡೆದದ್ದು ಕೆಲೂಸ್ಕರ್ ರ ಆ ಕೃತಿಯಲ್ಲೇ!

ನಾಲ್ಕು ಆರ್ಯ ಸತ್ಯಗಳನ್ನು ಒಪ್ಪದ ಅಂಬೇಡ್ಕರರು: ಬೌದ್ಧ ಧರ್ಮದಲ್ಲಿ ನಾಲ್ಕು ಆರ್ಯ ಸತ್ಯಗಳು ಎಂಬ ಪ್ರಮುಖ ಅಂಶ ಬರುತ್ತದೆ. ಸಾಮಾನ್ಯವಾಗಿ ಮಹಾಬೋಧಿ ಸೊಸೈಟಿ ಪ್ರಕಟಿಸುವ ಕೃತಿಗಳನ್ನು ಓದಿದ ಬೌದ್ಧರಿಗೆ ಅವು ಯಾವುವು ಎಂದು ತಿಳಿದಿರುತ್ತವೆ.

ಅವುಗಳೆಂದರೆ

  • ದುಃಖ ಸತ್ಯ
  • ದುಃಖಕ್ಕೆ ಮೂಲ ಇದೆ ಎಂಬ ಸತ್ಯ
  • ದುಃಖವನ್ನು ಕೊನೆಗಾಣಿಸಬಹುದು ಎಂಬ ಸತ್ಯ
  • ಆ ದುಃಖವನ್ನು ಕೊನೆಗಾಣಿಸುವ ಮಾರ್ಗ ಯಾವುದೆಂಬ ಸತ್ಯ.

ಆಶ್ಚರ್ಯವೆಂದರೆ ಬಾಬಾಸಾಹೇಬ್ ಅಂಬೇಡ್ಕರ್ ರವರು ಈ ನಾಲ್ಕು ಆರ್ಯ ಸತ್ಯಗಳನ್ನು ಒಪ್ಪುವುದಿಲ್ಲ. ಅವರು ಹೇಳುವುದು “ಈ ಆರ್ಯ ಸತ್ಯಗಳ ಸೂತ್ರ ಬೌದ್ಧ ಧರ್ಮದ ಮೂಲ ಬೇರನ್ನೇ ಕತ್ತರಿಸುತ್ತದೆ” ಎಂದು. ಏಕೆಂದರೆ ಅವರು ಹೇಳುವುದು “ಆರ್ಯ ಸತ್ಯಗಳ ಪ್ರಕಾರ ಈ ಜೀವನ ದುಃಖ, ಸಾವು ಕೂಡ ದುಃಖ, ಪುನರ್ಜನ್ಮ ಕೂಡ ದುಃಖ, ಆದ್ದರಿಂದ ಪ್ರತಿಯೊಂದಕ್ಕೂ ಕೊನೆ ಎಂಬುದಿದೆ ಎಂದಾದರೆ ತತ್ವಜ್ಞಾನವಿರಲಿ ಅಥವಾ ಧರ್ಮವಿರಲಿ ಯಾವುದೂ ಕೂಡ ಈ ಪ್ರಪಂಚದಲ್ಲಿ ಮನುಷ್ಯ ಸಂತಸದಿಂದಿರಲು ಸಹಾಯ ಮಾಡುವುದಿಲ್ಲ.

ಏಕೆಂದರೆ ದುಃಖದಿಂದ ತಪ್ಪಿಸಿಕೊಳ್ಳಲು ಸಾಧ್ಯ ಇಲ್ಲ ಎನ್ನುವುದಾದರೆ ಜೀವನದಲ್ಲಿ ಸಹಜವಾಗಿ ಅಂತರ್ಗತವಾಗಿರುವ ಆ ದುಃಖದಿಂದ ಮನುಷ್ಯನನ್ನು ತಪ್ಪಿಸಲು ಬುದ್ಧನಾದರೂ ಏನು ಮಾಡಲು ಸಾಧ್ಯ? ಧರ್ಮವಾದರೂ ಏನು ಮಾಡಲು ಸಾಧ್ಯ? ಆದ್ದರಿಂದ ನಾಲ್ಕು ಆರ್ಯ ಸತ್ಯಗಳು ಮನುಷ್ಯನಿಗೆ ಭರವಸೆಯನ್ನು ನಿರಾಕರಿಸುತ್ತವೆ. ಈ ನಿಟ್ಟಿನಲ್ಲಿ ಆ ನಾಲ್ಕು ಆರ್ಯ ಸತ್ಯಗಳು ಬುದ್ಧನ ಬೋಧನೆಗಳನ್ನು ನಿರಾಶವಾದದ ಬೋಧನೆಗಳನ್ನಾಗಿ ಮಾಡುತ್ತವೆ” ಎನ್ನುತ್ತಾರೆ.

ಅದರಲ್ಲೂ ಅವರು ಹೇಳುವುದು “ಬೌದ್ಧರಲ್ಲದವರಿಗೆ ಬೌದ್ಧ ಧರ್ಮದ ಬೋಧನೆಗಳನ್ನು ಒಪ್ಪಲು ಈ ನಾಲ್ಕು ಆರ್ಯಸತ್ಯಗಳು ಬಹುದೊಡ್ಡ ತಡೆಯಾಗಿವೆ” ಎಂದು. ಈ ಹಿನ್ನೆಲೆಯಲ್ಲಿ ಅವರು ಅನುಮಾನ ವ್ಯಕ್ತಪಡಿಸುವುದು ಇವು ಈ ನಾಲ್ಕು ಆರ್ಯ ಸತ್ಯಗಳು ಬುದ್ಧನ ಬೋಧನೆಯ ಮೂಲ ತಿರುಳಾಗಿತ್ತೇ ಅಥವಾ ಇವು ಭಿಕ್ಕುಗಳು ನಂತರ ಸೇರಿಸಿದ ಅಂಶಗಳಾಗಿರಬಹುದೇ ಎಂದು.

