ದಿನದ ಸುದ್ದಿ
ಕೇಂದ್ರ ಸರ್ಕಾರದ 2021-22ರ ಬಜೆಟ್ ವಿಶ್ಲೇಷಣೆ : ಮಿಸ್ ಮಾಡ್ದೆ ಓದಿ
- ಬಿ. ಶ್ರೀಪಾದ ಭಟ್
1. ಕಳೆದ ವರ್ಶದ (2020-21) ಬಜೆಟ್ ವೆಚ್ಚ 34.50 ಲಕ್ಷ ಕೋಟಿ. ಈ ವರ್ಶದ (2021-22) ಬಜೆಟ್ ವೆಚ್ಚ 34.82 ಲಕ್ಷ ಕೋಟಿ. ಅಂದರೆ ಕಳೆದ ವರ್ಶಕ್ಕಿಂತ 0.92% ಮಾತ್ರ ಜಾಸ್ತಿ.
ಕಳೆದ ವರ್ಶ (ಕೋವಿಡ್ ಪೂರ್ವದಲ್ಲಿ ) ಜಿಡಿಪಿ 4% ಇತ್ತು ಮತ್ತು ಕೋವಿಡ್ ನಂತರ ಅದು -7.7% ಗೆ ಕುಸಿಯಿತು.
ಆದರೆ ಈ ಮೋದಿ ಸರಕಾರ ವು ಈ ವರ್ಶದ ಜಿಡಿಪಿ ಗುರಿ 11.1% ಸಾದಿಸುತ್ತೇವೆ ಎಂದು ಜುಮ್ಲಾ ಬಿಡುತ್ತಿದ್ದಾರೆ.
ಅಂದರೆ ಇವರ ಪ್ರಕಾರ ಕಳೆದ ವರ್ಶಕ್ಕೂ ಮತ್ತು ಈ ವರ್ಶಕ್ಕೂ ಬಜೆಟ್ ವೆಚ್ಚ ಕೇವಲ 0.92% ರಶ್ಟು ಹೆಚ್ಚಾಗಿದೆ, ಆದರೆ ಜಿಡಿಪಿ ಮಾತ್ರ 142% ಹೆಚ್ಚಾಗುತ್ತದೆ! ಇದು ಹೇಗೆ ಎಂದು ಪ್ರಶ್ನಿಸುವವನೇ ಮೂರ್ಖ!!! ವಿತ್ತೀಯ ಕೊರತೆ 6.6% ಎಂದು ಅಂದಾಜಿಸಿದ್ದಾರೆ. ಇದಕ್ಕೆ ನೇರವಾಗಿ ಕೋವಿಡ್ ಸಾಂಕ್ರಾಮಿಕ ಕಾಯಿಲೆಯನ್ನು ಹೊಣೆಗಾರಿಕೆ ಮಾಡಿರುವುದು ಸರಕಾರವು ತನ್ನ ವೈಫಲ್ಯದಿಂದ ನುಣಿಚಿಕೊಂಡಂತೆ.
2. ಶೇ. 1% ಪ್ರಮಾಣದಲ್ಲಿರುವ ಅತಿ ಶ್ರೀಮಂತರಿಗೆ ಶೇ. 2% ಪ್ರಮಾಣದ ಸಂಪತ್ತು ತೆರಿಗೆ ವಿದಿಸಿ ಆ ಮೂಲಕ ನೇರ ತೆರಿಗೆ ಸಂಗ್ರಹಿಸಬಹುದಾಗಿತ್ತು. ಆದರೆ ಈ ಕುರಿತು ಪ್ರಸ್ತಾಪವೇ ಇಲ್ಲ. ಬದಲಿಗೆ ಈ ಬಾರಿಯ ಬಜೆಟ್ ನ ಪ್ರಕಾರ ಪರೋಕ್ಷ ತೆರಿಗೆ ಪ್ರಮಾಣ ಮತ್ತಶ್ಟು ಹೆಚ್ಚಲಿದ್ದು , ನೇರ ತೆರಿಗೆ ಪ್ರಮಾಣ ಪರೋಕ್ಷ ತೆರಿಗೆಗಿಂತ ತುಂಬಾ ಕಡಿಮೆಯಾಗಲಿದೆ.
ಅಂದರೆ ಅತಿ ಶ್ರೀಮಂತರು ಮತ್ತಶ್ಟು ಶ್ರೀಮಂತರಾಗುತ್ತಾರೆ, ಬಡವರು ಮತ್ತಶ್ಟು ಬಡವರಾಗುತ್ತಾರೆ. ಯಾವುದೇ ದೇಶದ ಪರೋಕ್ಷ ತೆರಿಗೆಯು ನೇರ ತೆರಿಗೆಗಿಂತ ಹೆಚ್ಚಾಗಿದ್ದರೆ ಆ ದೇಶವೆಂದೂ ಉದ್ದಾರವಾಗುವುದಿಲ್ಲ. ಭಾರತವೂ ಸಹ.
3. ಈ ಬಜೆಟ್ ನ ಪ್ರಸ್ತಾಪದ ಪ್ರಕಾರ ರೈಲ್ವೆ, ಅರಣ್ಯ, ಕೃಶಿ ಇತ್ಯಾದಿ ಸರಕಾರಿ ಇಲಾಖೆಗಳ ಜಮೀನು ಖಾಸಗಿಯವರ ಪಾಲಾಗಲಿದೆ. ಬಡವರ ಬದುಕು ಮತ್ತಶ್ಟು ಹದಗೆಡಲಿದೆ.
4. 2018ರ ಹಣಕಾಸು ವರ್ಶದಲ್ಲಿ ಶಿಕ್ಷಣ, ಆರೋಗ್ಯ ಒಳಗೊಂಡಂತೆ 42 ಸೆಸ್ ಗಳನ್ನು ಜಡಿದ ಮೋದಿ ಸರಕಾರ ಆ ಮೂಲಕ 2.5 ಲಕ್ಷ ಕೋಟಿಯನ್ನು ಸಂಗ್ರಹ ಮಾಡಿತ್ತು. ಆದರೆ ಆ ಮೊತ್ತವನ್ನು ಮರಳಿ ಸಂಬಂದಪಟ್ಟ ಇಲಾಖೆಗಳ ಅಬಿವೃದ್ದಿಗೆ ವೆಚ್ಚ ಮಾಡಲೇ ಇಲ್ಲ. ಉದಾಹರಣೆಗೆ ಸ್ವಚ್ಚ ಭಾರತ ಸೆಸ್ ಎಂದು ಪಡೆದ ಹಣದ 4891 ಕೋಟಿ ಹಣವನ್ನು ಆ ಉದ್ದೇಶಕ್ಕೆ ಬಳಸಲಿಲ್ಲ.
2011ರಿಂದ ರಸ್ತೆ ಸೆಸ್ ಎಂದು ಹಣ ಪಡೆದು 72,726 ಕೋಟಿ ಮೊತ್ತವನ್ನು ಮರಳಿ ಆ ಉದ್ದೇಶಕ್ಕೆ ಬಳಸಲಿಲ್ಲ. 2007 ರಿಂದ 2018ರ ವರೆಗೆ ಸೆಕೆಂಡರಿ ಮತ್ತು ಉನ್ನತ ಶಿಕ್ಷಣದ ಸೆಸ್ ಎಂದು ಬಾಚಿಕೊಂಡ 1 ಲಕ್ಷ ಕೋಟಿ ರೊಕ್ಕವನ್ನು ಮರಳಿ ಶಿಕ್ಷಣಕ್ಕೆ ವೆಚ್ಚ ಮಾಡಲೇ ಇಲ್ಲ. ಹಾಗಿದ್ದರೆ ಆ ಹಣ ಎಲ್ಲಿ ಹೋಯಿತು? ಕೇಳುವರಾರು? ಹೇಳುವರಾರು? ಇದು ಹಗಲು ದರೋಡೆ.
ಈ ಬಾರಿ ಕೃಶಿ ಸೆಸ್ ಎಂದು ಅನೇಕ ತೆರಿಗೆಗಳನ್ನು ಪ್ರಸ್ತಾಪಿಸಿದ್ದಾರೆ. ಆದರೆ ಅದರ ಹಣೆಬರಹವೂ ಸಹ ಅಶ್ಟೇನೆ. ಕೃಶಿ ಹೆಸರಿನಲ್ಲಿ ಕೋಟಿಗಟ್ಟಲೆ ಹಣ ಸಂಗ್ರಹವಾಗುತ್ತದೆ, ಆದರೆ ಕೃಶಿಗೆ ನಯಾ ಪೈಸೆ ವೆಚ್ಚ ಮಾಡುವುದಿಲ್ಲ. ಇಂತಹ ವಂಚನೆ ಬೇರೆಲ್ಲಿಯೂ ಕಂಡು ಬರುವುದಿಲ್ಲ
5. ಬಂಡವಾಳ ಹಿಂತೆಗೆತ ( disinvestment) ಕ್ಕೆ 1.75 ಲಕ್ಷ ಕೋಟಿ ಗುರಿಯನ್ನು ಪ್ರಸ್ತಾಪಿಸಿದ್ದಾರೆ. ಒಂದು ಸಾರ್ವಜನಿಕ ಬ್ಯಾಂಕ್, ಎರಡು ವಿಮಾ ಕಂಪನಿಗಳನ್ನು ಖಾಸಗೀಕರಣಗೊಳಿಸಲಾಗುವುದು.
6. ವಿಮಾ ವಲಯದಲ್ಲಿನ ವಿದೇಶಿ ಬಂಡವಾಳ ಹೂಡಿಕೆಯನ್ನು (ಎಫ್ ಡಿಐ) ಯನ್ನು ಶೇ. 49 ರಿಂದ
ಶೇ. 74ಕ್ಕೆ ಏರಿಸಲಾಗಿದೆ. ಆತ್ಮ ಬರ್ಬಾದ್.
7. ‘ಯುಜಿಸಿ’ ರದ್ದುಗೊಳಿಸಿ ‘ಉನ್ನತ ಶಿಕ್ಷಣ ಆಯೋಗ’ (HEC) ರಚಿಸಲು ಈ ವರ್ಶ ಚಾಲನೆ. ಶಿಕ್ಷಣದ ಕೇಂದ್ರೀಕರಣಕ್ಕೂ ಚಾಲನೆ. ಇನ್ನು ವಿಶ್ವ ವಿದ್ಯಾಲಯಗಳ ಧನ ಸಹಾಯ ಮತ್ತು ಅನುದಾನವು ನೇರವಾಗಿ ಕೇಂದ್ರ ಶಿಕ್ಷಣ ಇಲಾಖೆಯ ಸುಪರ್ದಿಗೆ ಹೋಗುತ್ತದೆ. ಅಲ್ಲಿಗೆ ಕತೆ ಮುಗೀತು.
8. ಮುಂದಿನ 6 ವರ್ಶಗಳಲ್ಲಿ ದಲಿತ ಸಮುದಾಯದ ವಿದ್ಯಾರ್ಥಿಗಳಿಗಾಗಿ 35,219 ಕೋಟಿ ಹಣ ವೆಚ್ಚ ಮಾಡಲಾಗುವುದು ಎಂದು ಬಜೆಟ್ ಘೋಶಣೆ ಮಾಡಿದ್ದಾರೆ. ಇದು ಎಂತಹ ವಂಚನೆ, ಮರೆಮೋಸವೆಂದರೆ :
ಮೊದಲಿಗೆ ಇದು 1944ರಿಂದ ಜಾರಿಯಲ್ಲಿರುವ ಪ.ಜಾತಿ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಯೋಜನೆ. ಇದರಲ್ಲಿ ಹೊಸದೇನೂ ಇಲ್ಲ.
ದೇಶದಾದ್ಯಂತ ಸುಮಾರು 57 ಲಕ್ಷ ಪ.ಜಾತಿ ವಿದ್ಯಾರ್ಥಿಗಳಿದ್ದಾರೆ ಎಂದು ಅಂದಾಜಿಸಿದರೆ ಒಬ್ಬ ವಿದ್ಯಾರ್ಥಿಗೆ ಪ್ರತಿ ವರ್ಶ 10,000 ರೂ, ಪ್ರತಿ ತಿಂಗಳು 858 ರೂ. ದೊರಕುತ್ತದೆ. ಈ ಕೇವಲ ಹಣದಿಂದ ಆ ವಿದ್ಯಾರ್ಥಿಗೆ ಯಾವ ಆರ್ಥಿಕ ಅನುಕೂಲವೂ ದೊರಕುವುದಿಲ್ಲ. ಮತ್ತು ಈ ಹಣವನ್ನು ಕೇಂದ್ರ ಮತ್ತು ರಾಜ್ಯಗಳು 60:40 ಅನುಪಾತದಲ್ಲಿ ಕೊಡಬೇಕು. ರಾಜ್ಯ ಎಂದಿಗೂ ಕೊಡುವುದಿಲ್ಲ, ಹಾಗಾಗಿ ಕೇಂದ್ರವೂ ಕೊಡುವುದಿಲ್ಲ.
ಇದು ದಲಿತರಿಗೆ ಮಾಡುವ ವಂಚನೆಯಲ್ಲವೇ?
1. ಶಿಕ್ಷಣವು ಸಂವಿದಾನದ ಶೆಡ್ಯೂಲ್ 7ರ (ಅನುಚ್ಚೇದ 246) ಸಮವರ್ತಿ ಪಟ್ಟಿ ( concurrent list) ಯಲ್ಲಿ ಬರುತ್ತದೆ. (ಎಂಟ್ರಿ 25)
2. ರಾಜ್ಯದ ಪಟ್ಟಿಯಲ್ಲಿನ
(list 2) ಎಂಟ್ರಿ 32ರ ಅನುಸಾರ
‘ಪಟ್ಟಿ 1 ( ಕೇಂದ್ರದ ಪಟ್ಟಿ) ಯಲ್ಲಿರುವ ಸಂಸ್ಥೆಗಳನ್ನು ಹೊರತುಪಡಿಸಿ ವಿಶ್ವವಿದ್ಯಾಯಗಳನ್ನು ಒಳಗೊಂಡಂತೆ ಮಿಕ್ಕ ಸಂಸ್ಥೆಗಳ ಸಂಯೋಜನೆ, ನಿಯಂತ್ರಣ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ’.
ಮೇಲಿನ ಎರಡೂ ಎಂಟ್ರಿಗಳ ಪ್ರಕಾರ ಶಿಕ್ಷಣವು ರಾಜ್ಯಕ್ಕೆ ಸಂಬಂದಪಟ್ಟ ವಿಶಯವಾಗಿದೆ.
ಆದರೆ 2021-22ರ ಕೇಂದ್ರ ಬಜೆಟ್ ನಲ್ಲಿ ನಾಲ್ಕು ವಿಬಿನ್ನ ಕೌನ್ಸಿಲ್ ಗಳನ್ನೊಳಗೊಂಡ ‘ಉನ್ನತ ಶಿಕ್ಷಣ ಆಯೋಗ’ ವನ್ನು ಸ್ಥಾಪಿಸುವುದಾಗಿ ಏಕಪಕ್ಷೀಯವಾಗಿ ಘೋಶಿಸುವುದು ಮೇಲೆ ಪ್ರಸ್ತಾಪಿಸಿದ ಸಂವಿದಾನದ ನೀತಿಸಂಹಿತೆಗೆ ವಿರುದ್ದವಾಗಿದೆ. ಶಿಕ್ಷಣದ ವಿಶಯದಲ್ಲಿ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಬೇಕಿತ್ತು. ಆದರೆ ಕೇಂದ್ರ ಸರಕಾರವು ಇಲ್ಲಿ ಸಂವಿದಾನವನ್ನು ಉಲ್ಲಂಘಿಸಿದೆ.
2. ಬಜೆಟ್ ನಲ್ಲಿ 15,000 ಶಾಲೆಗಳನ್ನು ಸಂಪೂರ್ಣವಾಗಿ ಸದೃಡಗೊಳಿಸಲಾಗುವುದು ಎಂದು ಹೇಳಿದ್ದಾರೆ. ಸ್ವಾತಂತ್ರ್ಯ ಬಂದು 73 ವರ್ಶಗಳ ನಂತರವೂ ಕೇವಲ 15,000 ಶಾಲೆಗಳನ್ನು ಮಾತ್ರ ಬಲಪಡಿಸುವಲ್ಲಿಗೆ ಸರಕಾರವು ಸೀಮಿತಗೊಂಡಿರುವುದು ಎಂತಹ ದುರಂತದ ಸಂಗತಿ!!
3. ಸೇನೆಯಲ್ಲಿ ನೇಮಕಾತಿಗಾಗಿ 100 ಸೈನಿಕರ ಶಾಲೆಗಳನ್ನು ಆರಂಬಿಸುವುದಾಗಿ ಬಜೆಟ್ ನಲ್ಲಿ ಹೇಳಿದ್ದಾರೆ.ಬವಿಶ್ಯದ ತಲೆಮಾರು ಗಳನ್ನು ರೂಪಿಸುವ ನೆರೆಹೊರೆ ಶಾಲಾ ವ್ಯವಸ್ಥೆ, ಸಮಾನ ಶಿಕ್ಷಣದ ಕುರಿತು ಒಂದೂ ಮಾತನಾಡದೆ, ಕೇವಲ ಸೈನಿಕರನ್ನು ತಯಾರಿಸುವುದು ಸರಕಾರದ ಆದ್ಯತೆಯಾದರೆ ಆ ದೇಶ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ನಿಮ್ಮ ಊಹೆಗೆ ಬಿಡುತ್ತೇನೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್ ಖರೀದಿಗೂ ಎದುರಾಗುತ್ತಿದೆ ಒತ್ತಡ
ಸುದ್ದಿದಿನ,ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾದ ಶಕ್ತಿ ಯೋಜನೆಯ ಮತ್ತೊಂದು ಮುಖ ಇದೀಗ ಚರ್ಚೆಗೆ ಬಂದಿದೆ. ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ನೀಡಿರುವ ಉಚಿತ ಟಿಕೆಟ್ಗಳ ಮೊತ್ತದಲ್ಲಿ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಿಗೆ ₹5,651.24 ಕೋಟಿ ಬಾಕಿ ಉಳಿಸಿಕೊಂಡಿರುವುದು ನಿಗಮಗಳ ಆರ್ಥಿಕ ನಿರ್ವಹಣೆಗೆ ಸವಾಲಾಗಿ ಪರಿಣಮಿಸಿದೆ. ಬಾಕಿ ಮೊತ್ತದ ಮರುಪಾವತಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ವೇತನ, ಡೀಸೆಲ್, ಬಿಡಿಭಾಗಗಳ ಖರೀದಿ ಸೇರಿದಂತೆ ದೈನಂದಿನ ವೆಚ್ಚಗಳನ್ನು ನಿರ್ವಹಿಸುವ ಒತ್ತಡ ಹೆಚ್ಚಾಗಿದೆ.
ಶಕ್ತಿ ಯೋಜನೆಗೆ ಮೂರು ವರ್ಷಗಳ ಪಯಣ
ಕಾಂಗ್ರೆಸ್ ಸರ್ಕಾರ 2023ರ ಜೂನ್ 11ರಂದು ಶಕ್ತಿ ಯೋಜನೆಯನ್ನು ಜಾರಿಗೆ ತಂದಿತ್ತು. ರಾಜ್ಯದ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿತ್ತು. ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಸಾರಿಗೆ ನಿಗಮಗಳ ಮೇಲೆ ಸೇವಾ ಹೊರೆ ಕೂಡ ವಿಸ್ತರಿಸಿದೆ.
2023-24ರಿಂದ 2026ರ ಜುಲೈ ಅಂತ್ಯದವರೆಗೆ ನಾಲ್ಕು ಸಾರಿಗೆ ನಿಗಮಗಳ ಬಸ್ಗಳಲ್ಲಿ ಮಹಿಳೆಯರು 797.16 ಕೋಟಿ ಪ್ರಯಾಣ ಕೈಗೊಂಡಿದ್ದಾರೆ. ಈ ಪ್ರಯಾಣಗಳಿಗೆ ನೀಡಲಾದ ಉಚಿತ ಟಿಕೆಟ್ಗಳ ಒಟ್ಟು ಮೌಲ್ಯ ₹20,955.99 ಕೋಟಿ ಎಂದು ಅಂಕಿ-ಅಂಶಗಳು ತಿಳಿಸುತ್ತವೆ.
₹15,304 ಕೋಟಿ ಪಾವತಿ, ಇನ್ನೂ ₹5,651 ಕೋಟಿ ಬಾಕಿ
ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್ ಮೊತ್ತವನ್ನು ಸರ್ಕಾರ ಸಾರಿಗೆ ನಿಗಮಗಳಿಗೆ ಮರುಪಾವತಿ ಮಾಡಬೇಕಿದೆ. ಇದುವರೆಗೆ ₹15,304.76 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ ಇನ್ನೂ ₹5,651.24 ಕೋಟಿ ಪಾವತಿಯಾಗಬೇಕಿದೆ.
ಈ ಬಾಕಿ ಮೊತ್ತದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಪಾಲುದಾರರಾಗಿವೆ.
ನಿಗಮಗಳಿಗೆ ಆರ್ಥಿಕ ಒತ್ತಡ ಏಕೆ?
ಈಗಾಗಲೇ ಹಲವು ವರ್ಷಗಳಿಂದ ಸಾರಿಗೆ ನಿಗಮಗಳು ನಷ್ಟದ ಒತ್ತಡದಲ್ಲಿವೆ. ಶಕ್ತಿ ಯೋಜನೆಯ ಟಿಕೆಟ್ ಮೊತ್ತ ಸಕಾಲದಲ್ಲಿ ಪಾವತಿಯಾಗದಿರುವುದು ನಗದು ಹರಿವಿನ ಮೇಲೆ ಪರಿಣಾಮ ಬೀರುತ್ತಿದೆ. ಸಿಬ್ಬಂದಿಯ ವೇತನ, ಡೀಸೆಲ್ ಖರೀದಿ, ಬಸ್ಗಳ ನಿರ್ವಹಣೆ, ಬಿಡಿಭಾಗಗಳ ಪೂರೈಕೆ ಹಾಗೂ ನಿವೃತ್ತ ನೌಕರರ ಬಾಕಿ ಪಾವತಿ ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿಗಮಗಳು ನಿರ್ವಹಿಸಬೇಕಿದೆ.
₹18,459 ಕೋಟಿ ನೆರವು ನೀಡಿದರೂ ನಷ್ಟದ ಹೊರೆ
ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರವು ವಿವಿಧ ಕಾರಣಗಳಿಗಾಗಿ ಸಾರಿಗೆ ನಿಗಮಗಳಿಗೆ ₹18,459.37 ಕೋಟಿ ನೆರವು ನೀಡಿದೆ. ಶಕ್ತಿ ಯೋಜನೆ, ವಿದ್ಯಾರ್ಥಿ ಪಾಸ್ಗಳ ಸಹಾಯಧನ, ಸಾಲ ಮತ್ತು ಬಡ್ಡಿ ಮರುಪಾವತಿ, ಬಸ್ ಖರೀದಿ, ವೇತನ, ಡೀಸೆಲ್, ಪಿಎಫ್ ಹಾಗೂ ರಜೆ ನಗದೀಕರಣ ಸೇರಿದಂತೆ ಹಲವು ವೆಚ್ಚಗಳಿಗೆ ಈ ನೆರವು ಬಳಕೆಯಾಗಿದೆ.
ಆದರೂ ನಿಗಮಗಳ ಆರ್ಥಿಕ ಸಂಕಷ್ಟ ಸಂಪೂರ್ಣವಾಗಿ ದೂರವಾಗಿಲ್ಲ. ಡೀಸೆಲ್ ಬಸ್ಗಳ ಜತೆಗೆ ಎಲೆಕ್ಟ್ರಿಕ್ ಬಸ್ಗಳ ಕಾರ್ಯಾಚರಣೆಯಿಂದಲೂ ನಿರೀಕ್ಷಿತ ಮಟ್ಟದ ಆದಾಯ ಬರುತ್ತಿಲ್ಲ ಎಂಬುದು ಮತ್ತೊಂದು ಸವಾಲಾಗಿದೆ.
ಸಕಾಲಿಕ ಪಾವತಿಯೇ ಪರಿಹಾರವೇ?
ಶಕ್ತಿ ಯೋಜನೆಯ ಸಾಮಾಜಿಕ ಮಹತ್ವವನ್ನು ಪ್ರಶ್ನಿಸುವುದಕ್ಕಿಂತ, ಅದರ ಆರ್ಥಿಕ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಮುಖ್ಯವಾಗಿದೆ. ಸರ್ಕಾರದಿಂದ ಬಾಕಿ ಮೊತ್ತ ಸಕಾಲದಲ್ಲಿ ಬಿಡುಗಡೆಯಾದರೆ ನಿಗಮಗಳ ನಗದು ಹರಿವು ಸುಧಾರಿಸಿ, ವೇತನ, ಇಂಧನ ಮತ್ತು ನಿರ್ವಹಣಾ ವೆಚ್ಚಗಳನ್ನು ನಿರ್ವಹಿಸಲು ಹೆಚ್ಚಿನ ಬಲ ದೊರೆಯಬಹುದು.

ದಿನದ ಸುದ್ದಿ
ಭದ್ರಾ ಜಲಾಶಯ: ಮಲೆನಾಡಿನ ಮಳೆಯಿಂದ ಬಯಲುಸೀಮೆಯ ಹಸಿರಿನವರೆಗೆ… ಲಕ್ಷಾಂತರ ಜನರ ಬದುಕಿನ ಜಲನಾಡಿ!
ಸುದ್ದಿದಿನ,ಶಿವಮೊಗ್ಗ: ಭದ್ರಾ ಜಲಾಶಯ ಎಂದರೆ ಕೇವಲ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಅಣೆಕಟ್ಟಲ್ಲ. ಪಶ್ಚಿಮಘಟ್ಟದ ಮಳೆಯನ್ನು ಮಧ್ಯ ಕರ್ನಾಟಕದ ಬರಡು ಭೂಮಿಗೆ ಕೊಂಡೊಯ್ಯುವ ಜೀವನಾಡಿ. ಮಲೆನಾಡಿನ ನದಿಯಿಂದ ಆರಂಭವಾಗುವ ಭದ್ರೆಯ ಪಯಣವು ರೈತರ ಕೃಷಿ, ಜನರ ಕುಡಿಯುವ ನೀರು, ಸ್ಥಳೀಯ ಆರ್ಥಿಕತೆ, ವಿದ್ಯುತ್ ಉತ್ಪಾದನೆ ಹಾಗೂ ಪರಿಸರದೊಂದಿಗೆ ನೇರ ಸಂಬಂಧ ಹೊಂದಿದೆ. ಜಲಾಶಯ ತುಂಬಿದರೆ ಹಲವು ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ ಮೂಡಿದರೆ, ನೀರಿನ ಕೊರತೆ ಎದುರಾದಾಗ ಇದೇ ಪ್ರದೇಶಗಳಲ್ಲಿ ಆತಂಕ ಹೆಚ್ಚುತ್ತದೆ.
http://Visit : www.suddidina.com
ಪಶ್ಚಿಮಘಟ್ಟದಿಂದ ಬಯಲುಸೀಮೆಯವರೆಗೆ ಭದ್ರೆಯ ಪಯಣ
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ–ವರಾಹ ಪರ್ವತ ಶ್ರೇಣಿಗಳ ಗಂಗಾಮೂಲದಲ್ಲಿ ಹುಟ್ಟುವ ಭದ್ರಾ ನದಿ ಕಳಸ, ಕೊಪ್ಪ, ನರಸಿಂಹರಾಜಪುರ, ತರೀಕೆರೆ ಹಾಗೂ ಭದ್ರಾವತಿ ತಾಲೂಕುಗಳಲ್ಲಿ ಹರಿದು ಕೂಡಲಿ ಬಳಿ ತುಂಗಾ ನದಿಯನ್ನು ಸೇರುತ್ತದೆ. ಬಳಿಕ ತುಂಗಾಭದ್ರೆಯಾಗಿ ಮುಂದುವರಿದು ಕೃಷ್ಣಾ ನದಿಯನ್ನು ಸೇರುತ್ತದೆ.
ತರೀಕೆರೆ ತಾಲೂಕಿನ ಲಕ್ಕವಳ್ಳಿ ಬಳಿ ನಿರ್ಮಿಸಲಾಗಿರುವ ಭದ್ರಾ ಜಲಾಶಯ 1,708 ಮೀಟರ್ ಉದ್ದ ಹಾಗೂ 59.14 ಮೀಟರ್ ಎತ್ತರ ಹೊಂದಿದೆ. ಇದರ ಒಟ್ಟು ಸಂಗ್ರಹ ಸಾಮರ್ಥ್ಯ 71.50 ಟಿಎಂಸಿ. 1,968.40 ಚದರ ಕಿಲೋಮೀಟರ್ ಜಲಾನಯನ ಪ್ರದೇಶ ಹೊಂದಿರುವ ಈ ಯೋಜನೆಗೆ ಸ್ವಾತಂತ್ರ್ಯಾನಂತರ 1947ರಲ್ಲಿ ಚಾಲನೆ ದೊರೆತಿದ್ದು, ಅಣೆಕಟ್ಟು ಕಾಮಗಾರಿ 1959ರಲ್ಲಿ ಹಾಗೂ ನಾಲೆಗಳ ಕಾಮಗಾರಿ 1966ರಲ್ಲಿ ಪೂರ್ಣಗೊಂಡಿತು.
ಒಣಭೂಮಿಗೆ ಹಸಿರು ಹೊದಿಸಿದ ನೀರು
ಭದ್ರಾ ನೀರಾವರಿ ಯೋಜನೆಯು ಮಧ್ಯ ಕರ್ನಾಟಕದ ಕೃಷಿಯ ಚಿತ್ರಣವನ್ನೇ ಬದಲಿಸಿದೆ. ಎಡದಂಡೆ ನಾಲೆ 77.24 ಕಿ.ಮೀ. ಹರಿದು ಸುಮಾರು 8,300 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಿದರೆ, ಬಲದಂಡೆ ನಾಲೆ 366.90 ಕಿ.ಮೀ. ಉದ್ದಕ್ಕೆ ಹರಿದು ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುತ್ತದೆ.
ಒಂದು ಕಾಲದಲ್ಲಿ ಭತ್ತ ಮತ್ತು ಕಬ್ಬು ಪ್ರಧಾನವಾಗಿದ್ದ ಪ್ರದೇಶಗಳಲ್ಲಿ ಇದೀಗ ಅಡಕೆ ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳ ವಿಸ್ತರಣೆ ಕಂಡುಬಂದಿದೆ. ಹೀಗಾಗಿ ಭದ್ರಾ ನೀರು ಕೃಷಿ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದೆ.
ಕುಡಿಯುವ ನೀರಿಗೂ ಭದ್ರೆಯೇ ಆಸರೆ
ಮಧ್ಯ ಕರ್ನಾಟಕದ ಹಲವು ನಗರಗಳು, ಪಟ್ಟಣಗಳು ಹಾಗೂ ಸಾವಿರಾರು ಹಳ್ಳಿಗಳ ಕುಡಿಯುವ ನೀರಿನ ವ್ಯವಸ್ಥೆಯಲ್ಲೂ ಭದ್ರಾ ಜಲಾಶಯ ಪ್ರಮುಖ ಪಾತ್ರ ವಹಿಸುತ್ತದೆ. ಜಲಾಶಯದಲ್ಲಿ ಕುಡಿಯುವ ನೀರಿಗಾಗಿ 8.50 ಟಿಎಂಸಿ ನೀರನ್ನು ಮೀಸಲಿಡಲಾಗಿದೆ. ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ, ವಿಜಯನಗರ, ಬಳ್ಳಾರಿ ಸೇರಿದಂತೆ ಹಲವು ಪ್ರದೇಶಗಳ ಜನಜೀವನಕ್ಕೆ ಈ ನೀರು ಆಸರೆಯಾಗಿದೆ.
ಹೂಳು, ಮೇಲ್ದಂಡೆ ಯೋಜನೆ: ಭವಿಷ್ಯದ ಸವಾಲು
ಜಲಾಶಯದ ಸಂಗ್ರಹ ಸಾಮರ್ಥ್ಯದ ಮೇಲೆ ಹೂಳು ಕೂಡ ಪರಿಣಾಮ ಬೀರುತ್ತಿದೆ. ಮೂಲ ಸಂಗ್ರಹಕ್ಕೆ ಹೋಲಿಸಿದರೆ ಸುಮಾರು 95.74 ಮಿಲಿಯನ್ ಘನ ಮೀಟರ್ ಹೂಳು ಸೇರಿಕೊಂಡಿದೆ ಎನ್ನಲಾಗುತ್ತದೆ. ಸದ್ಯ ಡೆಡ್ ಸ್ಟೋರೇಜ್ ಇರುವುದರಿಂದ ತಕ್ಷಣದ ಬಳಕೆಗೆ ದೊಡ್ಡ ತೊಂದರೆ ಇಲ್ಲವಾದರೂ, ಭವಿಷ್ಯದ ಜಲಭದ್ರತೆ ದೃಷ್ಟಿಯಿಂದ ಹೂಳು ನಿರ್ವಹಣೆ ಮಹತ್ವದ್ದಾಗಿದೆ.
ಇದರ ನಡುವೆ ಭದ್ರಾ ಮೇಲ್ದಂಡೆ ಯೋಜನೆ ಬರಪೀಡಿತ ಪ್ರದೇಶಗಳಿಗೆ ನೀರೊದಗಿಸುವ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಸೂಕ್ಷ್ಮ ನೀರಾವರಿ ಹಾಗೂ ಕೆರೆಗಳ ಭರ್ತಿಗೆ ಯೋಜನೆ ರೂಪಿಸಲಾಗಿದೆ. ಜತೆಗೆ ನಾಲೆಗಳ ಮೂಲಕ 37.2 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯೂ ನಡೆಯುತ್ತಿದೆ. ಮೀನು ಮರಿ ಸಾಕಣೆ ಕೇಂದ್ರವೂ ಸ್ಥಳೀಯ ಆರ್ಥಿಕತೆಗೆ ಕೊಡುಗೆ ನೀಡುತ್ತಿದೆ.
ಭದ್ರೆಯ ಅಂಕಿ-ಅಂಶಗಳು
- ಜಲಾನಯನ ಪ್ರದೇಶ: 1,968.40 ಚ.ಕಿ.ಮೀ.
- ಅಣೆಕಟ್ಟು ಎತ್ತರ: 59.14 ಮೀಟರ್
- ಅಣೆಕಟ್ಟು ಉದ್ದ: 1,708 ಮೀಟರ್
- ನೀರು ಸಂಗ್ರಹ ಸಾಮರ್ಥ್ಯ: 71.50 ಟಿಎಂಸಿ
- ಅಚ್ಚುಕಟ್ಟು ಪ್ರದೇಶ: 1,05,570 ಹೆಕ್ಟೇರ್
- ನಾಲೆಗಳ ಒಟ್ಟು ಉದ್ದ: 444.14 ಕಿ.ಮೀ.

ದಿನದ ಸುದ್ದಿ
ಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ
ಸುದ್ದಿದಿನ,ಶಿವಮೊಗ್ಗ: ಜಾತಿ-ಧರ್ಮದ ಕಟ್ಟುಪಾಡುಗಳನ್ನು ಮೀರಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಮದುವೆಯಾಗುವ ದಂಪತಿಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯೇ ಇದೀಗ ಪ್ರಶ್ನೆಗಳ ಸುಳಿಯಲ್ಲಿ ಸಿಲುಕಿದೆ. ಸಮಾಜದ ವಿರೋಧವನ್ನು ಎದುರಿಸಿ ಹೊಸ ಬದುಕು ಕಟ್ಟಿಕೊಳ್ಳುವ ದಂಪತಿಗಳಿಗೆ ನೆರವಾಗಬೇಕಿದ್ದ ಯೋಜನೆಯಲ್ಲಿ ಹಣ ಬಿಡುಗಡೆ ವಿಳಂಬವಾಗುತ್ತಿದ್ದು, ಅರ್ಹ ಫಲಾನುಭವಿಗಳು ಸರ್ಕಾರದ ನೆರವಿಗಾಗಿ ಕಾಯುವಂತಾಗಿದೆ.
| ಹೈಲೈಟ್ಸ್: |
|
http://Visit : www.suddidina.com
ಅಂತರ್ಜಾತಿ ವಿವಾಹಕ್ಕೆ ಎಷ್ಟು ಪ್ರೋತ್ಸಾಹಧನ?
ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಪುರುಷ ಬೇರೆ ಜಾತಿಯ ಮಹಿಳೆಯನ್ನು ವಿವಾಹವಾದರೆ ₹2.50 ಲಕ್ಷ ಹಾಗೂ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಮಹಿಳೆ ಬೇರೆ ಜಾತಿಯ ಪುರುಷನನ್ನು ವಿವಾಹವಾದರೆ ₹3 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತದೆ.
ಆದರೆ, ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಿದವರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಹಣ ಪಾವತಿ ಮಾತ್ರ ಅದೇ ವೇಗದಲ್ಲಿ ನಡೆಯುತ್ತಿಲ್ಲ. 2025-26ನೇ ಸಾಲಿನಲ್ಲಿ 5,612 ಅರ್ಜಿಗಳು ಸಲ್ಲಿಕೆಯಾಗಿದ್ದು, 1,615 ಅರ್ಜಿಗಳಿಗೆ ಮೊದಲ ಹಂತದ ಪ್ರೋತ್ಸಾಹಧನಕ್ಕೆ ಅನುಮೋದನೆ ದೊರೆತಿದೆ. ಆದರೆ ಕೇವಲ 39 ಫಲಾನುಭವಿಗಳಿಗೆ ಮಾತ್ರ ಹಣ ಪಾವತಿಯಾಗಿದ್ದು, 3,997 ಅರ್ಜಿಗಳು ಇನ್ನೂ ಬಾಕಿ ಉಳಿದಿವೆ. 909 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿಯಾಗಿವೆ.
ಹೊಸ ಸಾಲಿನಲ್ಲೂ ಅದೇ ಕಥೆ
2026-27ನೇ ಸಾಲಿನಲ್ಲಿ ಇದುವರೆಗೆ 2,194 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 61 ಅರ್ಜಿಗಳಿಗೆ ಅನುಮೋದನೆ ದೊರೆತಿದ್ದರೂ, ಮೊದಲ ಕಂತಿನ ಹಣ ಯಾರಿಗೂ ಪಾವತಿಯಾಗಿಲ್ಲ. 392 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿ ಉಳಿದಿವೆ.
ಅನುದಾನ ಹೆಚ್ಚಳವಾಗದಿರುವುದು ದೊಡ್ಡ ಸಮಸ್ಯೆ
ಅಂತರ್ಜಾತಿ ವಿವಾಹಗಳ ಸಾಮಾಜಿಕ ಸ್ವೀಕಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಏರಿಕೆಯಾಗಿದೆ. ಆದರೆ, ಅರ್ಜಿಗಳ ಸಂಖ್ಯೆಗೆ ಅನುಗುಣವಾಗಿ ಯೋಜನೆಯ ಅನುದಾನ ಹೆಚ್ಚಳವಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿ ಹಿಂದಿನ ವರ್ಷದ ಅರ್ಜಿಗಳೇ ಬಾಕಿ ಉಳಿಯುತ್ತಿರುವಾಗ ಹೊಸ ಅರ್ಜಿಗಳ ವಿಲೇವಾರಿಯೂ ವಿಳಂಬವಾಗುತ್ತಿದೆ.
2018-19ರಲ್ಲಿ ₹64.27 ಕೋಟಿ, 2019-20ರಲ್ಲಿ ₹90.42 ಕೋಟಿ, 2020-21ರಲ್ಲಿ ₹99.9 ಕೋಟಿ, 2021-22ರಲ್ಲಿ ₹171.84 ಕೋಟಿ ಹಾಗೂ 2022-23ರಲ್ಲಿ ₹94.62 ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ ವಾರ್ಷಿಕವಾಗಿ ಬರುತ್ತಿರುವ ಅರ್ಜಿಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಈ ಮೊತ್ತ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಎದುರಾಗಿದೆ.
2026-27ನೇ ಸಾಲಿನ ಈವರೆಗಿನ ಅಂತರ್ಜಾತಿ ಪ್ರೋತ್ಸಾಹಧನ ಯೋಜನೆಯ ವಿವರ
- 2026-27ನೇ ಸಾಲಿನಲ್ಲಿ ಸಲ್ಲಿಕೆಯಾದ ಅರ್ಜಿಗಳು: 2,194
- ಮೊದಲ ಕಂತಿಗೆ ಅನುಮೋದನೆ: 61
- ಪ್ರೋತ್ಸಾಹ ಧನ ಪಾವತಿ: 00
- ಅಪೂರ್ಣ ಅರ್ಜಿಗಳು: 392
- ತಿರಸ್ಕಾರಗೊಂಡ ಅರ್ಜಿಗಳು: 02
ಸಾಮಾಜಿಕ ಧೈರ್ಯಕ್ಕೆ ಆರ್ಥಿಕ ಬೆಂಬಲ ಬೇಕಿದೆ
ಅಂತರ್ಜಾತಿ ವಿವಾಹದ ನಿರ್ಧಾರ ಕೈಗೊಳ್ಳುವ ಜೋಡಿಗಳು ಕೆಲವೊಮ್ಮೆ ಕುಟುಂಬದ ವಿರೋಧ, ಸಾಮಾಜಿಕ ಒತ್ತಡ, ಬಹಿಷ್ಕಾರ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಾರೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಪ್ರೋತ್ಸಾಹಧನ ಕೇವಲ ಹಣಕಾಸಿನ ನೆರವಲ್ಲ; ಅದು ಹೊಸ ದಂಪತಿಗಳ ನಿರ್ಧಾರಕ್ಕೆ ಸಾಮಾಜಿಕ ಬೆಂಬಲದ ಸಂಕೇತವೂ ಹೌದು.
ಆದರೆ ಅರ್ಜಿ ಸಲ್ಲಿಸಿ ಅನುಮೋದನೆಗಾಗಿ, ನಂತರ ಹಣಕ್ಕಾಗಿ ದೀರ್ಘಕಾಲ ಕಾಯಬೇಕಾದ ಪರಿಸ್ಥಿತಿ ಉಂಟಾದರೆ ಯೋಜನೆಯ ಮೂಲ ಉದ್ದೇಶವೇ ದುರ್ಬಲವಾಗುತ್ತದೆ. ಹೀಗಾಗಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿ, ದಾಖಲೆ ಪ್ರಕ್ರಿಯೆ ಸರಳೀಕರಣ ಹಾಗೂ ಅಗತ್ಯ ಅನುದಾನ ಹೆಚ್ಚಳಕ್ಕೆ ಸರ್ಕಾರ ಗಮನಹರಿಸಬೇಕಿದೆ.

-
ದಿನದ ಸುದ್ದಿ6 days agoಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ
-
ದಿನದ ಸುದ್ದಿ7 days agoಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
-
ದಿನದ ಸುದ್ದಿ4 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ4 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ4 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ5 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ5 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ5 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ


