ಬಹಿರಂಗ
ಬೌದ್ಧ ಧರ್ಮ ಮತ್ತು ಅಂಬೇಡ್ಕರ್ ಯಾನ
ಬೌದ್ಧ ಧರ್ಮದಲ್ಲಿ ಎರಡು ಪಂಥಗಳಿವೆ. 1.ಹೀನಯಾನ 2.ಮಹಾಯಾನ. ಬಾಬಾಸಾಹೇಬ್ ಅಂಬೇಡ್ಕರ್ ರವರು ಬೌದ್ಧ ಧರ್ಮ ಸ್ವೀಕರಿಸಿದಾಗ ಅವರ ಪಂಥವನ್ನು ನವಯಾನ ಎಂದು ಕರೆದರು. ಹಾಗೆಯೇ ಮಹಾರಾಷ್ಟ್ರದ ಬೌದ್ಧರನ್ನು ನವಬೌದ್ಧರು ಅಥವಾ ಹೊಸಬೌದ್ಧರು ಎಂದು ಕರೆಯಲಾಗುತ್ತದೆ. ಆದರೆ ಶೋಷಿತರು ಹಳೆಯ ಬೌದ್ಧರು. ಯಾಕೆಂದರೆ ಅಂಬೇಡ್ಕರರೇ ಒಂದೆಡೆ ಹೇಳಿದ್ದಾರೆ “ಏಷ್ಯಾ ಖಂಡದ ಬಹುಭಾಗವನ್ನು ಆಳಿದ ಭವ್ಯ ನಾಗ ಜನಾಂಗಕ್ಕೆ ಸೇರಿದವರು ನಾವು” ಎಂದು. ಈ ದಿಸೆಯಲ್ಲಿ ಸದ್ಯ “ಯಾನ” ಎಂದರೇನು? ಎಂಬುದರ ಬಗ್ಗೆ ಚರ್ಚೆ ಮಾಡುವ ಅಗತ್ಯವಿದೆ.
“ಯಾನ” ಎಂದರೆ ಪಯಣ ಎಂದರ್ಥ. ಅಂದರೆ ಬೌದ್ಧ ಪಯಣ ಎಂದರ್ಥ. Its way of life ಎನ್ನಬಹುದು. ಹಾಗಿದ್ದರೆ ಬಾಬಾಸಾಹೇಬ್ ಅಂಬೇಡ್ಕರ್ ರು ಬೌದ್ಧ ಧರ್ಮ ಸ್ವೀಕರಿಸಿದಾಗ ಆಗ ಅಸ್ತಿತ್ವದಲ್ಲಿದ್ದ ಬೌದ್ಧ ಧರ್ಮವನ್ನು ಯಥಾವತ್ ಸ್ವೀಕರಿಸಿದರೆ? ಊಹ್ಞೂಂ. ನಿಜ ಹೇಳಬೇಕೆಂದರೆ ಬುದ್ಧ ಅರಮನೆ ತೊರೆದು ಪರಿವ್ರಾಜಕನಾಗಲು ಸಂಬಂಧಿಸಿದ ಮೂಲ ಕತೆಯಾದ, ಪ್ರಸಿದ್ಧ ಕತೆಯಾದ ಆತ ರೋಗಿಯೊಬ್ಬನನ್ನು ನೋಡಿದ, ವೃದ್ಧನೊಬ್ಬನನ್ನು ನೋಡಿದ, ಸತ್ತ ಮನುಷ್ಯನೊಬ್ಬನನ್ನು ನೋಡಿದ ಎಂಬ ಆ very basic ಸಾಂಪ್ರದಾಯಿಕ ಕತೆಯನ್ನೇ ಅಂಬೇಡ್ಕರರು ನಿರಾಕರಿಸಿದರು. ಇದಕ್ಕೆ ಅವರು ಕೊಡುವ ಕಾರಣ “ಪರಿವ್ರಾಜಕ(ಸನ್ಯಾಸ)ವನ್ನು ಬುದ್ಧ ಸ್ವೀಕರಿಸಿದ್ದು ಆತನ 29ನೇ ವಯಸ್ಸಿನಲ್ಲಿ. ಆ ಮೂರು ದೃಶ್ಯಗಳನ್ನು(ರೋಗಿ, ವೃದ್ಧ, ಸತ್ತ ಮನುಷ್ಯ) ನೋಡಿ ಆತ ಸನ್ಯಾಸ ಸ್ವೀಕರಿಸಿದನೆನ್ನುವುದಾದರೆ ಅದಕ್ಕೂ ಮೊದಲು ಅಂದರೆ ಆತನ 29ನೇ ವಯಸ್ಸಿಗೂ ಮೊದಲು ಆ ಮೂರು ದೃಶ್ಯಗಳನ್ನು ಅತ ನೋಡಿಯೇ ಇರಲಿಲ್ಲ ಎನ್ನುವುದು ಅದು ಹೇಗೆ ಸಾಧ್ಯ?” ಎಂದು (Buddha and his Dhamma, by Ambedkar. Introduction page). ಮುಂದುವರೆದು ಅವರು “ಮುಪ್ಪು, ರೋಗ, ಸಾವು ಇವು ದಿನಾಲೂ ನೂರಾರು ಸಂಖ್ಯೆಯಲ್ಲಿ ಸಂಭವಿಸುವ ಘಟನೆಗಳಾಗಿದ್ದು ಬುದ್ಧ ಅವುಗಳನ್ನು ನೋಡಿಯೇ ನೋಡಿರುತ್ತಾನೆ.
ಆದ್ದರಿಂದ ಇವುಗಳನ್ನೆಲ್ಲ ಮೊದಲು ನೋಡಿ ಆತ ಪರಿವ್ರಾಜಕನಾದ ಎಂಬ ಸಾಂಪ್ರದಾಯಿಕ ವಿವರಣೆಯನ್ನು ಸ್ವೀಕರಿಸಲು ಸಾಧ್ಯವೇ ಇಲ್ಲ. ಈ ನಿಟ್ಟಿನಲ್ಲಿ ಈ ವಿವರಣೆ ತೋರಿಕೆಯದ್ದಾಗಿದ್ದು, ಯಾರಾದರೂ ಪ್ರಶ್ನಿಸಿದಾಗ ಅವರಿಗೆ ಈ ವಿವರಣೆ ಅಕ್ಷರಶಃ ಒಪ್ಪಿಗೆಯಾಗುವಂಥದ್ದಲ್ಲ. ಹೀಗಿರುವಾಗ ಬುದ್ಧ ಅರಮನೆ ತೊರೆದು ಸನ್ಯಾಸ ಸ್ವೀಕರಿಸಲು ಇದು ಉತ್ತರ ಅಲ್ಲವಾದರೆ ನಿಜವಾದ ಉತ್ತರವಾದರು ಏನು?” ಎಂದು ಪ್ರಶ್ನಿಸುತ್ತಾರೆ. ಹಾಗೆಯೇ ಉತ್ತರವನ್ನು ಕಂಡುಕೊಳ್ಳುತ್ತಾರೆ.
ಒಟ್ಟಾರೆ ಅರ್ಥವಾಗುವುದು ಬುದ್ಧ ರೋಗಿಯೊಬ್ಬನನ್ನು, ವೃದ್ಧನೊಬ್ಬನನ್ನು, ಸತ್ತ ವ್ಯಕ್ತಿಯೊಬ್ಬನನ್ನು ನೋಡಿ ಅರಮನೆ ತೊರೆದ ಎಂಬ ಮೂಲ ಕತೆಯನ್ನೇ ಅಂಬೇಡ್ಕರ್ ರು ಒಪ್ಪಲಿಲ್ಲ. ಅದನ್ನು ಸಕಾರಣದ ಮೂಲಕ ಪ್ರಶ್ನಿಸಿ ಬೇರೆ ವಿವರಣೆ ಇರಬಹುದಾ ಎಂದು ಹುಡುಕಿದರು ಎಂಬುದು. ಇದಕ್ಕಾಗಿ ಅಂಬೇಡ್ಕರರು ಕಂಡುಕೊಂಡ ಉತ್ತರ, ಆ ಕಾಲದಲ್ಲಿ “ಶಾಕ್ಯರು ಮತ್ತು ಕೋಲೀಯ ಎಂಬ ರಾಜ್ಯಗಳ ನಡುವೆ ರೋಹಿಣಿ ನದಿ ನೀರಿನ ಹಂಚಿಕೆ ವಿಚಾರವಾಗಿ ಸಂಘರ್ಷ ನಡೆಯುತ್ತದೆ. ಆ ಸಂಘರ್ಷದಲ್ಲಿ ಬುದ್ಧ ಪ್ರತಿನಿಧಿಸುವ ಶಾಕ್ಯನ್ನರ ಶಾಕ್ಯ ಸಂಘ ಕೋಲೀಯರ ಮೇಲೆ ಯುದ್ಧ ಸಾರುವ ಬಹುಮತದ ತೀರ್ಮಾನ ಕೈಗೊಳ್ಳುತ್ತದೆ. ಆದರೆ ಸಂಘಧ ಸದಸ್ಯನಾದ ರಾಜಕುಮಾರ ಸಿದ್ಧಾರ್ಥ(ಬುದ್ಧ) ಹಿಂಸೆಯ ಅಂಶ ಮುದ್ದೊಡ್ಡಿ ಸಂಘ ಕೈಗೊಂಡ ಈ ಯುದ್ಧದ ತೀರ್ಮಾನವನ್ನು ವಿರೋಧಿಸುತ್ತಾನೆ. ಪರಿಣಾಮ ಸಂಘದ ನಿಯಮ ಉಲ್ಲಂಘಿಸಿದ ರಾಜಕುಮಾರ ಸಿದ್ಧಾರ್ಥ ಶಾಕ್ಯ ಸಂಘದ ನಿಯಮದಂತೆ ಸಂಘದಿಂದ ಶಿಕ್ಷೆಗೊಳಗಾಗುವ ಎಚ್ಚರಿಕೆ ಎದುರಿಸಬೇಕಾಗುತ್ತದೆ. ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಕೂಡ. ಇದರಂತೆ ಸಿದ್ಧಾರ್ಥನಿಗೆ ಮೂರು ಆಯ್ಕೆಗಳನ್ನು ನೀಡಲಾಗುತ್ತದೆ.
- ಶಾಕ್ಯ ಸಂಘದ ನಿಯಮವನ್ನು ಕಡೆ ಗಳಿಗೆಯಲ್ಲಾದರೂ ಒಪ್ಪಿ ಕೋಲೀಯರ ವಿರುದ್ಧದ ಯುದ್ಧದಲ್ಲಿ ಭಾಗವಹಿಸುವುದು.
- ಶಿಕ್ಷೆ ಅನುಭವಿಸಲು ಒಪ್ಪಿ ನೇಣು ಅಥವಾ ದೇಶಭ್ರಷ್ಟನಾಗಿ ಗಡಿಪಾರು ಶಿಕ್ಷೆ ಅನುಭವಿಸುವುದು.
- ಆತನ ಕುಟುಂಬದ ವಿರುದ್ಧ ಸಾಮಾಜಿಕ ಬಹಿಷ್ಕಾರ ಹಾಕಲು ಮತ್ತು ಅವರ ಆಸ್ತಿಯನ್ನು ವಶಪಡಿಸಿಕೊಳ್ಳಲು ಸಂಘಕ್ಕೆ ಅನುಮತಿ ನೀಡುವುದು.
ಅಂದಹಾಗೆ ಶಾಂತಿ ಧೂತ ಬುದ್ಧ ಮೊದಲನೆಯ ತೀರ್ಮಾನ ಅಂದರೆ ಖಡಾಖಂಡಿತವಾಗಿ ಕೋಲೀಯರ ವಿರುದ್ಧ ಯುದ್ಧದಲ್ಲಿ
ಭಾಗವಹಿಸಲು ನಿರಾಕರಿಸುತ್ತಾನೆ. ಮೂರನೆಯ ತೀರ್ಮಾನ ಅಂದರೆ ತನ್ನ ಕುಟುಂಬದ ಸದಸ್ಯರಿಗೆ ತನ್ನಿಂದ ತೊಂದರೆಯಾಗುವುದನ್ನು ಆತ ಒಪ್ಪುವುದಿಲ್ಲ. ಈ ನಿಟ್ಟಿನಲ್ಲಿ ತಪ್ಪು ತನ್ನದಾಗಿರುವುದರಿಂದ ಶಿಕ್ಷೆ ತನಗೆ ಮಾತ್ರ ಸಲ್ಲಬೇಕು ಎಂದು ನೇಣು ಶಿಕ್ಷೆಗೆ ಅಥವಾ ರಾಜ್ಯದಿಂದ ಗಡಿಪಾರು ಶಿಕ್ಷೆಗೆ ತನ್ನನ್ನು ಒಳಪಡಿಸಬಹುದು ಎಂದು ಆತ ಶಾಕ್ಯ ಸಂಘಕ್ಕೆ ಹೇಳುತ್ತಾನೆ. ಅದರಂತೆ ಶಾಕ್ಯಸಂಘ ರಾಜಕುಮಾರ ಸಿದ್ಧಾರ್ಥನಿಗೆ ಗಡಿಪಾರು ಶಿಕ್ಷೆ ವಿಧಿಸುತ್ತದೆ, ಸಿದ್ಧಾರ್ಥ ರಾಜ್ಯ ತೊರೆಯುತ್ತಾನೆ.
ಅಂಬೇಡ್ಕರ್ ರು ಕೊಡುವ ಈ ವಿವರಣೆಯಲ್ಲಿ ಖಂಡಿತ ಅವಾಸ್ತವಿಕವಾದ ಅಂಶ ಕಿಂಚಿತ್ತು ಇಲ್ಲ. ನಿಜ, ಇಲ್ಲಿ ರೋಚಕತೆ ಇಲ್ಲದಿರಬಹುದು ಆದರೆ ರಾಜ್ಯ ತೊರೆಯಲು ಪ್ರಮುಖ ಕಾರಣವಂತು ಇದೇ ಆಗುತ್ತದೆ ಮತ್ತು ಇದನ್ನು ಯಾರೂ ಕೂಡ ಪ್ರಶ್ನಿಸಲಾರರು. ಹಾಗಿದ್ದರೆ ಇದಕ್ಕೆ ಆಕರ ಗ್ರಂಥವಾಗಿ ಅಂಬೇಡ್ಕರ್ ರು ಯಾವ ಗ್ರಂಥ ಬಳಸುತ್ತಾರೆ? ಅದಕ್ಕೂ ಕೂಡ ಉತ್ತರ ಇದೆ. ಅದೆಂದರೆ ಅಂಬೇಡ್ಕರ್ ರವರು ಮೆಟ್ರಿಕ್ಯುಲೇಷನ್ ಪರೀಕ್ಷೆ ಪಾಸು ಮಾಡಿದಾಗ ಸನ್ಮಾನ ಸಮಾರಂಭವೊಂದರಲ್ಲಿ ಅತಿಥಿಯೊಬ್ಬರು ತಾವೇ ಬರೆದ ಗೌತಮ ಬುದ್ಧರ ಜೀವನ ಚರಿತ್ರೆಯ ಪುಸ್ತಕವನ್ನು ಬಾಲಕ ಅಂಬೇಡ್ಕರ್ ಗೆ ಕೊಡುತ್ತಾರೆ ಎಂಬ ವಿಚಾರ ಎಲ್ಲರಿಗೂ ಗೊತ್ತು. ಮರಾಠಿಯಲ್ಲಿ ಬುದ್ಧನ ಆ ಜೀವನ ಚರಿತ್ರೆ ಬರೆದು(ಬರೆದ ವರ್ಷ 1898) ಬಾಲಕ ಅಂಬೇಡ್ಕರರಿಗೆ ಕೊಡುಗೆ ಇತ್ತವರು ಅಂದಿನ ಸಮಾಜ ಸುಧಾರಕರಾದ ಬಾಂಬೆಯ ವಿಲ್ಸನ್ ಹೈಸ್ಕೂಲ್ ನ ಮಾಜಿ ಪ್ರಾಂಶುಪಾಲರಾದ ಕೃಷ್ಣಾಜಿ ಅರ್ಜುನ್ ಕೆಲೂಸ್ಕರ್ ರವರು. ಈ ನಿಟ್ಟಿನಲ್ಲಿ ರೋಹಿಣಿ ನದಿಯ ನೀರಿನ ವಿಚಾರವಾಗಿ ಸಿದ್ಧಾರ್ಥನು ರಾಜ್ಯ ತೊರೆದ ಪ್ರಸಂಗವನ್ನು ಅಂಬೇಡ್ಕರರು ತಾವು ಪಡೆದದ್ದು ಕೆಲೂಸ್ಕರ್ ರ ಆ ಕೃತಿಯಲ್ಲೇ!
ನಾಲ್ಕು ಆರ್ಯ ಸತ್ಯಗಳನ್ನು ಒಪ್ಪದ ಅಂಬೇಡ್ಕರರು
ಬೌದ್ಧ ಧರ್ಮದಲ್ಲಿ ನಾಲ್ಕು ಆರ್ಯ ಸತ್ಯಗಳು ಎಂಬ ಪ್ರಮುಖ ಅಂಶ ಬರುತ್ತದೆ. ಸಾಮಾನ್ಯವಾಗಿ ಮಹಾಬೋಧಿ ಸೊಸೈಟಿ ಪ್ರಕಟಿಸುವ ಕೃತಿಗಳನ್ನು ಓದಿದ ಬೌದ್ಧರಿಗೆ ಅವು ಯಾವುವು ಎಂದು ತಿಳಿದಿರುತ್ತವೆ. ಅವುಗಳೆಂದರೆ 1.ದುಃಖ ಸತ್ಯ. 2.ದುಃಖಕ್ಕೆ ಮೂಲ ಇದೆ ಎಂಬ ಸತ್ಯ. 3.ದುಃಖವನ್ನು ಕೊನೆಗಾಣಿಸಬಹುದು ಎಂಬ ಸತ್ಯ. 4.ಆ ದುಃಖವನ್ನು ಕೊನೆಗಾಣಿಸುವ ಮಾರ್ಗ ಯಾವುದೆಂಬ ಸತ್ಯ.
ಆಶ್ಚರ್ಯವೆಂದರೆ ಬಾಬಾಸಾಹೇಬ್ ಅಂಬೇಡ್ಕರ್ ರವರು ಈ ನಾಲ್ಕು ಆರ್ಯ ಸತ್ಯಗಳನ್ನು ಒಪ್ಪುವುದಿಲ್ಲ. ಅವರು ಹೇಳುವುದು “ಈ ಆರ್ಯ ಸತ್ಯಗಳ ಸೂತ್ರ ಬೌದ್ಧ ಧರ್ಮದ ಮೂಲ ಬೇರನ್ನೇ ಕತ್ತರಿಸುತ್ತದೆ” ಎಂದು. ಏಕೆಂದರೆ ಅವರು ಹೇಳುವುದು “ಆರ್ಯ ಸತ್ಯಗಳ ಪ್ರಕಾರ ಈ ಜೀವನ ದುಃಖ, ಸಾವು ಕೂಡ ದುಃಖ, ಪುನರ್ಜನ್ಮ ಕೂಡ ದುಃಖ, ಆದ್ದರಿಂದ ಪ್ರತಿಯೊಂದಕ್ಕೂ ಕೊನೆ ಎಂಬುದಿದೆ ಎಂದಾದರೆ ತತ್ವಜ್ಞಾನವಿರಲಿ ಅಥವಾ ಧರ್ಮವಿರಲಿ ಯಾವುದೂ ಕೂಡ ಈ ಪ್ರಪಂಚದಲ್ಲಿ ಮನುಷ್ಯ ಸಂತಸದಿಂದಿರಲು ಸಹಾಯ ಮಾಡುವುದಿಲ್ಲ. ಏಕೆಂದರೆ ದುಃಖದಿಂದ ತಪ್ಪಿಸಿಕೊಳ್ಳಲು ಸಾಧ್ಯ ಇಲ್ಲ ಎನ್ನುವುದಾದರೆ ಜೀವನದಲ್ಲಿ ಸಹಜವಾಗಿ ಅಂತರ್ಗತವಾಗಿರುವ ಆ ದುಃಖದಿಂದ ಮನುಷ್ಯನನ್ನು ತಪ್ಪಿಸಲು ಬುದ್ಧನಾದರೂ ಏನು ಮಾಡಲು ಸಾಧ್ಯ? ಧರ್ಮವಾದರೂ ಏನು ಮಾಡಲು ಸಾಧ್ಯ?
ಆದ್ದರಿಂದ ನಾಲ್ಕು ಆರ್ಯ ಸತ್ಯಗಳು ಮನುಷ್ಯನಿಗೆ ಭರವಸೆಯನ್ನು ನಿರಾಕರಿಸುತ್ತವೆ. ಈ ನಿಟ್ಟಿನಲ್ಲಿ ಆ ನಾಲ್ಕು ಆರ್ಯ ಸತ್ಯಗಳು ಬುದ್ಧನ ಬೋಧನೆಗಳನ್ನು ನಿರಾಶವಾದದ ಬೋಧನೆಗಳನ್ನಾಗಿ ಮಾಡುತ್ತವೆ” ಎನ್ನುತ್ತಾರೆ. ಅದರಲ್ಲೂ ಅವರು ಹೇಳುವುದು “ಬೌದ್ಧರಲ್ಲದವರಿಗೆ ಬೌದ್ಧ ಧರ್ಮದ ಬೋಧನೆಗಳನ್ನು ಒಪ್ಪಲು ಈ ನಾಲ್ಕು ಆರ್ಯಸತ್ಯಗಳು ಬಹುದೊಡ್ಡ ತಡೆಯಾಗಿವೆ” ಎಂದು. ಈ ಹಿನ್ನೆಲೆಯಲ್ಲಿ ಅವರು ಅನುಮಾನ ವ್ಯಕ್ತಪಡಿಸುವುದು ಇವು ಈ ನಾಲ್ಕು ಆರ್ಯ ಸತ್ಯಗಳು ಬುದ್ಧನ ಬೋಧನೆಯ ಮೂಲ ತಿರುಳಾಗಿತ್ತೇ ಅಥವಾ ಇವು ಭಿಕ್ಕುಗಳು ನಂತರ ಸೇರಿಸಿದ ಅಂಶಗಳಾಗಿರಬಹುದೇ ಎಂದು.
ಮುಂದುವರಿದು ಅಂಬೇಡ್ಕರರು “ಭಿಕ್ಕುಗಳನ್ನು ಬುದ್ಧ ಸೃಷ್ಟಿಸಿದ್ದೇತಕೆ?” ಎಂಬ ಪ್ರಶ್ನೆಯನ್ನೂ ಕೇಳುತ್ತಾರೆ. ಅದಕ್ಕೆ ಅವರು ಹೇಳುವುದು “ಬುದ್ಧ, ಭಿಕ್ಕು ಗಣವನ್ನು ಅವರು ಪರಿಪೂರ್ಣ ಮನುಷ್ಯರಾಗಲಿ ಎಂದು ಸೃಷ್ಟಿಸಿದನೇ ಅಥವಾ ಸಮಾಜ ಸೇವಕರಾಗಿ ಜನತೆಗೆ ಸ್ನೇಹಿತರಾಗಿ, ಮಾರ್ಗದರ್ಶಕರಾಗಿ, ತತ್ವಜ್ಞಾನಿಗಳಾಗಿ ಜನರಿಗಾಗಿ ತಮ್ಮ ಜೀವನ ಮುಡಿಪಿಡಲಿ ಎಂದು ಸೃಷ್ಟಿಸಿದನೇ? ಈ ದಿಸೆಯಲ್ಲಿ ಭಿಕ್ಕು ಪರಿಪೂರ್ಣ ಮನುಷ್ಯನಾದರೆ ಧಮ್ಮದ ಬೆಳವಣಿಗೆಯ ಹಿನ್ನೆಲೆಯಲ್ಲಿ ಆತ ಉಪಯೋಗಕ್ಕೆ ಬರುವುದಿಲ್ಲ. ಏಕೆಂದರೆ ಮನುಷ್ಯ ಪರಿಪೂರ್ಣನಾದರೂ ಆತ ಸ್ವಾರ್ಥಿಯಾಗಿರುತ್ತಾನೆ. ಆದರೆ ಭಿಕ್ಕು ಸಮಾಜ ಸೇವಕನಾದರೆ ಖಂಡಿತ ಬೌದ್ಧ ಧರ್ಮಕ್ಕೆ ಆತ ಬಹು ದೊಡ್ಡ ಭರವಸೆಯಾಗುತ್ತಾನೆ” ಎನ್ನುತ್ತಾರೆ.(ಆಧಾರ: Buddha and His Dhamma, Ambedkar writings and speeches, Vol.11, introduction part).
ಖಂಡಿತ, ಬುದ್ಧ ಪರಿವ್ರಾಜಕ(ಸನ್ಯಾಸ) ಸ್ವೀಕರಿಸಲು ಬಾಬಾಸಾಹೇಬ್ ಅಂಬೇಡ್ಕರ್ ರವರು ಹೇಳುವ ಈ ಕತೆ, ನಾಲ್ಕು ಆರ್ಯ ಸತ್ಯಗಳನ್ನು ಅವರು ಒಪ್ಪದಿರುವುದು, ಹಾಗೆ ಭಿಕ್ಕುಗಳನ್ನು ಸಮಾಜ ಸೇವಕರು ಎನ್ನುವ ಅವರ ವ್ಯಾಖ್ಯೆ ಅಕ್ಷರಶಃ ಬೌದ್ಧ ಧರ್ಮಕ್ಕೆ ಹೊಸ ರೂಪ ಕೊಡುತ್ತದೆ. ಈ ನಿಟ್ಟಿನಲ್ಲಿ ಆ ರೂಪವನ್ನು ನಾವು ನಿಸ್ಸಂಶಯವಾಗಿ ಅಂಬೇಡ್ಕರ್ ಹಾದಿ ಎನ್ನಬಹುದು, ಹೀನಯಾನ ಮತ್ತು ಮಹಾಯಾನದಂತೆ “ಅಂಬೇಡ್ಕರ್ ಯಾನ” ಎನ್ನಬಹುದು. ಬುದ್ಧನ ಹಾದಿಯಲ್ಲಿಂದು ಕೋಟ್ಯಂತರ ಜನರು ಸಾಗುತ್ತಿದ್ದಾರೆ. ಅದರಲ್ಲೂ ಶೋಷಿತ ಸಮುದಾಯಗಳ ಬಂಧುಗಳು ಬುದ್ಧನೆಡೆ ದಿಟ್ಟಹೆಜ್ಜೆ ಇಟ್ಟಿದ್ದಾರೆ. ಖಂಡಿತ, ಅಂತಹವರೆಲ್ಲರಿಗೆ ಅಂಬೇಡ್ಕರ್ ಯಾನ ಹೊಸ ಮಾರ್ಗ ಆಗಲಿದೆ ಹೊಸ ಬೆಳಕು ಆಗಲಿದೆ.
–ರಘೋತ್ತಮ ಹೊ.ಬ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ3 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ1 day agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