ಮುಂದುವರಿದು ಅಂಬೇಡ್ಕರರು “ಭಿಕ್ಕುಗಳನ್ನು ಬುದ್ಧ ಸೃಷ್ಟಿಸಿದ್ದೇತಕೆ?” ಎಂಬ ಪ್ರಶ್ನೆಯನ್ನೂ ಕೇಳುತ್ತಾರೆ. ಅದಕ್ಕೆ ಅವರು ಹೇಳುವುದು “ಬುದ್ಧ, ಭಿಕ್ಕು ಗಣವನ್ನು ಅವರು ಪರಿಪೂರ್ಣ ಮನುಷ್ಯರಾಗಲಿ ಎಂದು ಸೃಷ್ಟಿಸಿದನೇ ಅಥವಾ ಸಮಾಜ ಸೇವಕರಾಗಿ ಜನತೆಗೆ ಸ್ನೇಹಿತರಾಗಿ, ಮಾರ್ಗದರ್ಶಕರಾಗಿ, ತತ್ವಜ್ಞಾನಿಗಳಾಗಿ ಜನರಿಗಾಗಿ ತಮ್ಮ ಜೀವನ ಮುಡಿಪಿಡಲಿ ಎಂದು ಸೃಷ್ಟಿಸಿದನೇ? ಈ ದಿಸೆಯಲ್ಲಿ ಭಿಕ್ಕು ಪರಿಪೂರ್ಣ ಮನುಷ್ಯನಾದರೆ ಧಮ್ಮದ ಬೆಳವಣಿಗೆಯ ಹಿನ್ನೆಲೆಯಲ್ಲಿ ಆತ ಉಪಯೋಗಕ್ಕೆ ಬರುವುದಿಲ್ಲ.

ಏಕೆಂದರೆ ಮನುಷ್ಯ ಪರಿಪೂರ್ಣನಾದರೂ ಆತ ಸ್ವಾರ್ಥಿಯಾಗಿರುತ್ತಾನೆ. ಆದರೆ ಭಿಕ್ಕು ಸಮಾಜ ಸೇವಕನಾದರೆ ಖಂಡಿತ ಬೌದ್ಧ ಧರ್ಮಕ್ಕೆ ಆತ ಬಹು ದೊಡ್ಡ ಭರವಸೆಯಾಗುತ್ತಾನೆ” ಎನ್ನುತ್ತಾರೆ.(ಆಧಾರ: Buddha and His Dhamma, Ambedkar writings and speeches, Vol.11, introduction part).

ಖಂಡಿತ, ಬುದ್ಧ ಪರಿವ್ರಾಜಕ(ಸನ್ಯಾಸ) ಸ್ವೀಕರಿಸಲು ಬಾಬಾಸಾಹೇಬ್ ಅಂಬೇಡ್ಕರ್ ರವರು ಹೇಳುವ ಈ ಕತೆ, ನಾಲ್ಕು ಆರ್ಯ ಸತ್ಯಗಳನ್ನು ಅವರು ಒಪ್ಪದಿರುವುದು, ಹಾಗೆ ಭಿಕ್ಕುಗಳನ್ನು ಸಮಾಜ ಸೇವಕರು ಎನ್ನುವ ಅವರ ವ್ಯಾಖ್ಯೆ ಅಕ್ಷರಶಃ ಬೌದ್ಧ ಧರ್ಮಕ್ಕೆ ಹೊಸ ರೂಪ ಕೊಡುತ್ತದೆ.

ಈ ನಿಟ್ಟಿನಲ್ಲಿ ಆ ರೂಪವನ್ನು ನಾವು ನಿಸ್ಸಂಶಯವಾಗಿ ಅಂಬೇಡ್ಕರ್ ಹಾದಿ ಎನ್ನಬಹುದು, ಹೀನಯಾನ ಮತ್ತು ಮಹಾಯಾನದಂತೆ “ಅಂಬೇಡ್ಕರ್ ಯಾನ” ಎನ್ನಬಹುದು. ಬುದ್ಧನ ಹಾದಿಯಲ್ಲಿಂದು ಕೋಟ್ಯಂತರ ಜನರು ಸಾಗುತ್ತಿದ್ದಾರೆ. ಅದರಲ್ಲೂ ಶೋಷಿತ ಸಮುದಾಯಗಳ ಬಂಧುಗಳು ಬುದ್ಧನೆಡೆ ದಿಟ್ಟಹೆಜ್ಜೆ ಇಟ್ಟಿದ್ದಾರೆ. ಖಂಡಿತ, ಅಂತಹವರೆಲ್ಲರಿಗೆ ಅಂಬೇಡ್ಕರ್ ಯಾನ ಹೊಸ ಮಾರ್ಗ ಆಗಲಿದೆ ಹೊಸ ಬೆಳಕು ಆಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.

ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending